Monday, 25 December 2017

ಗುಜರಾತ್ ವಿಶ್ಲೇಷಣೆ: ರಾಹುಲ್, ಜಿಗ್ನೇಶ್ ಹಣೆಯಲ್ಲೇ ಎಲ್ಲವೂ ಇದೆ...

      ಬದುಕು ಮತ್ತು ಭಾವನೆಗಳ ನಡುವಿನ ಸಮರ ಎಂದೇ ಹೇಳಬಹುದಾಗಿದ್ದ ಗುಜರಾತ್ ಚುನಾವಣೆಯಲ್ಲಿ ಭಾವನೆ
ಮೇಲುಗೈ ಪಡೆದಿದೆ. ಬದುಕು ಬದಿಗೆ ಸರಿದಿದೆ. ಗುಜರಾತ್‍ನ ಒಟ್ಟು ಸಾಮಾಜಿಕ ವಾತಾವರಣ ಹೇಗಿದೆ ಎಂಬುದಕ್ಕೆ ಜಿಗ್ನೇಶ್ ಮೇವಾನಿ ಮತ್ತು ರಾಹುಲ್‍ಗಾಂಧಿಯವರ ಹಣೆಯೇ ಸಾಕ್ಷಿ. ಹಿಂದುಳಿದ ವರ್ಗಗಳ ಐಕಾನ್ ಆಗಿ ಮೂಡಿಬಂದಿರುವ ಜಿಗ್ನೇಶ್ ಮೇವಾನಿಯವರ ಹಣೆಯಲ್ಲಿ ಚುನಾವಣಾ ಪ್ರಚಾರದುದ್ದಕ್ಕೂ ಕುಂಕುವ ಎದ್ದು ಕಾಣುತ್ತಿತ್ತು. ರಾಹುಲ್ ಗಾಂಧಿಯವರ ಹಣೆಯನ್ನೂ ಕುಂಕುಮ ಅಲಂಕರಿಸಿತ್ತು. ಗುಜರಾತ್‍ನ ಉನಾ ಎಂಬಲ್ಲಿ ಐವರು ದಲಿತ ಯುವಕರನ್ನು ಅರೆಬೆತ್ತಲೆಗೊಳಿಸಿ ಥಳಿಸಲಾದ ಘಟನೆಯ ಬಳಿಕ ಭಾರೀ ಸದ್ದಿನೊಂದಿಗೆ ಮುನ್ನೆಲೆಗೆ ಬಂದ ವ್ಯಕ್ತಿ ಜಿಗ್ನೇಶ್ ಮೇವಾನಿ. ಹಿಂದೂ ಧರ್ಮಕ್ಕೂ ಮತ್ತು ಜಿಗ್ನೇಶ್ ಪ್ರತಿನಿಧಿಸುವ ದಲಿತ-ಹಿಂದುಳಿದ ಸಮುದಾಯಕ್ಕೂ ನಡುವೆ ಶತ ಶತಮಾನಗಳಿಂದ ಭಿನ್ನಾಭಿಪ್ರಾಯಗಳಿವೆ. ಈ ಸಮುದಾಯ ಆರಾಧನಾ ಕ್ರಮ ಬೇರೆ. ಆಹಾರ ಪದ್ಧತಿ ಬೇರೆ. ನಾಮಸೂಚಿಗಳು ಬೇರೆ. ಸಾಮಾಜಿಕ ರೀತಿ-ನೀತಿಗಳು ಬೇರೆ. ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿರುವುದಕ್ಕೆ ಈ ಸಮುದಾಯಗಳ ಮೇಲಾಗುತ್ತಿರುವ ದೌರ್ಜನ್ಯಗಳೇ ಮುಖ್ಯ ಕಾರಣ. ದಲಿತ- ಹಿಂದುಳಿದ ಸಮುದಾಯಗಳು ಹಿಂದೂ ಧರ್ಮದ ಒಳಗೋ-ಹೊರಗೋ ಎಂಬ ಕುರಿತು ಅಸಂಖ್ಯ ಚರ್ಚೆಗಳು ನಡೆದಿವೆ. ಈಗಲೂ ನಡೆಯುತ್ತಿದೆ. ಕುಂಕುಮವು ದಲಿತ ಸಮುದಾಯದ ಗುರುತು ಆಗಿ ಎಲ್ಲೂ ಗುರುತಿಸಿಕೊಂಡಿಲ್ಲ. ಹೀಗಿದ್ದೂ `ಉನಾ'ದಿಂದ ಹುಟ್ಟಿಕೊಂಡ ಜಿಗ್ನೇಶ್, ತನ್ನ ಹಣೆಯಲ್ಲಿ ಕುಂಕುಮ ಸದಾ ಎದ್ದು ಕಾಣುವಂತೆ ನೋಡಿಕೊಂಡಿರುವುದು ಯಾವ ಉದ್ದೇಶದಿಂದ? ರಾಹುಲ್ ಗಾಂಧಿಯು ಗುಜರಾತ್ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದೇ ಮಂದಿರ ಭೇಟಿಯ ಮೂಲಕ. ಪ್ರಚಾರ ಸಮಯದಲ್ಲಿ ಸುಮಾರು 26ಕ್ಕಿಂತೂ ಅಧಿಕ ಮಂದಿರಗಳಿಗೆ ಭೇಟಿಕೊಟ್ಟರು. ಕಳೆದ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಯು ಇಡೀ ಗುಜರಾತ್‍ನಲ್ಲಿ ಯಾವ ಬಗೆಯ ವಾತಾವರಣವನ್ನು ಹುಟ್ಟುಹಾಕಿದೆ ಎಂಬುದನ್ನು ಇವರಿಬ್ಬರ ಹಣೆಯೇ ಹೇಳುತ್ತಿದೆ. ಬಹುಸಂಖ್ಯಾತ ಧರ್ಮದ ಪ್ರತಿನಿಧಿಗಳಾಗಿ ಗುರುತಿಸಿಕೊಳ್ಳುವುದು ಗುಜರಾತ್‍ನ ಮಟ್ಟಿಗೆ ಅನಿವಾರ್ಯ. ರಾಹುಲ್ ಗಾಂಧಿಯನ್ನು ಎಲ್ಲಿಯವರೆಗೆ ಒತ್ತಡಕ್ಕೆ ಸಿಲುಕಿಸಲಾಯಿತೆಂದರೆ ಒಂದು ಹಂತದಲ್ಲಿ ಅವರು ತಮ್ಮ ಜನಿವಾರವನ್ನೂ ಪ್ರದರ್ಶಿಸಬೇಕಾಯಿತು. ‘ತಾನು ಶಿವನ ಆರಾಧಕ’ ಎಂದೂ ಬಹಿರಂಗವಾಗಿಯೇ ಹೇಳಬೇಕಾಯಿತು. ‘ರಾಹುಲ್ ಗಾಂಧಿಯವರು ಮಸೀದಿ ಪರವೋ ಮಂದಿರ ಪರವೋ’ ಎಂಬ ಪ್ರಶ್ನೆಯನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಎಸೆದರು. ಅಹ್ಮದ್ ಪಟೇಲ್‍ರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡಲಿದೆ ಎಂದು ಪ್ರಧಾನಿಯವರು ಹೇಳುವ ಮೂಲಕ, ಕಾಂಗ್ರೆಸನ್ನು ಗೆಲ್ಲಿಸಿದರೆ ಗುಜರಾತ್‍ಗೆ ಮುಸ್ಲಿಮನೊಬ್ಬ ಮುಖ್ಯಮಂತ್ರಿಯಾಗುತ್ತಾನೆ ಎಂಬ ಸೂಚನೆ ಕೊಟ್ಟರು. ರಾಹುಲ್ ಗಾಂಧಿಯವರು ಅಪ್ಪಿ-ತಪ್ಪಿಯೂ ಮಸೀದಿಗೆ ಭೇಟಿ ಕೊಡಲಿಲ್ಲ. ಹಾಗಂತ, ಮಸೀದಿಗೆ ಭೇಟಿಕೊಡಬೇಕಾಗಿತ್ತು ಎಂಬುದು ಇಲ್ಲಿನ ಉದ್ದೇಶ ಅಲ್ಲ. ಮುಸ್ಲಿಮ್ ಎಂಬ ಪದವನ್ನೇ ಉಲ್ಲೇಖಿಸಬಾರದ, ಆ ಸಮುದಾಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದ, ‘ಅಲ್ಪಸಂಖ್ಯಾತ ಅಭಿವೃದ್ಧಿ’ ಎಂಬ ಪದವನ್ನು ಪ್ರಣಾಳಿಕೆಯಲ್ಲೂ ಉಲ್ಲೇಖಿಸಬಾರದ ಸ್ಥಿತಿಯೊಂದನ್ನು ಗುಜರಾತ್‍ನಲ್ಲಿ ನಿರ್ಮಿಸಲಾಗಿದೆ. ಈ ಸ್ಥಿತಿ ಎಷ್ಟು ಅಪಾಯಕಾರಿ ಹಂತಕ್ಕೆ ತಲುಪಿದೆಯೆಂದರೆ, ರಾಹುಲ್ ಗಾಂಧೀ ಮತ್ತು ಜಿಗ್ನೇಶ್ ವೇವಾನಿಯಂತಹವರು ಅನಿವಾರ್ಯವಾಗಿ ಇದನ್ನು ಪಾಲಿಸಬೇಕಾಗುತ್ತದೆ. ಮುಸ್ಲಿಮನೊಬ್ಬ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್‍ಗೆ ಹಿನ್ನಡೆಯಾಗಿಯೂ ಬಿಜೆಪಿಗೆ ಲಾಭಕರವಾಗಿಯೂ ನೋಡಲಾಗುತ್ತದೆ. ಇಂಥ ಸನ್ನಿವೇಶದಲ್ಲಿ, ಜಾತ್ಯತೀತತೆಯಲ್ಲಿ ನಂಬಿಕೆಯಿರಿಸುವ ಯಾವುದೇ ರಾಜಕೀಯ ಪಕ್ಷದ ಮುಂದೆ ಆಯ್ಕೆಗಳು ತೀರಾ ಕಡಿಮೆಯಿರುತ್ತವೆ. ಕಾಂಗ್ರೆಸ್‍ನ ಸೋಲಿಗಿರುವ ಕಾರಣಗಳೂ ಇಲ್ಲೇ ಎಲ್ಲೋ ಇವೆ. ಜಿಎಸ್‍ಟಿ, ನೋಟ್ ಬ್ಯಾನ್, ಪಟೇಲ್ ಮತ್ತು ಹಿಂದುಳಿದ ಸಮುದಾಯಗಳ ಅಸಮಾಧಾನ ಮತ್ತು ಆಡಳಿತ ವಿರೋಧಿ ಅಲೆಯ ಹೊರತಾಗಿಯೂ ಗುಜರಾತ್ ಬಿಜೆಪಿಯ ಕೈ ತಪ್ಪಲಿಲ್ಲ್ಲ ಅನ್ನುವುದನ್ನು ಈ ಹಿನ್ನೆಲೆಯಲ್ಲೇ ವಿಶ್ಲೇಷಿಸಬೇಕಾಗುತ್ತದೆ. 2002ರ ಗುಜರಾತ್ ಹತ್ಯಾಕಾಂಡದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಅಹ್ಮದಾಬಾದ್ ಮತ್ತು ವಡೋದರ ವಲಯಗಳು ಬಿಜೆಪಿಯ ಗೆಲುವಿನಲ್ಲಿ ಈ ಬಾರಿಯೂ ಬಹುಮುಖ್ಯ ಪಾತ್ರವಹಿಸಿವೆ. ಒಟ್ಟು ಮತದಾರರಲ್ಲಿ 48% ದಷ್ಟಿರುವ ಮಹಿಳೆಯರು ಮತ್ತು 12 ಲಕ್ಷದಷ್ಟಿದ್ದ ಹೊಸ ಮತದಾರರಲ್ಲಿ ಹೆಚ್ಚಿನವರು ಬಿಜೆಪಿಯ ಪರ ನಿಂತರು ಎಂದೂ ಹೇಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‍ನಲ್ಲಿ ಸುಮಾರು 38 ರಾಲಿಗಳನ್ನು ನಡೆಸಿದರು. ಅಮಿತ್ ಷಾ ಅಂತೂ ಚುನಾವಣಾ ದಿನಾಂಕ ಘೋಷಣೆಯಾಗುವುದಕ್ಕಿಂತ ಮೊದಲೇ ಗುಜರಾತ್‍ನಲ್ಲಿ ಠಿಕಾಣಿ ಹೂಡಿದರು. ಪ್ರಚಾರದ ಕೊನೆಯ ಹಂತದಲ್ಲಂತೂ ಮಾಜಿ ಪ್ರಧಾನಿ ಮನ್‍ಮೋಹನ್ ಸಿಂಗ್, ಉಪ ರಾಷ್ಟ್ರಪತಿ ಹಾಮಿದ್ ಅನ್ಸಾರಿ, ನಿವೃತ್ತ ಸೇನಾ ವರಿಷ್ಠರೂ ಸೇರಿದಂತೆ ಹಲವರನ್ನು ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಿ ಏಜೆಂಟ್‍ಗಳೆಂದು ಕರೆದರು. ದೇಶ ವಿರೋಧಿ ಸಂಚಿನ ಭಾಗವಾಗಿ ಅವರನ್ನು ಪರಿಗಣಿಸಿದರು. ಬಹುಶಃ, ಬದುಕಿನ ಬದಲು ಭಾವನೆಯ ಆಧಾರದಲ್ಲಿ ನಡೆಸಲಾದ ಮತ್ತೊಂದು ಚುನಾವಣೆ ಇದು.
        ನಿಜವಾಗಿ, ಗುಜರಾತ್ ಎಂಬುದು ವ್ಯಾಪಾರಿಗಳ ನಾಡು. ನೋಟ್ ಬ್ಯಾನ್ ಮತ್ತು ಜಿಎಸ್‍ಟಿಗಳಿಂದ ಅತ್ಯಂತ ಹೆಚ್ಚು ತೊಂದರೆಗೊಳಗಾಗಿರಬಹುದಾದ ರಾಜ್ಯವೂ ಇದುವೇ. ಆದ್ದರಿಂದ, ಕಾಂಗ್ರೆಸ್ ತನ್ನ ಪ್ರಚಾರ ಸಾಮಗ್ರಿಯಲ್ಲಿ ಇದಕ್ಕೆ ಪ್ರಾಮುಖ್ಯತೆಯನ್ನು ಕೊಟ್ಟಿರುವುದರಲ್ಲಿ ಅಚ್ಚರಿಯೇನೂ ಇರಲಿಲ್ಲ. ರೈತರ ಬಗ್ಗೆ, ನಿರುದ್ಯೋಗದ ಬಗ್ಗೆ, 22 ವರ್ಷಗಳ ಆಡಳಿತ ವೈಫಲ್ಯಗಳ ಕುರಿತಂತೆ ಕಾಂಗ್ರೆಸ್ ಪ್ರಶ್ನೆ ಎತ್ತಿತ್ತು. ಪಟೇಲರಿಗೆ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣವೂ ಸೇರಿದಂತೆ ವಿವಿಧ ಕೊಡುಗೆಗಳನ್ನು ಕಾಂಗ್ರೆಸ್ ಮುಂದಿಟ್ಟಿತು. ಆದರೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗೆಗೊಳಿಸಿದ್ದೇ ಪ್ರಥಮ ಹಂತದ ಮತದಾನದ ಒಂದು ದಿನ ಮೊದಲು. ಪ್ರಣಾಳಿಕೆಗೆ ಬಿಜೆಪಿ ನೀಡುವ ಪ್ರಾಮುಖ್ಯತೆ ಎಷ್ಟು ಎಂಬುದನ್ನು ಇದುವೇ ಹೇಳುತ್ತದೆ. ಅದರ ಮಟ್ಟಿಗೆ ಪ್ರಣಾಳಿಕೆಯೆಂಬುದು ಒಂದು ಸಾಂಪ್ರದಾಯಿಕ ಪತ್ರಿಕಾ ಬಿಡುಗಡೆಯೇ ಹೊರತು ಅದರ ಚುನಾವಣಾ ತಂತ್ರವು ಪ್ರಣಾಳಿಕೆಯನ್ನು ಆಧರಿಸಿಕೊಂಡೇ ಇಲ್ಲ. ಜನರ ಬದುಕಿನ ಬಗ್ಗೆ ಮಾತಾಡುವುದಕ್ಕಿಂತ ಭಾವನೆಗಳ ಮೇಲೆ ಮಾತಾಡುವುದೇ ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಬಿಜೆಪಿ ಕಂಡುಕೊಂಡಿದೆ. ನೋಟ್ ಬ್ಯಾನ್ ಅನ್ನು ಎತ್ತಿಕೊಂಡು ವ್ಯಾವಹಾರಿಕ ಚರ್ಚೆ ನಡೆಸುವುದಕ್ಕೂ `ಅದರಿಂದ ದೇಶಕ್ಕೆ ದೂರಗಾಮಿ ಪ್ರಯೋಜನವಿದೆ’ ಎಂದು ವಾದಿಸುವುದಕ್ಕೂ ವ್ಯತ್ಯಾಸವಿದೆ. ಒಂದು ವಾಸ್ತವ ಆಧಾರಿತವಾದರೆ ಇನ್ನೊಂದು ಭಾವನೆ ಆಧಾರಿತ. ಭಾವನೆಗೆ ವಾಸ್ತವವನ್ನು ಕಡೆಗಣಿಸುವ ಸಾಮರ್ಥ್ಯ ಇದೆ. ಮಾತ್ರವಲ್ಲ, ವಾಸ್ತವವನ್ನೇ ದೇಶದ್ರೋಹಿಯಾಗಿ ಕಾಣುವಷ್ಟು ಅದು ಪ್ರಬಲವೂ ಹೌದು. ಸದ್ಯ ಬಿಜೆಪಿಯು ಭಾವನೆ ಎಂಬ ಈ ಅಪಾಯಕಾರಿ ಕುದುರೆಯನ್ನೇರಿದೆ. ಜನಸಾಮಾನ್ಯರು ಕುದುರೆಯ ಆಕರ್ಷಣೆಗಷ್ಟೇ ಮಹತ್ವ ಕೊಡುತ್ತಾರೆ ಎಂಬುದು ಬಿಜೆಪಿಗೆ ಗೊತ್ತು.  ಸದ್ಯದ ತುರ್ತು ಏನೆಂದರೆ,   ವರ್ತಮಾನ ಕಾಲದ ಸಮಸ್ಯೆಗಳಿಗೆ ಪರಿಹಾರವೂ ಆಗದ ಮತ್ತು ಭವಿಷ್ಯತ್ ಕಾಲದ ಸವಾಲುಗಳಿಗೆ ಉತ್ತರವೂ ಆಗದ ಈ ಕುದುರೆಯನ್ನು ಕಟ್ಟಿಹಾಕುವುದು. ಗುಜರಾತ್ ಚುನಾವಣಾ ಫಲಿತಾಂಶವನ್ನು ಬಿಜೆಪಿಯ ಗೆಲುವು- ಕಾಂಗ್ರೆಸ್‍ನ ಸೋಲು ಎಂದು ಹೇಳುವುದಕ್ಕಿಂತ ಭಾವನೆಯ ಗೆಲುವು ಮತ್ತು ಬದುಕಿನ ಸೋಲು ಎಂದಷ್ಟೇ ವಿಶ್ಲೇಷಿಸಬಹುದು. ಈ ವಾತಾವರಣ ಅತ್ಯಂತ ಅಪಾಯಕಾರಿ.

Tuesday, 19 December 2017

ಯಾದಗಿರಿ ಎತ್ತಿರುವ ದೇಶಪ್ರೇಮದ ಪ್ರಶ್ನೆ

     ಕಳೆದವಾರ ಮಾಧ್ಯಮಗಳು ಬರ್ನಾನ ಯಾದಗಿರಿ ಎಂಬ ಯುವಕನ ಗುಣಗಾನ ಮಾಡಿವೆ. ಮುಖ್ಯ ವಾಹಿನಿಯ ಸಾಕಷ್ಟು ಪತ್ರಿಕೆಗಳು ಈ ಯುವಕನನ್ನು ಪ್ರಶಂಸಿಸಿ ಸುದ್ದಿ ಬರೆದಿವೆ. ಸಾಫ್ಟ್‍ವೇರ್ ಇಂಜಿನಿಯರ್ ಪದವೀಧರನಾಗಿರುವ ಹೈದಾರಾಬಾದ್‍ನ ಈ ಯುವಕ ಸೇನೆ ಸೇರಿದ್ದಾನೆ. ಡೆಹ್ರಾಡೂನ್‍ನಲ್ಲಿರುವ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಕಳೆದವಾರ ಸೇನಾಧಿಕಾರಿಯಾಗಿ ನೇಮಕಗೊಂಡಿದ್ದಾನೆ. ಯಾದಗಿರಿಯ ತಂದೆ ಕೂಲಿ ಕಾರ್ಮಿಕ. ಹೈದಾರಾಬಾದ್‍ನ ಸಿಮೆಂಟ್ ಕಾರ್ಖಾನೆಯೊಂದರಲ್ಲಿ ದಿನಕ್ಕೆ 100 ರೂಪಾಯಿ ವೇತನಕ್ಕಾಗಿ ಅವರು ದುಡಿಯುತ್ತಿದ್ದಾರೆ. CAT  ಪರೀಕ್ಷೆಯಲ್ಲಿ 94.4% ಅಂಕ ಪಡೆದ ಬರ್ನಾನ ಯಾದಗಿರಿಗೆ ಇಂದೋರ್‍ನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ನೀಡಿದ ಸೀಟನ್ನು ಮತ್ತು ಅಮೇರಿಕನ್ ಮೂಲದ ಯೂನಿಯನ್ ಫೆಸಿಪಿಕ್ ರೇಲ್ ರೋಡ್ ಕಂಪೆನಿಯು ನೀಡಿದ ಉದ್ಯೋಗ ಕೊಡುಗೆಯನ್ನು ತಿರಸ್ಕರಿಸಿ ಆತ ಸೇನೆ ಸೇರಿಕೊಂಡಿದ್ದಾನೆ. ದಿನಕ್ಕೆ 100 ರೂಪಾಯಿಗೆ ದುಡಿಯುವ ಕೂಲಿ ಕಾರ್ಮಿಕನೋರ್ವನ ಮಗನ ಮುಂದೆ ಕೈ ತುಂಬಾ ಸಂಬಳ ಎಣಿಸುವ ಉದ್ಯೋಗವಿದ್ದೂ ಅದಕ್ಕೆ ಬೆನ್ನು ಹಾಕಿರುವುದನ್ನು ಮಾಧ್ಯಮಗಳು ದೇಶ ಪ್ರೇಮದ ಭಾಗವಾಗಿ ಕಂಡಿವೆ. ಹಾಗಂತ, ಇದನ್ನು ಅಲ್ಲಗಳೆಯಬೇಕಿಲ್ಲ. ಬಡತನದಲ್ಲಿ ಬೆಳೆದ ಮಗುವಿಗೆ ಮತ್ತು ಅದರ ಹೆತ್ತವರಿಗೆ ಕೆಲವು ಕನಸುಗಳಿರುತ್ತವೆ. ಬಡತನದ ಸ್ಥಿತಿಯಿಂದ ಹೊರಬರುವುದೂ ಅದರಲ್ಲಿ ಒಂದು. ಇಷ್ಟಿದ್ದೂ ಬರ್ನಾನ ಯಾದಗಿರಿ ಸೇನೆ ಸೇರಿದ್ದಾರೆಂದರೆ ಅದು ಪ್ರಶಂಸಾರ್ಹ ಮತ್ತು ಸವಾಲಿನ ನಿರ್ಧಾರ. ಆದರೆ ಈ ನಿರ್ಧಾರದ ಮೂಲಕ ಆ ಯುವಕ ಈ ಪ್ರಶಂಸಕರ ಮುಂದೆ ಕೆಲವು ಪ್ರಶ್ನೆಗಳನ್ನು ಇಟ್ಟಿದ್ದಾನೆ. ಆತನನ್ನು ಪ್ರಶಂಸಿಸಿದ ಪತ್ರಿಕೆಗಳಾವುವೂ ಎತ್ತದ ಅಥವಾ ಜಾಣತನದಿಂದ ಮರೆಗೆ ಸರಿಸಿದ ಪ್ರಶ್ನೆಗಳಿವು. ಯಾಕೆ ಬಡವರ ಮಕ್ಕಳೇ ಸೇನೆ ಸೇರುತ್ತಾರೆ? ದೇಶ ಪ್ರೇಮ ಎಂಬ ಬಹೂಪಯೋಗಿ ಅಸ್ತ್ರವು ಸದಾ ಯಾಕೆ ಬಡವರ ಗುಡಿಸಲನ್ನೇ ಗುರಿಯಾಗಿಸುತ್ತದೆ? ಶ್ರೀಮಂತ ಮನೆಯ ಮಗುವೊಂದು ಸೂಟು-ಬೂಟನ್ನು ಕಳಚಿ ಸೇನೆ ಸೇರುವ ಸನ್ನಿವೇಶಗಳೇಕೆ ನಿರ್ಮಾಣವಾಗುತ್ತಿಲ್ಲ? ಅಂದಹಾಗೆ, ಬರ್ನಾನ ಯಾದಗಿರಿಯನ್ನು ಹೊಗಳುವ ಮಾಧ್ಯಮಗಳು ಅದೇ ಧ್ವನಿಯಲ್ಲಿ ಶ್ರೀಮಂತರ ದೇಶ ಪ್ರೇಮವನ್ನೂ ಪ್ರಶ್ನೆಗೊಳಪಡಿಸಬಹುದಿತ್ತಲ್ಲ. ಅಮೇರಿಕನ್ ಮೂಲದ ಕಂಪೆನಿಯು ನೀಡುವ ಸಂಬಳಕ್ಕೆ ಹೋಲಿಸಿದರೆ ಬರ್ನಾನ ಯಾದಗಿರಿಗೆ ಸೇನೆ ನೀಡುವ ವೇತನ ತೀರಾ ತೀರಾ ಜುಜುಬಿ. ಆದ್ದರಿಂದ ಅಮೇರಿಕನ್ ಕಂಪೆನಿ ಉದ್ಯೋಗವನ್ನು ಕೈ ಬಿಟ್ಟು ಬರ್ನಾನ ಸೇನೆ ಸೇರುವುದೆಂದರೆ, ಅದಕ್ಕೆ ಗಟ್ಟಿ ಗುಂಡಿಗೆ ಬೇಕು. ಆದರೆ ಶ್ರೀಮಂತ ಕುಟುಂಬದ ಮಗುವಿಗೆ ಈ ಸಮಸ್ಯೆ ಬರುವುದಿಲ್ಲ. ಆದರೂ ಯಾಕೆ ಗುಡಿಸಲಿನ ಮಕ್ಕಳೇ ಸೇನೆ ಸೇರುತ್ತಾರೆ ಮತ್ತು ಯಾಕೆ ಅದು ದೇಶ ಪ್ರೇಮದ ಆಚೆಗಿನ ಪ್ರಶ್ನೆಗಳನ್ನು ಎತ್ತಲು ಮತ್ತೆ ಮತ್ತೆ ವಿಫಲವಾಗುತ್ತದೆ? ಮಾಧ್ಯಮಗಳು ಉದ್ದೇಶಪೂರ್ವಕಾಗಿ ಇಂಥ ಪ್ರಶ್ನೆಗಳ ಹುಟ್ಟನ್ನು ತಡೆಯಲು ಪ್ರಯತ್ನಿಸುತ್ತಿವೆಯೋ? ಅದರ ಭಾಗವಾಗಿಯೇ ದೇಶಪ್ರೇಮವನ್ನು ಮುಂದೊತ್ತಲಾಗುತ್ತಿದೆಯೋ? ಮುಖ್ಯವಾಹಿನಿ ಮಾಧ್ಯಮಗಳ ಆಯಕಟ್ಟಿನ ಜಾಗದಲ್ಲಿರುವವರಲ್ಲಿ ಎಷ್ಟು ಮಂದಿಯ ಮಕ್ಕಳು ಸೇನೆಯಲ್ಲಿದ್ದಾರೆ? ದೇಶ ಪ್ರೇಮದ ಬಗ್ಗೆ ನಿರರ್ಗಳ ಭಾಷಣ ಮಾಡುವ ರಾಜಕಾರಣಿಗಳ ಎಷ್ಟು ಮಕ್ಕಳು ಸೇನೆ ಸೇರುತ್ತಿದ್ದಾರೆ? ಪಾಕ್ ಗಡಿಯಲ್ಲೋ, ನಕ್ಸಲರ ಜೊತೆಗೋ ಅಥವಾ ಇನ್ನೆಲ್ಲೋ ಕಾದಾಡಿ ಪ್ರಾಣತೆರುವ ಯೋಧರನ್ನು ಹುತಾತ್ಮರೆಂದು ಕರೆದು, ವೀರಾವೇಶದ ಹೇಳಿಕೆ ನೀಡುವವರನ್ನೇಕೆ ಮಾಧ್ಯಮಗಳು ಪ್ರಶ್ನೆಗೊಳಪಡಿಸುತ್ತಿಲ್ಲ? ಹುತಾತ್ಮರಾಗುವುದೋ ಬಡಗುಡಿಸಲಿನ ಯುವಕರು. ಅದರ ಲಾಭ ಎತ್ತುವುದೋ ರಾಜಕಾರಣಿಗಳು. ಯಾಕೆ ಹೀಗೆ? ಇದೊಂದು ಸಂಚು ಯಾಕಾಗಿರಬಾರದು?
   ನಿಜವಾಗಿ, ದೇಶ ಪ್ರೇಮವೆಂಬುದು ಬಡವರು ಮಾತ್ರ ಆಚರಿಸಿ ತೋರಿಸಬೇಕಾದ ವಿಷಯವಲ್ಲ. ಅದು ದೇಶದ ಎಲ್ಲ ನಾಗರಿಕರಿಗೆ ಸಂಬಂಧಿಸಿದ್ದು. ದೇಶದ ಕಟ್ಟ ಕಡೆಯಲ್ಲಿರುವ ನಾಗರಿಕನಿಂದ ಹಿಡಿದು ದೇಶದ ತುತ್ತ ತುದಿಯಲ್ಲಿರುವ ನಾಗರಿಕನವರೆಗೆ ಎಲ್ಲರ ಮೇಲೂ ಇದರ ಹೊಣೆಗಾರಿಕೆಯಿದೆ. ದುರಂತ ಏನೆಂದರೆ, ಇವತ್ತು ದೇಶ ಪ್ರೇಮ, ಸಂಸ್ಕøತಿ ಪ್ರೇಮ, ಧರ್ಮ ರಕ್ಷಣೆ ಇತ್ಯಾದಿ ಇತ್ಯಾದಿಗಳನ್ನೆಲ್ಲ ಎರಡಾಗಿ ವಿಭಜಿಸಲಾಗಿದೆ. ಮೇಲ್ತುದಿಯಲ್ಲಿರುವ ಉದ್ಯಮಿಗಳು, ರಾಜಕಾರಣಿಗಳು, ಚಿತ್ರರಂಗದವರು ಮುಂತಾಗಿ ಹೈ ಸೊಸೈಟಿ ಎಂದು ನಾವು ಹೇಳಬಹುದಾದ ಬಡವರ್ಗವು ಒಂದು ಕಡೆಯಾದರೆ, ಬರ್ನಾನ ಯಾದಗಿರಿಯು ಪ್ರತಿನಿಧಿಸುವ ಬಡ ವರ್ಗವು ಇನ್ನೊಂದು ಕಡೆ ಮತ್ತು ಪ್ರತಿ ಸಮಯದಲ್ಲೂ ಪ್ರಶ್ನೆಗೆ ಮತ್ತು ಹಿಂಸೆಗೆ ಗುರಿಯಾಗುವುದೂ ಯಾದಗಿರಿ ಪ್ರತಿನಿಧಿಸುವ ಈ ವರ್ಗವೊಂದೇ. ಧರ್ಮ ರಕ್ಷಣೆಯ ನೊಗವನ್ನು ಹೊತ್ತುಕೊಂಡಿರುವುದೂ ಇದೇ ವರ್ಗ. ಅದರ ಹೆಸರಲ್ಲಿ ಹಲ್ಲೆ ಮತ್ತು ಹತ್ಯೆಗೆ ಗುರಿಯಾಗುತ್ತಿರುವುದೂ ಇದೇ ವರ್ಗ. ದೇಶ ಪ್ರೇಮವನ್ನು ಗುತ್ತಿಗೆ ಪಡಕೊಂಡಂತೆ ವರ್ತಿಸುತ್ತಿರುವುದೂ ಇದೇ ವರ್ಗ. ಅದರ ಹೆಸರಲ್ಲಿ ಹಿಂಸೆಗೆ ತುತ್ತಾಗುವುದೂ ಇದೇ ವರ್ಗ. ಸೇನೆ, ಪೆÇಲೀಸ್ ಇಲಾಖೆ ಸೇರಿಕೊಳ್ಳಬೇಕಾದುದೂ ಇದೇ ವರ್ಗ. ಅದರ ಪರಿಣಾಮವಾಗಿ ಶಾಶ್ವತ ಅಂಗವೈಕಲ್ಯ, ಸಾವುಗಳಿಗೆ ತುತ್ತಾಗಬೇಕಾದುದೂ ಇದೇ ವರ್ಗ. ಇನ್ನೊಂದು ವರ್ಗದ ಕೆಲಸ ಏನೆಂದರೆ, ಜನರನ್ನು ಪ್ರಚೋದಿಸುವುದು. ಯಾವುದು ದೇಶಪ್ರೇಮ, ಯಾವುದು ಅಲ್ಲ ಎಂಬುದನ್ನು ಮಾಧ್ಯಮಗಳ ಮುಂದೆ ನಿಂತು ಈ ವರ್ಗ ಘೋಷಿಸುತ್ತದೆ. ಯಾರಿಂದ, ಯಾವುದರಿಂದ ಧರ್ಮ ನಾಶವಾಗಬಹುದು ಎಂಬ ಬಗ್ಗೆ ಭಾಷಣಗಳನ್ನು ಬಿಗಿಯುತ್ತದೆ. ಸಂಸ್ಕøತಿಯನ್ನು ಉಳಿಸಿಕೊಳ್ಳಬೇಕಾದರೆ ಯಾವೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅದು ಪಾಠ ಮಾಡುತ್ತದೆ. ಗಡಿ ಕಾಯುತ್ತಾ ಹುತಾತ್ಮನಾಗುವುದೆಂದರೆ ಅದೆಷ್ಟು ಗೌರವಾನ್ವಿತ ಮರಣ ಎಂಬ ಬಗ್ಗೆ ಹೇಳಿಕೆಗಳನ್ನು ಹೊರಡಿಸುತ್ತದೆ ಮತ್ತು ಬಳಿಕ ತಂತಮ್ಮ ಐಶಾರಾಮಿ ಬಂಗಲೆಯಲ್ಲೋ ಮನೆಯಲ್ಲೋ ಆರಾಮವಾಗಿರುತ್ತದೆ.
   ನಿಜವಾಗಿ, ಬರ್ನಾನ ಯಾದಗಿರಿಯ ಆಯ್ಕೆ ನಮ್ಮನ್ನೆಲ್ಲ ಕಾಡಬೇಕಾದುದು ಈ ಎಲ್ಲವುಗಳ ಹಿನ್ನೆಲೆಯಲ್ಲಿ. ಬಡವರ ಮನೆಯ ಮಕ್ಕಳನ್ನು ದೇಶ ಪ್ರೇಮ, ಧರ್ಮಪ್ರೇಮಗಳ ಹೆಸರಲ್ಲಿ ಶ್ರೀಮಂತ ವರ್ಗ ದಿಕ್ಕು ತಪ್ಪಿಸುತ್ತಿವೆಯೇ ಅನ್ನುವ ಅನುಮಾನವನ್ನು ಬರ್ನಾನ ಯಾದಗಿರಿ ನಮ್ಮ ಮುಂದಿಟ್ಟಿದ್ದಾರೆ. ದೇಶ, ಧರ್ಮ, ಸಂಸ್ಕøತಿ ಮುಂತಾದುವುಗಳು ಶ್ರೀಮಂತ ವರ್ಗ ಮತ್ತು ರಾಜಕಾರಣಿಗಳ ಖಯಾಲಿಗಳನ್ನು ಅಡಗಿಸುವ ಅಸ್ತ್ರಗಳೇ? ಈ ವರ್ಗದ ತೆವಲುಗಳ ಬಗ್ಗೆ ಜನಸಾಮಾನ್ಯರು ಗಮನ ಹರಿಸದಂತೆ ತಡೆಯುವುದಕ್ಕೆ ಧರ್ಮ, ಸಂಸ್ಕøತಿ, ದೇಶ ಪ್ರೇಮ.. ಇತ್ಯಾದಿಗಳನ್ನು ತೇಲಿಸಿ ಬಿಡಲಾಗಿದೆಯೇ? ಬಡವರ ಮಕ್ಕಳಿಗೆ ಇವುಗಳ ರಕ್ಷಣೆಯ ಜವಾಬ್ದಾರಿಯನ್ನು ವಹಿಸಿಕೊಟ್ಟು ಅವರು ಆಟ ನೋಡುತ್ತಿದ್ದಾರೆಯೇ? ಸಂದರ್ಭಕ್ಕೆ ತಕ್ಕಂತೆ ಪ್ರಚೋದನಕಾರಿ ಹೇಳಿಕೆಗಳನ್ನು ಕೊಡುವುದು ಈ ಸಂಚಿನ ಭಾಗವೇ?
    ಬರ್ನಾನ ಯಾದಗಿರಿಯನ್ನು ಮೆಚ್ಚಿಕೊಳ್ಳುವ ಜೊತೆ ಜೊತೆಗೇ ನಾವು ನಮ್ಮೊಳಗೆ ಇಂಥ ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಾಗಿದೆ.

Friday, 15 December 2017

ಬುಡನ್ ಗಿರಿಯ ಭಕ್ತಿ ಎಲ್ಲಿಯವರೆಗೆ?

      ಚಿಕ್ಕಮಗಳೂರು ಮತ್ತು ಹುಣಸೂರಿನಲ್ಲಿ ನಡೆದ ಬೆಳವಣಿಗೆಗಳು ಕೆಲವು ಪ್ರಮುಖ ಪ್ರಶ್ನೆಗಳನ್ನು ಎತ್ತುತ್ತಿವೆ. ಎರಡೂ ಕಡೆಯ ಮೆರವಣಿಗೆಗೆ ನೇತೃತ್ವ ನೀಡಿರುವುದು ಬಿಜೆಪಿ. ಹುಣಸೂರಿನ ವಿವಾದಿತ ಕಲ್ಕುಣಿಕೆಯ ರಂಗನಾಥ ಬಡಾವಣೆಯಲ್ಲಿ ಮೆರವಣಿಗೆ ಸಾಗಬಾರದೆಂದು ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಆದರೆ ಹನುಮಂತೋತ್ಸವ ಮೆರವಣಿಗೆಯನ್ನು ಅಲ್ಲಿಂದಲೇ ಆರಂಭಿಸುವುದಾಗಿ ಬಿಜೆಪಿ ಸಂಸದರು ಘೋಷಿಸಿದರು. ಬಾಬಾ ಬುಡನ್‍ಗಿರಿಯಲ್ಲೂ ನಿರ್ಬಂಧಿತ ಪ್ರದೇಶವಿದೆ. ಮೆರವಣಿಗೆಕೋರರು ಅಲ್ಲಿಗೇ ನುಗ್ಗಿದರು. ಎರಡೂ ಕಡೆಯ ಬೆಳವಣಿಗೆಗಳು ಧರ್ಮ ಮತ್ತು ಭಕ್ತಿಯ ಹೆಸರಲ್ಲಿ ನಡೆದಿದೆ. ಸದ್ಯ ನಮ್ಮನ್ನು ನಾವು ಕೇಳಬೇಕಾದ ಪ್ರಶ್ನೆ ಏನೆಂದರೆ, ಭಕ್ತಿಯ ಮೂಲ ಉದ್ದೇಶ ಏನು? ದತ್ತಾತ್ರೇಯ ಸ್ವಾಮಿಯ ಭಕ್ತನಿಗೆ ಅಥವಾ ಹನುಮಂತನ ಭಕ್ತನಿಗೆ ಕಾನೂನನ್ನು ಮೀರಿ ನಡೆದುಕೊಳ್ಳಬೇಕೆಂಬ ಇಚ್ಛೆ ಬರುವುದು ಹೇಗೆ? ಭಕ್ತಿಯ ಇನ್ನೊಂದು ಅರ್ಥವೇ ಶಾಂತಿ ಮತ್ತು ಸರ್ವಹಿತ. ಆದ್ದರಿಂದಲೇ, ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳು ರಾಗ-ದ್ವೇಷಗಳಿಂದ ಮುಕ್ತವಾಗಿರುತ್ತವೆ. ಕುಂಭ ಮೇಳದಲ್ಲಿ ಸಾವಿರಾರು ಮಂದಿ ಸೇರುತ್ತಾರೆ. ಇಂಥ ಅನೇಕಾರು ಉದಾಹರಣೆಗಳನ್ನು ಕೊಡಬಹುದು. ಈ ದೇಶದಲ್ಲಿ ಮಂದಿರ-ಮಸೀದಿ-ಚರ್ಚ್‍ಗಳು ಪ್ರತಿದಿನವೆಂಬಂತೆ ತುಂಬಿಕೊಂಡಿರುತ್ತವೆ. ಭಕ್ತರು ತಮಗಿಷ್ಟ ಬಂದಂತೆ ನಡಕೊಂಡು ತೃಪ್ತಿಪಡುತ್ತಾರೆ. ಅಲ್ಲಿ ಲಾಠಿ ಪ್ರಹಾರ ಮಾಡಬೇಕಾದ, ಕೇಸು ದಾಖಲಿಸಿಕೊಳ್ಳಬೇಕಾದ ಯಾವ ಸನ್ನಿವೇಶವೂ ನಿರ್ಮಾಣವಾಗುವುದಿಲ್ಲ. ಇವಕ್ಕೆ ಭಿನ್ನವಾಗಿ ಬಾಬಾ ಬುಡನ್‍ಗಿರಿ ಯಾಕಿದೆ? ನಿರ್ಬಂಧವನ್ನು ಮುರಿದೇ ಭಕ್ತಿ ಪ್ರದರ್ಶಿಸುತ್ತೇವೆ ಎಂಬ ಹಠದ ಹಿಂದಿರುವುದು ಏನು?
    ನಿಜವಾಗಿ, ಬಾಬ ಬುಡನ್‍ಗಿರಿ ಎಂಬುದು ಸಾಮಾನ್ಯ ಜನರಿಗೆ ಸಂಬಂಧಿಸಿ ಹೇಳುವುದಾದರೆ, ಯಾರೊಬ್ಬರ ಸೊತ್ತೂ ಅಲ್ಲ. ಹೆಸರು ಬಾಬ ಬುಡನ್‍ಗಿರಿ ಎಂದಿದ್ದರೂ ಹಿಂದೂ ಮತ್ತು ಮುಸ್ಲಿಮರಿಬ್ಬರೂ ಸಮಾನವಾಗಿ ಅಲ್ಲಿ ನಡಕೊಳ್ಳುತ್ತಿದ್ದಾರೆ. ವಿವಾದಕ್ಕಿಂತ ಮೊದಲೂ ಮತ್ತು ಆ ಬಳಿಕವೂ ಇದು ಮುಂದುವರಿದೇ ಇದೆ. ಹೀಗಿರುವಾಗ, ಬುಡನ್‍ಗಿರಿಯ ಬೆಟ್ಟವನ್ನು ವರ್ಷಕ್ಕೊಮ್ಮೆ ಹತ್ತಿ ಅವರು ಮತ್ತು ನಾವು ಎಂದು ಸಮಾಜವನ್ನು ವರ್ಗೀಕರಿಸುವುದು ಯಾಕೆ? ಈ ದೇಶದಲ್ಲಿ 80%ದಷ್ಟಿರುವ ಬೃಹತ್ ಸಮುದಾಯವೊಂದಕ್ಕೆ 15%ದಷ್ಟಿರುವ ಪುಟ್ಟ ಸಮುದಾಯದಿಂದ ಬೆದರಿಕೆ ಇದೆ ಎಂಬಂತೆ ಬಿಂಬಿಸುವುದರ ನಿಜ ಉದ್ದೇಶ ಏನು? ಯಾವುದೇ ಕಾಲದಲ್ಲಿ 15%ದಷ್ಟಿರುವ ಪುಟ್ಟ ಗುಂಪೊಂದು 80%ದಷ್ಟಿರುವ ಬೃಹತ್ ಗುಂಪನ್ನು ಬೆದರಿಸಿದ್ದಿದೆಯೇ? ಹಾಗಂತ, ಈ ಪುಟ್ಟ ಗುಂಪಿನ ಬಳಿ ಅಧಿಕಾರ ಇಲ್ಲ. ಕಾರ್ಯಾಂಗದ ಮೇಲೆ ಯಾವ ಹಿಡಿತವೂ ಇಲ್ಲ. ನ್ಯಾಯಾಂಗದಲ್ಲಿ ಅದರ ಪ್ರತಿನಿಧಿಗಳು ಭೂತಗನ್ನಡಿ ಹಿಡಿದು ಹುಡುಕಿದರೂ ಸಿಗದಷ್ಟು ಅಲ್ಪ ಪ್ರಮಾಣದಲ್ಲಿದ್ದಾರೆ. ಶೈಕ್ಷಣಿಕವಾಗಿ ಹಿಂದುಳಿದಿರುವ, ಆರ್ಥಿಕವಾಗಿ ಪ್ರಪಾತದಲ್ಲಿರುವ ಮತ್ತು ರಾಜಕೀಯವಾಗಿ ಗುರುತೇ ಇಲ್ಲದ ಪುಟ್ಟ ಗುಂಪನ್ನು ಪ್ರತಿವರ್ಷ ಬಾಬಬುಡನ್ ಗಿರಿಯಲ್ಲಿ ನಿಂತು ಆಕ್ಷೇಪಿಸುವುದು ಮತ್ತು ಆ ಗುಂಪೇ ಬಾಬಾಬುಡನ್ ಗಿರಿ ಬೆಟ್ಟವನ್ನು ದತ್ತಾತ್ರೇಯ ಸ್ವಾಮಿ ಬೆಟ್ಟವಾಗುವುದರಿಂದ ತಡೆದಿದೆ ಎಂದೆಲ್ಲಾ ಆರೋಪಿಸುವುದು ಎಷ್ಟು ಸರಿ? ಒಂದು ವೇಳೆ, ಈ ಪುಟ್ಟ ಗುಂಪು ಅಷ್ಟೊಂದು ಪ್ರಭಾವಶಾಲಿಯಾಗಿರುತ್ತಿದ್ದರೆ ಈ ದೇಶದ ಕೋಟ್ಯಾಧಿಪತಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಅವರೇ ಇರಬೇಕಿತ್ತಲ್ಲವೇ? ಉದ್ಯಮ ಕ್ಷೇತ್ರವನ್ನು ಅವರೇ ಆಳಬೇಕಿತ್ತಲ್ಲವೇ? ರಾಜಕೀಯವಾಗಿ ಉನ್ನತ ಸ್ಥಾನವೆಲ್ಲ ಅವರೊಳಗೇ ಹಂಚಿಕೆಯಾಗಬೇಕಿತ್ತಲ್ಲವೇ? ಶೈಕ್ಪಣಿಕ ಸಂಸ್ಥೆಗಳು, ಆರೋಗ್ಯ ಕೇಂದ್ರಗಳು ಅವರ ಸುಪರ್ದಿಯಲ್ಲೇ  ಇರಬೇಕಿತ್ತಲ್ಲವೇ? ಆದರೆ ಮಾನವಾಭಿವೃದ್ಧಿಗೆ ಸಂಬಂಧಿಸಿ ಈ ದೇಶದಲ್ಲಿ ಇರುವ ಯಾವ ಅಂಕಿ-ಅಂಶಗಳನ್ನೇ ಎತ್ತಿಕೊಂಡರೂ ಅದರಲ್ಲಿ ಮುಸ್ಲಿಮರ ಸ್ಥಾನ ತೀರಾ ಕೆಳಮಟ್ಟದ್ದು. ಇಷ್ಟೊಂದು ದುರ್ಬಲ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಬಲಿಷ್ಟವಾಗಿರುವ ಸಬಲ ಸಮುದಾಯಕ್ಕೆ ಬೆದರಿಕೆಯಾಗಿದೆ ಎಂಬ ಪ್ರಚಾರದ ಹಿಂದಿರುವುದು ನಿಜಕ್ಕೂ ಯಾವುದು- ಭಕ್ತಿಯೋ ರಾಜಕೀಯವೋ?
1992ರಲ್ಲಿ ನಡೆದ ಬಾಬರಿ ಮಸೀದಿ ಧ್ವಂಸದ ಬಳಿಕದಿಂದ ತೊಡಗಿ ಮುಂದಿನ ಕೆಲವು ವರ್ಷಗಳ ವರೆಗೆ ಈ ದೇಶದ ಅಸಂಖ್ಯ ಸಣ್ಣ-ಪುಟ್ಟ ಗುಡಿ-ದೇಗುಲಗಳು ಅದ್ದೂರಿ ಕಾರ್ಯಕ್ರಮಗಳನ್ನು ಹಾಕಿಕೊಂಡವು. ಆವರೆಗೆ ಕೌಟುಂಬಿಕ ಆಚರಣೆಯಂತೆ ನಡೆದು ಮುಗಿದು ಹೋಗುತ್ತಿದ್ದ ವಾರ್ಷಿಕ ಕಾರ್ಯಕ್ರಮಗಳು ಮೆರವಣಿಗೆ ಮತ್ತು ಭಾರೀ ಪ್ರಚಾರದೊಂದಿಗೆ ನಡೆದುವು. ತೀಕ್ಷ್ಣ  ನುಡಿಯ ಭಾಷಣಗಳೂ ನಡೆದುವು. ಆದರೆ ಆ ಧ್ವಂಸ ಘಟನೆಯ ಎರಡು ದಶಕಗಳ ಬಳಿಕ ಈಗ ಅವುಗಳ ಜಾಡು ಹಿಡಿದು ನಡೆದರೆ, ತೀವ್ರ ನಿರಾಶೆಯೇ ಎದುರಾಗುತ್ತದೆ. ಆ ದೈವ-ದೇವಸ್ಥಾನಗಳು ಇವತ್ತು ಗತ ದಿನಗಳತ್ತ ಮರಳಿವೆ. ತಿವಿಯುವ ಭಾಷಣಗಳಾಗಲಿ, ಅದ್ಧೂರಿ ಮೆರವಣಿಗೆಗಳಾಗಲಿ ಇಲ್ಲದೇ ಹಳೆ ದಿನಗಳಂತೆ ಸಹಜವಾಗಿ ನಡೆಯುತ್ತಿವೆ. ನಿಜವಾಗಿ, ಭಕ್ತಿಯೆಂದರೆ ಇದುವೇ. ಇನ್ನೋರ್ವರನ್ನು ಗುರಿಯಾಗಿಸಿಕೊಂಡು ನಡೆಯುವ ಆಚರಣೆಯಲ್ಲಿ ಭಕ್ತಿ ಇರುವುದಿಲ್ಲ. ಬರೇ ಸದ್ದು ಇರುತ್ತದೆ. ಅದರ ಗುರಿ ಭಕ್ತಿಯಲ್ಲ, ಆ ಇನ್ನೊಬ್ಬರು ಅಥವಾ ಆ ಇನ್ನೊಂದು. ಅದು ಸಾಧಿತವಾದ ಕೂಡಲೇ ಸದ್ದು ನಿಲ್ಲುತ್ತದೆ. 1992ರ ಬಳಿಕದ ಈ ‘ಭಕ್ತಿ’ ಪ್ರದರ್ಶನದ ಹಿಂದೆ ರಾಜಕೀಯ ಇತ್ತು. ಆ ರಾಜಕೀಯಕ್ಕೆ ಅಸಹಜವಾದ ಭಕ್ತಿ ಪ್ರದರ್ಶನದ ಅಗತ್ಯ ಇತ್ತು. ಜೊತೆಗೇ ಕಲ್ಪಿತ ವೈರಿಯೊಂದರ ಅಗತ್ಯವೂ ಇತ್ತು. ಗುಮ್ಮವನ್ನು ತೋರಿಸಿ ಮಗುವನ್ನು ಪಳಗಿಸುವಂತೆ 15%ದಷ್ಟಿರುವ ಪುಟ್ಟ ಗುಂಪನ್ನು ಅತ್ಯಂತ ವಿಕಾರವಾಗಿ ತೋರಿಸಿ 80%ದಷ್ಟಿರುವ ಬೃಹತ್ ಗುಂಪನ್ನು ವಶೀಕರಿಸಲು ಆ ರಾಜಕೀಯ ಯತ್ನಿಸಿತು. ಈ ಪುಟ್ಟ ಗುಂಪಿನಿಂದ ಗುಡಿ-ದೇವಸ್ಥಾನಗಳ ಮೇಲೆ ಇರುವ ಬೆದರಿಕೆಗಳ ಬಗ್ಗೆ ಪ್ರಚಾರ ನಡೆಸಲಾಯಿತು. ನಿಜವಾಗಿ, ಈ ಪುಟ್ಟ ಗುಂಪಿಗೆ ಈ ಗುಡಿ-ದೇವಸ್ಥಾನಕ್ಕೆ ಬೆದರಿಕೆ ಒಡ್ಡುವ ಸಾಮಥ್ರ್ಯ ಬಿಡಿ, ಈ ಗುಡಿಗಳು ರಸ್ತೆಯುದ್ದಕ್ಕೂ ಹಾಕುವ ದೀಪಗಳನ್ನೇ ಆನಂದಿಸುವ ಸ್ಥಿತಿಯಲ್ಲಷ್ಟೇ ಅವು ಇದ್ದುವು. ಹೀಗೆ ಕಲ್ಪಿತ ವೈರಿಯನ್ನು ವಿಕಾರವಾಗಿ ತೋರಿಸಿ ತೀರಾ ಸ್ಥಳೀಯವಾಗಿ ಮತ್ತು ಸಾಂಪ್ರದಾಯಿಕವಾಗಿ ನಡೆಯುತ್ತಿದ್ದ ಆಚರಣೆಗಳನ್ನು ಅದ್ದೂರಿಯಾಗಿ ನಡೆಸಲಾಯಿತು. ಸಮಾಜ ನಿಧಾನಕ್ಕೆ ಅವರು ಮತ್ತು ನಾವು ಎಂದಾಗತೊಡಗಿತು. ಮನುಷ್ಯರೇ ಮನುಷ್ಯರನ್ನು ದ್ವೇಷಿಸುವ ಸ್ಥಿತಿಗೆ ತಲುಪಿತು. ಗುಡಿ ಮತ್ತು ಮಸೀದಿಗಳೆರಡೂ ವೈರಿಗಳಂತೆ ಬದುಕತೊಡಗಿದುವು. ಹೀಗೆ ಈ ಸಾಮಾಜಿಕ ವಿಭಜನೆಯು ಅಂತಿಮವಾಗಿ ‘ಮತ’ವಾಗಿ ಮಾರ್ಪಾಟುಗೊಂಡಿತು. ಸ್ಥಳೀಯ ಚುನಾವಣೆಗಳಲ್ಲೂ ಅದು ಬಿಂಬಿತವಾಯಿತು. ರಾಜಕೀಯ ಅಧಿಕಾರವೇ ಈ ಎಲ್ಲದರ ಗುರಿ ಆಗಿತ್ತಾದ್ದರಿಂದ ಅದು ಲಭ್ಯವಾದ ಮೇಲೆ ಆ ರಾಜಕೀಯ ಪP್ಷÀದ ಗಮನ ಬೇರೆಡೆಗೆ ತಿರುಗಿತು. ನಿಧಾನಕ್ಕೆ ಗುಡಿ-ದೇಗುಲಗಳು ಹಿಂದಿನ ಸ್ವರೂಪಕ್ಕೆ ಮರಳಿದುವು. ಕೃತಕ ಭಕ್ತಿ-ವೈಭವಗಳು ಕಾಣೆಯಾದುವು.
ಒಂದು ವೇಳೆ, ಬಾಬಾಬುಡನ್ ಗಿರಿಯ ವಿವಾದವು ಬಿಜೆಪಿ ಬಯಸಿದಂತೆಯೇ ಇತ್ಯರ್ಥವಾದರೆ ಆ ಬಳಿಕದಿಂದ ಈ ಬೆಟ್ಟ ದತ್ತಮಾಲಾಧಾರಿಗಳಿಲ್ಲದೇ ಭಣಗುಡುವ ಸಾಧ್ಯತೆ ಇದೆ. ಯಾಕೆಂದರೆ, ಈಗ ವಿವಾದ ಹುಟ್ಟುಹಾಕಿದವರ ಗುರಿ ಭಕ್ತಿಯಲ್ಲ.

Saturday, 9 December 2017

ಅಪ್ಪುಗೆ ಭಾವದ ನುಡಿಗಳ ಅಗತ್ಯ ಮತ್ತು ಧರ್ಮ ಸಂಸದ್

      ಮೈಸೂರಿನಲ್ಲಿ ನಡೆದ 83ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಉಡುಪಿಯಲ್ಲಿ ನಡೆದ 15ನೇ ಧರ್ಮಸಂಸದ್‍ಗಳು
ಬಹುತೇಕ ಜೊತೆಜೊತೆಯಾಗಿಯೇ ಆರಂಭಗೊಂಡು ಜೊತೆಜೊತೆಯಾಗಿಯೇ ಮುಕ್ತಾಯವನ್ನೂ ಕಂಡಿವೆ. ಈ ಆರಂಭ ಮತ್ತು ಅಂತ್ಯವನ್ನು ಬಿಟ್ಟರೆ ಉಳಿದಂತೆ ಇವೆರಡರ ನಡುವೆ ಹೋಲಿಕೆ, ಶೂನ್ಯ ಅನ್ನುವಷ್ಟು ಕಡಿಮೆ. ಕಾರ್ಯಕ್ರಮದ ಪ್ರಾಯೋಜಕರಿಂದ ಹಿಡಿದು, ನಿರ್ಣಯಗಳ ವರೆಗೆ; ಅತಿಥಿಗಳಿಂದ ಹಿಡಿದು ಭಾಷಣಗಳ ವರೆಗೆ ಎಲ್ಲದರಲ್ಲೂ ತದ್ವಿರುದ್ಧ ಅನ್ನಬಹುದಾದವುಗಳೇ ಹೆಚ್ಚಿವೆ. ಇದಕ್ಕಿರುವ ಪ್ರಮುಖ ಕಾರಣ ಏನೆಂದರೆ, ಒಂದನ್ನು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದರೆ ಇನ್ನೊಂದನ್ನು ಸರ್ವ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದೆ ಎಂಬುದು. ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಪರ ಮಾತುಗಳಿಗೆ ಸಮ್ಮೇಳನದಲ್ಲೇ  ಪ್ರತಿರೋಧ ಎದುರಾಯಿತು. ಪ್ರತಿಭಟನೆಯೂ ನಡೆಯಿತು. ಭಗ್‍ವಾನ್‍ರ ಮಾತುಗಳನ್ನು ಸಭಿಕರು ಪ್ರಶ್ನಿಸಿದರು. ಈ ಪ್ರಕ್ರಿಯೆ ಸಮ್ಮೇಳನದ ಆರಂಭದಿಂದ ಕೊನೆಯ ವರೆಗೂ ಮುಂದುವರಿಯಿತು. ವಿವಿಧ ವಿಚಾರಧಾರೆಗಳು, ವೈವಿಧ್ಯ ದೃಷ್ಟಿಕೋನಗಳು, ಮಂಡನೆ-ಖಂಡನೆ, ಅನಿಸಿದ್ದನ್ನು ಹೇಳುವ ಮತ್ತು ಸಮರ್ಥಿಸಿಕೊಳ್ಳುವ ಸ್ವಾತಂತ್ರ್ಯ.. ಇತ್ಯಾದಿಗಳು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ದಕ್ಕೂ ಕಾಣಿಸಿಕೊಂಡವು. ಒಂದು ರೀತಿಯಲ್ಲಿ, 6 ಕೋಟಿ ಕನ್ನಡಿಗರನ್ನು ಅವರ ಎಲ್ಲ ವೈವಿಧ್ಯತೆಗಳ ಜೊತೆಗೇ ಒಪ್ಪಿ-ಅಪ್ಪಿ ಪ್ರತಿನಿಧಿಸಿದ ಸಮ್ಮೇಳನ ಅದು. ಧರ್ಮ ಸಂಸದ್ ಇದಕ್ಕೆ ವಿರುದ್ಧವಾಗಿ ನಡೆಯಿತು. ಅಲ್ಲಿ ಪ್ರತಿ ಮಾತುಗಳ ನಡುವೆಯೂ ಮಿತಿಗಳಿದ್ದುವು. ಮೀಸಲಾತಿಯ ವಿರುದ್ಧ ಕಾಶಿ ಬನಾರಸ್‍ನ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನರೇಂದ್ರನ್ ಸರಸ್ವತಿಯವರು ಮಾತಿಗಿಳಿದಾಗ ಸಂಘಟಕರು ಅವರನ್ನು ತಡೆದು ಮಾತಿನ ಪಥ ಬದಲಿಸಿದರು. ಪೇಜಾವರ ಮಠದ ವಿಶ್ವೇಶ್ವರ ತೀರ್ಥರು ಒಮ್ಮೆ ಸಂವಿಧಾನವನ್ನೇ ಬದಲಿಸಬೇಕು ಎಂಬರ್ಥದಲ್ಲಿ ಕರೆ ಕೊಟ್ಟಾಗಲೂ ಮತ್ತು ಆ ಬಳಿಕ ಸಂವಿಧಾನ ತಿದ್ದುಪಡಿಯ ಉದ್ದೇಶವನ್ನಷ್ಟೇ ತನ್ನ ಮಾತುಗಳು ಹೊಂದಿದ್ದುವು ಎಂಬ ಸ್ಪಷ್ಟೀಕರಣ ಕೊಟ್ಟಾಗಲೂ ಧರ್ಮ ಸಂಸದ್‍ನಲ್ಲಿ ಯಾವ ಪ್ರತಿಕ್ರಿಯೆಯೂ ಗೋಚರಿಸಲಿಲ್ಲ. ಇನ್ನು, ಎರಡೂ ಕಡೆ ಮಂಡಿಸಲಾದ ನಿರ್ಣಯಗಳಲ್ಲೂ ಈ ವ್ಯತ್ಯಾಸಗಳು ಎದ್ದು ಕಾಣುವಂತಿತ್ತು. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಲಾದ ನಿರ್ಣಯಗಳು ಸಂಪೂರ್ಣವಾಗಿ ಕನ್ನಡ ನಾಡು, ನುಡಿಯ ಸಬಲೀಕರಣ ಮತ್ತು ರP್ಷÀಣೆಯನ್ನೇ ಕೇಂದ್ರೀಕರಿಸಿದ್ದರೆ ಧರ್ಮ ಸಂಸದ್‍ನ ನಿರ್ಣಯಗಳು ಇಷ್ಟು ಸ್ಪಷ್ಟವಾಗಿ ಧರ್ಮದೊಳಗಿನ ಸವಾಲುಗಳನ್ನು ಪ್ರತಿನಿಧಿಸುವಲ್ಲಿ ವಿಫಲವಾದುವು. ಮುಖ್ಯವಾಗಿ, ಅಸ್ಪೃಶ್ಯ ಆಚರಣೆಯನ್ನು ನಿವಾರಿಸುವುದಕ್ಕಾಗಿ ದಲಿತ ಮತ್ತು ಬ್ರಾಹ್ಮಣರ ನಡುವೆ ವಿವಾಹ ಸಂಬಂಧವನ್ನು ಏರ್ಪಡಿಸಬೇಕು ಎಂಬ ಸಾರ್ವಜನಿಕ ಆಗ್ರಹಕ್ಕೆ ನಿರ್ಣಯದಲ್ಲಿ ಯಾವ ಸ್ಥಾನವೂ ಸಿಕ್ಕಿಲ್ಲ. ಜಾತಿರಹಿತ ಹಿಂದೂ ಸಮಾಜ ಅಥವಾ ಜಾತಿ ಸಹಿತ ಹಿಂದೂ ಸಮಾಜ ಎಂಬ ಅಭಿಪ್ರಾಯಗಳ ಬಗ್ಗೆ ನಿರ್ಣಯದಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲಾಗಿಲ್ಲ. ಪಂಕ್ತಿ ಭೋಜನದ ಬಗ್ಗೆ ಧರ್ಮ ಸಂಸದ್‍ನಲ್ಲಿ ಅಸಂತೃಪ್ತಿ ವ್ಯಕ್ತವಾದರೂ ನಿರ್ಣಯದಲ್ಲಿ ಅದಕ್ಕೆ ಪಾಲು ಸಿಗಲಿಲ್ಲ. ಅದೇ ವೇಳೆ, ಹಿಂದೂ ಸಮುದಾಯದಲ್ಲಿ ಆಚರಣೆಯಲ್ಲಿರುವ ವಿವಿಧ ರೀತಿಯ ಮೌಢ್ಯಗಳ ಬಗ್ಗೆಯಾಗಲಿ ಅಥವಾ ರಾಜ್ಯ ಸರಕಾರ ತರಲುದ್ದೇಶಿಸಿರುವ ಮೌಢ್ಯ ವಿರೋಧಿ ಕಾಯ್ದೆಯ ಬಗ್ಗೆಯಾಗಲಿ ನಿರ್ಣಯದಲ್ಲಿ ಯಾವ ಬೆಳಕನ್ನೂ ಚೆಲ್ಲಲಾಗಿಲ್ಲ. ಮೌಢ್ಯ ಮತ್ತು ಅಮೌಢ್ಯ ಇವುಗಳ ನಡುವೆ ಸಾಕಷ್ಟು ಸಿಕ್ಕುಗಳಿವೆ. ಹಾಗಂತ, ಹಿಂದೂ ಸಮುದಾಯ ಮಾತ್ರ ಈ ಮೌಢ್ಯತೆಯಿಂದ ಸಂತ್ರಸ್ತವಾಗಿರುವುದಲ್ಲ. ಆದರೆ, 80%ದಷ್ಟಿರುವ ಬೃಹತ್ ಜನಸಂಪತ್ತನ್ನು ಇಡಿಯಾಗಿ ‘ಹಿಂದೂ ಸಮುದಾಯ' ಎಂದು ಕರೆಯುವ ವಿಶ್ವ ಹಿಂದೂ ಪರಿಷತ್‍ನ ಮಟ್ಟಿಗೆ ಮೌಢ್ಯತೆ ಬಹುಮುಖ್ಯ ಇಶ್ಯೂ ಆಗಬೇಕಿತ್ತು. ಅಷ್ಟರ ಮಟ್ಟಿಗೆ ಸಾಮಾಜಿಕವಾಗಿ ಮೂಢನಂಬಿಕೆಗಳು ಮತ್ತು ಅದರ ಫಲಿತಾಂಶವಾದ ಶೋಷಣೆಗಳು ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ಸಾಮಾನ್ಯ ಜನರಿಗೆ ಯಾವುದು ಮೌಢ್ಯ, ಯಾವುದು ಅಮೌಢ್ಯ ಎಂಬುದನ್ನು ಸುಲಭದಲ್ಲಿ ಬೇರ್ಪಡಿಸಿ ನೋಡುವ ಸಾಮಥ್ರ್ಯವೂ ಇರುವುದಿಲ್ಲ. ಪ್ರತಿ ಮೌಢ್ಯವೂ ಧರ್ಮದ ವೇಷವನ್ನು ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ತೊಟ್ಟಿರುವುದರಿಂದ ಜನರ ಶೋಷಣೆಯೂ ಸುಲಭ. ಈ ದೇಶದ ಬೃಹತ್ ಹಿಂದೂ ಜನಸಮುದಾಯವನ್ನು ಪರಿಗಣಿಸಿ ಹೇಳುವುದಾದರೆ, ಗೋವು, ಲವ್ ಜಿಹಾದ್, ಶಾದಿಭಾಗ್ಯಗಳಂತವು ಧರ್ಮ ಸಂಸದ್‍ನ ಬಹು ಉಲ್ಲೇಖಿತ ಮತ್ತು ಬಹು ಚರ್ಚಿತ ವಿಷಯಗಳಾಗುವ ಬದಲು ದಲಿತ ಮತ್ತು ಬ್ರಾಹ್ಮಣರ ನಡುವೆ ವಿವಾಹ ಸಂಬಂಧ, ಸಹಪಂಕ್ತಿ ಭೋಜನ, ಮೌಢ್ಯ ನಿವಾರಣೆ, ಸರ್ವ ಭಾರತೀಯರ ಮಾನ-ಪ್ರಾಣ-ಸೊತ್ತುಗಳ ರಕ್ಷಣೆ, ಧರ್ಮದ ನೆಪದಲ್ಲಾಗುವ ಅನ್ಯಾಯ-ದೌರ್ಜನ್ಯಗಳ ಖಂಡನೆ.. ಇತ್ಯಾದಿಗಳು ಧರ್ಮ ಸಂಸದ್‍ನಲ್ಲಿ ಒತ್ತುಕೊಟ್ಟು ಚರ್ಚೆಗೊಳಗಾಗಬೇಕಿತ್ತು ಮತ್ತು ಸಮ್ಮೇಳನದ ನಿರ್ಣಯದಲ್ಲೂ ಅವಕ್ಕೆ ಸ್ಥಾನ ಸಿಗಬೇಕಿತ್ತು. ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡುವ ಪ್ರಕ್ರಿಯೆಗೆ ತಡೆಬಿದ್ದರೆ ಗೋಹತ್ಯೆ ನಿಷೇಧದ ಬೇಡಿಕೆಯಲ್ಲಿ ಬಹುದೊಡ್ಡ ಮೈಲುಗಲ್ಲನ್ನು ಸಾಧಿಸಿದಂತೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರಕಾರವಿದ್ದೂ ಕಳೆದ ಮೂರೂವರೆ ವರ್ಷಗಳಲ್ಲಿ ಇದು ನೆರವೇರದೇ ಇರುವುದಕ್ಕೆ ಸಮ್ಮೇಳನದಲ್ಲಿ ಸೌಮ್ಯ ಅತೃಪ್ತಿಯೊಂದು ಕಾಣಿಸಿಕೊಂಡದ್ದನ್ನು ಬಿಟ್ಟರೆ ನಿರ್ಣಯದಲ್ಲಿ ಈ ಅಂಶ ಪ್ರಸ್ತಾಪವೇ ಆಗಿಲ್ಲ. ಇವೆಲ್ಲದರ ಜೊತೆಗೇ ಈ ದೇಶದಲ್ಲಿ ಒಂದಷ್ಟು ಮುಸ್ಲಿಮರು ಮತ್ತು ಮತ್ತೊಂದಿಷ್ಟು ಕ್ರೈಸ್ತರೂ ಇದ್ದಾರೆ. 80%ದಷ್ಟಿರುವ ಬೃಹತ್ ಸಮುದಾಯವು ಈ ಸಣ್ಣ ಗುಂಪಿಗೆ ಕೊಡುವ ಭರವಸೆಗಳೇನು, ಅವರ ಕಲ್ಯಾಣ-ರಕ್ಷಣೆಗಾಗಿ ಹಾಕಿಕೊಂಡಿರುವ ಯೋಜನೆಗಳೇನು, ಅವರ ಬಗೆಗಿನ ದೃಷ್ಟಿಕೋನಗಳೇನು ಎಂಬುದರ ಬಗ್ಗೆ ನಿರ್ಣಯದಲ್ಲಿ ಏನೇನೂ ಹೇಳಲಾಗಿಲ್ಲ. ಯಾವುದೇ ಸಮಾಜದ ಸಣ್ಣ ಗುಂಪು ಬೃಹತ್ ಗುಂಪಿನಿಂದ ರಕ್ಷಣೆಯ ಭರವಸೆಯನ್ನು ನಿರೀಕ್ಷಿಸುತ್ತದೆ. ಸೌಹಾರ್ದವನ್ನು ಬಯಸುತ್ತದೆ. ಆದರೆ, ಧರ್ಮ ಸಂಸದ್‍ನಲ್ಲಿ ವ್ಯಕ್ತವಾದ ಅಭಿಪ್ರಾಯಗಳು ಈ ಎರಡು ಪುಟ್ಟ ಗುಂಪನ್ನು ಆರೋಪಿ ಸ್ಥಾನದಲ್ಲಿ ಇರಿಸುವ ರೀತಿಯಲ್ಲಿ ಇತ್ತೇ ಹೊರತು ಅವರಲ್ಲಿ ಭರವಸೆ ತುಂಬುವ ಯಾವುದೂ ಇರಲಿಲ್ಲ.
ನಿಜವಾಗಿ, ಯಾವುದೇ ಧರ್ಮವೊಂದರ ನೇತೃತ್ವ ಸ್ಥಾನದಲ್ಲಿರುವವರು ತಮ್ಮ ಧರ್ಮದೊಳಗಿನ ಬೆಳವಣಿಗೆಗಳ ಬಗ್ಗೆ, ಸರಿ-ತಪ್ಪುಗಳ ಬಗ್ಗೆ ಮತ್ತು ಭವಿಷ್ಯದ ಯೋಜನೆಗಳನ್ನು ಸಿದ್ಧಪಡಿಸುವ ಬಗ್ಗೆ ಚಿಂತನ-ಮಂಥನ ನಡೆಸುವುದು ಯಾವ ಕಾರಣಕ್ಕೂ ಆಕ್ಷೇಪಾರ್ಹವೋ ಖಂಡನಾರ್ಹವೋ ಅಲ್ಲ. ಅನುಯಾಯಿಗಳು ಧರ್ಮಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಾಗ ‘ಧರ್ಮ’ವನ್ನು ಬೋಧಿಸುವುದು ಆಯಾ ಧರ್ಮದ ವಿದ್ವಾಂಸರ ಹೊಣೆಗಾರಿಕೆ. ಇವತ್ತು ಪ್ರತಿದಿನ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಿವೆ. ಆಧುನಿಕ ಪೀಳಿಗೆಯಂತೂ ಈ ಆವಿಷ್ಕಾರಗಳ ನಡುವೆ ಕೂತು ಧರ್ಮ-ಆಚಾರ-ಲೌಕಿಕ-ಅಲೌಕಿಕತೆಗಳನ್ನು ಮುಖಾಮುಖಿಗೊಳಿಸಿ ಪ್ರಶ್ನಿಸುತ್ತಿವೆ. ಧರ್ಮದ ಅಗತ್ಯ-ಅನಗತ್ಯಗಳ ಬಗ್ಗೆ ಅವು ಆಧುನಿಕ ಮಾಧ್ಯಮಗಳ ಮೂಲಕ ಹೊಸ ಸಾಧ್ಯತೆಗಳನ್ನು ಹುಡುಕುತ್ತಿವೆ. ಧರ್ಮವೇ ಎಲ್ಲ ಹಿಂಸೆ-ಮೌಢ್ಯ-ಶೋಷಣೆಗಳಿಗೆ ಕಾರಣ ಎಂದು ತೀರ್ಪು ಕೊಡುವ ಸ್ಥಿತಿಯಲ್ಲಿ ಅವು ಬಂದು ಕೂತಿವೆ. ಹೀಗಿರುವಾಗ, ಹಿಂದೂ ಧರ್ಮದ ಸ್ವಾಮೀಜಿಗಳು ಒಂದೆಡೆ ಕೂತು ಅವಲೋಕನ ನಡೆಸುವುದು ಅತ್ಯಂತ ಒಳ್ಳೆಯ ಬೆಳವಣಿಗೆ. ಅದೇವೇಳೆ, ಹಿಂದೂ ಧರ್ಮದ ಹೊರಗಡೆ ಪುಟ್ಟ ಗೂಡು ಕಟ್ಟಿಕೊಂಡಿರುವ ಮುಸ್ಲಿಮ್-ಕ್ರೈಸ್ತ ಧರ್ಮದ ಅನುಯಾಯಿಗಳಿಗಂತೂ ಈ ಬೆಳವಣಿಗೆಯ ಬಗ್ಗೆ ವಿಶೇಷ ಆಸಕ್ತಿ ಇರುವುದು ಸಹಜವೇ ಆಗಿತ್ತು. ಆದರೆ ಈ ಆಸಕ್ತಿಗೆ ಬಲ ತುಂಬಬಹುದಾದ ಯಾವುದೂ ಧರ್ಮ ಸಂಸದ್‍ನಿಂದ ಕೇಳಿಬರಲಿಲ್ಲ ಎಂಬುದು ಅತ್ಯಂತ ವಿಷಾದನೀಯ. ಅದರ ಬದಲು ಅವರನ್ನೇ ಆರೋಪಿ ಸ್ಥಾನದಲ್ಲಿ ಕೂರಿಸಿ ಬೆದರಿಸುವ ಧಾಟಿಯ ಮಾತುಗಳೇ ಧರ್ಮ ಸಂಸದ್‍ನಿಂದ ಕೇಳಿಬಂದುವು. ನಿಜವಾಗಿ, ಭಯದ ನೆರಳಲ್ಲಿ ಕಟ್ಟಿ ಹಾಕುವುದಕ್ಕಿಂತ ವಿಶ್ವಾಸಪೂರ್ಣ ಮತ್ತು ಅಪ್ಪುಗೆ ಭಾವದ ನುಡಿಗಳು ಇಂದಿನ ಅಗತ್ಯವಾಗಿತ್ತು. ಈ ಅಗತ್ಯವನ್ನು ಪೂರೈಸುವುದಕ್ಕೆ ಧರ್ಮ ಸಂಸದ್‍ನಿಂದ ಖಂಡಿತ ಸಾಧ್ಯವಿತ್ತು. ಹಾಗಾಗದಿರುವುದರಲ್ಲಿ ನೋವಿದೆ.



Thursday, 23 November 2017

ಹೆಣ್ಣು ಹೆಚ್ಚೋ ಗಂಡು ಹೆಚ್ಚೋ?

      ಹೆಣ್ಣು ಎಷ್ಟು ಅಮೂಲ್ಯ ಅನ್ನುವುದನ್ನು ಸಾಬೀತುಪಡಿಸುವ ಘಟನೆಗಳು ಆಗಾಗ ನಮ್ಮೆದುರು ನಡೆಯುತ್ತಲೇ ಇರುತ್ತವೆ. ಕಳೆದವಾರ ಪೂಜಾ ಬಿಜರ್ನಿಯ ಎಂಬ ದೆಹಲಿಯ ಹೆಣ್ಣು ಮಗಳು ಸುದ್ದಿಗೀಡಾದಳು. ಇಳಿ ವಯಸ್ಸಿನ ತಂದೆಗೆ ಆಕೆ ತನ್ನ ಯಕೃತ್ತನ್ನೇ (ಲಿವರ್) ದಾನ ಮಾಡಿದಳು. ಯಶಸ್ವಿ ಶಸ್ತ್ರ ಚಿಕಿತ್ಸೆಯ ಬಳಿಕ ಅವರಿಬ್ಬರ ಫೋಟೋವನ್ನು ವೈದ್ಯರಾದ ರಜಿತ್ ಭೂಷಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರು. ಹೊಟ್ಟೆಯ ಭಾಗದಲ್ಲಿ ಮೂಡಿರುವ ಆಳವಾದ ಗಾಯದ ಗುರುತಿನ ನಡುವೆಯೂ ನಗುವ ಆ ಹೆಣ್ಣು ಮಗಳ ಫೋಟೋ, ಫ್ರೇಮ್ ಹಾಕಿ ಕಾಪಿಡಬೇಕಾದಷ್ಟು ಅಮೂಲ್ಯವಾದುದು.
     ಅಂದಹಾಗೆ, ಹೆಣ್ಣಿಗೆ ನಮ್ಮ ದೇಶದಲ್ಲಿ ಯಾವ ಸ್ಥಾನ-ಮಾನವಿದೆ ಎಂಬುದನ್ನು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ಅಂಕಿ-ಅಂಶಗಳ ಮೊರೆ ಹೋಗಬೇಕಾಗಿಲ್ಲ. ಈ ದೇಶದಲ್ಲಿ ಜಾರಿಯಲ್ಲಿರುವ ‘ಲಿಂಗ ಪತ್ತೆ ಪರೀಕ್ಷೆ ತಡೆ ಕಾನೂನೇ’ ಇದನ್ನು ಚೆನ್ನಾಗಿ ವಿವರಿಸುತ್ತದೆ. ಈ ಆಧುನಿಕ ಕಾಲದಲ್ಲೂ ಈ ದೇಶದ ಓರ್ವ ತಾಯಿಗೆ ತನ್ನ ಹೊಟ್ಟೆಯಲ್ಲಿರುವುದು ಹೆಣ್ಣೋ-ಗಂಡೋ ಎಂಬುದು ಗೊತ್ತಾಗುವುದೇ ಪ್ರಸವದ ಬಳಿಕ. ಅಷ್ಟಕ್ಕೂ, ಗರ್ಭ ಧರಿಸುವುದು ಹೆಣ್ಣು. 9 ತಿಂಗಳು ಹೊಟ್ಟೆಯಲ್ಲಿಟ್ಟುಕೊಳ್ಳುವುದೂ ಹೆಣ್ಣು. ಈ ಅವಧಿಯಲ್ಲಿ ಎದುರಾಗುವ ಸರ್ವ ಗರ್ಭ ಸಂಬಂಧಿ ಸಮಸ್ಯೆಗಳನ್ನು ತಾಳಿಕೊಳ್ಳುವುದೂ ಹೆಣ್ಣೇ. ಆದರೂ ಆಕೆಗೆ ತನ್ನ ಹೊಟ್ಟೆಯಲ್ಲಿರುವ ಶಿಶು ಗಂಡೋ-ಹೆಣ್ಣೋ ಎಂಬುದನ್ನು ತಿಳಿದುಕೊಳ್ಳುವ ಸ್ವಾತಂತ್ರ್ಯ ಇಲ್ಲ. ನಿಜವಾಗಿ, ಪ್ರಸವ ಪೂರ್ವದಲ್ಲೇ ಶಿಶುವಿನ ಲಿಂಗ ಬಹಿರಂಗವಾಗುವುದರಿಂದ ಅನೇಕಾರು ಪ್ರಯೋಜನಗಳಿವೆ. ಹೆಣ್ಣು ಮಗುವನ್ನು ಬಯಸುವ ತಂದೆ ಆ ಕುರಿತಂತೆ ತನ್ನೊಳಗೆ ಕನಸುಗಳನ್ನು ಹೆಣೆಯಬಲ್ಲ. ಹೆಣ್ಣು ಮಕ್ಕಳ ಮನಸ್ಥಿತಿ ಹೇಗಿರುತ್ತದೆ, ಅದರೊಂದಿಗೆ ಅಪ್ಪನಾಗಿ ತನ್ನ ವರ್ತನೆ ಹೇಗಿರಬೇಕು, ಯಾವ ರೀತಿ ಬೆಳೆಸಬೇಕು, ಯಾವ ಹೆಸರು ಉತ್ತಮ, ತಾನೆಷ್ಟು ಸಮಯ ಮೀಸಲಿಡಬೇಕು…ಇತ್ಯಾದಿಗಳನ್ನು ನಿರ್ಣಯಿಸುವುದಕ್ಕೆ ಪ್ರಸವ ಪೂರ್ವದಲ್ಲೇ ಆತನಿಗೆ ಅದು ಅವಕಾಶ ನೀಡುತ್ತದೆ. ನಿರ್ದಿಷ್ಟ ಮಗುವನ್ನು ಸ್ವಾಗತಿಸುವುದಕ್ಕೆ ಬೇಕಾದ ತಯಾರಿ ನಡೆಸಲು ಸಮಯಾವಕಾಶವೂ ಸಿಕ್ಕಂತಾಗುತ್ತದೆ. ಸಾಮಾನ್ಯವಾಗಿ, ತಾಯಿಯ ಹೊಟ್ಟೆಯೊಳಗಿರುವ ಮಗು ಹೊರ ಜಗತ್ತಿನ ಚಲನೆಗಳನ್ನು ಆಲಿಸುತ್ತದೆ ಎಂದುವಿ ಜ್ಞಾನ ಹೇಳುತ್ತದೆ. ತಾಯಿಯ ಭಾವನೆಗಳು ಮಗುವಿನ ಮೇಲೆ ಪರಿಣಾಮವನ್ನು ಬೀರುತ್ತದೆ. ಸಂಗೀತ ಆಲಿಸುವ ತಾಯಿಯಿಂದ ಮಗು ಸಂಗೀತದ ಭಾವಗಳನ್ನು ಹೀರಬಹುದು. ತಾಯಿಯ ಖುಷಿ ಮಗುವಿಗೂ ರವಾನೆಯಾಗಬಹುದು. ತಾಯಿಯ ನೋವು ಮಗುವಿಗೂ ಅರಿವಾಗಬಹುದು. ಒಂದು ವೇಳೆ, ಹುಟ್ಟಲಿರುವ ಮಗು ಹೆಣ್ಣೋ-ಗಂಡೋ ಎಂಬುದು ಹೆತ್ತವರಿಗೆ ಪ್ರಸವ ಪೂರ್ವದಲ್ಲೇ ಗೊತ್ತಾದರೆ ಅವರು ಮಗುವನ್ನು ನಿರ್ದಿಷ್ಟ ಹೆಸರಲ್ಲೇ ಸಂಬೋಧಿಸಬಹುದು. ಅದೇ ಭಾವದಲ್ಲಿ ಪರಸ್ಪರ ಮಾತುಕತೆ ನಡೆಸಬಹುದು. ಇವೆಲ್ಲವೂ ಹೊಟ್ಟೆಯೊಳಗಿನ ಮಗುವನ್ನು ಒಂದು ಹಂತದ ವರೆಗೆ ತಟ್ಟಿಯೇ ತಟ್ಟುತ್ತದೆ. ಅಷ್ಟಕ್ಕೂ, ಹೊಟ್ಟೆಯೊಳಗೆ ಹೆಣ್ಣು ಮಗುವಿದ್ದೂ ಅದರ ಅರಿವಿರ ತಾಯಿ-ತಂದೆಯರಿಬ್ಬರೂ ಗಂಡು ಮಗುವಿನ ಕನಸನ್ನು ಹಂಚಿಕೊಳ್ಳುತ್ತಾ ಆ ಬಗ್ಗೆ ಮಾತುಕತೆ-ಭಾವನೆಗಳನ್ನು ವಿನಿಮಯಗೊಳಿಸುತ್ತಾ ಬದುಕುವುದು ಶಿಶುವಿನ ಮೇಲೆ ಯಾವ ಪರಿಣಾಮವನ್ನು ಬೀರಬಹುದು? ಆರೋಗ್ಯಪೂರ್ಣ ಮಗುವಿನ ದೃಷ್ಟಿಯಿಂದ ಹೆತ್ತವರ ಪ್ರಸವಪೂರ್ವ ಚಟುವಟಿಕೆಗಳೂ ಬಹುಮುಖ್ಯ ಎಂಬುದನ್ನು ನಾವು ಒಪ್ಪುವುದಾದರೆ, ಪ್ರಸವಪೂರ್ವದಲ್ಲೇ  ಶಿಶುವಿನ ‘ಲಿಂಗ’ವನ್ನು ಬಹಿರಂಗಪಡಿಸುವುದು ಅಗತ್ಯ ಎಂದು ಹೇಳಬೇಕಾಗುತ್ತದೆ. ಗಲ್ಫ್ ರಾಷ್ಟ್ರಗಳಲ್ಲಿ ಇದು ಜಾರಿಯಲ್ಲೂ ಇದೆ. ಆದರೆ ನಮ್ಮಲ್ಲಿ ಇದು ಕಾನೂನುಬಾಹಿರ. ಕಾರಣ ಏನೆಂದರೆ, ಹೆಣ್ಣು ಮಗುವಿನ ಬಗೆಗೆ ಈ ದೇಶದಲ್ಲಿರುವ ತಾತ್ಸಾರ. ಈ ತಾತ್ಸಾರ ಭಾವವು ಅಂತಿಮವಾಗಿ ಗರ್ಭಪಾತ ಮಾಡಿಸಿಕೊಳ್ಳುವುದಕ್ಕೋ, ಗರ್ಭದಲ್ಲೇ ಮಗುವಿಗೆ ಪೋಷಕಾಹಾರ ಸಿಗದೇ ನಿತ್ರಾಣವಾಗುವಂತೆ ನೋಡಿಕೊಳ್ಳುವುದಕ್ಕೋ ಅಥವಾ ಪಾರಂಪರಿಕ ಮದ್ದನ್ನು ಬಳಸಿ ಗರ್ಭದಲ್ಲೇ ಶಿಶು ಸಾಯುವಂತೆ ಮಾಡುವುದಕ್ಕೋ ಕಾರಣವಾಗಬಹುದು ಎಂಬ ಭಯ ನಮ್ಮನ್ನಾಳುವವರಲ್ಲಿದೆ. ಹಾಗಂತ, ಈ ಭಯವನ್ನು ವಿನಾ ಕಾರಣ ಎಂದು ಹೇಳುವಂತೆಯೂ ಇಲ್ಲ. ಹೀಗೆ ಭಯಪಟ್ಟುಕೊಳ್ಳುವುದಕ್ಕೆ ಆಧಾರವಾಗಿ ಅಸಂಖ್ಯ ಘಟನೆಗಳು ಈ ದೇಶದಲ್ಲಿ ನಡೆದಿವೆ ಮತ್ತು ನಡೆಯುತ್ತಲೂ ಇವೆ. ಹೆಣ್ಣು ಮತ್ತು ಗಂಡಿನ ನಡುವೆ ಅಂತರವನ್ನು ತೋರುವ ಹೆತ್ತವರು ನಮ್ಮಲ್ಲಿ ಧಾರಾಳ ಇದ್ದಾರೆ . ಗಂಡಿಗೆ ವಂಶೋದ್ಧಾರಕ ಎಂಬ ಗೌರವ ಸಲ್ಲುವಾಗ ಹೆಣ್ಣಿಗೆ ಕುಲದಿಂದ ಹೊರಗಿನವಳು ಎಂಬ ಅಗೌರವ ಸಲ್ಲುತ್ತದೆ.
      ನಿಜವಾಗಿ, ಹೆಣ್ಣು ಮತ್ತು ಗಂಡನ್ನು ಅಳೆಯಬೇಕಾದುದು ಅವರು ಗಳಿಸಬಹುದಾದ ವರಮಾನದ ಆಧಾರದಲ್ಲೋ ದೈಹಿಕ ಸಾಮರ್ಥ್ಯದ ಆಧಾರದಲ್ಲೋ ಅಲ್ಲ. ಗಂಡು-ಹೆಣ್ಣು ಎರಡೂ ಪ್ರಕೃತಿಯ ವಿಶಿಷ್ಟ ಕೊಡುಗೆಗಳು. ಹೆಣ್ಣಿಗಿಂತ ಭಿನ್ನ ಸಾಮಥ್ರ್ಯವನ್ನು ಹೇಗೆ ಗಂಡಿನಲ್ಲಿ ಹುದುಗಿಸಿಡಲಾಗಿದೆಯೋ ಹಾಗೆಯೇ ಗಂಡಿಗಿಂತ ಭಿನ್ನ ಸಾಮಥ್ರ್ಯವನ್ನು ಹೆಣ್ಣಿನಲ್ಲೂ ತುಂಬಿಡಲಾಗಿದೆ. ಇಬ್ಬರಲ್ಲೂ ವಿಭಿನ್ನ ಪ್ರತಿಭೆಗಳಿವೆ. ಪೂಜಾ ಇದನ್ನು ಸಾರುವ ಒಂದು ಪುಟ್ಟ ಉದಾಹರಣೆ ಮಾತ್ರ. ಒಂದು ವೇಳೆ, ಹೆಣ್ಣು ಗಂಡಿಗಿಂತ ಕೀಳು ಆಗಿರುತ್ತಿದ್ದರೆ ಪೂಜಾಳ ಯಕೃತ್ ಆಕೆಯ ತಂದೆಯ ದೇಹಕ್ಕೆ ಹೊಂದಿಕೊಳ್ಳುವುದಕ್ಕೆ ಸಾಧ್ಯವೇ ಇರಲಿಲ್ಲ. ಅವರ ದೇಹ ಆಕೆಯ ಯಕೃತನ್ನು ತಿರಸ್ಕರಿಸಬೇಕಿತ್ತು. ಗಂಡಿನ ಯಕೃತನ್ನು ಮಾತ್ರ ಸ್ವೀಕರಿಸಬೇಕಿತ್ತು. ಆದರೆ ಪ್ರಕೃತಿ ಎಂದೂ ಮನುಷ್ಯರ ನಡುವೆ ಇಂಥ ವಿಭಜನೆಯನ್ನು ಮಾಡಿಯೇ ಇಲ್ಲ. ಅದು ಗಂಡು ಮತ್ತು ಹೆಣ್ಣನ್ನು ಎರಡು ಅಚ್ಚರಿಗಳಾಗಿ ಜಗತ್ತಿನ ಮುಂದಿಟ್ಟಿದೆಯೇ ಹೊರತು ಒಂದನ್ನು ಇನ್ನೊಂದರ ಎದುರು ಅವಮಾನಿಸಿಲ್ಲ. ದುರ್ಬಲಗೊಳಿಸಿಲ್ಲ. ತನ್ನ ಯಕೃತನ್ನು ತಂದೆಗೆ ದಾನ ಮಾಡುವ ಮೂಲಕ ಪ್ರಕೃತಿಯ ಈ ಸಂದೇಶವನ್ನು ಪೂಜಾ ಜನರಿಗೆ ತಲುಪಿಸಿದ್ದಾ ಳೆ. ಮಾತ್ರವಲ್ಲ, ‘ಗಂಡು ಬಯಕೆ’ಯ ಹೆತ್ತವರಿಗೆ ಹೆಣ್ಣು ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾಳೆ. ಪವಿತ್ರ ಕುರ್‍ಆನ್ ಅಂತೂ ಹೆಣ್ಣನ್ನು ಗಂಡಿಗಿಂತ ಮೇಲ್ದರ್ಜೆಯಲ್ಲಿರಿಸಿ ಗೌರವಿಸಿದೆ. ಇಬ್ಬರು ಹೆಣ್ಮಕ್ಕಳನ್ನು ಪಡೆದ ಹೆತ್ತವರು ಸ್ವರ್ಗ ದಕ್ಕಬಲ್ಲ ಸೌಭಾಗ್ಯಶಾಲಿಗಳು ಎಂದು ಪ್ರವಾದಿ(ಸ) ಹೇಳಿದ್ದಾರೆ. ಹೆಣ್ಣು ಶಿಶುವಿನ ಹತ್ಯೆಯು ಘೋರ ಪಾಪ ಎಂದು ಪವಿತ್ರ ಕುರ್‍ಆನ್ ಎಚ್ಚರಿಸಿದೆ. ತಾಯಿಯ (ಹೆಣ್ಣಿನ) ಪಾದದಡಿ ಸ್ವರ್ಗವಿದೆ ಎಂದು ಪ್ರವಾದಿ(ಸ) ಹೇಳಿದ್ದಾರೆ. ತಂದೆಗೆ ಯಕೃತನ್ನು ದಾನ ಮಾಡುವ ಮೂಲಕ ಹೆಣ್ಣಿನ ಕುರಿತಾದ ಈ ಎಲ್ಲ ಹೇಳಿಕೆಗಳಿಗೆ ಪೂಜಾ ನ್ಯಾಯ ತುಂಬಿದ್ದಾಳೆ. ಇಂಥವರ ಸಂಖ್ಯೆ ಬೆಳೆಯಲಿ. 

Friday, 17 November 2017

870 ದಿನಗಳು ಮತ್ತು...

      ಯೋಧರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಕ್ಷದ ನಾಯಕರು ಆಗಾಗ ವ್ಯಕ್ತಪಡಿಸುತ್ತಿರುವ ಹೆಮ್ಮೆ, ಅಭಿಮಾನ, ಗೌರವಗಳೆಲ್ಲ ಎಷ್ಟು ಪ್ರಾಮಾಣಿಕ ಎಂಬುದನ್ನು ಕಳೆದವಾರ ದೆಹಲಿಯ ಜಂತರ್ ಮಂತರ್ ಸ್ಪಷ್ಟಪಡಿಸಿತು. ಏಕ ಶ್ರೇಣಿ, ಏಕ ಪಿಂಚಣಿ ಎಂಬ ಆಗ್ರಹವನ್ನು ಮುಂದಿಟ್ಟು ಕಳೆದ 870 ದಿನಗಳಗಿಂತಲೂ ಅಧಿಕ ಸಮಯದಿಂದ ಜಂತರ್ ಮಂತರ್‍ನಲ್ಲಿ ಪ್ರತಿಭಟಿಸುತ್ತಿದ್ದ ಮಾಜಿ ಯೋಧರನ್ನು ದೆಹಲಿ ಪೊಲೀಸರು ಬಲವಂತದಿಂದ ತೆರವುಗೊಳಿಸಿದರು. ಹಾಗೆ ತೆರವುಗೊಂಡ ಈ ವಯೋವೃದ್ಧ ಯೋಧರು ಪಾರ್ಲಿಮೆಂಟ್ ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತರು. ಅಲ್ಲಿಂದಲೂ ತೆರವುಗೊಳಿಸಲಾಯಿತು. ಹಾಗಂತ, ಜಂತರ್ ಮಂತರ್‍ನಲ್ಲಿ ಯಾವುದೇ ಪ್ರತಿಭಟನೆ ಹಮ್ಮಿಕೊಳ್ಳಬಾರದೆಂದು ರಾಷ್ಟ್ರೀಯ ಹಸಿರು ಆಯೋಗವು ನೀಡಿದ ನಿರ್ದೇಶನದಂತೆ ತಾವು ಕ್ರಮ ಕೈಗೊಂಡಿರುವುದಾಗಿ ದೆಹಲಿ ಪೊಲೀಸರು ತಮ್ಮನ್ನು ಸಮರ್ಥಿಸಿಕೊಳ್ಳಬಹುದು. ಆದರೆ ನಿವೃತ್ತ ಯೋಧರು (IESM - ಭಾರತದ ಮಾಜಿ ನಿವೃತ್ತ ಯೋಧರ ಚಳವಳಿ) ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದು ನಿನ್ನೆ ಮೊನ್ನೆಯಲ್ಲ. 2015 ರಿಂದಲೇ ಈ ಪ್ರತಿಭಟನೆ ಆರಂಭವಾಗಿದೆ. ಮನ್‍ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರವು 6ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ 2008ರಲ್ಲಿ ಹುಟ್ಟಿಕೊಂಡದ್ದೇ IESM. ಏಕ ಶ್ರೇಣಿ, ಏಕ ಪಿಂಚಣಿಯನ್ನು ಆಗ್ರಹಿಸಿ ಆ ಬಳಿಕದಿಂದ ನಿವೃತ್ತ ಯೋಧರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುತ್ತಾ ಬಂದರು. ಯುಪಿಎ ಸರಕಾರವು ಏಕ ಶ್ರೇಣಿ ಏಕ ಪಿಂಚಣಿ ಆಗ್ರಹವನ್ನು ಒಪ್ಪಿಕೊಳ್ಳುವ ಸೂಚನೆ ಕೊಟ್ಟಿತ್ತಾದರೂ 2014ರ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಯೋಧರ ಆಗ್ರಹಕ್ಕೆ ದನಿಗೂಡಿಸಿದರು. ಅಧಿಕಾರಕ್ಕೆ ಬಂದರೆ ಏಕ ಶ್ರೇಣಿ ಏಕ ಪಿಂಚಣಿ ಬೇಡಿಕೆಯನ್ನು ಪೂರೈಸುವುದಾಗಿ ಮಾತು ಕೊಟ್ಟರು. ಕೇವಲ ಇದೊಂದೇ ಅಲ್ಲ, ಗಡಿಯಲ್ಲಿ ಹುತಾತ್ಮಾರಾಗುತ್ತಿರುವ ಯೋಧರಿಗಾಗಿ ಚುನಾವಣಾ ಭಾಷಣ ಮಾಡಿದಲ್ಲೆಲ್ಲ ಅವರು ಮರುಗಿದರು. ಭಾರತೀಯ ಯೋಧರ ಒಂದು ತಲೆಗೆ ಪಾಕ್ ಯೋಧರ ಹತ್ತು ತಲೆಯನ್ನು ಕತ್ತರಿಸಿ ತರುವುದಾಗಿ ಬಿಜೆಪಿ ನಾಯಕರು ಘೋಷಿಸಿದ್ದು ಇದೇ ಸಂದರ್ಭದಲ್ಲಿ. ಯೋಧರು ಗಡಿಯಲ್ಲಿ ಎಚ್ಚರದಿಂದಿರುವುದರಿಂದ ನಾವು ಸುಖವಾಗಿ ನಿದ್ದೆ ಮಾಡುತ್ತೇವೆ ಎಂಬಂತಹ ಹತ್ತು ಹಲವು ಭಾವುಕ ಮಾತುಗಳನ್ನು ಅವರು ತೇಲಿಸಿ ಬಿಟ್ಟರು. ಆದರೆ ಯಾವಾಗ ನರೇಂದ್ರ ಮೋದಿಯವರು ಪ್ರಧಾನಿಯಾದರೋ ಏಕ ಶ್ರೇಣಿ ಏಕ ಪಿಂಚಣಿ ಎಂಬುದು ನಿಧಾನವಾಗಿ ತೆರೆಮರೆಗೆ ಸರಿಯತೊಡಗಿತು. ನಿವೃತ್ತ ಯೋಧರು 2015 ಜೂನ್‍ನಲ್ಲಿ ಮತ್ತೆ ಚಳವಳಿಗೆ ಧುಮುಕಿದರು. ಅದರ ಪರಿಣಾಮವಾಗಿ ನರೇಂದ್ರ ಮೋದಿ ಸರಕಾರವು ಏಕ ಶ್ರೇಣಿ ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿತಾದರೂ ಯೋಧರ ಒಂದು ದೊಡ್ಡ ಗುಂಪು ಅಸಮಾಧಾನ ವ್ಯಕ್ತಪಡಿಸಿತು. ತಮ್ಮ ಆಗ್ರಹದ ಪ್ರಕಾರ ಮತ್ತು ಭರವಸೆ ನೀಡಿದ ಪ್ರಕಾರ ನಿಯಮಾವಳಿಗಳನ್ನು ಇದರಲ್ಲಿ ರಚಿಸಲಾಗಿಲ್ಲ ಎಂದು ಅದು ಆರೋಪಿಸಿತು. ಪ್ರತಿಭಟನೆ ಪ್ರಾರಂಭಿಸಿತು. ಅಂದಿನಿಂದ ಇಂದಿನವರೆಗೆ ಈ ಯೋಧರು ಪ್ರತಿಭಟಿಸು ತ್ತಲೇ ಇದ್ದಾರೆ. 870 ದಿನಗಳಿಗಿಂತಲೂ ಹೆಚ್ಚು ದಿನ ಈ ಹಿರಿ ವಯಸ್ಸಿನ ಯೋಧರನ್ನು ಬೀದಿ ಪಾಲಾಗಿಸಿದ ಸರಕಾರವೊಂದು ಇದೀಗ ಅವರ ತೆರವು ಕಾರ್ಯಾಚರಣೆಗೂ ತಮಗೂ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದೆ. ನಿಜವಾಗಿ, ಪ್ರಶ್ನಿಸಬೇಕಾದದ್ದು ತೆರವು ಕಾರ್ಯಾಚರಣೆಯನ್ನಲ್ಲ, 2 ವರ್ಷಕ್ಕಿಂತಲೂ ಹೆಚ್ಚು ಕಾಲ ಯೋಧರನ್ನು ಸರಕಾರವೊಂದು ಬೀದಿಪಾಲು ಮಾಡಿತಲ್ಲ, ಇದು ಎಷ್ಟು ಸರಿ? ಯೋಧರ ಸೇವೆಯನ್ನು ಪಟ್ಟಿ ಮಾಡಿ ಕೇಳುಗರನ್ನು ಭಾವುಕಗೊಳಿಸುವ ಪಕ್ಷವೊಂದು ಹೀಗೆ ಯೋಧರನ್ನು ನಿಷ್ಕರುಣೆಯಿಂದ ನಡೆಸಿಕೊಳ್ಳುವುದು ನೈತಿಕವೇ? ಏಕ ಶ್ರೇಣಿ ಏಕ ಪಿಂಚಣಿ ನಿಯಮವನ್ನು ಯೋಧರ ಒಂದು ಗುಂಪು ಒಪ್ಪಿಕೊಂಡಿದೆ ಎಂಬುದು ಇನ್ನೊಂದು ಗುಂಪನ್ನು ಸತಾಯಿಸುವುದಕ್ಕಿರುವ ಪರವಾನಿಗೆ ಆಗುತ್ತದೆಯೇ? ಸದ್ಯ ಪ್ರತಿಭಟನೆಯಲ್ಲಿ ತೊಡಗಿರುವವರಲ್ಲಿ ಭೂ, ವಾಯು ಮತ್ತು ನೌಕಾ ದಳದ ಪ್ರಮುಖ ನಿವೃತ್ತ ಅಧಿಕಾರಿಗಳಿದ್ದಾರೆ. ಕೇಂದ್ರದ ಏಕಶ್ರೇಣಿ ಏಕಪಿಂಚಣಿ ಯೋಜನೆಯನ್ನು ಒಪ್ಪಿಕೊಂಡ ಯೋಧರು ಹೇಗೆ ದೇಶ ಸೇವಕರೋ ಒಪ್ಪಿಕೊಳ್ಳದ ಇವರೂ ದೇಶಸೇವಕರೇ. ಯೋಧರ ಯೋಗಕ್ಷೇಮಕ್ಕೆ ಆದ್ಯತೆ ಕೊಡುವ ರೀತಿಯಲ್ಲಿ ಸೇನಾ ನೆಲೆಗಳಿಗೆ ಭೇಟಿ, ಯೋಧರ ಜೊತೆ ದೀಪಾವಳಿ ಆಚರಣೆ ಇತ್ಯಾದಿಗಳನ್ನು ಸರಕಾರ ಮಾಡುತ್ತದಲ್ಲ, ಇದರ
ಅರ್ಥವೇನು? ಇವೆಲ್ಲ ಕ್ಯಾಮರಾ ಕೇಂದ್ರಿತ ಕಾರ್ಯಕ್ರಮಗಳೇ? ಬರೇ ತುಟಿ ಸೇವೆಗಳೇ?
     2014ರ ಲೋಕಸಭಾ ಚುನಾವಣೆಯಲ್ಲಿ ಯೋಧರು ಮುಖ್ಯ ಚರ್ಚಾವಿಷಯವಾಗಿದ್ದರು. ಒಂದೆಡೆ ಪಾಕಿಸ್ತಾನವನ್ನು ಹಳಿಯುವುದು ಮತ್ತು ಇನ್ನೊಂದೆಡೆ ಭಾರತೀಯ ಯೋಧರ ಯೋಗ ಕ್ಷೇಮದ ಬಗ್ಗೆ ಕರುಣಾಭರಿತ ಮಾತುಗಳನ್ನಾಡುವುದನ್ನು ಬಿಜೆಪಿ ಅಭ್ಯಾಸ ಮಾಡಿಕೊಂಡಿತ್ತು. ಗಡಿಯಲ್ಲಿ ಯೋಧರ ಮೇಲೆ ನಡೆಯುವ ಪ್ರತಿ ದಾಳಿ ಪ್ರಕರಣವನ್ನೂ ಬಿಜೆಪಿ ಚುನಾವಣಾ ವಿಷಯವಾಗಿ ಮಾರ್ಪಡಿಸಿಕೊಂಡಿತ್ತು. ಒಂದು ವೇಳೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾಕ್ ಧ್ವಂಸಗೊಳ್ಳುತ್ತದೆ, ಗಡಿ ಶಾಂತವಾಗುತ್ತದೆ, ಯೋಧರೆಲ್ಲ ಚೆನ್ನಾಗಿ ನಿದ್ದೆ ಮಾಡುತ್ತಾರೆ.. ಇತ್ಯಾದಿ ಇತ್ಯಾದಿ ನಿರೀಕ್ಷೆಗಳ ಗಂಟನ್ನು ಬಿಜೆಪಿ ಬೆಂಬಲಿಗರು ದೇಶದಾದ್ಯಂತ ಹರಡಲು ಯಶಸ್ವಿಯಾಗಿದ್ದರು. ಸದ್ಯ ಆ ಪೌರುಷದ ಹೇಳಿಕೆ ಮತ್ತು ಹುಟ್ಟಿಸಿದ ನಿರೀಕ್ಷೆಗಳಿಗೆ ಮೂರೂವರೆ ವರ್ಷಗಳು ಸಂದಿವೆ. ದುರಂತ ಏನೆಂದರೆ, ಈ ಮೂರೂವರೆ ವರ್ಷಗಳಲ್ಲಿ 870ಕ್ಕಿಂತಲೂ ಅಧಿಕ ದಿನ ನಮ್ಮ ದೇಶದ ಹೆಮ್ಮೆಯ ಯೋಧರು ನ್ಯಾಯ ಕೇಳುತ್ತಾ ಬೀದಿಯಲ್ಲಿ ಕಳೆದಿದ್ದಾರೆ. ಗಡಿಯಲ್ಲಿರುವ ಯೋಧರ ಯೋಗಕ್ಷೇಮದ ವಿಷಯ ಬಿಟ್ಟು ಬಿಡಿ, ಗಡಿಯೊಳಗಿರುವ ವಯೋವೃದ್ಧ ಯೋಧರ ಯೋಗಕ್ಷೇಮಕ್ಕೇ ಸ್ಪಂದಿಸಲು ಈ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ. ಗಡಿಯಂತೂ ಉದ್ವಿಘ್ನತೆಯಲ್ಲೇ  ಇದೆ. ಯುಪಿಎ ಸರಕಾರ ಇರುವಾಗ ಗಡಿಯಿಂದ ಯಾವೆಲ್ಲ ದುಃಖಕರ ಸುದ್ದಿಗಳು ಬರುತ್ತಿತ್ತೋ ಅವು ಈಗಲೂ ಮುಂದುವರಿದಿವೆ. ಪಾಕಿಸ್ತಾನವಂತೂ ಮೂರೂವರೆ ವರ್ಷಗಳ ಹಿಂದೆ ಹೇಗಿತ್ತೋ ಹಾಗೆಯೇ ಇದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯೋಧರ ಕುರಿತಂತೆ ಮಾಡಿರುವ ಭಾಷಣದ ತುಣುಕುಗಳನ್ನು ಇವತ್ತು ಯಾರಾದರೂ ಮರು ಕೇಳಿಸಿಕೊಂಡರೆ ಆ ನರೇಂದ್ರ ಮೋದಿ ಈಗಿನ ಪ್ರಧಾನಿ ನರೇಂದ್ರ ಮೋದಿ ಅಲ್ಲವೇ ಅಲ್ಲ ಎಂದು ಖಂಡಿತ ಹೇಳಿಯಾರು. ಅಂದಿನ ಭಾಷಣಗಾರ ಮೋದಿಗೂ ಇಂದಿನ ಪ್ರಧಾನಿ ಮೋದಿಗೂ ವಿವರಿಸಲಾಗದ ಅಂತರ ಇದೆ. 870 ದಿನಗಳಿಂದ ಬೀದಿಯಲ್ಲಿರುವ ನಿವೃತ್ತ ಯೋಧರು ಇದಕ್ಕೆ ಒಂದು ಉದಾಹರಣೆ ಮಾತ್ರ.

Monday, 6 November 2017

ಅಕ್ಟೋಬರ್ 30ರ ಪತ್ರಿಕೆಗಳು

     ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿ, ವರದಿ, ವಿಶ್ಲೇಷಣೆಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಸಿಗುವ ಆದರ ಮತ್ತು ಆದ್ಯತೆಯು ಇತರ ಸುದ್ದಿಗಳಿಗೆ ಲಭ್ಯವಾಗುವುದಿಲ್ಲ ಎಂಬ ದೂರನ್ನು ಕಳೆದವಾರ ಮಾಧ್ಯಮ ಕ್ಷೇತ್ರ ಮತ್ತೊಮ್ಮೆ ಸಾಬೀತುಪಡಿಸಿದೆ. ಅಕ್ಟೋಬರ್ 29ರ ಆದಿತ್ಯವಾರದಂದು ರಾಯಚೂರಿನಲ್ಲಿ ರಾಜ್ಯಮಟ್ಟದ ಸಮಾವೇಶವೊಂದು ನಡೆಯಿತು. 10 ಸಾವಿರಕ್ಕಿಂತಲೂ ಅಧಿಕ ಮಂದಿ ಇದರಲ್ಲಿ ಭಾಗವಹಿಸಿದರು. ಹೆಚ್ಚಿನವರು ಮಹಿಳೆಯರು. ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಎಂಬ ಏಕ ವೇದಿಕೆಯ ಅಡಿ ಸುಮಾರು 32 ಸಂಘಟನೆಗಳು ಜೊತೆಗೂಡಿ ಏರ್ಪಡಿಸಿದ ಈ ಸಭೆಯಲ್ಲಿ ‘ನಶಾ ಮುಕ್ತ್ ಭಾರತ್’ ಸಂಘಟನೆಯ ಮುಖ್ಯಸ್ಥೆ ಮೇಧಾ ಪಾಟ್ಕರ್ ಭಾಗವಹಿಸಿ ದ್ದರು. ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧ ಜಾರಿಯಾಗಬೇಕು ಎಂದು ಸಭೆ ಒತ್ತಾಯಿಸಿತು. ಅಂದಹಾಗೆ ಕೃಷಿಗೆ ಹೆಸರುವಾಸಿಯಾದ ನಾಡೊಂದು ಕೃಷಿಗೆ ಸಂಬಂಧಿಸಿಯೇ ಇಲ್ಲದ ವಿಷಯದ ಮೇಲೆ ಬೃಹತ್ ಸಭೆಯೊಂದನ್ನು ಏರ್ಪಡಿಸುವುದು, ಚರ್ಚೆ ನಡೆಸುವುದು ಮತ್ತು ಭಾರೀ ಸಂಖ್ಯೆಯಲ್ಲಿ ಜನ ಸೇರುವುದೆಲ್ಲ ಅಕ್ಟೋಬರ್ 30 ರಂದು ಪ್ರಕಟವಾಗುವ ಪತ್ರಿಕೆಗಳಲ್ಲಿ ಮುಖ್ಯ ಸುದ್ದಿಯಾಗಬೇಕಿತ್ತು, `ಸಂಪಾದಕೀಯ ವಸ್ತು’ ಆಗಬೇಕಿತ್ತು ಎಂದು ಬಯಸುವುದು ತಪ್ಪಲ್ಲ. ಆದರೆ ಈ ನಿರೀಕ್ಷೆಗೆ ವಿರುದ್ಧವಾಗಿ ಪತ್ರಿಕೆಗಳು ವರ್ತಿಸಿದುವು. ನಿಜವಾಗಿ, ಈ ದೇಶದಲ್ಲಿ ಪ್ರತಿದಿನ ರಾಜಕೀಯ ರಹಿತ ಅಸಂಖ್ಯ ಜನಮುಖಿ ಕಾರ್ಯಕ್ರಮಗಳು ನಡೆಯುತ್ತವೆ. ಯೋಜನೆಗಳು ರೂಪು ಪಡೆಯುತ್ತವೆ. ಮನೆಯಿಲ್ಲದವರಿಗೆ ಮನೆ ಕಟ್ಟಿ ಕೊಡುವ, ಆಹಾರದ ವ್ಯವಸ್ಥೆ ಮಾಡುವ, ಮಾಸಾಶನ ನೀಡುವ, ಸ್ವಉದ್ಯೋಗಕ್ಕೆ ನೆರವು ನೀಡುವ, ಬಾವಿ ತೋಡುವ, ಚಿಕಿತ್ಸೆ ವೆಚ್ಚವನ್ನು ಭರಿಸುವ, ಸಾಮಾಜಿಕ ಪಿಡುಗುಗಳ ವಿರುದ್ಧ ಜನಜಾಗೃತಿ ಮೂಡಿಸುವ.. ಇತ್ಯಾದಿ ಘಟನೆಗಳು ನಡೆಯುತ್ತಲೇ ಇರುತ್ತವೆ. ರಾಜಕಾರಣಿಯೋರ್ವರ ಹಳಸಲು ಹೇಳಿಕೆಗಿಂತ ಎಷ್ಟೋ ಪಾಲು ಬೆಲೆಬಾಳುವ ಚಟುವಟಿಕೆಗಳು ಇವು. ಆದರೆ ಇಂಥ ಚಟುವಟಿಕೆಗಳು ಸಾಮಾನ್ಯವಾಗಿ ಪತ್ರಿಕೆಗಳ ಒಳಪುಟದ ತೀರಾ ಒಳಗೆ ಒಂದು ಕಾಲಂನಲ್ಲಿ ಸತ್ತು ಹೋಗುವುದೇ ಹೆಚ್ಚು. ಒಂದು ವೇಳೆ, ರಾಜಕಾರಣಿಗಳು ಇಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಪತ್ರಿಕೆಗಳ ಒಂದು ಕಾಲಂ ಅವಮಾನದಿಂದ ಇಂಥ ಸುದ್ದಿಗಳು ಪಾರುಗೊಂಡು ಎರಡು ಕಾಲಂ ಎಂಬಷ್ಟು ಮೇಲ್ದರ್ಜೆಗೇರುವುದಿದೆ. ಅದರಾಚೆಗೆ ಇಂಥ ಚಟುವಟಿಕೆಗಳಿಗೆ ಪತ್ರಿಕೆಗಳಲ್ಲಿ ಮಾನ್ಯತೆ ಲಭ್ಯವಾಗುವುದಿಲ್ಲ. ಇದನ್ನು ಬದಲಿಸುವುದು ಹೇಗೆ? ರಾಜಕೀಯ ಸುದ್ದಿಗಳೇಕೆ ಮಾಧ್ಯಮಗಳಿಗೆ ಇಷ್ಟ?
     ಸಾಮಾನ್ಯವಾಗಿ ಇವತ್ತು ಜನರ ಆದ್ಯತೆಯನ್ನು ನಿರ್ಧರಿಸುವುದೇ ಪತ್ರಿಕೆಗಳು. ಅವು ಯಾವುದನ್ನು ಚರ್ಚಾರ್ಹ ಎಂಬುದಾಗಿ ಬಿಂಬಿಸುತ್ತದೋ ಅದನ್ನೇ ಜನರು ಚರ್ಚಾರ್ಹವಾಗಿ ಸ್ವೀಕರಿಸುತ್ತಾರೆ. ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಿದರೂ ಇದು ವ್ಯಕ್ತವಾಗುತ್ತದೆ. ಅಲ್ಲಿ ಅತ್ಯಂತ ಹೆಚ್ಚು ಬರಹಗಳು ಕಾಣಿಸಿಕೊಳ್ಳುವುದೇ ರಾಜಕೀಯದ ಮೇಲೆ. ತನ್ನ ಮನೆಯ ಪಕ್ಕವೇ ಇರುವ `ಚರಂಡಿ’ ಅವ್ಯವಸ್ಥೆಯನ್ನು ಹೇಳಿಕೊಳ್ಳುವುದಕ್ಕಿಂತ ಮೋದಿಯನ್ನೋ ಸಿದ್ಧರಾಮಯ್ಯರನ್ನೋ ಗುರಿಯಾಗಿ ಬರೆಯುವುದರಲ್ಲಿ ವ್ಯಕ್ತಿ ಸುಖ ಪಡುತ್ತಾನೆ. ನೀರಿಲ್ಲದ ಊರಿಗೆ ಬಾವಿ ತೋಡಿಸಿಕೊಟ್ಟ ಸುದ್ದಿಗಿಂತ ಹೆಚ್ಚು ರಾಜಕಾರಣಿಯೋರ್ವರ ಹೇಳಿಕೆಯ ಮೇಲಿನ ಪ್ರತಿಕ್ರಿಯೆಗೆ ಲೈಕ್ ಮತ್ತು ಕಾಮೆಂಟ್‍ಗಳು ಲಭ್ಯವಾಗುತ್ತವೆ. ಅಷ್ಟಕ್ಕೂ, ಪತ್ರಿಕೆಯೊಂದು ರಾಯಚೂರಿನಲ್ಲಿ ನಡೆದ ಮದ್ಯನಿಷೇಧದಂತಹ ಕಾರ್ಯ ಕ್ರಮಕ್ಕೆ ಆದ್ಯತೆಯನ್ನು ಕೊಟ್ಟರೆ ಏನಾದೀತು? ರಾಜಕೀಯ ಸುದ್ದಿಗಳ ಬದಲು ಸಾಮಾಜಿಕ ಸುದ್ದಿಗಳಿಗೆ ಅವು ಮಹತ್ವ ಕೊಡುವುದರಿಂದ ಏನೆಲ್ಲ ಬದಲಾವಣೆಗಳಾಗಬಹುದು? ಇದರ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಮಗಳು ಏನೇನು? ರಾಜಕೀಯವು ಜನರ ನಾಡಿಮಿಡಿತವನ್ನು ನಿರ್ಧರಿಸುತ್ತದೆ ಎಂಬುದು ನಿಜ. ದೇಶದ ಭವಿಷ್ಯ ರಾಜಕೀಯ ನಿರ್ಧಾರವನ್ನು ಅವಲಂಬಿಸಿಕೊಂಡಿದೆ. ಪಾಕ್‍ನ ವಿರುದ್ಧ ಯುದ್ಧ ಬೇಕೋ ಬೇಡವೋ ಎಂಬುದನ್ನು ಜನಸಾಮಾನ್ಯ ನಿರ್ಧರಿಸಲಾರ. ಜನರ ಜೀವನ ಮಟ್ಟವನ್ನು ಹೆಚ್ಚಿಸುವ ಮತ್ತು ತಗ್ಗಿಸುವ ಎರಡೂ ಸಾಮರ್ಥ್ಯ ರಾಜಕೀಯಕ್ಕಿದೆ.  ಆದರೂ ಇವತ್ತು ಮಾಧ್ಯಮಗಳು ರಾಜಕೀಯ ಸುದ್ದಿಗಳಿಗೆ ಕೊಡುತ್ತಿರುವ ಆದ್ಯತೆಗಳು ಬರೇ ಇವನ್ನು ಮಾತ್ರ ಅವಲಂಬಿಸಿರುವುದೇ ಅಥವಾ ನಿರ್ಲಕ್ಷ್ಯ ಧೋರಣೆಯೇ?
       ಮಾಧ್ಯಮ ಕ್ಷೇತ್ರವೆಂಬುದು ಸ್ವತಂತ್ರ ವ್ಯವಸ್ಥೆ. ಇಲ್ಲಿ ರಾಜಕಾರಣಿ ವಿಮರ್ಶೆಗೊಳಗಾಗಬೇಕು. ಆಡಳಿತ ವ್ಯವಸ್ಥೆಯನ್ನು ಪರೀಕ್ಷೆಗೊಡ್ಡಬೇಕು. ಪಕ್ಪಮೋಹ, ಜಾತಿಮೋಹ, ಭಾಷೆ ಮೋಹಗಳಂ ಹೊರಗೆ ನಿಂತು ನೋಡುವ ಕಣ್ಣು ಇರಬೇಕು. ಜೊತೆಗೇ ರಾಜಕೀಯ ವ್ಯವಸ್ಥೆಯ ತಪ್ಪುಗಳನ್ನು ಎತ್ತಿ ಹೇಳುತ್ತಾ, ಜನರನ್ನು ಎಚ್ಚರಿಸುತ್ತಾ ಮತ್ತು ಅಗತ್ಯವೆಂದು ಕಂಡುಬಂದಾ ಗಲೆಲ್ಲ ಜನರನ್ನು ಪ್ರತಿಚಳವಳಿಗೆ ಸಜ್ಜುಗೊಳಿಸುತ್ತಾ ನಿರ್ಮಾಣಾತ್ಮಕ ಪಾತ್ರದಲ್ಲಿ ಗುರುತಿಸಿಕೊಳ್ಳಬೇಕು. ರಾಯಚೂರು ಸಮಾವೇಶವು ಪತ್ರಿಕೆಗಳ ಆದ್ಯತಾ ಪಟ್ಟಿಯಲ್ಲಿ ಕಾಣಿಸಿಕೊಳ್ಳಬೇಕಿತ್ತೆಂದು ಅನಿಸುವುದು ಈ ಕಾರಣಕ್ಕೆ. ಮದ್ಯ ಒಂದು ಸಾಮಾಜಿಕ ಪಿಡುಗು. ಬಡವರೇ ಹೆಚ್ಚಿರುವ ಈ ದೇಶದ ಪಾಲಿಗೆ ಮದ್ಯವು ನಿಧಾನ ರೋಗವಾಗಿ ಮಾರ್ಪಟಿರುವುದು ಎಲ್ಲರಿಗೂ ಗೊತ್ತು. ಅಲ್ಲದೇ ಇದರಿಂದ ತೊಂದರೆಗೊಳಪಡುತ್ತಿರುವವರಲ್ಲಿ ಅತ್ಯಂತ ಹೆಚ್ಚಿರುವುದು ಮಹಿಳೆಯರೇ. ಇವನ್ನೆಲ್ಲ ಸರಕಾರವೇ ಬಿಡುಗಡೆಗೊಳಿಸುವ ಅಂಕಿ ಅಂಶಗಳೇ ಕಾಲಕಾಲಕ್ಕೆ ದೃಢಪಡಿಸುತ್ತಲೂ ಇವೆ. ಇಷ್ಟಿದ್ದೂ, ಮದ್ಯವು ಯಾಕೆ ನಿಷೇಧಕ್ಕೆ ಒಳಪಡುತ್ತಿಲ್ಲ ಅನ್ನುವ ಪ್ರಶ್ನೆ ಅಸಹಜವೋ ಅಗಂಭೀರವೋ ಆಗಬೇಕಿಲ್ಲ. ಜನರ ನಾಡಿಮಿಡಿತಕ್ಕೆ ಸ್ಪಂದಿಸಬೇಕಾದ ರಾಜಕಾರಣಿಗಳು ಅದರಲ್ಲಿ ವಿಫಲವಾದಾಗ ಜನರು ಸಂಘಟಿತರಾಗುತ್ತಾರೆ. ಸಭೆ ಸೇರುತ್ತಾರೆ. ಇಂಥ ಸಮಯದಲ್ಲಿ ಪತ್ರಿಕೆಗಳು ತಮ್ಮ ಆದ್ಯತಾ ಪಟ್ಟಿಯಲ್ಲಿ ಬದಲಾವಣೆ ತರದೇ ಹೋದರೆ, ಅವು ರಾಜಕಾರಣದ ಮುಖವಾಣಿ ಎಂಬ ಬಿರುದಿಗೆ ಹೆಚ್ಚು ನಿಕಟವಾಗುತ್ತದೆ. ಒಂದು ರೀತಿಯಲ್ಲಿ, ಪ್ರತಿಭಟನೆ, ಸಾಮಾಜಿಕ ಚಟುವಟಿಕೆಗಳೆಂಬುದು ರಾಜಕೀಯ ವ್ಯವಸ್ಥೆಯ ವೈಫಲ್ಯದ ಸಂಕೇತ. ವ್ಯವಸ್ಥೆ ಸರಿ ಇದ್ದರೆ ಪ್ರತಿಭಟನೆಯ ಅಗತ್ಯವೇ ಇಲ್ಲ. ಆದ್ದರಿಂದ ರಾಜಕೀಯರಹಿತ ಸುದ್ದಿಗಳಿಗೆ ಆದ್ಯತೆಯನ್ನು ಕೊಟ್ಟು ಪತ್ರಿಕೆಗಳು ರಾಜಕೀಯ ವ್ಯವಸ್ಥೆಯನ್ನು ತರಾಟೆಗೆತ್ತಿಕೊಳ್ಳಲಿ ಎಂದು ಬಯಸುವುದು. ರಾಯಚೂರು ಸಮಾವೇಶ ಮುಖ್ಯವಾಗಬೇಕಾದದ್ದೂ ಈ ಹಿನ್ನೆಲೆಯಲ್ಲೇ. ಆದರೆ ಹಾಗಾಗಿಲ್ಲ ಅನ್ನುವುದು ವಿಷಾದಕರ.