Monday, 26 May 2025

ಸಂಪುಟಕ್ಕೆ ಬೇಡದ ಮುಸ್ಲಿಮರು ನಿಯೋಗಕ್ಕೆ ಏಕೆ ಬೇಕಾದರು?




ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಕ್ರೌರ್ಯವು ಭಯೋತ್ಪಾದನೆಯ ಅಪಾಯವನ್ನು ಜಗತ್ತಿನೆದುರು ತೆರೆದಿಟ್ಟರೆ, ಆ ಬಳಿಕದ ಬೆಳವಣಿಗೆಯು ಕೇಂದ್ರ ಸರಕಾರದ ಬೂಟಾಟಿಕೆಯನ್ನೂ ಬೆತ್ತಲೆ ಮಾಡಿದೆ. ಪಾಕಿಸ್ತಾನಿ ಪ್ರೇರಿತ ಭಯೋತ್ಪಾದನೆಯನ್ನು ಜಾಗತಿಕ ರಾಷ್ಟ್ರಗಳಿಗೆ ಮನವರಿಕೆ ಮಾಡುವುದಕ್ಕಾಗಿ ಮೋದಿ ಸರಕಾರ ಸರ್ವ ಪಕ್ಷಗಳ 7 ನಿಯೋಗಗಳನ್ನು ರಚಿಸಿದೆ. ಇದರಲ್ಲಿ ಕಾಂಗ್ರೆಸ್, ಎಡಪಕ್ಷಗಳು, ಎನ್‌ಸಿಪಿ, ಶಿವಸೇನೆ, ಟಿಎಂಸಿ, ಡಿಎಂಕೆ, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ 59 ಸದಸ್ಯರಿದ್ದಾರೆ. ಈ ನಿಯೋಗಗಳು ಅಮೇರಿಕ, ಯುರೋಪಿಯನ್ ರಾಷ್ಟ್ರಗಳು, ಆಫ್ರಿಕಾ, ಗಲ್ಫ್ ರಾಷ್ಟ್ರಗಳು, ವಿಶ್ವಸಂಸ್ಥೆಗೆ ಭೇಟಿ ನೀಡಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ಮನವರಿಕೆ ಮಾಡಿಸುವುದು ಮತ್ತು ಜಾಗತಿಕ ರಾಷ್ಟ್ರಗಳನ್ನು ಭಾರತದ ಪರ ಒಲಿಸುವ ಕೆಲಸವನ್ನು ಮಾಡಲಿದೆ. ಈ ನಿಯೋಗಗಳಲ್ಲಿರುವ ಸದಸ್ಯರನ್ನು ನೋಡಿದರೆ ಮೋದಿ ಸರಕಾರವು ಅತ್ಯಂತ ಬುದ್ಧಿವಂತಿಕೆಯಿಂದ  ಈ ತಂಡ ರಚಿಸಿದೆ ಅನ್ನುವುದು ಗೊತ್ತಾಗುತ್ತದೆ. ಬಹುತ್ವದಲ್ಲಿ ಏಕತೆಯನ್ನು ಸಾರುವ ಮತ್ತು ಸಬ್‌ಕಾ ಸಾಥ್ ಘೋಷಣೆಯನ್ನು ಸಮರ್ಥಿಸುವ ರೂಪದಲ್ಲಿ ಈ ತಂಡವನ್ನು ರಚಿಸಲಾಗಿದೆ. ಈ 59 ಸದಸ್ಯರಲ್ಲಿ ಗುಲಾಮ್ ನಬಿ ಆಝಾದ್, ಸಲ್ಮಾನ್ ಖುರ್ಷಿದ್, ಇ.ಬಿ. ಮುಹಮ್ಮದ್ ಬಶೀರ್, ಮಿಯಾ ಅಲ್ತಾಫ್ ಅಹ್ಮದ್, ಎಂ.ಜೆ. ಅಕ್ಬರ್, ಅಸದುದ್ದೀನ್ ಓವೈಸಿ ಸಹಿತ 10 ಮಂದಿ ಮುಸ್ಲಿಮರಿದ್ದಾರೆ. ಪ್ರಶ್ನೆ ಇರೋದೇ ಇಲ್ಲಿ.

ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬನೇ ಒಬ್ಬ ಮುಸ್ಲಿಮರನ್ನು ಸೇರಿಸಿಕೊಳ್ಳದ ಮೋದಿ ಸರಕಾರವು ವಿದೇಶಿ ರಾಷ್ಟ್ರಗಳಲ್ಲಿ ಭಾರತದ ವರ್ಚಸ್ಸನ್ನು ಹೆಚ್ಚಿಸುವ ತಂಡಕ್ಕೆ ಮುಸ್ಲಿಮರನ್ನು ಆರಿಸಿದ್ದೇಕೆ? ವಿದೇಶಿಯರನ್ನು ಪ್ರಭಾವಿತಗೊಳಿಸಬಲ್ಲಷ್ಟು ತಜ್ಞರು ಮತ್ತು ನಿಪುಣ ನಾಯಕರು ಮುಸ್ಲಿಮ್ ಸಮುದಾಯದಲ್ಲಿ ಇದ್ದಾರೆ ಎಂದಾದರೆ, ಅವರನ್ನೇಕೆ ಸಚಿವ ಸಂಪುಟದಿಂದ ಹೊರಗಿಡಲಾಗಿದೆ? ಹಾಗಂತ,

ಬಿಜೆಪಿಯ 240ರಷ್ಟು ಸಂಸದರಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ಸಂಸದ ಇಲ್ಲದೇ ಇರುವುದರಿಂದ ಸಂಪುಟಕ್ಕೆ ಅವರನ್ನು ಆಯ್ಕೆ ಮಾಡಲಾಗಿಲ್ಲ ಎಂದು ವಾದಿಸುವ ಹಾಗೆಯೂ ಇಲ್ಲ. ನಿರ್ಮಲಾ ಸೀತಾರಾಮನ್ ಕೂಡಾ ಪಾರ್ಲಿಮೆಂಟ್‌ಗೆ ಆಯ್ಕೆಯಾಗಿಲ್ಲ. ಜೆಪಿ ನಡ್ಡಾ ಕೂಡಾ ಪಾರ್ಲಿಮೆಂಟ್‌ಗೆ ಚುನಾಯಿತರಾಗಿಲ್ಲ. ಎಸ್. ಜೈಶಂಕರ್, ಅಶ್ವಿನಿ ವೈಷ್ಣವ್, ಹರ್‌ದೀಪ್ ಸಿಂಗ್ ಪುರಿ ಕೂಡಾ ಚುನಾವಣಾ ರಾಜಕೀಯದಲ್ಲಿ ಆಯ್ಕೆಯಾಗಿ ಬಂದವರಲ್ಲ. ಇವರನ್ನೆಲ್ಲ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಆ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಲಾಗಿದೆ. ಹೀಗಿರುವಾಗ ಮುಸ್ಲಿಮರನ್ನು ಮಾತ್ರ ಇಂಥ ಪ್ರಕ್ರಿಯೆಯಿಂದ ಹೊರಗಿಟ್ಟಿರುವುದೇಕೆ? ಸಮರ್ಥ ಮುಸ್ಲಿಮ್ ನಾಯಕರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಬಳಿಕ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಹುದಿತ್ತಲ್ಲವೇ? ಇಂಥ ಅವಕಾಶ ಇದ್ದೂ ಮುಸ್ಲಿಮರನ್ನು ಸೇರಿಸಿಕೊಳ್ಳದ ಮೋದಿ ಸರಕಾರವು ವಿದೇಶಕ್ಕೆ ಕಳುಹಿಸುವ ತಂಡದಲ್ಲಿ ಮುಸ್ಲಿಮರನ್ನು ಸೇರಿಸಿಕೊಂಡಿರುವುದರ ಅರ್ಥ ಏನು? ಜಗತ್ತನ್ನು ಮೂರ್ಖಗೊಳಿಸುವುದೇ? ತನ್ನ ಸರಕಾರವು ಬಹುತ್ವದಲ್ಲಿ ಏಕತೆಯನ್ನು, ಸಾಮಾಜಿಕ ನ್ಯಾಯವನ್ನು, ಸಮಾನ ಪ್ರಾತಿನಿಧ್ಯವನ್ನು ಭಾರತದಲ್ಲಿ ನೀಡುತ್ತಿದೆ ಮತ್ತು ಎಲ್ಲರನ್ನೂ ಒಳಗೊಳಿಸಿಕೊಂಡು ಹೋಗುತ್ತಿದೆ ಎಂಬ ಸಂದೇಶವನ್ನು ಸಾರುವುದೇ? ಇದು ಬೂಟಾಟಿಕೆ ಅಲ್ಲವೇ? ದೇಶದಲ್ಲಿ ಅಂಥದ್ದೊಂದು  ಪರಿಸ್ಥಿತಿ ಇದೆಯೇ? 20 ಕೋಟಿ ಬೃಹತ್ ಜನಸಂಖ್ಯೆಯ ಮುಸ್ಲಿಮ್ ಸಮುದಾಯವನ್ನು ಎಲ್ಲ ರೀತಿಯಿಂದಲೂ ದಬ್ಬಾಳಿಕೆ ಮತ್ತು ಅಂಚಿಗೆ ತಳ್ಳುವ ನೀತಿಯನ್ನು ಪಾಲಿಸುತ್ತಾ ವಿದೇಶಕ್ಕೆ ತೆರಳುವ ತಂಡದಲ್ಲಿ ಮುಸ್ಲಿಮರನ್ನು ಸೇರಿಸಿಕೊಳ್ಳುವುದು ಕಣ್ಣೊರೆಸುವ ತಂತ್ರವಲ್ಲವೇ? ನಿಜವಾಗಿ,

ವಿದೇಶಕ್ಕೆ ತೆರಳುವ ತಂಡದಲ್ಲಿ 10 ಮಂದಿ ಮುಸ್ಲಿಮರನ್ನು ಸೇರಿಸಿಕೊಳ್ಳುವ ಮೂಲಕ ಮೋದಿ ಸರಕಾರ ಮತ್ತು ಬಿಜೆಪಿ ಒಂದನ್ನಂತೂ  ಒಪ್ಪಿಕೊಂಡಂತಾಗಿದೆ. ಅದೇನೆಂದರೆ, ಭಾರತೀಯ ಮುಸ್ಲಿಮರನ್ನು ದೇಶದ್ರೋಹಿಗಳು, ಪಾಕಿಸ್ತಾನಿ ಬೆಂಬಲಿಗರು ಎಂದೆಲ್ಲಾ  ತಾವೇ ಪ್ರಚಾರ ಮಾಡುತ್ತಾ ಬಂದಿರುವುದೆಲ್ಲ ಸುಳ್ಳು ಎಂದು ಬಹಿರಂಗವಾಗಿ ಒಪ್ಪಿಕೊಂಡಂತಾಗಿದೆ. ಅದರಲ್ಲೂ ಹೈದರಾಬಾದ್ ಸಂಸದ ಅಸದುದ್ದೀನ್ ಓವೈಸಿಯನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಂದೂ ದೇಶಪ್ರೇಮಿಯಾಗಿ ಕಂಡದ್ದೇ  ಇಲ್ಲ. ಅವರನ್ನು ಸದಾ ಹಿಂದೂ ವಿರೋಧಿಯಾಗಿ ಮತ್ತು ದೇಶದ್ರೋಹಿಯಾಗಿ ಅದು ಪ್ರತಿಬಿಂಬಿಸಿದೆ. ಹಾಗೆಯೇ ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ ಪಕ್ಷವನ್ನು ಅದು ಭಾರತೀಯ ಎಂದು ಒಪ್ಪಿಕೊಂಡದ್ದೇ  ಕಡಿಮೆ. ಈ ಪಕ್ಷದ ನಿಷ್ಠೆಯನ್ನು ಪಾಕಿಸ್ತಾನದೊಂದಿಗೆ ಜೋಡಿಸಿ ಸದಾ ಅದು ಮಾತಾಡುತ್ತಲೇ ಬಂದಿದೆ. ಅದರ ಹಸಿರು ಧ್ವಜವನ್ನು ಎತ್ತಿಕೊಂಡು ಹಲವು ಬಾರಿ ಪಾಕಿಸ್ತಾನದ ಧ್ವಜ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರವನ್ನು ನಡೆಸಿದೆ. ಲೀಗ್‌ನ ಜೊತೆ ರಾಜಕೀಯ ಮೈತ್ರಿ ಮಾಡಿಕೊಂಡಿರುವುದಕ್ಕಾಗಿ ಅದು ಕಾಂಗ್ರೆಸನ್ನು ಟೀಕಿಸುತ್ತಲೂ ಇದೆ. ಆದರೆ ವಿದೇಶಕ್ಕೆ ತೆರಳುವ ನಿಯೋಗದಲ್ಲಿ ಅದೇ ಮುಸ್ಲಿಮ್ ಲೀಗ್‌ನ ಇ.ಟಿ. ಮುಹಮ್ಮದ್ ಬಶೀರ್‌ರನ್ನು ಇದೇ ಮೋದಿ ಸರಕಾರ ಸೇರಿಸಿಕೊಂಡಿದೆ. ಒಂದುರೀತಿಯಲ್ಲಿ,

ಬಿಜೆಪಿಗೆ ಮುಸ್ಲಿಮರೆಂದರೆ, ಬಕೆಟ್ ತುಂಬಾ ಹಾಲು ಕೊಡುವ ಕಾಮದೇನು. ಅವರನ್ನು ಬೈದು ದೂರ ಇಟ್ಟರೆ ಓಟು ಸಿಗುತ್ತದೆ. ಸೇರಿಸಿಕೊಂಡರೆ ಅಂತಾರಾಷ್ಟ್ರೀಯವಾಗಿ ಅದರ ವರ್ಚಸ್ಸು ವೃದ್ಧಿಯಾಗುತ್ತದೆ. ಮೋದಿ ಸರಕಾರ ಕಳೆದ 11 ವರ್ಷಗಳಿಂದ ದೇಶವನ್ನು ಆಳುತ್ತಿದೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿಯವರು 173 ಚುನಾವಣಾ ಭಾಷಣ ಮಾಡಿದ್ದರು. ಇದರಲ್ಲಿ 110 ಭಾಷಣಗಳೂ ಇಸ್ಲಾಂಫೋಬಿಕ್  (ಇಸ್ಲಾಮ್      ಭೀತಿಯನ್ನು) ಹರಡುವಂಥದ್ದಾಗಿತ್ತು ಎಂದು ಹ್ಯೂಮನ್ ರೈಟ್ಸ್ ವಾಚ್ ಹೇಳಿರುವುದನ್ನು 2024 ಆಗಸ್ಟ್ 14ರಂದು ದಿ ಹಿಂದೂ ಪತ್ರಿಕೆ ಪ್ರಕಟಿಸಿತ್ತು. ಇದು ಓರ್ವ ಪ್ರಧಾನಿಯ ಸ್ಥಿತಿಯಾದರೆ, ಇನ್ನು ಅದರ ಬೆಂಬಲಿಗರ ಸ್ಥಿತಿ ಏನಿರಬಹುದು? ಈ ದೇಶದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೋ ಬಿಜೆಪಿ ಸರಕಾರವಿದೆ ಅಥವಾ ಸರಕಾರದ ಪಾಲುದಾರ ಪಕ್ಷವಾಗಿ ಅಧಿಕಾರದಲ್ಲಿದೆ. ಈ ಸರಕಾರಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಶೂನ್ಯ ಅನ್ನುವಷ್ಟು ಕಡಿಮೆಯಿದೆ. ಮುಸ್ಲಿಮರಿಗೆ ಮಾತ್ರ ಸಂಬಂಧಿಸಿರುವ ಹಜ್ಜ್ ಮತ್ತು ವಕ್ಫ್ ಇತ್ಯಾದಿ ಖಾತೆಗಳನ್ನೂ ಮುಸ್ಲಿಮರಿಗೆ ನೀಡದೇ ಬಹಿರಂಗ ಉದ್ಧಟತನವನ್ನು ಬಿಜೆಪಿ ಸರಕಾರಗಳು ಪ್ರದರ್ಶಿಸುತ್ತಿವೆ. ಇವತ್ತು ಕೇಂದ್ರ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಖಾತೆಯನ್ನು ನಿಭಾಯಿಸುವುದೂ ಅಲ್ಪಸಂಖ್ಯಾತರೇ ಅಲ್ಲದ ಕಿರಣ್ ರಿಜಿಜು. ಈ ಹಿಂದಿನ ಸರಕಾರದಲ್ಲಿ ಇದೇ ಖಾತೆಯನ್ನು ಸ್ಮೃತಿ ಇರಾನಿ ನಿಭಾಯಿಸಿದ್ದರು. ಹೀಗಿರುವಾಗ ವಿದೇಶಕ್ಕೆ ತೆರಳುವ ನಿಯೋಗಗಳಲ್ಲಿ ಮಾತ್ರ 10 ಮಂದಿ ಮುಸ್ಲಿಮರನ್ನು ಸೇರಿಸಿಕೊಂಡಿರುವುದರ ಅರ್ಥವೇನು? ಕನಿಷ್ಠ ಮುಸ್ಲಿಮರಿಗೆ ಮಾತ್ರ ಸಂಬಂಧೋಇಸಿರುವ ಖಾತೆಗಳಿಗೂ ಮುಸ್ಲಿಮರನ್ನು ನೇಮಿಸಿದ ಮೋದಿ ಸರಕಾರದ ಈ ನಡೆಯಲ್ಲಿ ಪ್ರಾಮಾಣಿಕತೆಯನ್ನು ಹುಡುಕುವುದು ಹೇಗೆ? ನಿಜ ಏನೆಂದರೆ,

ಬಿಜೆಪಿಗೆ ಅಧಿಕಾರ ಬೇಕು. ಅದು ಕೈಗೂಡಬೇಕಾದರೆ ಮುಸ್ಲಿಮರನ್ನು ದ್ವೇಷಿಸಬೇಕು. ಅವರನ್ನು ಹಿಂದೂ ವಿರೋಧಿಗಳಂತೆ, ಪಾಕಿಸ್ತಾನಿಗಳಂತೆ, ದೇಶದ್ರೋಹಿಗಳಂತೆ ಸದಾ ಬಿಂಬಿಸುತ್ತಾ ಅದನ್ನೇ ಚರ್ಚಾ ವಿಷಯವಾಗಿ ಬಳಸಿಕೊಳ್ಳಬೇಕು. ತನ್ನ ಬೆಂಬಲಿಗರನ್ನು ಮುಸ್ಲಿಮರ ವಿರುದ್ಧ ಛೂ ಬಿಡುವುದು ಮತ್ತು ಮುಸ್ಲಿಮರ ಮೇಲಿನ ಹಲ್ಲೆ -ಹತ್ಯೆಗಳಿಗೆ ಪರೋಕ್ಷ ಬೆಂಬಲ ಸಾರುವುದನ್ನೂ ಮಾಡುತ್ತಿರಬೇಕು. ತನ್ನದೇ ಬೆಂಬಲಿಗರ ಒಂದು ತಂಡದಿಂದ  ಮುಸ್ಲಿಮ್ ದ್ವೇಷಭಾಷಣ ಮಾಡಿಸುತ್ತಿರಬೇಕು. ಗೋಹತ್ಯೆ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ವ್ಯಾಪಾರ ಬಹಿಷ್ಕಾರ ಇತ್ಯಾದಿ ಇತ್ಯಾದಿಗಳನ್ನು ಆಗಾಗ ಪ್ರಚಾರಕ್ಕೆ ತರುತ್ತಿರಬೇಕು. ಇಂಥ ಅಪಪ್ರಚಾರಗಳನ್ನು ಚಾಲ್ತಿಯಲ್ಲಿಟ್ಟರೆ ತನ್ನ ಬೆಂಬಲಿಗರು ಇತರ ವಿಷಯಗಳತ್ತ ಗಮನ ಹರಿಸುವುದನ್ನು ನಿಲ್ಲಿಸುತ್ತಾರೆ ಎಂಬ ತಂತ್ರ ಅದರದು. ಆದರೆ,

ಆಂತರಿಕವಾಗಿ ಬಿಜೆಪಿ ನಾಯಕತ್ವಕ್ಕೆ ಇವೆಲ್ಲ ಸುಳ್ಳು ಅನ್ನುವುದು ಗೊತ್ತಿದೆ. ಮುಸ್ಲಿಮರು ದೇಶಪ್ರೇಮಿಗಳು, ಹಿಂದೂ ವಿರೋಧಿಗಳಲ್ಲ ಅನ್ನುವುದೂ ತಿಳಿದಿದೆ. ಆದರೆ ಇದನ್ನೆಲ್ಲ ಬಹಿರಂಗವಾಗಿ ಹೇಳಿದರೆ ಎಲ್ಲಿ ತನ್ನ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೋ ಎಂಬ ಭೀತಿ ಅದರದು. ಆದ್ದರಿಂದಲೇ, ದೇಶದೊಳಗೆ ಮುಸ್ಲಿಮರನ್ನು ದ್ವೇಷಿಸುತ್ತಾ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಮರನ್ನು ಒಳಗೊಳಿಸುತ್ತಾ ಬೂಟಾಟಿಕೆಯಿಂದ ಅದು ನಡೆದುಕೊಳ್ಳುತ್ತಿದೆ. ದುರಂತ ಏನೆಂದರೆ, ಬಿಜೆಪಿಯ ತಳಮಟ್ಟದ ಕಾರ್ಯಕರ್ತರಿಗೆ ಈ ಬೂಟಾಟಿಕೆ ಅರ್ಥವೇ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲೂ ಬಹಿರಂಗವಾಗಿಯೂ ಮುಸ್ಲಿಮ್ ದ್ವೇಷವನ್ನು ಹಂಚುತ್ತಾ ತಿರುಗುತ್ತಿದ್ದಾರೆ.

Monday, 5 May 2025

ಧರ್ಮರಾಜಕಾರಣದ ಅಪಾಯವನ್ನು ಬಿಚ್ಚಿಟ್ಟ ದ.ಕ. ಜಿಲ್ಲೆ




ದಕ್ಷಿಣ ಕನ್ನಡ ಜಿಲ್ಲೆ  ಒಂದೇ ವಾರದಲ್ಲಿ ಎರಡು ಕಾರಣಗಳಿಗಾಗಿ ರಾಜ್ಯಮಟ್ಟದಲ್ಲಿ ಸುದ್ದಿಗೀಡಾಗಿದೆ. ಒಂದು- ಹಿಂಸೆಯ ಕಾರಣಕ್ಕಾದರೆ, ಇನ್ನೊಂದು- ಶೈಕ್ಷಣಿಕ ಸಾಧನೆಯ ಕಾರಣಕ್ಕೆ.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ದ.ಕ. ಜಿಲ್ಲೆ  ರಾಜ್ಯದಲ್ಲೇ  ಮೊದಲ ಸ್ಥಾನ ಪಡೆದಿದೆ. ಸಾಧಕ ವಿದ್ಯಾರ್ಥಿಗಳ ಶೇಕಡಾವಾರು ಅಂಕಗಳು ಮತ್ತು ಫೋಟೋಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಇನ್ನೊಂದು ಕಡೆ, ಹೆತ್ತವರು ತಮ್ಮ ಮಕ್ಕಳ ಭವಿಷ್ಯ ರೂಪಿಸುವ ಕಾಲೇಜುಗಳ ಹುಡುಕಾಟದಲ್ಲಿದ್ದಾರೆ. ಈ ಫಲಿತಾಂಶಕ್ಕಿಂತ  ನಾಲ್ಕೈದು  ದಿನಗಳ ಮೊದಲು ಇದೇ ಜಿಲ್ಲೆಯಲ್ಲಿ ಎರಡು ಹತ್ಯೆಗಳು ನಡೆದುವು. ಮಾನಸಿಕ ಅಸ್ವಸ್ಥನಾದ ಕೇರಳದ ಅಶ್ರಫ್ ಎಂಬವರನ್ನು ಕ್ರಿಕೆಟ್ ಆಡುತ್ತಿದ್ದ ಗುಂಪು ಥಳಿಸಿ ಹತ್ಯೆ ಮಾಡಿತು. ಈ ದುಷ್ಕರ್ಮಿಗಳಿಗೆ ಈ ಅಶ್ರಫ್‌ನ ಪರಿಚಯವೇ ಇರಲಿಲ್ಲ. ಈ ಅಶ್ರಫ್‌ಗೂ ಈ ಕ್ರಿಕೆಟಿಗರ ಪರಿಚಯವೇ ಇರಲಿಲ್ಲ. ಹೀಗೆ ಪರಸ್ಪರ ಪರಿಚಯವೇ ಇಲ್ಲದ ಮತ್ತು ದ್ವೇಷಭಾವ ಹೊಂದುವುದಕ್ಕೆ ಕಾರಣಗಳೇ ಇಲ್ಲದ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕೆ ಅಶ್ರಫ್‌ನ ಧರ್ಮದ ಹೊರತಾಗಿ ಬೇರೆ ಯಾವ ಕಾರಣವೂ ಇರಲಿಲ್ಲ. ಈ ಹತ್ಯೆಗಿಂತ ವಾರ ಮೊದಲು ಕಾಶ್ಮೀರದಲ್ಲಿ ಭಯೋತ್ಪಾದಕರು 26 ಮಂದಿಯನ್ನು ಕೊಂದಿದ್ದರು. ಈ ಕ್ರೌರ್ಯದ ಬಳಿಕ ಮುಸ್ಲಿಮ್ ದ್ವೇಷದ ಪ್ರಚಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಗ್ಗಿಲ್ಲದೇ ಹರಿದಾಡಿತ್ತು. ಟಿವಿ. ಚಾನೆಲ್‌ಗಳೂ ಈ ದ್ವೇಷ ಹರಡುವುದರಲ್ಲಿ ಹಿಂದೆ ಬಿದ್ದಿರಲಿಲ್ಲ. ಭಯೋತ್ಪಾದಕರ ಕೃತ್ಯಕ್ಕೆ 20 ಕೋಟಿ ಭಾರತೀಯ ಮುಸ್ಲಿಮರು ಹೊಣೆ ಹೊರಬೇಕು ಎಂಬ ರೀತಿಯ ಅತೀ ಅಪಾಯಕಾರಿ ವಾದವೊಂದನ್ನು ಕೋಮುವಾದಿಗಳು ತೇಲಿಬಿಟ್ಟಿದ್ದರು. ಈ ದ್ವೇಷದ ಪರಿಣಾಮವಾಗಿ ದೇಶದಾದ್ಯಂತ ಕಾಶ್ಮೀರಿಗಳು ಮತ್ತು ಇತರ ಮುಸ್ಲಿಮರು ಹಲ್ಲೆ, ನಿಂದನೆ, ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾಗಲೇ ಜಿಲ್ಲೆಯಲ್ಲಿ ಈ ಗುಂಪು ಹತ್ಯೆ ನಡೆದಿತ್ತು. ಆದರೆ,

ಜಿಲ್ಲೆಯಲ್ಲಿ ನಡೆದ ಈ ಮೊಟ್ಟಮೊದಲ ಗುಂಪು ಹತ್ಯೆಯನ್ನು ಮುಸ್ಲಿಮರು ಅತ್ಯಂತ ತಾಳ್ಮೆಂಯಿಂದ  ನಿಭಾಯಿಸಿದರು. ಅವರು ಜಿಲ್ಲಾ  ಬಂದ್‌ಗೆ ಕರೆ ಕೊಡಲಿಲ್ಲ. ಅಶ್ರಫ್ ಹತ್ಯೆಗೆ ಪ್ರತೀಕಾರವಾಗಿ ಹಿಂದೂಗಳ ಮೇಲೆ ಹಲ್ಲೆ  ನಡೆಸಿರಲಿಲ್ಲ. ಶವ ಮೆರವಣಿಗೆ ಮಾಡಲಿಲ್ಲ. ಒಂದೇ ಒಂದು ಪ್ರಚೋದನಕಾರಿ ಭಾಷಣ ಮಾಡಲಿಲ್ಲ. ಪಾಕಿಸ್ತಾನ್ ಝಿಂದಾಬಾದ್ ಎಂದು ಕೂಗಿದ ಕಾರಣಕ್ಕಾಗಿ ಈ ಹತ್ಯೆ ನಡೆಸಲಾಗಿದೆ ಎಂಬ ಅರ್ಥ ಬರುವಂತೆ ಗೃಹಸಚಿವ ಪರಮೇಶ್ವರ್ ಹೇಳಿಕೆ ಕೊಟ್ಟು ಸಮರ್ಥನೆಗಿಳಿದಾಗಲೂ ಮುಸ್ಲಿಮರು ಪ್ರಚೋದನೆಗೆ ಒಳಗಾಗಲಿಲ್ಲ. ಸ್ಥಳೀಯ ಶಾಸಕರಾಗಲಿ ಉಸ್ತುವಾರಿ ಸಚಿವರಾಗಲಿ ಸ್ಥಳಕ್ಕೆ ಆಗಮಿಸದೇ ಇದ್ದಾಗಲೂ ಮುಸ್ಲಿಮರು ಆಕ್ರೋಶದಿಂದ ಕಾನೂನು ಕೈಗೆತ್ತಿಕೊಳ್ಳಲಿಲ್ಲ. ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಠಾಣಾಧಿಕಾರಿ ಪ್ರಯತ್ನಿಸಿದಾಗಲೂ ಮುಸ್ಲಿಮರು ಅಶಾಂತಿಗೆ ಕಾರಣವಾಗುವ ಏನನ್ನೂ ಮಾಡಲಿಲ್ಲ. ಆದರೆ,

ಈ ಹತ್ಯೆ ನಡೆದ ನಾಲ್ಕೈದು  ದಿನಗಳ ಬಳಿಕ ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಇದೇ ಜಿಲ್ಲೆಯಲ್ಲಿ ನಡೆದಾಗ ಇಡೀ ಚಿತ್ರಣವೇ ಬದಲಾಯಿತು. ಈತ ಫಾಝಿಲ್ ಎಂಬ ಅಮಾಯಕ ಯುವಕನ ಕೊಲೆಯ ನಂಬರ್ ವನ್ ಆರೋಪಿ. ಕೀರ್ತಿ ಎಂಬ ಯುವಕನ ಹತ್ಯೆಯ ಆರೋಪಿ. ಅಲ್ಲದೇ ಐದರಷ್ಟು ಕ್ರಿಮಿನಲ್ ಪ್ರಕರಣಗಳ ಆರೋಪಿ. ಈತನ ವಿರುದ್ಧ ಬಿಜೆಪಿ ಸರಕಾರವೇ ರೌಡಿಶೀಟರ್ ಪಟ್ಟಿ ತೆರೆದಿತ್ತು. ಈಗಿನ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರೇ ಆಗ ಗೃಹಸಚಿವರಾಗಿದ್ದರು. ಆದರೆ, ಸುಹಾಸ್ ಶೆಟ್ಟಿಯ ಹತ್ಯೆಯ ಬೆನ್ನಿಗೇ ಇದೇ ಅಶೋಕ್ ಜಿಲ್ಲೆಗೆ ದೌಡಾಯಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮಿಸಿದರು. ಈತ ಇನ್ನೊಂದು ಗ್ಯಾಂಗ್‌ನಿಂದ  ಹತ್ಯೆಗೆ ಒಳಗಾಗಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷರಿಂದ ಹಿಡಿದು ಸ್ಥಳೀಯ ಬಿಜೆಪಿ ಶಾಸಕರವರೆಗೆ ಎಲ್ಲರೂ ಇದನ್ನು ಜಿಹಾದಿ ಕೃತ್ಯ, ಇಸ್ಲಾಮಿಕ್ ಆತಂಕವಾದ ಎಂದೆಲ್ಲಾ ಹೇಳಿಕೆ ಕೊಟ್ಟರು. ಸಂಘಪರಿವಾರ ಜಿಲ್ಲಾ ಬಂದ್‌ಗೆ ಕರೆ ಕೊಟ್ಟಿತು. ಜಿಲ್ಲೆಯ ನಾಲ್ಕೈದು  ಕಡೆ ಮುಸ್ಲಿಮರನ್ನು ಚೂರಿಯಿಂದ ಇರಿಯಲಾಯಿತು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅಂತೂ ಅತ್ಯಂತ ಪ್ರಚೋದನಕಾರಿಯಾಗಿ ಭಾಷಣ ಮಾಡಿದರು. ಮುಸ್ಲಿಮರನ್ನು ಹೀನಾಯವಾಗಿ ನಿಂದಿಸಿದರು.

ನಿಜವಾಗಿ, ಈ ಎರಡೂ ಘಟನೆಗಳಲ್ಲಿ ಒಂದಂತೂ  ಸ್ಪಷ್ಟವಾಗಿದೆ. ಮುಸ್ಲಿಮರು ಶಾಂತಿಭಂಗ  ಮಾಡುವವರು, ಕಾನೂನು ಭಂಜಕರು, ಹಿಂದೂ ವಿರೋಧಿಗಳು ಎಂಬ ಬಿಜೆಪಿ ಮತ್ತು ಅವರ ಬೆಂಬಲಿಗರ ವಾದ ಅಪ್ಪಟ ಸುಳ್ಳು ಅನ್ನುವುದನ್ನು ಈ ಘಟನೆಗಳು ತೋರಿಸಿವೆ. ಸರಕಾರದಿಂದ ಹಿಡಿದು ಸ್ಥಳೀಯ ಪೊಲೀಸರ ವರೆಗೆ ಎಲ್ಲರೂ ನ್ಯಾಯಯುತವಾಗಿ ನಡಕೊಳ್ಳದಿರುವಾಗಲೂ ಮುಸ್ಲಿಮರು ಕಾನೂನನ್ನು ಕೈಗೆತ್ತಿಕೊಳ್ಳಲೇ ಇಲ್ಲ. ಹಿಂಸೆಗೂ ಇಳಿಯಲಿಲ್ಲ. ಇದೇವೇಳೆ, ಸುಹಾಸ್ ಶೆಟ್ಟಿಯ ವಿಷಯದಲ್ಲಿ ಬಿಜೆಪಿ ಮತ್ತು ಅದರ ಬೆಂಬಲಿಗರು ಕಾನೂನುಬಾಹಿರವಾಗಿ ನಡಕೊಂಡರು. ಪ್ರಚೋದನಕಾರಿ ಭಾಷಣ ಮಾಡಿದರು. ಮುಸ್ಲಿಮರು ಇರಿತಕ್ಕೂ ಒಳಗಾದರು. ಆದ್ದರಿಂದ,

ನಾಗರಿಕ ಸಮಾಜ ಈ ಎರಡನ್ನೂ ತಾಳ್ಮೆಯಿಂದ ಅವಲೋಕನಕ್ಕೆ ಒಳಪಡಿಸಬೇಕು. ಸಮಾಜದ ಶಾಂತಿಯನ್ನು ಕದಡಲು ಯಾರು ಶ್ರಮಿಸುತ್ತಿದ್ದಾರೆ ಮತ್ತು ಅವರ ಗುರಿ ಯಾವುದು ಎಂಬುದರ ಬಗ್ಗೆ ನಿಷ್ಪಕ್ಷ ಪಾತವಾಗಿ ಚಿಂತನೆ ನಡೆಸಬೇಕು. ತಮ್ಮ ರಾಜಕೀಯ ದುರುದ್ದೇಶವನ್ನು ಈಡೇರಿಸಿಕೊಳ್ಳುವುದಕ್ಕಾಗಿ ಮತ್ತು ತಮ್ಮ ಕಾನೂನುಬಾಹಿರ ದಂಧೆಗಳನ್ನು ಅಡಗಿಸುವುದಕ್ಕಾಗಿ ಮುಸ್ಲಿಮರನ್ನು ಸದಾ ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದಾಗಿ ಆಲೋಚಿಸಬೇಕು. ಯಾಕೆಂದರೆ,

ಸುಸಜ್ಜಿತ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಮತ್ತು ಬಂದರು ನಿಲ್ದಾಣವನ್ನು ಹೊಂದಿರುವ ಹೊರತಾಗಿಯೂ ದ ಕ ಜಿಲ್ಲೆ   ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ. ಕಂಪೆನಿಗಳು ಜಿಲ್ಲೆಗೆ ಬರುತ್ತಿಲ್ಲ. ಎಂಜಿನಿಯರಿಂಗ್  ಮತ್ತು ಮೆಡಿಕಲ್ ಕಾಲೇಜುಗಳು ಧಾರಾಳ ಇದ್ದರೂ ಇಲ್ಲಿ ಕಲಿತ ಮಕ್ಕಳು ಉದ್ಯೋಗಕ್ಕಾಗಿ ಹೊರದೇಶಕ್ಕೋ ಹೊರ ರಾಜ್ಯಗಳಿಗೋ ಹೋಗಬೇಕಾದ ಅನಿವಾರ್ಯತೆ ಇದೆ. ವಿದೇಶದಲ್ಲಿ ದುಡಿಯುತ್ತಿರುವ ಮಗ ಅಥವಾ ಮಗಳೊಂದಿಗೆ ದಿನಾ ವೀಡಿಯೋ ಕರೆ ಮೂಲಕ ಮಾತಾಡಿ ತೃಪ್ತಿಪಟ್ಟುಕೊಳ್ಳಬೇಕಾದಂಥ ಹಿರಿಯ ಹೆತ್ತವರು ಜಿಲ್ಲೆಯಲ್ಲಿದ್ದಾರೆ. ಇದಕ್ಕೆ ಧರ್ಮದ ಮುಖವಾಡ ತೊಟ್ಟು ರಾಜಕೀಯ ಗುರಿ ಈಡೇರಿಸಿಕೊಳ್ಳುತ್ತಿರುವ ರಾಜಕಾರಣಿಗಳೇ ಕಾರಣ. ಅವರ ಮಕ್ಕಳಾರೂ ಈ ಹಿಂಸಾಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲ. ತಮ್ಮ ಮಕ್ಕಳನ್ನು ವಿದೇಶದಲ್ಲೋ  ಹೊರರಾಜ್ಯದಲ್ಲೋ  ಓದಿಸುತ್ತಾ ಮತ್ತು ನೌಕರಿಗಾಗಿ ವಿದೇಶಕ್ಕೆ ಕಳುಹಿಸಿಕೊಡುತ್ತಾ ಜಿಲ್ಲೆಯ ಬಡಪಾಯಿ ಯುವಕರನ್ನು ಅಪರಾಧ ಕೃತ್ಯಗಳಿಗೆ ಈ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ. ಹತ್ಯೆಗೀಡಾದ ಸುಹಾಸ್ ಶೆಟ್ಟಿಯ ಬದುಕಿನಲ್ಲೂ ಇದಕ್ಕೆ ಆಧಾರವಿದೆ. 31 ವರ್ಷವಾಗಿಯೂ ಮದುವೆಯಾಗಿಲ್ಲದ, ಅನಾರೋಗ್ಯ ಪೀಡಿತ ಹೆತ್ತವರೊಂದಿಗೆ ಬಡತನದ ಬದುಕನ್ನೇ ಬದುಕುತ್ತಿದ್ದ ಸುಹಾಸ್ ಶೆಟ್ಟಿಯನ್ನು ಒಂದು ಕಡೆ ತಮ್ಮ ರಾಜಕೀಯ ಗುರಿ ಸಾಧನೆಗಾಗಿ ಬಳಸಿಕೊಳ್ಳುತ್ತಲೇ ಇನ್ನೊಂದು ಕಡೆ ರೌಡಿಶೀಟರ್ ಖಾತೆಯನ್ನೂ ಇವೇ ರಾಜಕಾರಣಿಗಳು ತೆರೆದರು. ಅಪರಾಧ ಜಗತ್ತಿಗೆ ಇಳಿದ ಸುಹಾಸ್ ಶೆಟ್ಟಿಗೆ ಸಹಜವಾಗಿಯೇ ವೈರಿಗಳೂ ಹುಟ್ಟಿಕೊಂಡರು. ರಾಜಕಾರಣಿಗಳ ಮಕ್ಕಳಂತೆ ಚೆನ್ನಾಗಿ ಓದದೆ, ಕೈತುಂಬಾ ಸಂಬಳ ಪಡೆಯುವ ಉದ್ಯೋಗವನ್ನೂ ಮಾಡಲಾಗದೇ ಮತ್ತು ವೃದ್ಧ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಲಾಗದೇ ಕೊನೆಗೆ ಎದುರಾಳಿ ಗ್ಯಾಂಗ್‌ನಿಂದ  ಆತ ಹತ್ಯೆಗೀಡಾದ. ಸದ್ಯ,

ಜಿಲ್ಲೆಯ ನಾಗರಿಕರು ಪ್ರಜ್ಞಾವಂತರಾಗಬೇಕಿದೆ. ಧರ್ಮದ ಹೆಸರಲ್ಲಿ ಯುವಕರನ್ನು ಅಪರಾಧ ಜಗತ್ತಿಗೆ ತಳ್ಳುವ ರಾಜಕಾರಣಿಗಳ ಕುತಂತ್ರವನ್ನು ಬಹಿರಂಗವಾಗಿ ಪ್ರಶ್ನಿಸುವ ಧೈರ್ಯವನ್ನು ತೋರಿಸಬೇಕಿದೆ. ನಿಮ್ಮ ಮಕ್ಕಳ ನೇತೃತ್ವದಲ್ಲೇ  ಈ ಧರ್ಮರಕ್ಷಣೆಯ ಕೆಲಸ ಪ್ರಾರಂಭವಾಗಲಿ ಎಂದು ಯಾವಾಗ ನಾಗರಿಕರು ಧ್ವನಿ ಎತ್ತರಿಸಿ ರಾಜಕಾರಣಿಗಳಲ್ಲಿ ಹೇಳಲು ಪ್ರಾರಂಭಿಸುತ್ತಾರೋ ಅಂದಿನಿಂದ  ಜಿಲ್ಲೆಯಲ್ಲಿ ಶಾಂತಿಯ ಪರ್ವ ಆರಂಭವಾಗಬಹುದು. ಮಾತ್ರವಲ್ಲ, ಯಾವಾಗ ಧರ್ಮದ್ವೇಷಿಗಳನ್ನು ಮತ್ತು ಪ್ರಚೋದನಕಾರಿ ಭಾಷಣಗಾರರನ್ನು ಸ್ಥಳದಲ್ಲೇ  ಪ್ರಶ್ನಿಸುವ ಧೈರ್ಯವನ್ನು ಜನರು ತೋರುತ್ತಾರೋ ನಿಧಾನಕ್ಕೆ ಧರ್ಮ ರಾಜಕಾರಣ ಬದಿಗೆ ಸರಿದು ಅಭಿವೃದ್ಧಿ ರಾಜಕಾರಣ ಮುನ್ನೆಲೆಗೆ ಬರಬಹುದು. ಬಡಪಾಯಿ ಯುವಕರ ಜೀವದೊಂದಿಗೆ ಚೆಲ್ಲಾಟ ನಡೆಸುವ ಧರ್ಮ ರಾಜಕಾರಣಕ್ಕೆ ಜನರು ಬೆನ್ನು ತಿರುಗಿಸದ ಹೊರತು ಜಿಲ್ಲೆಯಲ್ಲಿ ಶಾಂತಿ ಸಾಧ್ಯವಿಲ್ಲ. ಶಾಂತಿಯೇ ಇಲ್ಲದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಸಾಧ್ಯವಿಲ್ಲ.