Tuesday, 2 December 2014

ಸಂವೇದನಾರಹಿತ ಪತ್ರಿಕೋದ್ಯಮಕ್ಕೆ ಬಲಿಯಾದ ಲಲಿತ

    ಕ್ಲೆಪ್ಪೋಮೇನಿಯಾ ಎಂಬೊಂದು ರೋಗವಿದೆ. ಕದಿಯುವುದೇ ಈ ರೋಗದ ಲಕ್ಷಣ. ಈ ರೋಗಕ್ಕೆ ತುತ್ತಾದವರು ಸಾಮಾನ್ಯವಾಗಿ ಸಹಜವಾಗಿರುತ್ತಾರೆ. ಕ್ಲೆಪ್ಪೋಮೇನಿಯ ರೋಗಿ ಎಂದು ನೋಡಿದ ಕೂಡಲೇ ಹೇಳಿ ಬಿಡಬಹುದಾದ ಯಾವ ಲಕ್ಷಣಗಳೂ ಬಾಹ್ಯನೋಟಕ್ಕೆ ಗೋಚರಿಸುವುದಿಲ್ಲ. ಆದರೆ ರೋಗಿ ಒಳಗೊಳಗೇ ಒತ್ತಡ ಅನುಭವಿಸುತ್ತಿರುತ್ತಾನೆ/ಳೆ. ಕದಿಯುವಂತೆ ವ್ಯಕ್ತಿಯ ಮೇಲೆ ಆ ರೋಗ ಒತ್ತಾಯವನ್ನು ಹೇರುತ್ತಲೇ ಇರುತ್ತದೆ. ಅಂತಿಮವಾಗಿ ಕಳ್ಳತನ ಮಾಡುವ ಮೂಲಕ ಆ ಒತ್ತಡದಿಂದ ಆತ/ಕೆ ಹೊರಬರುತ್ತಾರೆ. ದುರಂತ ಏನೆಂದರೆ, ಕ್ಲೆಪ್ಪೋಮೇನಿಯ ರೋಗದ ಬಗ್ಗೆ ಸಮಾಜಕ್ಕೆ ಗೊತ್ತಿರುವುದು ತೀರಾ ಕಡಿಮೆ. ಕಳ್ಳತನವನ್ನು ರೋಗವಾಗಿ ನೋಡುವ ಹಂತಕ್ಕೆ ಸಮಾಜ ಇನ್ನೂ ಬೆಳೆದಿಲ್ಲ. ಆದ್ದರಿಂದಲೇ ಕಳ್ಳತನ ಪ್ರಕರಣಗಳ ಬಗ್ಗೆ ನಡೆಯುವ ಹೆಚ್ಚಿನೆಲ್ಲ ಚರ್ಚೆಗಳು ಕ್ಲೆಪ್ಪೋಮೇನಿಯದ ಉಲ್ಲೇಖವಿಲ್ಲದೇ ಅಥವಾ ಅಂಥದ್ದೊಂದು ಸಾಧ್ಯತೆಯನ್ನು ಚರ್ಚೆಗೊಡ್ಡದೆಯೇ ಕೊನೆಗೊಳ್ಳುತ್ತದೆ. ಟೀಕೆ, ನಿಂದನೆ, ಅಪಹಾಸ್ಯದ ಮಾತುಗಳು ಧಾರಾಳ ಕೇಳಿ ಬರುತ್ತವೆ. ಒಂದು ಕಡೆ ರೋಗದ ಒತ್ತಡ, ಇನ್ನೊಂದು ಕಡೆ ರೋಗವನ್ನು ಅರ್ಥೈಸಿಕೊಳ್ಳದ ಸಮಾಜ - ಇವುಗಳ ಮಧ್ಯೆ ರೋಗಿಗಳು ಸಹಜವಾಗಿ ಕುಗ್ಗಿ ಹೋಗುತ್ತಾರೆ. ಅವಮಾನದಿಂದ ಖಿನ್ನತೆಗೆ ಒಳಗಾಗುವುದೂ ಇದೆ. ಕಳೆದ ವಾರ ಸಾವಿಗೀಡಾದ ಎಚ್.ಎಸ್. ಲಲಿತಾರು ಇದಕ್ಕೆ ಅತ್ಯುತ್ತಮ ಉದಾಹರಣೆ.
 ಕಳೆದ ಮಾರ್ಚ್‍ನಲ್ಲಿ ಕನ್ನಡದ ಹೆಚ್ಚಿನೆಲ್ಲ ಟಿ.ವಿ. ಚಾನೆಲ್‍ಗಳು ‘ಕಳ್ಳಿ ಕಾರ್ಪೋರೇಟರ್' ಎಂಬ ಆನೆಗಾತ್ರದ ಶೀರ್ಷಿಕೆಯಲ್ಲಿ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದ್ದುವು. ಬೆಂಗಳೂರು ಮಹಾ ನಗರ ಪಾಲಿಕೆಯ ಗಿರಿನಗರ ವಾರ್ಡ್‍ನ ಬಿಜೆಪಿ ಕಾರ್ಪೋರೇಟರ್ ಲಲಿತಾ ಎಂಬವರು ಬಟ್ಟೆ ಅಂಗಡಿಯೊಂದರಲ್ಲಿ ಸೀರೆ ಕದ್ದು ಸಿಕ್ಕಿಬಿದ್ದ ಸುದ್ದಿ ಅದು. ಸಿ.ಸಿ. ಟಿ.ವಿ.ಯಲ್ಲಿ ಸೆರೆಯಾದ ದೃಶ್ಯಗಳನ್ನು ಪದೇಪದೇ ಪ್ರಸಾರ ಮಾಡುತ್ತಾ ಲಲಿತ ಅವರನ್ನು ಮತ್ತು ಅವರ ಕುಟುಂಬವನ್ನು ಟಿ.ವಿ. ಚಾನೆಲ್‍ಗಳು ಮಾನಸಿಕವಾಗಿ ಕೊಂದಿದ್ದುವು. ಪ್ರಕರಣವನ್ನು ವೈಭವೀಕರಿಸಿದಂತೆ ಅವರ ಕುಟುಂಬವು ಆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ವಿನಂತಿಸಿತ್ತು. ಲಲಿತಾ ಅವರು ಕ್ಲೆಪ್ಪೋಮೇನಿಯ ರೋಗಕ್ಕೆ ತುತ್ತಾಗಿರುವುದನ್ನು ದಾಖಲೆಗಳ ಸಮೇತ ಅವರ ಪತಿ ಮಾಧ್ಯಮಗಳ ಎದುರು ಬಿಡಿಸಿಟ್ಟಿದ್ದರು. ಆದರೆ ಆ ಹೊತ್ತಿಗಾಗಲೇ ಲಲಿತಾ ‘ಕಳ್ಳಿ'ಯ ಇಮೇಜನ್ನು ಗಳಿಸಿಕೊಂಡು ಬಿಟ್ಟಿದ್ದರು.
ಘಟನೆಗೆ ಎಷ್ಟು ದೊಡ್ಡ ಮಟ್ಟದ ಪ್ರಚಾರ ಸಿಕ್ಕಿತ್ತೆಂದರೆ, ಬಿಜೆಪಿ ಅವರನ್ನು ವಜಾಗೊಳಿಸಿತು. ಕ್ಲೆಪ್ಪೋಮೇನಿಯ ರೋಗದ ಬಗ್ಗೆ ಮತ್ತು ಲಲಿತಾ ಅವರು ಅದರಿಂದ ಬಳಲುತ್ತಿರುವ ಬಗ್ಗೆ ಮಾಧ್ಯಮಗಳ ಮುಂದೆ ವಿವರಿಸಿ ನೊಂದ ಕುಟುಂಬಕ್ಕೆ ಮಾನಸಿಕ ಧೈರ್ಯ ಕೊಡುವ ಬದಲು ಬಿಜೆಪಿ ಇಡೀ ಪ್ರಕರಣದಿಂದ ಪಲಾಯನ ಮಾಡಿತು. ನಿಜವಾಗಿ, ಲಲಿತ ಅವರನ್ನು ಕಳ್ಳತನದ ಆರೋಪದಿಂದ ಪಾರು ಮಾಡುವ ಸಾಮರ್ಥ್ಯವಿದ್ದುದು ಒಂದು ಬಿಜೆಪಿಗಾದರೆ ಇನ್ನೊಂದು ಮಾಧ್ಯಮಕ್ಕೆ. ಆದರೆ ಅವೆರಡೂ ತೀರಾ ಬೇಜವಾಬ್ದಾರಿಯಿಂದ ವರ್ತಿಸಿದ್ದುವು. ಕಳ್ಳಿ ಕಾರ್ಪೋರೇಟರ್ ಎಂದಿದ್ದ ಮಾಧ್ಯಮಗಳಿಗೆ ಕ್ಲೆಪ್ಪೋಮೇನಿಯ ಕಾರ್ಪೋರೇಟರ್ ಎಂದು ತಿದ್ದಿಕೊಳ್ಳುವ ಅವಕಾಶವೂ ಇತ್ತು. ಆದರೆ ಮಾಧ್ಯಮ ಕ್ಷೇತ್ರದ ಬೇಜವಾಬ್ದಾರಿ ವರ್ತನೆಯು ಲಲಿತ ಮತ್ತು ಅವರ ಕುಟುಂಬವನ್ನು ತೀವ್ರವಾಗಿ ಘಾಸಿಗೊಳಿಸಿತು. ಲಲಿತ ಖಿನ್ನತೆಗೆ ಒಳಗಾದರು. ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದು ಕೊನೆಗೆ ಮೃತಪಟ್ಟರು.  
   ಬಹುಶಃ, ಅವಸರದ ಪತ್ರಿಕೋದ್ಯಮಕ್ಕೆ ಜೀವತೆತ್ತವರ ಪಟ್ಟಿಯಲ್ಲಿ ಲಲಿತಾರ ಹೆಸರು ಎಷ್ಟನೆಯದೋ ಗೊತ್ತಿಲ್ಲ. ಆದರೆ ಬ್ರಿಟನ್ನಿನ ರಾಜಕುಮಾರಿ ಡಯಾನರಂತೆ ಲಲಿತ ಕೂಡ ಮಾಧ್ಯಮ ದಾಹಕ್ಕೆ ಬಲಿಯಾಗಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಮುಖ್ಯವಾಗಿ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಈ ಬಗ್ಗೆ ಎಳ್ಳಷ್ಟೂ ಪಶ್ಚಾತ್ತಾಪಭಾವ  ಕಾಣಿಸಿಕೊಂಡಿಲ್ಲ. ಕನಿಷ್ಠ ಅರ್ಥಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಅವಕಾಶವನ್ನೂ ಅವು ಬಳಸಿಕೊಂಡಿಲ್ಲ. ನಿಜವಾಗಿ, ಕಾರ್ಪೋರೇಟರ್ ಓರ್ವರು ಸೀರೆ ಕದಿಯುತ್ತಾರೆಂಬುದೇ ಅಚ್ಚರಿಯ ಸಂಗತಿ. ಯಾಕೆಂದರೆ, ಕಾರ್ಪೋರೇಟರ್‍ಗೆ ಅವರದ್ದೇ ಆದ ಸಾಮಾಜಿಕ ಸ್ಥಾನಮಾನ, ಗೌರವಾದರಗಳಿವೆ. ಕದ್ದು ಸೀರೆ ಉಡಬೇಕಾದಷ್ಟು ಬಡತನವಿರುವ ಕಾರ್ಪೋರೇಟರ್‍ಗಳು ಬೆಂಗಳೂರಿನಲ್ಲಿದ್ದಾರೆಂಬುದನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ. ಅಲ್ಲದೇ, ಲಲಿತ ಅವರ ಹಿನ್ನೆಲೆಯೂ ಬಡತನದ್ದಲ್ಲ...  ಸುದ್ದಿ ತಯಾರಿಸುವ ಸಂದರ್ಭದಲ್ಲಿ ಓರ್ವ ಪತ್ರಕರ್ತನ/ಳನ್ನು ವಿವೇಚನೆಗೆ ಒಡ್ಡಬೇಕಾದ ಅಂಶಗಳಿವು. 'ಕಳ್ಳಿ ಕಾರ್ಪೋರೇಟರ್' ಎಂಬ ಶೀರ್ಷಿಕೆಯನ್ನು ರಚಿಸುವುದಕ್ಕಿಂತ ಮೊದಲು ನಿಜವಾಗಿಯೂ ಅದು ಕಳ್ಳತನವೇ ಎಂಬೊಂದು ಅನುಮಾನ ಓರ್ವ ಪತ್ರಕರ್ತನಲ್ಲಿ ಮೂಡಿ ಬರಲೇಬೇಕಿತ್ತು. ಕಾರ್ಪೋರೇಟರ್ ಕದ್ದದ್ದೇಕೆ ಎಂಬ ಶಂಕೆಯ ಹುಳವೊಂದು ಮೆದುಳನ್ನು ಕೆರೆಯುವ ಸಂದರ್ಭ
ಸೃಷ್ಟಿಯಾಗಬೇಕಿತ್ತು. ಅಷ್ಟಕ್ಕೂ, ಬಟ್ಟೆಯ ಅಂಗಡಿಗಳಲ್ಲಿ ಸಿ.ಸಿ. ಕ್ಯಾಮೆರಾ ಇರುತ್ತದೆ, ಏನೇ ಎಡವಟ್ಟು ಮಾಡಿಕೊಂಡರೂ ಗೊತ್ತಾಗುತ್ತದೆ.. ಎಂಬ ಪ್ರಜ್ಞೆ ಲಲಿತ ಅವರನ್ನು ಬಿಡಿ ತೀರಾ ಸಾಮಾನ್ಯರಿಗೂ ಇವತ್ತು ಗೊತ್ತಿರುತ್ತದೆ. ಹೀಗಿರುತ್ತಾ ಕಾರ್ಪೋರೇಟರ್‍ರನ್ನು ಕಳ್ಳಿ ಎಂದು ಒಂದೇ ಏಟಿಗೆ ಕರೆದದ್ದನ್ನು ಏನೆಂದು ಪರಿಗಣಿಸಬೇಕು? ಪತ್ರಿಕೋದ್ಯಮದ ತುರ್ತುಗಳು ಏನೇ ಇರಲಿ, ಅದಕ್ಕಿಂತ ಓರ್ವ ವ್ಯಕ್ತಿಯ ಮಾನ ಮತ್ತು ಘನತೆ ಅಮೂಲ್ಯವಾದುದು. ತುರ್ತುಗಳ ನೆಪದಲ್ಲಿ ಓರ್ವ ವ್ಯಕ್ತಿಯ ಘನತೆಗೆ ಧಕ್ಕೆತರುವ ಸ್ವಾತಂತ್ರ್ಯ ಯಾವ ಪತ್ರಕರ್ತರಿಗೂ ಇಲ್ಲ. ಆದರೂ ಲಲಿತಾರ ಪ್ರಕರಣದಲ್ಲಿ ಮಾಧ್ಯಮಗಳು ಬೇಕಾಬಿಟ್ಟಿಯಾಗಿ ವರ್ತಿಸಿದುವು. ಓರ್ವ ಮಹಿಳೆಯಾಗಿ ಮತ್ತು ಜನಪ್ರತಿನಿಧಿಯಾಗಿ ಅವರಿಗಿರಬಹುದಾದ ಸ್ಥಾನಮಾನವನ್ನು ಪರಿಗಣಿಸದೆಯೇ ಮತ್ತು ಅವರಿಗೆ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕೆ ಇರುವ ಸ್ವಾತಂತ್ರ್ಯವನ್ನು ಮಾನ್ಯ ಮಾಡದೆಯೇ ತಾವೇ ತೀರ್ಪು ಕೊಟ್ಟವು.
 ಅಂದಹಾಗೆ, ಮಾಧ್ಯಮಗಳು ಕಟಕಟೆಯಲ್ಲಿ ನಿಲ್ಲುವುದು ಇದು ಮೊದಲ ಸಲವೇನೂ ಅಲ್ಲ. ಅವುಗಳ ಈಗಿನ ವರ್ತನೆಯನ್ನು ನೋಡಿದರೆ ಇದು ಕೊನೆಯದಾಗುವ ಸಾಧ್ಯತೆಯೂ ಇಲ್ಲ. ಪತ್ರಿಕೆಗಳು ಮತ್ತು ಚಾನೆಲ್‍ಗಳ ಸಂಖ್ಯೆಯಲ್ಲಿ ಹೆಚ್ಚಳವಾಗುವುದರಿಂದ ಪತ್ರಿಕಾ ರಂಗಕ್ಕೆ ಒಳತಾಗಬಹುದು ಎಂದೇ ಭಾವಿಸಲಾಗಿತ್ತು. ಸಣ್ಣ ಪುಟ್ಟ ಸುದ್ದಿಗಳಿಗೂ ಸ್ಪೇಸ್ ಸಿಗಬಹುದು, ಸುದ್ದಿಗೆ ನ್ಯಾಯ ಒದಗಬಹುದು, ಪಾರದರ್ಶಕತೆ ಉಂಟಾಗಬಹುದು.. ಎಂಬೆಲ್ಲ ನಿರೀಕ್ಷೆಗಳನ್ನು ಹುಟ್ಟಿಸಲಾಗಿತ್ತು. ಸಾಮಾನ್ಯವಾಗಿ, ಗ್ರಾವಿೂಣ ಪ್ರದೇಶಗಳು ಯಾವಾಗಲೂ ಮಾಧ್ಯಮ ಕಣ್ಣಿನಿಂದ ಹೊರಗಿರುತ್ತವೆ. ಅಲ್ಲಿನ ಸಮಸ್ಯೆಗಳಿಗೆ ಕ್ಯಾಮರಾ ಮತ್ತು ಪೆನ್ನು ಹಿಡಿಯುವ ಕೈಗಳು ಸಿಗುವುದು ಕಡಿಮೆ. ಪತ್ರಿಕೆ ಮತ್ತು ಟಿ.ವಿ. ಚಾನೆಲ್‍ಗಳ ಹೆಚ್ಚಳದಿಂದಾಗಿ ಈ ಕೊರತೆಗಳನ್ನು ತುಂಬಬಹುದು ಎಂದೂ ಹೇಳಲಾಗುತ್ತಿತ್ತು. ಇವತ್ತು ಈ ನಿರೀಕ್ಷೆಗಳಿಗೆ ಸ್ವಲ್ಪ ಮಟ್ಟಿನ ನ್ಯಾಯ ಸಿಕ್ಕಿವೆಯಾದರೂ ಅದಕ್ಕಿಂತಲೂ ಭಯಾನಕ ಅಪಾಯವೊಂದು ಈಗ ಸೃಷ್ಟಿಯಾಗಿಬಿಟ್ಟಿವೆ. ಅದುವೇ ಪೈಪೋಟಿ. ತಾವೇ ಮೊದಲು ಸುದ್ದಿಯನ್ನು ಬಿತ್ತರಿಸಬೇಕು ಎಂಬ ಅವಸರವು ಸರಿ-ತಪ್ಪುಗಳನ್ನು ವಿವೇಚಿಸದ ಹಂತಕ್ಕೆ ಪತ್ರಕರ್ತರನ್ನು ತಲುಪಿಸಿಬಿಟ್ಟಿವೆ. ಯಾವ ಎಚ್ಚರಿಕೆಯನ್ನೂ ಇರಿಸದೇ ಬ್ರೇಕಿಂಗ್ ನ್ಯೂಸ್, ಎಕ್ಸ್ ಕ್ಲೂಸಿವ್ ನ್ಯೂಸ್‍ಗಳನ್ನು ತಯಾರಿಸುವಷ್ಟು ಅದು ಪತ್ರಕರ್ತರನ್ನು ಸಂವೇದನಾರಹಿತಗೊಳಿಸಿವೆ. ಘನತೆ, ಗೌರವ, ಸ್ಥಾನ-ಮಾನ, ಸತ್ಯ, ಗೌಪ್ಯತೆ.. ಮುಂತಾದುವುಗಳೆಲ್ಲ ಪತ್ರಿಕೋದ್ಯಮದ ತುರ್ತುಗಳು ಮತ್ತು ಪೈಪೋಟಿಯ ರಭಸಕ್ಕೆ ಸಿಲುಕಿ ನಿಧನ ಹೊಂದುತ್ತಿವೆ. ಲಲಿತ ಅದರ ಇತ್ತೀಚಿನ ಬಲಿ. ಆದ್ದರಿಂದ ಈ ಬಲಿಗಳ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳ ಉಂಟಾಗದಿರಲಿಕ್ಕಾಗಿ ಮಾಧ್ಯಮ ಕ್ಷೇತ್ರವು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಿದೆ. ಮಾಧ್ಯಮ ಜಗತ್ತು ಯಾಕೆ ಸಂವೇದನಾಶೀಲವಾಗಬೇಕು ಎಂಬ ಪ್ರಶ್ನೆ ಎದ್ದಾಗಲೆಲ್ಲ ಲಲಿತ ನೆನಪಾಗಲಿ. ಅವರ ಸಾವು ಮಾಧ್ಯಮ ಕ್ಷೇತ್ರದ ಒಣ ಮನಸ್ಸುಗಳಿಗೆ ವಿವೇಚನೆಯನ್ನು ತುಂಬಲಿ.

Tuesday, 25 November 2014

ಭಯೋತ್ಪಾದನೆಯ ಆರೋಪದಿಂದ ಮದ್ರಸಗಳನ್ನು ಪಾರುಗೊಳಿಸಿದ ಬಾಬಾ ರಾಮ್‍ಪಾಲ್

   ವಿದ್ಯಾರ್ಥಿ ಸಂಘಟನೆಯಾದ ಎಸ್‍ಐಓವು (ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ), ಕಳೆದವಾರ ಬೆಂಗಳೂರಿನಲ್ಲಿ, `ಮದ್ರಸಗಳ ಪ್ರಸಕ್ತ ಸ್ಥಿತಿಗತಿಯ' ಕುರಿತಂತೆ ಸರ್ವೇ ಆಧಾರಿತ ವರದಿಯ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡ ಅದೇ ದಿನ ಮಾಧ್ಯಮಗಳಲ್ಲಿ ಶಸ್ತ್ರಾಸ್ತ್ರಗಳ ವಿವರಗಳು ಪ್ರಕಟವಾಗಿದ್ದುವು. ಹರ್ಯಾಣದ ಸ್ವಘೋಷಿತ ದೇವಮಾನವ ಬಾಬಾ ರಾಮ್‍ಪಾಲ್‍ರ ಆಶ್ರಮದಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳ ವಿವರಗಳಾಗಿದ್ದುವು ಅವು. ಏರ್‍ಗನ್‍ಗಳು, ರಿವಾಲ್ವರ್‍ಗಳು, ಗ್ರೆನೇಡ್‍ಗಳು, ಸಿಡಿಮದ್ದುಗಳು, ಪೆಟ್ರೋಲ್ ಬಾಂಬ್, ಆ್ಯಸಿಡ್ ತುಂಬಿದ ಬ್ಯಾಗುಗಳು, ಆ್ಯಸಿಡ್ ಸಿರಿಂಜ್, 800 ಲೀಟರ್ ಡೀಸೆಲ್, ಮೆಣಸಿನ ಪುಡಿ.. ಸಹಿತ ಶಸ್ತ್ರಾಸ್ತ್ರಗಳ ಕಾರ್ಖಾನೆಯಲ್ಲಿ ಇರಬಹುದಾದ ಎಲ್ಲವೂ ಅಲ್ಲಿದ್ದುವು. ಒಂದು ವೇಳೆ ಆ ವಸ್ತುಗಳಲ್ಲಿ ಕೆಲವೇ ಕೆಲವು ವಸ್ತುಗಳಾದರೂ ಯಾವುದಾದರೊಂದು ಮದ್ರಸದಲ್ಲಿ ಪತ್ತೆಯಾಗಿರುತ್ತಿದ್ದರೆ ಬೆಂಗಳೂರಿನ ಆ ಕಾರ್ಯಕ್ರಮದ ಪರಿಸ್ಥಿತಿ ಏನಾಗಿರುತ್ತಿತ್ತು? ಮಾಧ್ಯಮಗಳು ಆ ಕಾರ್ಯಕ್ರಮದ ಸಂಘಟಕರನ್ನು ಹೇಗೆಲ್ಲ ಮುತ್ತಿಕೊಳ್ಳುತ್ತಿದ್ದವು? ಆ ಇಡೀ ಚರ್ಚಾಗೋಷ್ಠಿಯನ್ನೇ ಭಯೋತ್ಪಾದಕ ಕಾರ್ಯಕ್ರಮವಾಗಿ ಚಿತ್ರಿಸಲು ಏನೆಲ್ಲ ಪದ ಪ್ರಯೋಗ, ಶೀರ್ಷಿಕೆಗಳು ರಚಿತವಾಗುತ್ತಿದ್ದುವು? ರಾಜ್ಯಾದ್ಯಂತದ 84 ಮದ್ರಸಗಳ ಮೇಲೆ ಸರ್ವೆ ನಡೆಸಿ ತಯಾರಿಸಲಾದ ವರದಿಗೆ ಅವು ಏನೆಂದು ಶೀರ್ಷಿಕೆ ಕೊಡುತ್ತಿದ್ದುವು? ದುರಂತ ಏನೆಂದರೆ, ಮದ್ರಸ ಭಯೋತ್ಪಾದನೆಯ ಬಗ್ಗೆ ಮಾತಾಡುವ ಗೃಹ ಸಚಿವ ರಾಜನಾಥ್ ಸಿಂಗ್‍ರು ಈ ಶಸ್ತ್ರಾಸ್ತ್ರಗಳ ಕುರಿತಂತೆ ಇನ್ನೂ ಮೌನ ಮುರಿದಿಲ್ಲ. ಆಶ್ರಮಗಳು ಭಯೋತ್ಪಾದಕರ ಅಡಗುತಾಣವಾಗುತ್ತಿವೆಯೇ ಎಂಬೊಂದು ಅನುಮಾನಿತ ಹೇಳಿಕೆಯನ್ನು ಹೊರಡಿಸುವುದಕ್ಕೆ ಪೂರಕ ವಾತಾವರಣವಿದ್ದಾಗ್ಯೂ ಅವರು ತುಟಿ ಬಿಚ್ಚುತ್ತಿಲ್ಲ. ಮಾಧ್ಯಮಗಳು ನ್ಯಾಯಪಾಲನೆಯಲ್ಲಿ ಎಷ್ಟು ನಿಷ್ಠವಾಗಿವೆಯೆಂದರೆ, ಆ ಶಸ್ತ್ರಾಸ್ತ್ರಗಳಲ್ಲಿ ಅವುಗಳಿಗೆ ಅನುಮಾನವೇ ಬರುತ್ತಿಲ್ಲ. ಮದ್ರಸಕ್ಕೆ ಹೋಗುವ ಪುಟ್ಟ ಮಕ್ಕಳ ಟೊಪ್ಪಿಯೊಳಗೆ ಬಾಂಬಿದೆಯೇ ಎಂಬ ಪತ್ತೆದಾರಿಕೆಯಲ್ಲಿ ತೊಡಗಿದ್ದವರೆಲ್ಲ ರಾಮ್‍ಪಾಲ್‍ರ ಶಸ್ತ್ರಾಸ್ತ್ರವನ್ನು ಮುಂದಿಟ್ಟುಕೊಂಡು `ಆಶ್ರಮ ಭಯೋತ್ಪಾದನೆಯ' ಬಗ್ಗೆ ಭೀತಿಯನ್ನೂ ವ್ಯಕ್ತಪಡಿಸುತ್ತಿಲ್ಲ. ದೇಶಾದ್ಯಂತದ ಆಶ್ರಮಗಳೆಲ್ಲ ತನಿಖೆಗೆ ಒಳಗಾಗಲಿ ಎಂಬ ಹಕ್ಕೊತ್ತಾಯಗಳು ಮಾಧ್ಯಮಗಳಿಂದಾಗಲಿ, ಮದ್ರಸ ಭಯೋತ್ಪಾದನೆ ಎಂಬ ಪದವನ್ನು ಸೃಷ್ಟಿಸಿದವರಿಂದಾಗಲಿ ಕೇಳಿ ಬರುತ್ತಿಲ್ಲ. ಇವತ್ತು ರಾಮ್‍ಪಾಲ್ ಆಶ್ರಮದ ಶಸ್ತ್ರಾಸ್ತ್ರಗಳು ಮತ್ತು ಅಲ್ಲಿನ ಬೆಳವಣಿಗೆಗಳೆಲ್ಲ ಕೇವಲ ಆ ಆಶ್ರಮಕ್ಕೆ ಮಾತ್ರ ಸೀಮಿತಗೊಂಡು ಬಿಟ್ಟಿವೆ. ಮದ್ರಸ ಭಯೋತ್ಪಾದನೆಯ ಚರ್ಚೆಯು ದೇಶಾದ್ಯಂತದ ಮದ್ರಸಗಳನ್ನು ಒಳಗೊಳಿಸಿದಂತೆ ಹಾಗೂ ಪ್ರತಿ ಗಲ್ಲಿಯಲ್ಲಿ ಟೋಪಿ ಇಟ್ಟ ಪುಟ್ಟ ಮಗು ಮತ್ತು ಬಡ ಮೌಲಾನ ಕೆಂಗಣ್ಣಿಗೆ ಗುರಿಯಾದಂತೆ ಯಾವ ಆಶ್ರಮಗಳೂ  ಗುರಿಯಾಗುತ್ತಿಲ್ಲ. ಮದ್ರಸ ಭಯೋತ್ಪಾದನೆಯಂತೆ ಆಶ್ರಮ ಭಯೋತ್ಪಾದನೆ ಎಂಬ ಚೆಂದದ ಶೀರ್ಷಿಕೆಯಲ್ಲಿ ಚಾನೆಲ್‍ಗಳು ಚರ್ಚೆಯನ್ನೂ ಹಮ್ಮಿಕೊಳ್ಳುತ್ತಿಲ್ಲ.
 ನಿಜವಾಗಿ, ಮದ್ರಸ ಭಯೋತ್ಪಾದನೆ, ಆಶ್ರಮ ಭಯೋತ್ಪಾದನೆ ಮುಂತಾದ ಪದ ಪ್ರಯೋಗಗಳೇ ತಪ್ಪು. ಮದ್ರಸಗಳು, ಆಶ್ರಮಗಳು, ಇಗರ್ಜಿ, ಮಸೀದಿ, ಮಂದಿರಗಳೆಲ್ಲ ಪವಿತ್ರ ಭಾವನೆಯ ಸಂಕೇತಗಳು. ಮಾರುಕಟ್ಟೆಗೆ ಪ್ರವೇಶಿಸಿದಂತೆ ಯಾರೂ ಮಂದಿರಕ್ಕೆ ಪ್ರವೇಶಿಸುವುದಿಲ್ಲ. ಮಸೀದಿಗೆ ತೆರಳುವಾಗ ಇರುವ ಭಕ್ತಿ ಭಾವನೆಯು ಮದುವೆ ಸಭಾಂಗಣಕ್ಕೆ ಹೋಗುವಾಗ ಇರುವುದಿಲ್ಲ. ಆದರೆ ಪತ್ರಿಕೋದ್ಯಮದ ತುರ್ತುಗಳು ಮತ್ತು ಮನುಷ್ಯ ವಿರೋಧಿ ಮನಸುಗಳು ಒಟ್ಟುಗೂಡಿ ಈ ಪವಿತ್ರ ಸಂಕೇತಗಳನ್ನೇ ಭೀತಿಕಾರಕಗೊಳಿಸುವಲ್ಲಿ ಒಂದು ಹಂತದವರೆಗೆ ಇವತ್ತು ಯಶಸ್ವಿಯಾಗಿವೆ. ಈ ದೇಶದ ಯಾವ ಮದ್ರಸದಲ್ಲೂ ಬಾಬಾ ರಾಮ್‍ಪಾಲ್‍ರ ಆಶ್ರಮದಲ್ಲಿ ಸಿಕ್ಕಂತಹ ವಸ್ತುಗಳು ಈ ವರೆಗೂ ಸಿಗದಿದ್ದರೂ ಅವುಗಳನ್ನು ಸೂಜಿಮೊನೆಯಲ್ಲಿ ನಿಲ್ಲಿಸಿರುವುದಕ್ಕೆ ಈ ಕಾರಣಕ್ಕಿಂತ ಹೊರತಾದುದು ಏನೂ ಕಾಣಿಸುತ್ತಿಲ್ಲ. ಅಂದ ಹಾಗೆ, ಈ ದೇಶದ ಹೆಚ್ಚಿನೆಲ್ಲಾ ಮದ್ರಸಗಳ ಸ್ಥಿತಿ ಅತ್ಯಂತ ಶೋಚನೀಯವಾದದ್ದು. ಮೂಲಭೂತ ಸೌಕರ್ಯಗಳು ಇಲ್ಲದ, ಆಟದ ಮೈದಾನಗಳಂತಹ ವಿದ್ಯಾರ್ಥಿಸ್ನೇಹಿ ಪರಿಸರ ಇಲ್ಲದ, ಬಡ ಡೆಸ್ಕು, ಬೆಂಚು, ಕಪ್ಪು ಬೋರ್ಡು, ಚಾಕುಪೀಸುಗಳ ಪುಟ್ಟ ಜಗತ್ತಿನಲ್ಲಿ ಅವು ಉಸಿರಾಡುತ್ತಿವೆ. ಹೆಚ್ಚಿನೆಲ್ಲವೂ `ಬಡತನ ರೇಖೆಗಿಂತ' ಕೆಳಗಿರುವವುಗಳೇ. ಅಲ್ಲಿ ಕಲಿಸುವ ಮೌಲಾನರು ಕೂಡಾ ಬಡತನದ ಹಿನ್ನೆಲೆಯವರೇ. ಆರ್ಥಿಕವಾಗಿ ತೀರಾ ಸೋತು ಹೋಗಿರುವ ಒಂದು ಸಮುದಾಯದ ಕಲಿಕಾ ಕೇಂದ್ರಗಳು (ಮದ್ರಸಗಳು) ಎಲ್ಲ ಆಧುನಿಕ ಸೌಲಭ್ಯಗಳಿಂದ ಸುಸಜ್ಜಿತವಾಗಿರುವುದಕ್ಕೆ ಸಾಧ್ಯವೂ ಇಲ್ಲ. ಸಾಚಾರ್ ಸಮಿತಿಯ ವರದಿಯಲ್ಲಿ ಮುಸ್ಲಿಮರ ಸ್ಥಾನವು ದಲಿತರಿಗಿಂತ ಕೆಳಗಿರುವಾಗ ಆ ಸಮುದಾಯ ನಡೆಸುವ ಮದ್ರಸಗಳಾಗಲಿ ಮಸೀದಿಗಳಾಗಲಿ ಈ ಸ್ಥಾನದಿಂದ ಮೇಲೇರಿ ಗುರುತಿಸಿಕೊಳ್ಳುವುದನ್ನು ಯಾರೂ ಊಹಿಸಲಾರರು. ಒಂದು ರೀತಿಯಲ್ಲಿ, ಈ ದೇಶದ ಹೆಚ್ಚಿನೆಲ್ಲಾ ಮದ್ರಸಗಳಲ್ಲಿ ಕಲಿಸುವ ಮೌಲಾನಗಳಲ್ಲಿ ಮತ್ತು ಅಲ್ಲಿನ ಸೌಲಭ್ಯಗಳಲ್ಲಿ ದೊಡ್ಡದೊಂದು ಬಡತನದ ಛಾಯೆಯಿದೆ. ಇಂತಹ ಸ್ಥಿತಿಯಲ್ಲಿ, ಅವು ಬಾಂಬ್ ತಯಾರಿಕೆಯನ್ನು ಕಲಿಸುತ್ತವೆ ಎಂಬ ಆರೋಪವೇ ಅತ್ಯಂತ ಹೇಯವಾದದ್ದು. ಆದರೂ ದೇಶದಲ್ಲಿ ಅಂಥದ್ದೊಂದು ಆರೋಪವನ್ನು ಯಶಸ್ವಿಯಾಗಿ ಹೊರಿಸಲಾಗಿದೆ. ಕರ್ನಾಟಕದಲ್ಲಿರುವ ಎಲ್ಲ ಮದ್ರಸಗಳ ಒಟ್ಟು ಆಸ್ತಿಗೆ ಸಮಾನವಾಗುವಷ್ಟು ಸಂಪತ್ತನ್ನು ಕೇವಲ ಬಾಬಾ ರಾಮ್‍ಪಾಲ್‍ರ ಆಶ್ರಮವೊಂದೇ ಹೊಂದಿದ್ದರೂ ಮದ್ರಸಗಳು ಭಯೋತ್ಪಾದಕವಾಗಿಯೂ ರಾಮ್‍ಪಾಲ್‍ರ ಆಶ್ರಮ ಕ್ರಿಮಿನಲ್ ಆರೋಪಗಳಿಗಾಗಿಯೂ ಗುರುತಿಸಿಕೊಳ್ಳುತ್ತಿವೆ. ಬಹುಶಃ ಬಡ ಮದ್ರಸಗಳು ಮತ್ತು ಅದರ ಪುಟ್ಟ ಮಕ್ಕಳಿಗಿಲ್ಲದ ಕೆಲವೊಂದು ವಿಶೇಷತೆಗಳು ಇಂಥ ಆಶ್ರಮಗಳಿಗಿರುವುದೇ ಇದಕ್ಕೆ ಕಾರಣ. ಆಶ್ರಮಗಳಿಗಿರುವ ರಾಜಕೀಯ ಪ್ರಭಾವ ಮದ್ರಸಗಳಿಗಿಲ್ಲ. ಬೇಕಾದಾಗ ರಾಜಕೀಯ ಪಕ್ಷಗಳಿಗೆ ಕಪ್ಪುಹಣ ಒದಗಿಸುವ ತಾಕತ್ತೂ ಅವುಗಳಿಗಿಲ್ಲ. ವಿಜೃಂಭಣೆಯ ಕಾರ್ಯಕ್ರಮಗಳನ್ನು ನಡೆಸುವ ಸಂಪತ್ತೂ ಅವುಗಳ ಬಳಿಯಿಲ್ಲ. ಇಷ್ಟೆಲ್ಲ ದೌರ್ಬಲ್ಯಗಳನ್ನು ಹೊಂದಿರುವ ಕೇಂದ್ರಗಳು ವ್ಯವಸ್ಥೆಯ ಅವಕೃಪೆಗಲ್ಲದೇ ಕೃಪೆಗೆ ಪಾತ್ರವಾಗುವುದನ್ನು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಊಹಿಸುವುದು ತೀರಾ ಕಷ್ಟ.
   ಅಂದಹಾಗೆ, ಬಾಬಾ ರಾಮ್‍ಪಾಲ್‍ರ ಆಶ್ರಮದಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳ ವಿವರಗಳು ಪ್ರಕಟವಾದ ದಿನವೇ ಮದ್ರಸಗಳ ಸ್ಥಿತಿಗತಿಗಳ ಕುರಿತಂತೆ ಸರ್ವೇ ಆಧಾರಿತ ವರದಿ ಬೆಂಗಳೂರಿನಲ್ಲಿ ಬಿಡುಗಡೆಗೊಂಡದ್ದು ಕಾಕತಾಳೀಯವೇ ಆಗಿರಬಹುದು. ಆದರೆ, ಕೆಲವೊಮ್ಮೆ ಅಂಥ ಕಾಕತಾಳೀಯದಲ್ಲೂ ಸೂಕ್ಷ್ಮ ಸಂದೇಶಗಳಿರುತ್ತವೆ. ಮದ್ರಸಗಳನ್ನು ಕೆಲವು ವರ್ಷ ಗಳಿಂದ ಭೂತಗನ್ನಡಿಯಿಟ್ಟು ನೋಡುತ್ತಿದ್ದವರಿಗೆ ರಾಮ್‍ಪಾಲ್ ಒಂದು ಸವಾಲು ಎಸೆದಿದ್ದಾರೆ. ನಿಮ್ಮ ಭೂತಗನ್ನಡಿ ಎಷ್ಟು ಪ್ರಾಮಾಣಿಕವಾಗಿದೆ ಎಂಬುದೇ ಆ ಸವಾಲು. ಮದ್ರಸಗಳ ಮೇಲೆ ಪತ್ತೆದಾರಿ ಕ್ಯಾಮರಾ ಇಟ್ಟವರು ಮತ್ತು ಇಡಬಯಸುವವರು ಈ ಸವಾಲನ್ನು ಅತ್ಯಂತ ಪ್ರಾಮಾಣಿಕತೆಯಿಂದ ಸ್ವೀಕರಿಸಬೇಕಾಗಿದೆ. ಭಯೋತ್ಪಾದನೆ, ಅತ್ಯಾಚಾರ, ಹತ್ಯಾಕಾಂಡ ಕೋಮುವಾದ... ಇವೆಲ್ಲ ಯಾವುದಾದರೊಂದು ಧಾರ್ಮಿಕ ಪಾಠ ಪುಸ್ತಕದ ಉತ್ಪನ್ನವಲ್ಲ. ಅದೊಂದು ಮನಸ್ಥಿತಿ. ಆ ಮನಸ್ಥಿತಿಯ ಹುಟ್ಟಿಗೆ ಮನೆ, ಪರಿಸರ, ಸಹವಾಸ ಮತ್ತಿತರ ಸಂಗತಿಗಳು ಕಾರಣವೇ ಹೊರತು ನಿರ್ದಿಷ್ಟ ಧರ್ಮಗಳೋ ಅದರ ಕಲಿಕಾ ಕೇಂದ್ರಗಳೋ ಅಲ್ಲ. ಬಂಧನದ ಮೂಲಕ ರಾಮ್‍ಪಾಲ್ ಸಾರಿದ ಈ ಸಂದೇಶವನ್ನು ಮದ್ರಸ ಭಯೋತ್ಪಾದನೆ ಎಂಬ ಸುಳ್ಳು ಭೂತವನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಹಬ್ಬಿಸುತ್ತಿರುವ ಎಲ್ಲರೂ ಕೇಳಿಸಿಕೊಳ್ಳಬೇಕು. ಕೆಡುಕುನ್ನು ನಿರ್ದಿಷ್ಟ ಧರ್ಮಕ್ಕೆ ಅಥವಾ ಸಂಕೇತಗಳಿಗೆ ಸೇರಿಸದೆಯೇ ಜಾತ್ಯತೀತವಾಗಿ ನೋಡುವ ಪ್ರಾಮಾಣಿಕತೆ ಬೆಳೆದು ಬರಬೇಕು. ಮದ್ರಸದ ಕುರಿತಾದ ವರದಿಯ ಮೂಲಕ ಇಂಥದ್ದೊಂದು ಅವಲೋಕನಕ್ಕೆ ಪ್ರೇರಣೆ ಕೊಟ್ಟ ಎಸ್.ಐ.ಓ.ವನ್ನು ಅಭಿನಂದಿಸೋಣ. ಹಾಗೆಯೇ ರಾಮ್‍ಪಾಲ್‍ರಿಗೆ ಕೃತಜ್ಞತೆ ಸಲ್ಲಿಸೋಣ.

Wednesday, 19 November 2014

ಪ್ರತಿ ಪ್ರತಿಭಟನೆಯ ಅಗತ್ಯವನ್ನು ಸಾರಿದ ನಂದಿತಾ ಪ್ರಕರಣ

   
ತೀರ್ಥಹಳ್ಳಿ ಶಾಂತವಾಗಿದೆ. ನಂದಿತಾ ಎಂಬ ಮಗುವಿನ ಮೃತದೇಹವನ್ನು ನೆಪವಾಗಿಟ್ಟುಕೊಂಡು ನಿರ್ದಿಷ್ಟ ಮನೆಗಳಿಗೆ ಕಲ್ಲೆಸೆದವರು, ವಾಹನಗಳಿಗೆ ಬೆಂಕಿ ಕೊಟ್ಟವರು ಮತ್ತು ಅವಾಚ್ಯ ಪದಗಳನ್ನು ಬಳಸಿದವರೆಲ್ಲ ಈಗ ಮೌನವಾಗಿದ್ದಾರೆ. ಸಿಓಡಿ ತನಿಖೆಯ ಒಂದೊಂದೇ ವಿವರಗಳು ಮಾಧ್ಯಮಗಳ ಮೂಲಕ ಬಹಿರಂಗವಾಗುತ್ತಲೂ ಇವೆ. ನಂದಿತಾ ಪ್ರಕರಣವನ್ನು ಅವರು ಹಿಂದೂ ಮುಸ್ಲಿಮ್ ಆಗಿ ವಿಭಜಿಸಿದ್ದರು. ಆ ಮಗುವಿನ ಮೇಲೆ ಅತ್ಯಾಚಾರವಾಗಿದೆ ಎಂದು ಆರೋಪಿಸಿದ್ದರು. ಡೆತ್‍ನೋಟ್ ಆಕೆ ಬರೆದೇ ಇಲ್ಲ ಎಂದು ಹೇಳಿದ್ದರು. ಬಹುಶಃ, ಬದುಕಿರುವಾಗ ನಂದಿತಾ ಇಷ್ಟಪಡದೇ ಇರಬಹುದಾದ ವಾತಾವರಣವನ್ನು ಆಕೆಯ ಜಡದೇಹವನ್ನು ಮುಂದಿಟ್ಟುಕೊಂಡು ಅವರೆಲ್ಲ ಸೃಷ್ಟಿ ಮಾಡಿದರು. ಆ ಸಾವಿನ ಹೊಣೆಯನ್ನು ಮುಸ್ಲಿಮ್ ಸಮುದಾಯ ಹೊರಬೇಕು ಎಂಬ ರೀತಿಯಲ್ಲಿ ಆರೋಪಗಳೂ ಪ್ರಚಾರಗಳೂ ನಡೆದುವು. ಆದ್ದರಿಂದ, ಇದೀಗ ಸೃಷ್ಟಿಯಾಗಿರುವ ಶಾಂತ ವಾತಾವರಣವನ್ನು ಆ ಒಟ್ಟು ಪ್ರಕರಣದ ಅವಲೋಕನಕ್ಕಾಗಿ ಬಳಸಿಕೊಳ್ಳಬೇಕಿದೆ. ಮಗು ಯಾರದ್ದಾದರೂ ಮಗುವೇ. ಮಗುವಿನ ಹೆಸರು ‘ನಂದಿತಾ' ಎಂದಿರುವ ಕಾರಣಕ್ಕಾಗಿ ಆಕೆಯನ್ನು ಹಿಂದೂವಾಗಿಸುವುದು ಅಥವಾ ಆರೋಪಿಯ ಹೆಸರು ಸುಹಾನ್ ಎಂದಿದೆ ಎಂಬ ಕಾರಣಕ್ಕಾಗಿ ಆತನನ್ನು ಮುಸ್ಲಿಮ್ ಆಗಿಸುವುದು ಮತ್ತು ಈ ಆಧಾರದಲ್ಲಿಯೇ ಇಡೀ ಘಟನೆಯನ್ನು ನಾವು ಮತ್ತು ಅವರು ಎಂದು ವಿಭಜಿಸಿ ನೋಡುವುದೆಲ್ಲ ಧರ್ಮಗಳಿಗೆ ಮಾತ್ರವಲ್ಲ, ಆಯಾ ಧರ್ಮಗಳು ಸಾರುವ ಮಾನವತೆಯ ಸಂದೇಶಗಳಿಗೂ ವಿರುದ್ಧ. ಓರ್ವ ಸಂತ್ರಸ್ತೆ ಎಂಬ ನೆಲೆಯಲ್ಲಿ ನಂದಿತಾ ಎಲ್ಲರ ಮಗಳು. ಆದ್ದರಿಂದಲೇ ಆಕೆಯ ಮೇಲಾದ ಅನ್ಯಾಯವು ಹಿಂದೂ-ಮುಸ್ಲಿಮ್ ಎಂಬ ವರ್ಗೀಕರಣವಿಲ್ಲದೆ ಎಲ್ಲರ ಖಂಡನೆಗೂ ಅರ್ಹವಾದದ್ದು. ನಿಜವಾಗಿ, ನಂದಿತಾ ಪ್ರಕರಣದಲ್ಲಿ ಪ್ರತಿಭಟನೆಗೆ ಇಳಿಯಬೇಕಾದದ್ದು ಹಿಂದೂಗಳೋ ಮುಸ್ಲಿಮರೋ ಕ್ರೈಸ್ತರೋ ಆಗಿರಲಿಲ್ಲ. ಈ ವಿಭಜನೆಯ ಹಂಗಿಲ್ಲದೇ ಮನುಷ್ಯರೆಂಬ ನೆಲೆಯಲ್ಲಿ ಒಂದುಗೂಡಲು ಎಲ್ಲರಿಗೂ ಸಾಧ್ಯವಾಗಬೇಕಿತ್ತು. ದುರಂತ ಏನೆಂದರೆ, ಇವತ್ತು ಅನ್ಯಾಯಗಳೂ ಪ್ರತಿಭಟನೆಗಳೂ ವರ್ಗೀಕರಣಗೊಂಡುಬಿಟ್ಟಿವೆ. ಪ್ರತಿಭಟನೆ ಹಮ್ಮಿಕೊಳ್ಳುವವರಲ್ಲೂ ಬೇರೆ ಬೇರೆ ಉದ್ದೇಶಗಳಿವೆ. ಆ ಉದ್ದೇಶಗಳು ಕೆಲವೊಮ್ಮೆ ಎಷ್ಟು ಅಪಾಯಕಾರಿ ಎಂದರೆ ಅಂಥ ಪ್ರತಿಭಟನೆಯಲ್ಲಿ ಸ್ವತಃ ಸಂತ್ರಸ್ತ ಕುಟುಂಬವೇ ಭಾಗವಹಿಸಲಾರದಷ್ಟು. ಹೀಗಿರುವಾಗ, ಬೇರೆ ಬೇರೆ ಧರ್ಮಗಳಲ್ಲಿ ಗುರುತಿಸಿಕೊಂಡಿರುವ ಮಂದಿ ಆ ಗುರುತನ್ನು ಬದಿಗಿಟ್ಟು ಒಂದಾಗಬೇಕೆನ್ನುವ ಆಶಯವನ್ನು ಅಷ್ಟು ಸುಲಭದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ತೀರ್ಥಹಳ್ಳಿಯ ಪ್ರಕರಣವನ್ನೇ ಎತ್ತಿಕೊಳ್ಳಿ. ಆ ಪ್ರತಿಭಟನೆಯ ಗುರಿ ಏನಿತ್ತು? ಪ್ರತಿಭಟನಾಕಾರರ ಹಾವ-ಭಾವಗಳು ಹೇಗಿದ್ದುವು? ಅಲ್ಲಿ ಕೇಳಿ ಬರುತ್ತಿರುವ ಘೋಷಣೆಗಳು ಏನಾಗಿದ್ದುವು? ನಂದಿತಾಳ ಸಾವಿಗೆ ಕಾರಣ ಏನೆಂಬುದು ಖಚಿತಗೊಳ್ಳುವ ಮೊದಲೇ ಅವರು ಕಾರಣವನ್ನು ಪತ್ತೆಹಚ್ಚಿದವರಂತೆ ವರ್ತಿಸಿದ್ದರಲ್ಲದೇ ಅನ್ಯಾಯವನ್ನು ಖಂಡಿಸಬಯಸುವ ಮುಸ್ಲಿಮ್, ಕ್ರೈಸ್ತ ಮತ್ತು ಹಿಂದೂಗಳ ದೊಡ್ಡದೊಂದು ವರ್ಗವು ಅದರಲ್ಲಿ ಭಾಗವಹಿಸದಷ್ಟು ಆ ಪ್ರತಿಭಟನೆಯನ್ನು ಅವರು ಹದಗೆಡಿಸಿಬಿಟ್ಟಿದ್ದರು. ಇಡೀ ಪ್ರತಿಭಟನೆ ಏಕಮುಖವಾಗಿತ್ತು. ನಂದಿತಾಳ ಭಾವನೆಗಳನ್ನು ಪ್ರತಿನಿಧಿಸುವ ಏನೇನೂ ಅಲ್ಲಿರಲಿಲ್ಲ. ನಂದಿತಾ ಇಲ್ಲದ ಮನೆಯನ್ನು ಕಲ್ಪಿಸಿ ಕಣ್ಣೀರಾಗುವ ಹೆತ್ತವರಿಗೆ ಸಾಂತ್ವನವಾಗಬಹುದಾದದ್ದೂ ಅಲ್ಲಿರಲಿಲ್ಲ. ಯಾಕೆ ಹೀಗಾಯಿತೆಂದರೆ, ಪ್ರತಿಭಟನೆಯ ಕೇಂದ್ರೀಯ ಉದ್ದೇಶ ನಂದಿತಾ ಆಗಿಯೇ ಇರಲಿಲ್ಲ. ರಾಜಕೀಯ ಮತ್ತಿತರ ಅಂಶಗಳು ನಂದಿತಾಳ ನೆಪದಲ್ಲಿ ಮುನ್ನೆಲೆಗೆ ಬಂದುವು. ನಿಂದನೆ, ಬೈಗುಳ, ಬೆಂಕಿಯಿಡುವಿಕೆಗಳೆಲ್ಲ ಅದರದ್ದೇ ಉತ್ಪನ್ನ. ನಿಜವಾಗಿ, ಒಂದು ಮಗುವಿಗೆ ಸಲ್ಲಿಸುವ ಶ್ರದ್ಧಾಂಜಲಿಯ ಸ್ವರೂಪ ಈ ರೀತಿಯಲ್ಲಿರಬಾರದಿತ್ತು. ಸಮಾಜದ ಸರ್ವರೂ ಪಾಲುಗೊಳ್ಳುವ ಮತ್ತು ಮಗುವಿನ ಮೇಲಾದ ಅನ್ಯಾಯವನ್ನು ಏಕಧ್ವನಿಯಲ್ಲಿ ಪ್ರಶ್ನಿಸುವ ವಾತಾವರಣವೊಂದು ಕಾಣಿಸಿಕೊಳ್ಳಬೇಕಿತ್ತು. ಸದ್ಯ ತಣ್ಣಗಾಗಿರುವ ತೀರ್ಥಹಳ್ಳಿಯನ್ನು ಎದುರಿಟ್ಟುಕೊಂಡು ನಾವೆಲ್ಲ ಇಂಥ ಸಾಧ್ಯತೆಗಳ ಬಗ್ಗೆ ಚರ್ಚಿಸಬೇಕಿದೆ.
   ಅಂದಹಾಗೆ, ನಂದಿತಾಳ ಮೇಲೆ ಅನ್ಯಾಯ ಎಸಗಿದವರಿಗೆ ಶಿಕ್ಷೆ ಆಗುವುದಷ್ಟೇ ಇವತ್ತಿನ ಅಗತ್ಯ ಅಲ್ಲ, ಆಕೆಯ ಹೆಸರಲ್ಲಿ ಅನ್ಯಾಯ ಎಸಗಿದವರಿಗೆ ಶಿಕ್ಷೆ ಆಗಬೇಕಾದುದೂ ಅಷ್ಟೇ ಅಗತ್ಯ. ವಿಶೇಷ ಏನೆಂದರೆ, ಈ ದೇಶದಲ್ಲಿ ಇಂಥ ವಿಭಜನವಾದಿ ಪ್ರತಿಭಟನೆಗಳು ಆಗಾಗ ನಡೆಯುವುದಿದೆ. ತೀರ್ಥಹಳ್ಳಿಗಿಂತ ನಾಲ್ಕೈದು ತಿಂಗಳ ಮೊದಲು ಉತ್ತರ ಪ್ರದೇಶದ ವಿೂರತ್‍ನಲ್ಲೂ ಇಂಥದ್ದೇ ಪ್ರತಿಭಟನೆ ನಡೆದಿತ್ತು. ಪ್ರೀತಿಸಿದ ಎರಡು ಜೀವಗಳನ್ನು ಹಿಂದೂ-ಮುಸ್ಲಿಮ್ ಎಂದು ವಿಭಜಿಸಿ ಅದಕ್ಕೆ ಲವ್ ಜಿಹಾದ್ ಎಂಬೊಂದು ಹೆಸರನ್ನು ಕೊಟ್ಟು ಇಡೀ ರಾಜ್ಯವನ್ನೇ ಅಲುಗಾಡಿಸಲಾಗಿತ್ತು. ಸತ್ಯಾಸತ್ಯತೆ ಬಹಿರಂಗವಾಗುವುದಕ್ಕಿಂತ ಮೊದಲೇ ಪ್ರತಿಭಟನಾಕಾರರು ಇಡೀ ಪ್ರಕರಣವನ್ನು ತನಿಖೆ ನಡೆಸಿದವರಂತೆ ವರ್ತಿಸಿದ್ದರು. ನಿರ್ದಿಷ್ಟ ಧರ್ಮವನ್ನು ನಿಂದಿಸುವುದಕ್ಕೆ ಆ ಘಟನೆಯನ್ನು ಬಳಸಿಕೊಂಡಿದ್ದರು. ‘ಬಹು ಬನಾವೋ ಭೇಟಿ ಬಚಾವೋ’ ಎಂಬ ಅಭಿಯಾನವನ್ನು ಆ ಘಟನೆಯ ನೆಪದಲ್ಲಿ ಹಮ್ಮಿಕೊಂಡಿದ್ದರು. ನಮ್ಮ ಈಶ್ವರಪ್ಪನವರಂತೆ ಸಂಸದರಾದ ಮಹಂತ ಅವೈದ್ಯನಾಥ್ ಅಲ್ಲಿ ಮಾತಾಡಿದ್ದರು. ಹೀಗೆ ವಿೂರತ್ ನಗರ ಉರಿದ ಬಳಿಕ ಸತ್ಯವು ಬಹಿರಂಗವಾಯಿತು. ಸುಳ್ಳು ಹೇಳಿಕೆ ಕೊಡುವಂತೆ ಯುವತಿಯ ತಂದೆಗೆ ಲಂಚ ಕೊಡಲಾದದ್ದೂ ಸೇರಿ ಆ ಇಡೀ ವಾಸ್ತವಾಂಶಗಳು ಬೆಳಕಿಗೆ ಬಂದುವು. ಆದರೆ ಅವು ದೊಡ್ಡ ಸದ್ದು ಮಾಡಲಿಲ್ಲ. ದಿನಂಪ್ರತಿ ಸ್ವಲ್ಪಸ್ವಲ್ಪವೇ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಯಾಗಿ ತಣ್ಣಗಾಗಿ ಬಿಟ್ಟವು. ತೀರ್ಥಹಳ್ಳಿ ಕೂಡ ಸದ್ಯ ಅದೇ ಹಾದಿಯಲ್ಲಿ ಸಾಗುತ್ತಿರುವಂತಿದೆ. ಉದ್ವಿಗ್ನಗೊಂಡಿದ್ದ ತೀರ್ಥಹಳ್ಳಿ ಇವತ್ತು ಶಾಂತವಾಗಿದೆ. ಈ ವಾತಾವರಣದಲ್ಲಿ ನಂದಿತಾಳಿಗೆ ಸಂಬಂಧಿಸಿ ನಿಜ ವರದಿಗಳು ದಿನಂಪ್ರತಿ ವರದಿಯಾಗುತ್ತಿವೆ. ಒಂದು ರೀತಿಯಲ್ಲಿ, ತೀರ್ಥಹಳ್ಳಿಯನ್ನು ಉರಿಸಿದ ಪ್ರತಿಭಟನಾಕಾರರನ್ನು ಪ್ರಶ್ನಿಸಬೇಕಾದ ಸಂದರ್ಭ ಇದು. ನಂದಿತಾಳ ಮೇಲಾಗಿರಬಹುದಾದ ಅನ್ಯಾಯವನ್ನು ಸರ್ವ ಧರ್ಮೀಯರೂ ತಮ್ಮ ಮಗಳ ಮೇಲಿನ ಅನ್ಯಾಯ ಎಂದು ಪರಿಗಣಿಸಿ ಆಕೆಯ ಹೆಸರಲ್ಲಿ ತೀರ್ಥಹಳ್ಳಿಯನ್ನು ಉರಿಸಿದವರ ಉದ್ದೇಶ ಶುದ್ಧಿಯನ್ನು ಏಕಧ್ವನಿಯಲ್ಲಿ ಪ್ರಶ್ನಿಸಬೇಕಾಗಿದೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಬೇಕಾಗಿದೆ. ಸಮಾಜದ ಹಿತದೃಷ್ಟಿಯಿಂದ ಇಂಥದ್ದೊಂದು ಪ್ರತಿ ಪ್ರತಿಭಟನೆಯ ಅಗತ್ಯ ಇವತ್ತು ಬಹಳ ಇದೆ. ಸಮಾಜವನ್ನು ವಿಭಜಿಸುವ ಪ್ರತಿಭಟನೆಗಳಿಗೆ ಸಮಾಜದಿಂದ ಸವಾಲು ಎದುರಾಗುವುದು ಒಂದು ಆರೋಗ್ಯಕರ ಬೆಳವಣಿಗೆ. ಒಂದು ಘಟನೆಗೆ ಸುಳ್ಳು ಸ್ವರೂಪವನ್ನು ಕೊಟ್ಟು ಸಮಾಜವನ್ನು ವಿಭಜಿಸಿದವರನ್ನು ಸತ್ಯ ಸುದ್ದಿ ಹೊರಬಿದ್ದ ಬಳಿಕ ತರಾಟೆಗೆತ್ತಿಕೊಳ್ಳುವುದರಿಂದ ದೊಡ್ಡದೊಂದು ಬದಲಾವಣೆ ಸಾಧ್ಯವಿದೆ. ಹೀಗೆ ಮಾಡಿದರೆ, ವದಂತಿಗಳನ್ನು ಹರಡುವವರು ಆ ಬಳಿಕ ತುಸು ಎಚ್ಚರಿಕೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕೆ ಅವಕಾಶವಿದೆ. ಅದೇ ರೀತಿ ವ್ಯವಸ್ಥೆಯ ಮೇಲೂ ಈ ಕುರಿತಂತೆ ಒತ್ತಡ ಹೇರಬೇಕಾಗಿದೆ. ಅನ್ಯಾಯವನ್ನು ಒಂದು ನಿರ್ದಿಷ್ಟ ಸಮುದಾಯದ ಮೇಲೆ ಹೇರಿ ರಾಜಕೀಯವೋ ಇನ್ನಾವುದೋ ಲಾಭವನ್ನು ಪಡಕೊಳ್ಳುವುದಕ್ಕೆ ಪ್ರಯತ್ನಿಸುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕಾದ ಅಗತ್ಯವೂ ಇದೆ. ಇಲ್ಲದಿದ್ದರೆ ಈ ಸಮಾಜವನ್ನು ಉದ್ವಿಗ್ನಗೊಳಿಸುವುದಕ್ಕೆ ನಾಳೆ ಇನ್ನೊಂದು ಪ್ರಕರಣ ಹೇತುವಾಗಬಹುದು. ಸತ್ಯದ ಎದೆಗೆ ತುಳಿದಂತೆ ಅದರ ವ್ಯಾಖ್ಯಾನಗಳು ನಡೆಯಬಹುದು. ಮತ್ತೆ ಕಲ್ಲೆಸೆತ, ಬೆಂಕಿ, ಕರ್ಫ್ಯೂಗಳಿಗೂ ಅದು ಕಾರಣವಾಗಬಹುದು. ಅದಾಗುವುದಕ್ಕಿಂತ ಮೊದಲು ಪ್ರತಿ ಪ್ರತಿಭಟನೆಗಳ ಏರ್ಪಾಡುಗಳು ನಡೆಯಬೇಕು. ಹಿಂದೂ-ಮುಸ್ಲಿಮ್-ಕ್ರೈಸ್ತ ಎಂಬ ಗುರುತುರಹಿತ ಪಾಲುಗೊಳ್ಳುವಿಕೆಗಳು ಆ ಪ್ರತಿಭಟನೆಯಲ್ಲಿ ನಡೆಯಬೇಕು. ಸುಳ್ಳನ್ನು ಹರಡಿ ಸಮಾಜವನ್ನು ಉದ್ವಿಗ್ನಗೊಳಿಸುವವರನ್ನು ಬಹುಸಂಖ್ಯಾತ ಸಮಾಜವು ತಿರಸ್ಕರಿಸುವುದಕ್ಕೆ ಮುಂದಾಗುವಷ್ಟು ಆ ಪ್ರತಿಭಟನೆ ಪ್ರಭಾವಶಾಲಿಯಾಗಬೇಕು. ನಂದಿತಾ ಪ್ರಕರಣವು ಇಂಥದ್ದೊಂದು ಬೆಳವಣಿಗೆಗೆ ಕಾರಣವಾಗುವುದಾದರೆ ಖಂಡಿತ ಆ ಸಾವನ್ನು ಬಲಿದಾನವೆಂದೇ ಸ್ವೀಕರಿಸಿ ಗೌರವಿಸೋಣ.

Tuesday, 11 November 2014

ಜನನ ಪ್ರಕ್ರಿಯೆಯೇ ನಿಂತು ಹೋಗುವ ಜೀವನಕ್ರಮವನ್ನು ಬೆಂಬಲಿಸಬೇಕೇ?

    
   ಮೊನ್ನೆ ಅಕ್ಟೋಬರ್ 30ರಂದು ಅಮೇರಿಕದ ಬ್ಲೂಮ್‍ಬರ್ಗ್ ಬಿಸಿನೆಸ್ ವೀಕ್ ಪತ್ರಿಕೆಯಲ್ಲಿ ಪ್ರಕಟವಾದ ಬರಹವೊಂದಕ್ಕೆ ಪ್ರತಿಕ್ರಿಯೆಯಾಗಿ ಮರುದಿನ ಅಕ್ಟೋಬರ್ 31ರಂದು ರಶ್ಯದಲ್ಲಿ ಸ್ಮಾರಕವೊಂದನ್ನು ಉರುಳಿಸಲಾಯಿತು. ವಿಶ್ವಪ್ರಸಿದ್ಧ ಆ್ಯಪಲ್ ಕಂಪೆನಿಯ ಸ್ಥಾಪಕ ಅಮೇರಿಕದ ಸ್ಟೀವ್ ಜಾಬ್ಸ್ ರ ಈ ಸ್ಮಾರಕವನ್ನು ರಶ್ಯಾದ ಸೈಂಟ್ ಪೀಟರ್ಸ್‍ಬರ್ಗ್ ಕಾಲೇಜಿನ ಎದುರುಗಡೆ  2013 ಜನವರಿಯಲ್ಲಿ ಸ್ಥಾಪಿಸಲಾಗಿತ್ತು. ಸ್ಟೀವ್ ಜಾಬ್ಸ್ ರಿಗೆ ಜಾಗತಿಕವಾಗಿಯೇ ವಿಶೇಷ ಮನ್ನಣೆಯಿದೆ. ಅವರ ಸುತ್ತ ಬೆರಗಿನ ನೂರಾರು ಕತೆಗಳಿವೆ. ಶೂನ್ಯದಿಂದ ಒಂದು ಕಂಪೆನಿಯನ್ನು ಕಟ್ಟಿ ಬೆಳೆಸುವಲ್ಲಿ ಅವರು ತೋರಿದ ತಾಳ್ಮೆ, ಬುದ್ಧಿವಂತಿಕೆ, ಶ್ರಮ, ಉತ್ಸಾಹಗಳೆಲ್ಲ ಇವತ್ತು ಕೋಟ್ಯಂತರ ಮಂದಿಯನ್ನು ಪ್ರಭಾವಿತಗೊಳಿಸಿವೆ. ವರ್ಷಗಳ ಹಿಂದೆ ಕ್ಯಾನ್ಸರ್‍ನಿಂದಾಗಿ ಅವರು ಮೃತಪಟ್ಟಾಗ ಝೆಪ್ಸ್(ZEFS) ಎಂಬ ಹೆಸರಿನ ರಶ್ಯಾದ ಉದ್ಯಮಿಗಳ ಸಂಘಟನೆಯು ಅವರನ್ನು ಸ್ಮಾರಕವಾಗಿ ನಿಲ್ಲಿಸಬೇಕೆಂದು ತೀರ್ಮಾನಿಸಿತು. ಅದರಂತೆ ಎರಡು ವಿೂಟರ್ ಎತ್ತರದ ಮತ್ತು ಐ ಪೋನ್ (i Phone) ಆಕೃತಿಯ ಸ್ಮಾರಕವು 2013 ಜನವರಿಯಲ್ಲಿ ಸೈಂಟ್ ಪೀಟರ್ಸ್‍ಬರ್ಗ್‍ನಲ್ಲಿ ತಲೆ ಎತ್ತಿತು. ರಶ್ಯಾ ಮತ್ತು ಅಮೇರಿಕದ ಮಧ್ಯೆ ಸಂಬಂಧ ಉತ್ತಮವಾಗಿಲ್ಲದಿದ್ದರೂ ಜಾಬ್ಸ್ ಆ ಸಂಬಂಧಗಳಾಚೆಗೆ ಪ್ರಭಾವವನ್ನು ಬೀರಿದ್ದ. ಆದರೆ ಅದೇ ಆ್ಯಪಲ್ ಕಂಪೆನಿಯ ನೂತನ ಮುಖ್ಯಸ್ಥ (ಸಿಇಓ) ಅಮೇರಿಕದ ಟಿಮ್ ಕುಕ್‍ರು ತಾನು ಸಲಿಂಗ ಕಾಮಿ (ಗೇ) ಎಂದು ಬಿಸಿನೆಸ್ ವೀಕ್ ಪತ್ರಿಕೆಯಲ್ಲಿ ಮೊನ್ನೆ ಅಕ್ಟೋಬರ್ 30ರಂದು ಘೋಷಿಸಿದರು. ತನ್ನ ರಾಜ್ಯವಾದ ಅಲಬಾಮದಲ್ಲಿ ‘ಗೇ' ಮದುವೆಗೆ ಅನುಮತಿಯಿಲ್ಲದಿರುವುದನ್ನು ಅವರು ಟೀಕಿಸಿದರು. ಸಲಿಂಗ ಕಾಮವು ತನ್ನ ಹಕ್ಕು ಮತ್ತು ಸ್ವಾತಂತ್ರ್ಯ ಎಂದು ಅವರು ಪ್ರತಿಪಾದಿಸಿದರು. ಇದರ ಮರುದಿನವೇ ಜಾಬ್ಸ್ ರ ಸ್ಮಾರಕವನ್ನು ರಶ್ಯಾದಲ್ಲಿ ಉರುಳಿಸಲಾಯಿತು. ಸಲಿಂಗ ಕಾಮದ ಪರ ಪ್ರಚಾರಾಂದೋಲನವನ್ನು ತಡೆಗಟ್ಟಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕೆಂದು ಝೆಪ್ಸ್ ಆಗ್ರಹಿಸಿತು. ಒಂದು ವೇಳೆ ಸ್ಟೀವ್ ಜಾಬ್ಸ್ ರ ಪ್ರತಿಮೆಯನ್ನು ತೆರವುಗೊಳಿಸದಿದ್ದರೆ ಅದು ಮುಂದೆ ಸಲಿಂಗ ಹೋರಾಟಕ್ಕೆ ಪ್ರೇರಣೆ ನೀಡಲು ಅವಕಾಶವಿದೆ ಎಂದೂ ಅದು ವಾದಿಸಿತು.
 ಒಂದು ರೀತಿಯಲ್ಲಿ, ನೈತಿಕ-ಅನೈತಿಕಗಳು ಅನಾದಿ ಕಾಲದಿಂದಲೂ ಚರ್ಚೆಗೊಳಗಾಗುತ್ತಾ ಬಂದಿದೆ. ಜಗತ್ತು ಬೌದ್ಧಿಕವಾಗಿ ಮತ್ತು ತಾಂತ್ರಿಕವಾಗಿ ವಿಕಸಿತವಾದಂತೆಲ್ಲ ಇಂಥ ಚರ್ಚೆಗಳು ಬಿರುಸನ್ನು ಪಡೆಯುತ್ತಲೂ ಇವೆ. ವೇಶ್ಯಾವಾಟಿಕೆ ಕಾನೂನುಬದ್ಧಗೊಳ್ಳಬೇಕೋ ಬೇಡವೋ ಎಂಬುದು ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ಹುಟ್ಟಿಕೊಂಡ ಚರ್ಚೆ. ಸಲಿಂಗ ಮದುವೆಗೆ ಅನುಮತಿ ನೀಡಬೇಕೆಂದು ಕೋರಿ ಈಗಾಗಲೇ ಸುಪ್ರೀಮ್ ಕೋರ್ಟಿಗೆ ಅರ್ಜಿಯನ್ನೂ ಸಲ್ಲಿಸಲಾಗಿದೆ. ಬಹುಶಃ, ಮುಂದಿನ ದಿನಗಳಲ್ಲಿ ಇಂಥ ಅರ್ಜಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲೂ ಬಹುದು. ಯಾಕೆಂದರೆ, ಪ್ರಕೃತಿ ನಿಯಮವನ್ನು ವಿೂರುವುದೇ ಬದುಕು ಎಂದು ಆಲೋಚಿಸುವ ಮತ್ತು ಅದನ್ನು ತನ್ನ ಸ್ವಾತಂತ್ರ್ಯವೆಂದು ಪ್ರತಿಪಾದಿಸುವ ಬೆಳವಣಿಗೆಗಳಿಗೆ ಆಧುನಿಕ ಜಗತ್ತಿನಲ್ಲಿ ಮಾನ್ಯತೆ ಲಭ್ಯವಾಗುತ್ತಿದೆ. ತೋಚಿದಂತೆ ಬದುಕುವುದನ್ನೇ ಜೀವನ ಕ್ರಮ ಎಂದು ಹೇಳಿಕೊಡಲಾಗುತ್ತಿದೆ. ಈ ಜೀವನ ಕ್ರಮದಲ್ಲಿ ವೇಶ್ಯಾವಾಟಿಕೆಯೂ ಸ್ವಾತಂತ್ರ್ಯ. ಸಲಿಂಗ ರತಿಯೂ ಸ್ವಾತಂತ್ರ್ಯ. ಲಿವ್ ಇನ್ ಟುಗೆದರೂ ಸ್ವಾತಂತ್ರ್ಯ. ಆದರೆ ಇವುಗಳ ಜೊತೆಗೇ ಕೆಲವು ಪ್ರಶ್ನೆಗಳೂ ಉದ್ಭವಿಸುತ್ತವೆ. ಇಂಥ ಸ್ವಾತಂತ್ರ್ಯಗಳು ಅಂತಿಮವಾಗಿ ಸಮಾಜವನ್ನು ಎಲ್ಲಿಗೆ ತಲುಪಿಸಬಲ್ಲುದು? ಜನನ ಮತ್ತು ಮರಣ ಎಂಬುದು ಪ್ರಕೃತಿ ನಿಯಮ. ಅದರಲ್ಲೊಂದು ಸಮತೋಲನದ ಉದ್ದೇಶವಿದೆ. ಆ ಸಮತೋಲನದ ಮೇಲೆ ಮಾನವ ಜಗತ್ತು ಸ್ವಾಮ್ಯವನ್ನು ಪಡಕೊಳ್ಳಲು ಪ್ರಯತ್ನಿಸಿದಾಗಲೆಲ್ಲ ಪ್ರಕೃತಿ ಮುನಿದಿದೆ. ತನ್ನ ಅಸಮಾಧಾನವನ್ನು ವಿವಿಧ ರೂಪದಲ್ಲಿ ಹೊರಗೆಡಹಿದೆ. ಕುಟುಂಬಕ್ಕೊಂದೇ ಮಗು ಎಂಬ ಕಾನೂನನ್ನು ಅತ್ಯಂತ ಕಠಿಣವಾಗಿ ಜಾರಿಗೊಳಿಸಿದ ದೇಶ ಚೀನಾ. ಆ ನಿಯಮವು ಇವತ್ತು ಚೀನಾದ ಲಿಂಗಾನುಪಾತದಲ್ಲಿ ಎಷ್ಟು ಆಳವಾದ ಗಾಯವನ್ನು ಮೂಡಿಸಿಬಿಟ್ಟಿದೆಯೆಂದರೆ, ಇದೀಗ ಆ ನಿಯಮವನ್ನೇ ಸಡಿಲಿಸಬೇಕಾಗಿ ಬಂದಿದೆ. ಒಂದೇ ಮಗು ಎಂದಾಗ ಹೆಚ್ಚಿನ ಕುಟುಂಬಗಳೆಲ್ಲ ಗಂಡು ಮಗುವನ್ನೇ ಬಯಸಿದುವು. ಹೆಣ್ಣು ಮಕ್ಕಳನ್ನು ಹೊಟ್ಟೆಯಲ್ಲೇ ಕೊಲ್ಲುವ ಕ್ರೌರ್ಯಕ್ಕೂ ಅದು ಕಾರಣವಾಯಿತು. ಚೀನಾ ಎಂದಲ್ಲ ನಮ್ಮದೇ ದೇಶದ ಹರ್ಯಾಣ ಮತ್ತಿತರ ರಾಜ್ಯಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ತೀವ್ರ ಕುಸಿತಕ್ಕೆ ಪ್ರಕೃತಿ ವಿರೋಧಿ ಗಂಡು ಪ್ರೇಮವೇ ಕಾರಣವಾಗಿದೆ. ಹರ್ಯಾಣದಲ್ಲಿ ಇವತ್ತು ಹೆಣ್ಣಿನ ಬರ ಎಷ್ಟು ಬಿಗಡಾಯಿಸಿದೆ
ಟಿಮ್ ಕುಕ್‍
ಎಂದರೆ ಬಿಹಾರದಿಂದ ವಧುಗಳನ್ನು ಹರ್ಯಾಣಕ್ಕೆ ತಂದು ಮದುವೆ ಮಾಡಿಸಲಾಗುತ್ತಿದೆ. ವಧುಗಳ ಬರದಿಂದ ಹರ್ಯಾಣದ ಪುರುಷ ಜಗತ್ತು ಕಂಗೆಟ್ಟಿದೆ. ಇಂಥ ಸ್ಥಿತಿಯಲ್ಲಿ ಸಲಿಂಗ ಕಾಮದ ಕಾನೂನು ಬದ್ಧತೆಯನ್ನೊಮ್ಮೆ ಕಲ್ಪಿಸಿಕೊಳ್ಳಿ. ಈ ಜೀವನ ಕ್ರಮದಲ್ಲಿ ಗಂಡು-ಗಂಡನ್ನು ವಿವಾಹವಾಗುತ್ತಾನೆ ಅಥವಾ ಒಟ್ಟಾಗಿ ಬದುಕುತ್ತಾನೆ. ದೈಹಿಕ ಸುಖವನ್ನು ಪರಸ್ಪರ ಹಂಚಿಕೊಳ್ಳಲಾಗುತ್ತದೆ.
 ನಿಜವಾಗಿ, ಹೆಣ್ಣು ಮತ್ತು ಗಂಡಿನ ನಡುವೆ ಪ್ರಕೃತಿಯೇ ಅನುರಾಗವನ್ನು ಇಟ್ಟಿದೆ. ಆ ಅನುರಾಗದ  ಹಿಂದೆ ಇರುವ ಉದ್ದೇಶವು ಕೇವಲ ದೈಹಿಕ ಸುಖವನ್ನು ಹಂಚಿಕೊಳ್ಳುವುದು ಮಾತ್ರವೇ ಅಲ್ಲ. ಆ ಅನುರಾಗದ ಮೂಲಕ ಜನನ ಪ್ರಕ್ರಿಯೆಗೆ ಒಂದು ವೇದಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಮದುವೆ ಎಂಬ ಸಾಮಾಜಿಕ ಮಾನ್ಯತೆಯಡಿಯಲ್ಲಿ ಹೆಣ್ಣು-ಗಂಡು ಒಟ್ಟಾಗುತ್ತಾರೆ. ಆ ಮೂಲಕ ಭವಿಷ್ಯದ ಪೀಳಿಗೆಯ ಉದಯವನ್ನೂ ನಿರೀಕ್ಷಿಸಲಾಗುತ್ತದೆ. ಹೀಗೆ ಹೆಣ್ಣು-ಗಂಡು ಪರಸ್ಪರ ಆಕರ್ಷಿತಗೊಳ್ಳುವುದು, ಮದುವೆಯಲ್ಲಿ ಒಂದಾಗುವುದು ಮತ್ತು ಹೊಸ ಪೀಳಿಗೆಗೆ ಜನ್ಮ ಕೊಡುವ ಮೂಲಕ ಮಾನವ ಸಂತತಿಯ ಬೆಳವಣಿಗೆಯು ಮುಂದುವರಿಯುವಂತೆ ನೋಡಿಕೊಳ್ಳಲಾಗುತ್ತದೆ. ಆದರೆ ಸಲಿಂಗ ಮದುವೆಯಲ್ಲಿ ಈ ಪ್ರಕ್ರಿಯೆಗೆ ಅವಕಾಶಗಳೇ ಇಲ್ಲ. ಸಲಿಂಗ ಕಾಮ ಎಂಬುದು ಕೇವಲ ದೈಹಿಕ ಸುಖವನ್ನು ಅನುಭವಿಸುವುದಕ್ಕಿರುವ ಒಂದು ವೇದಿಕೆಯೇ ಹೊರತು ಅದರಿಂದ ಮಾನವ ಜಗತ್ತಿಗೆ ಯಾವ ಕೊಡುಗೆಯೂ ಸಿಗುವುದಿಲ್ಲ. ಅದೊಂದು ಒಣ ಬದುಕು. ಅಲ್ಲಿ ಮಕ್ಕಳಿಲ್ಲ. ಆದ್ದರಿಂದಲೇ ಆ ಬದುಕು ಅವರಲ್ಲಿಗೇ ಕೊನೆಗೊಳ್ಳುತ್ತದೆ. ಅಂದಹಾಗೆ, ಸಲಿಂಗ ಕಾಮವು ಸ್ವಾತಂತ್ರ್ಯದ ಹೆಸರಲ್ಲಿ ಕಾನೂನುಬದ್ಧಗೊಂಡರೆ, ಅದು ಬೀರುವ ಪರಿಣಾಮ ಹೇಗಿರಬಹುದು? ಸಲಿಂಗ ಮದುವೆಗಳು ಜನಪ್ರಿಯಗೊಳ್ಳುವುದರಿಂದ ಸಮಾಜದಲ್ಲಿ ಏನೇನು ಬದಲಾವಣೆಗಳಾಗಬಹುದು? ಗದ್ದೆಗಳು, ಕಾರ್ಖಾನೆಗಳು, ಶಾಲೆಗಳು ಸಹಿತ ವಿವಿಧ ಕ್ಷೇತ್ರಗಳ ಪರಿಸ್ಥಿತಿ ಹೇಗಿದ್ದೀತು? ಜನನ ಪ್ರಕ್ರಿಯೆ ನಿಂತು ಹೋದ ಅಥವಾ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಸಮಾಜದಲ್ಲಿ ಗದ್ದೆಯನ್ನು ಉಳುವವರಾದರೂ ಯಾರಿರುತ್ತಾರೆ? ಮಕ್ಕಳು, ಕುಟುಂಬ ಎಂಬೊಂದು ಪರಿಸರವೇ ಓರ್ವರನ್ನು ಗದ್ದೆ ಉಳುವುದಕ್ಕೆ, ಬೆಳೆ ಬೆಳೆಯುವುದಕ್ಕೆ ಅಥವಾ ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಹೆಚ್ಚಿನ ಬಾರಿ ಪ್ರೇರೇಪಿಸುತ್ತದೆ. ಮಕ್ಕಳೇ ಇಲ್ಲದ ಕುಟುಂಬದಲ್ಲಿ ಕೃಷಿ ಚಟುವಟಿಕೆ, ಸಂಪಾದನೆಯ ಉತ್ಸಾಹ ಸಹಜವಾಗಿಯೇ ಕಡಿಮೆ. ಹಾಗೆಯೇ, ಯುವ ಪೀಳಿಗೆಯ ಅಭಾವದಿಂದಾಗಿ ಕಾರ್ಖಾನೆಗಳು ಮುಚ್ಚಬಹುದು. ಉತ್ಪಾದನಾ ರಂಗದಲ್ಲಿ ತೀವ್ರ ಕುಸಿತ
ಉಂಟಾಗಬಹುದು. ಶಾಲೆಗಳ ಅಗತ್ಯವೇ ಕಂಡುಬರಲಾರದು. ಅಂಥದ್ದೊಂದು ಸಾಧ್ಯಾಸಾಧ್ಯತೆ ಎದುರಿರುವುದರಿಂದಲೇ ಪವಿತ್ರ ಕುರ್‍ಆನ್ ಸಹಿತ ಧಾರ್ಮಿಕ ಗ್ರಂಥಗಳು ಸಲಿಂಗ ಕಾಮವನ್ನು ಕಠಿಣವಾಗಿ ವಿರೋಧಿಸಿವೆ. ಮಾತ್ರವಲ್ಲ, ಈ ಕೃತ್ಯವನ್ನು ಜೀವನ ಕ್ರಮವಾಗಿ ಅಳವಡಿಸಿಕೊಂಡಿದ್ದ ಲೂತ್ ಎಂಬ ಹೆಸರಿನ ಪುರಾತನ ಸಮೂಹವೇ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವುದನ್ನು (ಅಧ್ಯಾಯ 11) ವಿವರಿಸಿದೆ.
 ಏನೇ ಆಗಲಿ, ಪ್ರಕೃತಿ ಮತ್ತು ವಿಕೃತಿಗಳ ನಡುವೆ ಎಷ್ಟೆಲ್ಲ ಅರ್ಥ ವ್ಯತ್ಯಾಸ ಮತ್ತು ಭಾವ ವ್ಯತ್ಯಾಸಗಳಿವೆಯೋ ಅಷ್ಟೇ ವ್ಯತ್ಯಾಸ ಸಲಿಂಗ ಕಾಮ ಮತ್ತು ವ್ಯಕ್ತಿ ಸ್ವಾತಂತ್ರ್ಯದ ನಡುವೆಯೂ ಇದೆ. ಅವೆರಡರ ನಡುವೆ ಪರಸ್ಪರ ಸಂಧಿಸದಷ್ಟು ಅಂತರವಿದೆ. ಸ್ವಾತಂತ್ರ್ಯವು ಪ್ರಕೃತಿದತ್ತವಾದರೆ ಸಲಿಂಗ ಕಾಮವು ಪ್ರಕೃತಿ ವಿರೋಧಿ. ಅವೆರಡರ ನಡುವೆ ಸಂಘರ್ಷ ಏರ್ಪಡಬಹುದೇ ಹೊರತು ಸಹಮತವಲ್ಲ. ಟಿಮ್ ಕುಕ್‍ರ ಬರಹಕ್ಕೆ ಉರುಳಿದ ಸ್ಟೀವ್ ಜಾಬ್ಸ್ ರ ಸ್ಮಾರಕವೇ ಇದಕ್ಕೆ ಅತ್ಯುತ್ತಮ ಪುರಾವೆ.

Tuesday, 4 November 2014

ಒಂದು ಸಾವಿನ ಸುತ್ತ..

   ವಾರನ್ ಆ್ಯಂಡರ್ಸನ್ ಎಂಬ ಕಾರ್ಪೋರೇಟ್ ದೊರೆಯ ಸಾವು ಮತ್ತು ಅಂತ್ಯ ಸಂಸ್ಕಾರವು ಜಗತ್ತಿನ ಗಮನಕ್ಕೆ ಬಾರದೆಯೇ ನಡೆದು ಹೋಗಿದೆ. ಅಮೇರಿಕದ ಫ್ಲೋರಿಡಾದಲ್ಲಿರುವ ವೆರೋ ಬೀಚ್ ನರ್ಸಿಂಗ್ ಹೋಮ್‍ನಲ್ಲಿ ಸೆ. 29ರಂದು ಆತ ಮೃತಪಟ್ಟಿದ್ದರೂ ಅದನ್ನು ಆತನ ಕುಟುಂಬಸ್ಥರು ಒಂದು ತಿಂಗಳ ಬಳಿಕ ಮೊನ್ನೆ ಅಕ್ಟೋಬರ್ 31ರಂದು ಜಗತ್ತಿನ ಗಮನಕ್ಕೆ ತಂದಿದ್ದಾರೆ. ಮರುದಿನವೇ ಮಧ್ಯಪ್ರದೇಶದಲ್ಲಿ ರಾಲಿಗಳು ನಡೆದಿವೆ. ಆ ಸಾವನ್ನು ‘ದೇವನು ಕೊಟ್ಟ ಶಿಕ್ಷೆ' ಎಂದು ಆ ರಾಲಿಯಲ್ಲಿ ಬಣ್ಣಿಸಲಾಗಿದೆ. ನಿಜವಾಗಿ, 1984 ಡಿಸೆಂಬರ್ 2ರ ವರೆಗೆ ವಾರನ್ ಆ್ಯಂಡರ್ಸನ್ ಜಗತ್ತಿನ ಬಹುದೊಡ್ಡ ಗೌರವಾರ್ಹ ವ್ಯಕ್ತಿ. ಅತಿ ದೊಡ್ಡ ಕಾರ್ಪೋರೇಟ್ ಕುಳ. ಆತ ಯೂನಿಯನ್ ಕಾರ್ಬೈಡ್ ಕಾರ್ಪೋರೇಶನ್ನಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ (CEO) ಬೆಳೆದು ಬಂದ ರೀತಿಯನ್ನು ಮಧ್ಯಪ್ರದೇಶದಲ್ಲಿ ಮಾತ್ರವಲ್ಲ, ಅಮೇರಿಕದಲ್ಲೂ ಅತ್ಯಂತ ಅಚ್ಚರಿಯೊಂದಿಗೆ ವರ್ಣಿಸಲಾಗುತ್ತಿತ್ತು. ಆತ ಸಾಹಸಮಯ ಕತೆಯೊಂದರ ಪಾತ್ರವಾಗಿದ್ದ. ಅಮೇರಿಕಕ್ಕೆ ವಲಸೆ ಬಂದ ಕುಟುಂಬವೊಂದರಲ್ಲಿ 1921ರಲ್ಲಿ ಓರ್ವ ಕಾರ್ಪೆಂಟರ್‍ನ ಮಗನಾಗಿ ಜನಿಸಿದ್ದು, ಯೂನಿಯನ್ ಕಾರ್ಬೈಡ್ ಕಂಪೆನಿಯಲ್ಲಿ ಸೇಲ್ಸ್‍ಮ್ಯಾನ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದು ಮತ್ತು ಕ್ರಮೇಣ ಆ ಕಂಪೆನಿಯ ಸಿಇಓ ಆದದ್ದು.. ಎಲ್ಲವೂ ಹಲವಾರು ಭಾಷಣಗಳಿಗೆ ವಸ್ತುವಾಗಿತ್ತು. ಆ ಬಗ್ಗೆ ಬರಹಗಳೂ ಪ್ರಕಟವಾಗಿದ್ದುವು. ಆ್ಯಂಡರ್ಸನ್‍ನ ಆಕೃತಿಯು ಈ ಮಟ್ಟದಲ್ಲಿ ಅಜಾನುಬಾಹು ರೂಪ ಪಡೆದಿದ್ದರಿಂದಲೇ 1984 ಡಿ. 6ರಂದು ಭೋಪಾಲ್ ಅನಿಲ ದುರಂತ ಆರೋಪದಲ್ಲಿ ಆತನ ಬಂಧನವಾದಾಗ ಖ್ಯಾತ ಉದ್ಯಮಿ ಜೆ.ಆರ್.ಡಿ. ಟಾಟಾರವರು ಆಘಾತ ವ್ಯಕ್ತಪಡಿಸಿದ್ದು. ಆ್ಯಂಡರ್ಸನ್‍ನ ಬಂಧನವು ತನ್ನನ್ನು ಗಾಬರಿ ಮತ್ತು ಬೆರಗುಗೊಳಿಸಿದೆ ಎಂದವರು ಹೇಳಿದ್ದರು. ಭಾರತೀಯ ಉದ್ಯಮ ವಲಯವು ಬಂಧನವನ್ನು ಅನ್ಯಾಯದ ಕ್ರಮ ಎಂದು ಖಂಡಿಸಿದ್ದುವು. ಬಹುಶಃ ಬಂಧನದ ಮರುದಿನವೇ ಜಾವಿೂನು ಪಡೆದುಕೊಂಡು ಸರಕಾರ ವ್ಯವಸ್ಥೆ ಮಾಡಿದ ವಿಶೇಷ ವಿಮಾನದಲ್ಲಿ ಆತ ಅಮೇರಿಕಕ್ಕೆ ಹಾರಿರುವುದಕ್ಕೆ ಉದ್ಯಮ ವಲಯದ ಈ ಆಘಾತ, ಖಂಡನೆ, ಅಚ್ಚರಿಗಳು ದೊಡ್ಡ ಪಾತ್ರ ವಹಿಸಿರಬಹುದು. ಹಾಗೆ ತೆರಳಿದ ಆ್ಯಂಡರ್ಸನ್ ಮತ್ತೆಂದೂ ಭಾರತಕ್ಕೆ ಹಿಂದಿರುಗಲಿಲ್ಲ. ಭಾರತವು ಆತನನ್ನು ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸಿತು. ಹಾಗೆ ಘೋಷಿಸುವಾಗ ಘೋಷಿಸಿದ ಭಾರತಕ್ಕೂ ಆತನನ್ನು ಸ್ವಾಗತಿಸಿದ ಅಮೇರಿಕಕ್ಕೂ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎಂಬುದು ಚೆನ್ನಾಗಿ ಗೊತ್ತಿತ್ತು. ಅಂದಿನಿಂದ ಇಂದಿನ ವರೆಗೆ ಸುಮಾರು 30 ವರ್ಷಗಳು ಕಳೆದುಹೋಗಿವೆ. ಈ ಮಧ್ಯೆ ಅನೇಕ ಬಾರಿ ಭಾರತ ಮತ್ತು ಅಮೇರಿಕದ ಅಧಿಕಾರಿಗಳ ನಡುವೆ ಮಾತುಕತೆ ನಡೆದಿವೆ. ಎರಡೂ ದೇಶಗಳ ಅಧ್ಯಕ್ಷರು ಪರಸ್ಪರ ಭೇಟಿಯಾಗಿದ್ದಾರೆ. ಅಣು ತಂತ್ರಜ್ಞಾನ, ಶಸ್ತ್ರಾಸ್ತ್ರ, ವ್ಯಾಪಾರ ನೀತಿ.. ಸಹಿತ ಹತ್ತಾರು ಒಪ್ಪಂದಗಳು ಏರ್ಪಟ್ಟಿವೆ. ಆದರೂ ತನಿಖೆಗಾಗಿ ಆ್ಯಂಡರ್ಸನ್‍ನನ್ನು ಪಡೆದುಕೊಳ್ಳಲು ಭಾರತಕ್ಕೆ ಸಾಧ್ಯವಾಗಿಲ್ಲ. ಭಾರತದ ಅಧ್ಯಕ್ಷರು  ಅಮೇರಿಕಕ್ಕೆ ಭೇಟಿ ನೀಡುವ ಅಥವಾ ಅಮೇರಿಕದ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ಸಂದರ್ಭಗಳಲ್ಲೆಲ್ಲಾ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ಪ್ರತಿಭಟನೆ ನಡೆಯುತ್ತದೆ. 1984 ಡಿ. 3ರಂದು ನಡೆದ ಅನಿಲ ದುರಂತದಲ್ಲಿ ಸಾವಿಗೀಡಾದ ಸಾವಿರಾರು ಮಂದಿಯ ಕುಟುಂಬಸ್ಥರು, ಅಂಗವಿಕಲರಾದವರು, ವಿಷಾಂಶಗಳು ತುಂಬಿಕೊಂಡ ಭೂಮಿಯನ್ನು ಬಿಡಲೂ ಆಗದೆ ಇರಲೂ ಆಗದೆ ಸಂಕಟ ಪಡುವವರೆಲ್ಲ ಅಲ್ಲಿ ಆ್ಯಂಡರ್ಸನ್‍ನ ಫೋಟೋ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತಾರೆ. ವಿಕಾರವಾಗಿ ಬೆಳೆದ ತಲೆ, ಕಣ್ಣು, ಕಿವಿ, ದೇಹಗಳುಳ್ಳ ಮಕ್ಕಳನ್ನು ತಂದು ಮಾಧ್ಯಮಗಳ ಮುಂದೆ ಪ್ರದರ್ಶಿಸುತ್ತಾರೆ. ಆದರೆ ಕಾರ್ಪೋರೇಟ್ ಲಾಬಿಯ ಮುಂದೆ ಅವೆಲ್ಲವೂ ವಿಫಲವಾಗುತ್ತಲೇ ಹೋಗಿವೆ. ಇದೀಗ ಪ್ರಕೃತಿಯೇ ಆತನನ್ನು ಸೆಳೆದುಕೊಂಡಿದೆ. ‘ಭೋಪಾಲ್ ದುರಂತವು ಅವರನ್ನು ಹಲವು ವರ್ಷಗಳಿಂದ ಮಾನಸಿಕವಾಗಿ ಬೇಟೆಯಾಡುತ್ತಿತ್ತು’ ಎಂದು ಪತ್ನಿ ಲಿಯಾನ್‍ರು CBS ನ್ಯೂಸ್‍ಗೆ ಹೇಳಿದ್ದರಲ್ಲಿಯೇ ಆ್ಯಂಡರ್ಸನ್‍ನ ಪಾಪಪ್ರಜ್ಞೆ, ಮಾನಸಿಕ ಸಂಘರ್ಷವನ್ನು ಊಹಿಸಬಹುದು.
 ಭೋಪಾಲ್ ದುರಂತದ ಸಂತ್ರಸ್ತರು ಆ್ಯಂಡರ್ಸನ್‍ನ ಫೋಟೋವನ್ನು ಕೈಬಿಟ್ಟು ಇನ್ನು ಡೌ ಕೆಮಿಕಲ್ ಕಂಪೆನಿಯ ಮುಖ್ಯಸ್ಥ ಆ್ಯಂಡ್ರ್ಯೂ ಲಿವೆರಿಸ್‍ರ  ಫೋಟೋವನ್ನು ಎತ್ತಿಕೊಳ್ಳುವುದಾಗಿ ಘೋಷಿಸಿದ್ದಾರೆ. ಯಾಕೆ ಹೀಗೆ ಎಂದರೆ, ಯೂನಿಯನ್ ಕಾರ್ಬೈಡ್ ಕಂಪೆನಿಯನ್ನು ಇವತ್ತು ಅಮೇರಿಕದ್ದೇ ಆದ ಡೌ ಕಂಪೆನಿ ಖರೀದಿಸಿದೆ. ಮಾತ್ರವಲ್ಲ, ದುರಂತದ ಬಗ್ಗೆ ತನಗಾವ ಹೊಣೆಗಾರಿಕೆಯೂ ಇಲ್ಲ ಎಂದೂ ಅದು ಹೇಳಿಕೊಂಡಿದೆ. ಒಂದು ರೀತಿಯಲ್ಲಿ, ಇದು ಬಹುತೇಕ ಎಲ್ಲ ಕಾರ್ಪೋರೇಟರ್‍ಗಳ ಮನಸ್ಥಿತಿ. ಅವರಿಗೆ ಈ ದೇಶದ ಮಣ್ಣು ಬೇಕು, ನೀರು ಬೇಕು, ಉದ್ಯಮ ಸ್ನೇಹಿ ವಾತಾವರಣ, ತೆರಿಗೆ ರಹಿತ ಸರಕಾರಿ ಸೌಲಭ್ಯಗಳು ಬೇಕು. ಆದರೆ ಜನರ ಆರೋಗ್ಯ, ಅಭಿವೃದ್ಧಿಯನ್ನು ಹೆಚ್ಚಿನ ಬಾರಿ ಅವರು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಪಶ್ಚಿಮ ಬಂಗಾಲದ ಸಿಂಗೂರು, ಕೇರಳದ ಪ್ಲಾಚಿಮಾಡ, ತಮಿಳ್ನಾಡಿನ ಕುಡಂಕುಲಂ, ಮಹಾರಾಷ್ಟ್ರದ ಜೈತಾಪುರ, ನಮ್ಮದೇ ರಾಜ್ಯದ ಗದಗ, ದಕ್ಷಿಣ ಕನ್ನಡ.. ಎಲ್ಲೆಡೆಯೂ ಕಾರ್ಪೋರೇಟ್ ಉದ್ಯಮಗಳು ಜನಸಾಮಾನ್ಯರನ್ನು ಪೀಡಿಸಿವೆ. ಅವರ ಭೂಮಿಯನ್ನು ಕಬಳಿಸುವುದಕ್ಕಾಗಿ ರಾತೋರಾತ್ರಿ ಬುಲ್ಡೋಜರ್‍ಗಳನ್ನು ಹರಿಸಿವೆ. ಕೃಷಿ ಭೂಮಿ, ಫಲವತ್ತಾದ ತೋಟ, ಮನೆಗಳನ್ನು ಅವು ಧ್ವಂಸಗೊಳಿಸಿವೆ. ಜನರ ಸುರಕ್ಷಿತತೆಗಿಂತ ತಮ್ಮ ಉದ್ಯಮದ ಸುರಕ್ಷಿತತೆಯನ್ನೇ ಮುಖ್ಯವಾಗಿಸಿಕೊಂಡು ಕಾರ್ಯಾಚರಿಸುವ ಶೈಲಿ ಕಾರ್ಪೋರೇಟ್ ಕಂಪೆನಿಗಳದ್ದು. ಭೋಪಾಲ್ ದುರಂತದ ಹಿಂದೆಯೂ ಇಂಥದ್ದೇ ಒಂದು ಕತೆಯಿದೆ. ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ  ತಾಂತ್ರಿಕ ತೊಂದರೆಗಳಿರುವ ಬಗ್ಗೆ ಆ್ಯಂಡರ್ಸನ್‍ಗೆ ಆ ಮೊದಲೇ ಮಾಹಿತಿಯಿತ್ತು ಎಂದು ಹೇಳಲಾಗುತ್ತಿದೆ. ಸೋರಿಕೆ ಉಂಟಾದರೆ ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳ ವಿಷಯದಲ್ಲೂ ತೀವ್ರ ಅಸಡ್ಡೆ ವಹಿಸಲಾಗಿತ್ತು ಎಂಬ ಆರೋಪವೂ ಇದೆ. ತನ್ನ 65ನೇ ಹುಟ್ಟು ಹಬ್ಬದ ಆಚರಣೆಯ ಮತ್ತಿನಲ್ಲಿ ಆತ ಕಾರ್ಖಾನೆಯ ಲೋಪದೋಷಗಳನ್ನು ಕಡೆಗಣಿಸಿದ್ದ ಎಂಬ ಅಭಿಪ್ರಾಯವೂ ಇದೆ. ಅಂತೂ ಜಾಗತಿಕವಾಗಿಯೇ ಅತಿದೊಡ್ಡ ದುರಂತಕ್ಕೆ ಕಾರಣನಾದ ಆತ ಕೊನೆಯ ವರೆಗೂ ಯಾವ ವಿಚಾರಣೆ, ಶಿಕ್ಷೆಯೂ ಇಲ್ಲದೇ ಬದುಕಿದ್ದಾನೆ. ಒಂದು ವೇಳೆ, ಆ್ಯಂಡರ್ಸನ್ ಭಾರತದವನಾಗಿದ್ದು ಅನಿಲ ದುರಂತವು ಅಮೇರಿಕದ ನ್ಯೂಯಾರ್ಕ್‍ನಲ್ಲೋ ಫ್ಲೋರಿಡಾದಲ್ಲೋ ಸಂಭವಿಸಿರುತ್ತಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತು? ಅಮೇರಿಕದಿಂದ ಆತ ತಪ್ಪಿಸಿಕೊಳ್ಳಲು ಸಾಧ್ಯವಿತ್ತೇ? ಒಂದು ವೇಳೆ ತಪ್ಪಿಸಿಕೊಂಡರೂ ಆತನನ್ನು ಮರಳಿಸುವಂತೆ ಭಾರತದ ಮೇಲೆ ಅದು ಒತ್ತಡ ಹಾಕುತ್ತಿರಲಿಲ್ಲವೇ? ಬಗ್ಗದಿದ್ದರೆ ಭಾರತಕ್ಕೆ ಕಾರ್ಪೋರೇಟ್ ಕಂಪೆನಿಗಳು ಕಾಲಿಡದಂತೆ ಅದು ನೋಡಿಕೊಳ್ಳುತ್ತಿರಲಿಲ್ಲವೇ? ದಿಗ್ಬಂಧನ ವಿಧಿಸುತ್ತಿರಲಿಲ್ಲವೇ?
 ಏನೇ ಆಗಲಿ, ಆ್ಯಂಡರ್ಸನ್‍ನ ಸಾವು ಎಲ್ಲ ಕಾರ್ಪೋರೇಟ್ ದೊರೆಗಳಿಗೂ ಪಾಠವಾಗಬೇಕು. ಅವರ ಹಣಬಲ, ಜನಬಲ, ಬುಲ್ಡೋಜರ್‍ಗಳನ್ನು ಎದುರಿಸುವ ಸಾಮರ್ಥ್ಯ ರೈತರ ನೇಗಿಲಿಗೆ, ಎತ್ತಿಗೆ ಅಥವಾ ಜನಸಾಮಾನ್ಯರ ಗುಡಿಸಲುಗಳಿಗೆ ಇಲ್ಲದೇ ಇರಬಹುದು. ಆದರೆ ತೋಳ್ಬಲವೊಂದೇ ಸಾಮರ್ಥ್ಯದ ಮಾನದಂಡವಲ್ಲ. ಕೆಲವೊಮ್ಮೆ ಕಣ್ಣೀರಿಗೂ ಪ್ರಾರ್ಥನೆಗೂ ಅದರ ನೂರು ಪಟ್ಟು ಅಧಿಕ ಸಾಮರ್ಥ್ಯ ಇರುತ್ತದೆ. ಆ್ಯಂಡರ್ಸನ್‍ನ ಕದ್ದು ಮುಚ್ಚಿದ ಬದುಕು ಮತ್ತು ರಹಸ್ಯ ಸಾವು ಇದನ್ನೇ ಹೇಳುತ್ತದೆ.

Tuesday, 28 October 2014

ಪ್ರಾಣಿಗಳು ತಯಾರಿಸುವ ಪಟ್ಟಿ ಮತ್ತು ಬಾಬಾ ರಾಮ್‍ದೇವ್

   ಆಸ್ಟ್ರೇಲಿಯಾದಿಂದ ಎರಡು ಸುದ್ದಿಗಳು ಹೊರಬಿದ್ದಿವೆ. ಎರಡು ಕೂಡ ಮನುಷ್ಯರಿಗೆ ಸಂಬಂಧಿಸಿದ್ದು. ಬಡಿತ ನಿಲ್ಲಿಸಿದ ಹೃದಯಕ್ಕೆ ಚೇತರಿಕೆ ನೀಡಿ ಅದನ್ನು ಮತ್ತೊಬ್ಬರಿಗೆ ಕಸಿ ಮಾಡಬಹುದು ಎಂಬುದನ್ನು ಅಲ್ಲಿನ ವೈದ್ಯರು ಪ್ರಾಯೋಗಿಕವಾಗಿ ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ, ಹಾಗೆ ಕಸಿ ಮಾಡಿಸಿಕೊಂಡ ಮೂವರು ಹೃದ್ರೋಗಿಗಳು ಈಗ ಚೇತರಿಸುತ್ತಿದ್ದಾರೆ ಎಂಬ ಅಚ್ಚರಿಯ ಸುದ್ದಿಯನ್ನೂ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಇನ್ನೊಂದು ಸುದ್ದಿ ಕೂಡ ಅಲ್ಲಿಯದೇ. 13 ಮಿಲಿಯನ್ ವರ್ಷಗಳ ಮೊದಲು ಕಾಂಗರೂ ಪ್ರಾಣಿ ಮತ್ತು ಮನುಷ್ಯ ಮುಖಾಮುಖಿಯಾದ ಸುದ್ದಿಯದು. ಮನುಷ್ಯ ಆ ನಾಡನ್ನು ಪ್ರವೇಶಿಸುವ ಮೊದಲು ಕಾಂಗರೂಗಳು ನೆಗೆದು ಚಲಿಸುತ್ತಿರಲಿಲ್ಲ. ಮನುಷ್ಯನಂತೆಯೇ ನಡೆಯುತ್ತಿದ್ದುವು. ಅದು ಭಾರೀ ಗಾತ್ರ ಮತ್ತು ತೂಕವನ್ನು ಹೊಂದಿದ್ದುವು. ಆದರೆ ಮನುಷ್ಯನ ಪ್ರವೇಶವಾದ ಬಳಿಕ ಅವುಗಳು ನಿಧಾನಕ್ಕೆ ಅಳಿಯತೊಡಗಿದುವು. ಮನುಷ್ಯ ತನ್ನ ಸ್ವಾರ್ಥಕ್ಕೋ ದುರಾಸೆಗೋ ಅವುಗಳ ನಿರ್ನಾಮದಲ್ಲಿ ಸಕ್ರಿಯನಾದ. ಅಂತಿಮವಾಗಿ ಆ ಪ್ರಬೇಧವೇ ಅಳಿದು ಹೋಗಿ ಈಗಿನ ನೆಗೆಯುವ ಚಿಕ್ಕ ಗಾತ್ರದ ಕಾಂಗರೂಗಳು ಹೊಸ ರೂಪದಲ್ಲಿ ಜನ್ಮ ತಾಳಿದುವು ಎಂದು ವಿಜ್ಞಾನಿಗಳು ತಮ್ಮ ಸಂಶೋಧನಾ ವರದಿಯಲ್ಲಿ ವಿವರಿಸಿದ್ದಾರೆ.
 ನಿಜವಾಗಿ, ಮನುಷ್ಯ ಮತ್ತು ಪ್ರಾಣಿಗಳು ನಿತ್ಯ ಮುಖಾಮುಖಿಯಾಗಿಯೇ ಬದುಕುತ್ತಿವೆ. ಮಾತ್ರವಲ್ಲ, ಹೆಚ್ಚಿನೆಲ್ಲ ಮುಖಾಮುಖಿಗಳಲ್ಲಿ ಪ್ರಾಣಿಗಳು ಸೋಲನ್ನೊಪ್ಪಿಕೊಳ್ಳುತ್ತಲೂ ಇವೆ. ಪ್ರಾಣಿಗಳನ್ನು ಪ್ರಾಣಿ ಸಂಗ್ರಹಾಲಯದಲ್ಲಿಟ್ಟು ದುಡ್ಡು ಮಾಡುವವನೂ ಮನುಷ್ಯನೇ. ಬೃಹತ್ ಗಾತ್ರದ ಆನೆಗಳನ್ನು ಪಳಗಿಸಿ ತನ್ನ ಲಾಭಕ್ಕಾಗಿ ಉಪಯೋಗಿಸಿಕೊಳ್ಳುತ್ತಿರುವವನೂ ಮನುಷ್ಯನೇ. ತನ್ನ ಸಂವಹನಕ್ಕಾಗಿ ಮೊಬೈಲ್ ಟವರ್‍ಗಳನ್ನು ನಿಲ್ಲಿಸಿ ಹಕ್ಕಿ ಸಂಕುಲಗಳನ್ನು ನಾಶ ಮಾಡುತ್ತಿರುವವನೂ ಮನುಷ್ಯನೇ. ಪ್ರಾಣಿಗಳು ಇವತ್ತಿನ ಜಗತ್ತಿನಲ್ಲಿ ಮನರಂಜನೆಗೆ ಬಳಕೆಯಾಗುತ್ತಿವೆ. ಅವುಗಳನ್ನು ಎದುರು-ಬದುರು ನಿಲ್ಲಿಸಿ ಹೊಡೆದಾಡಿಸಲಾಗುತ್ತದೆ. ಸ್ಪರ್ಧೆಗೆ ಕಟ್ಟಿ ಜೂಜು ನಡೆಸಲಾಗುತ್ತದೆ. ಜಲ್ಲಿಕಟ್ಟು, ಕೋಳಿಕಟ್ಟು, ಕಂಬಳಗಳಲ್ಲಿ ಅವು ಮನುಷ್ಯನ ಬಯಕೆಯಂತೆ ಓಡುತ್ತವೆ, ಕಾದಾಡುತ್ತವೆ, ಸಾಯುತ್ತವೆ. ಆದರೆ ಇದಕ್ಕೆ ಭಿನ್ನವಾದ ವಾತಾವರಣವೊಂದನ್ನು ಹುಟ್ಟು ಹಾಕಲು ಪ್ರಾಣಿಗಳಿಗೆ ಈ ವರೆಗೆ ಸಾಧ್ಯವಾಗಿಲ್ಲ. ಅವು ಮನುಷ್ಯನನ್ನು ಕೂಡಿ ಹಾಕುವ ಮನುಷ್ಯ ಸಂಗ್ರಹಾಲಯವನ್ನು ಸ್ಥಾಪಿಸಿಲ್ಲ. ಜಲ್ಲಿಕಟ್ಟು, ಕಂಬಳಗಳನ್ನು ಮನುಷ್ಯನಿಗಾಗಿ ಹುಟ್ಟು ಹಾಕಿಲ್ಲ. ಆತನನ್ನು ಎತ್ತಿಕೊಂಡು ಸರ್ಕಸ್ ಕಂಪೆನಿಯನ್ನೋ ಹೊಡೆದಾಟದ ಪಂದ್ಯಗಳನ್ನೋ ಅವು  ಏರ್ಪಡಿಸಿಲ್ಲ. ಒಂದು ವೇಳೆ,  ಮನುಷ್ಯನ ಬೌದ್ಧಿಕ ಸಾಮರ್ಥ್ಯವನ್ನು ಪ್ರಕೃತಿಯು ಪ್ರಾಣಿ ಜಗತ್ತಿಗೂ ಅನುಗ್ರಹಿಸಿರುತ್ತಿದ್ದರೆ ಪ್ರಪಂಚದ ಸ್ಥಿತಿ-ಗತಿಗಳು ಹೇಗಿರುತ್ತಿತ್ತು? ಮನುಷ್ಯನನ್ನು ಯಾವ ಪ್ರಾಣಿ ಯಾವೆಲ್ಲ ರೀತಿಯಲ್ಲಿ ಬಳಸಿಕೊಳ್ಳುತ್ತಿತ್ತು?
 ದುರಂತ ಏನೆಂದರೆ, ಮನುಷ್ಯ ಪ್ರಾಣಿಲೋಕವನ್ನು ಮಾತ್ರ ಮುಖಾಮುಖಿಗೊಳ್ಳುತ್ತಿರುವುದಲ್ಲ. ಆತ/ಕೆ ಪ್ರತಿದಿನ ಮನುಷ್ಯರನ್ನೂ ಮುಖಾಮುಖಿಯಾಗುತ್ತಿರುತ್ತಾನೆ. ಇಲ್ಲಿ ಪ್ರತಿಭಾವಂತರು, ಬುದ್ಧಿವಂತರು, ಕೋಮುವಾದಿಗಳು, ವಂಚಕರು, ಕ್ರೂರಿಗಳು, ಜನಾಂಗ ದ್ವೇಷಿಗಳು.. ಮುಂತಾದ ಅನೇಕ ರೀತಿಯ ಮನುಷ್ಯರಿದ್ದಾರೆ. ಮನುಷ್ಯ ಜಗತ್ತಿನ ದೌರ್ಬಲ್ಯ ಏನೆಂದರೆ, ಮನುಷ್ಯರ ನಡುವೆ ಇಷ್ಟೆಲ್ಲ ವಿಭಾಗಗಳಿದ್ದರೂ ಅವುಗಳನ್ನು ಪತ್ತೆ ಹಚ್ಚುವುದಕ್ಕೆ ಸರಿಯಾದ ಹೆಸರುಗಳಿಲ್ಲ ಎಂಬುದು. ಪ್ರಾಣಿ ಜಗತ್ತಿನಲ್ಲಿರುವ ಕ್ರೂರ ಪ್ರಾಣಿಗಳ ಬಗ್ಗೆ ಪ್ರಸ್ತಾಪವಾದ ಕೂಡಲೇ ಚಿರತೆ, ಹುಲಿ, ಸಿಂಹ, ಕರಡಿ ಮುಂತಾದ ಹೆಸರುಗಳು ಮುಂದೆ ಬರುತ್ತವೆ. ಹಾಗೆಯೇ ಬುದ್ಧಿವಂತ ಪ್ರಾಣಿ, ಸಾಧು ಪ್ರಾಣಿಗಳ ಪ್ರಸ್ತಾಪವಾದಾಗಲೂ ಕೆಲವು ಪ್ರಾಣಿಗಳು ನಮ್ಮ ಮುಂದೆ ಸುಳಿದಾಡುತ್ತವೆ. ಆದರೆ ಮನುಷ್ಯರಲ್ಲಿ ಭ್ರಷ್ಟ ಮನುಷ್ಯ, ಕೋಮುವಾದಿ ಮನುಷ್ಯ, ಕ್ರೂರಿ ಮನುಷ್ಯ... ಎಂದು ಮುಂತಾಗಿ ಪ್ರತ್ಯೇಕವಾಗಿ ಗುರುತಿಸಿಬಿಡುವುದಕ್ಕೆ ಯಾವ ಏರ್ಪಾಡುಗಳೂ ಇಲ್ಲ. ಮನುಷ್ಯರಲ್ಲಿ ಹುಲಿಯಂಥ ಮನುಷ್ಯ, ಚಿರತೆಯಂಥವ, ನರಿಯಂಥ ಮನುಷ್ಯ ಖಂಡಿತ ಇದ್ದಾರೆ. ಆದರೂ ಅವರು ಆ ಗುರುತನ್ನು ಮರೆಮಾಚಿಕೊಂಡು ಮನುಷ್ಯರ ಗುಂಪಿನಲ್ಲಿ ಸಹಜವಾಗಿ ಇದ್ದುಬಿಡುತ್ತಾರೆ. ಅಣ್ಣಾ ಹಜಾರೆ, ಬಾಬಾ ರಾಮ್‍ದೇವ್, ಸತ್ಯಾರ್ಥಿ, ಹಿರೇಮಠ್, ಮೋದಿ, ಮನ್‍ಮೋಹನ್ ಸಿಂಗ್, ಉಮಾ ಭಾರತಿ, ಮಮತಾ ಬ್ಯಾನರ್ಜಿ.. ಇವರೆಲ್ಲ ಮನುಷ್ಯರೇ. ಆದರೆ ಹುಲಿ, ಜಿಂಕೆ, ಇಲಿ, ಚಿರತೆಗಳನ್ನು ಅವುಗಳ ಸ್ವಭಾವಕ್ಕನುಗುಣವಾಗಿ ಹೆಸರಿಸಿದಂತೆ ಇವರನ್ನೂ ಹೆಸರಿಸಬಯಸಿದರೆ ಇವರೆಲ್ಲರೂ ವಿವಿಧ ಹೆಸರುಗಳಿಂದ ಗುರುತಿಸಿಕೊಳ್ಳಬೇಕಾದೀತು. ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ‘ಕಪ್ಪು ಹಣ'ಕ್ಕಾಗಿ ಧರಣಿ ಕೂತ ಬಾಬಾ ರಾಮ್‍ದೇವ್‍ರನ್ನೇ ಎತ್ತಿಕೊಳ್ಳಿ. ಮನ್‍ಮೋಹನ್ ಸಿಂಗ್‍ರ ಸರಕಾರವನ್ನು ಅವರು ಯಾವೆಲ್ಲ ಪದಗಳಿಂದ ಟೀಕಿಸುತ್ತಿದ್ದರು? ಕಪ್ಪು ಹಣವನ್ನು ವಾಪಾಸು ಪಡೆಯುವುದರಿಂದ ಈ ದೇಶದಲ್ಲಿ ಆಗಬಹುದಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಷ್ಟೆಲ್ಲ ಮಾತಾಡಿದ್ದರು? ಕಪ್ಪು ಹಣವನ್ನು ಭಾರತಕ್ಕೆ ವಾಪಾಸು ತರಿಸದೇ ಹೋರಾಟ ಕಣದಿಂದ ವಿರಮಿಸುವುದಿಲ್ಲ ಎಂದು ಹೇಳಿದ್ದೂ ಅವರೇ. ತನ್ನ ಹೋರಾಟ ಬರೇ ದೇಶಹಿತದಿಂದ ರೂಪುಗೊಂಡಿದ್ದೇ ಹೊರತು ಇದಕ್ಕೂ ರಾಜಕೀಯಕ್ಕೂ ಸಂಬಂಧ ಇಲ್ಲ ಎಂದು ಹೇಳಿಕೊಂಡದ್ದೂ ಅವರೇ. ಆದರೆ, ಮೋದಿ ಸರಕಾರ ರಚನೆಯಾದಂದಿನಿಂದ ಅವರು ಹೋರಾಟ ಕಣದಲ್ಲಿ ಕಾಣಿಸಿಕೊಂಡೇ ಇಲ್ಲ. ಕಪ್ಪು ಹಣದ ವಿಷಯದಲ್ಲಿ ಮನ್‍ಮೋಹನ್ ಸರಕಾರದ ನಿಲುವನ್ನೇ ಮೋದಿ ಸರಕಾರ ತೋರುತ್ತಿರುವಾಗಲೂ ಅವರು ಮೌನ ಮುರಿಯುತ್ತಿಲ್ಲ. ಏನಿದರ ಅರ್ಥ? ಅವರ ಗುರಿ ಇದ್ದುದು ಕಪ್ಪು ಹಣದ ವಾಪಾಸಿನ ಮೇಲೋ ಅಥವಾ ಮನ್‍ಮೋಹನ್ ಸರಕಾರದ ಮೇಲೋ? ಅಷ್ಟಕ್ಕೂ, ಕಪ್ಪು ಹಣದ ವಿಷಯದಲ್ಲಿ ಅವರು ಕೇವಲ ಮಾತಾಡಿದ್ದಲ್ಲ. ರಾಮ್‍ಲೀಲಾ ಮೈದಾನದಲ್ಲಿ ಒಂದು ಜನಸಮೂಹವನ್ನು ಸೇರಿಸಿದ್ದರು. ಒಂದು ವೇಳೆ ತನ್ನ ಹೋರಾಟ ಮೋದಿಯವರನ್ನು ಅಧಿಕಾರಕ್ಕೇರಿಸುವುದೇ ಹೊರತು ಕಪ್ಪು ಹಣದ ವಾಪಸಲ್ಲ ಎಂದು ಹೇಳಿರುತ್ತಿದ್ದರೆ, ಅಂದು ಅಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದಕ್ಕೆ ಖಂಡಿತ ಸಾಧ್ಯವಿರಲಿಲ್ಲ. ಒಂದು ರೀತಿಯಲ್ಲಿ, ಅವರು ಹೊರಗೊಂದು ಮನುಷ್ಯರಾಗಿದ್ದುಕೊಂಡೇ ಒಳಗೊಂದು ಮನುಷ್ಯರೂ ಆಗಿದ್ದರು. ಹೊರಗಿನ ಮನುಷ್ಯ ಎಷ್ಟು ಸಾಧುವೋ ಅಷ್ಟೇ ಒಳಗಿನ ಮನುಷ್ಯ ವಂಚಕನಾಗಿದ್ದ. ಆದರೆ ಸೇರಿದ ಮಂದಿಗೆ ಹೊರಗಿನ ಮನುಷ್ಯನಷ್ಟೇ ಗೋಚರಿಸುತ್ತಿದ್ದ.
 ಒಂದು ಕಡೆ, ಮನುಷ್ಯನ ಬೌದ್ಧಿಕ ಸಾಮರ್ಥ್ಯವು ವಿಕಸಿಸುತ್ತಲೇ ಇದೆ. ಬಡಿತ ನಿಲ್ಲಿಸಿದ ಹೃದಯಕ್ಕೆ ಚೇತರಿಕೆ ಕೊಡುವಷ್ಟು ಆತ ಪ್ರತಿಭಾವಂತ. ಅದರ ಜೊತೆಗೇ ಅತ್ಯಂತ ಅವಿಕಸಿತ ಆಲೋಚನೆಗಳನ್ನೂ ಪೂರ್ವಗ್ರಹಗಳನ್ನೂ ಪೋಷಿಸಿಕೊಂಡು ಬರುತ್ತಿರುವವನೂ ಈತನೇ/ಈಕೆಯೇ. ಬುದ್ಧಿವಂತ ಪ್ರಾಣಿಯಾದ ಮನುಷ್ಯನ ಈ ದೌರ್ಬಲ್ಯಗಳೇ ಇವತ್ತು ರಕ್ತಪಾತಕ್ಕೂ ಮೌಲ್ಯಪತನಕ್ಕೂ ಕ್ರೌರ್ಯಕ್ಕೂ ಕಾರಣವಾಗಿದೆ. ಒಂದು ವೇಳೆ ಸ್ವಭಾವಕ್ಕೆ ಅನುಗುಣವಾಗಿ ಮನುಷ್ಯರಿಗೆ ಹೆಸರು ಕೊಡುವ ಹೊಣೆಯನ್ನು ಪ್ರಾಣಿ ಜಗತ್ತು ವಹಿಸಿಕೊಂಡಿರುತ್ತಿದ್ದರೆ ಬಾಬಾ ರಾಮ್‍ದೇವ್‍ರಿಗೆ ಅವು ಕೊಡಬಹುದಾದ ಹೆಸರು ಏನಾಗಿರುತ್ತಿತ್ತು? ‘ಕಪಟ ಪ್ರಾಣಿ'ಗಳು ಎಂಬೊಂದು ವಿಭಾಗವನ್ನು ತಯಾರಿಸಿ ಅದರಲ್ಲಿ ಮೊದಲ ಹೆಸರಾಗಿ ಅವರನ್ನೇ ನಮೂದಿಸುತ್ತಿತ್ತೋ ಏನೋ.

Wednesday, 22 October 2014

‘ಭಾರತ್ ಮಾತಾಕಿ ಜೈ’ಯ ಒತ್ತಡ ಮತ್ತು ಐಸಿಸ್‍ನ ಬಾವುಟ

   ಕಾಶ್ಮೀರದಲ್ಲಿ ಕಳೆದವಾರ ಕಾಣಿಸಿಕೊಂಡ ಬಾವುಟವೊಂದು ಮಾಧ್ಯಮಗಳ ಕುತೂಹಲವನ್ನು ಕೆರಳಿಸಿವೆ. ಕೆಲವು ಪತ್ರಿಕೆಗಳು ಈ ಬಾವುಟವನ್ನು ಮುಂದಿಟ್ಟುಕೊಂಡು ಸಂಪಾದಕೀಯ ಬರೆದಿವೆ. ಇರಾಕ್ ಮತ್ತು ಸಿರಿಯದಲ್ಲಿ ಸುದ್ದಿಯಲ್ಲಿರುವ ಐಸಿಸ್‍ನ (ISIS) ಬಾವುಟವನ್ನು ಕಾಶ್ಮೀರದ ಯುವಕರು ಪ್ರದರ್ಶಿಸಿರುವುದನ್ನು ಅಲ್ ಕಾಯಿದಾ ಮುಖಂಡ ಜವಾಹಿರಿಯ ಇತ್ತೀಚಿನ ಟೇಪಿನೊಂದಿಗೆ ಜೋಡಿಸಿ ಕೆಲವರು ಚರ್ಚಿಸುತ್ತಿದ್ದಾರೆ. ‘ಐಸಿಸ್ ಭಾರತಕ್ಕೂ ಕಾಲಿಟ್ಟಿತೇ' ಅನ್ನುವ ಶೀರ್ಷಿಕೆಯಲ್ಲಿ ಟಿ.ವಿ. ಚಾನೆಲ್‍ಗಳು ಸುದ್ದಿಯನ್ನೂ ಪ್ರಸಾರ ಮಾಡಿವೆ. ಈ ಮೊದಲೂ ತಮಿಳ್ನಾಡಿನಲ್ಲಿ ಮತ್ತು ಕಾಶ್ಮೀರದಲ್ಲಿ ಈ ಬಾವುಟ ಹಾರಾಡಿತ್ತು ಎಂಬ ವಾದಗಳೂ ಕೇಳಿಬರುತ್ತಿವೆ. ಒಟ್ಟಿನಲ್ಲಿ ಅನಾಗರಿಕತೆ ಮತ್ತು ಮಾನವ ಹತ್ಯೆಯ ಸುದ್ದಿಗಳನ್ನಷ್ಟೇ ಕೊಡುತ್ತಿರುವ ಐಸಿಸ್ ಎಂಬ ಗುಂಪಿಗೆ ಭಾರತದಲ್ಲೂ ಬೆಂಬಲಿಗರಿರುವರೋ ಎಂಬ ಅನುಮಾನವೊಂದನ್ನು ಹುಟ್ಟುಹಾಕುವ ಸನ್ನಿವೇಶಗಳು ಸೃಷ್ಟಿಯಾಗುತ್ತಿರುವಂತೆ ಕಾಣುತ್ತಿದೆ.
 ಎರಡು ವರ್ಷಗಳ ಹಿಂದಿನವರೆಗೂ ಈ ದೇಶದಲ್ಲಿ ಲಷ್ಕರೆ ತ್ವಯ್ಯಿಬ, ಹರ್ಕತುಲ್ ಮುಜಾಹಿದೀನ್, ಇಂಡಿಯನ್ ಮುಜಾಹಿದೀನ್.. ಮುಂತಾದ ಹೆಸರುಗಳೇ ಸುದ್ದಿಯಲ್ಲಿದ್ದುವು. ಇವುಗಳ ಅಸ್ತಿತ್ವ, ಅನುಯಾಯಿಗಳ ಸಂಖ್ಯೆ, ಅವುಗಳ ಮನುಷ್ಯ ವಿರೋಧಿ ಧೋರಣೆ ಮುಂತಾದುವುಗಳು ಹತ್ತು-ಹಲವು ಬಾರಿ ಇಲ್ಲಿ ಚರ್ಚೆಗೀಡಾದುವು. ಭಾರತೀಯ ಮುಸ್ಲಿಮರನ್ನು ಭಯೋತ್ಪಾದಕರೆಂದೋ ಅದರ ಬೆಂಬಲಿಗರೆಂದೋ ಕರೆಯುವುದಕ್ಕೆ ಆ ಹೆಸರುಗಳು ಬಳಕೆಯಾದುವು. ಮುಸ್ಲಿಮರೆಲ್ಲ ಭಯೋತ್ಪಾದಕರಲ್ಲ, ಆದರೆ ಭಯೋತ್ಪಾದಕರೆಲ್ಲ ಮುಸ್ಲಿಮರೇ.. ಎಂದೂ ವ್ಯಾಖ್ಯಾನಿಸಲಾಯಿತು. ಆದರೆ ಇವತ್ತು ಈ ಲಷ್ಕರ್-ಮುಜಾಹಿದೀನ್‍ಗಳ ಪತ್ತೆಯೇ ಇಲ್ಲ. ಮಾಧ್ಯಮಗಳಲ್ಲಿ ಅಪ್ಪಿ-ತಪ್ಪಿಯೂ ಅವುಗಳ ಹೆಸರು ಕಾಣಿಸಿಕೊಳ್ಳುತ್ತಿಲ್ಲ. ಭಾರತದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವುದಕ್ಕಾಗಿಯೇ ಅಸ್ತಿತ್ವಕ್ಕೆ ಬಂದ ಈ ಲಷ್ಕರ್‍ಗಳು ಮತ್ತು ಅವುಗಳ ಉಗ್ರವಾದಿ ಕಾರ್ಯಕರ್ತರು ಸದ್ಯ ಏನು ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಅನ್ನುವುದರ ಸುತ್ತ ಚರ್ಚೆಗಳೂ ನಡೆಯುತ್ತಿಲ್ಲ. ಆದರೆ ಇವುಗಳ ಸ್ಥಾನದಲ್ಲಿ ಇವತ್ತು ಐಸಿಸ್ ಎಂಬ ಹೊಸ ಹೆಸರು ಕಾಣಿಸಿಕೊಳ್ಳತೊಡಗಿದೆ. ಈ ಐಸಿಸ್‍ನ ಮೇಲೆ ಇವತ್ತು ಹೊರಿಸಲಾಗಿರುವ ಆರೋಪಗಳನ್ನು ಪರಿಗಣಿಸಿದರೆ, ಅದು ಮೆದುಳು ಸ್ವಸ್ಥ ಇರುವ ಮನುಷ್ಯರ ಗುಂಪು ಎಂದು ನಂಬುವುದಕ್ಕೇ ಕಷ್ಟವಿದೆ. ಸುನ್ನಿಗಳ ಹೊರತಾದ ಎಲ್ಲರನ್ನೂ ಅದು ಕೊಲ್ಲುತ್ತಿದೆ. ಪತ್ರಕರ್ತರು, ಸೇವಾ ಕಾರ್ಯಕರ್ತರ ಕತ್ತು ಸೀಳಿ ವೀಡಿಯೋ ಬಿಡುಗಡೆಗೊಳಿಸುತ್ತಿದೆ. ಬಹುದೇವಾರಾಧಕರಾದ ಯಜೀದಿಗಳನ್ನು ಸತಾಯಿಸುತ್ತಿದೆ. ಮಹಿಳೆಯರನ್ನು ಗುಲಾಮರನ್ನಾಗಿ ಬಳಸಿಕೊಳ್ಳುತ್ತಿದೆ. ಮಾತ್ರವಲ್ಲ, ಈ ಗುಂಪಿನ ನಾಯಕ ಅಬೂಬಕರ್ ಬಗ್ದಾದಿಯು 2004ರಲ್ಲಿ ಬರೆದ ಮತ್ತು ‘ದಿ ಮ್ಯಾನೇಜ್‍ಮೆಂಟ್ ಆಫ್  ಸೆವೇಜೆರಿ' ಎಂಬ ಹೆಸರಲ್ಲಿ 2006ರಲ್ಲಿ ಇಂಗ್ಲಿಷ್‍ಗೆ ಅನುವಾದಗೊಂಡ ಪುಸ್ತಕದ ವಿವರಗಳೂ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ವಿಲಿಯಂ ಮೆಕಾಂಟ್ ಎಂಬವರು ಅನುವಾದಿಸಿದ ಆ ಪುಸ್ತಕದಲ್ಲಿ ಇವೆ ಎಂದು ಹೇಳಲಾಗುತ್ತಿರುವ ಅಂಶಗಳನ್ನು ನೋಡಿದರೆ, ಆರೋಗ್ಯವಂತ ಮನುಷ್ಯನೊಬ್ಬ ಹಾಗೆಲ್ಲ ಬರೆಯಬಹುದು ಎಂದು ಊಹಿಸುವುದಕ್ಕೂ ಸಾಧ್ಯವಿಲ್ಲ. ದುರಂತ ಏನೆಂದರೆ, ಅಬೂಬಕರ್ ಬಗ್ದಾದಿಯ ಐಸಿಸ್‍ನ ಬಗ್ಗೆ, ಆತನ ಖಿಲಾಫತ್ ಘೋಷಣೆಯ ಬಗ್ಗೆ ಮತ್ತು ರಕ್ತದಾಹದ ಬಗ್ಗೆ ಧಾರಾಳ ವಿವರಗಳನ್ನೂ ಸಂಶೋಧಿತ ವರದಿಗಳನ್ನೂ ಒದಗಿಸುತ್ತಿರುವ ಮಾಧ್ಯಮ ಜಗತ್ತು ಆತನ ಹಿನ್ನೆಲೆಯ ಬಗ್ಗೆ ಏನನ್ನೂ ಹೇಳುತ್ತಿಲ್ಲ. ಎರಡು ವರ್ಷಗಳ ಹಿಂದೆ ದಿಢೀರ್ ಆಗಿ ಚರ್ಚೆಗೆ ಬಂದ ಈ ವ್ಯಕ್ತಿಯು ಮೊದಲು ಎಲ್ಲಿದ್ದ, ಏನಾಗಿದ್ದ ಎಂಬುದನ್ನು ಚರ್ಚೆಗೆ ಒಳಪಡಿಸುತ್ತಿಲ್ಲ. ಗ್ವಾಂಟನಾಮೋ ಜೈಲಲ್ಲಿದ್ದ ಈತನನ್ನು ಅಮೇರಿಕ ಯಾವ ಕಾರಣಕ್ಕಾಗಿ ಬಿಡುಗಡೆಗೊಳಿಸಿತು ಅನ್ನುವುದು ಈ ವರೆಗೂ ಬಹಿರಂಗವಾಗಿಲ್ಲ. ಐಸಿಸ್ ಇವತ್ತು ಬಳಸುತ್ತಿರುವ ಆಯುಧಗಳು ಎಷ್ಟು ಆಧುನಿಕವಾದವು ಎಂದರೆ, ಸಿರಿಯಾ ಅಥವಾ ಇರಾಕ್‍ನ ಸರಕಾರಗಳಿಗೂ ಅದನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಆಯುಧಗಳನ್ನು ಸ್ವಯಂ ಉತ್ಪಾದಿಸುವ ವೈಜ್ಞಾನಿಕ ಬಲವಾಗಲಿ, ಸುಸಜ್ಜಿತ ಕಾರ್ಖಾನೆಯಾಗಲಿ ಇಲ್ಲದ ಗುಂಪೊಂದು  ಆಧುನಿಕ ಆಯುಧಗಳನ್ನು ಪಡೆಯುತ್ತಿರುವುದು ಎಲ್ಲಿಂದ? ಅರಬ್ ರಾಷ್ಟ್ರಗಳ ಹೆಸರಲ್ಲಿ ಮೂರನೆಯ ಶಕ್ತಿಯೊಂದು ಐಸಿಸ್ ಅನ್ನು ನಿಯಂತ್ರಿಸುತ್ತಿದೆಯೇ, ಅದರ ಉದ್ದೇಶ ಏನಿರಬಹುದು?
 ನಿಜವಾಗಿ, ಯಾವುದೇ ಒಂದು ಬಾವುಟವನ್ನು ಹೊಲಿಯುವುದಕ್ಕೋ ಪ್ರದರ್ಶಿಸುವುದಕ್ಕೋ ಕಷ್ಟವೇನೂ ಇಲ್ಲ. ಆದರೆ ಅದನ್ನು ಹೊಲಿಯುವವರಿಗೆ ಮತ್ತು ಪ್ರದರ್ಶಿಸುವವರಿಗೆ ತಾನು ಯಾವುದನ್ನು ಹೊಲಿಯುತ್ತಿದ್ದೇನೆ ಮತ್ತು ಪ್ರದರ್ಶಿಸುತ್ತಿದ್ದೇನೆ ಅನ್ನುವ ಎಚ್ಚರಿಕೆ ಇರಬೇಕು. ಐಸಿಸ್ ಎಂಬುದು ಕಾಶ್ಮೀರ ಎಂದಲ್ಲ, ಈ ಜಗತ್ತಿನ ಯಾವ ಮೂಲೆಯಲ್ಲಿರುವ ಮುಸ್ಲಿಮರ ಸಮಸ್ಯೆಗಳಿಗೂ ಪರಿಹಾರ ಅಲ್ಲ. ಅದರ ಹೆಸರಲ್ಲಿ ವರದಿಯಾಗುತ್ತಿರುವ ಸುದ್ದಿಗಳನ್ನು ಪರಿಗಣಿಸಿದರೆ ಅದು ಈ ಗೋಲದಿಂದ ಅತ್ಯಂತ ಶೀಘ್ರ ನಿರ್ನಾಮವಾಗಬೇಕಾದ ಗುಂಪು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂದಹಾಗೆ, ಈ ದೇಶದಲ್ಲಿ ಮುಸ್ಲಿಮರ ವಿರುದ್ಧ ತಾರತಮ್ಯದ, ಜನಾಂಗ ಭೇದದ ಧೋರಣೆಯನ್ನು ತಳೆಯಲಾಗುತ್ತಿದೆ, ಹತ್ಯಾಕಾಂಡಕ್ಕೆ ಗುರಿಪಡಿಸಲಾಗುತ್ತಿದೆ, ಸದಾ ಭಯದ ವಾತಾವರಣದಲ್ಲಿ ಬದುಕುವಂತೆ ಮತ್ತು ಆರ್ಥಿಕವಾಗಿ ಸಮರ್ಥರಾಗದಂತೆ ಕೋಮುಗಲಭೆಗಳ ಮೂಲಕವೋ ಇನ್ನಿತರ ಷಡ್ಯಂತ್ರಗಳ ಮೂಲಕವೋ ತಡೆಲಾಗುತ್ತಿದೆ ಎಂಬುದೆಲ್ಲ ನಿಜ. ಆದರೆ ಅದಕ್ಕೆ ಐಸಿಸ್ ಅಥವಾ ಇನ್ನಿತರ ಉಗ್ರವಾದಿ ಆಲೋಚನೆಗಳು ಪರಿಹಾರ ಅಲ್ಲ. ಐಸಿಸ್ ಅನ್ನು ಈ ದೇಶದಲ್ಲಿ ನಿಷೇಧಿಸಲಾಗಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಅದರ ಬಾವುಟ ಹಾರಾಡಿಸುವುದನ್ನು ಸಮರ್ಥಿಸಲೂ ಸಾಧ್ಯವಿಲ್ಲ. ಕೋಮುವಾದಿಗಳು ಈ ದೇಶದಲ್ಲಿ ಎಷ್ಟು ಸಂಖ್ಯೆಯಲ್ಲಿದ್ದಾರೋ ಅದರ ಎಷ್ಟೋ ಪಾಲು ಅಧಿಕ ಸಂಖ್ಯೆಯಲ್ಲಿ ಕೋಮುವಾದದ ವಿರೋಧಿಗಳು ಈ ದೇಶದಲ್ಲಿದ್ದಾರೆ. ವಿವಿಧ ಧರ್ಮೀರಿರುವ ಈ ದೇಶದಲ್ಲಿ ಅತ್ಯಂತ ಉತ್ತಮವಾದ ಸಂವಿಧಾನವೂ ಇದೆ. ಇಲ್ಲಿನ ಕೋರ್ಟುಗಳೂ ಅನೇಕ ಬಾರಿ ಕೋಮುವಾದಿ ಆಲೋಚನೆಗಳಿಗೆ, ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆ ನೀಡಿವೆ. ಸರ್ವರಿಗೂ ಸಮಾನ ನ್ಯಾಯ, ಸ್ವಾತಂತ್ರ್ಯ, ಹಕ್ಕುಗಳನ್ನು ಒದಗಿಸುವಂತೆ ಆಗ್ರಹಿಸುವುದಕ್ಕೆ ಸಭೆ, ಸೆಮಿನಾರ್, ರಾಲಿಗಳೂ ಇಲ್ಲಿ ನಡೆಯುತ್ತಿವೆ. ಒಂದು ರೀತಿಯಲ್ಲಿ, ದಮನಿತರ ಪರ ಮತ್ತು ದಂಗೆಕೋರರ ವಿರುದ್ಧವಿರುವ ಒಂದು ವಾತಾವರಣ ಇವತ್ತು ಈ ದೇಶದಲ್ಲಿದೆ. ಹೀಗಿರುವಾಗ ಈ ಯಾವ ಗುಣವನ್ನೂ ಹೊಂದಿಲ್ಲದ ಐಸಿಸ್ ಅನ್ನು ಯುವಕರು ಬೆಂಬಲಿಸುತ್ತಾರೆಂದರೆ, ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲ  ಹೇಳುವಂತೆ, ಅವರನ್ನು ಮೂರ್ಖರೆಂದಲ್ಲದೇ ಇನ್ನೇನೆಂದು ಕರೆಯಬೇಕು?
 ಈ ದೇಶದಲ್ಲಿ ಮುಸ್ಲಿಮರಿಗೆ ಎರಡು ಸವಾಲುಗಳು ಸದಾ ಎದುರಾಗುತ್ತಲೇ ಇರುತ್ತವೆ. ಒಂದು ದೇಶಪ್ರೇಮದ್ದಾದರೆ ಇನ್ನೊಂದು ಭಯೋತ್ಪಾದನೆಯದ್ದು. ಈ ಎರಡು ಅಸ್ತ್ರಗಳನ್ನು ಎತ್ತಿಕೊಂಡು ಮುಸ್ಲಿಮರನ್ನು ಇರಿಯುವುದಕ್ಕೆ ಕೋಮುವಾದಿಗಳು ಸಂದರ್ಭಗಳನ್ನು ಹುಡುಕುತ್ತಲೇ ಇರುತ್ತಾರೆ. ಪ್ರತಿದಿನ ಬೆಳಿಗ್ಗೆದ್ದ ಕೂಡಲೇ ಭಾರತ್ ಮಾತಾ ಕಿ ಜೈ ಎಂದು ಘೋಷಿಸಿಯೇ ಮುಸ್ಲಿಮರು ನಿತ್ಯದ ಕರ್ಮಗಳನ್ನು ನಿರ್ವಹಿಸಬೇಕು ಎಂದು ಅವರು ಒತ್ತಡ ಹಾಕುತ್ತ್ತಿದ್ದಾರೆ. ಮದ್ರಸಗಳಲ್ಲಿ ರಾಷ್ಟ್ರಧ್ವಜ ಅರಳುತ್ತದೋ ಇಲ್ಲವೋ ಎಂಬುದನ್ನು ಕ್ಯಾಮರಾ ಹಿಡಿದುಕೊಂಡು ಅವರು ಪತ್ತೆದಾರಿಕೆ ನಡೆಸುತ್ತಿದ್ದಾರೆ. ಬಾಂಬ್ ಸ್ಫೋಟಗಳು ನಡೆದ ತಕ್ಷಣ ಮುಸ್ಲಿಮರಿಂದ ಅವರು ಖಂಡನೆಯನ್ನು ನಿರೀಕ್ಷಿಸುತ್ತಾರೆ.. ಆದರೂ ಇವಾವುವೂ ಐಸಿಸ್‍ನ ಬಾವುಟವನ್ನು ಪ್ರದರ್ಶಿಸುವುದಕ್ಕೆ ಸಮರ್ಥನೆ ಆಗುವುದಿಲ್ಲ. ಮುಸ್ಲಿಮರನ್ನು ಸದಾ ಕಟಕಟೆಯಲ್ಲಿ ನಿಲ್ಲಿಸುವ ವಾತಾವರಣದಿಂದ ನೊಂದು ಅದಕ್ಕೆ ಪ್ರತಿರೋಧವೆಂಬಂತೆ ಈ ಬಾವುಟವನ್ನು ಹಾರಿಸಲಾಗಿದೆ ಎಂದು ಹೇಳುವುದರಲ್ಲಿ ನಿಜ ಇದೆಯಾದರೂ ಅದು ಸಂಪೂರ್ಣ ಒಪ್ಪತಕ್ಕದ್ದಲ್ಲ. ಐಸಿಸ್ ಇಸ್ಲಾಮನ್ನು ಯಾವ ರೀತಿಯಲ್ಲೂ ಪ್ರತಿನಿಧಿಸುತ್ತಿಲ್ಲ. ಆದ್ದರಿಂದಲೇ ಅದರ ಬಾವುಟವನ್ನು ಪ್ರದರ್ಶಿಸುವುದು ತಪ್ಪು, ಆಕ್ಷೇಪಾರ್ಹ ಮತ್ತು ಖಂಡನೀಯ. ಅನ್ಯಾಯವನ್ನು ನ್ಯಾಯಯುತ ವಿಧಾನದ ಮೂಲಕ ಪ್ರಶ್ನಿಸಬೇಕೇ ಹೊರತು ಅನ್ಯಾಯಯುತವಾಗಿ ಅಲ್ಲ.