Thursday 17 January 2019

ಪೌರತ್ವ ಮಸೂದೆ: ಮುಸ್ಲಿಮರನ್ನು ಮಾತ್ರ ಹೆಕ್ಕಿ ಹೊರಗಿಡಲು ಕಾರಣವೇನು?

 

ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ನಡೆಸುತ್ತಿರುವ ಸಿದ್ಧತೆಯು ಎಷ್ಟು ಸಿನಿಕತನದ್ದು ಮತ್ತು ದೂರದೃಷ್ಟಿರಹಿತವಾದದ್ದು ಅನ್ನುವುದಕ್ಕೆ ಅದು ಮಂಡಿಸಿರುವ ಪೌರತ್ವ ಮಸೂದೆ ಮತ್ತು ಮೇಲ್ಜಾತಿ ಮೀಸಲಾತಿ ಮಸೂದೆಗಳೇ ಉತ್ತಮ ಪುರಾವೆ. ಈ ಎರಡೂ ಮಸೂದೆಗಳನ್ನು ಪಾರ್ಲಿಮೆಂಟ್‍ನಲ್ಲಿ ಒಂದೇ ವಾರದೊಳಗೆ ಮಂಡಿಸಲಾಗಿದೆ. ಅದರಲ್ಲೂ ಪೌರತ್ವ ಮಸೂದೆಯನ್ನು ಅದು ಸಮರ್ಥಿಸುತ್ತಿರುವ ರೀತಿಯಂತೂ ಅತ್ಯಂತ ದಯನೀಯ. 2014 ಡಿ. 31ರ ಒಳಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫಘಾನಿಸ್ತಾನದಿಂದ ವಲಸೆ ಬಂದು ಇಲ್ಲಿ ನೆಲೆಸಿರುವ ಹಿಂದೂ, ಸಿಖ್, ಬೌದ್ಧ, ಜೈನ, ಫಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮುಸ್ಲಿಮರನ್ನು ಯಾಕೆ ಹೊರಗಿಟ್ಟಿರಿ ಅನ್ನುವ ಪ್ರಶ್ನೆ ಈ ಸಂದರ್ಭದಲ್ಲಿ ಸಹಜವಾಗಿಯೇ ಉದ್ಭವಿಸುತ್ತದೆ. ಅದಕ್ಕೆ ಅವರು ಕೊಟ್ಟ ಉತ್ತರ ಏನೆಂದರೆ ಹಿಂದೂ, ಬೌದ್ಧ, ಜೈನ ಮುಂತಾದ ಧರ್ಮೀಯರಿಗೆ ನೆಲೆಸಲು ಭಾರತ ಬಿಟ್ಟರೆ ಬೇರೆ ದೇಶಗಳಿಲ್ಲ ಅನ್ನುವುದಾಗಿತ್ತು. ಅದರ್ಥ, ಮೇಲಿನ ಮೂರು ರಾಷ್ಟ್ರಗಳಿಂದ ವಲಸೆ ಬಂದ ಮುಸ್ಲಿಮರು ಅನ್ಯ ರಾಷ್ಟ್ರಗಳಲ್ಲಿ ಹೋಗಿ ನೆಲೆಸಲಿ ಎಂದೇ ಆಗುತ್ತದೆ. ಸಂವೇದನೆ ಸತ್ತು ಹೋದ ರಾಜಕಾರಣಿಯ ಹೊರತು ಇನ್ನಾರಿಗೂ ಈ ರೀತಿಯಲ್ಲಿ ಮಾತಾಡಲು ಸಾಧ್ಯವಿಲ್ಲ. ನಿಜವಾಗಿ, ಅಫಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಆಂತರಿಕ ಸ್ಥಿತಿಯಿಂದ ಸಂಕಷ್ಟಕ್ಕೆ ಒಳಗಾಗಿರುವುದು  ಮುಸ್ಲಿಮೇತರರಷ್ಟೇ  ಅಲ್ಲ ಅನ್ನುವುದಕ್ಕೆ ಅಲ್ಲಿಂದ ಭಾರತಕ್ಕೆ ದೊಡ್ಡ ಸಂಖ್ಯೆಯಲ್ಲಿ ವಲಸೆ ಬರುತ್ತಿರುವ ಮುಸ್ಲಿಮರೇ ಸಾಕ್ಷಿ. ಹಿಂದೂ, ಸಿಖ್, ಜೈನ, ಬೌದ್ಧ, ಕ್ರೈಸ್ತ, ಫಾರ್ಸಿ ವಲಸಿಗರಂತೆಯೇ ಮುಸ್ಲಿಮರೂ ಭಾರತವನ್ನು ಸುರಕ್ಷಿತ ರಾಷ್ಟ್ರವಾಗಿ ಪರಿಗಣಿಸಿದ್ದಾರೆ. ಹೀಗಿರುವಾಗ, ಇವರಿಂದ ಮುಸ್ಲಿಮರನ್ನು ಮಾತ್ರ ಬೇರ್ಪಡಿಸಿ ಹೊರಕ್ಕಟ್ಟುವುದು ಮತ್ತು ಉಳಿದವರನ್ನೆಲ್ಲ ಇಲ್ಲಿಯೇ ಉಳಿಸಿಕೊಳ್ಳುವುದು ಅಂದರೆ ಏನರ್ಥ? ಇವರೆಲ್ಲ, ತಾವಿರುವ ರಾಷ್ಟ್ರ ತಮಗೆ ಸುರಕ್ಷಿತವಲ್ಲ ಎಂಬ ಕಾರಣದಿಂದಲೇ ಭಾರತಕ್ಕೆ ಬಂದಿದ್ದಾರೆ. ಒಂದು ವೇಳೆ, ಇವರಲ್ಲಿ ಮುಸ್ಲಿಮರಿಗೆ ಹೋಗಲು ಅನ್ಯ ರಾಷ್ಟ್ರವಿದೆ ಎಂದಾದರೆ, ಬೌದ್ಧರಿಗೂ ಅನ್ಯ ರಾಷ್ಟ್ರವಿದೆಯಲ್ಲ? ಶ್ರೀಲಂಕಾ, ಮ್ಯಾನ್ಮಾರ್, ಬರ್ಮಾ, ಜಪಾನ್‍ಗಳು ಬೌದ್ಧರೇ ಬಹುಸಂಖ್ಯಾತರಾಗಿರುವ ರಾಷ್ಟ್ರಗಳು. ಅವರನ್ನೂ ಪೌರತ್ವ ವಿಧೇಯಕ ಮಸೂದೆಯಿಂದ ಹೊರಗಿಡಬಹುದಲ್ಲ? ಹಿಂದೂಗಳು ಬಹುಸಂಖ್ಯಾತರಾಗಿರುವ ನೇಪಾಲವು ನಮ್ಮ ಪಕ್ಕದಲ್ಲೇ ಇದೆ. ಮೇಲಿನ ಮೂರು ರಾಷ್ಟ್ರಗಳಿಂದ ಬಂದ ಹಿಂದೂಗಳನ್ನು ನಾವು ಇಲ್ಲೇ ಯಾಕೆ ಉಳಿಸಿಕೊಳ್ಳಬೇಕು? ಅವರಿಗೆ ಇನ್ನೊಂದು ರಾಷ್ಟ್ರವಾಗಿ ನೇಪಾಲ ಇದೆಯಲ್ಲ? ಕ್ರೈಸ್ತರಿಗೆ ಹೋಗಲು ಜಗತ್ತಿನಾದ್ಯಾಂತ ಧಾರಾಳ ರಾಷ್ಟ್ರಗಳಿವೆ. ಅವರನ್ನೇಕೆ ಇಲ್ಲಿಯೇ ಉಳಿಸಿಕೊಳ್ಳಬೇಕು..? ಇಂಥ ಪ್ರಶ್ನೆಗಳನ್ನು ಕೇಳುತ್ತಾ ಹೋಗಬಹುದು. ಮಾತ್ರವಲ್ಲ, ಇದಕ್ಕೆ ಸಮರ್ಪಕ ಉತ್ತರವನ್ನು ಕೊಡುವುದಕ್ಕೆ ಕೇಂದ್ರ ಸರಕಾರಕ್ಕೆ ಸಾಧ್ಯವೂ ಇಲ್ಲ. ಅಂದಹಾಗೆ,

ವಲಸೆ ಅನ್ನುವುದೇ ಅತಿ ದೊಡ್ಡ ಹಿಂಸೆ. ಒಂದು ರಾಷ್ಟ್ರದಲ್ಲಿ ಆನಂದದಿಂದ ಜೀವಿಸುವ ಯಾವ ಕುಟುಂಬವೂ ಇನ್ನೊಂದು ರಾಷ್ಟ್ರಕ್ಕೆ ತೆರಳಿ ಅಕ್ರಮವಾಗಿ ನೆಲೆಸಲು ಬಯಸುವುದಿಲ್ಲ. ಹುಟ್ಟಿ ಬೆಳೆದ ರಾಷ್ಟ್ರವನ್ನು ಬದಲಿಸುವುದೆಂದರೆ, ಬಟ್ಟೆ ಬದಲಿಸಿದಷ್ಟು ಸುಲಭವೂ ಅಲ್ಲ. ತಾನು ನೆಲೆಸುವ ಆ ಇನ್ನೊಂದು ರಾಷ್ಟ್ರದಲ್ಲಿ ಹೊಸದಾಗಿ ಮನೆ, ಉದ್ಯೋಗ, ಬದುಕು ಕಂಡುಕೊಳ್ಳಬೇಕು. ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಬೇಕು. ಅಪರಿಚಿತರಾದ ಜನರೊಂದಿಗೆ ಸಂಬಂಧ ಬೆಳೆಸಬೇಕು. ಇವೆಲ್ಲವನ್ನೂ ಸವಾಲಾಗಿ ಸ್ವೀಕರಿಸಿಕೊಂಡು ನೆಲೆಸ ಬಯಸುವವರು ಇದ್ದಾರೆಂದರೆ ಅವರು ತನ್ನ ಮೂಲ ರಾಷ್ಟ್ರದಲ್ಲಿ ಅದಕ್ಕಿಂತಲೂ ತೀವ್ರ ತೆರನಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದೇ ಅರ್ಥ. ಹೀಗಿರುವಾಗ ಇಂಥವರನ್ನು ಹಿಂದೂ-ಮುಸ್ಲಿಮ್, ಜೈನ ಎಂದು ಮುಂತಾಗಿ ವಿಭಜಿಸುವುದು ಸರಿಯೇ? ಇವರಲ್ಲಿ ಮುಸ್ಲಿಮರನ್ನು ಹೆಕ್ಕಿ ತೆಗೆದು ಹೊರಕ್ಕಟ್ಟುವುದು ನ್ಯಾಯವೇ? ಹಾಗಂತ,
ಬಿಜೆಪಿ ನೇತೃತ್ವದ ಮೋದಿ ಸರಕಾರವು ಅತ್ಯಂತ ಅವಿವೇಕತನದಿಂದ ನಡೆದುಕೊಳ್ಳುತ್ತಿರುವುದು ಇದೇ ಮೊದಲಲ್ಲ. ಅದು ಆರಂಭದಿಂದಲೇ ವಿಭಜನವಾದಿ ಮತ್ತು ಭಾವಾವೇಶದ ರಾಜಕಾರಣವನ್ನು ಜೊತೆ ಸೇರಿಸಿಕೊಂಡೇ ಆಟ ಆಡುತ್ತಿದೆ. ಇದಕ್ಕೆ ಪ್ರಥಮ ಉದಾಹರಣೆ ಏನೆಂದರೆ, ರಾತ್ರೋರಾತ್ರಿ ನೋಟು ನಿಷೇಧ ಮಾಡಿದ ರೀತಿ. ಆ ಬಳಿಕ ಜಿಎಸ್‍ಟಿಯ ಹೇರಿಕೆ. ಅಚ್ಚರಿ ಏನೆಂದರೆ, ಈ ಎರಡಕ್ಕೂ ಪೂರ್ವ ತಯಾರಿ ಎಂಬುದು ಇರಲೇ ಇಲ್ಲ. ದೂರ ದೃಷ್ಟಿಯೂ ಇರಲಿಲ್ಲ. ಇನ್ನು, ಸರ್ವ ಸೌಲಭ್ಯಗಳಿಗೂ ಆಧಾರ್ ಸಂಪರ್ಕ ಕಲ್ಪಿಸಬೇಕೆಂಬ ಬಿಜೆಪಿ ಸರಕಾರದ ನಿರ್ದೇಶನವನ್ನಂತೂ ಸುಪ್ರೀಮ್ ಕೋರ್ಟೇ ತಳ್ಳಿ ಹಾಕಿತು. ತ್ರಿವಳಿ ತಲಾಕೂ ಇಂಥದ್ದೇ ಒಂದು ಎಡವಟ್ಟು. ಇದೀಗ ಒಂದೇ ವಾರದಲ್ಲಿ ಪೌರತ್ವ ಮಸೂದೆ ಮತ್ತು ಮೇಲ್ಜಾತಿ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮೋದಿ ಸರಕಾರ ಮಂಡಿಸಿದೆ. ಹಾಗಂತ, ಪೌರತ್ವ ಮಸೂದೆಗೆ ಈಶಾನ್ಯ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಬಹುದು ಎಂಬುದು ಬಿಜೆಪಿಗೆ ಗೊತ್ತಿರಲಿಲ್ಲ ಎಂದಲ್ಲ. ಗೊತ್ತಿದ್ದೇ ಅದು ಈ ಸಾಹಸಕ್ಕೆ  ಕೈ ಹಾಕಿದೆ. ಯಾಕೆಂದರೆ, ಈ ಮಸೂದೆಯನ್ನು ಮುಂದಿಟ್ಟುಕೊಂಡು ಹಿಂದೂ ಸಮುದಾಯವನ್ನು ಧ್ರುವೀಕರಿಸಬಹುದು. ಮುಸ್ಲಿಮರನ್ನು ದೇಶದಿಂದ ಹೊರಕ್ಕಟ್ಟುತ್ತಿದ್ದೇವೆ ಎಂಬ ಸಂದೇಶವನ್ನು ಸೂಚ್ಯವಾಗಿ ಸಾರಬಹುದು. ಒಂದು ವೇಳೆ,

ವಲಸಿಗರಿಗೆ ನೆಮ್ಮದಿಯನ್ನು ಕೊಡುವುದೇ ಬಿಜೆಪಿಯ ಉದ್ದೇಶವಾಗಿರುತ್ತಿದ್ದರೆ ಅದು 1985ರಲ್ಲಿ ಮಾಡಿಕೊಳ್ಳಲಾಗಿರುವ ಅಸ್ಸಾಂ ಒಪ್ಪಂದವನ್ನು ಯಥೋಚಿತವಾಗಿ ಜಾರಿಗೆ ತರುವುದಕ್ಕೆ ಮುಂದಾಗಬೇಕಿತ್ತು. ನಿಜವಾಗಿ, ವಲಸಿಗರ ಸಮಸ್ಯೆ ಇರುವುದೇ ಅಸ್ಸಾಮ್, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ ಮುಂತಾದ ಈಶಾನ್ಯ ರಾಜ್ಯಗಳಲ್ಲಿ. ಇವು ಪಾಕಿಸ್ತಾನ, ಬಾಂಗ್ಲಾ ಮತ್ತು ಅಫಘಾನಿಸ್ತಾನದೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಗಡಿಯನ್ನು ಹಂಚಿಕೊಂಡಿರುವುದರಿಂದ ವಲಸಿಗರ ಸಮಸ್ಯೆ ಸ್ವಾಭಾವಿಕ. ಈ ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿಯೇ 1985ರಲ್ಲಿ ಅಸ್ಸಾಂ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಅದರ ಪ್ರಕಾರ 1971ರ ಮಾರ್ಚ್ 31ರ ವರೆಗೆ  ಭಾರತಕ್ಕೆ ಬಂದು ನೆಲೆಸಿದ ಎಲ್ಲ ಹಿಂದೂ, ಮುಸ್ಲಿಮರೂ ಭಾರತೀಯ ಪೌರತ್ವಕ್ಕೆ ಅರ್ಹರು. ಆದರೆ ಈಗಿನ ಹೊಸ ಪೌರತ್ವ ಮಸೂದೆಯ ಪ್ರಕಾರ 1971 ಮಾರ್ಚ್‍ನ ನಂತರ 2014 ಡಿ. 31ರ ವರೆಗೆ ವಲಸೆ ಬಂದ ಮುಸ್ಲಿಮೇತರ ವಲಸಿಗರು ಮಾತ್ರ ಪೌರತ್ವಕ್ಕೆ ಅರ್ಹರಾಗುತ್ತಾರೆ. ಈಶಾನ್ಯ ರಾಜ್ಯಗಳ ಪ್ರತಿಭಟನೆಗೆ ಮುಖ್ಯ ಕಾರಣವೇ ಇದು. 1971 ಮಾರ್ಚ್ 31ರ ನಂತರ ಬಂದ ಯಾರಿಗೂ ಪೌರತ್ವ ನೀಡಬಾರದು ಎಂಬುದು ಅವುಗಳ ಬೇಡಿಕೆ. ಹಾಗೆ ಪೌರತ್ವ ಕೊಡುವುದರಿಂದ ಅಲ್ಲಿನ ಪ್ರಾದೇಶಿಕ ಅಸ್ಮಿತೆ ಮತ್ತು ಸ್ಥಳೀಯತೆಗೆ ಧಕ್ಕೆ ಬರಬಹುದು, ಬುಡುಕಟ್ಟು ಸಮುದಾಯಗಳ ಬದುಕು-ಭಾವಕ್ಕೆ ಅಪಾಯ ಒದಗಬಹುದು ಎಂಬುದು ಅವುಗಳ ವಾದ. ಅಂದಹಾಗೆ,
ಈ ಮಸೂದೆ ವಿಭಜನವಾದಿ ರಾಜಕಾರಣದ ಕೂಸು ಅನ್ನುವುದು ಮೇಲ್ನೋಟಕ್ಕೇ ಸ್ಪಷ್ಟವಾಗುತ್ತದೆ. ಅಷ್ಟಕ್ಕೂ, ಪ್ರತಿಭಟನೆಗಿಳಿದಿರುವ ಈಶಾನ್ಯದ ನಾಲ್ಕೈದು ಪುಟ್ಟ ರಾಜ್ಯಗಳಲ್ಲಿ ರಾಜಕೀಯವಾಗಿ ಬಿಜೆಪಿ ಕಳಕೊಳ್ಳುವಂಥದ್ದೇನೂ ಇಲ್ಲ. ಅಲ್ಲಿರುವ ಒಟ್ಟು ಲೋಕಸಭಾ ಸ್ಥಾನಗಳು ಒಂದು ಉತ್ತರ ಪ್ರದೇಶದಷ್ಟೂ ಇಲ್ಲ. ಆದ್ದರಿಂದ ಅಲ್ಲಿನ ಮತದಾರರ ಭಾವನೆಗಳಿಗೆ ಬೆಲೆಕೊಡುವುದಕ್ಕಿಂತ ಉಳಿದ ಭಾರತವನ್ನು ಕೈವಶಮಾಡಿಕೊಳ್ಳುವುದಕ್ಕೆ ಪೂರಕವಾದ ಕ್ರಮ ಕೈಗೊಳ್ಳುವುದೇ ಉತ್ತಮ ಎಂದು ಬಿಜೆಪಿ ಭಾವಿಸಿದೆ. ಪೌರತ್ವ ಮಸೂದೆಯನ್ನು ಪಾರ್ಲಿಮೆಂಟಿನಲ್ಲಿ ತರಾತುರಿಯಿಂದ ಮಂಡಿಸಿ ಪಾಸು ಮಾಡಿಕೊಂಡಿರುವುದು ಇದೇ ಕಾರಣಕ್ಕೆ. ಮುಸ್ಲಿಮರನ್ನು ನಗಣ್ಯರಾಗಿ ಮತ್ತು ಅವಮಾನಿತರಾಗಿ ನಡೆಸಿಕೊಂಡಷ್ಟೂ ತನ್ನ ಓಟ್ ಬ್ಯಾಂಕ್ ವೃದ್ಧಿಸುತ್ತದೆ ಎಂಬ ನಂಬಿಕೆಯಲ್ಲಿ ಬಿಜೆಪಿ ಈಗಲೂ ಇದೆ. ತ್ರಿವಳಿ ತಲಾಕ್‍ಗೆ ಸಂಬಂಧಿಸಿ ಅತ್ಯಂತ ಕೆಟ್ಟದಾದ ಮತ್ತು ಮುಸ್ಲಿಮ್ ಕುಟುಂಬಗಳ ವಿಭಜನೆಗೆ ಕಾರಣವಾಗಬಹುದಾದ ಕಾನೂನನ್ನು ರಚಿಸಿ ಸುಗ್ರೀವಾಜ್ಞೆಯೊಂದಿಗೆ ಜಾರಿಗೊಳಿಸಿರುವುದೂ ಇದೇ ನಂಬಿಕೆಯ ಕಾರಣದಿಂದ.
ಪೌರತ್ವ ಮಸೂದೆಯ ಮೂಲಕ ಬಿಜೆಪಿ ತಾನು ಬಹುಸಂಸ್ಕೃತಿಯ  ದೇಶವನ್ನಾಳಲು ಅಸಮರ್ಥ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Thursday 10 January 2019

ತ್ರಿವಳಿ ತಲಾಕ್‍, ಶಬರಿಮಲೆ, ಸುಪ್ರೀಂ ಕೋರ್ಟ್ ಮತ್ತು ನಂಬಿಕೆ



ಶಬರಿಮಲೆ ಮತ್ತು ತ್ರಿವಳಿ ತಲಾಕ್‍ನ ವಿಷಯದಲ್ಲಿ ಕೇಂದ್ರ ಸರಕಾರದ ಉದ್ದೇಶಶುದ್ಧಿಯನ್ನು ಶಂಕಿತಗೊಳಿಸುವ ಮತ್ತು ಅದರ ನಿಲುವನ್ನು ಪ್ರಶ್ನಾರ್ಹಗೊಳಿಸುವ ಸಂದರ್ಭಗಳು ಸೃಷ್ಟಿಯಾಗುತ್ತಲೇ ಇವೆ. ಶಬರಿಮಲೆ ಪ್ರಕರಣವನ್ನು ವಿಚಾರಣೆಗೆತ್ತಿಕೊಂಡ ಸುಪ್ರೀಮ್ ಕೋರ್ಟಿನ ನ್ಯಾಯಾಧೀಶರ ತಂಡದಲ್ಲಿ ಇಂದೂ ಮಲ್ಹೋತ್ರ ಎಂಬ ಮಹಿಳೆಯೂ ಇದ್ದರು. ಅವರು ಈ ಪ್ರಕರಣವನ್ನು ನಂಬಿಕೆಯ ದೃಷ್ಟಿಕೋನದಿಂದ ನೋಡಿದರು. ನಂಬಿಕೆಯ ವಿಷಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸದಿರುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಆದರೆ ಈ ನಿಲುವನ್ನು ಉಳಿದ ನ್ಯಾಯಾಧೀಶರು ಮಾನ್ಯ ಮಾಡಲಿಲ್ಲ. ಆದ್ದರಿಂದ, ಎಲ್ಲ ವಯೋಮಾನದ ಮಹಿಳೆಯರೂ ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ತೆರಳಬಹುದು ಎಂಬ ತೀರ್ಪು ಸುಪ್ರೀಮ್ ಕೋರ್ಟಿನಿಂದ ಹೊರಬಿತ್ತು. ಇದಕ್ಕಿಂತ ಒಂದು ವರ್ಷ ಮೊದಲು ತ್ರಿವಳಿ ತಲಾಕ್‍ಗೆ ಸಂಬಂಧಿಸಿಯೂ ಸುಪ್ರೀಮ್ ಕೋರ್ಟು ಇಂಥದ್ದೊಂದು  ಮಹತ್ವದ ತೀರ್ಪನ್ನು ಪ್ರಕಟಿಸಿತ್ತು. ದೂರು ದಾಖಲಿಸಿದ್ದು ಶಾಯರಾಬಾನು. ಈ ಪ್ರಕರಣವನ್ನು ವಿಚಾರಣೆಗೆತ್ತಿಕೊಂಡ ಐವರು ನ್ಯಾಯಾಧೀಶರ ಪೈಕಿ ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ ಮತ್ತು ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ತ್ರಿವಳಿ ತಲಾಕನ್ನು ಧಾರ್ಮಿಕ ದೃಷ್ಟಿಕೋನದಿಂದ ನೋಡಿದರು. ಈ ವಿಷಯದಲ್ಲಿ ಕೋರ್ಟಿನ ಮಧ್ಯಪ್ರವೇಶವನ್ನು ಅವರಿಬ್ಬರೂ ಬಯಸಲಿಲ್ಲ. ಆದರೆ ಉಳಿದ ಮೂವರು ನ್ಯಾಯಾಧೀಶರು ಈ ಅಭಿಪ್ರಾಯಕ್ಕೆ ವಿರುದ್ಧವಿದ್ದುದರಿಂದ ತ್ರಿವಳಿ ತಲಾಕನ್ನು ಅಂತಿಮವಾಗಿ ಅಸಾಂವಿಧಾನಿಕ ಮತ್ತು ಅನೂರ್ಜಿತವೆಂದು ಘೋಷಿಸಲಾಯಿತು. ಇದರರ್ಥ ಏನೆಂದರೆ, ತ್ರಿವಳಿ ತಲಾಕ್ ಸಂವಿಧಾನಬದ್ಧವಲ್ಲ. ಯಾರಾದರೂ ತ್ರಿವಳಿ ತಲಾಕ್ ಹೇಳಿದರೆ ಅದರಿಂದ ವಿಚ್ಛೇದನ ಏರ್ಪಡುವುದೂ ಇಲ್ಲ. ತ್ರಿವಳಿ ತಲಾಕ್ ಹೇಳುವುದರಿಂದ ಪತಿ-ಪತ್ನಿ ಸಂಬಂಧಕ್ಕೆ ಮತ್ತು ಅವರ ಸ್ಥಾನಮಾನಕ್ಕೆ ಧಕ್ಕೆ ಬರುವುದೂ ಇಲ್ಲ. ಆದ್ದರಿಂದ, ಇನ್ನು ವಿಚ್ಛೇದನಕ್ಕೆ ಯಾರೂ ಈ ಕ್ರಮವನ್ನು ಅನುಸರಿಸುವಂತಿಲ್ಲ... ಸುಪ್ರೀಮ್ ಕೋರ್ಟು ಹೇಳಿದ್ದು ಇಷ್ಟೇ. ಆದರೆ,
ಈ ತೀರ್ಪಿನ ಆರಂಭದಿಂದ ಕೊನೆಯ ವರೆಗೆ ಕಣ್ಣಿಗೆ ಎಣ್ಣೆ ಬಿಟ್ಟು ಪರಿಶೀಲಿಸಿದರೂ ಎಲ್ಲೂ ತ್ರಿವಳಿ ತಲಾಕನ್ನು ಕ್ರಿಮಿನಲ್ ಪ್ರಕರಣವಾಗಿ ಪರಿವರ್ತಿಸಬೇಕೆಂದು ಕೋರ್ಟು ಹೇಳಿದ್ದು ಎಲ್ಲೂ ಸಿಗುವುದಿಲ್ಲ. ತ್ರಿವಳಿ ತಲಾಕ್ ಹೇಳುವ ಪುರುಷನನ್ನು ಮೂರು ವರ್ಷಗಳ ವರೆಗೆ ಜೈಲಿಗೆ ತಳ್ಳುವಂತಹ ‘ತಲಾಕ್ ಮಸೂದೆಯನ್ನು’ ಜಾರಿಗೊಳಿಸಿ ಎಂದು ಕೇಂದ್ರ ಸರಕಾರಕ್ಕಾಗಲಿ, ಪಾರ್ಲಿಮೆಂಟ್‍ಗಾಗಲಿ ಕೋರ್ಟು ಆದೇಶಿಸಿಲ್ಲ. ಪಾರ್ಲಿಮೆಂಟ್‍ನಲ್ಲಿ ಇಂಥದ್ದೊಂದು  ಮಸೂದೆ ಅಂಗೀಕಾರಗೊಳ್ಳದಿದ್ದರೆ ಸುಗ್ರೀವಾಜ್ಞೆಯ ಮೂಲಕವಾದರೂ ಜಾರಿಗೆ ತನ್ನಿ ಎಂದೂ ಅದು ಹೇಳಿಲ್ಲ. ತ್ರಿವಳಿ ತಲಾಕ್ ಕ್ರಮವನ್ನು ಅದು ಅಸಾಂವಿಧಾನಿಕ ಎಂದಷ್ಟೇ ಹೇಳಿದೆ. ಹಾಗೆ ತಲಾಕ್ ಹೇಳುವುದಕ್ಕೆ ಕಾನೂನಿನ ಪ್ರಕಾರ ಮಾನ್ಯತೆ ಇಲ್ಲ ಎಂದು ಇದರರ್ಥ. ಹೀಗಿರುವಾಗ, ಇದನ್ನು ಕ್ರಿಮಿನಲ್ ಅಪರಾಧವಾಗಿ ಕೇಂದ್ರ ಸರಕಾರ ಪರಿವರ್ತಿಸಿದ್ದು ಏಕೆ? ಮುಸ್ಲಿಮ್ ಸಮುದಾಯದ ಮಹಿಳೆಯರ ಮೇಲೆ ಸುಪ್ರೀಮ್ ಕೋರ್ಟಿಗಿಂತಲೂ ಹೆಚ್ಚಾಗಿ ಕೇಂದ್ರ ಸರಕಾರಕ್ಕೆ ‘ಕಾಳಜಿ’ ಮೂಡಲು ಕಾರಣವೇನು? ತ್ರಿವಳಿ ತಲಾಕ್‍ಗೊಳಗಾದ ಮಹಿಳೆ ನ್ಯಾಯ ಕೇಳಿದ್ದು ಸುಪ್ರೀಮ್ ಕೋರ್ಟಿನಲ್ಲಿ. ತಾನು ತ್ರಿವಳಿ ತಲಾಕ್‍ನ ಸಂತ್ರಸ್ತೆ ಎಂದು ಶಾಯರಾ ಬಾನು ಕೋರ್ಟಿನ ಮುಂದೆ ನಿವೇದಿಸಿಕೊಂಡಿದ್ದರು. ನ್ಯಾಯಾಧೀಶರೆಂದರೆ ರಾಜಕಾರಣಿಗಳಲ್ಲವಲ್ಲ. ಯಾವುದೇ ದೂರನ್ನು ರಾಜಕೀಯ ಲಾಭ-ನಷ್ಟದ ದೃಷ್ಟಿಯಿಂದ ನೋಡುವ ಪರಿಪಾಠವೂ ನ್ಯಾಯಾಧೀಶರಿಗಿಲ್ಲ, ಇರಬಾರದು ಕೂಡ. ದೂರುದಾರೆಯ ದೂರಿನಲ್ಲಿರುವ ಅಂಶ ನ್ಯಾಯಾಂಗೀಯ ಪರಿಧಿಗೆ ಒಳಪಡುತ್ತದೋ ಇಲ್ಲವೋ, ದೂರು ಸಮರ್ಪಕವೋ ಅಲ್ಲವೋ, ದೂರಿನ ಮೇಲೆ ವಿಚಾರಣೆ ನಡೆಸಬೇಕೋ ಬೇಡವೋ, ದೂರಿನ ಮೇಲಿನ ವಿಚಾರಣೆಯನ್ನು ಯಾವ ವಿಚಾರಣಾ ಪೀಠಕ್ಕೆ ಒಪ್ಪಿಸಬೇಕು, ಆ ಪೀಠದಲ್ಲಿ ಯಾವ ನ್ಯಾಯಾಧೀಶರಿರಬೇಕು, ಹೆಣ್ಣೆಷ್ಟು-ಗಂಡೆಷ್ಟು ಇತ್ಯಾದಿ ಇತ್ಯಾದಿಗಳು ಕೋರ್ಟಿಗೆ ಮುಖ್ಯವಾಗುತ್ತದೆಯೇ ಹೊರತು ಇನ್ನೇನೂ ಅಲ್ಲ. ದೂರುದಾರರು ಸಂತ್ರಸ್ತರು ಎಂದು ಸಾಬೀತಾದರೆ ಅವರಿಗೆ ನ್ಯಾಯದಾನ ಮಾಡಬೇಕು, ಅನ್ಯಾಯ ಮಾಡಿದವರಿಗೆ ಶಿಕ್ಷೆ ವಿಧಿಸಬೇಕು... ನ್ಯಾಯಾಲಯದಲ್ಲಿ ನಡೆಯುವ ನ್ಯಾಯ ಪ್ರಕ್ರಿಯೆಯ ಮೂಲ ಉದ್ದೇಶ ಇದು. ತ್ರಿವಳಿ ತಲಾಕ್‍ಗೆ ಸಂಬಂಧಿಸಿ ಸುಪ್ರೀಮ್ ಕೋರ್ಟು ಶಾಯರಾ ಬಾನು ಅವರ ದೂರನ್ನು ವಿಚಾರಣೆಗೆ ಎತ್ತಿಕೊಂಡಿದೆ. ಅವರ ಅಹವಾಲನ್ನು ಆಲಿಸಿದೆ. ಬಳಿಕ ನ್ಯಾಯವನ್ನೂ ನೀಡಿದೆ. ಹಾಗಾದರೆ, ಈ ನ್ಯಾಯ ವಿಧಾನ ಸರಿಯಲ್ಲ ಅನ್ನುವುದು ಕೇಂದ್ರ ಸರಕಾರದ ವಾದವೇ? ತ್ರಿವಳಿ ತಲಾಕ್ ಹೇಳಿದ ಪುರುಷನನ್ನು ಮೂರು ವರ್ಷ ಜೈಲಿಗಟ್ಟುವ ಸುಗ್ರೀವಾಜ್ಞೆಯು ಕೊಡುವ ಸಂದೇಶವಾದರೂ ಏನು? ಸುಪ್ರೀಮ್ ಕೋರ್ಟು ಇಡೀ ಪ್ರಕರಣವನ್ನು ನೋಡಿದ್ದು ಸಿವಿಲ್ ಪ್ರಕರಣದ ರೂಪದಲ್ಲಿ. ಆದರೆ ಕೇಂದ್ರ ಸರಕಾರ ಅದಕ್ಕೆ ಕ್ರಿಮಿನಲ್ ಸ್ವರೂಪವನ್ನು ನೀಡಿತು. ಇದು ಸುಪ್ರೀಮ್ ಕೋರ್ಟಿನ ಬಯಕೆಯಲ್ಲ. ಒಂದುವೇಳೆ, ಅದುವೇ ಬಯಕೆಯಾಗಿದ್ದರೆ, ತೀರ್ಪಿನಲ್ಲಿ ಅದನ್ನೂ ಹೇಳಬೇಕಿತಲ್ಲವೇ? ತ್ರಿವಳಿಯನ್ನು ನಿಗ್ರಹಿಸುವುದಕ್ಕಾಗಿ ಶಿಕ್ಷಾ ಕಾನೂನೊಂದನ್ನು ಜಾರಿಗೊಳಿಸಿ ಎಂದು ಆದೇಶಿಸಬೇಕಿತ್ತಲ್ಲವೇ? ಅಂದಹಾಗೆ,
ತ್ರಿವಳಿಯನ್ನು ಅಸಾಂವಿಧಾನಿಕ ಮತ್ತು ಅನೂರ್ಜಿತ ಎಂದು ಸುಪ್ರೀಮ್ ಕೋರ್ಟು ಸ್ಪಷ್ಟವಾಗಿ ಹೇಳಿರುವಾಗ ಇಷ್ಟು ಸಾಕಾಗಲ್ಲ ಎಂದು ಕೇಂದ್ರ ಸರಕಾರ ತೀರ್ಮಾನಿಸಿದುದು ಯಾವ ಕಾರಣಕ್ಕೆ? ಯಾರ ಹಿತಾಸಕ್ತಿಯನ್ನು ಕಾಪಾಡಲು? ಅಲ್ಲದೇ, ತ್ರಿವಳಿ ತಲಾಕನ್ನು ಖಂಡಿಸಿ ಪ್ರತಿಭಟಿಸಿದ ಯಾವ ಮುಸ್ಲಿಮ್ ಮಹಿಳೆಯರೂ ಅದನ್ನು ಕ್ರಿಮಿನಲ್ ಪ್ರಕರಣವಾಗಿಸಬೇಕೆಂದು ಬೇಡಿಕೆಯಿಟ್ಟಿರಲಿಲ್ಲ. ಪತಿಯನ್ನು ಜೈಲಿಗಟ್ಟುವ ಕಾನೂನು ಜಾರಿಗೆ ತನ್ನಿ ಎಂದು ಒತ್ತಾಯಿಸಿರಲಿಲ್ಲ. ಸ್ವತಃ ಶಾಯರಾ ಬಾನು ಕೂಡ ಇಂಥದ್ದೊಂದು ಬೇಡಿಕೆಯನ್ನು ಇಟ್ಟಿರಲಿಲ್ಲ. ಹಾಗಂತ, ಯಾರೂ ಬೇಡಿಕೆ ಇಟ್ಟಿರದಿದ್ದರೂ ಮತ್ತು ಮುಸ್ಲಿಮ್ ಮಹಿಳೆಯರ ಬಯಕೆ ಅದಾಗಿರದಿದ್ದರೂ ಅದರ ಅಗತ್ಯ ಇದೆ ಎಂದು ಸುಪ್ರೀಮ್ ಕೋರ್ಟಿಗೆ ಅನಿಸಿದ್ದಿದ್ದರೆ ಖಂಡಿತ ಅಂಸಾವಿಧಾನಿಕ ಮತ್ತು ಅನೂರ್ಜಿತ ಎಂದು ಹೇಳುವುದರ ಜೊತೆಜೊತೆಗೇ ‘ಇಷ್ಟು ವರ್ಷಗಳ ಶಿಕ್ಷಾರ್ಹ ಅಪರಾಧ’ ಎಂದೂ ಹೇಳುತ್ತಿತ್ತು. ಆದರೆ ಸುಪ್ರೀಮ್ ಕೋರ್ಟು ಹಾಗೆ ತೀರ್ಪು ನೀಡುವುದು ಬಿಡಿ, ಸೂಚ್ಯವಾಗಿಯೂ ಹೇಳಲಿಲ್ಲ. ಇದರರ್ಥವೇನು? ತ್ರಿವಳಿ ತಲಾಕ್ ಕ್ರಮವನ್ನು ಮುಸ್ಲಿಮ್ ಸಮುದಾಯ ತಿರಸ್ಕರಿಸಬೇಕು ಮತ್ತು ವಿಚ್ಛೇದನದ ಸಾಂವಿಧಾನಿಕ ರೂಪಕ್ಕೆ ಮರಳಬೇಕು ಎಂದು ಸುಪ್ರೀಮ್ ಕೋರ್ಟು ಬಯಸಿದೆ ಎಂದೇ ಅಲ್ಲವೇ? ಸಮುದಾಯದ ಒಳಗೆ ಈ ಬಗೆಯ ಜಾಗೃತಿ ಮೂಡಲಿ ಮತ್ತು ಸ್ವತಃ ಸಮುದಾಯವೇ ಈ ತೀರ್ಪಿನ ಆಧಾರದಲ್ಲಿ ಸುಧಾರಣೆಗೊಳ್ಳಲಿ ಎಂದಲ್ಲವೇ?
ಶಬರಿಮಲೆಯನ್ನು ನಂಬಿಕೆಯ ಪ್ರಶ್ನೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು, ಅದಕ್ಕಾಗಿ ನ್ಯಾಯಾಧೀಶೆ ಇಂದು ಮಲ್ಹೋತ್ರಾ ಅವರ ಅಭಿಪ್ರಾಯದ ಮೇಲೆ ಹೆಚ್ಚಿನ ಚರ್ಚೆಗಳಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಎಲ್ಲ ವಯೋಮಾನದ ಮಹಿಳೆಯರೂ ಶಬರಿಮಲೆ ಅಯ್ಯಪ್ಪ ದೇಗುಲ ದರ್ಶನಕ್ಕೆ ಅರ್ಹರು’ ಎಂಬ ಕೋರ್ಟಿನ ತೀರ್ಪನ್ನು ವಿರೋಧಿಸುತ್ತಿರುವ ಬಿಜೆಪಿಯ ನಡೆಯನ್ನು ಅವರು ಈ ಮೂಲಕ ಸಮರ್ಥಿಸಿಕೊಂಡಿz್ದÁರೆ. ಆದರೆ, ತ್ರಿವಳಿ ತಲಾಕ್‍ಗೆ ಸಂಬಂಧಿಸಿ ಅವರು ಈ ಮಾನದಂಡವನ್ನು ಅಳವಡಿಸಿಕೊಳ್ಳುವುದೇ ಇಲ್ಲ. ತ್ರಿವಳಿ ತಲಾಕನ್ನು ಧಾರ್ಮಿಕ ಚೌಕಟ್ಟಿನಲ್ಲಿಟ್ಟು ನೋಡಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ ಮತ್ತು ಅಬ್ದುಲ್ ನಝೀರ್‍ ರ ಅಭಿಪ್ರಾಯಗಳ ಮೇಲೆ ಇನ್ನಷ್ಟು ಚರ್ಚೆ ನಡೆಯಬೇಕೆಂದು ಅವರು ಎಲ್ಲೂ ಹೇಳಿಲ್ಲ. ಮುಸ್ಲಿಮ್ ಸಮುದಾಯದ ಒಳಗೆ ಈ ಬಗ್ಗೆ ಜಾಗೃತಿ ನಡೆಯಲಿ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿಲ್ಲ. ಅದರ ಬದಲು ಸುಪ್ರೀಮ್ ಕೋರ್ಟಿನ ಆಶಯವನ್ನೇ ತಪ್ಪಾಗಿ ವ್ಯಾಖ್ಯಾನಿಸುವ ಸಾಹಸಕ್ಕೆ ಅವರು ಮುಂದಾಗಿದ್ದಾರೆ. ಸುಪ್ರೀಮ್ ಕೋರ್ಟು ಬಯಸದೇ ಇರುವ ಕ್ರಿಮಿನಲ್ ಕಾನೂನೊಂದನ್ನು ಏಕಪಕ್ಷೀಯವಾಗಿ ರೂಪಿಸಿ ಸುಗ್ರೀವಾಜ್ಞೆಯ ಮೂಲಕ ಅವರು ಅನುಷ್ಠಾನಕ್ಕೆ ತಂದಿದ್ದಾರೆ. ಇದು ಸುಪ್ರೀಮ್ ಕೋರ್ಟಿನ ಬಯಕೆಯಲ್ಲ. ದೂರುದಾರೆ ಶಾಯರಾ ಬಾನು ಅವರ ಬಯಕೆಯೂ ಅಲ್ಲ. ಮುಸ್ಲಿಮ್ ಸಮುದಾಯದ ಬೇಡಿಕೆಯೂ ಅಲ್ಲ. ಆದ್ದರಿಂದ ಇದು ಸಂಚು, ದಾಷ್ಟ್ರ್ಯತನ, ದುರುದ್ದೇಶ ನೀತಿ, ಕ್ರೌರ್ಯ, ಅರಾಜಧರ್ಮ, ಇಬ್ಬಂದಿತನ.
   ಪ್ರಧಾನಿ ಮೋದಿಯವರು ರಾಜಧರ್ಮವನ್ನು ಪಾಲಿಸುತ್ತಿಲ್ಲ ಅನ್ನುವುದಕ್ಕೆ ಶಬರಿಮಲೆ ಮತ್ತು ತ್ರಿವಳಿ ತಲಾಕ್ ಮತ್ತೊಂದು ಪುರಾವೆ.