Wednesday, 11 November 2015

ತಲಾಕ್, ಬಹುಪತ್ನಿತ್ವ ಮತ್ತು ಸಮಾನ ನಾಗರಿಕ ಸಂಹಿತೆ

     
     ಬಹುಪತ್ನಿತ್ವ, ತಲಾಕ್ ಮತ್ತು ಜಿಹಾದ್ ಎಂಬೀ ಮೂರು ಪದಗುಚ್ಛಗಳು ಈ ದೇಶದಲ್ಲಿ ಚರ್ಚೆಗೆ ಒಳಗಾದಷ್ಟು ಬಹುಶಃ ಮುಸ್ಲಿಮರಿಗೆ ಸಂಬಂಧಿಸಿದ ಇನ್ನಾವ ಪದ ಪ್ರಯೋಗಗಳೂ ಚರ್ಚೆಗೊಳಗಾಗಿರುವ ಸಾಧ್ಯತೆ ಇಲ್ಲ. ಇದರಲ್ಲಿ ಜಿಹಾದ್‍ನ ಚರ್ಚೆ ಬಹುತೇಕ ಮುಗಿದಿದೆ. ಇದಕ್ಕೆ ಮುಖ್ಯ ಕಾರಣ - ಮುಸ್ಲಿಮ್ ವಿದ್ವಾಂಸರು, ಸಾಮಾಜಿಕ ಹೋರಾಟಗಾರರು ಮತ್ತು ಸಂಘಟನೆಗಳು ಜಿಹಾದ್ ಏನು ಮತ್ತು ಏನಲ್ಲ ಎಂಬುದನ್ನು ಪದೇ ಪದೇ ಈ ದೇಶದಲ್ಲಿ ಸಾರಿದ್ದು. ಅದಕ್ಕಾಗಿ ಈ ದೇಶದಾದ್ಯಂತ ಅಸಂಖ್ಯ ಸೆಮಿನಾರ್‍ಗಳು ನಡೆದಿವೆ. ಸಂವಾದ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳಾಗಿವೆ. ಬಾಂಬ್ ಸ್ಫೋಟಿಸುವವರನ್ನು ‘ಜಿಹಾದಿ' ಅನ್ನುತ್ತಿದ್ದ ಮಾಧ್ಯಮಗಳು ಕ್ರಮೇಣ ಆ ಪದವನ್ನು ಕೈ ಬಿಡುವಷ್ಟು ಇವು ಪರಿಣಾಮಕಾರಿಯಾಗಿವೆ. ಆದರೆ ಬಹುಪತ್ನಿತ್ವ ಮತ್ತು ತಲಾಕ್‍ಗೆ ಸಂಬಂಧಿಸಿ ಹೀಗೆ ಹೇಳುವಂತಿಲ್ಲ. ಇವೆರಡರ ಬಗ್ಗೆ ತಪ್ಪು ಅಭಿಪ್ರಾಯಗಳು ಈ ದೇಶದ ಮುಸ್ಲಿಮೇತರರಲ್ಲಿ ಮಾತ್ರ ಇರುವುದಲ್ಲ, ಮುಸ್ಲಿಮರಲ್ಲಿಯೂ ಇದೆ. ಮುಸ್ಲಿಮೇತರರಲ್ಲಿ ಇದರ ಪ್ರಮಾಣ ‘ಭೀಕರ’ ಮಟ್ಟದಲ್ಲಿದ್ದರೆ, ಮುಸ್ಲಿಮರಲ್ಲಿ ತುಸು ಕಡಿಮೆಯಾದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ. ತಲಾಕ್ ತಲಾಕ್ ತಲಾಕ್ ಎಂದು ಮೂರು ಬಾರಿ ಹೇಳಿಬಿಟ್ಟರೆ ದಾಂಪತ್ಯವೆಂಬ ಅತಿ ಪವಿತ್ರ ಮತ್ತು ಪಾವನ ಸಂಬಂಧವೊಂದು ಶಾಶ್ವತವಾಗಿ ಕಳಚಿಕೊಂಡು ಬಿಡುತ್ತದೆ ಎಂದು ನಂಬುವ ಮಂದಿ ಮುಸ್ಲಿಮರಲ್ಲೂ ಮುಸ್ಲಿಮೇತರರಲ್ಲೂ ಖಂಡಿತ ಇದ್ದಾರೆ. ‘ದೇವನು ಅತ್ಯಂತ ಹೆಚ್ಚು ಇಷ್ಟಪಡದ ಕಾರ್ಯ ತಲಾಕ್' ಎಂಬುದಾಗಿ ಪವಿತ್ರ ಕುರ್‍ಆನ್‍ನಲ್ಲಿ ಇದೆ ಎಂದು ಹೇಳಿದರೆ ಅಚ್ಚರಿಯಿಂದ ನೋಡುವಷ್ಟು ತಲಾಕ್‍ನ ಬಗ್ಗೆ ಅನುಮಾನಗಳಿವೆ. ಬಹುಪತ್ನಿತ್ವವನ್ನೂ ಇದರಿಂದ ಹೊರಗಿಟ್ಟು ನೋಡಬೇಕಿಲ್ಲ. ಒಂದು ಬಗೆಯ ಅನುಮಾನ, ಅಚ್ಚರಿ, ಆಘಾತಗಳನ್ನು ಹೊತ್ತುಕೊಂಡು ‘ತಲಾಕ್' ಮತ್ತು ‘ಬಹುಪತ್ನಿತ್ವ'ಗಳು ಈ ದೇಶದಲ್ಲಿ ಸುತ್ತಾಡುವಾಗ ಇದರ ಕುರಿತಂತೆ ಗುಜರಾತ್ ಹೈಕೋರ್ಟ್‍ನ ಅಭಿಪ್ರಾಯವನ್ನು ಅಚ್ಚರಿಯಿಂದ ನೋಡಬೇಕಿಲ್ಲ. ‘ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದೇ ಇವೆರಡರ ದುರುಪಯೋಗಕ್ಕಿರುವ ಮದ್ದು' ಎಂದು ಅದು ಹೇಳಿರುವುದರಲ್ಲಿ ಕೆಲವು ಗಮನಾರ್ಹ ಅಂಶಗಳಿವೆ. ಮಾತ್ರವಲ್ಲ, ಅಷ್ಟೇ ಭ್ರಮೆಗಳೂ ಇವೆ. ಸಮಾನ ನಾಗರಿಕ ಸಂಹಿತೆ ಜಾರಿಗೊಂಡ ಕೂಡಲೇ ಈ ದೇಶದ ಸರ್ವ ಸಮಸ್ಯೆಗಳೂ ಪರಿಹಾರವಾಗಿ ಬಿಡುತ್ತವೆ ಎಂದು ವಾದಿಸುವುದು ಪರಮ ದಡ್ಡತನ. ಈ ದೇಶದಲ್ಲಿ ಹಲವಾರು ಧರ್ಮಗಳಿವೆ. ಜಾತಿ ಪಂಗಡಗಳಿವೆ. ಹಾಗೆಯೇ ಪ್ರತಿಯೊಂದಕ್ಕೂ ಅವುಗಳದ್ದೇ ಆದ ವೈಯಕ್ತಿಕ ನಿಯಮ-ನಿಬಂಧನೆಗಳಿವೆ. ಅವುಗಳಲ್ಲಿ ಮೌಢ್ಯ ಇದ್ದರೆ ಅಥವಾ ಮನುಷ್ಯ ವಿರೋಧಿ ನಂಬುಗೆಗಳಿದ್ದರೆ ಅವುಗಳಿಗೆ ಕಾನೂನು ರೀತಿಯಲ್ಲಿ ತಡೆ ಒಡ್ಡಬೇಕಾದುದು ತೀರಾ ಅಗತ್ಯ. ಸತಿ, ಬೆತ್ತಲೆ ಸೇವೆ, ದೇವದಾಸಿ, ಮಾನವ ಬಲಿ, ವರ್ಣ ವ್ಯವಸ್ಥೆಯಂತಹ ಹತ್ತು-ಹಲವು ಆಚರಣೆಗಳನ್ನು ಸಮಾನ ನಾಗರಿಕ ಸಂಹಿತೆಯ ಹಂಗಿಲ್ಲದೆಯೇ ನಿರ್ಬಂಧಿಸಲಾಗಿದೆ. ಒಂದು ವೇಳೆ, ತಲಾಕ್ ಮತ್ತು ಬಹುಪತ್ನಿತ್ವಗಳು ದುರುಪಯೋಗಕ್ಕೀಡಾಗುತ್ತಿದ್ದರೆ ಅದನ್ನು ಈಗಿರುವ ಕಾನೂನುಗಳ ಮೂಲಕವೇ ಪರಿಹರಿಸುವುದಕ್ಕೆ ಸಾಧ್ಯವಿದೆ. ಅಷ್ಟಕ್ಕೂ, ದುರುಪಯೋಗಕ್ಕೀಡಾದ ನಿಯಮಗಳಾದರೂ ಯಾವುವು? ಪುಟಾಣಿಗಳ ಬಿಸಿಯೂಟದಿಂದ ಹಿಡಿದು ವೃದ್ಧಾಪ್ಯ ವೇತನದ ವರೆಗೆ ಪ್ರತಿಯೊಂದನ್ನೂ ದುರುಪಯೋಗಿಸಲಾಗುತ್ತಿರುವ ಇಂದಿನ ದಿನಗಳಲ್ಲಿ ಬಹುಪತ್ನಿತ್ವ ಅಥವಾ ತಲಾಕ್‍ಗಳು ದುರುಪಯೋಗವಾಗುತ್ತಿರುವುದನ್ನು ಅದ್ಭುತವೆಂಬಂತೆ ವ್ಯಾಖ್ಯಾನಿಸುವುದರಲ್ಲಿ ಏನರ್ಥವಿದೆ? ಸಮಾನ ನಾಗರಿಕ ಸಂಹಿತೆ ಜಾರಿಗೊಂಡ ಕೂಡಲೇ ವೈಯಕ್ತಿಕ ನಿಯಮಗಳ ದುರುಪಯೋಗಗಳೆಲ್ಲ ಸ್ಥಗಿತಗೊಳ್ಳಬಹುದೇ? ಇಲ್ಲಿನ ಸಮಸ್ಯೆಗಳಿಗೆ ಸಮಾನ ನಾಗರಿಕ ಸಂಹಿತೆ ಜಾರಿಯಾಗದಿರುವುದೇ ಕಾರಣವೇ ಅಥವಾ ಇರುವ ಕಾನೂನುಗಳನ್ನು ಸಮರ್ಪಕವಾಗಿ ಬಳಸದಿರುವುದೇ? ಹಾಗಂತ, ತಲಾಕ್ ಮತ್ತು ಬಹುಪತ್ನಿತ್ವಗಳು ದುರುಪಯೋಗವಾಗುತ್ತಿಲ್ಲ ಎಂದು ಹೇಳುತ್ತಿಲ್ಲ. ಆದರೆ, ಆಗುವ ದುರುಪಯೋಗಕ್ಕಿಂತ ಎಷ್ಟೋ ಪಟ್ಟು ಹೆಚ್ಚಿನ ಪ್ರಮಾಣದಲ್ಲಿ ಅದರ ದುರುಪಯೋಗವನ್ನು ಉಬ್ಬಿಸಿ ಮತ್ತು ಉತ್ಪ್ರೇಕ್ಷಿಸಿ ಹೇಳಲಾಗುತ್ತಿದೆ. ಈ ದೇಶದಲ್ಲಿ ಪತ್ನಿಯ ಜೊತೆಗೇ ಅನಧಿಕೃತವಾಗಿ ಇನ್ನೋರ್ವಳನ್ನು ಇಟ್ಟುಕೊಳ್ಳುವುದು `ಭೀಕರ' ಅನ್ನಿಸುವುದಿಲ್ಲ. ಲಿವಿಂಗ್ ಟುಗೆದರ್‍ನ ಹೆಸರಲ್ಲಿ ಹೆಣ್ಣು ಮತ್ತು ಗಂಡು ಮನ ಬಂದಂತೆ ಜೊತೆಗಿರುವುದು ಮತ್ತು ವಿಚ್ಛೇದನಗೊಳ್ಳುವುದು ಅಸಮರ್ಪಕವಾಗಿ ಕಾಣಿಸುವುದಿಲ್ಲ ಅಥವಾ ಸಿನಿಮಾ ಪ್ರಪಂಚವೂ ಸೇರಿದಂತೆ ಆಧುನಿಕ ಸಮಾಜದಲ್ಲಿ ತೀರಾ ಮಾಮೂಲಾಗಿರುವ ವಿಚ್ಛೇದನಗಳೂ ಹುಬ್ಬೇರಿಸುತ್ತಿಲ್ಲ. ಆದರೆ ಅಧಿಕೃತವಾಗಿ ಇಬ್ಬರನ್ನು (ಅತ್ಯಂತ ಸೂಕ್ತ ಮತ್ತು ಅನಿವಾರ್ಯ ಕಾರಣಗಳಿಗಾಗಿ ಮಾತ್ರ) ಇಟ್ಟುಕೊಳ್ಳುವುದನ್ನು ಅತ್ಯಂತ ಅನಾಗರಿಕವಾಗಿ ಸನ್ನಿವೇಶವಾಗಿ ನೋಡಲಾಗುತ್ತಿದೆ. ಏನೆನ್ನಬೇಕು ಇದಕ್ಕೆ?  
        ನಿಜವಾಗಿ, ಬಹುಪತ್ನಿತ್ವಕ್ಕೆ ಅತ್ಯಂತ ಕಠಿಣವಾದ ಶರತ್ತುಗಳಿವೆ. ಬಹುಪತ್ನಿತ್ವ ಒಂದು ಅನಿವಾರ್ಯ ಸಂದರ್ಭದ ಆಯ್ಕೆಯೇ ಹೊರತು ಅದು ಶರತ್ತು ರಹಿತವೂ ಅಲ್ಲ, ಬೇಕಾಬಿಟ್ಟಿಯೂ ಅಲ್ಲ. ಈ ಕುರಿತಂತೆ ಮುಸ್ಲಿಮ್ ಸಮಾಜದಲ್ಲಿ ಒಂದು ಹಂತದವರೆಗೆ ಅಜ್ಞಾನವಿದೆ ಎಂದು ಒಪ್ಪಿಕೊಂಡರೂ ಅದು ಇವತ್ತು ಬಿಂಬಿಸುವಂತೆ ಅಪಾಯಕಾರಿ ಮಟ್ಟದಲ್ಲಿಲ್ಲ ಎಂಬುದಕ್ಕೆ ಈ ದೇಶದಲ್ಲಿ ನಡೆಸಲಾದ ಜನಗಣತಿ ಸಮೀಕ್ಷೆಗಳೇ ಸಾಕ್ಷಿ. ಬಹುಪತ್ನಿತ್ವವನ್ನು ಈ ದೇಶದ ಹೆಚ್ಚಿನ ಮುಸ್ಲಿಮರು ಅನಿವಾರ್ಯ ಆಯ್ಕೆಯಾಗಿಯೇ ಇವತ್ತೂ ಪರಿಗಣಿಸಿದ್ದಾರೆ. ಆದ್ದರಿಂದಲೇ ಮುಸ್ಲಿಮೇತರರಿಗೆ ಹೋಲಿಸಿದರೆ ಈ ದೇಶದಲ್ಲಿ ಮುಸ್ಲಿಮರಲ್ಲಿ ಬಹುಪತ್ನಿತ್ವ ಕಡಿಮೆ. ಮುಸ್ಲಿಮರಲ್ಲಿ ಬಹುಪತ್ನಿತ್ವಕ್ಕೆ ಅವಕಾಶವಿದೆ ಎಂದು ಹೇಳುವ ಮಂದಿಯಲ್ಲಿ ತಂತಮ್ಮ ಪ್ರದೇಶದಲ್ಲಿ ಎಷ್ಟೆಷ್ಟು ಮುಸ್ಲಿಮರಿಗೆ ಬಹುಪತ್ನಿಯರಿದ್ದಾರೆ ಎಂದು ಪ್ರಶ್ನಿಸಿದರೆ ಉತ್ತರಿಸಲು ತಡವರಿಸುತ್ತಾರೆ. ತಲಾಕ್‍ನ ಸ್ಥಿತಿಯೂ ಇದುವೇ. ನಿಜವಾಗಿ, ಮೂರು ಬಾರಿ ತಲಾಕ್ ತಲಾಕ್ ಎಂದು ಹೇಳಿದರೆ ವಿಚ್ಛೇದನ ಆಗಿ ಬಿಡುತ್ತದೆ ಮತ್ತು ಮುಸ್ಲಿಮರನ್ನು ವಿಚ್ಛೇದನ ಬಹಳ ಸುಲಭ ಎಂದು ಹೇಳುವುದನ್ನು ನೋಡಿದರೆ, ಮುಸ್ಲಿಮರನ್ನು ವಿಚ್ಛೇದಿತೆಯರೇ ತುಂಬಿಕೊಂಡಿದ್ದಾರೆಂದೇ ನಂಬಬೇಕು. ಅಂದಹಾಗೆ, ತಲಾಕ್‍ಗೆ ಅದರದ್ದೇ ಆದ ನಿಯಮ-ನಿಬಂಧನೆಗಳಿವೆ. ತಲಾಕ್‍ಗೆ ಮೂರು ಹಂತಗಳಿವೆ. ಮೂರು ಬಾರಿ ಪಟಪಟನೆ ತಲಾಕ್ ಹೇಳುವುದು ಅತ್ಯಂತ ಅತಾರ್ಕಿಕ ಮತ್ತು ಅಸಮರ್ಪಕ ವಿಧಾನ. ಒಂದು ಬಾರಿ ತಲಾಕ್ ಹೇಳಿದ ಬಳಿಕ ಪತ್ನಿಯ ಜೊತೆಗೆ ಪತಿ ಒಂದು ಮುಟ್ಟಿನ ಕಾಲದ ವರೆಗೆ ಬದುಕಬೇಕು. ಅದರ ನಡುವೆ ಅವರು ಸೇರಿಕೊಂಡರೆ ತಲಾಕ್ ಅನೂರ್ಜಿತಗೊಳ್ಳುತ್ತದೆ. ಪುನಃ ತಲಾಕ್ ಹೇಳಿದರೆ ಪುನಃ ಮುಟ್ಟಿನ ವರೆಗೆ ಜೊತೆಗೆ ಬದುಕಬೇಕು ಮತ್ತು ಪರಸ್ಪರ ಸೇರಬಾರದು. ಹಾಗಾದರೆ ಅದು ಒಂದು ತಲಾಕ್ ಆಗುತ್ತದೆಯೇ ಹೊರತು ಸಂಪೂರ್ಣ ವಿಚ್ಛೇದನ ಅಲ್ಲ. ಹೀಗೆ ಮೂರು ಹಂತದಲ್ಲಿ ವಿಚ್ಛೇದನ ಕೋರುವುದು, ಅವುಗಳ ಮಧ್ಯೆ ಜೊತೆಯಾಗಿಯೇ ಬದುಕುವುದು ಮತ್ತು ಈ ಅವಧಿಯ ಮಧ್ಯೆ ಅವರು ಪರಸ್ಪರ ಸೇರದೇ ಇರುವುದು ನಡೆದರೆ ಪೂರ್ಣ ತಲಾಕ್ ಆಗುತ್ತದೆ. ಇದು ಒಂದು ನಿಮಿಷದ ಪ್ರಕ್ರಿಯೆ ಅಲ್ಲ. ಕನಿಷ್ಠ ಅಂದರೆ ಮೂರು ತಿಂಗಳು ಮತ್ತು ಗರಿಷ್ಠ ಅಂದರೆ ಎಷ್ಟು ತಿಂಗಳೂ ತಗಲಬಹುದಾದ ಒಂದು ದೀರ್ಘ ಪ್ರಕ್ರಿಯೆ. ಹಾಗಂತ, ಈ ಪ್ರಕ್ರಿಯೆಯನ್ನು ತೀರಾ ಹಾಸ್ಯಾಸ್ಪದಗೊಳಿಸುವವರು ಮುಸ್ಲಿಮರಲ್ಲಿ ವಿರಳ ಸಂಖ್ಯೆಯಲ್ಲಾದರೂ ಖಂಡಿತ ಇದ್ದಾರೆ. ಬಹುಪತ್ನಿತ್ವವನ್ನು ದುರುಪಯೋಗಿಸುವವರೂ ಇದ್ದಾರೆ. ಈ ಕುರಿತಂತೆ ಮುಸ್ಲಿಮರೊಳಗೆಯೇ ಜಾಗೃತಿ ಕಾರ್ಯಕ್ರಮ ಖಂಡಿತ ಆಗಲೇ ಬೇಕು. ಜಿಹಾದ್‍ನ ಬಗ್ಗೆ ಸಮಾಜಕ್ಕೆ ತಿಳಿಸಿಕೊಟ್ಟಂತೆಯೇ ಬಹುಪತ್ನಿತ್ವ ಮತ್ತು ತಲಾಕ್‍ಗಳ ನಿಜ ರೂಪವನ್ನು ಸಮಾಜಕ್ಕೆ ತಿಳಿಸಿಕೊಡಬೇಕು. ಇವುಗಳನ್ನು ಭೀಕರವಾಗಿಯೋ ಅಪಾಯಕಾರಿಯಾಗಿಯೋ ಕಲ್ಪಿಸಿಕೊಂಡವರಿಗೆ ಇದನ್ನು ತಿಳಿಸಿ ಕೊಡುವ ಅಗತ್ಯ ಖಂಡಿತಕ್ಕೂ ಇದೆ. ಆ ಬಳಿಕವೂ ಅವರು ಅದನ್ನು ಭೀಕರವಾಗಿಯೇ ಚಿತ್ರಿಸುವುದಾದರೆ ಆ ಬಗ್ಗೆ ಚರ್ಚೆಗಳಾಗಲಿ. ಸಂವಾದಗಳಾಗಲಿ. ಅದಕ್ಕಿಂತಲೂ ಮೊದಲು ತೀರ್ಮಾನ ಆಗದಿರಲಿ.

Thursday, 5 November 2015

ಆಗಬೇಕಾದ್ದು ಜನನ ನಿಯಂತ್ರಣವೋ ಅಲ್ಲ....

      ಜನಸಂಖ್ಯೆ ಸಂಪತ್ತೋ ಆಪತ್ತೋ ಎಂಬ ಗಂಭೀರ ಚರ್ಚೆಗೆ ಚೀನಾ ಉತ್ತರವೊಂದನ್ನು ನೀಡಿದೆ. ಈ ಉತ್ತರ ಯಾಕೆ ಮಹತ್ವಪೂರ್ಣ ಎಂದರೆ, ಈ ಉತ್ತರದ ಹಿಂದೆ 35 ವರ್ಷಗಳ ದೀರ್ಘ ಅನುಭವ ಇದೆ. ಜನಸಂಖ್ಯೆಯನ್ನು ಆಪತ್ತು ಎಂದು ಘೋಷಿಸಿ ‘ಕುಟುಂಬಕ್ಕೊಂದೇ ಮಗು’ ಎಂಬ ಕಾಯ್ದೆಯನ್ನು 1980ರಲ್ಲಿ ಕಡ್ಡಾಯವಾಗಿ ಜಾರಿಗೊಳಿಸಿದ ರಾಷ್ಟ್ರ ಚೀನಾ. ಆಗ ಚೀನಾವನ್ನು ಭಾರತ ಬೆರಗಿನಿಂದ ನೋಡಿತ್ತು. ಬರಬರುತ್ತಾ ಈ ಬೆರಗು ಅಭಿಮಾನವಾಗಿ ಮಾರ್ಪಟ್ಟಿತು. ಬಳಿಕ ಚೀನಾವೇ ಮಾದರಿಯಾಯಿತು. ಚೀನಾದ ಜನನ ನಿಯಂತ್ರಣ ಕಾಯ್ದೆಯನ್ನು ಕೊಂಡಾಡಿ ಈ ದೇಶದಲ್ಲಿ ಸಾಕಷ್ಟು ಬರಹಗಳು, ಭಾಷಣಗಳೂ ಕಾಣಿಸಿಕೊಂಡವು. ಮಾತ್ರವಲ್ಲ, ಇಲ್ಲಿಯ ಜನಸಂಖ್ಯೆಯನ್ನು ಹಿಂದೂ ಜನಸಂಖ್ಯೆ, ಮುಸ್ಲಿಮ್ ಜನಸಂಖ್ಯೆ, ಫಾರ್ಸಿ ಜನಸಂಖ್ಯೆ ಎಂದು ವಿಭಜಿಸಿ, ಇದರಲ್ಲಿ ಮುಸ್ಲಿಮ್ ಜನಸಂಖ್ಯೆ ಆಪತ್ತುಕಾರಿ ಎಂದು ಹೇಳುವ ಮತ್ತು ಅದರ ನಿಯಂತ್ರಣಕ್ಕಾಗಿ ಕರೆ ಕೊಡುವ ಸಂದರ್ಭಗಳೂ ಸೃಷ್ಟಿಯಾದುವು. ಈ ವಾತಾವರಣ ಈ ದೇಶದಲ್ಲಿ ಈಗಲೂ ಇದೆ. ಇದೇ ಸಂದರ್ಭದಲ್ಲಿ, ಜನನ ನಿಯಂತ್ರಣದ ಇನ್ನೊಂದು ಮುಖವನ್ನು ಚೀನಾ ಜಗತ್ತಿನ ಮುಂದೆ ತೆರೆದಿಟ್ಟಿದೆ. ಈ ಮುಖ ಅತ್ಯಂತ ಕರಾಳವಾದುದು. ‘ಕುಟುಂಬಕ್ಕೊಂದೇ ಮಗು’ ಎಂಬ ಕಾಯ್ದೆಯ ಜಾರಿಯ ಬಳಿಕ ಸುಮಾರು 400 ಮಿಲಿಯನ್ ಮಕ್ಕಳ ಹುಟ್ಟನ್ನು ತಡೆದಿರುವುದಾಗಿ ಚೀನಾ ಅಧಿಕೃತವಾಗಿಯೇ ಒಪ್ಪಿಕೊಂಡಿದೆ. ಇದೊಂದೇ ಅಲ್ಲ, ಅಸಂಖ್ಯಾತ ಗರ್ಭಪಾತಗಳು ಬಲವಂತದಿಂದ ನಡೆದಿವೆ. ಗರ್ಭಪಾತದ ಸಂದರ್ಭದಲ್ಲಿ ತಾಯಂದಿರ ಸಾವು, ಶಾಶ್ವತ ಅಂಗವೈಕಲ್ಯ ಮತ್ತು ಶಾಶ್ವತ ಕಾಯಿಲೆಗಳಿಗೆ ಅಸಂಖ್ಯ ತಾಯಂದಿರು ತುತ್ತಾಗಿದ್ದಾರೆ. ಬಲವಂತದಿಂದ ವ್ಯಾಸಕ್ಟಮಿ ಮತ್ತು ಟ್ಯುಬೆಕ್ಟಮಿ ಚಿಕಿತ್ಸೆಗಳು ನಡೆದಿವೆ. ಚೀನಾವು ಅಧಿಕೃತ ಅಂಕಿ-ಅಂಶಗಳನ್ನು ಜಗತ್ತಿನ ಮುಂದಿಡುವಾಗ ಅನಧಿಕೃತವಾಗಿ ನಡೆದ ಶಿಶುಹತ್ಯೆಗಳ ಪ್ರಮಾಣ ಈ ಅಧಿಕೃತಕ್ಕಿಂತ ದುಪ್ಪಟ್ಟು ಇದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕ್ರೌರ್ಯಗಳ ಒಟ್ಟು ಪರಿಣಾಮ ಏನೆಂದರೆ, ಯುವ ಸಮೂಹದ ತೀವ್ರ ಕುಸಿತ. ದುಡಿಯುವ ವರ್ಗ ಮತ್ತು ಈ ವರ್ಗವನ್ನು ಅವಲಂಬಿಸಿ ಬದುಕುವ ವೃದ್ಧರ ನಡುವಿನ ಅನುಪಾತದಲ್ಲಿ ಅಪಾಯಕಾರಿ ಏರಿಳಿತಗಳಾಗಿವೆ. 1950ರಲ್ಲಿ ದುಡಿಯುವ ವರ್ಗದ ಪ್ರಮಾಣ 63% ಇದ್ದರೆ 2010ರಲ್ಲಿ ಅದು 34%ಕ್ಕೆ ಕುಸಿದಿದೆ. ಅಂದರೆ ದುಡಿಯುವ ವರ್ಗಕ್ಕಿಂತ ಅವರನ್ನು ಅವಲಂಬಿಸಿಕೊಂಡ ವೃದ್ಧರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದಲೇ ಚೀನಾ ಇವತ್ತು ತನ್ನ ಒಂದೇ ಮಗು ನಿಯಮವನ್ನು ಸಡಿಲಿಸಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಮಾತ್ರವಲ್ಲ, ಪ್ರತಿ ಕುಟುಂಬ ಎರಡು ಮಕ್ಕಳನ್ನು ಹೊಂದಬಹುದು ಎಂದು ಘೋಷಿಸಿದೆ.
  ನಿಜವಾಗಿ, ಜನಸಂಖ್ಯೆಗೂ ಜನರ ಜೀವನ ಮಟ್ಟಕ್ಕೂ ಅಬೇಧ್ಯ ಸಂಬಂಧ ಇದೆ. ದುರಂತ ಏನೆಂದರೆ, ಜನರ ಜೀವನ ಮಟ್ಟವನ್ನು ಸುಧಾರಿಸಲು ವಿಫಲವಾದ ಪ್ರಭುತ್ವವು ತಾಯಂದಿರ ಹೊಟ್ಟೆಯನ್ನು ತೋರಿಸಿ ತನ್ನ ವೈಫಲ್ಯವನ್ನು ಅಡಗಿಸಿಕೊಳ್ಳಲು ಯತ್ನಿಸುತ್ತಿದೆ. ಹಸಿದ ಹೊಟ್ಟೆಗೆ ಅನ್ನವನ್ನು ಕೊಡುವ ಬದಲು ಹೊಟ್ಟೆಯಲ್ಲಿರುವ ಶಿಶುವನ್ನು ಕಿತ್ತುಕೊಳ್ಳಲು ಸಂಚು ರೂಪಿಸುವ ಈ ಕ್ರಮವನ್ನು ಕ್ರೌರ್ಯ ಎಂದಲ್ಲದೇ ಇನ್ನೇನೆಂದು ಕರೆಯಬೇಕು? ಅತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಇವತ್ತು ಜನಸಂಪತ್ತಿನ ಕೊರತೆಯನ್ನು ಎದುರಿಸುತ್ತಿವೆ. ಹೆಚ್ಚು ಮಕ್ಕಳನ್ನು ಹೊಂದುವ ಕುಟುಂಬಕ್ಕೆ ಅವು ಪಾರಿತೋಷಕಗಳನ್ನು ಘೋಷಿಸುತ್ತಿವೆ. ಮಕ್ಕಳೇ ಬೇಡ ಎಂದು ತೀರ್ಮಾನಿಸುವ ಯುವ ಪೀಳಿಗೆಯಿಂದಾಗಿ ಮುಂದೊಮ್ಮೆ ವೃದ್ಧರೇ ತುಂಬಿ ಹೋಗಬಹುದೆಂಬ ಅಂಜಿಕೆಯು ಅನೇಕ ರಾಷ್ಟ್ರಗಳನ್ನು ಇವತ್ತು ಕಾಡತೊಡಗಿದೆ. ಅದೇ ವೇಳೆ, ಹಿಂದುಳಿತ ಅಥವಾ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಜನನ ನಿಯಂತ್ರಣದ ಬಗ್ಗೆ ಪ್ರಭುತ್ವದಿಂದಲೇ ಹೇಳಿಕೆಗಳು ಹೊರಬೀಳುತ್ತಿವೆ. ಜನಸಂಖ್ಯೆಯನ್ನು ಆಪತ್ತೋ ಎಂಬ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಅಷ್ಟಕ್ಕೂ ಮುಂದುವರಿದ ಮತ್ತು ಹಿಂದುಳಿದ ರಾಷ್ಟ್ರಗಳ ನಡುವೆ ಜನನ ಪ್ರಕ್ರಿಯೆಗೆ ಸಂಬಂಧಿಸಿ ಈ ವೈರುಧ್ಯಗಳೇಕೆ ಕಾಣಿಸುತ್ತಿವೆ? ಶೈಕ್ಷಣಿಕವಾಗಿ ಅತ್ಯಂತ ಮುಂದಿರುವ ಕೇರಳದಲ್ಲಿ ಜನನ ಅನುಪಾತ ದೇಶದಲ್ಲೇ ಅತ್ಯಂತ ಕಡಿಮೆಯಿದೆ. ಶೈಕ್ಷಣಿಕವಾಗಿ ಮುಂದಿರುವ ದಕ್ಷಿಣ ಭಾರತದಲ್ಲಿ ಜನನ ಪ್ರಕ್ರಿಯೆಯು ಉತ್ತರ ಭಾರತಕ್ಕೆ ಹೋಲಿಸಿದರೆ ಸಾಕಷ್ಟು ಕಡಿಮೆ. ಯಾಕೆ ಹೀಗೆ? ಒಂದು ರೀತಿಯಲ್ಲಿ, ತಾಯಂದಿರ ಹೊಟ್ಟೆಗೂ ಅವರು ಬದುಕುತ್ತಿರುವ ಪರಿಸರ, ಜೀವನ ಮಟ್ಟ, ಶಿಕ್ಷಣ, ಉದ್ಯೋಗ.. ಮುಂತಾದುವುಗಳಿಗೂ ಸಂಬಂಧ ಇದೆ. ಹಾಗಂತ, ಇದು ಪ್ರಭುತ್ವಕ್ಕೆ ಗೊತ್ತಿಲ್ಲ ಎಂದಲ್ಲ. ಈ ದೇಶದಲ್ಲಿ ಜನಸಂಖ್ಯೆಗೆ ಸಂಬಂಧಿಸಿ ಒಂದಕ್ಕಿಂತ ಹೆಚ್ಚು ಸವಿೂಕ್ಷೆಗಳಾಗಿವೆ. ಎಲ್ಲೆಲ್ಲಿ, ಯಾವ್ಯಾವ ಪ್ರದೇಶ ಮತ್ತು ಪರಿಸರದಲ್ಲಿ ಜನಸಂಖ್ಯೆ ಹೆಚ್ಚಿದೆ ಅಥವಾ ಕಡಿಮೆಯಿದೆ ಎಂಬುದನ್ನು ಅಂಥ ಸವಿೂಕ್ಷೆಗಳು ಪ್ರಭುತ್ವಕ್ಕೆ ಮನವರಿಕೆ ಮಾಡಿಕೊಟ್ಟಿವೆ. ಆದರೆ, ಬಡವರ ಹೊಟ್ಟೆಯನ್ನು ಕತ್ತರಿಸಿದಷ್ಟು ಸುಲಭವಾಗಿ ಜನರ ಜೀವನ ಮಟ್ಟವನ್ನು ಎತ್ತರಿಸಲು ಸಾಧ್ಯವಿಲ್ಲ ಅನ್ನುವುದು ಪ್ರಭುತ್ವಕ್ಕೆ ಚೆನ್ನಾಗಿ ಗೊತ್ತು. ಎಲ್ಲರಿಗೂ ಉತ್ತಮ ಶಿಕ್ಷಣ, ಆಹಾರ, ಉದ್ಯೋಗವನ್ನು ಒದಗಿಸುವುದಕ್ಕೆ ಪ್ರಬಲ ಇಚ್ಛಾಶಕ್ತಿ ಮತ್ತು ಬದ್ಧತೆಯ ಅಗತ್ಯವಿದೆ. ಅದಕ್ಕಿಂತ ತಾಯಂದಿರ ಹೊಟ್ಟೆಯನ್ನೇ ಅಪಾಯಕಾರಿಯಾಗಿ ಬಿಂಬಿಸುವುದು ಸುಲಭ ಮತ್ತು ಆಕರ್ಷಕ. ಅದನ್ನು ಪ್ರತಿಭಟಿಸುವ ಸಾಮರ್ಥ್ಯವಾಗಲಿ ಜ್ಞಾನವಾಗಲಿ ಬಡವರಲ್ಲಿರುವುದಿಲ್ಲ. ಸರಕಾರವು ಬಡವರನ್ನು ತೋರಿಸಿ ‘ಮಕ್ಕಳನ್ನು ಹುಟ್ಟಿಸುವ ಮೆಷೀನು’ಗಳೆಂದು ತಮಾಷೆ ಮಾಡುವಾಗ ಈ ವರ್ಗ ಒಳಗೊಳಗೇ ಅಪರಾಧಿ ಭಾವನೆಯಿಂದ ಕುಸಿಯತೊಡಗುತ್ತದೆ. ‘ನಿನಗೆಷ್ಟು ಮಕ್ಕಳು’ ಎಂದು ವೈದ್ಯರು ವ್ಯಂಗ್ಯದಿಂದ ಇರಿಯುತ್ತಾರೆ. ಜನಗಣತಿಗೆ ಬಂದವರು ‘ನಿಮ್ಮ ಮನೆ ಮಿನಿ ಅಂಗನವಾಡಿ’ ಎಂದು ಕುಟುಕುತ್ತಾರೆ. ಹಾಗೆಯೇ ಮಾಧ್ಯಮಗಳು ಕೂಡ ಜನನ ನಿಯಂತ್ರಣದ ಬಗ್ಗೆ ಮೇಲು ಮೇಲಿನ ವಿವರಣೆಗಳನ್ನು ನೀಡುತ್ತಿರುತ್ತವೆ. ಒಂದು ರೀತಿಯಲ್ಲಿ ಬಡವರನ್ನು ಅಣಕಿಸುವ ಸರಕಾರಿ ನಾಟಕವೇ ಜನಸಂಖ್ಯಾ ಸ್ಫೋಟ. ಬಡ ಹೊಟ್ಟೆಗೆ ಅನ್ನ ನೀಡುವ ಬದಲು ಹೊಟ್ಟೆಯನ್ನೇ ಅಪಾಯಕಾರಿ ಎಂದು ಘೋಷಿಸುವ ಕ್ರೌರ್ಯ ಇದು.
  ಜನನ ಮತ್ತು ಮರಣ ಎರಡೂ ಪ್ರಾಕೃತಿಕವಾದುದು. ಅದು ನಿರಂತರ ಮತ್ತು ಸಹಜ. ಇದರಲ್ಲಿ ಒಂದನ್ನು ಅಪಾಯಕಾರಿ ಮತ್ತು ಇನ್ನೊಂದನ್ನು ಸಜ್ಜನ ಎಂದು ವಿಂಗಡಿಸುವುದು ನಮ್ಮ ಅಪ್ರಬುದ್ಧತೆಯನ್ನೇ ಸೂಚಿಸುತ್ತದೆ. ಭೌತಿಕತೆಯನ್ನೇ ಮಾನದಂಡವಾಗಿಸಿಕೊಂಡು ಮಾಡಲಾಗುವ ಅಭಿವೃದ್ಧಿ ಎಷ್ಟು ಅಪಾಯಕಾರಿಯೋ ಬಡತನವನ್ನು ಉಳಿಸಿಕೊಂಡೇ ಅಥವಾ ಬಡತನ ನಿರ್ಮೂಲನಕ್ಕಾಗಿ ಕ್ರಮಗಳನ್ನು ಕೈಗೊಳ್ಳದೆಯೇ ತಾಯಂದಿರ ಹೊಟ್ಟೆಯನ್ನು ಆಪತ್ತು ಎಂದು ಘೋಷಿಸುವುದು ಕೂಡ ಅಷ್ಟೇ ಅಪಾಯಕಾರಿ. ಮುಂದುವರಿದ ಕೆಲವು ರಾಷ್ಟ್ರಗಳಲ್ಲಿ ಜನನ ಪ್ರಕ್ರಿಯೆ ನಿಂತು ಹೋಗುತ್ತಿರುವುದಕ್ಕೆ ಪ್ರಮುಖ ಕಾರಣ ಅಲ್ಲಿನ ಜೀವನ ದೃಷ್ಟಿಕೋನ. ಗರ್ಭ ಧರಿಸುವುದು, ಮಕ್ಕಳ ಪಾಲನೆ, ಕುಟುಂಬ ನಿರ್ವಹಣೆ ಮುಂತಾದ ಜವಾಬ್ದಾರಿಗಳನ್ನು ಹೊರಲು ಮುಂದುವರಿದ ಪೀಳಿಗೆ ತಯಾರಾಗುತ್ತಿಲ್ಲ. ಬದುಕು ಅನುಭವಿಸಲಿಕ್ಕೇ ಹೊರತು ಜವಾಬ್ದಾರಿ ಹೊರಲಲ್ಲ ಎಂಬೊಂದು ವಾತಾವರಣ ಅಲ್ಲಿ ನಿರ್ಮಾಣವಾಗುತ್ತಿದೆ. ಗಂಡು-ಹೆಣ್ಣು ಇಬ್ಬರೂ ದುಡಿಯುವುದು ಮತ್ತು ಇಷ್ಟ ಬಂದಂತೆ ಬದುಕುವುದರ ಹೊರತಾಗಿ ಸಾಮಾಜಿಕ ಜವಾಬ್ದಾರಿಗಳು ಮುಂದುವರಿದ ರಾಷ್ಟ್ರಗಳ ಆಧುನಿಕ ಪೀಳಿಗೆಗಳಲ್ಲಿ ಕಡಿಮೆಗೊಳ್ಳುತ್ತಿದೆ. ಆದ್ದರಿಂದ, ಜನಸಂಖ್ಯೆಯ ಸುತ್ತ ಚರ್ಚೆ ನಡೆಸುವಾಗ ಈ ಎಲ್ಲ ಮಗ್ಗುಲುಗಳನ್ನೂ ಗಣನೆಗೆ ತೆಗೆದುಕೊಳ್ಳಬೇಕು. ಪ್ರಭುತ್ವ ತನ್ನ ಜವಾಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸಿದರೆ ಪ್ರಕೃತಿಯ ಧಾರಣಾ ಸಾಮರ್ಥ್ಯದಷ್ಟೇ ಮಕ್ಕಳು ಹುಟ್ಟಿಯಾವು. ನಾವು ಬೊಟ್ಟು ಮಾಡಬೇಕಾದದ್ದು ಬಡ ತಾಯಂದಿರ ಹೊಟ್ಟೆಯನ್ನಲ್ಲ, ಪ್ರಭುತ್ವದ ಅಸಾಮರ್ಥ್ಯವನ್ನು. ಇಲ್ಲದಿದ್ದರೆ, ಚೀನಾ ಇವತ್ತು ಎದುರಿಸುತ್ತಿರುವ ವೃದ್ಧರ ಸಮಸ್ಯೆಯನ್ನು ಮುಂದೆ ನಾವೂ ಎದುರಿಸಬೇಕಾದೀತು.

Thursday, 29 October 2015

15 ವರ್ಷಗಳ ಪ್ರತಿಭಟನೆ ಮತ್ತು ಆತಂಕ

       ಇರೋಮ್ ಶರ್ಮಿಳಾ ಆತಂಕದಲ್ಲಿದ್ದಾರೆ. ತಾನು ಒಂಟಿಯಾಗುತ್ತಿರುವೆನೇ ಎಂಬ ಅನುಮಾನವೊಂದು ಅವರನ್ನು ಕಾಡತೊಡಗಿದೆ. ಮಾಧ್ಯಮಗಳ ಮುಂದೆ ತನ್ನ ಆತಂಕವನ್ನು ಅವರು ಬಹಿರಂಗವಾಗಿಯೇ ತೋಡಿಕೊಂಡಿದ್ದಾರೆ. ತನ್ನ ನಿರಾಹಾರ ಸತ್ಯಾಗ್ರಹ ಪ್ರತಿಭಟನೆಯನ್ನು ಮುಂದುವರಿಸಬೇಕೋ ಕೈ ಬಿಡಬೇಕೋ ಎಂಬ ಕುರಿತು ಜನಮತ ಸಂಗ್ರಹ ನಡೆಸಬೇಕೆಂಬ ಇರಾದೆಯನ್ನೂ ವ್ಯಕ್ತಪಡಿಸಿದ್ದಾರೆ. ಮಣಿಪುರದ ಮೇಲೆ ಹೇರಲಾಗಿರುವ ಸಶಸ್ತ್ರ ದಳದ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟಿಸುತ್ತಿರುವವರು ಈ ಶರ್ಮಿಳಾ. 1980 ಸೆ. 8ರಂದು ಕೇಂದ್ರ ಸರಕಾರವು ಮಣಿಪುರದಲ್ಲಿ ಈ ಕಾಯ್ದೆಯನ್ನು ಹೇರಿದಾಗ ಶರ್ಮಿಳಾ ಪುಟ್ಟ ಹುಡುಗಿ. ಈ ಕಾಯ್ದೆಯ ಬಗ್ಗೆ ಮತ್ತು ಅದು ಪೊಲೀಸರಿಗೆ ಒದಗಿಸುವ ಅಪರಿಮಿತ ಅಧಿಕಾರಗಳ ಬಗ್ಗೆ ತಿಳಿದುಕೊಳ್ಳುವ ವಯಸ್ಸು ಅದಾಗಿರಲಿಲ್ಲ. ಆದರೆ 2000ನೇ ಇಸವಿ ನವೆಂಬರ್ 2ರಂದು ಸಶಸ್ತ್ರ ಪಡೆಯ ಯೋಧರು ಮಣಿಪುರದ ರಾಜಧಾನಿ ಇಂಫಾಲ್‍ನಿಂದ 8 ಕಿ.ವಿೂ. ದೂರದ ಮಲ್ಲಮ್‍ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ 10 ಮಂದಿಯ ಗುಂಪನ್ನು ಸುತ್ತುವರಿದು ಗುಂಡಿಕ್ಕಿ ಹತ್ಯೆಗೈದಾಗ ಶರ್ಮಿಳಾ ಬೆಳೆದಿದ್ದರು. ಈ ಪರಿಸರದಲ್ಲಿ ಆ ಮೊದಲು ಸ್ಫೋಟಗೊಂಡಿದ್ದ ಬಾಂಬನ್ನು (ಅದರಲ್ಲಿ ಯಾರೂ ಗಾಯಗೊಂಡಿರಲೂ ಇಲ್ಲ) ಆ ಗುಂಡಿನ ದಾಳಿಗೆ ಯೋಧರು ಕಾರಣವಾಗಿ ಕೊಟ್ಟದ್ದನ್ನು ಶರ್ಮಿಳಾ ಒಪ್ಪಿಕೊಳ್ಳಲಿಲ್ಲ. ಈ ಘಟನೆಯ ಎರಡು ದಿನಗಳ ಬಳಿಕ ಆಕೆ ನಿರಾಹಾರ ಸತ್ಯಾಗ್ರಹವನ್ನು ಆರಂಭಿಸಿದರು. ಯೋಧರಿಗೆ ನಿರಂಕುಶ ಅಧಿಕಾರವನ್ನು ಕೊಡುವ ಕಾನೂನನ್ನು ಕೇಂದ್ರ ಸರಕಾರವು ರಾಜ್ಯದಿಂದ ಮರಳಿ ಪಡೆಯದೇ ತಾನು ಸತ್ಯಾಗ್ರಹವನ್ನು ನಿಲ್ಲಿಸಲಾರೆ ಎಂದು ಘೋಷಿಸಿದರು. ಆ ಸಂದರ್ಭದಲ್ಲಿ ಶರ್ಮಿಳಾ ತುಂಬು ಯೌವನೆ. ಎಲ್ಲರಂತೆ ಉದ್ಯೋಗ, ಮದುವೆ, ಮಕ್ಕಳು, ಕುಟುಂಬ ಎಂದು ಕನಸು ಕಾಣುವ ವಯಸ್ಸು. ಶರ್ಮಿಳಾ ದಿನಗಳೆದಂತೆ ರಾಷ್ಟ್ರೀಯ ಸುದ್ದಿಯಾದಳು. ಮಣಿಪುರದಲ್ಲಿ ಸಶಸ್ತ್ರ ಪಡೆಯ ಯೋಧರು ನಡೆಸುತ್ತಿರುವ ದೌರ್ಜನ್ಯಗಳನ್ನು ಮಾಧ್ಯಮಗಳು ವಿಶೇಷ ಆಸಕ್ತಿಯಿಂದ ಪ್ರಕಟಿಸತೊಡಗಿದುವು. ಶರ್ಮಿಳಾ ನಿಶ್ಶಕ್ತಳಾದಳು. ಸರಕಾರ ಆಕೆಯನ್ನು ಬಂಧಿಸಿ ಮೂಗಿನ ಮೂಲಕ ದ್ರವಾಹಾರ ನೀಡಲೇಬೇಕಾದ ಅನಿವಾರ್ಯತೆಗೆ ಸಿಲುಕಿತು. ಮಾನವ ಹಕ್ಕು ಹೋರಾಟಗಾರರು ಶರ್ಮಿಳಾರ ಪರ ಧ್ವನಿಯೆತ್ತಿದರು. ‘ಸೇವ್ ಶರ್ಮಿಳಾ ಆರ್ಗನೈಝೇಶನ್' ಎಂಬ ಹೆಸರಲ್ಲಿ ತಂಡವೊಂದೂ ರಚನೆಯಾಯಿತು. ಶರ್ಮಿಳಾ ಆಸ್ಪತ್ರೆಯಿಂದ ಬಿಡುಗಡೆಗೊಂಡಾಗ ಸ್ವಾಗತಿಸುವುದಕ್ಕೆ ಸಾವಿರಾರು ಮಂದಿ ಸೇರುತ್ತಿದ್ದರು. ಆಕೆಯ ಸಂದರ್ಶನ, ವರದಿ, ಸುದ್ದಿಗಳು ರಾಷ್ಟ್ರಮಟ್ಟದಲ್ಲಿ ಆಗಾಗ ಪ್ರಕಟಗೊಳ್ಳುತ್ತಲೇ ಇದ್ದುವು. ಹೀಗೆ ಕಳೆದ 15 ವರ್ಷಗಳಿಂದ ಅತ್ಯಂತ ಬದ್ಧತೆಯಿಂದ ಸತ್ಯಾಗ್ರಹವನ್ನು ಮುಂದುವರಿಸಿಕೊಂಡು ಬಂದಿರುವ ಶರ್ಮಿಳಾರಿಗೆ ಈಗ ಒಂಟಿತನದ ಅನುಭವವಾಗುತ್ತಿದೆ. ಆಕೆ ಬಂಧನಕ್ಕೀಡಾದರೂ ಬಿಡುಗಡೆಗೊಂಡರೂ ಈಗ ಜನ ಸೇರುತ್ತಿಲ್ಲ. ಸೇವ್ ಶರ್ಮಿಳಾ ಆರ್ಗನೈಝೇಶನ್‍ನ ಮಂದಿಯೇ ಪ್ರತಿಭಟನೆಯಲ್ಲಿ ಆಸಕ್ತಿಯನ್ನು ಕಳಕೊಂಡಿದ್ದಾರೆ. ಮಾನವ ಹಕ್ಕು ಹೋರಾಟಗಾರರು ತಣ್ಣಗಾಗಿದ್ದಾರೆ. ಏರು ಯೌವನದಲ್ಲಿ ಹೋರಾಟವೊಂದನ್ನು ಹುಟ್ಟು ಹಾಕಿದ ಶರ್ಮಿಳಾರಿಗೆ ಈಗ ಮಧ್ಯವಯಸ್ಸು. ಜೊತೆಗಿದ್ದವರೆಲ್ಲ ಮದುವೆ, ಮಕ್ಕಳು, ಕುಟುಂಬ ಎಂದು ಚೆಲ್ಲಾಪಿಲ್ಲಿಯಾಗಿರುವಾಗ ಮತ್ತು ಹೊಸ ತಲೆಮಾರು ಈ ಸತ್ಯಾಗ್ರಹದಲ್ಲಿ ಆಕರ್ಷಣೆ ಕಳಕೊಂಡಿರುವಾಗ ಶರ್ಮಿಳಾ ಸಹಜವಾಗಿ ಮರು ಅವಲೋಕನಕ್ಕೆ ಇಳಿದಿದ್ದಾರೆ. ಈ ಪ್ರತಿಭಟನೆ ಎಲ್ಲಿಯ ವರೆಗೆ ಎಂಬೊಂದು ಪ್ರಶ್ನೆ ಅವರನ್ನು ಆಳವಾಗಿ ಇರಿಯತೊಡಗಿದೆ. ಅಷ್ಟಕ್ಕೂ,
  ಮಣಿಪುರದ ಜೆ.ಎನ್. ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯ ಸುಸಜ್ಜಿತ ಕೋಣೆಯಲ್ಲಿ ಮೂಗಿನಲ್ಲಿ ದ್ರವಾಹಾರ ಸೇವಿಸುತ್ತಿರುವ ಶರ್ಮಿಳಾರಿಗಾಗಿ ಪ್ರತಿ ತಿಂಗಳು 80 ಸಾವಿರ ರೂಪಾಯಿ ಖರ್ಚು ಮಾಡುತ್ತಿರುವ ಅಲ್ಲಿನ ಸರಕಾರಕ್ಕೆ ಈ ಸುದ್ದಿ ಅತ್ಯಂತ ಇಷ್ಟ ಆಗಬಹುದು. ಶರ್ಮಿಳಾ ಸತ್ಯಾಗ್ರಹ ತ್ಯಜಿಸುವುದನ್ನು ಅದು ಎರಡೂ ಕೈಗಳಿಂದ ಸ್ವಾಗತಿಸಬಹುದು. ಆದರೆ ಈ ಬೆಳವಣಿಗೆ ಪ್ರತಿಭಟನೆಯ ಮೇಲೆ ಬೀರಬಹುದಾದ ಪರಿಣಾಮಗಳೇನು? ಪ್ರಜಾತಂತ್ರ ನೀಡಿರುವ ಪ್ರತಿಭಟನೆ ಎಂಬ ಅಸ್ತ್ರದ ಬಗ್ಗೆ ಯುವ ಪೀಳಿಗೆ ಹೊಂದಿರುವ ತೀವ್ರ ವೈರಾಗ್ಯದ ಸೂಚನೆಯಲ್ಲವೇ ಶರ್ಮಿಳಾರ ಆತಂಕ? ಶರ್ಮಿಳ ದ್ರವಾಹಾರ ಸೇವಿಸಿದರೂ ಘನಾಹಾರ ಸೇವಿಸಿದರೂ ಏನೂ ಬದಲಾವಣೆ ಆಗದು ಎಂಬೊಂದು ವಾತಾವರಣ ಸೃಷ್ಟಿಯಾಗಲು ಏನು ಕಾರಣ, ಯಾರು ಕಾರಣ? ಹಾಗಂತ, ವೈಯಕ್ತಿಕವಾಗಿ ಈ ಪ್ರತಿಭಟನೆಯ ಅಗತ್ಯ ಶರ್ಮಿಳಾರಿಗೆ ಖಂಡಿತಕ್ಕೂ ಇಲ್ಲ. ಮಲ್ಲಮ್‍ನಲ್ಲಿ ಸಾವಿಗೀಡಾಗ 16 ಮಂದಿಯಲ್ಲಿ ಆಕೆಯ ಮನೆಯವರು ಬಿಡಿ ಸಂಬಂಧಿಕರೂ ಇರುವ ಸಾಧ್ಯತೆ ಇಲ್ಲ. ಆಕೆ ಮನಸ್ಸು ಮಾಡಿದ್ದರೆ ಆಕೆಯ ವಯಸ್ಸಿನವರು ಇವತ್ತು ಆರಾಮವಾಗಿ ಬದುಕುತ್ತಿರುವಂತೆ, ಮಕ್ಕಳು, ಕುಟುಂಬ ಎಂದು ಎಲ್ಲೋ ಬದುಕುತ್ತಿರಬಹುದಿತ್ತು. ಇಷ್ಟಿದ್ದೂ, ಒಂದು ರಾಜ್ಯದ ಜನತೆಯ ಮೇಲಿನ ಕಾಳಜಿಯಿಂದ ಅತಿ ಕಷ್ಟಕರವಾದ ನಿರಾಹಾರ ಸತ್ಯಾಗ್ರಹಕ್ಕೆ ಮುಂದಾಗಿ ಇವತ್ತು ಆಕೆ ಜನ ಬೆಂಬಲದ ಕೊರತೆಯನ್ನು ಎದುರಿಸುತ್ತಿದ್ದರೆ ಅದಕ್ಕೆ ಹೊಸ ತಲೆಮಾರನ್ನೇ ಹೊಣೆಯಾಗಿಸಬೇಕಾಗುತ್ತದೆ. ಆಧುನಿಕ ಪೀಳಿಗೆಯ ಭಾಷೆಯಲ್ಲಿ ಹೇಳುವುದಾದರೆ ಪ್ರತಿಭಟನೆ ಎಂಬುದೇ ನಾಲಾಯಕ್ಕು. ಹೊಸ ತಲೆಮಾರು ಇವತ್ತು ಪ್ರತಿಭಟನೆಯಲ್ಲಿ ಆಸಕ್ತಿಯನ್ನೇ ಕಳಕೊಳ್ಳತೊಡಗಿದೆ. ಆಧುನಿಕ ಜೀವನ ಕ್ರಮವು ಎಂಜಾಯ್‍ಮೆಂಟ್ ಲೈಫ್‍ಸ್ಟೈಲ್ ಅನ್ನು ಕಲಿಸುತ್ತಿದೆಯೇ ಹೊರತು ಹೋರಾಟ ಮನೋಭಾವವನ್ನೇ ಸಮಾಜದಿಂದ ಕಿತ್ತುಕೊಳ್ಳುತ್ತಿದೆ. ‘ನಮ್ಮಷ್ಟಕ್ಕೆ ನಾವು' ಎಂಬೊಂದು ಸ್ವಹಿತಾಸಕ್ತಿ ಮನೋಭಾವವು ಯುವಪೀಳಿಗೆಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಇನ್ನು, ಗೋವಿನ ವಿಷಯದಲ್ಲೋ ಭಿನ್ನ ಧರ್ಮದ ಯುವಕ-ಯುವತಿಯರ ಪ್ರೇಮದ ವಿಷಯದಲ್ಲೋ ಅಥವಾ ಮಸೀದಿ-ಮಂದಿರಕ್ಕೆ ಬಿದ್ದ ಕಲ್ಲಿನ ಹೆಸರಿನಲ್ಲೋ ತಕ್ಷಣಕ್ಕೆ ಸೇರುವ ನೂರಾರು ಯುವಕರಲ್ಲಿ ಬಹುತೇಕ ಯಾರೊಬ್ಬರೂ ಜನಪರ ಪ್ರತಿಭಟನೆಯಲ್ಲಿ ಕಾಣಿಸಿಕೊಳ್ಳುವುದೇ ಇಲ್ಲ. ನೀರು, ವಿದ್ಯುತ್, ರಸ್ತೆ, ನಿರುದ್ಯೋಗ, ಬೆಲೆ ಏರಿಕೆ.. ಮುಂತಾದ ವಿಷಯಗಳನ್ನೆತ್ತಿಕೊಂಡು ಏರ್ಪಡಿಸಲಾಗುವ ಪ್ರತಿಭಟನೆಗಳಲ್ಲಿ ಜನಸಂಖ್ಯೆ ಶೂನ್ಯ ಅನ್ನುವಷ್ಟು ಕಡಿಮೆ. ಇಂಥ ಸ್ಥಿತಿಯಲ್ಲಿ ಶರ್ಮಿಳಾರ ಆತಂಕವನ್ನು ನಾವು ಕೇವರ ಅವರೊಬ್ಬರಿಗೇ ಸೀಮಿತಗೊಳಿಸಿ ನೋಡಬೇಕಿಲ್ಲ. ನಿಜವಾಗಿ, ಪ್ರತಿಭಟನೆಯಲ್ಲಿ ಜನರು ಆಸಕ್ತಿಯನ್ನು ಕಳೆದುಕೊಂಡು ಬಿಟ್ಟರೆ ಅದರಿಂದ ಅತ್ಯಂತ ಖುಷಿಯಾಗುವುದು ಪ್ರಭುತ್ವಕ್ಕೆ. ಪ್ರತಿಭಟನೆಯನ್ನು ಪ್ರತಿ ಸಂದರ್ಭದಲ್ಲೂ ಸೋಲಿಸುವುದಕ್ಕೆ ಪ್ರಭುತ್ವ ಯಾವಾಗಲೂ ಹೊಂಚು ಹಾಕುತ್ತಲೇ ಇರುತ್ತದೆ. ಶರ್ಮಿಳಾ ಅದರ ಸೂಚನೆಯನ್ನು ನೀಡಿದ್ದಾರೆ. ಹಾಗಂತ, ಒಂದೂವರೆ ದಶಕದಿಂದ ನಿರಾಹಾರ ಸತ್ಯಾಗ್ರಹದಲ್ಲಿರುವ ಶರ್ಮಿಳಾ, ಇನ್ನೂ ಆಕೆಯೇ ಆ ಪ್ರತಿಭಟನೆಯನ್ನು ಮುಂದಕ್ಕೆ ಕೊಂಡೊಯ್ಯಬೇಕೆಂದು ಹೇಳುವುದು ಕ್ರೌರ್ಯವಾಗುತ್ತದೆ. ತನ್ನ ಬದುಕಿನ ಬಹು ಅಮೂಲ್ಯ ಸಮಯವನ್ನು ಆಕೆ ಆ ಹೋರಾಟಕ್ಕಾಗಿ ಅರ್ಪಿಸಿದ್ದಾರೆ. ಇವತ್ತು ಅವರು ಈ ಪ್ರತಿಭಟನೆಯಿಂದ ಬಿಡುವನ್ನು ಬಯಸುವುದಾದರೆ ಜನರು ಅದಕ್ಕೆ ಅವಕಾಶ ಮಾಡಿಕೊಡಬೇಕು. ಇತರರು ಆ ಪ್ರತಿಭಟನೆಯ ನೇತೃತ್ವವನ್ನು ವಹಿಸಿಕೊಳ್ಳಬೇಕು. ಪ್ರತಿಭಟನೆಗೆ ಭಿನ್ನ ದಿಕ್ಕು, ಹೊಸ ಚೈತನ್ಯವನ್ನು ಒದಗಿಸಬೇಕು.
  ಏನೇ ಆಗಲಿ, ಪ್ರತಿಭಟನೆ ಎಂಬ ಪ್ರಜಾತಂತ್ರ್ಯದ ಬಹು ಅಮೂಲ್ಯ ಅಸ್ತ್ರವು ನಾಲಾಯಕ್ಕು ಆಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಎಲ್ಲರ ಮೇಲೂ ಇದೆ. ಬದಲಾದ ಕಾಲಕ್ಕೆ ತಕ್ಕಂತೆ ಅದಕ್ಕೆ ಹೊಸ ರೂಪ, ಭಾವ, ಅಂದವನ್ನು ನೀಡಬೇಕಾಗಿದೆ. ಶರ್ಮಿಳಾರ ಆತಂಕವು ಸುಳ್ಳಾಗಲಿ ಮತ್ತು ಅವರಿಗೆ ಯಶಸ್ಸು ಸಿಗಲಿ ಎಂದೇ ಹಾರೈಸೋಣ.

Wednesday, 21 October 2015

ಮಾಂಸವು ಆಹಾರವಾಗಿ ಇದ್ದರೂ ಇಲ್ಲದಿದ್ದರೂ..

     ಛತ್ತೀಸ್‍ಗಢವು ಭಾರತದ ಭಾಗವೋ ಅಥವಾ ಪ್ರತ್ಯೇಕ ರಾಷ್ಟ್ರವೋ ಎಂದು ಪ್ರಶ್ನಿಸಬೇಕಾದಂಥ ಆತಂಕಕಾರಿ ಬೆಳವಣಿಗೆಯೊಂದು ಸೃಷ್ಟಿಯಾಗಿದೆ. ಅಲ್ಲಿನ ಹೈಕೋರ್ಟಿಗೂ ಇಂಥದ್ದೇ ಅನುಭವವಾಗಿದೆ. ಛತ್ತೀಸ್‍ಗಢದ ಬಸ್ತಾರ್ ಜಿಲ್ಲೆಯ ಸುಮಾರು 50 ಗ್ರಾಮಗಳು ಹಿಂದೂ ಅಲ್ಲದವರ ಪ್ರಾರ್ಥನೆ, ಭಾಷಣ ಮತ್ತು ಧರ್ಮ ಪ್ರಚಾರಗಳಿಗೆ ನಿಷೇಧವನ್ನು ಹೇರಿವೆ. ಈ ಗ್ರಾಮಗಳಲ್ಲಿ ಹಿಂದೂ ಅಲ್ಲದವರಿಗೆ ಕೂಲಿಯಾಳುಗಳು ಸಿಗುವುದಿಲ್ಲ. ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ ತಡೆ ಒಡ್ಡಲಾಗುತ್ತದೆ. ಕುಡಿಯುವ ನೀರು, ಆಹಾರ ಖರೀದಿಗೂ ಅಘೋಷಿತ ಬಹಿಷ್ಕಾರವಿದೆ. ಛತ್ತೀಸ್‍ಗಢದ ಕ್ರೈಸ್ತ ಸಂಘಟನೆ ಮತ್ತು ಇತರ ಸಾಮಾಜಿಕ ಕಾರ್ಯಕರ್ತರು ಈ ಸಂಗತಿಯನ್ನು ಹೈಕೋರ್ಟ್‍ನ ಮುಂದಿಟ್ಟಾಗ ಅದು ಪರಿಸ್ಥಿತಿಗೆ ಅಸಹನೆ ವ್ಯಕ್ತಪಡಿಸಿದೆ. ಸರಕಾರದಿಂದ ವರದಿಯನ್ನೂ ಅಪೇಕ್ಷಿಸಿದೆ. ನಿಜವಾಗಿ, ಈ ಬಹಿಷ್ಕಾರದ ಹಿಂದೆ ಒಂದು ಕತೆಯಿದೆ. ಈ ಕತೆ ಸಂಪೂರ್ಣವಾಗಿ ಸಂಘಪರಿವಾರದಿಂದ ರಚಿತವಾದುದು. ಸಂಘಪರಿವಾರದ ಸಲಹೆಯಂತೆ ಈ ಬಹಿಷ್ಕಾರವನ್ನು ಹೇರಲಾಗಿದೆ ಎಂದು ಅದರ ಬಸ್ತಾರ್ ಜಿಲ್ಲಾಧ್ಯಕ್ಷ ಸುರೇಶ್ ಯಾದವ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಒಂದು ಕಡೆ, ಗೋವಿನ ಹೆಸರಲ್ಲಿ ಥಳಿಸಿ ಕೊಲ್ಲಲಾಗುತ್ತಿದ್ದರೆ ಇನ್ನೊಂದೆಡೆ ಈ ಥಳಿಸಿ ಕೊಲ್ಲುವವರ ಮುಖವಾಣಿಯಾದ ಪಾಂಚಜನ್ಯ ಪತ್ರಿಕೆಯು, ‘ಗೋಹತ್ಯೆ ಮಾಡುವವರನ್ನು ಹತ್ಯೆ ನಡೆಸಬೇಕು’ ಎಂದು ಕರೆ ಕೊಡುತ್ತದೆ. ಮಗದೊಂದೆಡೆ, ಗುಜರಾತ್‍ನಲ್ಲಿ ಗಾರ್ಬಾ ನೃತ್ಯಕ್ಕೆ ಮುಸ್ಲಿಮರಿಗೆ ಬಹಿಷ್ಕಾರ ಹಾಕಲಾಗುತ್ತದೆ. ಅಷ್ಟಕ್ಕೂ, ಥಳಿತ, ಹತ್ಯೆ, ಬಹಿಷ್ಕಾರ, ದ್ವೇಷ ಭಾಷಣಗಳೇ ಇತ್ತೀಚೆಗೆ ಪ್ರತಿದಿನದ ಸುದ್ದಿಗಳಾಗಿರುವುದಕ್ಕೆ ಕಾರಣಗಳೇನು? ಈ ಎಲ್ಲದರಲ್ಲೂ ಬಿಜೆಪಿ ಮತ್ತು ಅದರ ಬೆಂಬಲಿಗ ಗುಂಪು ಆರೋಪಿ ಸ್ಥಾನದಲ್ಲಿರುವುದರಿಂದ ಈ ಪ್ರಶ್ನೆಗೆ ಮತ್ತಷ್ಟು ಬಲ ಬರುತ್ತದೆ. ಅಭಿವೃದ್ಧಿಯ ಹೆಸರಲ್ಲಿ ಚುನಾವಣೆಯನ್ನು ಎದುರಿಸಿದ ನರೇಂದ್ರ ಮೋದಿಯವರು ಇಂಥದ್ದೊಂದು ಸನ್ನಿವೇಶವನ್ನು ಬಯಸಿದ್ದರೇ? ಅಭಿವೃದ್ಧಿ ಅವರ ನಿಜವಾದ ಗುರಿ ಆಗಿರಲಿಲ್ಲವೇ? ಒಂದು ಕಡೆ ಗೋವಿನ ಹೆಸರಲ್ಲಿ ಥಳಿಸಿ ಕೊಲ್ಲುವಾಗ ಇನ್ನೊಂದು ಕಡೆ ಪ್ರತಿದಿನ ಟನ್ನುಗಟ್ಟಲೆ ಮಾಂಸವು ವಿದೇಶಕ್ಕೆ ರಫ್ತಾಗುತ್ತಾ ಇದೆ. ಆದರೆ ವಿದೇಶಕ್ಕೆ ಗೋಮಾಂಸ ರಫ್ತು ಮಾಡುವ ಬೃಹತ್ ಕಂಪೆನಿಗಳ ವಿರುದ್ಧ ಥಳಿಸಿ ಕೊಲ್ಲುವ ಮಂದಿ ಯಾವ ಪ್ರತಿಭಟನೆಯನ್ನೂ ಮಾಡುತ್ತಿಲ್ಲ. ಅಲ್ಲಿಗೆ ಗೋವುಗಳನ್ನು ಸಾಗಿಸುವ ವಾಹನಗಳ ಮೇಲೆ ದಾಳಿ ನಡೆಸುತ್ತಿಲ್ಲ. ಅದರ ಮಾಲಿಕರು, ವ್ಯವಸ್ಥಾಪಕರು, ಕೆಲಸಗಾರರ ವಿರುದ್ಧ ಮೊಕದ್ದಮೆ ಹೂಡುತ್ತಿಲ್ಲ. ಮಾಂಸೋದ್ಯಮದಲ್ಲಿ ತೊಡಗಿರುವ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿಯವರಿಗೆ ಸಂಪೂರ್ಣ ಅಧಿಕಾರ ಇದ್ದರೂ ಅದಕ್ಕಾಗಿ ಈ ಮಂದಿ ಒತ್ತಾಯಿಸುತ್ತಿಲ್ಲ. ಈ ದ್ವಂದ್ವಕ್ಕೆ ಏನೆನ್ನಬೇಕು?
  ಬಹಿಷ್ಕಾರ ಎಂಬ ಪದಕ್ಕೆ ಈ ದೇಶದಲ್ಲಿ ಪ್ರಾಚೀನ ಇತಿಹಾಸ ಇದೆ. ಈ ಪದದ ತೀವ್ರತೆಯನ್ನು ಮೊಟ್ಟಮೊದಲು ಅನುಭವಿಸಿದವರು ದಲಿತರು. ಅಂಬೇಡ್ಕರ್‍ರಿಗೂ ಇದರ ಬಿಸಿ ತಟ್ಟಿದೆ. ಸಾರ್ವಜನಿಕ ಬಾವಿಯಿಂದ, ಅಂಗಡಿಯಿಂದ, ದೇವಸ್ಥಾನಗಳಿಂದ, ಸಾರ್ವಜನಿಕ ಸ್ಥಳಗಳಿಂದ ಬಹಿಷ್ಕೃತಗೊಂಡೇ ಶತಮಾನವನ್ನು ಅವರು ಕಳೆದಿದ್ದಾರೆ. ಅದರ ಪರಿಣಾಮ ಎಷ್ಟು ಭೀಕರ ಪ್ರಮಾಣದಲ್ಲಿ ಆಗಿದೆಯೆಂಬುದು ಇವತ್ತಿಗೂ ಸರಕಾರಿ ಕಚೇರಿಗಳು, ಮಾಧ್ಯಮದ ಆಯಕಟ್ಟಿನ ಜಾಗಗಳು, ಪೊಲೀಸ್ ಇಲಾಖೆ, ಪ್ರಭುತ್ವ, ರಾಜಕೀಯ ಪಕ್ಷಗಳ ಪ್ರಮುಖ ಸ್ಥಾನಗಳಲ್ಲಿ ಯಾರಿದ್ದಾರೆಂಬುದನ್ನು ಪರಿಶೀಲಿಸಿದರೆ ಸ್ಪಷ್ಟವಾಗುತ್ತದೆ. ಸ್ವಾತಂತ್ರ್ಯಾನಂತರ ದಲಿತ ವರ್ಗಕ್ಕೆ ವಿೂಸಲಾತಿಯನ್ನು ಒದಗಿಸಿದ್ದರೂ ಅವರು ವ್ಯವಸ್ಥೆಯ ಆಯಕಟ್ಟಿನ ಜಾಗಕ್ಕೆ ತಲುಪಬೇಕಾದಷ್ಟು ಪ್ರಮಾಣದಲ್ಲಿ ತಲುಪಿಲ್ಲ. ರಾಜಕೀಯದಲ್ಲಿ ಅವರು ತಮ್ಮ ಸಂಖ್ಯೆಗೆ ಅನುಗುಣವಾಗಿ ಬಲಶಾಲಿಯಾಗಿಲ್ಲ. ಮಾಧ್ಯಮಗಳ ನೀತಿ ನಿರೂಪಣಾ ಹಂತಕ್ಕೆ ಅವರಿನ್ನೂ ಏರಿಲ್ಲ. ದಲಿತ ಸಬಲೀಕರಣಕ್ಕಾಗಿ ಸರಕಾರ ಸರಣಿ ಕಾನೂನುಗಳನ್ನು ರಚಿಸಿದ ಬಳಿಕವೂ ಇವತ್ತೂ ದಲಿತರೆಂಬ ಕಾರಣಕ್ಕಾಗಿ ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದೀಗ, ದಲಿತರನ್ನು ಬಹಿಷ್ಕಾರದ ಮೂಲಕ ಸತಾಯಿಸಿದ ಅದೇ ಗುಂಪು ಬಹಿಷ್ಕಾರದ ಹೊಸ ನಮೂನೆಯನ್ನು ಪ್ರಸ್ತುತಪಡಿಸುತ್ತಿದೆ. ಆದಿವಾಸಿ-ಹಿಂದುಳಿದ ಮಂದಿಯೇ ಹೆಚ್ಚಿರುವ ಬಸ್ತಾರ್‍ನಂತಹ ಜಿಲ್ಲೆಯಿಂದಲೇ ಈ ಬಹಿಷ್ಕಾರವನ್ನು ಜಾರಿಗೊಳಿಸುವ ಅತ್ಯಂತ ಬುದ್ದಿsವಂತಿಕೆಯನ್ನು ಅದು ಪ್ರದರ್ಶಿಸುತ್ತಲೂ ಇದೆ. ಈ ಬಹಿಷ್ಕಾರ ದಲಿತ ಬಹಿಷ್ಕಾರಕ್ಕಿಂತ ಹೆಚ್ಚು ಭಯಾನಕವಾದುದು. ಗೋವಿನ ಹೆಸರಲ್ಲಿ, ಮತಾಂತರ, ಸಂಸ್ಕೃತಿ, ವಿದೇಶಿ ಮೂಲದ ಹೆಸರಲ್ಲಿ ಮುಸ್ಲಿಮರನ್ನು ಮತ್ತು ಕ್ರೈಸ್ತರನ್ನು ಭಾರತೀಯತೆಯಿಂದ ಪ್ರತ್ಯೇಕಿಸಿ ಹೇಳುವುದು ಸುಲಭ ಮತ್ತು ಹೆಚ್ಚು ಭಾವನಾತ್ಮಕ. ‘ನಮ್ಮ ಪೂಜಾರ್ಹ ಪ್ರಾಣಿಯನ್ನು ಅವರು ಬೇಕೆಂದೇ ಅವಮಾನಿಸುತ್ತಾರೆ’ ಎಂದು ಹೇಳುವಾಗ ಅಲ್ಲೊಂದು ಭಾವುಕತೆ ಸೃಷ್ಟಿಯಾಗುತ್ತದೆ. ‘ಅವರಿಂದಾಗಿ ನಮ್ಮ ಸಂಸ್ಕøತಿ ಹಾಳಾಗಿದೆ, ನಮ್ಮ ಆಹಾರದಲ್ಲಿ ಧರ್ಮ ವಿರೋಧಿ ಅಂಶಗಳು ಸೇರಿಕೊಂಡಿವೆ..’ ಎಂದೆಲ್ಲಾ ಹೇಳುವಾಗ ಒಂದರ ವೈಭವೀಕರಣ ಮತ್ತು ಇನ್ನೊಂದರ ಅಸಹ್ಯೀಕರಣ ಕೂಡ ನಡೆಯುತ್ತದೆ. ಈ ಅಸಹ್ಯೀಕರಣವೇ ಅಂತಿಮವಾಗಿ ಸಮಾಜವನ್ನು ನಾವು ಮತ್ತು ಅವರು ಎಂದು ವಿಭಜಿಸುವುದಕ್ಕೆ ನೀಲನಕ್ಷೆಯನ್ನು ಒದಗಿಸುತ್ತದೆ. ದಲಿತರನ್ನು ಈ ದೇಶದಲ್ಲಿ ಬಹಿಷ್ಕಾರಕ್ಕೆ ತುತ್ತಾಗಿಸಿದ್ದು ಅವರ ಆಹಾರ, ಸಂಸ್ಕೃತಿ, ವರ್ಣ, ವೇಷ-ಭೂಷಣಗಳನ್ನು ಅಸಹ್ಯಗೊಳಿಸುವ ಮೂಲಕವೇ ಆಗಿತ್ತು. ಅವರನ್ನು ಸಂಸ್ಕೃತಿಹೀನರಂತೆ ಕಾಣಲಾಯಿತು. ಪದೇ ಪದೇ ಅವರ ವರ್ಣವನ್ನು ಹೀನೈಸಲಾಯಿತು. ಅವರ ಆಹಾರ ಪದ್ಧತಿಯನ್ನು ತುಚ್ಛೀಕರಿಸಲಾಯಿತು. ಹೀಗೆ ನಿಧಾನವಾಗಿ ಅವರು ಸಮಾಜದ ಮುಖ್ಯ ಧಾರೆಯಿಂದ ಕಳೆದುಹೋಗುತ್ತಾ ಆತ್ಮವಿಶ್ವಾಸವನ್ನು ಕಳಕೊಳ್ಳತೊಡಗಿದರು. ಇದೀಗ ಅದೇ ಮಾದರಿಯ ಪ್ರಯೋಗವನ್ನು ದೇಶದಾದ್ಯಂತ ಜಾರಿಗೊಳಿಸುವ ಪ್ರಯತ್ನವೊಂದು ನಡೆಯುತ್ತಿರುವಂತೆ ತೋರುತ್ತಿದೆ. ನಾವು ಮತ್ತು ಅವರು ಎಂಬೊಂದು ವಿಭಜನೆ. ಅವರು ಗೋವು ತಿನ್ನುವವರು, ಮತಾಂತರ ಮಾಡುವವರು, ಹೆಣ್ಣು ಮಕ್ಕಳನ್ನು ದುರುಪಯೋಗಿಸುವವರು.. ಎಂದೆಲ್ಲಾ ಹೇಳುತ್ತಾ ‘ಅವರಿಂದ' ಮುಕ್ತವಾದ ಪ್ರದೇಶಗಳನ್ನು ಹುಟ್ಟು ಹಾಕುವುದು. ಅವರಿಲ್ಲದ ಸಮಾಜವನ್ನು ಕಟ್ಟಿಕೊಳ್ಳುವುದು. ಬಸ್ತಾರ್ ಇದರ ಮುನ್ಸೂಚನೆ ಎಂದೇ ಹೇಳಬೇಕಾಗುತ್ತದೆ.
  ಅಷ್ಟಕ್ಕೂ, ಈ ದೇಶದಲ್ಲಿ ಮಾಂಸಾಹಾರವನ್ನು ಪ್ರಾರಂಭಿಸಿದ್ದು ಮುಸ್ಲಿಮರೂ ಅಲ್ಲ, ಅದನ್ನು ವಿದೇಶಕ್ಕೆ ರಫ್ತು ಮಾಡುವಲ್ಲಿ ಅವರ ಕೈವಾಡವೂ ಇಲ್ಲ. ಈ ದೇಶದ ಒಟ್ಟು ಕಸಾಯಿಖಾನೆಗಳಲ್ಲಿ ಆಗುತ್ತಿರುವ ಮಾಂಸಕ್ಕಿಂತ ಹೆಚ್ಚು ಮಾಂಸವು ವಿದೇಶಕ್ಕೆ ರಫ್ತಾಗುತ್ತಿರುವುದನ್ನು ಮುಚ್ಚಿಟ್ಟು ಇವತ್ತು ಗೋಹತ್ಯೆಯನ್ನು ಮುಸ್ಲಿಮರ ತಲೆಗೆ ಕಟ್ಟಲಾಗುತ್ತಿದೆ. ಅವರನ್ನು ಭಯೋತ್ಪಾದಕರಂತೆ ಮತ್ತು ಅಸಹಿಷ್ಣುಗಳಂತೆ ಬಿಂಬಿಸಲಾಗುತ್ತಾ ಇದೆ. ಆದರೆ ಇದು ವಾಸ್ತವ ಅಲ್ಲ. ಈ ಪ್ರಚಾರದ ಹಿಂದೆ ಮುಸ್ಲಿಮರನ್ನು ಮತ್ತು ಕ್ರೈಸ್ತರನ್ನು ದಲಿತೀಕರಣಗೊಳಿಸುವ ಸಂಚೊಂದು ನಡೆಯುತ್ತಿರುವಂತೆ ತೋರುತ್ತಿದೆ. ಒಂದು ಕಡೆ ಅಭಿವೃದ್ಧಿಯ ಬಗ್ಗೆ ಮಾತಾಡುತ್ತಲೇ ಇನ್ನೊಂದೆಡೆ ನಡೆಯುತ್ತಿರುವ ಈ ಸಂಚನ್ನು ಭಾರತೀಯರು ವಿಫಲಗೊಳಿಸಬೇಕು. ಈ ದೇಶ ಎಲ್ಲರದು. ಎಲ್ಲರೂ ಜೊತೆಯಾಗಿ ಬಾಳುವ ತಾರತಮ್ಯ ರಹಿತ ಭಾರತ ನಮ್ಮ ಗುರಿಯಾಗಬೇಕು. ಮಾಂಸವು ಆಹಾರವಾಗಿ ಇದ್ದರೂ ಇಲ್ಲದಿದ್ದರೂ..

Wednesday, 14 October 2015

ಅಖ್ಲಾಕ್‍ ನ ಮಾಂಸ, ಕಲ್ಬುರ್ಗಿ ವೈಚಾರಿಕತೆ ಮತ್ತು ಪ್ರಶಸ್ತಿಗಳ ಪ್ರತಿಭಟನೆ

      ಹಿಂಸೆ ಮತ್ತು ಪಾರಿತೋಷಕ ಜೊತೆಜೊತೆಗೇ ಸಾಗಲು ಸಾಧ್ಯವಿಲ್ಲ ಎಂಬ ಪ್ರತಿಭಟನಾ ಸಂದೇಶವೊಂದು ಸಾಹಿತ್ಯ
ವಲಯದಿಂದ ರವಾನೆಯಾಗಿದೆ. ಈ ಪ್ರತಿಭಟನೆಗೆ ನೇತೃತ್ವ ನೀಡಿರುವವರು 88 ವರ್ಷದ ಸಾಹಿತಿ ನಯನತಾರಾ ಸೆಹಗಲ್. ಅವರು ತಮಗೆ ಸಂದಿರುವ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ. 1975ರಲ್ಲಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿಯನ್ನು ಹೇರಿದಾಗ ಅದನ್ನು ಖಂಡಿಸಿ ಪ್ರತಿಭಟಿಸಿದವರು ಸೆಹಗಲ್. ಆಗ ಅವರ ಜೊತೆಗೆ ಅರುಣ್ ಶೌರಿ, ಕುಲದೀಪ್ ನಯ್ಯರ್, ರಜನಿ ಕೊಟಾರಿ, ಜಾರ್ಜ್ ಫರ್ನಾಂಡಿಸ್ ಮುಂತಾದವರು ಸೇರಿಕೊಂಡಿದ್ದರು. ಅವತ್ತು ಬಿಜೆಪಿಯ ಮಂದಿ ಸೆಹಗಲ್‍ರನ್ನು ಎಷ್ಟು ಮೆಚ್ಚಿಕೊಂಡಿದ್ದರೆಂದರೆ ಅವರನ್ನು ಮಾದರಿ ಸಾಹಿತಿಯೆಂದು ಘೋಷಿಸಿದ್ದರು. ಅದೇ ಸೆಹಗಲ್‍ರು ಇವತ್ತು ನರೇಂದ್ರ ಮೋದಿಯವರ ವಿರುದ್ಧ ದನಿಯೆತ್ತಿದ್ದಾರೆ. ಅವರ ಮೌನವನ್ನು ಪ್ರಶ್ನಿಸಿದ್ದಾರೆ. ಗೋವಿನ ಹೆಸರಲ್ಲಿ ನಡೆಯುತ್ತಿರುವ ಕ್ರೌರ್ಯ ಮತ್ತು ಪ್ರಗತಿಪರರ ಮೇಲಿನ ದಾಳಿಗೆ ಅವರು ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಹಾಗಂತ, ಈ ಪ್ರತಿಭಟನೆಯಲ್ಲಿ ಸೆಹಗಲ್ ಒಂಟಿಯಲ್ಲ. ಚಂಪಾ, ಕುಂವೀ, ಅರವಿಂದ ಮಾಲಗತ್ತಿ, ಅಮನ್ ಸೇಥಿ, ಅಶೋಕ್ ವಾಜಪೇಯಿ, ರಹಮತ್ ತರೀಕೆರೆ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ವಾಪಸು ಮಾಡಿಯೋ ಅಥವಾ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಯೋ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಸಾಹಿತಿ ಸುಧೀಂದ್ರ ಕುಲಕರ್ಣಿಯವರಿಗೆ ಮಸಿ ಬಳಿಯಲಾಗಿದೆ. ಪಾಕ್ ಗಾಯಕ ಗುಲಾಮ್ ಅಲಿಯವರ ಕಾರ್ಯಕ್ರಮವನ್ನು ಶಿವಸೇನೆಯ ಒತ್ತಡದ ಮೇರೆಗೆ ರದ್ದುಗೊಳಿಸಲಾಗಿದೆ. ಒಂದು ರೀತಿಯಲ್ಲಿ, ‘ದ್ವಿತೀಯ ತುರ್ತು ಪರಿಸ್ಥಿತಿಯೊಂದು’ ಭಾಗಶಃ ಜಾರಿಯಲ್ಲಿರುವಂತೆ ತೋರುತ್ತಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರದ ಬಗ್ಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಏನೆಲ್ಲ ಅನುಮಾನ ಪಡಲಾಗಿತ್ತೋ ಅವೆಲ್ಲವನ್ನೂ ನಿಜಗೊಳಿಸುವ ತುರ್ತೊಂದು ಇವತ್ತು ಎಲ್ಲೆಡೆಯೂ ಕಾಣಿಸುತ್ತಿದೆ. ಬಿಜೆಪಿ ಮತ್ತು ಅದರ ಬೆಂಬಲಿಗ ವಲಯವು ಹಿಂದೆಂದಿಗಿಂತಲೂ ಹೆಚ್ಚು ಆವೇಶಭರಿತವಾಗಿ ಮಾತಾಡುತ್ತಿದೆ. ಈ ಗುಂಪು ತಮಗೆ ವಿರುದ್ಧವಾದ ಯಾವುದನ್ನು ಸಹಿಸುತ್ತಿಲ್ಲ. ವೈಚಾರಿಕ ಭಿನ್ನಾಭಿಪ್ರಾಯಕ್ಕೆ ಬೆಲೆಯನ್ನೇ ನೀಡುತ್ತಿಲ್ಲ. ತಮ್ಮ ಅಭಿಪ್ರಾಯಕ್ಕೆ ವಿರುದ್ಧವಾದುದನ್ನೆಲ್ಲ ದೇಶವಿರೋಧಿ ಮತ್ತು ಧರ್ಮ ವಿರೋಧಿಯಂತೆ ಚಿತ್ರೀಕರಿಸುತ್ತಿದೆ. ಅಖ್ಲಾಕ್‍ನ ಸಾವನ್ನೂ ಸಮರ್ಥಿಸುವಷ್ಟರ ಮಟ್ಟಿಗೆ ಈ ಗುಂಪು ಸಂವೇದನಾರಹಿತವಾಗಿ ವರ್ತಿಸುತ್ತಿದೆ. ಈ ಎಲ್ಲ ಸಂದರ್ಭಗಳಲ್ಲಿ ಮಾತಾಡಬೇಕಿದ್ದ ಪ್ರಧಾನಿಯವರು ದೀರ್ಘ ಮೌನಕ್ಕೆ ಜಾರಿದ್ದಾರೆ. ಅಡ್ಡಾದಿಡ್ಡಿಯಾಗಿ ಮಾತಾಡುತ್ತಿರುವ ತನ್ನ ಸಂಪುಟ ಸಹೋದ್ಯೋಗಿಗಳನ್ನು ಮತ್ತು ಕಾರ್ಯಕರ್ತ ಪಡೆಯನ್ನು ತರಾಟೆಗೆತ್ತಿಕೊಳ್ಳುವ ಯಾವ ಪ್ರಯತ್ನವನ್ನೂ ಅವರು ಮಾಡುತ್ತಿಲ್ಲ. ದುರಂತ ಏನೆಂದರೆ, 1975ರಲ್ಲಿ ಸೆಹಗಲ್‍ರನ್ನು ಬೆಂಬಲಿಸಿದ್ದ ಅದೇ ಬಿಜೆಪಿ ಈ 2015ರಲ್ಲಿ ಅವರನ್ನು ವಿರೋಧಿಯಂತೆ ಕಾಣುತ್ತಿದೆ. ಅವರ ನಿಲುವನ್ನು ಗೇಲಿ ಮಾಡುತ್ತಿದೆ. ಆದ್ದರಿಂದಲೇ, ಸದ್ಯದ ವಾತಾವರಣವನ್ನು ನಾವು `ತುರ್ತು ಸ್ಥಿತಿ ಮರಳುವ' ಸೂಚನೆಯೆಂದೇ ಪರಿಗಣಿಸಬೇಕಾಗಿದೆ.
ಸೆಹಗಲ್

 ಅಷ್ಟಕ್ಕೂ, ಅಸಹಿಷ್ಣು ಭಾಷೆಯಲ್ಲಿ ಮಾತಾಡುತ್ತಿರುವ ಗುಂಪಿನ ಎದುರು ಸೆಹಗಲ್‍ರ ಗುಂಪು ಸಂಖ್ಯೆಯಲ್ಲಿ ತೀರ ಸಣ್ಣದು. ಅಸಹಿಷ್ಣು ಗುಂಪಿನ ಭಾಷೆಗೆ ವ್ಯಾಕರಣ ಇಲ್ಲ. ಪದ ಬಳಕೆಯಲ್ಲಿ ವಿವೇಚನೆಯಿಲ್ಲ. ದೇಹ ಭಾಷೆಯಲ್ಲಿ ಪ್ರೀತಿಯಿಲ್ಲ. ಆ ಗುಂಪು ಸಂದರ್ಭಕ್ಕೆ ತಕ್ಕಂತೆ ಅಸ್ತ್ರವನ್ನೂ ಎತ್ತಿಕೊಳ್ಳಬಲ್ಲುದು. ರಕ್ತವನ್ನೂ ಹರಿಸಬಲ್ಲುದು. ಅದು ದೇಶದ ಸಂವಿಧಾನವನ್ನು ಗೌರವಿಸುತ್ತಿಲ್ಲ. ಧಾರ್ಮಿಕ ವೈವಿಧ್ಯತೆಯನ್ನು ಇಷ್ಟಪಡುತ್ತಿಲ್ಲ. ಮನುಷ್ಯರನ್ನು ಹಿಂದೂ-ಮುಸ್ಲಿಮ್-ಕ್ರೈಸ್ತ ಎಂದು ಮುಂತಾಗಿ ಅದು ವಿಭಜಿಸುತ್ತಿದೆಯಲ್ಲದೇ ದ್ವೇಷವನ್ನೇ ಪೂರ್ಣಕಾಲಿಕ ಉದ್ಯೋಗವನ್ನಾಗಿ ನೆಚ್ಚಿಕೊಂಡಿದೆ. ಇದಕ್ಕೆ ಹೋಲಿಸಿದರೆ ಸೆಹಗಲ್‍ರ ಗುಂಪು ತೀರಾ ಅಲ್ಪಸಂಖ್ಯಾಕ. ಅದರ ಮುಂದಿರುವ ಆಯ್ಕೆಗಳೂ ಅಷ್ಟೇ ಅಲ್ಪಸಂಖ್ಯಾಕ. ಈ ಗುಂಪಿನ ಅಸ್ತ್ರವೆಂದರೆ ಪೆನ್ನು ಮಾತ್ರ. ಅದು ಬಳಸುವ ಭಾಷೆಯಲ್ಲಿ ವ್ಯಾಕರಣ ಇದೆ. ಪದ ಸೌಂದರ್ಯವಿದೆ. ದೇಹಭಾಷೆಯಲ್ಲಿ ಆಕರ್ಷಣೆಯಿದೆ. ಸಂದರ್ಭಕ್ಕೆ ತಕ್ಕಂತೆ ಅಸ್ತ್ರವನ್ನು ಎತ್ತಿಕೊಳ್ಳುವ ಮತ್ತು ದ್ವೇಷ ಕಾರುವ ಗುಣ ಈ ಗುಂಪಿಗೆ ಸಿದ್ಧಿಸಿಲ್ಲ. ಈ ಗುಂಪು ಹಿಂಸೆಗೆ ಕರೆ ಕೊಡುವುದಿಲ್ಲ. ಮನುಷ್ಯರನ್ನು ಹಿಂದೂ-ಮುಸ್ಲಿಮ್ ಆಗಿ ವಿಭಜಿಸುವುದಿಲ್ಲ. ಆದ್ದರಿಂದಲೇ ದಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿಯವರ ಹತ್ಯೆ ನಡೆದ ಬಳಿಕವೂ ಈ ಗುಂಪು ಯಾರನ್ನೂ ಥಳಿಸಿ ಕೊಂದಿಲ್ಲ. ನಿಜವಾಗಿ, ಸಾಹಿತ್ಯ ವಲಯದ ಈ ಸಾತ್ವಿಕತೆಯು ಇವತ್ತು ಅಖ್ಲಾಕ್‍ನನ್ನು ಕೊಂದ ಮತ್ತು ಕಲ್ಬುರ್ಗಿಯಂತಹವರ ಕೊಲೆಯನ್ನು ಸಮರ್ಥಿಸುತ್ತಿರುವ ಗುಂಪಿನಿಂದ ಪ್ರಬಲ ಸವಾಲನ್ನು ಎದುರಿಸುತ್ತಿದೆ. ಈ ಸವಾಲು ಮಾನದ್ದು, ಪ್ರಾಣದ್ದು ಮತ್ತು ವೈಯಕ್ತಿಕ ಸ್ವಾತಂತ್ರ್ಯದ್ದು. ಈ ಸವಾಲನ್ನು ಮೆಟ್ಟಿ ನಿಲ್ಲಲು ಸಾಹಿತ್ಯ ವಲಯಕ್ಕೆ ಸಾಧ್ಯವಾಗದೇ ಹೋದರೆ, ಆ ಬಳಿಕ ಸಾಹಿತ್ಯವೆಂಬುದು ಈ ಗುಂಪಿನ ಕರಪತ್ರವಾಗಿ ಬಿಡುವ ಅಪಾಯವಿದೆ. ಈ ಗುಂಪು ಪ್ರಬಲವಾಗಿ ಬಿಟ್ಟರೆ ಅಥವಾ ಈ ಗುಂಪಿನ ಬೆದರಿಕೆಗೆ ಸಾಮಾಜಿಕ ಮನ್ನಣೆ ದೊರಕಿಬಿಟ್ಟರೆ ಅದರಿಂದಾಗಿ ಕಳೆದು ಹೋಗುವುದು ಸಾಹಿತಿಗಳಷ್ಟೇ ಅಲ್ಲ, ಸಾಹಿತ್ಯವೂ ಕೂಡ. ಆ ಬಳಿಕ ಕುಂವೀ ಏನನ್ನು ಬರೆಯಬೇಕೆಂದು ಈ ಗುಂಪು ನಿರ್ಧರಿಸುತ್ತದೆ. ಸೆಹಗಲ್‍ರು ಪ್ರಶಸ್ತಿ ವಾಪಸು ಮಾಡಬೇಕೋ ಬೇಡವೋ ಎಂಬುದು ಈ ಗುಂಪಿನ ಅಭಿಪ್ರಾಯದ ಆಧಾರದಲ್ಲಿ ನಿರ್ಧರಿತವಾಗುತ್ತದೆ. ಚಂಪಾ ಅವರು ಏನು ಮಾತಾಡಬೇಕೆಂಬುದನ್ನು ಅದು ನಿರ್ಧರಿಸುತ್ತದೆ. ಸರ್ವಾಧಿಕಾರಿಗಳ ಆಡಳಿತದಲ್ಲಿ ಉದ್ದಕ್ಕೂ ನಡೆದಿರುವುದು ಇದುವೇ. ತನ್ನ ವಿರೋಧಿಗಳ ಲಕ್ಷಾಂತರ ಪುಸ್ತಕಗಳನ್ನು ಸುಡುವ ಮೂಲಕವೇ ಹಿಟ್ಲರ್ ತನ್ನ ಆಡಳಿತಕ್ಕೆ ಚಾಲನೆ ಕೊಟ್ಟಿದ್ದ. ತನ್ನ ನಿರ್ದೇಶನವನ್ನು ಒಪ್ಪದ ಸಾಹಿತಿಗಳನ್ನು ಆತ ಒಂದೋ ಬಲವಂತದಿಂದ ಒಪ್ಪಿಸುತ್ತಿದ್ದ ಅಥವಾ ಕಲ್ಬುರ್ಗಿಯವರಂತೆ ನಡೆಸಿಕೊಳ್ಳುತ್ತಿದ್ದ. ಅಂದಹಾಗೆ,
      ಕಲ್ಬುರ್ಗಿ ಮತ್ತು ಅಖ್ಲಾಕ್‍ರ ಮಧ್ಯೆ ಖಂಡಿತ ವ್ಯತ್ಯಾಸಗಳಿವೆ. ಮಾತ್ರವಲ್ಲ, ಆ ವ್ಯತ್ಯಾಸಕ್ಕೆ ತಕ್ಕಂತೆಯೇ ಅವರನ್ನು ಹತ್ಯೆ ಗೈಯಲಾಗಿದೆ. ಆತಂಕ ಏನೆಂದರೆ, ಈ ಎರಡೂ ಹತ್ಯೆಗಳನ್ನು ಸಮರ್ಥಿಸುತ್ತಿರುವುದು ಒಂದೇ ಗುಂಪು. ಕಲ್ಬುರ್ಗಿಯವರ ಹತ್ಯೆಯನ್ನು ಸಮರ್ಥಿಸುವುದಕ್ಕೆ ಅವರ ನಿಲುವುಗಳನ್ನು  ಈ ಗುಂಪು ಕಾರಣವಾಗಿ ನೀಡುವಾಗ ಅಖ್ಲಾಕ್‍ನ ಹತ್ಯೆಗೆ ದನವನ್ನು ಕಾರಣವಾಗಿ ನೀಡುತ್ತಿದೆ. ಅಲ್ಲದೇ ಇಂಥ ಕೃತ್ಯಗಳಿಗೆ ‘ಹತ್ಯೆಯೇ ಸರಿ’ ಎಂಬ ಪರೋಕ್ಷ ಸೂಚನೆಯನ್ನು ಈ ಗುಂಪು ರವಾನಿಸಲು ಪ್ರಯತ್ನಿಸುತ್ತಿದೆ. ಆ ಮೂಲಕ ಕ್ರೌರ್ಯವೊಂದಕ್ಕೆ ಸಾಮಾಜಿಕ ಮನ್ನಣೆಯನ್ನು ದೊರಕಿಸಿಕೊಳ್ಳುವ ಯತ್ನವನ್ನೂ ಮಾಡುತ್ತಿದೆ. ನಿಜವಾಗಿ, ಅತ್ಯಂತ ಅಪಾಯಕಾರಿ ಸನ್ನಿವೇಶ ಇದು. ಅಖ್ಲಾಕ್‍ರು ಕಾನೂನುಬಾಹಿರ ಆಹಾರವನ್ನು ಸೇವಿಸಿದ್ದರೆ ಅಥವಾ ಸಂಗ್ರಹಿಸಿದ್ದರೆ ಅದನ್ನು ಪ್ರಶ್ನಿಸಬೇಕಾದದ್ದು ಈ ನೆಲದ ನ್ಯಾಯಾಂಗ ವ್ಯವಸ್ಥೆ. ಕಲ್ಬುರ್ಗಿಯವರಿಗೂ ಇದೇ ಮಾನದಂಡ ಅನ್ವಯಿಸುತ್ತದೆ. ಆದರೆ, ಅಖ್ಲಾಕ್‍ನ ಮಾಂಸ ಮತ್ತು ಕಲ್ಬುರ್ಗಿಯವರ ವೈಚಾರಿಕತೆಯನ್ನು ಈ ಗುಂಪು ಅಪರಾಧವಾಗಿ ತೋರಿಸುತ್ತಿದೆಯೇ ಹೊರತು ಅದನ್ನು ತೀರ್ಮಾನಿಸಬೇಕಾದವರು ಯಾರು ಎಂಬ ಮೂಲಭೂತ ಪ್ರಶ್ನೆಗೆ ಉತ್ತರಿಸುತ್ತಲೇ ಇಲ್ಲ. ಆದ್ದರಿಂದ ಈ ಗುಂಪಿನ ಸವಾಲನ್ನು ಸಾಹಿತ್ಯ ವಲಯ ಎದುರಿಸಲೇಬೇಕು. ಈ ಗುಂಪು ಪರ್ಯಾಯ ಸಂವಿಧಾನ ಆಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸಾಹಿತಿಗಳ ಪ್ರತಿಭಟನೆಯು ಅತ್ಯಂತ ಯೋಗ್ಯ ಮತ್ತು ಸ್ವಾಗತಾರ್ಹ. ಈ ಪ್ರತಿಭಟನೆಗೆ ಗೆಲುವಾಗಲಿ.




Tuesday, 13 October 2015

ಈ-ಮೇಲ್‍ನ ಜಾಡು ಹಿಡಿದು ವಿಶ್ಲೇಷಣೆ ನಡೆಸುವ ದೇಶದಲ್ಲಿ..

ಡಾ| ಅಥವಳೆ
       ಎಂ.ಎಂ. ಕಲಬುರ್ಗಿಯವರ ಹತ್ಯೆಯೊಂದಿಗೆ ‘ಸನಾತನ ಸಂಸ್ಥಾ' ಎಂಬ ಸಂಘಟನೆಯ ಸುತ್ತ ಚರ್ಚೆಯೊಂದು ಆರಂಭಗೊಂಡಿದೆ. ವಿಚಾರವಾದಿಗಳಾದ ಕಲಬುರ್ಗಿ ಮತ್ತು ಪನ್ಸಾರೆಯವರ ಹತ್ಯೆಯಲ್ಲಿ ಸಾಕಷ್ಟು ಸಾಮ್ಯತೆಗಳಿದ್ದುವು. ಮೋಟರ್ ಸೈಕಲ್‍ನಲ್ಲಿ ಬಂದ ಮುಸುಕುಧಾರಿಗಳು ಅವರಿಬ್ಬರನ್ನೂ ಗುಂಡಿಟ್ಟು ಹತ್ಯೆ ಮಾಡಿದ್ದರು. ಇದೀಗ ಪನ್ಸಾರೆಯವರ ಹತ್ಯೆಯ ಆರೋಪದಲ್ಲಿ ಸನಾತನ ಸಂಸ್ಥಾದ ಪೂರ್ಣಕಾಲಿಕ ಕಾರ್ಯಕರ್ತ ಸವಿೂರ್ ಗಾಯಕ್ವಾಡ್ ಸಹಿತ ಕೆಲವರನ್ನು ಬಂಧಿಸಲಾಗಿದೆ. ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ‘ಸವಿೂರ್ ಗಾಯಕ್ವಾಡ್‍ನನ್ನು ಕಳೆದ ವಾರ ಥಾಣೆಯ ಕೋರ್ಟಿಗೆ ಹಾಜರುಪಡಿಸಿದಾಗ 31 ವಕೀಲರು ಆತನ ಪರ ವಾದಿಸಲು ಕೋರ್ಟಿನಲ್ಲಿ ಸೇರಿದ್ದರು. ಆತನಲ್ಲಿ 31 ಸಿಮ್ ಕಾರ್ಡ್‍ಗಳು ಲಭಿಸಿವೆ. ದಂಪತಿಗಳಾದ ಡಾ| ಜಯಂತ್ ಮತ್ತು ಕುಂದಾ ಅಥವಳೆಯವರು ಸ್ಥಾಪಿಸಿದ ಈ ಸಂಘಟನೆಯ ಗುರಿ ಹಿಂದೂ ರಾಷ್ಟ್ರದ ಸ್ಥಾಪನೆ. 2016ರಿಂದ 2018ರ ನಡುವೆ ಮೂರನೇ ವಿಶ್ವಯುದ್ಧ ನಡೆಯುತ್ತದೆ ಮತ್ತು ‘ಸಮಾಜ ವಿರೋಧಿಗಳ’ ಅಂತ್ಯಕ್ಕೆ ಇದು ಮುಹೂರ್ತವಾಗುತ್ತದೆ ಎಂದೆಲ್ಲಾ ಅದು ತನ್ನ ಮುಖವಾಣಿ ಸನಾತನ ಪ್ರಭಾತ್‍ನಲ್ಲಿ ಹೇಳಿಕೊಂಡದ್ದಿದೆ. 2019ರಿಂದ 2022ರ ವರೆಗೆ ದೇವರ ಆಡಳಿತ ಪ್ರಾರಂಭವಾಗಲಿದ್ದು, 2023ರಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದೂ ಅದು ನಿರೀಕ್ಷೆ ಇಟ್ಟುಕೊಂಡಿದೆ. ಅದರ ವೈರಿಗಳ ಪಟ್ಟಿ ಬಹಳ ದೊಡ್ಡದು. ಅದರಲ್ಲಿ ವಿಚಾರವಾದಿಗಳಿದ್ದಾರೆ, ರಾಜಕೀಯ ಪಕ್ಷಗಳಿವೆ. ಮುಸ್ಲಿಮರು, ಕ್ರೈಸ್ತರಿದ್ದಾರೆ. ಥಾಣೆ ಮತ್ತು ಮಾರ್ಗೋವಾದಲ್ಲಿ ಬಾಂಬ್ ಸ್ಫೋಟಿಸಿದ ಆರೋಪಗಳೂ ಈ ಸಂಘಟನೆಯ ಮೇಲಿದೆ’ (ದಿ ಹಿಂದೂ ಸೆ. 27). ಬಹುಶಃ, ಒಂದು ಸಂಘಟನೆಯ ಬಗ್ಗೆ ನಮ್ಮ ಸರಕಾರ ಮತ್ತು ಅಧಿಕಾರಿಗಳು ಕುತೂಹಲಗೊಳ್ಳುವುದಕ್ಕೆ ಈ ಸಂಘಟನೆ 1995ರಿಂದ ಸಾಗಿ ಬಂದ ಹಾದಿ ಹಾಗೂ ನಿಗೂಢ ಚಟುವಟಿಕೆಗಳು ಧಾರಾಳ ಸಾಕು. ಅದಕ್ಕೆ ಚುನಾವಣಾ ರಾಜಕೀಯದಲ್ಲಿ ವಿಶ್ವಾಸವಿಲ್ಲ. ಚುನಾವಣೆಯಲ್ಲಿ ಭಾಗವಹಿಸದೆಯೇ ಯುದ್ಧದ ಮೂಲಕ ಸಾಮ್ರಾಜ್ಯ ಕಟ್ಟಿದ ಶಿವಾಜಿಯಂತೆ ತನ್ನ ಕನಸಿನ ರಾಷ್ಟ್ರ ಸ್ಥಾಪನೆಯ ಉದ್ದೇಶ ಅದರದ್ದು. ನಿಜವಾಗಿ, ಬಾಂಬ್ ತಯಾರಿ, ಸ್ಫೋಟ, ಹತ್ಯೆ.. ಮುಂತಾದುವುಗಳೆಲ್ಲ ಪ್ರಜಾತಂತ್ರದಲ್ಲಿ ನಂಬಿಕೆಯಿಲ್ಲದವರ ಅಸ್ತ್ರ. ಜನರ ವಿಶ್ವಾಸವನ್ನು ಗಳಿಸಿಕೊಂಡು ಪ್ರಜಾತಂತ್ರದ ಮೂಲಕ ತಮ್ಮ ಗುರಿಯೆಡೆಗೆ ಸಾಗುವುದನ್ನು ಒಪ್ಪಿಕೊಳ್ಳದವರೇ ಬಾಂಬ್ ಎತ್ತಿಕೊಳ್ಳುತ್ತಾರೆ. ಬಂದೂಕು ಬಳಸುತ್ತಾರೆ. ಅಂದಹಾಗೆ, ಈ ದೇಶದಲ್ಲಿ ಹತ್ತಾರು ಸ್ಫೋಟಗಳು ನಡೆದಿವೆ. ಹತ್ಯಾಕಾಂಡ, ವಿಧ್ವಂಸಕಾರಿ ಕೃತ್ಯಗಳು ಘಟಿಸಿವೆ. ಈ ಎಲ್ಲ ಸಂದರ್ಭಗಳಲ್ಲಿ ಈ ದೇಶದ ಮಾಧ್ಯಮಗಳು ಮತ್ತು ರಾಜಕಾರಣಿಗಳು ಮಾತಾಡಿದ್ದಾರೆ. ಅವರ ಪ್ರತಿಕ್ರಿಯೆ ಎಷ್ಟು ತೀವ್ರವಾಗಿತ್ತೆಂದರೆ, ಅನಾಮಿಕ ಮೂಲದಿಂದ ಬರುವ ಈಮೇಲ್‍ಗೂ ಅಪಾರ ಮಹತ್ವ ಲಭ್ಯವಾಗುತ್ತಿತ್ತು. ಆ ಈಮೇಲ್ ಅನ್ನು ಎತ್ತಿಕೊಂಡು ಅದನ್ನು ಕಳುಹಿಸಿರಬಹುದಾದ ವ್ಯಕ್ತಿ, ಸಂಘಟನೆ, ಕಂಪ್ಯೂಟರ್ ಮತ್ತಿತರ ಸರ್ವವನ್ನೂ ವಿಶ್ಲೇಷಿಸಲಾಗುತ್ತಿತ್ತು. ಆ ಈಮೇಲ್ ಅನ್ನು ಕಳುಹಿಸಿದವರ ಉದ್ದೇಶ, ಅದಕ್ಕೆ ಪ್ರಚೋದನೆ ನೀಡಿರುವ ಸಾಹಿತ್ಯ, ಅವರು ಪಡೆದಿರುವ ತರಬೇತಿ, ಅವರ ಸಂಖ್ಯೆ, ಹಣಕಾಸು ವಹಿವಾಟು.. ಸಹಿತ ಎಲ್ಲವನ್ನೂ ಮೂಲಗಳನ್ನು ಉದ್ಧರಿಸಿ ಈ ದೇಶದಲ್ಲಿ ಚರ್ಚಿಸಲಾಗುತ್ತಿತ್ತು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಂತೂ ಭಯೋತ್ಪಾದನೆಯ ಬಗ್ಗೆ ಲೆಕ್ಕವಿಲ್ಲದಷ್ಟು ಬಾರಿ ಮಾತಾಡಿದೆ. ಭಯೋತ್ಪಾದನೆಯನ್ನು ನಿರ್ದಿಷ್ಟ ಧರ್ಮಕ್ಕೆ ಹೋಲಿಸಿ ಹೇಳಿಕೆ ಕೊಟ್ಟಿದೆ. ಜಾನುವಾರು ಮಾಂಸದ ಸೇವನೆಯು ಭಯೋತ್ಪಾದನೆಗೆ ಇಂಬು ನೀಡುತ್ತದೆ ಎಂಬ ರೀತಿಯಲ್ಲಿ ಅದರ ನಾಯಕರು ಮತ್ತು ಬೆಂಬಲಿಗರು ಮಾತಾಡಿದ್ದಾರೆ. ಆದರೆ ಸನಾತನ ಸಂಸ್ಥಾದ ಕುರಿತಂತೆ ಈ ಮಂದಿ ಈ ವರೆಗೆ ನೇರವಾಗಿ ಏನನ್ನೂ ಹೇಳಿಲ್ಲ. ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಬಲವಾದ ಅನುಮಾನಗಳಿದ್ದಾಗ್ಯೂ ಅದರ ನಿಷೇಧದ ಬಗ್ಗೆ ಮಾತಾಡುತ್ತಿಲ್ಲ. ಕೇಂದ್ರ ಸರಕಾರ ಈಗಾಗಲೇ ಸರಕಾರೇತರ ಸಂಸ್ಥೆಗಳಾದ ಗ್ರೀನ್‍ಪೀಸ್ ಮತ್ತು ತೀಸ್ತಾ ಸೆಟಲ್ವಾಡ್‍ರ ಸಂಸ್ಥೆಯ ಮೇಲೆ ಬಹುತೇಕ ನಿಷೇಧವನ್ನು ಹೇರಿದೆ. ಅವುಗಳ ಚಟುವಟಿಕೆಗಳನ್ನು ಪ್ರತಿಬಂಧಿಸಲಾಗಿದೆ. ಬಾಂಬ್ ಭಯೋತ್ಪಾದನೆಯಲ್ಲಿ ಭಾಗವಹಿಸದ ಈ ಸಂಸ್ಥೆಗಳ ಮೇಲೆ ಸರಕಾರಕ್ಕೆ ಈ ಮಟ್ಟದ ಭಯ ಇದೆಯೆಂದಾದರೆ, ಸನಾತನ ಸಂಸ್ಥಾದ ಕುರಿತಂತೆ ಯಾಕೆ ಯಾವ ಭಯವೂ ಆಗುತ್ತಿಲ್ಲ? ಅದರ ಉದ್ದೇಶದ ಬಗ್ಗೆ ಸರಕಾರದ ನಿಲುವೇನು?
   ಸಾಮಾನ್ಯವಾಗಿ ಭಯೋತ್ಪಾದನೆ ಅಥವಾ ದೇಶ ವಿರೋಧಿ ಚಟುವಟಿಕೆಗಳು ಎಂದ ಕೂಡಲೇ ಇಂಡಿಯನ್ ಮುಜಾಹಿದೀನ್, ಲಷ್ಕರೆ ತ್ವಯ್ಯಿಬ, ಐಸಿಸ್ ಮುಂತಾದ ಹೆಸರುಗಳೇ ಪ್ರತ್ಯಕ್ಷಗೊಳ್ಳುವಂತಹ ವಾತಾವರಣವೊಂದು ಈ ದೇಶದಲ್ಲಿದೆ. ಸಂವಿಧಾನ ವಿರೋಧಿಯಾಗಿ ಆಲೋಚಿಸುವುದಕ್ಕೆ ಇಂಥ ನಿರ್ದಿಷ್ಟ ತಂಡಗಳಿಗಷ್ಟೇ ಸಾಧ್ಯ ಎಂಬ ಭಾವನೆಯನ್ನು ಇಲ್ಲಿ ವ್ಯವಸ್ಥಿತವಾಗಿ ನೆಟ್ಟು ಬೆಳೆಸಲಾಗಿದೆ. ಅದರಲ್ಲಿ ರಾಜಕಾರಣಿಗಳ ಪಾತ್ರವಿದೆ. ಅಧಿಕಾರಿಗಳು ಮತ್ತು ಸಂಘಟನೆಗಳ ಪಾತ್ರವೂ ಇವೆ. ಈ ದೇಶದ ಎಲ್ಲಾದರೂ ಬಾಂಬ್ ಸ್ಫೋಟಗೊಂಡ ತಕ್ಷ

ಣ ಯಾವುದಾದರೂ ಪತ್ರಿಕಾ ಕಚೇರಿಗೆ ಈಮೇಲ್‍ಗಳು ಬರುತ್ತವೆ. ದೂರವಾಣಿ ಕರೆಗಳೂ ಬರುವುದಿದೆ. ಹಾಗೆ ಬಂದ ಕರೆಗಳೋ ಈಮೇಲ್‍ಗಳೋ ಅಥವಾ ಇನ್ನಿತರ ಯಾವುದಾದರೂ ಕುರುಹುಗಳ ಹೆಸರಲ್ಲೋ ನಿರ್ದಿಷ್ಟ ಮಂದಿಯನ್ನು ಹುಡುಕುವ ಪ್ರಯತ್ನಗಳು ನಡೆಯುತ್ತವೆ. ರಾಜಕಾರಣಿಗಳಿಂದ ಹೇಳಿಕೆಗಳ ಮಹಾಪೂರ ಹರಿಯತೊಡಗುತ್ತವೆ. ಆದರೆ, ಕಳೆದ 20 ವರ್ಷಗಳಿಂದ ಈ ದೇಶದಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಯೊಂದರ ಕುರಿತು ಮಾಧ್ಯಮಗಳು ಮಾತಾಡಿದ್ದು ಶೂನ್ಯ ಎಂಬಷ್ಟು ಕಡಿಮೆ. ಈ ಸಂಘಟನೆಯ ಬಗ್ಗೆ ತನಿಖಾ ಬರಹಗಳು ಈ ವರೆಗೂ ಸರಿಯಾದ ರೀತಿಯಲ್ಲಿ ಪ್ರಕಟವಾಗಿಲ್ಲ. ನಮ್ಮ ರಾಜಕಾರಣಿಗಳಂತೂ ಸನಾತನ ಸಂಸ್ಥಾ ಎಂಬ ಸಂಘಟನೆ ಅಸ್ತಿತ್ವದಲ್ಲಿ ಇದೆಯೆಂದೇ ಒಪ್ಪಿಕೊಳ್ಳದಷ್ಟು ಈ ವಿಷಯದಲ್ಲಿ ಮೌನ ಪಾಲಿಸಿದ್ದಾರೆ. ಯಾಕೆ ಹೀಗೆ? ಸಂವಿಧಾನ ವಿರೋಧಿ ಚಿಂತನೆ ಯಾರಿಂದಲೇ ಬರಲಿ, ಆ ಬಗ್ಗೆ ಪ್ರತಿಕ್ರಿಯಿಸಬೇಕಾದದ್ದು ಮತ್ತು ಅದನ್ನು ಬಲವಾಗಿ ಖಂಡಿಸಬೇಕಾದದ್ದು ಎಲ್ಲರ ಕರ್ತವ್ಯ. ಸನಾತನ ಸಂಸ್ಥಾದ ಆಲೋಚನೆಯೇ ಸಂವಿಧಾನ ವಿರೋಧಿ. ಅದು ಈ ದೇಶದ ಸಂವಿಧಾನವನ್ನು ರದ್ದುಗೊಳಿಸಬಯಸುತ್ತದೆ. ಪ್ರಜಾತಂತ್ರದ ಬದಲು ಚುನಾವಣೆಗಳೇ ಇಲ್ಲದ ಸರ್ವಾಧಿಕಾರ ಆಡಳಿತವನ್ನು ಪ್ರತಿಪಾದಿಸುತ್ತದೆ. ತನ್ನ ನಿಲುವನ್ನು ಪ್ರಶ್ನಿಸುವವರನ್ನು ಅದು ಸಮಾಜ ವಿರೋಧಿಗಳೆಂದು ವರ್ಗೀಕರಿಸುತ್ತದೆ. ಒಂದು ಬಗೆಯ ಭ್ರಮೆಯ ಸುತ್ತ ಅದರ ಕಾರ್ಯಚಟುವಟಿಕೆ ಕೇಂದ್ರೀಕೃತವಾಗಿರುವಂತೆ ಗೋಚರಿಸುತ್ತಿದೆ. ಹೀಗಿರುವಾಗ, 2023ರ ಗುರಿಯನ್ನು ಯಶಸ್ವಿಯಾಗಿ ತಲುಪುವುದಕ್ಕಾಗಿ ಅದು ಯೋಜನೆಗಳನ್ನು ಹಾಕಿಕೊಂಡಿರುವುದಂತೂ ಖಂಡಿತ. ಆ ಯೋಜನೆಗಳು ಯಾವುವು, ಅದರ ಜಾರಿಯ ಹಂತಗಳು ಹೇಗೆ, ಅದು ತನ್ನ ಗುರಿಯ ಈಡೇರಿಕೆಗಾಗಿ ಯಾರ ವಿರುದ್ಧ ಮತ್ತು ಯಾವುದರ ವಿರುದ್ಧ ಯುದ್ಧ ಸಾರುತ್ತದೆ.. ಇವೆಲ್ಲ ಬಹಿರಂಗವಾಗಬೇಕಿದೆ. ಕಲಬುಗಿರ್ಯವರ ಹತ್ಯೆಯು ಆ 2023ರ ನೀಲನಕ್ಷೆಯ ಭಾಗವೇ ಎಂಬುದೂ ಸ್ಪಷ್ಟವಾಗಬೇಕಿದೆ.

Saturday, 26 September 2015

ಪ್ರಧಾನಿಯವರೇ, ಆಂಡರ್ಸನ್‍ಗಾಗಿ ಮಾತೆತ್ತಿದ ನೀವು ರಾಯಭಾರಿಯನ್ನು ಕಳುಹಿಸಿಕೊಟ್ಟದ್ದೇಕೆ?

     ಕೇಂದ್ರ ಸರಕಾರದ ಕಾರ್ಯಶುದ್ಧಿಯ ಮೇಲೆ ದೊಡ್ಡದೊಂದು ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸಿ ಸೌದಿ ರಾಜತಾಂತ್ರಿಕ ಅಧಿಕಾರಿಯೋರ್ವರು ಭಾರತ ಬಿಟ್ಟು ಹೊರಟು ಹೋಗಿದ್ದಾರೆ. ಗುರ್ಗಾಂವ್‍ನಲ್ಲಿರುವ ಸೌದಿ ರಾಜತಾಂತ್ರಿಕ ಕಚೇರಿಯಲ್ಲಿ ಕೆಲಸಕ್ಕಿದ್ದ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯವೆಸಗಿದ ಆರೋಪವು ಮಜೀದ್ ಹಸನ್ ಅಶೂರ್ ಎಂಬ ಈ ಅಧಿಕಾರಿಯ ಮೇಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಈ ಆರೋಪಗಳು ಸಾಬೀತುಗೊಂಡಿರುವ ವರದಿಯೂ ಬಂದಿದೆ. ಇಷ್ಟಿದ್ದೂ, ಯಾವೊಂದು ತನಿಖೆಗೂ ಒಳಪಡಿಸದೇ ಈ ಅಧಿಕಾರಿಯನ್ನು ದೇಶಬಿಟ್ಟು ತೆರಳಲು ಕೇಂದ್ರ ಸರಕಾರ ಅನುವು ಮಾಡಿಕೊಟ್ಟದ್ದು ಹೇಗೆ ಮತ್ತು ಯಾಕೆ? ಭಾರತ ಮತ್ತು ಸೌದಿ ಸರಕಾರಗಳ ನಡುವೆ ಈ ಕುರಿತಂತೆ ಮಾತುಕತೆಗಳು ನಡೆದಿವೆಯೇ? ಅದರ ವಿವರಗಳು ಏನೆಲ್ಲ? ಗೃಹಸಚಿವಾಲಯ ಯಾಕೆ ಯಾವ ಮಾಹಿತಿಯನ್ನೂ ಸಾರ್ವಜನಿಕರಿಗೆ ಬಿಟ್ಟುಕೊಡುತ್ತಿಲ್ಲ? ಆರ್ಥಿಕ ಲೆಕ್ಕಾಚಾರಗಳು ಇದರ ಹಿಂದೆ ಕೆಲಸ ಮಾಡಿವೆಯೇ? ಜಿನೇವಾ ಒಡಂಬಡಿಕೆಯ ಕಟ್ಟಳೆಗಳೇನೇ ಇರಲಿ, ಮಹಿಳೆಯರ ಬಗ್ಗೆ ಅಪಾರ ಕಕ್ಕುಲಾತಿಯನ್ನು ತೋರ್ಪಡಿಸುವ ಸರಕಾರವೊಂದು ಈ ಮಟ್ಟದಲ್ಲಿ ತಗ್ಗಿ-ಬಗ್ಗಿ ನಡೆದದ್ದೇಕೆ? ಕೇರಳದ ಮೀನುಗಾರರನ್ನು ಹತ್ಯೆಗೈದ ಇಟಲಿಯ ನಾವಿಕರ ವಿಷಯದಲ್ಲಿ ಮನಮೋಹನ್ ಸಿಂಗ್ ಸರಕಾರವನ್ನು ಈ ಹಿಂದೆ ಬಿಜೆಪಿ ತೀವ್ರ ತರಾಟೆಗೆ ಎತ್ತಿಕೊಂಡಿತ್ತು. ಆ ನಾವಿಕರನ್ನು ಇಟಲಿಗೆ ಬಿಟ್ಟು ಕೊಡಬಾರದೆಂದು ಪ್ರಬಲವಾಗಿ ವಾದಿಸಿತ್ತು. ಮನಮೋಹನ್ ಸಿಂಗ್ ಸರಕಾರವು ಈ ಕುರಿತಂತೆ ಮೃದು ನೀತಿಯನ್ನು ಹೊಂದಿದೆ ಎಂದು ಬಾರಿಬಾರಿಗೂ ಟೀಕಿಸಿತ್ತು. ಭೋಪಾಲ್ ಅನಿಲ ದುರಂತದ ಆರೋಪಿ ವಾರೆನ್ ಆಂಡರ್ಸನ್‍ನನ್ನು ಯಾವ ತನಿಖೆಗೂ ಒಳಪಡಿಸದೇ ಅಮೇರಿಕಕ್ಕೆ ತೆರಳಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷವನ್ನು ಅದು ಈಗಲೂ ಟೀಕಿಸುತ್ತಿದೆ. ಪಾಕಿಸ್ತಾನವು ಭಾರತೀಯ ಸೈನಿಕರ ಒಂದು ತಲೆಯನ್ನು ಉರುಳಿಸಿದರೆ ಪಾಕ್‍ನ ಹತ್ತು ತಲೆಯನ್ನು ಉರುಳಿಸುವೆವು ಎಂದು ಸಾರಿದ ಮತ್ತು ಸಾರುತ್ತಿರುವ ಪಕ್ಷ ಬಿಜೆಪಿ. ಇಂಥ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್‍ನಂತೆಯೇ ಆಡುತ್ತಿರುವುದೇಕೆ? ಅತ್ಯಾಚಾರದ ವಿರುದ್ಧ ಈ ದೇಶದಲ್ಲಿ 3 ವರ್ಷಗಳ ಹಿಂದೆ ದೊಡ್ಡದೊಂದು ಚಳವಳಿ ನಡೆದಿದೆ. ಆ ಚಳವಳಿ ಎಷ್ಟು ಪ್ರಭಾವಶಾಲಿಯಾಗಿತ್ತೆಂದರೆ, ಅತ್ಯಾಚಾರದ ವಿರುದ್ಧ ಪ್ರಬಲ ಕಾನೂನನ್ನೇ ರಚಿಸುವಷ್ಟು. ಆ ಬಳಿಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಳ ಸರಣಿ ಘೋಷಣೆಗಳು ನ್ಯಾಯಾಲಯಗಳಿಂದ ಪ್ರಕಟವಾದುವು. ಬಿಜೆಪಿಯನ್ನು ಬೆಂಬಲಿಸುವ ಸಂಘಪರಿವಾರವಂತೂ ಅತ್ಯಾಚಾರ ಬಿಡಿ, ಹೆಣ್ಣು-ಗಂಡು ಪರಸ್ಪರ ಮಾತಾಡುವುದನ್ನೇ ಅಪರಾಧ ಎಂದು ಹೇಳುವಷ್ಟು ನಿಷ್ಠುರತೆಯನ್ನು ಪ್ರದರ್ಶಿಸುತ್ತಿದೆ. ಹೆಣ್ಣನ್ನು ರಕ್ಷಿಸುವ ಹೆಸರಲ್ಲಿ ಥಳಿತ, ಹಲ್ಲೆ, ಹತ್ಯೆಗಳಂತಹ ಕೃತ್ಯಕ್ಕೂ ಕೈ ಹಾಕುತ್ತಿದೆ. ಹೀಗಿರುವಾಗ, ಕೇಂದ್ರ ಸರಕಾರದ ಈ ನಡೆಗೆ ಏನೆನ್ನಬೇಕು? ಹಾಗಾದರೆ ಹೆಣ್ಣಿನ ಬಗ್ಗೆ ಬಿಜೆಪಿ ಮತ್ತು ಅದರ ಪರಿವಾರಗಳು ವ್ಯಕ್ತಪಡಿಸುತ್ತಿರುವ ಗೌರವಾದರದ ಮಾತುಗಳು ನಕಲಿಯೇ? ಕನಿಷ್ಠ ಅಮೇರಿಕದಲ್ಲಿ ಭಾರತದ ರಾಜತಾಂತ್ರಿಕೆಯಾಗಿದ್ದ ದೇವಯಾನಿ ಖೋಬ್ರಗದೆಯವರ ಬಗ್ಗೆ ಅಮೇರಿಕ ವರ್ಷಗಳ ಹಿಂದೆ ನಡೆದುಕೊಂಡಷ್ಟಾದರೂ ನಿಷ್ಠುರತೆಯನ್ನು ಭಾರತಕ್ಕೆ ತೋರಬಹುದಿಲ್ಲವೇ? ರಾಯಭಾರ ಕಚೇರಿಯ ಅಧಿಕಾರಿಯಾಗಿದ್ದರೂ ಖೋಬ್ರಗದೆಯವರನ್ನು ಅಮೇರಿಕ ಸುಲಭದಲ್ಲಿ ಬಿಟ್ಟುಕೊಡಲಿಲ್ಲ. ಜಿನೇವಾ ಒಡಂಬಡಿಕೆಯಲ್ಲಿ ಅಷ್ಟರ ಮಟ್ಟಿಗೆ ಅವಕಾಶ ಇದೆಯೆಂದಾದರೆ ಮೋದಿಯವರು ಅದನ್ನೇಕೆ ಬಳಸಿಕೊಳ್ಳಲಿಲ್ಲ? ಹಾಗಂತ, ಇದನ್ನು ಕೇಂದ್ರದ ರಾಜತಾಂತ್ರಿಕ ವೈಫಲ್ಯ ಎಂಬ ಷರಾದೊಂದಿಗೆ ಮುಚ್ಚಿಹಾಕಬಹುದು. ದಿ ಹಿಂದೂ ಸಹಿತ ಹೆಚ್ಚಿನೆಲ್ಲಾ ಪತ್ರಿಕೆಗಳು ತಮ್ಮ ಸಂಪಾದಕೀಯಕ್ಕೆ ಕೊಟ್ಟ ಶೀರ್ಷಿಕೆಯೂ ಇದುವೇ. ಆದರೆ ವಾರನ್ ಆಂಡರ್ಸನ್‍, ಇಟಲಿಯ ನಾವಿಕರು ಅಥವಾ ಖೋಬ್ರಗದೆಯ ವಿಷಯದಲ್ಲಿ ಧಾರಾಳ ಮಾತಾಡಿದ್ದ ಬಿಜೆಪಿಯು ಸೌದಿ ಅಧಿಕಾರಿಯ ಕುರಿತಂತೆ ಒಂದು ವಾಕ್ಯದ ಸ್ಪಷ್ಟೀಕರಣವನ್ನೂ ಕೊಡದಷ್ಟು ಮೌನಿಯಾಗಿರುವುದೇಕೆ? ಈ ಮೌನದ ಹಿಂದಿರುವುದು ಅಸಹಾಯಕೆಯೋ ಅನಿವಾರ್ಯತೆಯೋ?
  ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮನಮೋಹನ್ ಸಿಂಗ್‍ರನ್ನು ದುರ್ಬಲ ಪ್ರಧಾನಿ ಎಂದು ಕರೆದಿದ್ದ ಬಿಜೆಪಿಯು ಆಗ ಸ್ವಯಂ ತನಗೆ ತಾನೇ ಪೌರುಷದ ಇಮೇಜನ್ನು ಕೊಟ್ಟುಕೊಂಡಿತ್ತು. ಭಾರತದ ಒಂದು ತಲೆಗೆ ಪಾಕಿಸ್ತಾನದ ಹತ್ತು ತಲೆಗಳ ಸ್ಲೋಗನ್ ಉದುರಿದ್ದೂ ಆವಾಗಲೇ. ಮನಮೋಹನ್ ಸಿಂಗ್‍ರ ಮೃದುತನದ ಎದುರು ಮೋದಿಯವರು ಖಡಕ್ ವ್ಯಕ್ತಿಯಾಗಿ ಕಂಗೊಳಿಸಿದ್ದರು. ಅವರು ಸಕಲ ಸಮಸ್ಯೆಗಳಿಗೂ ಪರಿಹಾರವಾಗಿ ಕಂಡರು. ಅವರ ಮಾತುಗಾರಿಕೆ, ಬಾಡಿ ಲಾಂಗ್ವೇಜ್, ಪ್ರಾಸಬದ್ಧ ಪದಗಳು ಮತ್ತು ಮಾತಿನ ಅಬ್ಬರಗಳೆಲ್ಲ ನಿಷ್ಠುರತೆಯ ಸಂಕೇತಗಳಾಗಿ ಕಂಡವು. ಮುಸ್ಲಿಮ್ ಧರ್ಮಗುರುಗಳು ನೀಡಿದ ಟೋಪಿಯನ್ನು ನಿರಾಕರಿಸಿದ್ದು, ‘ಹಮ್ ಪಾಂಚ್, ಹಮಾರೆ ಪಚ್ಚೀಸ್’ ಎಂದು ಹೇಳಿದ್ದು, ತಾನು ‘ಸ್ವಯಂ ಸೇವಕ' ಎಂದು ಬಹಿರಂಗವಾಗಿಯೇ ಘೋಷಿಸಿದ್ದು.. ಎಲ್ಲವೂ ಅವರ ಸುತ್ತ ನಿಷ್ಠುರತೆಯ ಪ್ರಭಾವಳಿಯೊಂದನ್ನು ಸೃಷ್ಟಿಸಿತ್ತು. ‘ಮೋದಿಯವರು ಪ್ರಧಾನಿಯಾದರೆ ಪಾಕ್‍ಗೆ ಅಣುಬಾಂಬ್ ಹಾಕುತ್ತಾರೆ..' ಎಂದು ಅವರ ಅನುಯಾಯಿಗಳು ಹೇಳುವಷ್ಟು ಅವರ ಗಡಸು ಇಮೇಜು ಜನಪ್ರಿಯವಾಯಿತು. ಆದರೆ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯಾದ ಬಳಿಕ ಪೌರುಷದ ಪ್ರಭಾವಳಿ ನಿಧಾನಕ್ಕೆ ದೂರ ಸರಿಯುತ್ತಿದೆ. ಅವರು ಇನ್ನೋರ್ವ ಮನಮೋಹನ್ ಸಿಂಗ್ ಆಗುತ್ತಿದ್ದಾರೆಯೇ ಹೊರತು ನಿಷ್ಠುರ ನರೇಂದ್ರ ಮೋದಿಯಲ್ಲ ಎಂಬುದು ದಿನೇ ದಿನೇ ಸ್ಪಷ್ಟವಾಗುತ್ತಿದೆ. ಅವರು ಪ್ರಧಾನಿಯಾದ ಒಂದು ವರ್ಷದಲ್ಲಿ ಪಾಕ್‍ನಿಂದ ಗಡಿ ಉಲ್ಲಂಘನೆಯ ಪ್ರಕರಣಗಳು ಈ ಹಿಂದೆಂದೂ ಆಗದಷ್ಟು ಹೆಚ್ಚಿನ ಪ್ರಮಾಣದಲ್ಲಿ ನಡೆದಿದೆ. ಪಾಕ್ ಸೈನಿಕರ ಗುಂಡಿನ ದಾಳಿಯಿಂದ ಭಾರತೀಯ ಸೈನಿಕರು ಆಗಾಗ ಸಾವನ್ನಪ್ಪುತ್ತಲೂ ಇದ್ದಾರೆ. ಮಾಧ್ಯಮಗಳು ಈ ಕುರಿತಂತೆ ಅಂಕಿ-ಅಂಶಗಳನ್ನೂ ಬಹಿರಂಗಪಡಿಸುತ್ತಲೂ ಇದೆ. ಆದರೆ ಮನಮೋಹನ್ ಸಿಂಗ್‍ರನ್ನು ಇದೇ ಗಡಿ ಪ್ರಶ್ನೆಯನ್ನು ಮುಂದಿಟ್ಟು ನಿಷ್ಕ್ರಿಯ ಸರಕಾರ ಎಂದು ಕರೆದಿದ್ದ ಬಿಜೆಪಿಯು ಇದೀಗ ಅದೇ ನಿಷ್ಕ್ರಿಯ ಪ್ರತಿಕ್ರಿಯೆಯನ್ನಷ್ಟೇ ತೋರುತ್ತಿದೆ. ಪೌರುಷದ ಮಾತುಗಳಾಚೆಗೆ ಪ್ರಾಯೋಗಿಕವಾಗಿ ಅದು ಏನನ್ನೂ ಮಾಡುತ್ತಿಲ್ಲ. ಸೌದಿ ರಾಜತಾಂತ್ರಿಕ ಪ್ರಕರಣವು ಇದಕ್ಕೆ ಇನ್ನೊಂದು ಉದಾಹರಣೆ ಅಷ್ಟೇ.
  ಹಾಗಂತ, ಸಾಮಾನ್ಯ ನಾಗರಿಕರನ್ನು ಹಿಡಿದು ಜೈಲಿಗಟ್ಟುವಂತೆ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಶಿಕ್ಷಿಸಲು ಸಾಧ್ಯವಿಲ್ಲ ನಿಜ. ಜಿನೇವಾ ಒಡಂಬಡಿಕೆಯ ಪ್ರಕಾರವೇ ‘ರಾಜತಾಂತ್ರಿಕ' ಪ್ರಕರಣ ಗಳನ್ನು ಇತ್ಯರ್ಥಪಡಿಸಬೇಕಾಗುತ್ತದೆ. ಆದರೆ ಕದ್ದು ಮುಚ್ಚಿ ವಿಮಾನದಲ್ಲಿ ಕಳುಹಿಸಿಕೊಡುವಷ್ಟು ಜಿನೇವಾ ಒಡಂಬಡಿಕೆ ಕ್ರೂರವೇ? ಹಾಗಿದ್ದರೆ ದೇವಯಾನಿ ಖೋಬ್ರಗದೆ ಪ್ರಕರಣದಲ್ಲಿ ಅಮೇರಿಕ ಅಷ್ಟು ನಿಷ್ಠುರವಾಗಿ ನಡೆದುಕೊಂಡದ್ದು ಹೇಗೆ? ಅವರನ್ನು ಅಮೇರಿಕದ ಪೊಲೀಸರು ಕೈಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆಗೂ ಒಳಪಡಿಸಿದ್ದರು. ಆದರೆ ಮೋದಿಯವರ ಸರಕಾರವು ಕನಿಷ್ಠ ತನಿಖೆಗೂ ಒಳಪಡಿಸದೇ ರಹಸ್ಯವಾಗಿ ಸೌದಿ ರಾಜತಾಂತ್ರಿಕರನ್ನು ಕಳುಹಿಸಿಕೊಟ್ಟಿದೆ. ಇದು ಯಾವುದರ ಸೂಚನೆ? ಮೋದಿಯವರು ಮಾತಿನಲ್ಲಿ ಮಾತ್ರ ನಿಷ್ಠುರವೇ, ಕೃತಿಯಲ್ಲಿ ಅವರೂ ಮನಮೋಹನ್ ಸಿಂಗೇ ಆಗಿರುವರೇ?