Tuesday, 20 August 2013

ಪ್ರಜಾತಂತ್ರವಾದಿಗಳ ಮುಖವಾಡವನ್ನು ಕಳಚಿಟ್ಟ ಬ್ರದರ್‍ಹುಡ್

   ಪ್ರಜಾತಂತ್ರದ ಬಗ್ಗೆ ಭಾರೀ ಕಾಳಜಿ ವ್ಯಕ್ತಪಡಿಸಿ ಆಗಾಗ ಹೇಳಿಕೆಗಳನ್ನು ಕೊಡುತ್ತಿರುವ ಪಾಶ್ಚಾತ್ಯ ರಾಷ್ಟ್ರಗಳ ಕಪಟ ಮುಖವನ್ನು ಈಜಿಪ್ಟ್ ನ ಮುಸ್ಲಿಮ್ ಬ್ರದರ್‍ಹುಡ್ ಮತ್ತೊಮ್ಮೆ ತೆರೆದಿಟ್ಟಿದೆ. ಈ ಮುಖ ಎಷ್ಟು ಅಪಾಯಕಾರಿಯಾದದ್ದೆಂದರೆ ಅದಕ್ಕೆ ಪಾಪ ಭಾವನೆಯೂ ಇಲ್ಲ, ನಾಚಿಕೆಯೂ ಇಲ್ಲ. ಚೀನಾದಲ್ಲಿ, ಮ್ಯಾನ್ಮಾರ್, ಸಿರಿಯಾಗಳಲ್ಲಿ ನಡೆದ ಪ್ರಜಾ ಚಳವಳಿಗಳನ್ನು ಬೆಂಬಲಿಸಿದ್ದು ಅಮೇರಿಕವೇ. ಉತ್ತರ ಕೊರಿಯದ ಕಮ್ಯುನಿಸ್ಟ್ ಸೇನಾಡಳಿತವನ್ನು ಕಿತ್ತು ಹಾಕುವುದಕ್ಕಾಗಿ ನಿರ್ಬಂಧಗಳನ್ನು ಹೇರುತ್ತಿರುವುದೂ ಅಮೇರಿಕವೇ. ಇಂಥ ರಾಷ್ಟ್ರವೊಂದು ಈಜಿಪ್ಟ್ ಸೇನಾಡಳಿತವನ್ನು ಬೆಂಬಲಿಸುವ ಧಾಟಿಯಲ್ಲಿ ಮಾತಾಡುತ್ತಿರುವುದಕ್ಕೆ ಏನೆನ್ನಬೇಕು? ಈಜಿಪ್ಟ್ ಗೆ ತಾನು ಪ್ರತಿ ವರ್ಷ ಕೊಡುತ್ತಿರುವ 1.3 ಬಿಲಿಯನ್ ಡಾಲರ್ ಸೇನಾ ನೆರವನ್ನು ಕಡಿತಗೊಳಿಸಿದರೆ ಅದನ್ನು ಸೌದಿ ಅರೇಬಿಯ ಮತ್ತು ಯುಎಇ ತುಂಬುವ ಸಾಧ್ಯತೆ ಇರುವುದರಿಂದ ತಾನು ನೆರವು ಕಡಿತಗೊಳಿಸಲಾರೆ (ದಿ ಹಿಂದೂ, ಆಗಸ್ಟ್ 17) ಎಂದಿರುವುದನ್ನು ಏನೆಂದು ವ್ಯಾಖ್ಯಾನಿಸಬೇಕು? ಅಮೇರಿಕ ಇಷ್ಟೊಂದು ದುರ್ಬಲವಾದದ್ದು ಯಾವಾಗಿನಿಂದ?
   ಇರಾನ್‍ನ ಅಣು ಯೋಜನೆಯನ್ನು ಪ್ರತಿಭಟಿಸಿ ಅಮೇರಿಕ ಹತ್ತಾರು ಬಾರಿ ಮಾತಾಡಿದೆ. ಪ್ರಾದೇಶಿಕ ಭದ್ರತೆಗೆ ಇರಾನ್‍ನ ಅಣು ಯೋಜನೆ ಎಷ್ಟು ದೊಡ್ಡ ಅಪಾಯವೆಂಬುದನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅದು ವಿವರಿಸುತ್ತಲೇ ಬಂದಿದೆ. ಅದರ ಮೇಲೆ ಹಲವು ಸುತ್ತಿನ ನಿರ್ಬಂಧಗಳನ್ನೂ ಈಗಾಗಲೇ ಹೊರಿಸಿದೆ. ಅಷ್ಟೇ ಅಲ್ಲ, ಇರಾನ್‍ನೊಂದಿಗೆ ಯಾರೂ ಸಂಬಂಧ ಬೆಳೆಸಬಾರದೆಂದೂ ವಿಶ್ವ ರಾಷ್ಟ್ರಗಳಿಗೆ ತಾಕೀತು ಮಾಡಿದೆ. ಇಷ್ಟೊಂದು ಸಾಮರ್ಥ್ಯ  ಇರುವ ಅಮೇರಿಕವು ಸೌದಿ ಅರೇಬಿಯದ ಮುಂದೆ ಈ ಮಟ್ಟದಲ್ಲಿ ತಲೆ ತಗ್ಗಿಸುತ್ತಿರುವುದಕ್ಕೆ ಕಾರಣವೇನು? ಇರಾನ್‍ನ ಅಣು ಯೋಜನೆಯು ವಲಯದ ಭದ್ರತೆಗೆ ಅಪಾಯಕಾರಿ ಎಂದಾದರೆ, ಈಜಿಪ್ಟ್ ಸೇನಾಡಳಿತವನ್ನು ಬೆಂಬಲಿಸುವ ಸೌದಿ ಅರೇಬಿಯವು ವಲಯದ ಪ್ರಜಾ ಚಳವಳಿಗಳಿಗೆ  ಅಪಾಯಕಾರಿಯೇ ಅಲ್ಲವೇ? ಇರಾನ್‍ನ ವಿರುದ್ಧ ಕಠಿಣ ನಿಲುವು ತಳೆದಂತೆಯೇ ಸೌದಿಯ ವಿರುದ್ಧವೂ ತಳೆಯಲು ಅಮೇರಿಕಕ್ಕೆ ಏನು ತೊಂದರೆಯಿದೆ?
   ನಿಜವಾಗಿ, ಅಮೇರಿಕವು ಈಜಿಪ್ಟ್ ಗೆ ಒದಗಿಸುತ್ತಿರುವ ನೆರವಿಗೂ ಸೌದಿ ಮತ್ತು ಯುಎಇ ಒದಗಿಸುತ್ತಿರುವ ನೆರವಿಗೂ ತುಂಬಾ ವ್ಯತ್ಯಾಸವಿದೆ. ಅಮೇರಿಕದ ನೆರವು ನೇರವಾಗಿ ತಲುಪುವುದು ಮಿಲಿಟರಿ ಚಟುವಟಿಕೆಗಳಿಗೆ. ಈಜಿಪ್ಟ್ ಸೇನೆಯು ಇವತ್ತು ಪ್ರತಿಭಟನೆಯನ್ನು ಬುಲ್ಡೋಜರ್ ಹರಿಸಿ ದಮನಿಸಿದ್ದರೆ, ಆ ಬುಲ್ಡೋಜರನ್ನು ಒದಗಿಸಿದ್ದು ಅಮೇರಿಕ. ಸೇನಾ ಸಮವಸ್ತ್ರ, ಆಯುಧಗಳು, ಮದ್ದುಗುಂಡುಗಳು ಎಲ್ಲವೂ ಆಮದಾಗಿರುವುದು ಅಮೇರಿಕದಿಂದಲೇ. ಆದರೆ ಸೌದಿ ಅಥವಾ ಯುಎಇಯ ನೆರವು ನೇರವಾಗಿ ಮಿಲಿಟರಿಗೆ ಸಂಬಂಧಿಸಿದ್ದಲ್ಲ. ಮಿಲಿಟರಿಗೆ ಬಳಸಿಕೊಳ್ಳುವ ಅವಕಾಶ ಇದ್ದರೂ ಈಜಿಪ್ಟ್ ನ ಆರ್ಥಿಕ ಬೇಡಿಕೆಯನ್ನು ಪೂರೈಸುವುದಕ್ಕೆ ಇದನ್ನು ನೀಡುತ್ತಿರುವುದಾಗಿ ಅವು ಬಿಂಬಿಸಿಕೊಳ್ಳುತ್ತಿವೆ. ಅದೇನೇ ಇದ್ದರೂ, ಒಂದು ಪ್ರಜಾತಂತ್ರ ಸರಕಾರವನ್ನು ಪದಚ್ಯುತಗೊಳಿಸಿದ ಅಪರಾಧವನ್ನು ಸೇನೆ ಹೊತ್ತು ಕೊಂಡಿರುವಾಗ ಅದಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಜಗತ್ತೇಕೆ ಪ್ರಶ್ನಿಸುತ್ತಿಲ್ಲ? ಐದಾರು ತಿಂಗಳುಗಳ ಹಿಂದೆ ಮಾಲಿ ಎಂಬ ಪುಟ್ಟ ರಾಷ್ಟ್ರದ ಪ್ರಜಾ ಸರಕಾರವನ್ನು ಬಂಡುಕೋರರು ಬುಡಮೇಲುಗೊಳಿಸಿದಾಗ, ಫ್ರಾನ್ಸ್ ನೆರವಿಗೆ ಧಾವಿಸಿತ್ತು. ಸೇನಾ ಕಾರ್ಯಾಚರಣೆಯನ್ನು ನಡೆಸಿ ಬಂಡುಕೋರರನ್ನು ಹೊರ ದಬ್ಬಿತ್ತು. ಮ್ಯಾನ್ಮಾರ್‍ನ ಸೇನಾ ಆಡಳಿತದ ವಿರುದ್ಧ ಅಮೇರಿಕವು ಕೆಲವು ನಿರ್ಬಂಧಗಳನ್ನು ಹೇರಿ ಪ್ರಜಾತಂತ್ರಕ್ಕೆ ಮರಳುವಂತೆ ಒತ್ತಡ ಹಾಕಿತ್ತು. ಇಲ್ಲೆಲ್ಲಾ ಅನ್ವಯವಾಗುವ ನೀತಿಯು ಈಜಿಪ್ಟ್ ನ ವಿಷಯದಲ್ಲಿ ಮಾತ್ರ ಯಾಕೆ ಅಳವಡಿಕೆಯಾಗುತ್ತಿಲ್ಲ?
    ನಿಜವಾಗಿ, ಅಮೇರಿಕ ಬಯಸುವುದು ಪ್ರಜಾತಂತ್ರವನ್ನಲ್ಲ. ತನ್ನ ಹಿತಾಸಕ್ತಿಗೆ ಅನುಕೂಲವಾಗುವ ಸರಕಾರಗಳನ್ನು. ಬ್ರದರ್‍ಹುಡ್ ಅಧಿಕಾರದಲ್ಲಿ ಮುಂದುವರಿದರೆ ತನ್ನ ಮಿತ್ರ ರಾಷ್ಟ್ರ ಇಸ್ರೇಲ್ ಮತ್ತು ಗಲ್ಫ್ ದೊರೆಗಳಿಗೆ ಅಪಾಯ ಎದುರಾಗಬಹುದು ಎಂದು ಅಮೇರಿಕ ಭಯ ಪಡುತ್ತಿದೆ. ಆದ್ದರಿಂದಲೇ ಬ್ರದರ್‍ಹುಡ್ ಮತ್ತು ಅಂತಾರಾಷ್ಟ್ರೀಯ ಮಧ್ಯಸ್ಥಿಕೆದಾರರ ಮಧ್ಯೆ ಸಂಧಾನ ಮಾತುಕತೆ ಯಶಸ್ವಿಯಾಗಿದ್ದರೂ ಸೇನೆ ಅದನ್ನು ತಿರಸ್ಕರಿಸಿ ಬುಲ್ಡೋಜರ್ ಹರಿಸಿತು ಎಂದು ದಿ ಹಿಂದೂ (ಆಗಸ್ಟ್ 17, 2013) ಸಂಪಾದಕೀಯ ಬರೆದಿರುವುದು. ಮಾತ್ರವಲ್ಲ, ಸೇನಾ ದೌರ್ಜನ್ಯವನ್ನು ಖಂಡಿಸಿ ಉಪಾಧ್ಯಕ್ಷ ಮುಹಮ್ಮದ್ ಅಲ್ ಬರ್ದಾಯಿ ರಾಜಿನಾಮೆ ಕೊಟ್ಟು ಹೊರಬಂದರೂ ಅವರ ನ್ಯಾಶನಲ್ ಸಾಲ್ವೇಶನ್ ಫ್ರಂಟ್ ಪಕ್ಷವು ಸೇನೆಯನ್ನು ಈಗಲೂ ಬೆಂಬಲಿಸುತ್ತಿರುವುದು. ಒಂದು ವೇಳೆ, ಪ್ರಜಾತಂತ್ರದ ಪರ ಅಮೇರಿಕದ ನಿಲುವು ಪ್ರಾಮಾಣಿಕವೇ ಆಗಿರುತ್ತಿದ್ದರೆ ಅದು ಮೊಟ್ಟಮೊದಲು ಸೌದಿ ದೊರೆತನದ ವಿರುದ್ಧ ಮಾತಾಡಬೇಕಿತ್ತು. ಮಾತ್ರವಲ್ಲ, ಈಜಿಪ್ಟ್ ನ ಸೇನಾ ಪಡೆಯನ್ನು ಬೆಂಬಲಿಸಬಾರದೆಂದೂ ತಾಕೀತು ಮಾಡಬೇಕಿತ್ತು. ಆದರೆ ಅಮೇರಿಕ ಇವಾವುದನ್ನೂ ಮಾಡಿಲ್ಲ.
   ಈಜಿಪ್ಟ್ ನ ಬೆಳವಣಿಗೆಯು ಒಂದು ರೀತಿಯಲ್ಲಿ ಅರಬ್ ಜಗತ್ತಿನ ತಲ್ಲಣಗಳನ್ನು ಬಹಿರಂಗಕ್ಕೆ ತಂದಿದೆ. ಬ್ರದರ್‍ಹುಡ್‍ನ ರಾಜಕೀಯ ಗೆಲುವು ತಮ್ಮ ದೊರೆತನದ ಅವಸಾನಕ್ಕೆ ಕಾರಣವಾದೀತೆಂಬ ಭೀತಿಯಿಂದ ಅವು ನಡುಗುತ್ತಿವೆ. ಅರಬ್ ದೊರೆತನಕ್ಕೆ ಅಪಾಯ ಎದುರಾಗುವುದೆಂದರೆ ಅದು ತಮ್ಮ ಹಿತಾಸಕ್ತಿಗೆ ಎದುರಾಗುವ ಅಪಾಯವೂ ಹೌದೆಂಬುದಾಗಿ ಅಮೇರಿಕ ಭಾವಿಸಿಕೊಂಡಿದೆ. ಆದ್ದರಿಂದ ಅರಬ್ ವಲಯದಲ್ಲಿ ಪ್ರಜಾತಂತ್ರ ಗಟ್ಟಿಯಾಗಬಾರದೆಂದು ಅವರೆಲ್ಲ ತೀರ್ಮಾನಿಸಿದ್ದಾರೆ. ಈ ಕಾರಣದಿಂದಲೇ ಟುನೀಶ್ಯಾ, ಟರ್ಕಿ, ಲಿಬಿಯಗಳ ಚುನಾಯಿತ ಸರಕಾರಗಳ ವಿರುದ್ಧ ಬಂಡಾಯ ಕಾಣಿಸಿಕೊಂಡಿರುವುದು. ತಾವೇ ಪ್ರತಿಭಟನೆಯನ್ನು ಆಯೋಜಿಸಿ ಅದರ ನೆಪದಲ್ಲಿ ಚುನಾಯಿತ ಸರಕಾರಗಳನ್ನು ಉರುಳಿಸುವ ನಾಟಕವನ್ನು ಈ ಮಂದಿ ಹೆಣೆದಿದ್ದಾರೆ. ಅದರ ಪ್ರಥಮ ಬಲಿಪಶು ಮುಸ್ಲಿಮ್ ಬ್ರದರ್‍ಹುಡ್. ದಶಕಗಳ ಹಿಂದೆ ಅಲ್ಜೀರಿಯಾದಲ್ಲಿ ಇಸ್ಲಾಮಿಕ್ ಸಾಲ್ವೇಶನ್ ಫ್ರಂಟ್ ಪಕ್ಷವು  ಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಿದ್ದರೂ ಸೇನೆಯು ಬಲವಂತದಿಂದ ಅಧಿಕಾರ ಕಿತ್ತುಕೊಂಡು ಮತ್ತೆಂದೂ ತಲೆ ಎತ್ತದಂತೆ ಮಾಡಿರುವ ಹಾಗೆಯೇ ಈಜಿಪ್ಟ್ ನಲ್ಲೂ ಮತ್ತು ಇತರೆಡೆಗಳಲ್ಲೂ ಮಾಡುವ ಹುನ್ನಾರವನ್ನು ಅವು ರೂಪಿಸಿವೆ. ಒಮ್ಮೆ ಅಧಿಕಾರವನ್ನು ಕೊಟ್ಟಂತೆ ಮಾಡಿ, ಆ ಬಳಿಕ ವಿವಿಧ ಆರೋಪಗಳ ಮುಖಾಂತರ ಕಸಿದುಕೊಂಡು, ಶಾಶ್ವತವಾಗಿ ದಮನಿಸುವುದು ಅವರ ಉದ್ದೇಶ. ಈಜಿಪ್ಟ್ ಬೆಳವಣಿಗೆ ಸೂಚಿಸುತ್ತಿರುವುದು ಇದನ್ನೇ.

Monday, 12 August 2013

ನಾಪತ್ತೆಯಾಗುವ ಪಾಂಡೆ ಮತ್ತು ಗುಜರಾತ್ ಮಾದರಿ


   ‘ನಾಪತ್ತೆ’ ಆಗುವವರಿಗೆ ಗುಜರಾತ್ ರಾಜ್ಯವು ಎಷ್ಟೊಂದು ಸುರಕ್ಷಿತ ತಾಣ ಎಂಬುದನ್ನು ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿ ಪಿ.ಪಿ. ಪಾಂಡೆಯವರು ಕಳೆದ ಎರಡ್ಮೂರು ತಿಂಗಳಿನಿಂದ ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಇಶ್ರತ್ ಜಹಾನ್ ಎನ್‍ಕೌಂಟರ್ ಪ್ರಕರಣದಲ್ಲಿ ಅವರ ವಿರುದ್ಧ ಸಿಬಿಐಯು ಆರೋಪ ಪಟ್ಟಿ ಸಲ್ಲಿಸಿದ ಕೂಡಲೇ ಅವರು ನಾಪತ್ತೆಯಾಗಿದ್ದರು. ಮೊನ್ನೆ ಮೊನ್ನೆಯಂತೆ ಸ್ಟ್ರೆಚರ್‍ನಲ್ಲಿ ಮಲಗಿಕೊಂಡು ದಿಢೀರ್ ಆಗಿ ಸಿಬಿಐ ನ್ಯಾಯಾಲಯದಲ್ಲಿ ಹಾಜರಾದರು. ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದರು. ಆದರೆ ಅರ್ಜಿ ತಿರಸ್ಕøತಗೊಂಡ ಕೂಡಲೇ ಆಸ್ಪತ್ರೆಯಿಂದ ಅವರು ಪುನಃ ನಾಪತ್ತೆಯಾಗಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕನೊಬ್ಬನಿಗೆ ಗುಜರಾತ್‍ನಲ್ಲಿ ಇಷ್ಟೊಂದು ದೀರ್ಘ ಅವಧಿವರೆಗೆ ತಲೆಮರೆಸಿಕೊಂಡು ಬದುಕಲು ಸಾಧ್ಯ ಎಂದಾದರೆ ‘ಮೋದಿ ಮಾದರಿಯ' ಅರ್ಥವಾದರೂ ಏನು? ಆ ಮಾದರಿಯಲ್ಲಿ ಏನೆಲ್ಲ, ಯಾವುದೆಲ್ಲ ಒಳಗೊಂಡಿದೆ? ಇಶ್ರತ್ ಜಹಾನ್‍ಳನ್ನು ರಾತೋರಾತ್ರಿ ಪತ್ತೆ ಹಚ್ಚಿ ಎನ್‍ಕೌಂಟರ್ ಮಾಡುವಷ್ಟು ನಿಪುಣರಾಗಿರುವ ಗುಜರಾತ್ ಪೊಲೀಸರಿಗೆ, ಪಾಂಡೆಯನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದರೆ ಏನರ್ಥ? ಇಷ್ಟಕ್ಕೂ, ಇಶ್ರತ್‍ ಜಹಾನ್, ಪ್ರಾಣೇಶ್ ಪಿಳ್ಳೆ ಎಂಬವರೆಲ್ಲ ಪಾಂಡೆಯಂತೆ  ಪರಿಚಿತರಲ್ಲವಲ್ಲ. ಅವರೆಲ್ಲ ತೀರಾ ಸಾಮಾನ್ಯರಲ್ಲಿ ಸಾಮಾನ್ಯರು. ನಾಪತ್ತೆಯಾಗಿರುವರೆಂದು ಹೇಳಿ ಅವರ ಪೋಟೋವನ್ನು ರೈಲು, ಬಸ್ಸು ನಿಲ್ದಾಣಗಳಲ್ಲಿ ತೂಗು ಹಾಕಲಾಗಿಲ್ಲ. ಪತ್ರಿಕೆಗಳಲ್ಲಿ ಅವರ ಪೋಟೋ ಪ್ರಕಟ ಆಗಿಲ್ಲ. ಹಾಗಿದ್ದರೂ ಅವರನ್ನು ಪತ್ತೆ ಹಚ್ಚುವ ಸಾಮರ್ಥ್ಯ  ಗುಜರಾತ್ ಪೊಲೀಸ್ ಇಲಾಖೆಗೆ ಇದೆಯೆಂದ ಮೇಲೆ, ಗುಜರಾತ್‍ನಾದ್ಯಂತ ಸಣ್ಣ ಮಕ್ಕಳಿಗೂ ಮುಖ ಪರಿಚಯ ಇರುವ ಪಾಂಡೆ ಯಾಕೆ ಪತ್ತೆಯಾಗುತ್ತಿಲ್ಲ? ಮೋದಿಯವರು ಮಾದರಿ ಎಂದು ಹೇಳುತ್ತಾರಲ್ಲ, ಯಾವುದನ್ನು? ಈ ಪೊಲೀಸ್ ಇಲಾಖೆಯನ್ನೇ? ಇಂಥದ್ದೊಂದು ಅದಕ್ಷ  ಇಲಾಖೆಯನ್ನು ಕಟ್ಟಿ ಬೆಳೆಸಿರುವ ಮೋದಿಯವರು ಒಂದು ವೇಳೆ ಪ್ರಧಾನಿಯಾದರೆ ಈ ದೇಶದ ಪೊಲೀಸ್ ಇಲಾಖೆಗಳ ಸ್ಥಿತಿ ಏನಾದೀತು? ಕ್ರಿಮಿನಲ್‍ಗಳು, ಕೊಲೆ ಆರೋಪಿಗಳೆಲ್ಲ ನಾಪತ್ತೆಯಾಗುತ್ತಾ, ಸಾಮಾನ್ಯರು ಎನ್‍ಕೌಂಟರ್‍ಗೆ ಒಳಗಾಗುವ ವಾತಾವರಣ ಸೃಷ್ಟಿಯಾಗದೇ? ಒಂದು ನಾಪತ್ತೆ ಪ್ರಕರಣವನ್ನೇ ನಿಭಾಯಿಸಲಾಗದ ಮೋದಿಯವರು ಈ ವಿಶಾಲ ದೇಶವನ್ನು ಹೇಗೆ ತಾನೇ ಮುನ್ನಡೆಸಿಯಾರು?  
   ನಿಜವಾಗಿ, ಬಿಜೆಪಿ ಈ ದೇಶದಲ್ಲಿ ಹತ್ತಾರು ಪ್ರತಿಭಟನೆಗಳನ್ನು ನಡೆಸಿದೆ. ದೆಹಲಿ ಅತ್ಯಾಚಾರದಿಂದ ಹಿಡಿದು ಉಡುಪಿ ಅತ್ಯಾಚಾರದ ವರೆಗೆ ಧರಣಿ, ರಾಲಿಗಳನ್ನು ನಡೆಸಿದೆ. ಅಕ್ರಮ ಗೋಸಾಗಾಟಗಾರರನ್ನು ಬಂಧಿಸುವಂತೆ ಅದು ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಅಂದಹಾಗೆ, ಇಂಥ ಅಪರಿಚಿತ ಅಪರಾಧಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರಲ್ಲಿ ಈ ಮಟ್ಟದ ಆಕ್ರೋಶ ಇರುವುದನ್ನು ತಪ್ಪು ಅನ್ನಬೇಕಿಲ್ಲ. ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚುವಂತೆ ಒತ್ತಾಯಿಸುವುದು ಪ್ರತಿಯೋರ್ವ ಪ್ರಜೆಯ ಹಕ್ಕು. ದೇಶವು ಕ್ರಿಮಿನಲ್‍ಗಳ, ಕಳ್ಳಕಾಕರ, ಅತ್ಯಾಚಾರಿ ಗಳ ಪಾಲಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿಯನ್ನು ಯಾರು ಪ್ರದರ್ಶಿಸಿದರೂ ಅದು ಶ್ಲಾಘನೀಯವೇ. ಆದರೆ, ಬಿಜೆಪಿ ಕಾರ್ಯಕರ್ತರ ಈ ನ್ಯಾಯ ಪ್ರಜ್ಞೆಯು ಪಾಂಡೆಯ ವಿಚಾರದಲ್ಲಿ ಮಾತ್ರ ಯಾಕೆ ನಾಪತ್ತೆಯಾಗಿದೆ? ದೆಹಲಿಯಲ್ಲಿ ಅತ್ಯಾಚಾರಕ್ಕೆ ಈಡಾದ ಯುವತಿಯಂತೆಯೇ ಇಶ್ರತ್ ಕೂಡಾ ಓರ್ವ ಹೆಣ್ಣು. ಆಕೆ ಅಪರಾಧಿ ಎಂದು ಈವರೆಗೂ ಸಾಬೀತಾಗಿಲ್ಲ. ಆ ಇಡೀ ಎನ್‍ಕೌಂಟರ್ ಪ್ರಕರಣವೇ ನಕಲಿ ಎಂದು ಬಹುತೇಕ ಇವತ್ತು ಖಚಿತವಾಗಿಬಿಟ್ಟಿದೆ. ಹೀಗಿರುವಾಗ ಯುವತಿಯನ್ನು ಕೊಂದ ಆರೋಪಿಯನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಯಾಕೆ ಅದು ಪ್ರತಿಭಟನೆ ಮಾಡುತ್ತಿಲ್ಲ? ಒಂದು ವೇಳೆ, ಪಾಂಡೆಯಂತೆ ಆರೋಪ ಹೊತ್ತುಕೊಂಡ ಅಧಿಕಾರಿಯೊಬ್ಬ ಬಿಹಾರದಲ್ಲೋ ದೆಹಲಿಯಲ್ಲೋ ನಾಪತ್ತೆಯಾಗುತ್ತಿದ್ದರೆ ಮೋದಿಯವರ ಕುಹುಕ ನುಡಿಗಳು ಹೇಗಿರುತ್ತಿತ್ತು? ಅದನ್ನು  ಯುಪಿಎಯ ವೈಫಲ್ಯಕ್ಕೆ ಪುರಾವೆಯಾಗಿ  ಅವರು ಉಲ್ಲೇಖಿಸುತ್ತಿರಲಿಲ್ಲವೇ? ದೇಶದೊಳಗೇ ಇರುವ ಅಧಿಕಾರಿಯನ್ನು ಪತ್ತೆ ಹಚ್ಚದವರು ಇನ್ನು ದಾವೂದ್ ಇಬ್ರಾಹೀಮ್‍ನನ್ನು ಪತ್ತೆ ಹಚ್ಚುತ್ತಾರಾ ಎಂದು ಪ್ರಶ್ನಿಸುತ್ತಿರಲಿಲ್ಲವೇ?
   ಪಾಂಡೆಯವರ ನಾಪತ್ತೆ ಪ್ರಕರಣವನ್ನು ಯಾವುದೋ ಓರ್ವ ಕಿಸೆಗಳ್ಳನ ನಾಪತ್ತೆಯಂತೆ ಪರಿಗಣಿಸಲು ಖಂಡಿತ ಸಾಧ್ಯವಿಲ್ಲ. ಹಿರಿಯ ಅಧಿಕಾರಿಯಾಗಿರುವ ಅವರು ನಾಪತ್ತೆಯಾಗುತ್ತಾರೆಂಬುದೇ ದೊಡ್ಡ ವಿಡಂಬನೆ. ನಡೆಯಲು ಸಾಧ್ಯವಿಲ್ಲದಷ್ಟು ಹೃದಯ ಬೇನೆಯಿರುವ ಓರ್ವ ವ್ಯಕ್ತಿ ನಾಪತ್ತೆಯಾಗುವುದು ಮತ್ತು ಅವರನ್ನು ಪತ್ತೆ ಹಚ್ಚುವಲ್ಲಿ ಒಂದಿಡೀ ವ್ಯವಸ್ಥೆ  ವೈಫಲ್ಯ ಅನುಭವಿಸುವುದೆಲ್ಲ ಗುಜರಾತ್ ಮಾದರಿ ಯಾಕೆ ಭಯಾನಕ ಅನ್ನುವುದಕ್ಕೆ ಉದಾಹರಣೆಯಾಗಿದೆ. ಅಲ್ಲಿ ಮೋದಿಗೆ ನಿಷ್ಠೆ ವ್ಯಕ್ತಪಡಿಸುವ ವ್ಯಕ್ತಿ ಸ್ಟ್ರೆಚರ್‍ನಲ್ಲಿ ಮಲಗಿದ್ದರೂ ನಾಪತ್ತೆಯಾಗುತ್ತಾನೆ. ನಿಜವಾಗಿ ಈ ಮಾದರಿಗೆ ಹೋಲಿಸಿದರೆ ಕರ್ನಾಟಕ ಮಾದರಿ ಎಷ್ಟೋ ಪಾಲು ಉತ್ತಮ. ಮೂಡಬಿದಿರೆಯ ಜೈನ ಬಸದಿಯಿಂದ ಆಭರಣಗಳನ್ನು ಹೊತ್ತೊಯ್ದ ಅಂತಾರಾಷ್ಟ್ರೀಯ ಕಳ್ಳನನ್ನು ಆಂಧ್ರ ಪ್ರದೇಶದಿಂದ ಪತ್ತೆ ಹಚ್ಚಿ ಕರೆ ತರಲು ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪಾಂಡೆಗೆ ಹೋಲಿಸಿದರೆ ಈ ಕಳ್ಳ ತೀರಾ ಅಪರಿಚಿತ. ಆತ ಪ್ರತಿ ಸಂದರ್ಭದಲ್ಲೂ ವೇಷ ಬದಲಿಸುತ್ತಿದ್ದ. ತನ್ನ ಗುರುತು ಪತ್ತೆಯಾಗದಂತೆ ಜಾಗರೂಕತೆ ಪಾಲಿಸುತ್ತಿದ್ದ. ಇಷ್ಟೆಲ್ಲಾ ಅಡೆತಡೆಗಳಿದ್ದೂ ರಾಜ್ಯ ಪೊಲೀಸರು ಓರ್ವ ನಿಪುಣ ಕಳ್ಳನನ್ನು ಎರಡು ವಾರಗಳೊಳಗೆ ಬಂಧಿಸಿ ತರುತ್ತಾರೆಂದರೆ ಯಾಕೆ ಈ ಇಲಾಖೆ ಮೋದಿಯ ಪಾಲಿಗೆ ಮಾದರಿ ಆಗಬಾರದು?
   ಮೋದಿ ಈ ದೇಶದ ಮುಂದೆ ಯಾವ ಮಾದರಿಯನ್ನು ಇವತ್ತು ಪ್ರತಿಪಾದಿಸುತ್ತಿದ್ದಾರೋ ಅದರ ಇನ್ನೊಂದು ಮುಖವಾಗಿ ಪಾಂಡೆ ನಮ್ಮ ಮುಂದಿದ್ದಾರೆ. ಗುಜರಾತ್ ಮಾದರಿಯಲ್ಲಿ ಪಾಂಡೆಯಂಥವರು ಬಂಧನಕ್ಕೆ ಒಳಗಾಗುವುದಿಲ್ಲ ಎಂಬುದಷ್ಟೇ ಈ ಪ್ರಕರಣ ಸಾರುವುದಲ್ಲ ಬದಲು ಇಶ್ರತ್‍ಳಂಥ ಬಲಿಗಳು ಈ ಮಾದರಿಗೆ ಸದಾ ಅಗತ್ಯವಿರುತ್ತದೆ ಎಂಬುದನ್ನೂ ಇದು ಹೇಳುತ್ತದೆ. ಆದ್ದರಿಂದಲೇ, ಪಾಂಡೆ ನಾಪತ್ತೆಯನ್ನು ಕೇವಲ ಓರ್ವ ಅಧಿಕಾರಿಯ ನಾಪತ್ತೆ ಪ್ರಕರಣವಾಗಿ ಪರಿಗಣಿಸಲು ಸಾಧ್ಯವಿಲ್ಲ. ಆ ನಾಪತ್ತೆಯ ಜೊತೆ ವ್ಯವಸ್ಥೆಗೂ ಪಾಲಿದೆ. ಈ ವಾಸ್ತವವನ್ನು ಅರಿತುಕೊಂಡರೆ ಗುಜರಾತ್ ಮಾದರಿ ಯಾವ ಕಾರಣಕ್ಕೆ ಈ ದೇಶದ ಪಾಲಿಗೆ ಮಾರಕ ಎಂಬುದು ಗೊತ್ತಾಗುತ್ತದೆ. ಈ ಮಾದರಿಯು ಪಾಂಡೆಯಂಥವರ ಅಡ್ಡೆಯಾಗಬಹುದೇ ಹೊರತು ಜನಸಾಮಾನ್ಯರ ಕನಸಿನ ರಾಷ್ಟ್ರವಾಗದು.


Monday, 5 August 2013

ಗೋವನ್ನು ಹಿಂದೂ ಮುಸ್ಲಿಮ್ ಎಂದು ವಿಭಜಿಸದಿರೋಣ

    ಗೋವಿನ ಸುತ್ತ ಈ ದೇಶದಲ್ಲಿ ಅತಿ ಅನ್ನಬಹುದಾದಷ್ಟು ಬಾರಿ ಚರ್ಚೆಗಳು ನಡೆದಿವೆ. ಗೋವನ್ನು ಆರಾಧ್ಯವಾಗಿ ಪರಿಗಣಿಸುವವರು ಇರುವಂತೆಯೇ ಆಹಾರವಾಗಿ ಪರಿಗಣಿಸುವವರೂ ಈ ದೇಶದಲ್ಲಿ ಧಾರಾಳ ಇದ್ದಾರೆ. ಹಾಗಂತ ಈ ಭಿನ್ನ ದೃಷ್ಟಿಕೋನಗಳನ್ನು ಸಮಾಜಘಾತುಕರು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸುವುದನ್ನು ಯಾರೂ ಯಾವ ಕಾರಣಕ್ಕೂ ಬೆಂಬಲಿಸಬಾರದು. ಗೋವನ್ನು ಆರಾಧಿಸುವವರನ್ನು ಅವಮಾನಿಸುವುದಕ್ಕಾಗಿ ಯಾರಾದರೂ ಗೋಮಾಂಸ ಸೇವಿಸುತ್ತಾರಾದರೆ ಅಥವಾ ಜಾನುವಾರುಗಳ ಹತ್ಯೆ ನಡೆಸುತ್ತಾರಾದರೆ, ಅವರನ್ನು ಬಲವಾಗಿ ಖಂಡಿಸುವುದಕ್ಕೆ ನಮಗೆ ಸಾಧ್ಯವಾಗಬೇಕು. ಯಾಕೆಂದರೆ ಇನ್ನೊಬ್ಬರ ಆರಾಧ್ಯರನ್ನು ಅವಮಾನಿಸುವುದನ್ನು ಪವಿತ್ರ ಕುರ್‍ಆನ್ ಕಾನೂನುಬಾಹಿರವೆಂದು ಸಾರುತ್ತದೆ. (6:17)
   ರಾಜ್ಯ ಬಿಜೆಪಿ ಸರಕಾರವು 2010ರಲ್ಲಿ ಗೋ ಸಂರಕ್ಷಣಾ ಕಾಯ್ದೆಯನ್ನು ರೂಪಿಸಿದಾಗ ರಾಜ್ಯದಲ್ಲಿ ಪರ-ವಿರುದ್ಧ ಅಭಿಪ್ರಾಯಗಳು ವ್ಯಕ್ತವಾಗಿದ್ದುವು. ಗೋವು, ಕರು, ಎತ್ತು, ಎಮ್ಮೆ, ಕೋಣಗಳನ್ನು ಹತ್ಯೆ ಮಾಡುವುದು 1 ಲಕ್ಷ ರೂ. ದಂಡಕ್ಕೆ ಮತ್ತು 7 ವರ್ಷ ಜೈಲು ಶಿಕ್ಷೆಗೆ ಅರ್ಹವಾದ ಅಪರಾಧವೆಂದು ಕಾಯ್ದೆಯಲ್ಲಿ ಉಲ್ಲೇಖಿಸಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾದುವು. ಬಳಕೆಗೆ ಯೋಗ್ಯವಲ್ಲದ ಎತ್ತು, ಕೋಣಗಳನ್ನು ಮತ್ತು ಬಂಜೆಯಾಗಿರುವ ಗೋವು, ಎಮ್ಮೆಗಳನ್ನು ರೈತರು ಏನು ಮಾಡಬೇಕು ಎಂದು ಅನೇಕರು ಪ್ರಶ್ನಿಸಿದರು. ಒಂದು ಹಸು ಅಥವಾ ಎಮ್ಮೆಯ ಆಯುಷ್ಯ ಸಾಮಾನ್ಯವಾಗಿ 25 ವರ್ಷ ಆಗಿದ್ದರೂ ಅದು ಹಾಲು ಕೊಡುವುದು 15 ವರ್ಷಗಳ ವರೆಗೆ ಮಾತ್ರ. ಉಳಿದ 10 ವರ್ಷಗಳ ವರೆಗೆ ಓರ್ವ ರೈತ ಅದನ್ನು ಸಾಕಬೇಕಾದರೆ ಸಾಕಷ್ಟು ದುಡ್ಡಿನ ಅಗತ್ಯ ಇದೆ. ಉಳುಮೆಗೆ ಯೋಗ್ಯವಲ್ಲದ ಎತ್ತು, ಕೋಣದ ಸ್ಥಿತಿಯೂ ಹೀಗೆಯೇ. ಅವುಗಳನ್ನು ಮಾರದೇ ಹೊಸತನ್ನು ಖರೀದಿಸುವುದಕ್ಕೆ ರೈತ ಎಲ್ಲಿಂದ ದುಡ್ಡು ಹೊಂದಿಸಬೇಕು? ಆದ್ದರಿಂದ ಸರಕಾರವು ಮುದಿ ಜಾನುವಾರುಗಳನ್ನು ಖರೀದಿಸುವುದಕ್ಕೆ ವ್ಯವಸ್ಥೆ ಮಾಡದೆ ಮತ್ತು ಮೇವು, ಹಿಂಡಿಗಾಗಿ ಬಜೆಟ್‍ ಅನ್ನು ರೂಪಿಸದೇ ಕೇವಲ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದು ತಪ್ಪು ಎಂದು ಅನೇಕರು ವಾದಿಸಿದರು. ಹೀಗಿರುತ್ತಾ, ಹಿಂದಿನ 1964 ರ ಕಾಯ್ದೆಯನ್ನೇ ಈಗಿನ ಕಾಂಗ್ರೆಸ್ ಸರಕಾರವು ಊರ್ಜಿತಗೊಳಿಸಿತು. ಹಾಗಂತ ಈ ನಿರ್ಧಾರದ ವಿರುದ್ಧ ಪ್ರತಿಭಟನೆಗಳು ನಡೆದಿಲ್ಲ ಎಂದಲ್ಲ. ನಡೆದಿದೆ. ಆದರೆ ಈ ಪರ ಮತ್ತು ವಿರುದ್ಧ ನಿಲುವುಗಳನ್ನು ಗೌರವಿಸಬೇಕೇ ಹೊರತು ಒಂದನ್ನು ದೇಶಪ್ರೇಮಿಯೆಂದೂ ಇನ್ನೊಂದನ್ನು ದೇಶದ್ರೋಹಿಯೆಂದೂ ವಿಭಜಿಸುವುದು ಖಂಡಿತ ತಪ್ಪು.
   ಆದರೆ ಇತ್ತಿತ್ತಲಾಗಿ ಗೋ ಕಳ್ಳತನ ಎಂಬ ಶೀರ್ಷಿಕೆಯಲ್ಲಿ ಹೆಚ್ಚೆಚ್ಚು ಸುದ್ದಿಗಳು ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ನಿಜವಾಗಿ, ಗೋವನ್ನು ಕದಿಯುವವರಿಗೂ ಅದನ್ನು ಆಹಾರವಾಗಿಯೂ ಪರಿಗಣಿಸುವವರಿಗೆ ವ್ಯತ್ಯಾಸವಿದೆ. ಕದಿಯುವುದು ಯಾವ ವಸ್ತುವನ್ನೇ ಆದರೂ ಅಪರಾಧವೇ. ಕೇವಲ ಗೋವು ಎಂದಲ್ಲ, ಅಕ್ರಮವಾಗಿ ಜಾನು ವಾರುಗಳನ್ನು ಸಾಗಾಟ ಮಾಡುವುದು, ಮಾಂಸ ಮಾಡುವುದನ್ನು ಯಾವ ನಿಟ್ಟಿನಲ್ಲೂ ಸಮರ್ಥಿಸಿ ಕೊಳ್ಳಲು ಸಾಧ್ಯವಿಲ್ಲ. ಹಾಲು ಕೊಡುವ ಆಕಳನ್ನು ಮತ್ತು ಕರುವನ್ನು ಮಾಂಸಕ್ಕಾಗಿ ಉಪಯೋಗಿಸುವುದನ್ನು ಇಸ್ಲಾಂ ಬಲವಾಗಿ ವಿರೋಧಿಸುತ್ತದೆ. ಅಂಥವರು  ಯಾರೇ ಆಗಿರಲಿ, ಯಾವ ಧರ್ಮಕ್ಕೇ ಸೇರಿರಲಿ, ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲೇಬೇಕು.
   ಸಾರ್ವಜನಿಕವಾಗಿ ಇವತ್ತು ಒಂದು ಬಗೆಯ ಪೂರ್ವಗ್ರಹವಿದೆ. ಗೋ ಕಳ್ಳತನ ಅಥವಾ ಅಕ್ರಮ ಸಾಗಾಟಕ್ಕೆ ಮುಸ್ಲಿಮ್ ಸಮುದಾಯದ ಬೆಂಬಲವಿದೆ ಎಂದು ನಂಬಿಕೊಂಡವರು ಸಮಾಜದಲ್ಲಿದ್ದಾರೆ. ಅಕ್ರಮ ಕಸಾಯಿಖಾನೆಗಳ ಬಗ್ಗೆಯೂ ಇಂಥದ್ದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುವವರಿದ್ದಾರೆ. ನಿಜವಾಗಿ, ಕದಿಯುವುದು ಗೋವನ್ನಾದರೂ ಇನ್ನೇನನ್ನೇ ಆದರೂ ಅದು ಕಳ್ಳತನವೇ. ಗೋವನ್ನು ಕದ್ದರೆ ಅದನ್ನು ಬೆಂಬಲಿಸುವುದು, ಅಡಿಕೆ ಕದ್ದರೆ ವಿರೋಧಿಸುವುದನ್ನು ಯಾರಿಂದಲೂ ಸಮರ್ಥಿಸಿ ಕೊಳ್ಳಲು ಸಾಧ್ಯವಿಲ್ಲ. ಇತರೆಲ್ಲ ವಸ್ತುಗಳ ಅಕ್ರಮ ಸಾಗಾಟ ಹೇಗೆ ತಪ್ಪೋ ಹಾಗೆಯೇ ಅಕ್ರಮ ಗೋಸಾಗಾಟವೂ. ದುರಂತ ಏನೆಂದರೆ, ಗೋವಿಗೆ ಸಂಬಂಧಿಸಿದ ಯಾವುದೇ ಚರ್ಚೆಯನ್ನು ಇವತ್ತು ಮುಸ್ಲಿಮ್ vs ಹಿಂದೂ ಎಂದು ವಿಭಜಿಸುವ ಪ್ರಯತ್ನಗಳು ನಡೆಯುತ್ತಲೇ ಇವೆ. ಗೋಹತ್ಯೆ ನಿಷೇಧಕ್ಕೆ ಮುಸ್ಲಿಮರೇ ಅಡ್ಡಗಾಲಾಗಿದ್ದಾರೆ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ. ನಿಜವಾಗಿ, ಗೋವು ಮುಸ್ಲಿಮರ ಅನಿವಾರ್ಯ ಆಹಾರವೇನೂ ಅಲ್ಲ. ಅದನ್ನು ತಿನ್ನದಿದ್ದರೆ ಮುಸ್ಲಿಮರ ವಿಶ್ವಾಸಕ್ಕೆ ಯಾವ ರೀತಿಯ ಧಕ್ಕೆಯೂ ತಗಲುವುದಿಲ್ಲ. ಅಲ್ಲದೇ, ಅದನ್ನು ಈ ದೇಶಕ್ಕೆ ಆಹಾರವಾಗಿ ಪರಿಚಯಿಸಿದ್ದೂ ಮುಸ್ಲಿಮರಲ್ಲ. ಹೌದು, ಎಂದಾಗಿದ್ದರೆ ಅದನ್ನು ತಿನ್ನುವವರು ಕೇವಲ ಮುಸ್ಲಿಮರಷ್ಟೇ ಆಗಿರಬೇಕಿತ್ತಲ್ಲವೇ? ಈ ದೇಶದಲ್ಲಿ ಗೋ ಮಾಂಸ ಇವತ್ತು ಆಹಾರವಾಗಿ ಉಳಿದುಕೊಂಡಿದ್ದರೆ ಅದಕ್ಕೆ ಕಾರಣ ಮುಸ್ಲಿಮರಲ್ಲ, ಬಹುಸಂಖ್ಯಾತರೇ. ಅವರ ಬೇಡಿಕೆಯಿಂದಾಗಿಯೇ ಅದು ಈ ವರೆಗೆ ಆಹಾರವಾಗಿ ಉಳಿದುಕೊಂಡಿದೆ. ಒಂದುವೇಳೆ,  ಗೋಮಾಂಸ ಕೇವಲ ಮುಸ್ಲಿಮರ ಆಹಾರವಷ್ಟೇ ಆಗಿರುತ್ತಿದ್ದರೆ ಈ ದೇಶದಲ್ಲಿ ಎಂದೋ ಅದು ನಿಷೇದಕ್ಕೆ ಒಳಗಾಗುತ್ತಿತ್ತು.  ಅಷ್ಟೇ ಅಲ್ಲ, ಈ ದೇಶದಲ್ಲಿ ಇವತ್ತು 3500ಕ್ಕಿಂತಲೂ ಅಧಿಕ ವಧಾಗ್ರಹಗಳಿವೆ. ಅವನ್ನು ಸ್ಥಾಪಿಸಿದ್ದು, ಅದಕ್ಕೆ ಪರವಾನಿಗೆ ಕೊಟ್ಟದ್ದೆಲ್ಲ ಮುಸ್ಲಿಮರು ಅಲ್ಲವಲ್ಲ. ಇವತ್ತು ಮಾಂಸ ರಫ್ತಿನಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ. ಹಾಗೆಯೇ, 1998ರಿಂದಲೇ ಹಾಲುತ್ಪಾದನೆಯಲ್ಲೂ ಭಾರತ ಪ್ರಥಮ ಸ್ಥಾನದಲ್ಲಿದೆ. ಜೊತೆಗೇ, 2016-17ರ ಅವಧಿಯಲ್ಲಿ 150 ಮಿಲಿಯನ್ ಟನ್‍ಗಳಷ್ಟು ಹಾಲುತ್ಪಾದನೆಯ ಗುರಿಯನ್ನು ಕೇಂದ್ರ ಸರಕಾರ ಇಟ್ಟುಕೊಂಡಿದ್ದು ಮೇವಿಗಾಗಿ 2,242 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಜೊತೆಗೇ ಮಿಲಿಯಾಂತರ ಜಾನುವಾರುಗಳ ಸೃಷ್ಟಿಗೂ ಯೋಜನೆಯನ್ನು ರೂಪಿಸಿದೆ. (ದಿ ಹಿಂದೂ- ಅನುಷಾ ನಾರಾಯಣ್- 2013, ಮೇ 5) ಹೀಗಿರುತ್ತಾ, ಗೋವನ್ನು ಮುಸ್ಲಿಮ್ ಇಶ್ಶೂವಾಗಿ ಬಿಂಬಿಸುವುದಕ್ಕೆ ಏನೆನ್ನಬೇಕು?
   ಗೋವು ಗೌರವಾರ್ಹವಾಗಿ ಮತ್ತು ಆಹಾರವಾಗಿ ಈ ದೇಶದಲ್ಲಿ ಅನಾದಿ ಕಾಲದಿಂದಲೂ ಬಳಕೆಯಲ್ಲಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಆದ್ದರಿಂದ ಗೋ ಹತ್ಯೆಯನ್ನು ಮುಸ್ಲಿಮೀಕರಣ ಮಾಡಬೇಕಾದ ಅಗತ್ಯವಿಲ್ಲ. 1998ರಲ್ಲಿ ಕೇಂದ್ರದಲ್ಲಿ ಎನ್.ಡಿ.ಎ. ಸರಕಾರ ಅಧಿಕಾರದಲ್ಲಿದ್ದಾಗಲೇ ಮಾಂಸ ರಫ್ತಿನಲ್ಲಿ ಭಾರತ ವಿಶ್ವದಲ್ಲೇ ಮೊದಲ ಸ್ಥಾನವನ್ನು ಗಳಿಸಿಕೊಂಡದ್ದು. ಮಾಂಸ ರಫ್ತಿನಿಂದ ಈ ದೇಶ ದೊಡ್ಡ ಪ್ರಮಾಣದಲ್ಲೇ ಆದಾಯವನ್ನು ಗಳಿಸುತ್ತಿದೆ. ಈ ಸತ್ಯವನ್ನು ಅಡಗಿಸಿಟ್ಟು ಮುಸ್ಲಿಮ್ vs ಹಿಂದೂ ಎಂಬಂತೆ ಗೋವನ್ನು ವಿಭಜಿಸುವುದು ತಪ್ಪು. ಗೋ ಕಳ್ಳತನ ಅಥವಾ ಅಕ್ರಮ ಸಾಗಾಟವನ್ನು ಯಾರೇ ಮಾಡಿದರೂ ಅದು ಕಾನೂನುಬಾಹಿರವೇ. ಅದನ್ನು ಖಂಡಿಸೋಣ. ಆದರೆ ಗೋವನ್ನು ಹಿಂದೂ-ಮುಸ್ಲಿಮ್ ಆಗಿ ವರ್ಗೀಕರಿಸುವುದು ಬೇಡ.

Tuesday, 23 July 2013

ಬಾಂಬ್ ಹುಡುಕುವ ನಾವು ಮತ್ತು ಪ್ರತಿಭಟಿಸುವ ಅವರು

   ಕಾಶ್ಮೀರವನ್ನು ಭಾರತದ ಭಾಗವೆಂದು ಸಾಧಿಸಿ ತೋರಿಸುವುದಕ್ಕಾಗಿ ಐತಿಹಾಸಿಕ ದಾಖಲೆ, ಅಂಕಿ-ಅಂಶಗಳನ್ನು ಈ ದೇಶದಲ್ಲಿ ಧಾರಾಳ ಪ್ರಮಾಣದಲ್ಲಿ ಮಂಡಿಸಲಾಗಿದೆ. ಕಾಶ್ಮೀರಿಗಳ ಕುರಿತಂತೆ, ಅವರ ನೋವು, ಸಂಕಟಗಳ ಕುರಿತಂತೆ ಚರ್ಚಿಸಿದುದಕ್ಕಿಂತ ಹೆಚ್ಚು, ಕಾಶ್ಮೀರ ಎಂಬ ಕಲ್ಲು-ಮಣ್ಣಿನ ಭೂಮಿಯ ಬಗ್ಗೆ ಅತೀವ ಕಾಳಜಿಯಿಂದ ಮಾತಾಡಿದವರೂ ಇಲ್ಲಿದ್ದಾರೆ. ಅವರಿಗೆ ಕಾಶ್ಮೀರ ಬೇಕೇ ಹೊರತು ಕಾಶ್ಮೀರಿಗಳಲ್ಲ. ಕಾಶ್ಮೀರಿಗಳೆಲ್ಲ ಒಂದೋ ಉಗ್ರವಾದಿಗಳು ಇಲ್ಲವೇ ಅವರ ಬೆಂಬಲಿಗರು ಎಂಬ ಧಾಟಿಯಲ್ಲೇ ಅವರು ಮಾತಾಡುತ್ತಾರೆ. ಕಾಶ್ಮೀರಿಗಳು ಪ್ರತಿಭಟಿಸಿದರೆ ಈ ಮಂದಿ ಪ್ರತಿಭಟನಾಕಾರರನ್ನೇ ಟೀಕಿಸುತ್ತಾರೆ. ಸದ್ಯ ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಪ್ರತಿಭಟನೆಯ ಬಗ್ಗೆಯೂ ದೇಶದ ಒಂದು ವರ್ಗ ಇಂಥ ನಕಾರಾತ್ಮಕ ಧಾಟಿಯಲ್ಲೇ ಮಾತಾಡುತ್ತಿದೆ.
   ದಿ ಹಿಂದೂ ಪತ್ರಿಕೆಯಲ್ಲಿ ಜೂನ್ 30ರಂದು ‘ನೈಟ್ ಆಫ್ ಹಾರರ್’ ಎಂಬೊಂದು ಲೇಖನವನ್ನು ಹರ್ಷಮಂದರ್ ಬರೆದಿದ್ದರು. ಕಾಶ್ಮೀರಿಗಳನ್ನು ಭಯೋತ್ಪಾದಕರಂತೆ ಮತ್ತು ಅಲ್ಲಿಯ ಭದ್ರತಾ ಪಡೆಗಳನ್ನು ನೂರು ಶೇಕಡಾ ಸಭ್ಯರಂತೆ ಬಿಂಬಿಸುವವರೆಲ್ಲ ಒಮ್ಮೆ ಆ ಲೇಖನವನ್ನು ಓದಬೇಕು. 1991 ಫೆಬ್ರವರಿ 23ರ ರಾತ್ರಿ ಕುಪ್ವಾರ ಜಿಲ್ಲೆಯ ಕುನನ್ ಪೋಶ್‍ಪೋರಾ ಗ್ರಾಮಕ್ಕೆ ಸೇನೆ ನುಗ್ಗುತ್ತದೆ. ಭಯೋತ್ಪಾದಕರು ಅಡಗಿಕೊಂಡಿದ್ದಾರೆಂಬ ನೆಪವೊಡ್ಡಿ ಮನೆ ಮನೆ ತಪಾಸಿಸುತ್ತದೆ. ಮಕ್ಕಳ ಎದುರೇ ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತದೆ. ಪುರುಷರನ್ನು ಭೀಕರ ಹಿಂಸೆಗೆ ಗುರಿಪಡಿಸುತ್ತದೆ. ಎಲ್ಲಿಯವರೆಗೆಂದರೆ ಆ ಗ್ರಾಮದ ಮಹಿಳೆಯರು ಎರಡ್ಮೂರು ದಿನಗಳ ವರೆಗೆ ದೂರು ಕೊಡುವುದಕ್ಕೂ ಹಿಂಜರಿಯುತ್ತಾರೆ. ಕೊನೆಗೆ ರಾಜ್ಯ ಮಾನವ ಹಕ್ಕು ಆಯೋಗವು ಸಂತ್ರಸ್ತರ ದೂರನ್ನು ಆಲಿಸಲು ಮುಂದಾಗುತ್ತದಲ್ಲದೇ 2011 ಅಕ್ಟೋಬರ್ 16ರಂದು ವರದಿಯನ್ನು ಮಂಡಿಸುತ್ತದೆ. ಯೋಧರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಅದು ದಾಖಲೆ ಸಮೇತ ಸಾಬೀತುಪಡಿಸುತ್ತದೆ. ಆದ್ದರಿಂದ ಸಂತ್ರಸ್ತ ಮಹಿಳೆಯರಿಗೆ 3 ಲಕ್ಷ ಪರಿಹಾರ ನೀಡಬೇಕು ಮತ್ತು ಯೋಧರ ವಿರುದ್ಧ ಹೂಡಲಾಗಿರುವ ಕ್ರಿಮಿನಲ್ ಮೊಕದ್ದಮೆಯ ತನಿಖೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸುತ್ತದೆ. ಹಿರಿಯ ಪತ್ರಕರ್ತೆ ಸೀಮಾ ಮುಸ್ತಫಾ, ಜಾನ್ ದಯಾಳ್, ಸೆಹ್ಬಾ ಫಾರೂಖಿ, ಇ.ಎನ್. ರಾಮ್ ಮೋಹನ್, ಬಾಲಚಂದ್ರ, ಮುಹಮ್ಮದ್ ಸಲೀಮ್.. ಮತ್ತಿತರ ಮಾನವ ಹಕ್ಕು ಕಾರ್ಯಕರ್ತರು 2013 ಜೂನ್‍ನಲ್ಲಿ ಈ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಮಾತುಗಳನ್ನು ಆಲಿಸಿದ್ದರು. ಘಟನೆ ನಡೆದು 22 ವರ್ಷಗಳಾಗಿದ್ದರೂ ಸಂತ್ರಸ್ತ ಮಹಿಳೆಯರು ಅಂದಿನ ಭೀತಿಯಿಂದ ಹೊರಬಂದಿಲ್ಲ ಎಂದೂ ಹೇಳಿದ್ದರು. ನಿಜವಾಗಿ, ಕಾಶ್ಮೀರದಲ್ಲಿ ಈಗ ಉದ್ಭವಿಸಿರುವ ಆತಂಕಕಾರಿ ಪರಿಸ್ಥಿತಿಯನ್ನು ಇಂಥ ಹಿನ್ನೆಲೆಗಳ ಜೊತೆಗಿಟ್ಟು ನೋಡಬೇಕಾದ ಅಗತ್ಯ ಇದೆ. 2009ರಲ್ಲಿ ಬೆಂಗಳೂರಿನಲ್ಲಿ ಸಿ.ಕೆ. ನಾಯ್ಡು ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿತ್ತು. ಕಾಶ್ಮೀರ ತಂಡವನ್ನು ಪ್ರತಿನಿಧಿಸಿದ್ದ ಪರ್ವೇಝ್ ರಸೂಲ್ ಎಂಬ ಯುವ ಕ್ರಿಕೆಟಿಗನನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡರು. ಆತ ತನ್ನ ಬ್ಯಾಗ್‍ನಲ್ಲಿ ಬ್ಯಾಟು, ಪ್ಯಾಡು, ಬಾಲ್‍ಗಳ ಬದಲು ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದಾನೆ ಎಂಬುದಾಗಿ ಪೊಲೀಸರು ಅನುಮಾನಿಸಿದ್ದರು. ಆ ಯುವಕ ಇವತ್ತು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ಅಷ್ಟಕ್ಕೂ, ಓರ್ವ ಕ್ರಿಕೆಟಿಗನ ಮೇಲೆಯೇ ಪೊಲೀಸರ ನಡವಳಿಕೆ ಈ ಮಟ್ಟದಲ್ಲಿದೆಯೆಂದ ಮೇಲೆ ಸಾಮಾನ್ಯ ಯುವಕರನ್ನು ಭದ್ರತಾ ಪಡೆಗಳು ಹೇಗೆ ನಡೆಸಿಕೊಂಡಾವು? ಕಾಶ್ಮೀರಿಗಳ ಪ್ರತಿಭಟನೆ, ಕಲ್ಲೆಸೆತಗಳನ್ನು ಟೀಕಿಸುವವರೆಲ್ಲ ಅದರ ಇನ್ನೊಂದು ಮುಖವನ್ನು ಎಷ್ಟರ ಮಟ್ಟಿಗೆ ಅರ್ಥೈಸಲು ಪ್ರಯತ್ನಿಸಿದ್ದಾರೆ? ಕಾಶ್ಮೀರವು ಭಾರತದ ಭಾಗವಾಗುವುದಕ್ಕಿಂತ ಮೊದಲು ಕಾಶ್ಮೀರಿಗಳನ್ನು ಭಾರತದ ಭಾಗವಾಗುವಂತೆ ಮಾಡುವುದಕ್ಕೆ ಸರ್ಕಾರಗಳು, ಭದ್ರತಾ ಪಡೆಗಳು ಯಾವ ಮಟ್ಟದಲ್ಲಿ ಶ್ರಮಿಸಿವೆ? ಕಾಶ್ಮೀರ ಅಂದರೆ ಬರೇ ಪ್ರವಾಸಿಗರನ್ನು ಸೆಳೆಯುವ, ಆಪಲ್ ಬೆಳೆಯುವ ಭೂಮಿಯಷ್ಟೇ ಅಲ್ಲವಲ್ಲ. ಕಾಶ್ಮೀರ ಭಾರತದ ಭಾಗವಾಗುವುದೆಂದರೆ ಕಾಶ್ಮೀರಿಗಳೂ ಭಾರತದ ಭಾಗವಾಗುವುದೆಂದರ್ಥ. ಆದರೆ ಇಂಥದ್ದೊಂದು ಇನ್‍ಕ್ಲೂಸಿವ್ ಧೋರಣೆಯನ್ನು ತಳೆಯಲು ನಮಗೆ ಎಷ್ಟರ ಮಟ್ಟಿಗೆ ಸಾಧ್ಯವಾಗಿದೆ? ಕಾಶ್ಮೀರದ ಪ್ರತ್ಯೇಕತಾ ಹೋರಾಟದ ಬಗ್ಗೆ, ಪಂಡಿತರ ವಲಸೆಯ ಕುರಿತು ಸರಿ-ತಪ್ಪುಗಳ ಚರ್ಚೆ ನಡೆಸುವುದು ಸುಲಭ. ಕಾಶ್ಮೀರಿಗಳ ಮೇಲಿನ ದೌರ್ಜನ್ಯವನ್ನು ಎತ್ತಿ ಹೇಳಿದಾಗಲೆಲ್ಲ, ಪಂಡಿತರ ಸ್ಥಿತಿಯನ್ನು ಉಲ್ಲೇಖಿಸಿ ಎದುರುತ್ತರ ಕೊಡುವುದು ಈ ದೇಶದಲ್ಲಿ ಸಾಮಾನ್ಯವಾಗಿಬಿಟ್ಟಿದೆ. ನಿಜವಾಗಿ, ಇಂಥ ಜಿದ್ದಾಜಿದ್ದಿಗಳೇ ಕಾಶ್ಮೀರವನ್ನು ಇವತ್ತು ಈ ಹಂತಕ್ಕೆ ತಲುಪಿಸಿರುವುದು. ಪ್ರತ್ಯೇಕತಾ ಹೋರಾಟ, ಅದಕ್ಕೆ ಬೆಂಬಲವಾಗಿ ನಿಂತ ವಿದೇಶಿ ಶಕ್ತಿಗಳು, ಅದರಿಂದಾಗಿ ಕಣಿವೆಯಲ್ಲಾದ ರಕ್ತಪಾತಗಳು ಮತ್ತು ಜಗ್ಮೋಹನ್ ಎಂಬ ರಾಜ್ಯಪಾಲರ ಪಕ್ಷಪಾತಿ ನಿಲುವುಗಳು.. ಎಲ್ಲವೂ ಚರಿತ್ರೆಗೆ ಸೇರಿ ಹೋಗಿವೆ. ಇವತ್ತು ಕಾಶ್ಮೀರವನ್ನು ಪ್ರತಿ ನಿಧಿಸುತ್ತಿರುವುದು ಒಂದಾನೊಂದು ಕಾಲದ ಮಂದಿಯಲ್ಲ. ಯುವ ಸಮೂಹ. ಅವರನ್ನು ವಿಶ್ವಾಸದಿಂದ ನಡೆಸಿಕೊಳ್ಳುವ ಬದಲು ಪ್ರತ್ಯೇಕತಾವಾದಿಗಳಂತೆ ನಡೆಸಿಕೊಂಡರೆ ಕಣಿವೆ ಶಾಂತವಾಗುವುದಾದರೂ ಹೇಗೆ? ಕಾಶ್ಮೀರದಲ್ಲಿ ಮಾನವ ಹಕ್ಕುಗಳಿಗೆ ಭಾರೀ ತೂಕವೇನೂ ಇಲ್ಲ. ಹಕ್ಕುಗಳ ಬಗ್ಗೆ ತೀವ್ರ ನಿರಾಶೆಗೊಂಡ ಒಂದು ದೊಡ್ಡ ಸಮೂಹವೇ ಅಲ್ಲಿ ನಿರ್ಮಾಣವಾಗಿದೆ. ಕಾಶ್ಮೀರವು ಇವತ್ತು ಮಾಧ್ಯಮಗಳಲ್ಲಿ ಸುದ್ದಿಯಾಗಬೇಕಾದರೆ ನಾಲ್ಕೈದು ಮಂದಿಯ ಸಾವಾದರೂ ಸಂಭವಿಸಬೇಕು ಎಂಬಂಥ ವಾತಾವರಣವಿದೆ. ಇಂಥ ಸ್ಥಿತಿಯಲ್ಲಿ ಕಾಶ್ಮೀರವನ್ನು ಭಾರತದ ಭಾಗ ಎಂದು ಡಂಗುರ ಸಾರುವುದರಿಂದ ಏನು ಲಾಭವಿದೆ? ಕಾಶ್ಮೀರಿಗಳನ್ನು ವಿಶ್ವಾಸದಿಂದ ನಡೆಸಿಕೊಳ್ಳದ ಹೊರತು ಅವರನ್ನು ಭಾಗವಾಗಿಸುವುದಾದರೂ ಹೇಗೆ?
   ಕಾಶ್ಮೀರದ ಯುವ ಸಮೂಹದ ಆಗ್ರಹಗಳಿಗೆ ಕಿವಿಯಾಗುವ ಮತ್ತು ಅವರಲ್ಲಿ ಭರವಸೆ ತುಂಬುವ ಕೆಲಸ ತೀವ್ರಗತಿಯಲ್ಲಿ ನಡೆಯಬೇಕಿದೆ. ಕಾಶ್ಮೀರಿಗಳೆಂದರೆ ಭಯೋತ್ಪಾದಕರಲ್ಲ, ನಮ್ಮ ಸಹೋದರರು ಎಂಬ ಭಾವನೆ ಎಲ್ಲರಲ್ಲೂ ಮೂಡಬೇಕಿದೆ. ಕ್ರಿಕೆಟ್ ಆಟಗಾರನ ಬ್ಯಾಗ್‍ನಲ್ಲಿ ಬಾಂಬು ಹುಡುಕುವ, ಪ್ರತಿ ಮನೆಯಲ್ಲೂ ಭಯೋತ್ಪಾದಕನನ್ನು ಕಾಣುವ, ಕಾಶ್ಮೀರ ಎಂಬ ಭೂಮಿಯನ್ನು ಮಾತ್ರ ಪ್ರೀತಿಸುವ ನಮ್ಮ ಸಣ್ಣ ಮನಸನ್ನೂ ತುಸು ವಿಶಾಲಗೊಳಿಸಬೇಕಿದೆ.

Monday, 15 July 2013

ಮನುಷ್ಯರಾಗಿರುವುದಷ್ಟೇ ಅರ್ಹತೆಯಲ್ಲ..

   ಓರ್ವ ಪ್ರಧಾನಿ ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು ಏನೆಲ್ಲ ಎಂಬ ಚರ್ಚೆಯು ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಜೆಪಿಯ ಒಂದು ವರ್ಗ ಬಿಂಬಿಸಿದಂದಿನಿಂದಲೇ ಆರಂಭವಾಗಿದೆ. ಮಾತ್ರವಲ್ಲ, ಆ ಚರ್ಚೆಯಲ್ಲಿ ಮೋದಿ ಮತ್ತೆ ಮತ್ತೆ ತನ್ನ ಅನರ್ಹತೆಯನ್ನು ಸಾರುತ್ತಲೂ ಇದ್ದಾರೆ. ಅವರೊಳಗೆ ಒಂದು ಬಗೆಯ ಗೊಂದಲ ಇದೆ. ತನ್ನ ಅಭಿಮಾನಿ ವಲಯವನ್ನೂ ಮೀರಿ ಗುರುತಿಸಿಕೊಳ್ಳುವ ಹಂಬಲ ಕೆಲವೊಮ್ಮೆ ಅವರ ಮಾತಿನಲ್ಲಿ ಕಾಣಿಸಿಕೊಂಡರೆ ಇನ್ನೂ ಕೆಲವೊಮ್ಮೆ, ಎಲ್ಲಿ ತನ್ನ ಅಭಿಮಾನಿ ವಲಯ ಮುನಿಸಿಕೊಳ್ಳುವುದೋ ಎಂಬ ಭೀತಿ ಕಾಣಿಸುತ್ತದೆ. ಸದ್ಭಾವನಾ ಯಾತ್ರೆ, 2002ರ ಗುಜರಾತ್ ನರಮೇಧಕ್ಕೆ ವಿಷಾದ, ನಾಯಿಮರಿ, ಹಿಂದೂ ರಾಷ್ಟ್ರವಾದಿ.. ಇವೆಲ್ಲ ಅವರೊಳಗಿನ ಗೊಂದಲಕ್ಕೆ ಪುರಾವೆಗಳು. 120 ಕೋಟಿ ಭಾರತೀಯರಿಗೆ ನಾಯಕತ್ವ ನೀಡಬೇಕಾದ ವ್ಯಕ್ತಿಯೊಬ್ಬರಿಗೆ ಇರಬೇಕಾದ ಮೊಟ್ಟಮೊದಲ ಅರ್ಹತೆ ಏನೆಂದರೆ, ಈ ದೇಶ ಮತ್ತು ಇಲ್ಲಿರುವ ಜನರ ಕುರಿತಂತೆ ಗೊಂದಲರಹಿತ ನಿಲುವು. ಈ ದೇಶದಲ್ಲಿರುವುದು ಮೋದಿಯ ಅಭಿಮಾನಿಗಳು ಮಾತ್ರ ಅಲ್ಲ. ಅವರನ್ನು ಅನುಮಾನಿಸುವ, ಭೀತಿಯಿಂದ ನೋಡುವ, ಖಂಡಿಸುವ ಮಂದಿ ಕೂಡ ಧಾರಾಳ ಇದ್ದಾರೆ. ಅವರೆಲ್ಲರನ್ನೂ ಸಮಚಿತ್ತದಿಂದ ನಿಭಾಯಿಸುವ ಹೊಣೆಗಾರಿಕೆ ನಾಯಕನ ಮೇಲಿರುತ್ತದೆ. ಮೋದಿಗೆ ಇದು ಸಾಧ್ಯವಾಗಿದೆಯೇ? ಈ ದೇಶದ 20 ಕೋಟಿಯಷ್ಟಿರುವ ದೊಡ್ಡದೊಂದು ಜನಸಮೂಹವನ್ನು ಕಾರಿನ ಚಕ್ರದಡಿಗೆ ಸಿಲುಕುವ ಬಡಪಾಯಿ ನಾಯಿಮರಿಗೆ ಅವರು ಹೋಲಿಸುತ್ತಾರೆ. ಗುಜರಾತ್ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಅವರಾಡಿದ ಈ ಮಾತಿನಿಂದ ರವಾನೆಯಾಗುವ ಸೂಚನೆಯಾದರೂ ಏನು? ನಾಯಿ ಮರಿಯನ್ನು ಯಾವ ಚಾಲಕ ಕೂಡ ಉದ್ದೇಶಪೂರ್ವಕವಾಗಿ ಚಕ್ರದಡಿ ಸಿಲುಕಿಸುವುದಿಲ್ಲ. ಅನೇಕ ಬಾರಿ ಪ್ರಾಣಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಚಾಲಕನೇ ಅಪಾಯಕ್ಕೆ ಸಿಲುಕುವುದಿದೆ. ಆದರೆ ಗುಜರಾತ್ ಹತ್ಯಾಕಾಂಡದಲ್ಲಿ ಮೋದಿ ನಿರ್ವಹಿಸಿದ ಪಾತ್ರ ಈ ರೀತಿಯದ್ದೇ? ಉದ್ದೇಶಪೂರ್ವಕ ಪಾತ್ರ ಇದ್ದಿರಲಿಲ್ಲವೇ? ಅಂಥದ್ದೊಂದು ಹತ್ಯಾಕಾಂಡದ ಉದ್ದೇಶದಿಂದಲೇ ಅವರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಮೊದಲೇ ಆಯಕಟ್ಟಿನ ಜಾಗಕ್ಕೆ ನೇಮಿಸಿರುವುದು ಸುಳ್ಳೇ? ಗುಜರಾತ್‍ನ ಹತ್ತಾರು ಪೊಲೀಸ್ ಅಧಿಕಾರಿಗಳು ಹತ್ಯಾಕಾಂಡದ ಆರೋಪ ಹೊತ್ತು ತಿರುಗುತ್ತಿರುವುದು ಏನನ್ನು ಸೂಚಿಸುತ್ತದೆ? ಇವೆಲ್ಲ ಮೋದಿಯ ಗಮನಕ್ಕೆ ಬಂದೇ ಇಲ್ಲ ಅನ್ನುವುದಾದರೆ ಅಂಥ ನಾಯಕನೊಬ್ಬ ಈ ದೇಶವನ್ನು ಮುನ್ನಡೆಸುವುದಾದರೂ ಹೇಗೆ? ಕೇವಲ 6 ಕೋಟಿ ಜನಸಂಖ್ಯೆ ಇರುವ ರಾಜ್ಯವೊಂದರ ಆಡಳಿತ ವ್ಯವಸ್ಥೆ, ಅಧಿಕಾರಿ ವರ್ಗಗಳ ಮೇಲೆ ನಿಯಂತ್ರಣ ಇಡಲಾಗದ ವ್ಯಕ್ತಿ 120 ಕೋಟಿ ಜನಸಂಖ್ಯೆ ಇರುವ ರಾಷ್ಟ್ರವೊಂದರ ಮೇಲೆ ಹೇಗೆ ತಾನೇ ನಿಯಂತ್ರಣ ಇಟ್ಟುಕೊಳ್ಳಬಲ್ಲ? ಗುಜರಾತ್ ಹತ್ಯಾಕಾಂಡದಲ್ಲಿ ತಾನು ನಿಷ್ಕಳಂಕ ಅಂತ ಮೋದಿ ಹೇಳುತ್ತಲೇ ಬಂದಿದ್ದಾರೆ. ಆದ್ದರಿಂದಲೇ ತಾನು ಕ್ಷಮೆ ಯಾಚಿಸಲ್ಲ ಎಂದೂ ಹೇಳುತ್ತಿದ್ದಾರೆ. ಹಾಗಾದರೆ, 1984ರ ಸಿಕ್ಖ್ ಹತ್ಯಾಕಾಂಡದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೆ? ಸೋನಿಯಾ ಕಾಂಗ್ರೆಸ್‍ನ ನಾಯಕಿಯಾಗಿದ್ದರೆ? ಆದರೂ ಅವರು ಕ್ಷಮೆ ಯಾಚಿಸಿಲ್ಲವೇ? ಎಲ್ಲೋ ಒಂದು ಕಡೆ ರೈಲು ಅಪಘಾತಕ್ಕೀಡಾದಾಗ, ಲಾಲ್ ಬಹದ್ದೂರ್ ಶಾಸ್ತ್ರಿಯವರು ರೈಲ್ವೆ ಖಾತೆಗೆ ರಾಜೀನಾಮೆ ನೀಡಿದರಲ್ಲ, ಯಾಕೆ? ಅವರೇನು ಅಪಘಾತಕ್ಕೀಡಾದ ರೈಲಿನ ಚಾಲಕರಾಗಿದ್ದರೆ? ಕಲ್ಲಿದ್ದಲು ಹಗರಣ, ಟೆಲಿಕಾಂ, ಕಾಮನ್ವೆಲ್ತ್ ಹಗರಣದ ಹೊಣೆ ಹೊತ್ತುಕೊಂಡು ಪ್ರಧಾನಿ ಮನಮೋಹನ್ ಸಿಂಗ್‍ರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ಹಲವು ಬಾರಿ ಆಗ್ರಹಿಸಿದೆ. ಉತ್ತರಾಖಂಡದ ಪ್ರವಾಹ ನಿರ್ವಹಣೆಯಲ್ಲಿ ಅಲ್ಲಿನ ಕಾಂಗ್ರೆಸ್ ಮುಖ್ಯಮಂತ್ರಿ ಬಹುಗುಣ ವಿಫಲರಾಗಿದ್ದಾರೆಂದು ಆರೋಪಿಸಿ ಇದೇ ಬಿಜೆಪಿ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಇಲ್ಲೆಲ್ಲಾ ಪರಿಗಣನೆಗೆ ಬರುವ ನಿಯಮ ಮೋದಿ ವಿಷಯದಲ್ಲಿ ಮಾತ್ರ ಅಳವಡಿಕೆ ಆಗುತ್ತಿಲ್ಲವೇಕೆ?
   ನಿಜವಾಗಿ, ಮೋದಿ ಈಗಾಗಲೇ ಒಂದು ನಿರ್ದಿಷ್ಟ ಇಮೇಜನ್ನು ಬೆಳೆಸಿಕೊಂಡಿದ್ದಾರೆ. ಒಂದು ವೇಳೆ ಗುಜರಾತ್ ಹತ್ಯಾಕಾಂಡಕ್ಕಾಗಿ ಕ್ಷಮೆ ಯಾಚಿಸಿದರೆ, ಆ ಇಮೇಜ್‍ಗೆ ಧಕ್ಕೆ ಬರಬಹುದೆಂಬ ಭೀತಿ ಅವರಲ್ಲಿ ಮತ್ತು ಅವರನ್ನು ಉಬ್ಬಿಸುತ್ತಿರುವವರಲ್ಲಿ ಇದೆ. ಬಾಬರಿ ಮಸೀದಿಯ ಧ್ವಂಸಕ್ಕೆ ವಿಷಾದಿಸಿದ ಮತ್ತು ಜಿನ್ನಾರನ್ನು ಹೊಗಳಿದ ಅಡ್ವಾಣಿಯಂತೆ ತಾನೂ ಕಳೆದುಹೋಗುವೆನೆಂಬ ಭಯ ಅವರನ್ನು ಕಾಡುತ್ತಿದೆ. ಆದ್ದರಿಂದಲೇ ಕ್ಷಮೆ ಯಾಚನೆಯ ವಿಚಾರ ಪ್ರಸ್ತಾಪವಾದಾಗಲೆಲ್ಲ ಅವರು ನಾಯಿ ಮರಿಯಂಥ ಕತೆಯನ್ನು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಸರ್ವರನ್ನೂ ಮೆಚ್ಚಿಸಿಕೊಳ್ಳುವುದಕ್ಕಾಗಿ ಸದ್ಭಾವನಾ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಮತ್ತೊಮ್ಮೆ ತಾನು ಹಿಂದೂ ರಾಷ್ಟ್ರವಾದಿ ಅನ್ನುತ್ತಾರೆ. ಒಂದು ರೀತಿಯಲ್ಲಿ ಅವರನ್ನು ಅಸ್ತಿತ್ವ ಭಯ ಕಾಡುತ್ತಿದೆ. ಅಷ್ಟಕ್ಕೂ, ಮುಸ್ಲಿಮ್ ರಾಷ್ಟ್ರವಾದಿ, ಕ್ರೈಸ್ತ ರಾಷ್ಟ್ರವಾದಿ, ಸಿಕ್ಖ್ ರಾಷ್ಟ್ರವಾದಿ.. ಎಂದೆಲ್ಲಾ ರಾಷ್ಟ್ರವಾದದಲ್ಲಿ ವಿಭಜನೆಯಿದೆಯೇ? ನಾಳೆ, ರಾಜ್ಯದ ಆರೋಗ್ಯ ಮಂತ್ರಿ ಯು.ಟಿ. ಕಾದರ್ ಅವರು,  ತಾನು ಮುಸ್ಲಿಮ್ ರಾಷ್ಟ್ರವಾದಿ ಅಂದರೆ ಬಿಜೆಪಿ ಏನಂದೀತು? ಗೃಹ ಸಚಿವ ಜಾರ್ಜ್‍ ರು,  ತಾನು ಕ್ರೈಸ್ತ ರಾಷ್ಟ್ರವಾದಿ ಅಂದರೆ ಇದೇ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾರದೇ? ಹಿಂದೂ ರಾಷ್ಟ್ರವಾದವನ್ನು ಮುಂದಿಡುವ ಮೋದಿಯಂತೆಯೇ ದಲಿತ್ ರಾಷ್ಟ್ರದ, ಸಿಕ್ಖ್ ರಾಷ್ಟ್ರದ ವಾದವನ್ನು ಮುಂದಿಡುವವರು ತಯಾರಾಗಬಹುದಲ್ಲವೇ? ಮೋದಿಗೆ ಇರುವಷ್ಟೇ ಹಕ್ಕು, ಅರ್ಹತೆ, ಸ್ವಾತಂತ್ರ್ಯ ಈ ದೇಶದ ಇತರೆಲ್ಲ ಪ್ರಜೆಗಳಿಗೂ ಇದೆಯಲ್ಲವೇ? ಅವರಂತೆಯೇ ಇತರರೂ ಮಾತಾಡಲು, ಹಕ್ಕು ಪ್ರತಿಪಾದಿಸಲು ಪ್ರಾರಂಭಿಸಿದರೆ ಈ ದೇಶ ಎತ್ತ ಸಾಗೀತು?
   ಮೋದಿಯ ಮಾತು, ಆವೇಶ, ಹಾವಭಾವ, ಆಂಗಿಕ ಸನ್ನೆಗಳೆಲ್ಲ ಅವರೊಳಗೆ ಓರ್ವ ಅಪಾಯಕಾರಿ ಖಳನಾಯಕ ಇರುವುದನ್ನು ಚೆನ್ನಾಗಿ ಬಿಂಬಿಸುತ್ತದೆ. ಆ ಖಳನಾಯಕನೇ 2002ರ ಹತ್ಯಾ ಕಾಂಡದ ಸಂದರ್ಭದಲ್ಲಿ ಗುಜರಾತ್‍ಗೆ ನೇತೃತ್ವ ನೀಡಿದ್ದು. ಅಂಥ ವ್ಯಕ್ತಿಯೊಬ್ಬ ಈ ದೇಶಕ್ಕೆ ನೇತೃತ್ವ ಕೊಡಲು ಯಾವ ರೀತಿಯಿಂದಲೂ ಸೂಕ್ತರಲ್ಲ. 120 ಕೋಟಿ ಭಾರತೀಯರನ್ನು ಸಮಾನವಾಗಿ ಕಾಣುವ ಮತ್ತು ನಾಯಿ ಮರಿಗಳಂತೆ ಕಾಣದಿರುವ ಆರೋಗ್ಯಪೂರ್ಣ ಮನಸ್ಸು ಆ ನಾಯಕನಿಗಿರಬೇಕು. ಬರೇ ಮನುಷ್ಯರಾಗಿರುವುದಷ್ಟೇ ಪ್ರಧಾನಿ ಹುದ್ದೆಗಿರುವ ಅರ್ಹತೆಯಲ್ಲ. ಎಲ್ಲ ಅಂಗಗಳೂ ಸ್ವಸ್ಥ ಮತ್ತು ನಿರ್ಮಲವಾಗಿರಬೇಕಾದುದೂ  ಅಗತ್ಯ. ಆದರೆ ಮೋದಿ ಬರೇ ಮನುಷ್ಯರಷ್ಟೇ ಆಗಿದ್ದಾರೆ. ಉಳಿದ ಯಾವ ಅರ್ಹತೆಗಳೂ ಅವರಲ್ಲಿ ಕಾಣಿಸುತ್ತಿಲ್ಲ.

Monday, 8 July 2013

ಬುದ್ಧಗಯಾದ ಬಾಂಬ್!

   ಯಾವುದೇ ಒಂದು ಬಾಂಬ್ ಸ್ಫೋಟವನ್ನು ಖಂಡಿಸುವುದಕ್ಕೆ- ಸ್ಫೋಟ ನಡೆದ ಜಾಗ, ಸಾವಿಗೀಡಾದವರ ಸಂಖ್ಯೆ, ಅವರ ಧರ್ಮಗಳನ್ನು ಪರಿಗಣಿಸುವುದು ಮನುಷ್ಯ ವಿರೋಧಿ ಕ್ರಮ ಎಂದು ಬಲವಾಗಿ ಸಾರುತ್ತಲೇ ನಾವೆಲ್ಲ ಬುದ್ಧಗಯಾದ ಬಾಂಬ್ ಸ್ಫೋಟವನ್ನು ಖಂಡಿಸಬೇಕಾಗಿದೆ. ಬಾಂಬಿಟ್ಟವರು ಯಾವ ಸಂಘಟನೆಗೇ ಸೇರಿರಲಿ ಮತ್ತು ಅವರ ಹೆಸರ ಏನೇ ಆಗಿರಲಿ, ನಾವು ಖಂಡನೆಗೆ ಬಳಸುವ ಭಾಷೆ, ಹೇಳುವ ಧಾಟಿ ಮತ್ತು ಮಾಡುವ ಪ್ರತಿಭಟನೆಗಳಲ್ಲಿ ಯಾವ ರಾಜಿಯನ್ನೂ ಮಾಡದಿರೋಣ. ಈ ಹಿಂದೆ ಮಾಲೆಗಾಂವ್, ಮಕ್ಕಾ ಮಸೀದಿ, ಸಂಜೋತಾ ಎಕ್ಸ್‍ಪ್ರೆಸ್ ಸ್ಫೋಟಗಳ ಸಂದರ್ಭದಲ್ಲಿ ಮಾಧ್ಯಮಗಳು ಅತಿ ಗಂಭೀರ ತಪ್ಪುಗಳನ್ನು ಎಸಗಿದ್ದುವು. ಸ್ಫೋಟಿಸಿದವರು ಪತ್ರಿಕಾ ಕಚೇರಿಗಳಲ್ಲೇ ಅವಿತು ಕೂತಿದ್ದಾರೋ ಎಂದು ಓದುಗರು ಅನುಮಾನಿಸುವಷ್ಟು ಖಚಿತವಾಗಿ ಆರೋಪಿಗಳ ಹೆಸರನ್ನೂ ಸಂಘಟನೆಯನ್ನೂ ಅವು ಹೆಸರಿಸಿದ್ದುವು. ಮಾಧ್ಯಮಗಳು ಮಾಡಿದ ಈ ಪ್ರಮಾದ ಸಮಾಜದ ಮೇಲೆ ಯಾವ ಮಟ್ಟಿನ ಅಡ್ಡ ಪರಿಣಾಮ ಬೀರಿತೆಂದರೆ, ಒಂದು ಸಮುದಾಯವನ್ನೇ ಟೆರರಿಸ್ಟ್ ಗಳಾಗಿ ಕಾಣುವಷ್ಟು. ಅನೇಕಾರು ಯುವಕರು ಹಲವು ವರ್ಷಗಳ ವರೆಗೆ ಅನ್ಯಾಯವಾಗಿ ಜೈಲಲ್ಲಿ ಕೊಳೆಯುವಷ್ಟು. ಆದರೆ ಆ ಬಳಿಕ ಅಸೀಮಾನಂದ, ಸ್ವಾಮಿ ದಯಾನಂದ, ಸಾಧ್ವಿ ಪ್ರಜ್ಞಾ ಸಿಂಗ್, ಕರ್ನಲ್ ಪುರೋಹಿತರೆಲ್ಲ ಮಾಧ್ಯಮಗಳ ಈ ಪ್ರಮಾದವನ್ನು ಬಹಿರಂಗಕ್ಕೆ ತಂದರೂ ನಿರೀಕ್ಷಿತ ಮಟ್ಟದಲ್ಲಿ ಮಾಧ್ಯಮಗಳು ಆತ್ಮಾವಲೋಕನಕ್ಕೆ ಇಳಿದದ್ದು ಕಡಿಮೆ. ಆದ್ದರಿಂದಲೇ ಬುದ್ಧಗಯಾ ಸ್ಫೋಟದ ಕುರಿತಂತೆ ಮಾಧ್ಯಮಗಳು ಮಾಡಿರುವ ಪ್ರಥಮ ವರದಿ ಮತ್ತು ವಿಶ್ಲೇಷಣೆಯ ಬಗ್ಗೆ ವಿಷಾದ ಮೂಡುವುದು.
   ಬಾಂಬ್ ಸ್ಫೋಟಕ್ಕೆ ಈಡಾದ ಮಹಾಬೋಧಿ ಮಂದಿರವಷ್ಟೇ ಬುದ್ಧಗಯಾದಲ್ಲಿ ಇರುವುದಲ್ಲ. ಅದು 12 ಎಕ್ರೆ ಪ್ರದೇಶಗಳ ವಿಶಾಲ ಆವರಣ. ಬೌದ್ಧರ ಇನ್ನೂ ಐದಾರು ಮಂದಿರಗಳು ಈ ಬುದ್ಧಗಯಾ ಆವರಣದಲ್ಲಿವೆ. ಅಕ್ಟೋಬರ್ ಮತ್ತು ಮಾರ್ಚ್ ಗಳ ಮಧ್ಯೆ ಲಕ್ಷಾಂತರ ಮಂದಿ ಈ ಮಂದಿರಗಳಿಗೆ ಭೇಟಿ ಕೊಡುತ್ತಾರೆ. ಬೋಧಿವೃಕ್ಷದ ಬಳಿ ಮಹಾಬೋಧಿ ಮಂದಿರವನ್ನು ರಾಜ ಅಶೋಕ ಕಟ್ಟಿದ್ದರೂ ಬೌದ್ಧ ಧರ್ಮದ ವಿರುದ್ಧ ಶಂಕರಾಚಾರ್ಯರ ನೇತೃತ್ವದಲ್ಲಿ ನಡೆದ ಆಂದೋಲನದಿಂದಾಗಿ ಅದು ಪಾಳು ಬಿದ್ದಿತು. ಬೌದ್ಧರು ಚೆಲ್ಲಾಪಿಲ್ಲಿಯಾದರು. 1861ರಲ್ಲಿ ಬ್ರಿಟಿಷ್ ಪುರಾತತ್ವ ಇಲಾಖೆಯು ಮಹಾಬೋಧಿ ಆವರಣದಲ್ಲಿ ನಡೆಸಿದ ಉತ್ಖನನದ ಬಳಿಕ ಮಂದಿರ ಮತ್ತೆ ಚಲಾವಣೆಗೆ ಬಂತು. ಆದರೆ ಬೌದ್ಧ ನಿರ್ಮೂಲನ ಚಳವಳಿಯಿಂದ ಪ್ರಭಾವಿತರಾದ ಕೆಲವರು ಈ ಬೌದ್ಧ ಮಂದಿರ ಆವರಣದಲ್ಲಿ ಶಿವ ದೇವಾಲಯವನ್ನು ಸ್ಥಾಪಿಸಿದರು. 1949ರಲ್ಲಿ ಬಿಹಾರ ಸರಕಾರವು ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ಜಾರಿಗೆ ತಂದು ಮಂದಿರದ ಆವರಣವನ್ನು ವಶಕ್ಕೆ ತೆಗೆದುಕೊಂಡಾಗ ಹಿಂದೂಗಳು ತಗಾದೆ ತೆಗೆದಿದ್ದರು. ಮಂದಿರ ವ್ಯವಹಾರದಲ್ಲಿ ತಮಗೂ ಹಕ್ಕಿದೆಯೆಂದು ವಾದಿಸಿದ್ದರು. ಆದ್ದರಿಂದ ಸರಕಾರವು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ 5 ಮಂದಿ ಹಿಂದೂಗಳು ಮತ್ತು 4 ಮಂದಿ ಬೌದ್ಧರನ್ನೊಳಗೊಂಡ ಸಮಿತಿಯನ್ನು ರಚಿಸಿ ಬುದ್ಧಗಯಾ ಆವರಣದ ವ್ಯವಹಾರವನ್ನು ಅದರ ಕೈಗೆ ಒಪ್ಪಿಸಿತು. ಆದರೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಮಂದಿರ ಆವರಣದ ನಿರ್ವಹಣೆಯ ಹೊಣೆಯನ್ನು ಬೌದ್ಧರಿಗೆ ನೀಡಬೇಕೆಂದು ಶಿಫಾರಸು ಮಾಡಿತು. ಇದನ್ನು ಹಿಂದೂಗಳು ವಿರೋಧಿಸಿದರು. ಬೌದ್ಧರು ಬೆಂಬಲಿಸಿದರು. ಈ ವಿವಾದ ಇನ್ನೂ ಬಗೆಹರಿದಿಲ್ಲ.
   ನಿಜವಾಗಿ, ಬುದ್ಧಗಯಾದ ಬಾಂಬ್ ಸ್ಫೋಟವನ್ನು ಯಾರು ನಡೆಸಿರಬಹುದು ಎಂದು ಖಚಿತವಾಗಿ ಹೇಳುವುದಕ್ಕಿಂತ ಮೊದಲು ಇಂಥ ಸಾಧ್ಯತೆಗಳ ಸುತ್ತವೂ ಗಮನ ಹರಿಸಬೇಕಿದೆ. ಉಗ್ರರು ಬಾಂಬ್ ಸ್ಫೋಟಿಸಿದ್ದು ಬೆಳಗ್ಗಿನ ಪ್ರಾರ್ಥನೆ ಮುಗಿದು ಸುಮಾರು ನೂರರಷ್ಟಿದ್ದ ಭಕ್ತರು ಬಹುತೇಕ ಚದುರಿದ ಬಳಿಕ. ಹಾಗಾದರೆ ಉಗ್ರರ ಉದ್ದೇಶವೇನು? ಮಾಧ್ಯಮಗಳು ಹೇಳುವಂತೆ, ರೋಹಿಂಗ್ಯನ್ ಮುಸ್ಲಿಮರ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಸ್ಫೋಟ ನಡೆದಿದೆಯೆಂದಾದರೆ ಅಕ್ಟೋಬರ್ ಮತ್ತು ಮಾರ್ಚ್ ತಿಂಗಳುಗಳ  ಮಧ್ಯೆ ಸ್ಫೋಟ ನಡೆಯಬೇಕಿತ್ತು. ಯಾಕೆಂದರೆ ಬೌದ್ಧರು ಸಾವಿರಾರು ಸಂಖ್ಯೆಯಲ್ಲಿ ಸೇರುವುದು ಈ ತಿಂಗಳಲ್ಲೇ. ಹೀಗಿರುವಾಗ ಈ ಬಾಂಬುಗಳಿಗೆ ರೋಹಿಂಗ್ಯನ್ ಬಣ್ಣವನ್ನು ಬಳಿದು, ಹಿಂದೂ-ಬೌದ್ಧಮಯಗೊಳಿಸುವುದಾದರೂ ಏಕೆ? ರೋಹಿಂಗ್ಯನ್ ಹೊರತಾದ ಇತರ ಸಾಧ್ಯತೆಗಳ ಬಗ್ಗೆಯೇಕೆ ಮಾಧ್ಯಮಗಳು ಚರ್ಚಿಸುತ್ತಿಲ್ಲ? ಅಂದಹಾಗೆ, ಮಾಧ್ಯಮಗಳು ಹೇಳುತ್ತಿರುವ ಇಂಡಿಯನ್ ಮುಜಾಹಿದೀನ್ ಅಂತೂ ಮನುಷ್ಯರನ್ನು ಕೊಲ್ಲುವಲ್ಲಿ ಸಾಕಷ್ಟು ಅನುಭವ ಇರುವ ಸಂಘಟನೆಯಾಗಿ ಈ ದೇಶದಲ್ಲಿ ಗುರುತಿಸಿಕೊಂಡಿದೆ. ಅಂಥ ಚತುರ ಸಂಘಟನೆಯೊಂದು ಬುದ್ಧಗಯಾದಲ್ಲಿ ಯಾರಿಗೂ ತೊಂದರೆ ಉಂಟು ಮಾಡಲಾರದ ಬಾಂಬು ಸ್ಫೋಟವೊಂದನ್ನು ನಡೆಸಿದೆಯೆಂದು ನಂಬುವುದಾದರೂ ಹೇಗೆ? ಅದು ಮನುಷ್ಯರ ಬಗ್ಗೆ ಈ ಮಟ್ಟದ ಕರುಣೆಯನ್ನು ಯಾವಾಗಿನಿಂದ ಬೆಳೆಸಿಕೊಂಡಿದೆ?
   ಒಂದು ರೀತಿಯಲ್ಲಿ, ಇಂಡಿಯನ್ ಮುಜಾಹಿದೀನ್ ಎಂಬ- ಹೆಸರು, ವಿಳಾಸ ಗೊತ್ತಿಲ್ಲದ ಸಂಘಟನೆಯ ಮೇಲೆ ಈ ವರೆಗೆ ಇರುವ ಆರೋಪಗಳಿಗೆ ಹೋಲಿಸಿದರೆ ಬುದ್ಧಗಯಾದಲ್ಲಿ ನಡೆದ ಸ್ಪೋಟ ಯಾವ ರೀತಿಯಲ್ಲೂ  ತಾಳೆಯಾಗುತ್ತಿಲ್ಲ. ಸ್ಫೋಟದ ಸಮಯ ಮತ್ತು ಹಾನಿಯನ್ನು ಪರಿಗಣಿಸಿದರೆ ಈ ಬಾಂಬುಗಳಿಗೆ ಮಾಧ್ಯಮಗಳು ಹೇಳದಂಥ ಇನ್ನಾವುದೋ ಉದ್ದೇಶ ಇರುವಂತಿದೆ. ಆದರೆ ಅದನ್ನು ಪತ್ತೆ ಹಚ್ಚುವುದಕ್ಕೆ ಇಲ್ಲಿನ ರಾಜಕೀಯ ಪಕ್ಷಗಳು ತನಿಖಾ ಸಂಸ್ಥೆಗಳಿಗೆ ಎಷ್ಟಂಶ ಸ್ವಾತಂತ್ರ್ಯವನ್ನು ಕೊಡಬಲ್ಲವು? ಬಿಜೆಪಿ ಈಗಾಗಲೇ ಬಿಹಾರ್ ಬಂದ್ ನಡೆಸಿದೆ. ನಿತೀಶ್ ಕುಮಾರ್‍ರ ವೈಫಲ್ಯಕ್ಕೆ ಪುರಾವೆಯಾಗಿ ಈ ಸ್ಫೋಟವನ್ನು ಬಿಂಬಿಸಲು ಅವರ ವಿರೋಧಿಗಳು ಪ್ರಯತ್ನಿಸುತ್ತಿದ್ದಾರೆ. ಇಂಥ ಹೊತ್ತಲ್ಲಿ ಬುದ್ಧಗಯಾವನ್ನು ಬೆದರಿಸಿದ ನಿಜವಾದ ಅಪರಾಧಿಗಳು ಶಿಕ್ಷೆಗೊಳಪಟ್ಟಾರೆಂದು ಹೇಗೆ ನಂಬುವುದು? ವಿರೋಧಿಗಳ ಬಾಯಿ ಮುಚ್ಚಿಸಬೇಕಾದರೆ ನಿತೀಶ್ ಕುಮಾರ್‍ರಿಗೆ ತಕ್ಷಣ ಕೆಲವು ಭಯೋತ್ಪಾದಕರ ಅಗತ್ಯವಿದೆ. ಬಿಜೆಪಿಗಂತೂ ಆ ಭಯೋತ್ಪಾದಕರು ಮುಸ್ಲಿಮರೇ ಆಗಿರಬೇಕೆಂಬ ಹಠವಿದೆ. ಈ ಹಠ ಮತ್ತು ಅಗತ್ಯಗಳ ನಡುವೆ ನಿಜವಾದ ಉಗ್ರರು ತಪ್ಪಿಸಿಕೊಳ್ಳುವ ಸಾಧ್ಯತೆ ಖಂಡಿತ ಇದೆ. ಯಾರನ್ನಾದರೂ ಎನ್‍ಕೌಂಟರ್‍ನಲ್ಲಿ ಸಾಯಿಸಿ ಅವರಿಗೆ ಬುದ್ಧಗಯಾದ ಬಾಂಬನ್ನು ಅಂಟಿಸಿಬಿಡುವುದಕ್ಕೂ ಅವಕಾಶ ಇದೆ. ಆದ್ದರಿಂದ ರಾಜಕೀಯ ಲಾಭ-ನಷ್ಟಗಳಿಗೆ ಸಿಲುಕದೇ ಬುದ್ಧಗಯಾ ತನಿಖೆಗೆ ಒಳಪಡಲಿ. ಅಪರಾಧಿಗಳು ತಮ್ಮ ‘ಧರ್ಮ'ದ ಕಾರಣಕ್ಕಾಗಿ ಯಾರ ಕೃಪೆಗೂ ಒಳಗಾಗದಿರಲಿ.

Monday, 24 June 2013

ಸ್ವರ್ಗ-ನರಕದ ಚರ್ಚೆಯಲ್ಲಿ ಗೆಲ್ಲುತ್ತಿರುವ ಶೋಷಕರು

ನೇತ್ರಾವತಿಯಲ್ಲಿ ತಾಯಿ, ಮಕ್ಕಳ ಆತ್ಮಹತ್ಯೆ
   ಅತ್ಯಾಚಾರದ ಸುತ್ತ ಮಾಧ್ಯಮಗಳು ನಡೆಸುತ್ತಿರುವ ಚರ್ಚೆ ಮತ್ತು ಸಾರ್ವಜನಿಕರಲ್ಲಿ ಆ ಬಗ್ಗೆ ಇರುವ ಕುತೂಹಲಕ್ಕೆ ಹೋಲಿಸಿದರೆ, ಆತ್ಮಹತ್ಯೆ ಏನೇನೂ ಅಲ್ಲ.  ಆತ್ಮಹತ್ಯೆಯ  ಸುತ್ತ ವಿಚಾರ ಗೋಷ್ಠಿಗಳಾಗುವುದು ತೀರಾ ಕಡಿಮೆ. ಆತ್ಮಹತ್ಯೆಯನ್ನು ಖಂಡಿಸಿ ಎಲ್ಲೂ ಪ್ರತಿಭಟನೆಗಳಾಗುವುದಿಲ್ಲ. ಮಾಧ್ಯಮಗಳು ಕೂಡ
ಆತ್ಮಹತ್ಯೆಯನ್ನು ತೀರಾ ಒಳಪುಟದ ನಿಧನ ಕಾಲಮ್‍ನ ಬಳಿ ಪ್ರಕಟಿಸಿ ಸುಮ್ಮನಾಗುತ್ತವೆ. ಒಂದು ವೇಳೆ ಆತ್ಮಹತ್ಯೆಗೆ ಬ್ರೇಕಿಂಗ್ ನ್ಯೂಸ್‍ನ ಗೌರವ ಸಿಗಬೇಕೆಂದರೆ ಜಿಯಾ ಖಾನ್‍ಳಂಥ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕು. ದುರಂತ ಏನೆಂದರೆ, ಆತ್ಮಹತ್ಯೆಯ ಕುರಿತಂತೆ ಇವತ್ತು ಸಾರ್ವಜನಿಕವಾಗಿ ನೆಲೆಗೊಂಡಿರುವ ಈ ನಿರ್ಲಕ್ಷ್ಯದ  ಮನಃಸ್ಥಿತಿಯೇ ಒಂದು ಹಂತದ ವರೆಗೆ ಆತ್ಮಹತ್ಯೆಗೆ ಪ್ರಚೋದಕವಾಗುತ್ತಿದೆ.
  1.  ತನ್ನಿಬ್ಬರು ಮಕ್ಕಳೊಂದಿಗೆ ತಾಯಿಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
  2.  74 ವರ್ಷದ ನಿವೃತ್ತ ಶಿಕ್ಷಕ ಮತ್ತು ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಐವರು ಪುತ್ರಿಯರು ಮತ್ತು ಓರ್ವ ಪುತ್ರ ಇದ್ದಾರೆ.
  3.  ತಮ್ಮ ಶವಸಂಸ್ಕಾರಕ್ಕಾಗಿ ಎಲ್ಲಾ ಏರ್ಪಾಟುಗಳನ್ನು ಮಾಡಿಟ್ಟು ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಏಕೈಕ ಮಗನು ತಮ್ಮನ್ನು ನಿರ್ಲಕ್ಷಿಸಿದುದೇ ಇದಕ್ಕೆ ಕಾರಣ..
   ಕಳೆದೊಂದು ವಾರದಲ್ಲಿ ಪ್ರಕಟವಾದ ಮಾಧ್ಯಮ ಸುದ್ದಿಗಳಿವು. ಇಂಥ ಸುದ್ದಿಗಳು ಇವತ್ತು ಎಷ್ಟು ಸಾಮಾನ್ಯ ಅಂದರೆ, ಇವಕ್ಕೆ ಯಾವ ಊರಿನ ಹೆಸರು ಕೊಟ್ಟರೂ ಅಚ್ಚರಿ ಆಗುವುದಿಲ್ಲ. ಯಾಕೆಂದರೆ ಎಲ್ಲ ಊರುಗಳಲ್ಲೂ ಇವತ್ತು ಆತ್ಮಹತ್ಯೆಗಳು ಮಾಮೂಲಿ ಅನ್ನಿಸತೊಡಗಿವೆ. ಮಾತ್ರವಲ್ಲ, ಆ ಕುರಿತಂತೆ ಹುಟ್ಟಿಕೊಳ್ಳುವ ಹೆಚ್ಚಿನ ಚರ್ಚೆಗಳು ಆತ್ಮಹತ್ಯೆ ಮಾಡಿಕೊಂಡವರನ್ನೇ ಅಪರಾಧಿಗಳೆಂದು ಬಿಂಬಿಸಿ ಕೊನೆಗೊಳ್ಳುತ್ತಲೂ ಇವೆ. ನಿಜವಾಗಿ ಅತ್ಯಾಚಾರದ ಕುರಿತಂತೆ ನಾವೆಷ್ಟು ಗಂಭೀರವಾಗುತ್ತೇವೋ ಆತ್ಮಹತ್ಯೆಯ ಕುರಿತಂತೆಯೂ ಅಷ್ಟೇ ಗಂಭೀರತೆ ಪ್ರದರ್ಶಿಸಬೇಕಾಗಿದೆ. ಅತ್ಯಾಚಾರಕ್ಕೆ ಹತ್ತು-ಹಲವು ಕಾರಣಗಳು ಇರುವಂತೆಯೇ ಆತ್ಮಹತ್ಯೆಗೂ ಅಂಥ ಕಾರಣಗಳು ಇವೆ. ಆದ್ದರಿಂದ ಆತ್ಮಹತ್ಯೆಗೈದವರನ್ನು ನರಕಕ್ಕೋ ಸ್ವರ್ಗಕ್ಕೋ ಅಟ್ಟಿ ಸುಮ್ಮನಾಗುವುದು, ಈ ಎಲ್ಲ ಕಾರಣಗಳನ್ನೂ ನಿರ್ಲಕ್ಷಿಸಿದಂತಾಗುತ್ತದೆ.
   ಈ ಜಗತ್ತಿನಲ್ಲಿ ಯಾರೂ ಸಂತಸವನ್ನು ತಡಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಂಡದ್ದಿಲ್ಲ. ನದಿಗೆ ಹಾರುವ ತಾಯಿ, ನೇಣು ಹಾಕಿಕೊಳ್ಳುವ ಯುವತಿ, ಬದುಕು ಕೊನೆಗೊಳಿಸುವ ವೃದ್ಧ ಹೆತ್ತವರು.. ಎಲ್ಲರಲ್ಲೂ ಒಂದೊಂದು ಬಗೆಯ ಕಾರಣಗಳಿವೆ. ಇಷ್ಟಕ್ಕೂ, ಯುವತಿ ಧರಿಸಿದ ಉಡುಪನ್ನು ತೋರಿಸಿ ಅತ್ಯಾಚಾರವನ್ನು ಸಮರ್ಥಿಸಿದರೆ ಏನಾದೀತು? ಯುವತಿ ರಾತ್ರಿ ಒಂಟಿಯಾಗಿ ಹೋದುದನ್ನೇ ಅತ್ಯಾಚಾರಕ್ಕೆ ಕಾರಣವೆಂದು ಹೇಳಿ ಆಕೆಯನ್ನೇ ಅಪರಾಧಿಯಾಗಿ ಬಿಂಬಿಸುವ ವಾತಾವರಣವನ್ನೊಮ್ಮೆ ಕಲ್ಪಿಸಿಕೊಳ್ಳಿ. ನಿಜವಾಗಿ, ಆತ್ಮಹತ್ಯೆಯನ್ನೇ ಅಪರಾಧಿಯೆಂದು ದೂರಿದಂತೆಯೇ ಇದು. ಅಸಮರ್ಪಕ ಬಟ್ಟೆ ಧರಿಸುವುದು, ಒಂಟಿಯಾಗಿ ಹೋಗುವುದೆಲ್ಲ ಅತ್ಯಾಚಾರಕ್ಕಿರುವ ಹಲವು ದೊಡ್ಡ ಕಾರಣಗಳ ಪೈಕಿ ಸಣ್ಣದೊಂದು ಅಂಶವೇ ಹೊರತು ಅವೇ ಮುಖ್ಯ ಕಾರಣಗಳಲ್ಲ. ಹಾಗೆಯೇ ಆತ್ಮಹತ್ಯೆ ಕೂಡ. ದಿನನಿತ್ಯದ ಬದುಕಿನಲ್ಲಿ ಆತ್ಮಹತ್ಯೆಗೆ ನೂರಾರು ಅಂಶಗಳು ಪ್ರಚೋದಕವಾಗಿರುತ್ತವೆ. ಆ ಹಂತದಲ್ಲಿ ಸರಿಯೋ ತಪ್ಪೋ ಎಂದು ಆಲೋಚಿಸುವುದಕ್ಕೂ ಅವಕಾಶವಿಲ್ಲದಷ್ಟು ಆ ಕಾರಣಗಳು ಬಲವಾಗಿರುತ್ತವೆ. ಆತ್ಮಹತ್ಯೆಯನ್ನು ತಪ್ಪು ಅನ್ನುವುದು ಸುಲಭ. ಆದರೆ ಅಂಥದ್ದೊಂದು ಪರಿಸ್ಥಿತಿಯನ್ನು ಓರ್ವ ತಾಯಿಗೋ ಹೆತ್ತವರಿಗೋ ತಂದಿಟ್ಟವರ ಬಗ್ಗೆ ಈ ಸಮಾಜದ ಅಭಿಪ್ರಾಯವೇನು? ಆತ್ಮಹತ್ಯೆಯನ್ನೇ ಅಪರಾಧಿ ಎಂದು ಬಿಂಬಿಸಿದ ಕೂಡಲೇ ಅದಕ್ಕೆ ಪ್ರಚೋದನೆ ಕೊಟ್ಟವರು ಅರ್ಧದಷ್ಟು ಗೆದ್ದಿರುತ್ತಾರೆ. ಆತ್ಮಹತ್ಯೆಗಿರುವ ಶಿಕ್ಷೆ, ಪಾಪಗಳಲ್ಲಿ ಅದಕ್ಕಿರುವ ಸ್ಥಾನ-ಮಾನಗಳ ಸುತ್ತ ಚರ್ಚೆ ಸಾಗಿದಂತೆಯೇ ಅವರ ಇಮೇಜು ಉತ್ತಮಗೊಳ್ಳುತ್ತಾ ಹೋಗು ತ್ತದೆ. ಆತ್ಮಹತ್ಯೆಯಲ್ಲಿ ತಮ್ಮ ಪಾತ್ರವು ಚರ್ಚೆಯಾಗದಂತೆ ನೋಡಿಕೊಳ್ಳುವುದಕ್ಕೆ ಅವರಿಗೆ ಅಂಥದ್ದೊಂದು ಚರ್ಚೆಯ ಅಗತ್ಯವೂ ಇರುತ್ತದೆ. ನಿಧಾನವಾಗಿ ಅವರು ತಮ್ಮನ್ನು ಪರಮ ಪ್ರಾಮಾಣಿಕರಂತೆ ಮತ್ತು ಆತ್ಮಹತ್ಯೆ ಮಾಡಿದವರನ್ನೇ ಪರಮ ಪಾಪಿಗಳಂತೆ ಬಿಂಬಿಸಿ ಬದುಕುವುದಕ್ಕೆ ಈ ಚರ್ಚೆಗಳು ಅವಕಾಶ ಮಾಡಿಕೊಡುತ್ತವೆ.
   ಅಂದಹಾಗೆ, ಇಂಥದ್ದೊಂದು ಅವಕಾಶ ಆತ್ಮಹತ್ಯೆಗೆ ಪ್ರಚೋದಿಸಿದವರಿಗೆ ಮಾತ್ರ ಇರುವುದಲ್ಲ. ಅತ್ಯಾಚಾರಿ ಮತ್ತು ಅಂಥ ಮನಃಸ್ಥಿತಿಯಿರುವವರೂ ಇಂಥ ಚರ್ಚೆಗಳಿಂದ ಲಾಭ ಪಡಕೊಳ್ಳುವುದಿದೆ. ಅತ್ಯಾಚಾರಕ್ಕೀಡಾದ ಯುವತಿಯ ಉಡುಪು, ವರ್ತನೆಗಳನ್ನೇ ಪ್ರಮುಖ ಅಪರಾಧದಂತೆ ಬಿಂಬಿಸಿ ನಡೆಯುವ ಚರ್ಚೆಗಳು ನಿಧಾನವಾಗಿ 'ಅತ್ಯಾಚಾರ'ವೆಂಬ ಕ್ರೌರ್ಯದ ತೂಕವನ್ನು ಕಡಿಮೆಗೊಳಿಸುತ್ತಾ ಸಾಗುತ್ತದೆ. ನಿಜವಾಗಿ, ಇವತ್ತು ಅಪರಾಧ ಪ್ರವೃತ್ತಿಗಳು ಹೆಚ್ಚಾಗುವುದಕ್ಕೆ ಕಾರಣ, ಸಾರ್ವಜನಿಕವಾಗಿ ನೆಲೆಗೊಂಡಿರುವ ಇಂಥ ಮನಃಸ್ಥಿತಿಗಳೇ. ಆದ್ದರಿಂದ ಆತ್ಮಹತ್ಯೆ ಮತ್ತು ಅತ್ಯಾಚಾರಗಳ ಸುತ್ತ ಏರ್ಪಡುವ ಚರ್ಚೆಗಳಿಂದ ಅಪರಾಧಿಗಳಿಗೆ ಲಾಭವಾಗದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ. ಆತ್ಮಹತ್ಯೆ ಸರಿಯೋ ತಪ್ಪೋ ಅನ್ನುವುದಕ್ಕಿಂತ ವೃದ್ಧರನ್ನು, ತಾಯಂದಿರನ್ನು ಅಂಥ ಕೃತ್ಯಕ್ಕೆ ದೂಡುವ ಪಾಪಿಗಳ ಸುತ್ತ ಗಂಭೀರ ಚರ್ಚೆಗಳು ನಡೆಯಬೇಕಿದೆ. ಒಂದು ಮನೆಯ ಸೊಸೆ ಆತ್ಮಹತ್ಯೆ ಮಾಡಿ ಕೊಳ್ಳುವುದೆಂದರೆ, ಅದನ್ನು ಆ ಮನೆಗೆ ಮಾತ್ರ ಸೀಮಿತಗೊಳಿಸಿ ನೋಡಬೇಕಾದ ಅಗತ್ಯವಿಲ್ಲ. ಆ ಸೊಸೆಗಿಂತ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿರುವ ಆದರೆ ಆತ್ಮಹತ್ಯೆಗೆ ಧೈರ್ಯವಿಲ್ಲದ ಅಸಂಖ್ಯ ಸೊಸೆಯಂದಿರ ಬಗ್ಗೆ ಆಲೋಚಿಸುವುದಕ್ಕೆ ಅಂಥ ಪ್ರಕರಣಗಳು ಪ್ರಚೋದಕವಾಗಬೇಕು. ಆತ್ಮಹತ್ಯೆಗೆ ಪ್ರಚೋದಕವಾಗುವ  ಶೋಷಕರ ಬಗ್ಗೆ ಅಥವಾ ಅತ್ಯಾಚಾರಿಗಳ ಕ್ರೂರ ಮನಃಸ್ಥಿತಿಯ ಬಗ್ಗೆ ಒತ್ತು ಕೊಟ್ಟು ಮಾತಾಡದೇ ಆತ್ಮಹತ್ಯೆಯನ್ನು ಮಹಾ ಪಾಪವೆಂದೋ ಉಡುಪನ್ನು ಮಹಾ ಅಪರಾಧಿಯೆಂದೋ ಸಾರುವುದು ಅಂತಿಮವಾಗಿ ಶೋಷಕರಿಗೆ ಸಮಾಧಾನ ತಂದುಕೊಡಬಲ್ಲುದೇ ಹೊರತು ಅವರಲ್ಲಿ ಪರಿವರ್ತನೆಯನ್ನಲ್ಲ. ಆದ್ದರಿಂದ ಆತ್ಮಹತ್ಯೆ, ಅತ್ಯಾಚಾರಗಳ ಸುತ್ತ ನಡೆಯುವ ನಮ್ಮ ಚರ್ಚೆಗಳೆಲ್ಲ ಶೋಷಿತರಲ್ಲಿ ಧೈರ್ಯ ತುಂಬುವಂತಿರಲಿ. ಶೋಷಕರಲ್ಲಿ ಭೀತಿ ಮೂಡಿಸುವಂತಿರಲಿ.