Tuesday, 2 January 2024

ಹಿಂದೂ ಧರ್ಮಕ್ಕೆ ಸವಾಲಾಗಿರುವ ಕಲ್ಲಡ್ಕ ಪ್ರಭಾಕರ ಭಟ್




ಈ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚೆಂದರೆ 20 ಕೋಟಿಯಷ್ಟಿದೆ. ಆದರೆ ಹಿಂದೂಗಳ ಜನಸಂಖ್ಯೆ 100 ಕೋಟಿಗಿಂತಲೂ ಅಧಿಕವಿದೆ. ಕೇವಲ ಜನಸಂಖ್ಯೆಯೊಂದೇ  ಅಲ್ಲ, ಈ ದೇಶದ ಸಂಪನ್ಮೂಲವನ್ನು ಅತ್ಯಂತ ಕಡಿಮೆ ಪಡೆಯುತ್ತಿರುವ ಸಮುದಾಯವೂ  ಮುಸ್ಲಿಮರದ್ದೇ. ಸರಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪಾಲು ಅತ್ಯಂತ ಕಡಿಮೆ. ಬ್ಯಾಂಕ್‌ಗಳಿಂದ  ಭಾರೀ ಪ್ರಮಾಣದ ಸಾಲ ಪಡೆದು  ವಿದೇಶಕ್ಕೆ ಹಾರಿ ಹೋಗುವ ಉದ್ಯಮಿಗಳ ಪೈಕಿ ಮುಸ್ಲಿಮರಾರೂ ಇಲ್ಲ. ದೇಶದ ವಿವಿಧ ರಾಜ್ಯಗಳ ಶಾಸನಸಭೆಗಳಲ್ಲಿ ಮುಸ್ಲಿಮ್ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಸಂಸತ್‌ನಲ್ಲೂ ಇದೇ ಪರಿಸ್ಥಿತಿ. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ಜನಪ್ರತಿನಿಧಿ ಇಲ್ಲ. ಮುಸ್ಲಿಮ್ ಸಮುದಾಯದ ಹಿಂದುಳಿವಿಕೆಯನ್ನು ಪರಿಗಣಿಸಿ ನೀಡಲಾಗುತ್ತಿದ್ದ  ಒಂದೊಂದೇ  ಸೌಲಭ್ಯವನ್ನೂ ಸರಕಾರಗಳು ಕಿತ್ತುಕೊಳ್ಳುತ್ತಾ ಬರುತ್ತಿವೆ. ಕರ್ನಾಟಕದಲ್ಲಿ 2ಬಿ ಮೀಸಲಾತಿ ಕೆಟಗರಿಯಿಂದ ಮುಸ್ಲಿಮ್  ಸಮುದಾಯವನ್ನು ಹೊರಹಾಕಲಾಯಿತು. ಇದೇವೇಳೆ,

 ಉನ್ನತ ವ್ಯಾಸಂಗ ಮಾಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳೂ ಸೇರಿದಂತೆ  ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೌಲಾನಾ ಆಝಾದ್ ಫೆಲೋಶಿಪನ್ನು ಕೇಂದ್ರ ಸರಕಾರ ಸ್ಥಗಿತಗೊಳಿಸಿದೆ. ಬಾಬರಿ  ಮಸೀದಿ ಪ್ರಕರಣದಲ್ಲಿ ಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟು ಏಕಧ್ವನಿಯಲ್ಲಿ ಆದೇಶಿಸಿತ್ತು. ಆದರೆ,  ಮಂದಿರ ನಿರ್ಮಾಣ ಬಹುತೇಕ ಪೂರ್ತಿಯಾಗಿದೆ. ಆದರೆ ಮಸೀದಿ ನಿರ್ಮಾಣಕ್ಕೆ ಇನ್ನೂ ಶಂಕುಸ್ಥಾಪನೆಯೇ ಆಗಿಲ್ಲ. ಇದರ  ನಡುವೆಯೇ ಕಾಶಿಯ ಗ್ಯಾನ್‌ವಾಪಿ ಮಸೀದಿ ಮತ್ತು ಮಥುರಾದ ಈದ್‌ಗಾಹ್ ಮಸೀದಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ದೂರು ಸ ಲ್ಲಿಕೆಯಾಗಿದೆ ಮತ್ತು ಮಸೀದಿಗಳ ಸರ್ವೇಗೆ ನ್ಯಾಯಾಲಯ ಅನುಮತಿಯನ್ನೂ ನೀಡಿದೆ. ಇದೇವೇಳೆ, ದೇಶದೆಲ್ಲೆಡೆ ಅನೈತಿಕ ಪೊಲೀಸ್‌ಗಿರಿಯ ಹೆಸರಲ್ಲಿ, ದನಸಾಗಾಟದ ಹೆಸರಲ್ಲಿ ಮುಸ್ಲಿಮ್ ಸಮುದಾಯ ವಿವಿಧ ರೀತಿಯ ದಾಳಿಗಳಿಗೆ ತುತ್ತಾಗುತ್ತಿದೆ. ವ್ಯಾಪಾರ  ಬಹಿಷ್ಕಾರವನ್ನೂ ಎದುರಿಸುತ್ತಿದೆ. ಇದರ ಜೊತೆಗೆ ಕಾನೂನು ನಿರ್ಮಾಣದಲ್ಲೂ ಮುಸ್ಲಿಮ್ ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ.  ತ್ರಿವಳಿ ತಲಾಕನ್ನು ಸುಪ್ರೀಮ್ ಕೋರ್ಟು ಅಮಾನ್ಯ ಮಾಡಿದ್ದನ್ನೇ ನೆಪವಾಗಿಸಿಕೊಂಡ ಕೇಂದ್ರ ಸರಕಾರ ಕಾನೂನೊಂದನ್ನು ರೂಪಿಸಿತು.  ಅದರ ಪ್ರಕಾರ, ತ್ರಿವಳಿ ತಲಾಕ್ ಹೇಳುವುದನ್ನು ಕ್ರಿಮಿನಲ್ ಅಪರಾಧವೆಂದು ಸಾರಲಾಯಿತು ಮತ್ತು ಅಂಥ ವ್ಯಕ್ತಿಗೆ 3 ವರ್ಷಗಳ ಕಾಲ  ಜೈಲು ಶಿಕ್ಷೆಯನ್ನು ಘೋಷಿಸಲಾಯಿತು. ಒಂದುಕಡೆ, 

ಸುಪ್ರೀಮ್ ಕೋರ್ಟು ತ್ರಿವಳಿ ತಲಾಕನ್ನು ಅಮಾನ್ಯ ಮತ್ತು ಅಸಿಂಧು ಎಂದು  ಹೇಳಿರುವಾಗ ವ್ಯಕ್ತಿಯನ್ನು ಜೈಲಿಗೆ ಹಾಕುವುದರಿಂದ ಉಂಟಾಗುವ ಕೌಟುಂಬಿಕ ಸಮಸ್ಯೆಗಳು ಏನೇನು ಅನ್ನುವ ಪ್ರಶ್ನೆಗೆ ಈ ಕಾನೂನಿನಲ್ಲಿ ಉತ್ತರವೇ ಇಲ್ಲ. ತ್ರಿವಳಿ ತಲಾಕ್ ಹೇಳಿದ ವ್ಯಕ್ತಿಯನ್ನು ಜೈಲಿಗೆ ಹಾಕುವುದೆಂದರೆ, ಆ ತಲಾಕ್ ಸಿಂಧು ಎಂದು ಪರೋಕ್ಷವಾಗಿ  ಸಾರಿದಂತೆ. ತಲಾಕೇ ಅಲ್ಲದ ತಲಾಕ್ ಗಾಗಿ ವ್ಯಕ್ತಿಯನ್ನು ಜೈಲಿಗೆ ಹಾಕಿದರೆ, ಆ ಬಳಿಕವೂ ಆ ವಿವಾಹ ಊರ್ಜಿತದಲ್ಲಿರುವುದೇ, ಜೈಲಿನಿಂದ ಹೊರಬಂದ ವ್ಯಕ್ತಿ ಆ ದಾಂಪತ್ಯ ಸಂಬಂಧವನ್ನು ಉಳಿಸಿಕೊಳ್ಳಬಹುದೇ, ಆತ ಜೈಲಲ್ಲಿರುವ ವರೆಗೆ ಆತನ ಪತ್ನಿ ಮತ್ತು ಮಕ್ಕಳನ್ನು  ನೋಡಿಕೊಳ್ಳುವವರು ಯಾರು, ವರಮಾನ ಏನು... ಇತ್ಯಾದಿ ಪ್ರಶ್ನೆಗಳಿಗೂ ಕಾನೂನು ರೂಪಿಸಿದವರು ಉತ್ತರವನ್ನು ಹೇಳಲಿಲ್ಲ. ಆತ  ಜೈಲಲ್ಲಿರುವಾಗ ಆಕೆ ಇನ್ನೊಂದು ಮದುವೆ ಆಗುವಂತೆಯೂ ಇಲ್ಲ. ಯಾಕೆಂದರೆ, ಸುಪ್ರೀಮ್ ಕೋರ್ಟು ಪ್ರಕಾರ ತ್ರಿವಳಿ ತಲಾಕ್,  ವಿಚ್ಛೇದನ ಆಗುವುದಿಲ್ಲ. ಗಂಡನಿಂದ  ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಯಾಗುವುದಕ್ಕೆ ಅವಕಾಶವೂ ಇಲ್ಲ. ಅತ್ತ ವಿಚ್ಛೇದನಕ್ಕೂ  ಒಳಗಾಗದ ಮತ್ತು ಇತ್ತ ಗಂಡನೂ ಇಲ್ಲದ ಅತಂತ್ರ ಸ್ಥಿತಿಯೊಂದರಲ್ಲಿ ಮುಸ್ಲಿಮ್ ಮಹಿಳೆಯರನ್ನು ನಿಲ್ಲಿಸುವ ಕಾನೂನೊಂದನ್ನು ಕೇಂದ್ರ  ಸರಕಾರ ರೂಪಿಸಿ ಕೈತೊಳೆದುಕೊಂಡಿದೆ. ಮಾತ್ರವಲ್ಲ, ಇದನ್ನೇ ಮುಸ್ಲಿಮ್ ಸಮುದಾಯದ ಮಹಿಳೆಯರಿಗೆ ಮಾಡಲಾದ ಮಹದುಪಕಾರ  ಎಂದೇ ಬಿಂಬಿಸಿಕೊಳ್ಳುತ್ತಿದೆ. ಅದೇವೇಳೆ,

ಹಿಂದೂ ವ್ಯಕ್ತಿಯೋರ್ವ ಹೀಗೆಯೇ ತನ್ನ ಪತ್ನಿಯನ್ನು ತ್ಯಜಿಸಿ ಹೋಗುವುದನ್ನು ಕೇಂದ್ರ ಸರಕಾರ ಸಿವಿಲ್ ಪ್ರಕರಣವಾಗಿ ಸದ್ದಿಲ್ಲದೇ ಉಳಿಸಿಕೊಂಡಿದೆ.  ಎಲ್ಲರಿಗೂ ಸಮಾನ ಕಾನೂನು ಇರಬೇಕು ಎಂದು ಒತ್ತಿ ಹೇಳುತ್ತಾ ಸಮಾನ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುವ ಇದೇ  ಸರಕಾರ ಒಂದೇ ಬಗೆಯ ಅಪರಾಧವನ್ನು ಎರಡು ರೀತಿಯಾಗಿ ವಿಂಗಡಿದ್ದೇಕೆ ಎಂಬ ಪ್ರಶ್ನೆಗೂ ಉತ್ತರವಿಲ್ಲ. ಪತ್ನಿಯನ್ನು ತ್ಯಜಿಸಿದ  ಮುಸ್ಲಿಮ್ ವ್ಯಕ್ತಿ ಕ್ರಿಮಿನಲ್ ಆಗಿ ಜೈಲಲ್ಲಿರುವಾಗ ಅದೇ ತಪ್ಪೆಸಗಿದ ಹಿಂದೂ ವ್ಯಕ್ತಿ ಈ ಯಾವ ಭಯವೂ ಇಲ್ಲದೇ ಮತ್ತು ಕ್ರಿಮಿನಲ್ಲೂ  ಆಗದೇ ಆರಾಮವಾಗಿರುತ್ತಾನೆ. ಈ ನಡುವೆ ಬಹುಪತ್ನಿತ್ವವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸಲು ಅಸ್ಸಾಂ ಸರಕಾರ  ಹೊರಟಿರುವಾಗ ಉತ್ತರ ಪ್ರದೇಶದಲ್ಲಿ ಮದ್ರಸಾಗಳು ಸರಕಾರದ ಕೆಂಗಣ್ಣಿಗೆ ಗುರಿಯಾಗಿವೆ. ಲವ್ ಜಿಹಾದ್‌ನ ಹೆಸರಲ್ಲಿ ಕಾನೂನುಗಳನ್ನು  ಜಾರಿ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ  ಕಲ್ಲಡ್ಕ ಪ್ರಭಾಕರ ಭಟ್  ಮುಸ್ಲಿಮ್ ಸಮುದಾಯದ ಮಹಿಳೆಯರ ಬಗ್ಗೆ ಅತ್ಯಂತ  ತುಚ್ಛವಾದ ಮತ್ತು ಅವಮಾನಕರವಾದ ಹೇಳಿಕೆಯನ್ನು ಸಾರ್ವಜನಿಕರ ಮುಂದೆ ನೀಡಿದ್ದಾರೆ. ಅವರೋರ್ವ ವ್ಯಕ್ತಿ ಮಾತ್ರವಾಗಿದ್ದರೆ ಈ  ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿರಲಿಲ್ಲ. ಆದರೆ, 

ಅವರು ರಾಜಕೀಯವಾಗಿ, ಧಾರ್ಮಿಕವಾಗಿ ಮತ್ತು ಸಾರ್ವಜನಿಕವಾಗಿ  ಪ್ರಭಾವಶಾಲಿ. ಗಣೇಶೋತ್ಸವ, ಶಾರದೋತ್ಸವ, ಹಿಂದೂ ಸಮಾಜೋತ್ಸವ, ಜೀರ್ಣೋದ್ಧಾರ, ಅಷ್ಟಮಂಗಲ... ಇತ್ಯಾದಿ ಎಲ್ಲ  ಕಾರ್ಯಕ್ರಮಗಳಲ್ಲೂ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸುತ್ತಾರೆ. ಇಂಥ ವ್ಯಕ್ತಿ ಸಾರ್ವಜನಿಕರ ಮುಂದೆ ಮುಸ್ಲಿಮ್ ಮಹಿಳೆಯರ  ವಿರುದ್ಧ ಅವಮಾನ ಕಾರಿಯಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಪ್ರಬಲ  ಆಗ್ರಹವಾದರೆ, ಇನ್ನೊಂದು- ಜನಸಂಖ್ಯೆ, ಶ್ರೀಮಂತಿಕೆ, ಸರಕಾರದಲ್ಲಿ ಪಾಲುದಾರಿಕೆಯೂ ಸೇರಿದಂತೆ ಯಾವ ವಿಷಯದಲ್ಲೂ ಹಿಂದೂ  ಸಮುದಾಯಕ್ಕೆ ಬದಲಿಯಾಗದ, ಪ್ರತಿಯಾಗದ ಮತ್ತು ಸಾಟಿಯಾಗದ ಮುಸ್ಲಿಮ್ ಸಮುದಾಯವನ್ನು ಇವರೆಲ್ಲ ಪದೇ ಪದೇ  ಕಟಕಟೆಯಲ್ಲಿ ಯಾಕೆ ನಿಲ್ಲಿಸುತ್ತಿದ್ದಾರೆ ಅನ್ನುವ ಪ್ರಶ್ನೆಯೂ ಇದೆ.  ಹೀಗೆ ಬೈಯೋದರ ಹಿಂದೆ ಓಟಿನ ಉದ್ದೇಶ ಇದೆಯೇ? ಮುಸ್ಲಿಮರನ್ನು  ತೆಗಳುವುದರಿಂದ ಹಿಂದೂಗಳೇಕೆ ತೆಗಳಿದವರಿಗೆ ಓಟು ಕೊಡುತ್ತಾರೆ? ಮುಸ್ಲಿಮರನ್ನು ತೆಗಳುವುದರಿಂದ ಮತ್ತು ಸತಾಯಿಸುವುದರಿಂದ  ಹಿಂದೂ ಧರ್ಮಕ್ಕೆ ಆಗುವ ಲಾಭವೇನು? ಹಿಂದೂ ಧರ್ಮದ ಅಭಿವೃದ್ಧಿಯು ಮುಸ್ಲಿಮರನ್ನು ಆಧರಿಸಿಕೊಂಡಿದೆಯೇ? 20  ಕೋಟಿಯಷ್ಟಿರುವ ಮುಸ್ಲಿಮರು 100 ಕೋಟಿಗಿಂತಲೂ ಅಧಿಕ ಇರುವ ಹಿಂದೂಗಳಿಗೆ ತೊಡಕೇ? ಅಪಾಯಕಾರಿಯೇ?  ರಾಜಕೀಯವಾಗಿ, ಆರ್ಥಿಕವಾಗಿ, ಕಾನೂನಾತ್ಮಕವಾಗಿ ಮತ್ತು ಸಾಮಾಜಿಕವಾಗಿ- ಹೀಗೆ ಯಾವ ಕ್ಷೇತ್ರದಲ್ಲೂ ಬಲಿಷ್ಠವಾಗಿಲ್ಲದ  ಸಮುದಾಯವೊಂದನ್ನು ಈ ಎಲ್ಲ ಕ್ಷೇತ್ರಗಳಲ್ಲೂ ಬಲಶಾಲಿಯಷ್ಟೇ ಅಲ್ಲ, ಸಂಪೂರ್ಣ ಪ್ರಾಬಲ್ಯವನ್ನು ಸ್ಥಾಪಿಸುವ ಸಮುದಾಯಕ್ಕೆ ಪ್ರತಿಸ್ಪರ್ಧಿ ಎಂದು ಬಿಂಬಿಸುವುದನ್ನು ಹಿಂದೂಗಳು ಯಾಕೆ ನಂಬುತ್ತಿದ್ದಾರೆ? 

ಈ ದೇಶದಲ್ಲಿ 99.99% ರಾಜಕೀಯ ಪಕ್ಷಗಳು ಕೂಡಾ  ಹಿಂದೂಗಳದ್ದೇ  ಮತ್ತು ಮುಂಚೂಣಿ ನಾಯಕರೂ ಹಿಂದೂಗಳೇ. ಈ ದೇಶದ ಪ್ರಮುಖ ಉದ್ಯಮಿಗಳೂ ಹಿಂದೂಗಳೇ.  ವಿಶ್ವವಿದ್ಯಾಲಯಗಳ ಕುಲಪತಿಗಳು, ಪ್ರೊಫೆಸರ್‌ಗಳು, ಉಪನ್ಯಾಸಕರ ಪಟ್ಟಿಯನ್ನು ಪರಿಶೀಲಿಸಿದರೂ ಅಲ್ಲೆಲ್ಲಾ  ಮುಸ್ಲಿಮ್ ಹೆಸರು ಅಪರೂಪದಲ್ಲಿ ಅಪರೂಪ. ರಾಷ್ಟ್ರಪತಿಗಳು, ರಾಜ್ಯಪಾಲರುಗಳು, ಪ್ರಧಾನಿ, ನ್ಯಾಯಾಧೀಶರುಗಳು, ವೈದ್ಯರುಗಳು, ಸಾಹಿತಿಗಳು... ಹೀಗೆ  ಎಲ್ಲೆಲ್ಲೂ ಮುಸ್ಲಿಮ್ ಪ್ರಾತಿನಿಧ್ಯ ಅತ್ಯಂತ ಕಡಿಮೆ. ಇಷ್ಟೆಲ್ಲಾ ಇದ್ದೂ ಮತ್ತೂ ಮುಸ್ಲಿಮರನ್ನೇ ಕಟಕಟೆಯಲ್ಲಿ ನಿಲ್ಲಿಸುವುದು ಮತ್ತು ಅದನ್ನೇ  ಹಿಂದೂಗಳು ನಂಬುವುದೆಲ್ಲ ಏಕೆ? ಮುಸ್ಲಿಮರನ್ನು ಅಪಾಯಕಾರಿಗಳಂತೆ ಬಿಂಬಿಸುವವರ ಸುಳ್ಳನ್ನು ಪ್ರಶ್ನಿಸದೇ ಸುಳ್ಳಿಗೇ ಶರಣಾಗುವ  ಪರಿಸ್ಥಿತಿ ಈ ದೇಶದಲ್ಲಿ ಯಾಕಿದೆ?

ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದಲ್ಲಿರುವ ಎಲ್ಲರ ಕೊಡುಗೆಯೂ ಅತೀ ಅಗತ್ಯ. ಮುಸ್ಲಿಮ್ ಸಮುದಾಯವನ್ನು  ಸದಾ ಬೇಲಿಯ ಮೇಲಿಡುತ್ತಾ ಮತ್ತು ಅವರ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಾ ದೇಶದ ಅಭಿವೃದ್ಧಿಯ ಕನಸು ಕಾಣುವುದು ಅತಾರ್ಕಿಕ  ಮತ್ತು ಅಸಂಬದ್ಧ. ಮುಸ್ಲಿಮರನ್ನು ಭೂತದಂತೆ ಚಿತ್ರಿಸುವವರನ್ನು ಹಿಂದೂಗಳು ತಿದ್ದದ ಹೊರತು ಅವರು ವರ್ತನೆ ಬದಲಿಸಲಾರರು.  ಪ್ರಭಾಕರ ಭಟ್ ಆಗಲಿ, ಇನ್ನಾರದ್ದೇ  ಆಗಲಿ ಮುಸ್ಲಿಮ್ ದ್ವೇಷ ಕೊನೆಗೊಳ್ಳಬೇಕಾದರೆ ಹಿಂದೂ ಸಮುದಾಯ ಚುರುಕಾಗಬೇಕು.  ಹಿಂದೂ ಧರ್ಮದ ಅಳಿವು-ಉಳಿವು ಮುಸ್ಲಿಮರನ್ನು ಅವಲಂಬಿಸಿಕೊಂಡಿಲ್ಲ ಎಂಬುದನ್ನು ಗಟ್ಟಿ ಧ್ವನಿಯಲ್ಲಿ ಸಾರಬೇಕು. ಇಂಥವರಿಗೆ  ಧಾರ್ಮಿಕ ಕಾರ್ಯಕ್ರಮಗಳಿಂದ ಬಹಿಷ್ಕಾರ ಹೇರುವ ಮೂಲಕ ಪಾಠ ಕಲಿಸಬೇಕು.

Monday, 25 December 2023

ಹೆಣ್ಣು ಭ್ರೂಣ ಹತ್ಯೆ: ಈ ಮನಸ್ಥಿತಿಯನ್ನು ಬರೇ ಕಾನೂನಿನಿಂದ ಬದಲಿಸಬಹುದೇ?



ಇತ್ತೀಚೆಗೆ ರಾಜ್ಯದ ಮಂಡ್ಯದಲ್ಲಿ ಭಿನ್ನ ಪಾದಯಾತ್ರೆ ನಡೆಯಿತು. ಮದುವೆಗೆ ಹೆಣ್ಣು ಕರುಣಿಸು ಎಂದು ಕೋರಿ ಮಾಯಕಾರ ಮಾದೇವನಿಗೆ ಹರಕೆ ಒಪ್ಪಿಸಲು ನಡೆಸಿದ ಪಾದಯಾತ್ರೆ ಇದು. ಇವರು ಹೀಗೆ ಪಾದಯಾತ್ರೆ ನಡೆಸುತ್ತಿರುವಾಗ ಇದೇ ಮಂಡ್ಯದ ಲ್ಯಾಬ್‌ಗಳ ಮೇಲೆ  ಪೊಲೀಸರು ಕಣ್ಣಿಟ್ಟಿದ್ದರು. ಭಾರೀ ಸಂಖ್ಯೆಯಲ್ಲಿ ಇಲ್ಲಿ ಹೆಣ್ಣುಭ್ರೂಣ ಹತ್ಯೆಯಾಗುತ್ತಿದೆ ಎಂಬ ಸುಳಿವು ಅವರಿಗೆ ಲಭಿಸಿತ್ತು. ಆ ಬಳಿಕ  ಹಲವರನ್ನು ಬಂಧಿಸಿದರು. ಕೇವಲ ಮೂರೇ ಮೂರು ವರ್ಷಗಳಲ್ಲಿ ಈ ಮಂಡ್ಯ-ಮೈಸೂರು ಭಾಗದಲ್ಲಿ 900ರಷ್ಟು ಹೆಣ್ಣು ಭ್ರೂಣ  ಹತ್ಯೆಯಲ್ಲಿ ಈ ಬಂಧಿತರು ಭಾಗಿಯಾಗಿದ್ದಾರೆ ಅನ್ನುವುದು ಬೆಳಕಿಗೆ ಬಂತು. ಒಂದುಕಡೆ,

ಮದುವೆಗೆ ಹೆಣ್ಣಿಲ್ಲ ಎಂಬ ಸ್ಥಿತಿಯಾದರೆ ಇನ್ನೊಂದು ಕಡೆ ಇರುವ ಹೆಣ್ಣನ್ನೇ ಸಾಯಿಸುವ ಸ್ಥಿತಿ- ಇವೆರಡೂ ಒಂದೇ ಕಡೆ ನಡೆ ದಿರುವುದು ನಿಜಕ್ಕೂ ಅಚ್ಚರಿ. ಉತ್ತರ ಕನ್ನಡ, ಮಂಡ್ಯ-ಮೈಸೂರು, ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಹರೆಯದ ಹೆಣ್ಣು  ಮಕ್ಕಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಎಂಬ ವರದಿ ಇದೆ. ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿ ಬೆಳಗಾವಿ ಮೊದಲ ಸ್ಥಾನದಲ್ಲಿದ್ದರೆ, ಮಂಡ್ಯ ಎರಡು ಮತ್ತು ಬಾಗಲಕೋಟೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಮಂಡ್ಯ, ಚಿಕ್ಕಬಳ್ಳಾಪುರ, ಬಾಗಲಕೋಟೆ,  ಕಲಬುರಗಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಸಾವಿರ ಗಂಡು ಮಕ್ಕಳಿಗೆ 900ಕ್ಕಿಂತಲೂ ಕಡಿಮೆ ಹೆಣ್ಣು ಮಕ್ಕಳಿದ್ದು, ಸರ್ಕಾರದ ಕೆಂಪು  ಪಟ್ಟಿಯಲ್ಲಿದೆ. ಇದು ಸರಕಾರದ ನಾಗರಿಕ ನೋಂದಣಿ ವ್ಯವಸ್ಥೆಯನ್ನು ಆಧರಿಸಿದ ದತ್ತಾಂಶಗಳಂತೆ  ತಯಾರಿಸಲಾದ ಮಾಹಿತಿ.  ತಿಂಗಳುಗಳ ಹಿಂದೆ ಆದಿಚುಂಚನಗಿರಿ ಮಠದಲ್ಲಿ ವಧು-ವರ ಸಂಬಂಧ ಏರ್ಪಡಿಸುವುದಕ್ಕಾಗಿ ಸಮ್ಮೇಳನ ಏರ್ಪಡಿಸಲಾಗಿತ್ತು. ಇದರಲ್ಲಿ  10 ಸಾವಿರದಷ್ಟು ಯುವಕರಿಗೆ ಪ್ರತಿಯಾಗಿ ಕೇವಲ 300ರಷ್ಟು ಯುವತಿಯರು ಮಾತ್ರ ಪಾಲ್ಗೊಂಡಿದ್ದರು.

ಯಾಕೆ ಹೀಗಾಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಕೊಟ್ಟ ಹೆಣ್ಣು ಕುಲದಿಂದ ಹೊರಗೆ ಅನ್ನುವ ಮಾತು ಈ ದೇಶದಲ್ಲಿ ಚಾಲ್ತಿಯಲ್ಲಿದೆ. ಹೆಣ್ಣಿನ ಪಾಲಿಗೆ ನಮ್ಮೆಲ್ಲ ಸಾಂಪ್ರದಾಯಿಕ ಆಚರಣೆಗಳು ಮತ್ತು ದೃಷ್ಟಿಕೋನಗಳು ಅಭದ್ರತೆಯನ್ನು ಸೂಚಿಸುತ್ತವೆಯೇ ಹೊರತು  ಆಕೆಯ ಬಗ್ಗೆ ಹೆಮ್ಮೆ, ಅಭಿಮಾನ ಮತ್ತು ಸಂತಸ ಪಡುವ ರೀತಿಯಲ್ಲಿ ಇಲ್ಲವೇ ಇಲ್ಲ. ವಂಶವನ್ನು ಮುಂದುವರಿಸಲು ಗಂಡು ಬೇಕು  ಎಂಬಲ್ಲಿಂದ ಹಿಡಿದು ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಕೊಡಬೇಕಾಗುತ್ತದೆ ಎಂಬಲ್ಲಿವರೆಗೆ ಹೆಣ್ಣು ವಂಶಕ್ಕೆ ಅನನುಕೂಲಕರವಾದ  ಪಟ್ಟಿಯನ್ನೇ ಸಮಾಜ ತಯಾರಿಸಿಟ್ಟುಕೊಂಡಿದೆ. ಹೆಣ್ಣನ್ನು ಎಷ್ಟೇ ಓದಿಸಿದರೂ ಅಂತಿಮವಾಗಿ ಆಕೆ ಪರರ ಪಾಲಾಗುತ್ತಾಳೆ ಎಂಬ ನಂಬಿಕೆ,  ಕೃಷಿ ಚಟುವಟಿಕೆಯಲ್ಲಿ ಹೆಣ್ಣಿಗಿಲ್ಲದ ಪ್ರಾಧಾನ್ಯತೆ, ಹೆಣ್ಣನ್ನು ಸದಾ ಕಾಡುವ ಸುರಕ್ಷಿತತೆಯ ಭೀತಿ ಮತ್ತು ಕೆಲವೊಮ್ಮೆ ಆಸ್ತಿಯಲ್ಲಿ ಹೆಣ್ಣು  ಮಕ್ಕಳಿಗೆ ಪಾಲು ಕೊಡಬೇಕಾಗುತ್ತದೆಂಬ ಭಯ.. ಇತ್ಯಾದಿಗಳೂ ಪಾಲಕರ ಹೆಣ್ಣು ದ್ವೇಷಕ್ಕೆ ಕಾರಣವಾಗುತ್ತದೆ. ಅಂದಹಾಗೆ,

ಕಾನೂನಿನ ಮೂಲಕ ಈ ಮಾನಸಿಕತೆಯನ್ನು ಪೂರ್ಣ ಮಟ್ಟದಲ್ಲಿ ಬದಲಿಸಬಹುದು ಎಂದು ಹೇಳುವ ಹಾಗಿಲ್ಲ. ಯಾಕೆಂದರೆ, ಹೆಣ್ಣು  ಭ್ರೂಣ ಪತ್ತೆ ಮತ್ತು ಹತ್ಯೆಯನ್ನು ಸುಸಜ್ಜಿತ ಆಸ್ಪತ್ರೆಗಳಲ್ಲೇ  ನಡೆಸಬೇಕೆಂದಿಲ್ಲ. ಇದನ್ನು ತೀರಾ ಅಸುರಕ್ಷಿತವಾಗಿ ಮತ್ತು ನಗರದಿಂದ  ದೂರದ ಪ್ರದೇಶಗಳಲ್ಲೂ ಮಾಡಲಾಗುತ್ತದೆ. ಸ್ಥಾಪಿತ ಸ್ಕ್ಯಾನಿಂಗ್ ಕೇಂದ್ರಗಳ ಬದಲು ಮೊಬೈಲ್ ಪ್ರಯೋಗಾಲಯದಲ್ಲೂ ಇಂಥ ಪತ್ತೆ  ಮತ್ತು ಹತ್ಯೆ ನಡೆಯುತ್ತಿರುವುದರಿಂದ ಅಧಿಕಾರಿಗಳಿಗೆ ಇದರ ಸುಳಿವು ಸಿಗುವುದು ಸುಲಭವಲ್ಲ. ಇತ್ತೀಚೆಗೆ ಮಂಡ್ಯದಲ್ಲಿ ಪತ್ತೆ ಹಚ್ಚಲಾದ  ‘ಭ್ರೂಣಹತ್ಯೆ’ ಜಾಲವು ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿತ್ತು. ಮಂಡ್ಯದ ಅಲೆಮನೆ ಸಮೀಪದ ಕೊಠಡಿಯಲ್ಲಿ ಯಾರಿಗೂ ಅನುಮಾನ ಬಾರದಂತೆಯೇ ಈ ಕೃತ್ಯ ನಡೆಯುತ್ತಿತ್ತು. ಸ್ಥಳೀಯರಿಗೆ ಈ ಬಗ್ಗೆ ಗೊತ್ತಾಗುವುದು ಸುಲಭವೂ ಅಲ್ಲ. ಇಲ್ಲಿ ಇನ್ನೊಂದು  ಸಂಗತಿಯೂ ಇದೆ, ಈ ಭ್ರೂಣ ಹತ್ಯೆಯ ವೈದ್ಯರ ಒತ್ತಾಸೆಯಿಂದ ನಡೆಯುತ್ತಿದೆ ಎನ್ನುವಂತೆಯೂ ಇಲ್ಲ. ದಂಪತಿಗಳ ಸಮ್ಮತಿಯಿಂದ  ಮತ್ತು ಒತ್ತಾಯದಿಂದಲೇ ಇಂಥವು ನಡೆಯುತ್ತಿರುವುದರಿಂದ ಇವು ಬಹಿರಂಗಕ್ಕೆ ಬರುವುದಕ್ಕೂ ಕಷ್ಟವಿದೆ. ಭ್ರೂಣಹತ್ಯೆಗಾಗಿ ನಿಗದಿ ಪಡಿಸಲಾದ ಶುಲ್ಕದಲ್ಲಿ ಏನಾದರೂ ಏರುಪೇರಾಗಿ ಜಗಳವಾದರೆ ಮಾತ್ರ ಇಂಥವು ಸಾರ್ವಜನಿಕ ಗಮನಕ್ಕೆ ಬರುತ್ತದೆ. ಆದ್ದರಿಂದಲೇ, ಈ  ಹೆಣ್ಣು ಭ್ರೂಣಹತ್ಯೆಯನ್ನು ಕಾನೂನು ತಕ್ಕಡಿಯಲ್ಲಷ್ಟೇ ಇಟ್ಟು ನೋಡದೇ ಸಾಮಾಜಿಕ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಪರಿಶೀ ಲಿಸಬೇಕಾಗಿದೆ.

ಈ ಇಡೀ ಪ್ರಕ್ರಿಯೆಯಲ್ಲಿ ದಂಪತಿಗಳ ಪಾತ್ರ ಬಹು ಅಮೂಲ್ಯವಾದುದು. ಅವರ ಒಪ್ಪಿಗೆಯಿಲ್ಲದೇ ಭ್ರೂಣಹತ್ಯೆ ಸಾಧ್ಯವೇ ಇಲ್ಲ. ಸಾಮಾನ್ಯವಾಗಿ ಬಡ ಮತ್ತು ಅರೆ ಮಧ್ಯಮ ಕುಟುಂಬಗಳಲ್ಲಿ ಇಂಥ ಭ್ರೂಣಹತ್ಯೆ ಹೆಚ್ಚು. ಮೊದಲ ಮಗು ಹೆಣ್ಣಾದರೆ, ಎರಡನೇ ಮಗು  ಗಂಡಾಗಬೇಕೆಂದು  ಬಯಸುವುದು ಮತ್ತು ಅದು ಕೈಗೂಡುವುದಿಲ್ಲ ಎಂದು ಭ್ರೂಣ ಪತ್ತೆಯಲ್ಲಿ ಸ್ಪಷ್ಟವಾದರೆ ಹತ್ಯೆಗೆ ಮುಂದಾಗುವುದು  ನಡೆಯುತ್ತಿದೆ. ಇದು ಮನಸ್ಥಿತಿಯೊಂದರ ಫಲಿತಾಂಶ. ಹೆಣ್ಣು ಅಶಕ್ತೆ ಮತ್ತು ಕುಟುಂಬಕ್ಕೆ ಭಾರ ಅನ್ನುವ ಭಾವನೆಯೇ ಈ ಹತ್ಯೆಗೆ  ಕಾರಣ. ಬರೇ ಕಾನೂನು ಈ ಮನಸ್ಥಿತಿಯನ್ನು ಬದಲಿಸದು. ಪರಂಪರಾಗತವಾಗಿ ಮನಸ್ಸಲ್ಲಿ ಉಳಿದು ಬಿಟ್ಟಿರುವ ಈ ಮನಸ್ಥಿತಿಯನ್ನು ಬದಲಿಸುವುದಕ್ಕೂ ಸರಕಾರ ಅಭಿಯಾನ ರೂಪದ ಗಂಭೀರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮನೆ ಮನೆ ಭೇಟಿಯಷ್ಟೇ  ಅಲ್ಲ, ಕೂಲಿಕಾರರಾಗಿ ಒಂದೂರಿನಿಂದ  ಮತ್ತೊಂದೂರಿಗೆ ವಲಸೆ ಹೋಗಿರುವ ದಂಪತಿಗಳನ್ನು ಭೇಟಿ ಮಾಡಿ ಅವರಲ್ಲಿ ಅರಿವು  ಮೂಡಿಸುವ ಪ್ರಯತ್ನಗಳಾಗಬೇಕು. ಉಚಿತ ಶಿಕ್ಷಣವೂ ಸೇರಿದಂತೆ ಹೆಣ್ಣು ಮಕ್ಕಳಿಗಾಗಿ ಸರಕಾರ ಜಾರಿ ಮಾಡಿರುವ ವಿವಿಧ ಯೋಜನೆಗಳ ಕುರಿತಂತೆ ಮಾಹಿತಿ ನೀಡಬೇಕು. ಇದರ ಜೊತೆಗೇ ಮಾನವ ಜೀವ ಎಷ್ಟು ಅಮೂಲ್ಯ ಎಂಬುದನ್ನು ಅವರು ಗಂಭೀರವಾಗಿ  ಅವಲೋಕಿಸುವಂತೆ ಮಾಡಬೇಕು. ಇದಕ್ಕಾಗಿ ವಿವಿಧ ಸರಕಾರೇತರ ಸಂಸ್ಥೆಗಳ ನೆರವನ್ನು ಪಡೆದುಕೊಳ್ಳಬೇಕು. ಒಂದುರೀತಿಯಲ್ಲಿ
,
ಭ್ರೂಣಹತ್ಯೆ ಎಂಬುದು 21ನೇ ಶತಮಾನದ ಪಿಡುಗಲ್ಲ. ಇದಕ್ಕೆ ಪುರಾತನ ಇತಿಹಾಸವಿದೆ. ಪ್ರವಾದಿ ಮುಹಮ್ಮದ್(ಸ)ರ ಕಾಲದಲ್ಲೂ ಈ  ಪಿಡುಗು ವ್ಯಾಪಕವಾಗಿತ್ತು. ಕೆಲವೊಂದು ಬುಡಕಟ್ಟುಗಳು ಹೆಣ್ಣು ಮಗುವನ್ನು ಅಪಾರವಾಗಿ ದ್ವೇಷಿಸುತ್ತಿದ್ದುವು. ಇವತ್ತಿನಂತೆ ಭ್ರೂಣಪತ್ತೆ  ಪರೀಕ್ಷೆ ಇಲ್ಲದ ಆ ಕಾಲದಲ್ಲಿ ಹುಟ್ಟಿದ ಕೂಡಲೇ ಹೆಣ್ಣು ಮಗುವನ್ನು ಹೂಳುವ ಪದ್ಧತಿ ಇತ್ತು. ಪ್ರವಾದಿ ಮುಹಮ್ಮದ್(ಸ)ರು ಈ  ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ಜನರ ಮನಸ್ಸಲ್ಲಿ ಅಪರಾಧಿ ಭಾವವನ್ನು ಹುಟ್ಟು ಹಾಕಿದರು. ಪ್ರತಿಯೊಬ್ಬರನ್ನೂ ಮರಣಾನಂತರ ದೇವನು ಎಬ್ಬಿಸುತ್ತಾನೆ ಮತ್ತು ಹತ್ಯೆಗೀಡಾದ ಹೆಣ್ಣು ಮಗುವಿನ ಮುಂದೆ ಆಕೆಯ ಹೆತ್ತವರನ್ನು ನಿಲ್ಲಿಸಿ ವಿಚಾರಣೆಗೊಳಪಡಿಸಿ  ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಎಚ್ಚರಿಸಿದರು. ಯಾವ ಹೆತ್ತವರು ಹೆಣ್ಣು ಮಗುವನ್ನು ಚೆನ್ನಾಗಿ ಲಾಲಿಸಿ ಪಾಲಿಸಿ ಬೆಳೆಸುತ್ತಾರೋ  ಅವರಿಗೆ ಸ್ವರ್ಗವಿದೆ ಎಂದು ಘೋಷಿಸಿದರು. ಮದುವೆಯ ವೇಳೆ ಹೆಣ್ಣಿಗೆ ವಧು ಧನ ಪಾವತಿಸಿ ಮದುವೆಯಾಗಬೇಕೆಂದು ಯುವಕರಿಗೆ  ಆದೇಶಿಸಿದರು. ಆ ಮೂಲಕ ವರದಕ್ಷಿಣೆ ಎಂಬ ಪರಿಕಲ್ಪನೆಗೇ ಕೊಡಲಿಯೇಟು ನೀಡಿದರು. ಶಿಕ್ಷಣ ಪ್ರತಿ ಹೆಣ್ಣು-ಗಂಡಿನ ಮೇಲೂ  ಕಡ್ಡಾಯ ಎಂದು ಸಾರಿದರು. ಗಂಡಿನಂತೆಯೇ ಹೆಣ್ಣಿಗೂ ಹೆತ್ತವರ ಆಸ್ತಿಯಲ್ಲಿ ಪಾಲಿದೆ ಎಂದರು. ಯುದ್ಧದಲ್ಲಿ ಮಹಿಳೆಯನ್ನು  ಪಾಲುಗೊಳಿಸಿದರು. ಮದೀನಾದ ಸಂತೆಯಲ್ಲಿ ಮಹಿಳೆಯರೂ ವ್ಯಾಪಾರಿಯಾದರು. ಮಹಿಳೆ ಮಸೀದಿಗೂ ಹೋಗಬಹುದು,  ಸಂತೆಯಲ್ಲಿ ವ್ಯಾಪಾರವನ್ನೂ ಮಾಡಬಹುದು, ಯುದ್ಧದಲ್ಲೂ ಭಾಗವಹಿಸಬಹುದು, ಮದುವೆಯ ವೇಳೆ ವರನೇ ಆಕೆಗೆ ವಧು ಧನ  ಪಾವತಿಸಿ ವಿವಾಹವಾಗಬೇಕು, ಬೇಡದ ವಿವಾಹದಿಂದ ಆಕೆ ವಿಚ್ಛೇದನ ಪಡಕೊಳ್ಳಬಹುದು, ಆಸ್ತಿಯಲ್ಲಿ ಆಕೆಗೂ ಪಾಲು ಇದೆ, ಯಾವ  ಮಕ್ಕಳು ತಾಯಿಯ ಕೋಪಕ್ಕೆ ಪಾತ್ರರಾಗುತ್ತಾರೋ ಅವರು ನರಕಕ್ಕೆ.. ಇತ್ಯಾದಿ ಇತ್ಯಾದಿ ಅಮೂಲ್ಯ ಮತ್ತು ಚೇತೋಹಾರಿ ನೀತಿಗಳನ್ನು  ಧರ್ಮದ ಭಾಗವಾಗಿ ಪ್ರಸ್ತುತಪಡಿಸಿದರು. ಅಲ್ಲದೇ, ಪವಿತ್ರ ಕುರ್‌ಆನಿನ 114 ಅಧ್ಯಾಯಗಳ ಪೈಕಿ 4ನೇ ಅಧ್ಯಾಯದ ಹೆಸರನ್ನೇ ‘ಮಹಿಳೆ’  ಎಂದಿಟ್ಟರು. ಮಹಿಳಾ ಪರ ಅವರ ಈ ಸರಣಿ ಕ್ರಮಗಳು ನಿಧಾನಕ್ಕೆ ಅಂದಿನ ಜನರ ಮೇಲೆ ಗಾಢ ಪರಿಣಾಮ ಬೀರತೊಡಗಿದವು.  ಅಂತಿಮವಾಗಿ, ಹೆಣ್ಣು ಮಗುವಿಗಾಗಿ ಆಸೆಪಡುವ ಮತ್ತು ಹೆಮ್ಮೆಪಡುವ ಸಮಾಜವೊಂದನ್ನು ಅವರು ಕಟ್ಟಿ ಬೆಳೆಸಿದರು.

ಸದ್ಯ ಕಾನೂನಾತ್ಮಕವಾಗಿ ಮತ್ತು ಭಾವನಾತ್ಮಕವಾಗಿ ಜನರನ್ನು ಸಂಸ್ಕರಿಸುವ ಪ್ರಯತ್ನ ನಡೆಯಬೇಕಾಗಿದೆ.

Friday, 22 December 2023

ಮುಸ್ಲಿಮ್ ಸಮುದಾಯದ ಚರ್ಚೆಗೆ ಹೊಸ ಸಾಧ್ಯತೆ ತೆರೆದುಕೊಟ್ಟ ಆಶಿಕ್




ದ.ಕ. ಜಿಲ್ಲೆಯ 24ರ ಯುವಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಗೀಡಾಗಿದ್ದಾರೆ. ಸೋನಿ ಟಿ.ವಿ. ನಡೆಸಿಕೊಡುವ ಮಾಸ್ಟರ್ ಶೆಫ್ ಇಂಡಿಯಾ ಎಂಬ  ಬಹುಪ್ರಸಿದ್ಧ ಅಡುಗೆ ಸ್ಪರ್ಧೆಯಲ್ಲಿ ಮಂಗಳೂರಿನ ಈ ಮುಹಮ್ಮದ್ ಆಶಿಕ್ ದೇಶದಾದ್ಯಂತದ 30 ಸಾವಿರ ಸ್ಪರ್ಧಾಳುಗಳನ್ನು ಹಿಂದಿಕ್ಕಿ  ಪ್ರಥಮ ಸ್ಥಾನ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ವರ್ಷವೂ ಸೋನಿ ಟಿ.ವಿ.ಯ ಸ್ಪರ್ಧೆಯಲ್ಲಿ ಈ ಆಶಿಕ್ ಸ್ಪರ್ಧಿಸಿದ್ದರು.  ಆದರೆ ವಿಫಲರಾಗಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸಿದರು. ಹೊಟೇಲ್ ಮ್ಯಾನೇಜ್‌ಮೆಂಟ್ ಕಲಿಯಬೇಕೆಂಬ ಬಯಕೆ ಇಟ್ಟುಕೊಂಡರೂ  ಆರ್ಥಿಕ ಪರಿಸ್ಥಿತಿಯಿಂದಾಗಿ ಅದನ್ನು ಕೈಬಿಟ್ಟ ಯುವಕನೋರ್ವ ಸ್ವಪ್ರಯತ್ನದಿಂದ ಅದ್ಭುತ ಸಾಧಕನಾಗಿ ಮೂಡಿ ಬಂದಿರುವುದನ್ನು ಒಟ್ಟು  ಸಮಾಜ ಅದರಲ್ಲೂ ಮುಸ್ಲಿಮ್ ಸಮುದಾಯ ಅವಲೋಕನಕ್ಕೆ ಒಳಪಡಿಸುವುದು ಸಕಾಲಿಕವಾದುದು.

ದಕ್ಷಿಣ  ಕನ್ನಡವನ್ನು ಕೋಮುಸೂಕ್ಷ್ಮ  ಜಿಲ್ಲೆ ಎಂದು ಕರೆಯುವುದಿದೆ. ಈ ಹೆಸರು ವಿನಾಕಾರಣ ಬಂದಿಲ್ಲ. ಅನೈತಿಕ ಪೊಲೀಸ್‌ಗಿರಿ, ಗುಂಪು  ಥಳಿತ, ದ್ವೇಷಭಾಷಣ, ಕೋಮುಗಲಭೆಗಳನ್ನು ಒಡಲಲ್ಲಿ ಇಟ್ಟುಕೊಂಡು ಆಗಾಗ ಅಷ್ಟಿಷ್ಟು ಹೊರಚೆಲ್ಲಿ ದಾವಾಗ್ನಿ ಸೃಷ್ಟಿಸುವ ಜಿಲ್ಲೆ ಇದು.  ಇದರ ಪರಿಣಾಮ ಇಲ್ಲಿನ ಜನಜೀವನದ ಮೇಲೂ ಆಗಿದೆ. ಮುಖ್ಯವಾಗಿ, ಮುಸ್ಲಿಮ್ ಸಮುದಾಯದ ಮೇಲೆ ಈ ವಾತಾವರಣ ಸಾಕಷ್ಟು  ಅಡ್ಡ ಪರಿಣಾಮವನ್ನೂ ಬೀರಿದೆ. ಸಮುದಾಯದ ಮಂದಿ ಒಂದುಕಡೆ ಒಟ್ಟು ಸೇರಿದರೆ ರಾಜಕೀಯ ಮಾತನಾಡದೇ ಮತ್ತು  ರಾಜಕಾರಣಿಗಳ ಕೋಮುದ್ವೇಷದ ಮಾತುಗಳನ್ನು ಉಲ್ಲೇಖಿಸಿ ಚರ್ಚಿಸದೇ ವಿರಮಿಸುವುದು ಕಡಿಮೆ. ವಾಟ್ಸಪ್ ಗ್ರೂಪ್‌ಗಳಲ್ಲೂ  ಇಂಥವುಗಳದ್ದೇ  ಕಾರುಬಾರು. ದ್ವೇಷಭಾಷಣಗಳನ್ನು ಖಂಡಿಸುವುದು, ರಾಜಕಾರಣಿಯ ಮುಸ್ಲಿಮ್ ದ್ವೇಷಿ ಹೇಳಿಕೆಯನ್ನು ಪ್ರಶ್ನಿಸುವುದು,  ಮುಸ್ಲಿಮ್ ಸಮುದಾಯ ರಾಜಕೀಯವಾಗಿ ಏನು ಮಾಡಬೇಕೆಂದು ಚರ್ಚಿಸುವುದು, ಯಾವ ರಾಜಕಾರಣಿ ಮತ್ತು ರಾಜಕೀಯ ಪಕ್ಷ  ಮುಸ್ಲಿಮರಿಗೆ ಅನಾನುಕೂಲ ಎಂದೆಲ್ಲಾ ವಿಶ್ಲೇಷಿಸುವುದನ್ನೇ ಮುಸ್ಲಿಮ್ ಸಮುದಾಯದ ಹೆಚ್ಚಿನ ವಾಟ್ಸಪ್ ಗ್ರೂಪ್‌ಗಳಲ್ಲಿ  ಮಾಡಲಾಗುತ್ತಿದೆ. ಇವುಗಳು ತಪ್ಪು ಎಂದಲ್ಲ. ಆದರೆ ಮುಸ್ಲಿಮ್ ಸಮುದಾಯದ ಆದ್ಯತೆಯೇ ಇದಾಗಿಬಿಟ್ಟರೆ, ಅದರ ನಕಾರಾತ್ಮಕ  ಪರಿಣಾಮವನ್ನು ಹೊಸ ತಲೆಮಾರು ಅನುಭವಿಸಬೇಕಾಗುತ್ತದೆ. ಇಂಥ ವಾಟ್ಸಾಪ್ ಚರ್ಚೆಗಳು ಅಲ್ಲೇ  ಉಳಿಯದೇ ಆ ಬಳಿಕ ಮನೆಯಲ್ಲೂ ಪ್ರಸ್ತಾಪವಾಗುತ್ತದೆ. ಪದೇಪದೇ ಇಂಥದ್ದೇ  ಚರ್ಚೆ-ವಿಶ್ಲೇಷಣೆಯನ್ನು ಓದುತ್ತಾ ಓದುತ್ತಾ ವ್ಯಕ್ತಿ ಅನಗತ್ಯ ಆತಂಕ ಮತ್ತು  ಗುಂಗಿಗೆ ಬೀಳಬಹುದು. ನಿಜವಾಗಿ,

ಅಭದ್ರತೆಯೇ ಬದುಕಾಗುವುದು ಅಪಾಯಕಾರಿ. ಎಲ್ಲೋ  ನಡೆಯುವ ದ್ವೇಷ ಭಾಷಣ, ಅಮಾನವೀಯ ಕೃತ್ಯಗಳನ್ನು ಇನ್ನೆಲ್ಲೋ  ಕುಳಿತು  ದಿನಾ ಚರ್ಚಿಸುವುದರಿಂದ ನಿರ್ಮಾಣಾತ್ಮಕ ಆಲೋಚನೆಗೆ ತಡೆ ಬೀಳಬಹುದು. ಅದು ಮನೆಯ ಮಕ್ಕಳ ಮೇಲೂ ಪರಿಣಾಮ  ಬೀರಬಹುದು. ಸ್ವತಂತ್ರ ಆಲೋಚನೆಗಳೊಂದಿಗೆ, ಸಮೃದ್ಧವಾಗಿ ಬೆಳೆಯಬೇಕಾದ ಮಕ್ಕಳು ಆತಂಕ, ಅನುಮಾನ ಮತ್ತು ನಕಾರಾತ್ಮಕ  ಧೋರಣೆಯೊಂದಿಗೆ ಬೆಳೆಯಬಹುದು. ಮುಹಮ್ಮದ್ ಆಶಿಕ್‌ನ ಸಾಧನೆ ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯವಾಗುತ್ತದೆ. ಈ ಯುವಕ ಈ  ಮಟ್ಟಕ್ಕೆ ಬೆಳೆದುದು ಪವಾಡದಿಂದಲ್ಲ. ಸ್ಪಷ್ಟ ಗುರಿ, ಅಪಾರ ಬದ್ಧತೆ ಮತ್ತು ಛಲವೇ ಈ ಆಶಿಕ್‌ನನ್ನು ದೇಶ-ವಿದೇಶದ ತೀರ್ಪುಗಾರರು  ಮಾಸ್ಟರ್ ಶೆಫ್ ಆಫ್ ಇಂಡಿಯಾವಾಗಿ ಗುರುತಿಸಿದ್ದಾರೆ. ಮನೆಯಲ್ಲೇ  ಶುಚಿ-ರುಚಿಯಾದ ಆಹಾರ ತಯಾರಿಸಿ ಕೊಡುವಲ್ಲಿಂದ  ಆರಂಭವಾದ ಈ ಯುವಕನ ಪ್ರಯಾಣವು, ಕಾಲೇಜುಗಳ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಸ್ವತಃ ಸ್ಟಾಲ್ ಹಾಕಿ ವ್ಯಾಪಾರ ಮಾಡುವಲ್ಲಿ  ವರೆಗೆ ಮತ್ತು ಅಲ್ಲಿಂದ ಕುಲ್ಕಿ ಶರ್ಬತ್ ಎಂಬ ಪಾನೀಯ ಮಾರಾಟದವರೆಗೂ ಬೆಳೆಯಿತು. ದ್ವಿತೀಯ ಪಿಯುಸಿಯ ಬಳಿಕ ಆರ್ಥಿಕ  ಅಡಚಣೆಯಿಂದ ಕಲಿಕೆ ಮುಂದುವರಿಸಲಾಗದೇ ಸೇಲ್ಸ್ಮ್ಯಾನ್ ಕೆಲಸಕ್ಕೆ ಸೇರಿಕೊಂಡ ಆಶಿಕ್, 20ರ ಹರೆಯಲ್ಲೇ  `ಕುಲ್ಕಿ ಹಬ್' ಎಂಬ  ವಿವಿಧ ಪಾನೀಯಗಳ ಅಂಗಡಿ ತೆರೆದರು. ತಾನು ಶೆಫ್ ಆಗಬೇಕು ಎಂಬ ಕನಸನ್ನು ಎಂದೂ ಬಿಟ್ಟು ಕೊಡದ ಛಲದ ಸುಖವನ್ನು  ಇಂದು ಈ ಆಶಿಕ್ ಅನುಭವಿಸುತ್ತಿದ್ದಾರೆ. ಅಂದಹಾಗೆ,

ಕೋಮು ಸಂಬಂಧಿ  ವಿಷಯಗಳಿಗಾಗಿಯೇ ರಾಷ್ಟ್ರ ಮಟ್ಟದಲ್ಲಿ ಆಗಾಗ ಸುದ್ದಿಗೀಡಾಗುವ ಜಿಲ್ಲೆಯ ತರುಣನೋರ್ವ ಅತ್ಯಂತ  ಚೇತೋಹಾರಿ ಮತ್ತು ಪ್ರೇರಣದಾಯಿ ಸಂಗತಿಗಾಗಿ ರಾಷ್ಟçಮಟ್ಟದಲ್ಲಿ ಸುದ್ದಿಗೀಡಾಗುವುದು ಮುಸ್ಲಿಮ್ ಸಮುದಾಯದ ಚರ್ಚೆಯ ದಿಕ್ಕನ್ನು  ಬದಲಿಸುವುದಕ್ಕೆ ಪ್ರೇರಣೆಯಾಗಬೇಕು. ಈ ಮುಹಮ್ಮದ್ ಆಶಿಕ್ ಒಂದಷ್ಟು ಸಮಯದವರೆಗೆ ಸಮುದಾಯದ ವಾಟ್ಸಪ್ ಚರ್ಚೆಗಳಲ್ಲಿ  ಸ್ಥಾನ ಪಡೆಯಬೇಕು. ಪ್ರತಿ ಮನೆ ಮನೆಗಳಲ್ಲೂ ಈ ಆಶಿಕ್ ಚರ್ಚಾವಸ್ತುವಾಗಬೇಕು. ಹೊಸ ತಲೆಮಾರು ಇಂಥ ಸಾಧಕರ ಕತೆಗಳನ್ನು  ಕೇಳಿಕೊಂಡು ಬೆಳೆಯಬೇಕು. ದಿನವಿಡೀ ಕಾಂಗ್ರೆಸ್ಸು, ಬಿಜೆಪಿ, ಅದು, ಇದು ಎಂದು ಚರ್ಚಿಸುವುದಕ್ಕಿಂತ ಬೆಳೆಯುತ್ತಿರುವ ಪೀಳಿಗೆಯನ್ನು  ಅತ್ಯಂತ ನಿರ್ಮಾಣಾತ್ಮಕವಾಗಿ ಬೆಳೆಸುವುದು ಹೇಗೆ, ಅವರನ್ನು ಸಾಧಕರಾಗಿ ಪರಿವರ್ತಿಸುವುದು ಹೇಗೆ ಎಂಬ ಬಗ್ಗೆ ಗಂಭೀರ  ಅವಲೋಕನಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯಬೇಕು. ಅಷ್ಟೇ ತೀವ್ರವಾಗಿ ಇಂಥ ಚರ್ಚೆ ಗಳು ಪ್ರತಿ ಮನೆಮನೆಯಲ್ಲೂ  ನಡೆಯಬೇಕು. ಮಕ್ಕಳು ಈ ಚರ್ಚೆಯನ್ನು ಕೇಳಿ ಬೆಳೆಯುವುದರಿಂದ ಅವರಲ್ಲೂ ನಕಾರಾತ್ಮಕ ಭಾವಗಳು ಹೊರಟು ಹೋಗಿ ಆಶಾವಾದ  ತುಂಬಿಕೊಳ್ಳುತ್ತದೆ. ತಾವೂ ಆಶಿಕ್ ಆಗಬೇಕು ಅಥವಾ ಸಾಧಕರಾಗಿ ಗುರುತಿಸಿಕೊಳ್ಳಬೇಕು ಎಂಬ ಛಲ ತುಂಬುತ್ತದೆ. 

ಈ ಬಾರಿಯ  ನೀಟ್ ಪರೀಕ್ಷೆಯಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿ ಮೊದಲ 100 ರ‍್ಯಾಂಕಲ್ಲೂ ಕಾಣಿಸಿಕೊಂಡಿಲ್ಲ. ಅಬ್ದುಲ್ ಬಾಸಿತ್ ಅನ್ನುವ  ಪ್ರತಿಭಾವಂತ ಪಡೆದಿರುವ 113ನೇ ರ‍್ಯಾಂಕೇ ಸಮುದಾಯದ ಪಾಲಿನ ಕಿರೀಟ. ತಮಿಳುನಾಡಿನ ಪ್ರಬಂಜನ್ ಮತ್ತು ಆಂಧ್ರದ ವರುಣ್  ಚಕ್ರವರ್ತಿ ಒಟ್ಟು 720 ಅಂಕಗಳಲ್ಲಿ 720 ಅಂಕಗಳನ್ನೂ ಪಡೆದು ಮೊದಲ ಸ್ಥಾನ ಪಡೆದಿದ್ದರು. ಈ ಬಗೆಯ ಪೈಪೋಟಿಯತ್ತ ಮುಸ್ಲಿಮ್  ಸಮುದಾಯದ ಮಕ್ಕಳನ್ನು ತರಬೇತುಗೊಳಿಸಬೇಕು. ಐಐಟಿ, ಐಐಐಟಿ, ಐಐಎಸ್‌ಇ, ಎನ್‌ಐಟಿ ಮತ್ತು ಐಐಎಂಗಳಲ್ಲಿ ಮುಸ್ಲಿಮ್  ಸಮುದಾಯದ ಅನುಪಾತ 1.92% ಎಂಬುದು ಈಗಿನ ಲೆಕ್ಕಾಚಾರ. ಈ ಅಂಕಿಅಂಶಗಳನ್ನು ಎತ್ತಿ ಉತ್ತಮಗೊಳಿಸುವುದಕ್ಕೆ ಪೂರಕ  ಯೋಚನೆ ಮತ್ತು ಯೋಜನೆಗಳಿಗೆ ಸಮುದಾಯ ಚಾಲನೆ ನೀಡಬೇಕು. ಅದಕ್ಕೆ ಪ್ರಥಮ ಹೆಜ್ಜೆಯಾಗಿ ಸಕಾರಾತ್ಮಕ ಆಲೋಚನೆಗಳಿಗೆ  ಆದ್ಯತೆ ನೀಡಬೇಕು. ಮುಸ್ಲಿಮ್ ಸಮುದಾಯ ಬರಹ, ಭಾಷಣ, ಸೋಶಿಯಲ್ ಮೀಡಿಯಾ ಚರ್ಚೆ ಗಳು ಮತ್ತು ಮನೆಯ  ಮಾತುಕತೆಗಳೆಲ್ಲವೂ ಹೊಸ ಪೀಳಿಗೆಯ ಪಾಲಿಗೆ ಆಸಕ್ತಿಕರವಾಗುವಂತೆ ಮತ್ತು ಸಾಧನೆಗೆ ಪ್ರೇರಣೆಯಾಗುವಂತೆ ಇರಬೇಕು. ಭಾರತದ  ಚಂದ್ರಯಾನದ ಯಶಸ್ಸಿನಲ್ಲಿ ಪಾತ್ರಧಾರಿಗಳಾಗಿರುವ ಸನಾ ಫೈರೋಝï, ಯಾಸಿರ್ ಅಮ್ಮಾರ್, ಮುಹಮ್ಮದ್ ಶಬೀರ್ ಆಲಂ, ಅರೀಬ್  ಅಹ್ಮದ್, ಅಖ್ತದಾರ್ ಅಬ್ಬಾಸ್, ಇಶ್ರತ್ ಜಮಾಲ್, ಖುಶ್ಬೂ ಮಿರ್ಝಾ ಮುಂತಾದ ವಿಜ್ಞಾನಿಗಳನ್ನು ಸಂದರ್ಭಾ ನುಸಾರ ಮಕ್ಕಳ  ಮುಂದೆ ಪ್ರಸ್ತಾಪಿಸಿ ಕನಸು ಕಟ್ಟಬೇಕು. ಇದೇನೂ ಅಸಾಧ್ಯವಲ್ಲ. ಪ್ರತಿ ಮಗುವೂ ವಿಶಿಷ್ಟ. ಸಾಹಸ ಮತ್ತು ಸಾಧನೆ ಮಕ್ಕಳನ್ನು  ಆಕರ್ಷಿಸುವಷ್ಟು ಇನ್ನಾವುದೂ ಆಕರ್ಷಿಸುವುದಿಲ್ಲ. ಒಂದುವೇಳೆ, ಮನೆಯನ್ನು ಸಾಧಕರ ಕುರಿತಾದ ಮಾತಿನ ಮಂಟಪವಾಗಿಸಿಬಿಟ್ಟರೆ  ಮತ್ತು ಕಠಿಣ ಸವಾಲುಗಳನ್ನೂ ಎದುರಿಸಿ ವಿಜಯಿಯಾದವರ ಸಾಹಸಗಾಥೆಗೆ ಮೀಸಲಾಗಿಸಿದರೆ ಅದನ್ನು ಆಲಿಸುತ್ತಾ ಬೆಳೆಯುವ ಮಗು  ಅದನ್ನೇ ಕನಸುತ್ತದೆ. ಅಂಥದ್ದೇ  ಬದುಕು ರೂಪಿಸಿಕೊಳ್ಳಲು ಹವಣಿಸುತ್ತದೆ. ಸದ್ಯ,

ಮುಹಮ್ಮದ್ ಆಶಿಕ್ ಪ್ರತಿ ಮನೆಯ ಬೆರಗಾಗಿ ಚರ್ಚೆಗೆ ಒಳಗಾಗುವುದರಿಂದ ಬೆಳೆಯುವ ಪೀಳಿಗೆಯಲ್ಲಿ ಹೊಸ ಕನಸು ಹುಟ್ಟಲು  ಅವಕಾಶ ಒದಗಿಸುತ್ತದೆ. ಬರೇ ಧರ್ಮ ದ್ವೇಷ ಹೇಳಿಕೆಗಳು ಮತ್ತು ಪ್ರತಿ ಹೇಳಿಕೆಗಳನ್ನೇ ಇಡೀ ದಿನ ಚರ್ಚಿಸುತ್ತಾ ಅದನ್ನೇ ಮುಸ್ಲಿಮ್  ಸಮುದಾಯದ ಆದ್ಯತಾ ವಿಷಯವಾಗಿ ಮಾರ್ಪಡಿಸುವುದರಿಂದ ಮುಸ್ಲಿಮ್ ಸಮುದಾಯ ದೂರ ನಿಲ್ಲಬೇಕಾಗಿದೆ. ಮುಸ್ಲಿಮ್  ಸಮುದಾಯದ ಆದ್ಯತೆಗಳನ್ನು ಮುಸ್ಲಿಮ್ ಸಮುದಾಯವೇ ನಿರ್ಧರಿಸಬೇಕು. ಇನ್ನಾರೋ ಹಾಕಿ ಕೊಡುವ ರಂಗಸ್ಥಳದಲ್ಲಿ ನಿಂತು ಅವರ  ಆದೇಶದಂತೆ ಕುಣಿಯುವುದರಿಂದ ಸಮುದಾಯಕ್ಕೆ ಯಾವ ಲಾಭವೂ ಇಲ್ಲ. ಈ ಕುಣಿತವನ್ನೇ ಬೆಳೆಯುವ ಪೀಳಿಗೆಗಳೂ ಕಲಿಯುತ್ತವೆ  ಮತ್ತು ಅವೂ ಅದನ್ನೇ ಮುಂದುವರಿಸುತ್ತವೆ. ಭಯಪಡುವವರು ಇರುವವರೆಗೆ ಭಯಪಡಿಸುವವರು ಇದ್ದೇ  ಇರುತ್ತಾರೆ. ಇದೊಂದು  ಮುಗಿಯದ ನಾಟಕ. ಮುಸ್ಲಿಮ್ ಸಮುದಾಯ ಇಂಥ ನಕಾರಾತ್ಮಕ ಚರ್ಚೆಗಳಿಂದ ಹೊರಬಂದು ಸಕಾರಾತ್ಮಕ ಚರ್ಚೆಗಳಿಗೆ  ಹೊರಳಬೇಕು. ಪ್ರತಿ ಮನೆಯಲ್ಲೂ ಮುಹಮ್ಮದ್ ಆಶಿಕ್‌ನಂಥ ಸಾಧಕರು ಚರ್ಚಾ ವಿಷಯವಾಗಬೇಕು. ಹೊಸ ಪೀಳಿಗೆ ಇಂಥ  ಚರ್ಚೆಗಳನ್ನೇ ಆಲಿಸಿ ಬೆಳೆಯಬೇಕು. ಇದು ಖಂಡಿತ ಸಾಧ್ಯ. ತನ್ನ ಅಪೂರ್ವ ಛಲ ಮತ್ತು ಆತ್ಮವಿಶ್ವಾಸದಿಂದ ಅಮೋಘ ಸಾಧನೆ  ಮಾಡಿದ ಆಶಿಕ್‌ಗೆ ಅಭಿನಂದನೆಗಳು.

Tuesday, 12 December 2023

ಪಶ್ಚಾತ್ತಾಪಪಡುವ ಅಪ್ಪ, ಅಪರಾಧಿ ಮಗ ಮತ್ತು ಭ್ರೂಣಕ್ಕೇ ಕತ್ತಿಯಿಕ್ಕುವ ವೈದ್ಯರ ಮಧ್ಯೆ...



1. ಕೇರಳ: ಹಾಸಿಗೆಯಲ್ಲಿ ಮಲ ವಿಸರ್ಜಿಸಿದರೆಂದು ಅನಾರೋಗ್ಯ ಪೀಡಿತ ತಂದೆಯನ್ನೇ ಕೊಂದ ಮಗ

2. 900 ಭ್ರೂಣಹತ್ಯೆ  ಮಾಡಿದ ವೈದ್ಯನ ಬಂಧನ ಮತ್ತು 

3. ಎಲ್ಲಾ ಆಸ್ತಿಯನ್ನೂ ಮಗನಿಗೆ ಕೊಟ್ಟು ತಪ್ಪು ಮಾಡಿದೆ ಎಂದ ರೇಮಂಡ್ ಸಂಸ್ಥಾಪಕ ಜಯಪತ್  ಸಿಂಘಾನಿಯಾ...

ಕಳೆದ ವಾರದ ಈ ಮೂರೂ ಸುದ್ದಿಗಳ ಕೇಂದ್ರ ಬಿಂದು ಮನುಷ್ಯ. ಮಾತ್ರವಲ್ಲ, ಬುದ್ಧಿ, ವಿವೇಕ, ಅಂತಃಕರಣ ಇರುವ ಮತ್ತು  ರಕ್ತಸಂಬಂಧ  ಹಾಗೂ ಮಾನವೀಯ ಸಂಬಂಧಗಳ ಪೋಷಕನಂತೆ ಬಿಂಬಿಸಿಕೊಳ್ಳುತ್ತಿರುವ ಮನುಷ್ಯ ಹೇಗೆ ಅವೆಲ್ಲವನ್ನೂ ಅವಗಣಿಸಬಲ್ಲ  ಮತ್ತು ರಾಕ್ಷಸನಂತೆ ವರ್ತಿಸಬಲ್ಲ ಎಂಬುದಕ್ಕೂ ಈ ಮೂರೂ ಸುದ್ದಿಗಳು ಒಳ್ಳೆಯ ಉದಾಹರಣೆ.

ಎಂಟು  ತಿಂಗಳ ಹಿಂದೆ 65 ವರ್ಷದ ಸೆಬಾಸ್ಟಿಯನ್ ಎಂಬ ತಂದೆ ಕಾರು ಅಪಘಾತದಲ್ಲಿ ಗಾಯಗೊಂಡ ಬಳಿಕ ಹಾಸಿಗೆಗೆ  ಸೀಮಿತರಾದರು. ಅವರ ಪತ್ನಿ ಈ ಅಪಘಾತದ ಆಸು-ಪಾಸಿನಲ್ಲೇ  ಕ್ಯಾನ್ಸರ್‌ನಿಂದ ತೀರಿಕೊಂಡಿದ್ದರು. ಮಗ ಸೆಬಿನ್ ಕ್ರಿಶ್ಚಿಯನ್  ತಂದೆಯನ್ನು ನೋಡಿಕೊಳ್ಳುತ್ತಿದ್ದ. 64 ವರ್ಷಗಳ ವರೆಗೆ ಆರೋಗ್ಯವಂತರಾಗಿದ್ದ ಮತ್ತು ನಡೆಯುತ್ತಿದ್ದ ಈ ಅಪ್ಪನಿಗೆ ಈ ಮಗ  ಭಾರವಾಗಿರಲಿಲ್ಲ. ಆದರೆ, ಈ ಅಪ್ಪ ಎಂಟೇ ಎಂಟು ತಿಂಗಳಲ್ಲಿ ಮಗನಿಗೆ ಭಾರವಾದರು. ಇದೇ ಅಪ್ಪ ಈ 26 ವರ್ಷದ ಮಗನನ್ನು ಶಿಶುವಾದಾಗಿನಿಂದ ನಡೆಯುವ ಪ್ರಾಯದ ವರೆಗೆ ಮುದ್ದಾಡಿಸಿರಬಹುದು. ಕೈ ಹಿಡಿದು ನಡೆಸಿರಬಹುದು. ಮಾರುಕಟ್ಟೆಗೆ, ಶಾಲೆಗೆ,  ಪಾರ್ಕ್ ಗೆ  ಕರಕೊಂಡು ಹೋಗಿರಬಹುದು. ಆಗೆಲ್ಲ ಈ ಮಗನನ್ನು ಈ ಅಪ್ಪ ಭಾರ ಅಂದುಕೊಂಡಿರುತ್ತಿದ್ದರೆ ಈ ಕ್ರಿಶ್ಚಿಯನ್ ಜೀವಂತ  ಇರುತ್ತಲೇ ಇರಲಿಲ್ಲ. ಇದರ ಜೊತೆಗೆ ಓದಬಹುದಾದ ಇನ್ನೊಂದು ಸುದ್ದಿಯೆಂದರೆ, 1500 ಕೋಟಿ ರೂಪಾಯಿ ಬೆಲೆಬಾಳುವ  ರೇಮಂಡ್ ಬ್ರಾಂಡ್‌ನ ಸಂಸ್ಥಾಪಕ ವಿಜಯಪಥ್ ಸಿಂಘಾನಿಯಾ ಅವರದು. 85 ವರ್ಷದ ಇವರು ಇವತ್ತು ಬಾಡಿಗೆ ಮನೆಯಲ್ಲಿ  ವಾಸಿಸುತ್ತಿದ್ದಾರೆ. 2015ರಲ್ಲಿ ಇವರು ತಮ್ಮ ಎಲ್ಲಾ ಶೇರುಗಳು ಮತ್ತು ಕಂಪೆನಿಯನ್ನು ತನ್ನ ಏಕೈಕ ಮಗ ಗೌತಮ್ ಸಿಂಘಾನಿಯಾಗೆ  ನೀಡಿದರು. ಶೂನ್ಯದಿಂದ ರೇಮಂಡ್ ಎಂಬ ಬೃಹತ್ ಬಟ್ಟೆ ಉದ್ಯಮವನ್ನು ಕಟ್ಟಿ ಬೆಳೆಸಿದ ಈ ವಿಜಯಪಥ್ ಸಿಂಘಾನಿಯಾ, ಜಗತ್ತೇ  ಗುರುತಿಸುವಷ್ಟು ಪ್ರಸಿದ್ಧ ಉದ್ಯಮಿಯಾದರು. ಆದರೆ, ಯಾವಾಗ ತನ್ನ ಮಗನಿಗೆ ತನ್ನ ಸಂಪೂರ್ಣ ಆಸ್ತಿಯನ್ನು ಬರೆದು ಕೊಟ್ಟರೋ ಆ  ಬಳಿಕದಿಂದ ಅವರ ಕಷ್ಟದ ದಿನಗಳು ಆರಂಭವಾದುವು. ‘ಮಗನಿಗೆ ಆಸ್ತಿಯನ್ನು ಬರೆದು ಕೊಡುವಾಗ ಒಂದಿಷ್ಟು ಹಣವನ್ನು  ಉಳಿಸಿಕೊಳ್ಳದೇ ಇರುತ್ತಿದ್ದರೆ ಇವತ್ತು ಬೀದಿಯೇ ಗತಿಯಾಗುತ್ತಿತ್ತು..’ ಎಂದು ಈ ಅಪ್ಪ ಇವತ್ತು ನೊಂದು ನುಡಿಯುತ್ತಾರೆ. ಇವತ್ತು ಅಪ್ಪ-ಮಗನ ಸಂಬಂಧ ಹಳಸಿದೆ. ಅಪ್ಪನತ್ತ ತಿರುಗಿಯೂ ಈ ಮಗ ನೋಡುತ್ತಿಲ್ಲ. ಅಂದಹಾಗೆ,

ಈ ಎರಡು ಸುದ್ದಿಗಳಿಗಿಂತ ತುಸು ಭಿನ್ನವಾದ ಆದರೆ, ಈ ಎರಡೂ ಸುದ್ದಿಗಳಿಗಿಂತಲೂ ಅತಿ ಭೀಕರವಾದ ಸುದ್ದಿಯೇ ಭ್ರೂಣಹತ್ಯೆಗೆ  ಸಂಬಂಧಿಸಿದ್ದು. ಪತ್ರಿಕೆಗಳ ಪಾಲಿಗೆ ಮುಖಪುಟದ ಲೀಡಿಂಗ್ ಸುದ್ದಿಯಾಗಬೇಕಿದ್ದ ಈ ಭ್ರೂಣಹತ್ಯೆಯು ಹೆಚ್ಚಿನೆಲ್ಲಾ ಪತ್ರಿಕೆಗಳ ಒಳ ಪುಟವನ್ನು ಸೇರಿಕೊಂಡಿದೆ ಎಂಬುದೇ ಸಮಾಜದಲ್ಲಿ ಇದೆಷ್ಟು ಮಾಮೂಲು ಎಂಬುದನ್ನು ಹೇಳುತ್ತದೆ. ಬೆಂಗಳೂರು-ಮೈಸೂರು  ಸುತ್ತಮುತ್ತ ಹತ್ತರಷ್ಟು ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ವೈದ್ಯರು, ಲ್ಯಾಬ್ ಟೆಕ್ನೀಶಿಯನ್,  ಆಸ್ಪತ್ರೆ ಮುಖ್ಯಸ್ಥರೆಲ್ಲಾ ಇದ್ದಾರೆ. ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚಿ ಹತ್ಯೆ ಮಾಡುವುದೇ ಇವರ ಕಾಯಕ. ಒಂದು ಭ್ರೂಣಹತ್ಯೆಗೆ 25  ಸಾವಿರದಷ್ಟು ಹಣವನ್ನು ಪಡೆಯುತ್ತಾರೆ. ಇದೊಂದು ಜಾಲ. ಹಾಗಂತ, ಪೊಲೀಸರ ಕೈಗೆ ಸಿಗದೇ ಇರುವ ಇಂಥ ಕುಖ್ಯಾತ ಜಾಲಗಳು  ರಾಜ್ಯದಲ್ಲಿ ಇನ್ನೂ ಅನೇಕ ಇರಬಹುದು. ಇದನ್ನೇ ದೇಶಕ್ಕೆ ಅನ್ವಯಿಸಿ ನೋಡುವಾಗ ಭಯವಾಗುತ್ತದೆ. ದೇಶದಲ್ಲಿ ಒಂದು ದಿನದಲ್ಲಿ  ಎಷ್ಟು ಭ್ರೂಣಗಳು ಹತ್ಯೆಯಾಗುತ್ತಿರಬಹುದು ಮತ್ತು ಇದಕ್ಕೆ ನೆರವಾಗುವ ವೈದ್ಯರು ಮತ್ತು ಆಸ್ಪತ್ರೆಗಳು ಎಷ್ಟಿರಬಹುದು? ಅಂದಹಾಗೆ,

ಹೆತ್ತವರ ಬಗ್ಗೆ ಕಾಳಜಿಯ ಬೋಧನೆಯನ್ನು ನೀಡದ ಒಂದೇ ಒಂದು ಧರ್ಮ ಇಲ್ಲ. ಭಾರತವಂತೂ ಧರ್ಮಗಳೇ ತುಂಬಿಕೊಂಡಿರುವ  ಮಣ್ಣು. ಶ್ರವಣಕುಮಾರನ ಭಾವುಕ ಕತೆಯನ್ನು ಬಾಲ್ಯದಲ್ಲಿ ಓದಿ ಬೆಳೆಯುವ ಮಕ್ಕಳೇ ಇಲ್ಲಿ ಅಧಿಕವಿದ್ದಾರೆ. ಹೆಣ್ಣನ್ನು ಪೂಜಿಸುವ ಮತ್ತು  ದೇವತೆಯೆಂದು ಬಾಗುವ ಸಂಸ್ಕೃತಿಯೂ ಇಲ್ಲಿನದು. ಹಿಂದೂ, ಇಸ್ಲಾಮ್, ಕ್ರೈಸ್ತ- ಈ ಮೂರೂ ಧರ್ಮಗಳು ಹೆತ್ತವರ ಮತ್ತು ಹೆಣ್ಣಿನ  ಬಗ್ಗೆ ಗೌರವಾರ್ಹವಾದ ಚಿಂತನೆಯನ್ನೇ ಹೊಂದಿವೆ. ಹೆತ್ತವರ ವಿಷಯದಲ್ಲಿ ಇಸ್ಲಾಮ್ ಎಂಥ ಕಟು ಧೋರಣೆಯನ್ನು ಹೊಂದಿದೆ  ಎಂದರೆ, ವೃದ್ಧರಾಗಿರುವ ಹೆತ್ತವರ ಬಗ್ಗೆ ಛೆ ಎಂಬ ಉದ್ಗಾರವನ್ನೂ ಮಕ್ಕಳು ಹೊರಡಿಸಬಾರದು ಎನ್ನುತ್ತದೆ. ಹೆತ್ತವರ ಕೋಪಕ್ಕೆ  ತುತ್ತಾದ ಯಾವ ಮಕ್ಕಳೂ ಅವರೆಷ್ಟೇ ಧರ್ಮಿಷ್ಟರಾದರೂ ಸ್ವರ್ಗ ಪ್ರವೇಶಿಸಲಾರರು ಎಂದೇ ಹೇಳಿದೆ. ‘ಹೆತ್ತವರೇ ಮಕ್ಕಳ ಪಾಲಿನ ಸ್ವರ್ಗ  ಮತ್ತು ನರಕ’ ಎಂದೂ ಹೇಳಿದೆ. ಮಗ ಮುಸ್ಲಿಮ್ ಆಗಿದ್ದು, ಹೆತ್ತಬ್ಬೆ ಮುಸ್ಲಿಮೇತರರಾಗಿದ್ದರೂ ಹೆತ್ತವರ ಮೇಲಿನ ಕರ್ತವ್ಯಗಳಲ್ಲಿ ಮಗನಿಗೆ ಯಾವ ರಿಯಾಯಿತಿಯೂ ಇರುವುದಿಲ್ಲ ಎಂದೂ ತಾಕೀತು ಮಾಡಿದೆ. ನಿತ್ರಾಣದ ಮೇಲೆ ನಿತ್ರಾಣವನ್ನು ಅನುಭವಿಸಿ ಮಗುವನ್ನು  ಹೆರುವ ತಾಯಿಗಾಗಿ ಮಕ್ಕಳು ಸದಾ ಪ್ರಾರ್ಥಿಸುತ್ತಿರಬೇಕೆಂದು ಕುರ್‌ಆನ್ ಹೇಳಿದೆಯಲ್ಲದೇ, ಆ ಪ್ರಾರ್ಥನಾ ವಿಧಾನವನ್ನೂ ಕಲಿಸಿಕೊಟ್ಟಿದೆ. ಇದಿಷ್ಟೇ ಅಲ್ಲ, ಹೆಣ್ಣು ಮಗುವನ್ನು ಪ್ರೀತಿಸುವ ಮತ್ತು ಕಾಳಜಿ ತೋರುವ ವಿಷಯದಲ್ಲಂತೂ ಇಸ್ಲಾಮ್ ಅತೀ  ಮುಂಚೂಣಿಯಲ್ಲಿದೆ. ಒಬ್ಬರು ತನ್ನ ಹೆಣ್ಣು ಮಗುವಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸಿ ಅವರ ಬದುಕು  ಚೆಲುವಾಗಿಸಿದರೆ ಆ ಹೆತ್ತವರಿಗೆ ಸ್ವರ್ಗ ಇದೆ ಎಂದು ಪ್ರವಾದಿ(ಸ) ಕಲಿಸಿದ್ದಾರೆ. ಹೆಣ್ಣು ಮಗುವಿನ ಕಾರಣಕ್ಕಾಗಿ ಹೆತ್ತವರಿಗೆ ಸ್ವರ್ಗದ  ವಾಗ್ದಾನವನ್ನು ನೀಡಿದ ಏಕೈಕ ಧರ್ಮವಾಗಿ ಇಸ್ಲಾಮ್ ಗುರುತಿಸಿಕೊಂಡಿದೆ. ಇದೇವೇಳೆ,

ಗಂಡು ಮಗುವಿನ ಹೆತ್ತವರಿಗೆ ಇಸ್ಲಾಮ್ ಈ ವಾಗ್ದಾನವನ್ನು ನೀಡಿಯೇ ಇಲ್ಲ. ಒಂದುವೇಳೆ, ಹೆಣ್ಣು ಮಗು ಎಂಬ ಕಾರಣಕ್ಕೆ ಹತ್ಯೆ  ನಡೆಸಿದರೆ, ಮರಣಾನಂತರ ವಿಚಾರಣೆಯ ವೇಳೆ ಅಂಥ ಹೆತ್ತವರನ್ನು ಆ ಮಗುವಿನ ಮುಂದೆಯೇ ಕಟಕಟೆಯಲ್ಲಿ ನಿಲ್ಲಿಸಲಾಗುವುದು  ಮತ್ತು ಯಾವ ಕಾರಣಕ್ಕಾಗಿ ನಿನ್ನನ್ನು ಹತ್ಯೆ ನಡೆಸಲಾಯಿತು ಮಗೂ ಎಂದೂ ಪ್ರಶ್ನಿಸಲಾಗುವುದು, ಅದು ಕೊಡುವ ಉತ್ತರದ  ಆಧಾರದಲ್ಲಿ ಹೆತ್ತವರಿಗೆ ಶಿಕ್ಷೆಯನ್ನು ನೀಡಲಾಗುವುದು ಎಂಬ ಗಂಭೀರ ಎಚ್ಚರಿಕೆಯನ್ನೂ ಕುರ್‌ಆನ್‌ನಲ್ಲಿ ನೀಡಲಾಗಿದೆ. ನಿಜವಾಗಿ,

ಇವತ್ತು ಹೊಸ ಮಂದಿರ-ಮಸೀದಿಗಳ ನಿರ್ಮಾಣ ಭರದಿಂದ ಸಾಗುತ್ತಲೇ ಇದೆ. ವರ್ಷದಿಂದ ವರ್ಷಕ್ಕೆ ಮಂದಿರ-ಮಸೀದಿಗೆ ತೆರಳುವ  ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವೂ ಆಗುತ್ತಿದೆ. ಧರ್ಮದ ಹೆಸರಲ್ಲಿ ನಡೆಯುವ ಸಭೆ, ಸಮಾರಂಭ, ಪ್ರವಚನ, ಗೋಷ್ಠಿಗಳಿಗೆ ಜನರೂ ಭಾರೀ  ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಚಪ್ಪಾಳೆ, ಶಿಳ್ಳೆಗಳೂ ಬೀಳುತ್ತಿವೆ. ಆದರೆ, ಧರ್ಮಬೋಧನೆಗಳ ಪಾಲನೆಯಲ್ಲಿ ಮಾತ್ರ ಈ ಉತ್ಸಾಹ  ಕಾಣಿಸುವುದಿಲ್ಲ. ಧರ್ಮಿಷ್ಠರೆಂದು ಹೇಳಿಕೊಳ್ಳುವವರೇ ಮತ್ತು ಧರ್ಮದ ಪೋಷಾಕು ತೊಟ್ಟವರೇ ಅತ್ಯಾಚಾರಿಗಳು, ಭ್ರಷ್ಟರು, ವಂಚಕರಾಗಿ  ಗುರುತಿಸಿಕೊಳ್ಳುತ್ತಿದ್ದಾರೆ. ಧರ್ಮದ್ವೇಷದ ಭಾಷಣಗಳನ್ನೂ ಮಾಡುತ್ತಿದ್ದಾರೆ. ಧರ್ಮವು ಎಂಬುದು ವ್ಯಕ್ತಿಯ ಪೋಷಾಕಿಗೆ  ಸೀಮಿತಗೊಂಡು ಆಚರಣೆಯಲ್ಲಿ ನಾಸ್ತಿಯಾದ ಸ್ಥಿತಿಗೆ ಬಂದಿದೆ. ಇದು ಬದಲಾಗಬೇಕು.

 ಧರ್ಮ ಎಂಬುದು ನಾಗರಿಕ ಸಮಾಜದಲ್ಲಿ  ಮೌಲ್ಯಗಳನ್ನು ಬಿತ್ತುವ ಬೋಧನೆಗಳ ಹೆಸರು. ಆ ಬೋಧನೆಗಳನ್ನು ಚಾಚೂ ತಪ್ಪದೇ ಅಳವಡಿಸಿಕೊಂಡ ವ್ಯಕ್ತಿ ಸಮಾಜ ಕಂಟಕ  ಆಗಲಾರ. ಮಂದಿರ-ಮಸೀದಿಯನ್ನು ಕೆಡುಕಿಗೆ ಬಳಸಲಾರ. ಧರ್ಮದ ಪೋಷಾಕು ತೊಟ್ಟು ಧರ್ಮದ್ರೋಹಿ ಕೆಲಸಗಳಲ್ಲಿ  ಭಾಗಿಯಾಗಲಾರ. ಸದ್ಯ ಇದಕ್ಕೆ ವಿರುದ್ಧವಾದುದು ನಡೆಯುತ್ತಿದೆ ಎಂದಾದರೆ, ಅದು ಅಪಾಯಕಾರಿ. ಅಂದಹಾಗೆ,

ಈ ದೇಶದಲ್ಲಿ ಅಪರಾಧಗಳು  ನಡೆಯದೇ ಇರುವುದಕ್ಕೆ ಕಾನೂನುಗಳ ಭಯವೊಂದೇ ಕಾರಣ ಅಲ್ಲ, ಧರ್ಮ ಮತ್ತು ಅದು ಬಿತ್ತಿದ ದೇವಭಯವೂ ಕಾರಣ. ಇಲ್ಲಿ ಅ ಪರಾಧ ಕೃತ್ಯಗಳಲ್ಲಿ ಭಾಗಿಯಾದರೆ, ಮರಣಾನಂತರ ದೇವನು ಪ್ರಶ್ನಿಸುತ್ತಾನೆ ಮತ್ತು ಶಿಕ್ಷೆ ನೀಡುತ್ತಾನೆ ಎಂಬ ಬೋಧನೆಯೂ ಜನರ  ಬದುಕಿನ ಮೇಲೆ ಪ್ರಭಾವ ಬೀರಿವೆ. ಆದ್ದರಿಂದ, ಧರ್ಮದ ಮೌಲ್ಯಗಳಿಗೆ ಮತ್ತೆ ಮತ್ತೆ ಪ್ರಸ್ತುತತೆಯನ್ನು ಕಲ್ಪಿಸುತ್ತಲೇ ಇರಬೇಕಾದ  ಹೊಣೆಗಾರಿಕೆ ಎಲ್ಲ ಧರ್ಮಿಷ್ಠರ ಮೇಲಿದೆ. ಪಶ್ಚಾತ್ತಾಪಪಡುವ ಸಿಂಘಾನಿಯಾರಂಥ  ತಂದೆ, ಕ್ರಿಶ್ಚಿಯನ್‌ನಂಥ ಮಗ ಮತ್ತು ಹೆಣ್ಣು  ಭ್ರೂಣವನ್ನು ಹತ್ಯೆ ಮಾಡುವ ವೈದ್ಯರು ಶೂನ್ಯವಾಗಬೇಕಾದುದು ಎಲ್ಲರ ಅಗತ್ಯ.

Tuesday, 28 November 2023

ಉಡುಪಿಯಲ್ಲಿ ತಾಯಿ-ಮಕ್ಕಳ ಹತ್ಯೆ: ಕಲಿಯಬೇಕಾದ ಪಾಠ ಏನು?

 




ಕರಾವಳಿ ಮತ್ತೆ ಸುದ್ದಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಎಂಬ ಯುವಕನ ಹತ್ಯೆ ನಡೆದು ವಾರವಾಗುವ  ಮೊದಲೇ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ನಡೆದಿದೆ. ಈ ಎರಡೂ ಹತ್ಯೆಗಳಲ್ಲಿರುವ ಸಮಾನ ಅಂಶವೇನೆಂದರೆ, ಹತ್ಯೆಗೆ ಬಳಸಿರುವ ಆಯುಧ. ತಲವಾರಿಗೆ ಹಿಂದೂ-ಮುಸ್ಲಿಮ್ ಎಂಬ ಬೇಧ ಇಲ್ಲ. ಹೆಣ್ಣು-ಗಂಡು, ಮಕ್ಕಳು, ಶಿಶುಗಳು  ಎಂಬ ಬೇಧವೂ ಇಲ್ಲ. ಅದು ಯಾರ ಕೈಯಲ್ಲಿದೆಯೋ ಅವರ ಆದೇಶವನ್ನು ಚಾಚೂ ತಪ್ಪದೇ ಪಾಲಿಸುತ್ತದೆ. ಇನ್ನು, ಈ ತಲವಾರಿಗೆ  ಬಲಿಯಾಗುವವರ ಧರ್ಮ ಯಾವುದೇ ಆದರೂ ಚೆಲ್ಲುವ ರಕ್ತದ ಬಣ್ಣ ಒಂದೇ. ಬಲಿಯಾದವರ ಕುಟುಂಬದವರು ಹಾಕುವ ಕಣ್ಣೀರಿನ  ಬಣ್ಣವೂ ಒಂದೇ. ಹಾಗಂತ,

ಕರಾವಳಿಯನ್ನು ಬೆಚ್ಚಿಬೀಳಿಸಿದ ಮೊದಲ ಹತ್ಯೆಯೇನೂ ಇದಲ್ಲ. 11 ವರ್ಷಗಳ ಹಿಂದೆ ದ.ಕ. ಜಿಲ್ಲೆಯ ಪಂಜಿಮೊಗರಿನಲ್ಲಿ ರಝಿಯಾ  ಎಂಬ ತಾಯಿ ಹಾಗೂ ಫಾತಿಮಾ ಎಂಬ ಮಗಳನ್ನು ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಅಪರಾಧಿ ಇನ್ನೂ ಪತ್ತೆಯಾಗಿಲ್ಲ. ಇದೀಗ,  46 ವರ್ಷದ ಹಸೀನಾ ಎಂಬ ತಾಯಿ ಹಾಗೂ ಮಕ್ಕಳಾದ ಅಫ್ನಾಜ್, ಅಯ್ನಾಝï, ಆಸಿಮ್‌ರನ್ನು ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದೆ.  ಈ ಎರಡು ಭಯಾನಕ ಕ್ರೌರ್ಯಗಳ ನಡುವೆಯೂ  ಕರಾವಳಿಯಲ್ಲಿ ಸಾಕಷ್ಟು ರಕ್ತ ಹರಿದಿದೆ. ಇವೆಲ್ಲಕ್ಕೂ ಧರ್ಮದ್ವೇಷವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ. ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತ ಸಮಯಗಳ ಮೊದಲು ದ.ಕ. ಜಿಲ್ಲೆಯನ್ನು ಮೂರು ಹತ್ಯೆಗಳು  ನಡುಗಿಸಿಬಿಟ್ಟವು. ಬಲಿಯಾದವರನ್ನು ಹಿಂದೂ-ಮುಸ್ಲಿಮ್ ಎಂದು ವಿಭಜಿಸಲಾಯಿತು. ಹೀಗೆ ವಿಭಜಿಸಿ ಈ ಹತ್ಯೆಗಳ ಪರ-ವಿರುದ್ಧ  ಮಾತಾಡಿದವರು ಮಕ್ಕಳು, ಕುಟುಂಬ ಎಂದು ಆರಾಮವಾಗಿ ಬದುಕುತ್ತಿದ್ದಾರೆ. ರಾಜಕಾರಣಿಗಳಂತೂ ಆ ಘಟನೆಯನ್ನೇ ಮರೆತಿದ್ದಾರೆ.  ಪತ್ರಿಕೆಗಳೂ ಮರೆತಿವೆ. ಸೋಶಿಯಲ್ ಮೀಡಿಯಾವಂತೂ ಕ್ರಿಕೆಟ್, ಬಿಗ್‌ಬಾಸು, ಅಫೇರು ಎಂದೆಲ್ಲಾ ತನ್ನದೇ ಲೋಕದಲ್ಲಿ ಮುಳುಗಿ  ಹೋಗಿದೆ. ಸದ್ಯ ಈ ಹತ್ಯೆಗಳನ್ನು ಇವತ್ತು ಯಾರಾದರೂ ನೆನಪಿಸುತ್ತಿದ್ದರೆ ಅದು ಸಂತ್ರಸ್ತ ಕುಟುಂಬದವರು ಮಾತ್ರ. ಮಗನನ್ನು  ಕಳಕೊಂಡ ಹೆತ್ತವರು, ಪತಿಯನ್ನು ಕಳಕೊಂಡ ಪತ್ನಿ ಮತ್ತು ಮಕ್ಕಳ ಹೊರತು ಇನ್ನಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಷ್ಟಿದ್ದೂ,

ರಕ್ತದಾಹದ ಭಾಷೆಯಲ್ಲಿ ಮಾಡಲಾಗುವ ಭಾಷಣಗಳಿಗೆ ಕಡಿವಾಣ ಬಿದ್ದಿಲ್ಲ. ಚಪ್ಪಾಳೆ, ಶಿಳ್ಳೆಗಳೂ ಕಡಿಮೆಯಾಗಿಲ್ಲ. ಒಂದು ಮನೆಯ  ಬೆಳಕನ್ನು ನಂದಿಸುವುದು ಎಷ್ಟು ಆಘಾತಕಾರಿ ಎಂದು ಬುದ್ಧಿ ಹೇಳುವವರಿಗೆ ಮಾನ್ಯತೆಯೂ ಸಿಗುತ್ತಿಲ್ಲ. ಒಂದುಕಡೆ ತನ್ನ ಎಲ್ಲವನ್ನೂ  ಕಳಕೊಂಡು ಕುಟುಂಬವೊಂದು ಕಣ್ಣೀರು ಹಾಕುತ್ತಿರುವಾಗ ಇನ್ನೊಂದು ಕಡೆ ಆ ಕಣ್ಣೀರಿಗೆ ನಾವೇ ಕಾರಣ ಎಂಬಂತೆ  ಸಂಭ್ರಮಪಡುವ  ಕೇಡುಗಾಲ ಇದು. ಇಂಥ ಸ್ಥಿತಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ನಡೆದಿದೆ. ಈ ಹತ್ಯೆಗೆ ಕಾರಣ ಏನೇ ಇರಬಹುದು,  ಆದರೆ ಇಂಥವು ಯಾಕೆ ನಡೆಯುತ್ತಿದೆ ಎಂಬ ಬಗ್ಗೆ ಒಟ್ಟು ಸಮಾಜ ಚಿಂತಿಸಬೇಕಾಗಿದೆ. ಯುವ ಸಮೂಹಕ್ಕೆ ನೆತ್ತರ ರುಚಿ ಹತ್ತಿಸಿದ್ದು  ಯಾರು? ಯಾವುದು? ಸಾಮಾನ್ಯವಾಗಿ, ಇಂಥ ಕೃತ್ಯಗಳಲ್ಲಿ ಹೆಚ್ಚಾಗಿ ಯುವ ಸಮೂಹವೇ ಭಾಗಿಯಾಗುತ್ತಿದೆ. ಕತ್ತಿ-ತಲವಾರನ್ನು ಮ ನಬಂದAತೆ ಬಳಸುತ್ತಿದೆ. ಯಾವುದೋ ಮನೆಯ ದೀಪವನ್ನು ನಂದಿಸಿ, ಜೈಲಿಗೂ ಹೋಗಿ ಊರಿಗೂ ಮನೆಯವರಿಗೂ ಭಾರ ಎ ನ್ನಿಸಿಕೊಳ್ಳುತ್ತಿದೆ. ಜೈಲಿನಿಂದ ಹೊರಬಂದ ಬಳಿಕ ಮತ್ತದೇ ಕೃತ್ಯಗಳಲ್ಲಿ ಭಾಗಿಯಾಗಬೇಕಾದ ಒತ್ತಡವೋ ಅನಿವಾರ್ಯತೆಯೋ  ಎದುರಾಗುತ್ತಿದೆ. ಇವನ್ನು ಈ ಆವೇಶದ ಹುಡುಗರಿಗೆ ಬಿಡಿಸಿ ಹೇಳುವವರು ಯಾರು? ಅಂದಹಾಗೆ,

ಉಡುಪಿಯಲ್ಲಿ ಮೂವರು ಮಹಿಳೆಯರು ಮತ್ತು ಓರ್ವ ಮಗುವನ್ನು ಹತ್ಯೆ ಮಾಡಿದ ಅಪರಾಧಿಯನ್ನು ಈ ವ್ಯವಸ್ಥೆ ಬಂಧಿಸಬಹುದು.  ಆತನಿಗೆ ನ್ಯಾಯಾಲಯದಲ್ಲಿ ಶಿಕ್ಷೆಯೂ ಆಗಬಹುದು. ಆದರೆ ಎರಡು ಪ್ರಶ್ನೆಗಳು ಈ ನಾಗರಿಕ ಸಮಾಜವನ್ನು ಸದಾ ಉತ್ತರಕ್ಕಾಗಿ  ಪೀಡಿಸುವುದನ್ನು ತಪ್ಪಿಸಲಾಗದು. 1. ತನ್ನ ಇಡೀ ಕುಟುಂಬವನ್ನೇ ಕಳಕೊಂಡ ನೂರ್ ಮುಹಮ್ಮದ್ ಎಂಬ ಮೂರು ಮಕ್ಕಳ ಪಾಲಿನ  ಅಪ್ಪ ಮತ್ತು ಹಸೀನಾ ಎಂಬವರ ಪತಿಯ ಒಡಲಾಳದ ಸಂಕಟಕ್ಕೆ ಈ ಪ್ರಭುತ್ವದಿಂದ ಔಷಧಿ ಕೊಡಲು ಸಾಧ್ಯವೇ? 2. ಮಚ್ಚು- ಲಾಂಗು-ಕತ್ತಿ-ಬಂದೂಕು-ಕಡಿ-ಕೊಲ್ಲು, ಸೇಡು-ದ್ವೇಷ... ಇತ್ಯಾದಿಗಳನ್ನೇ ಮನರಂಜನೆಯ ಹೆಸರಲ್ಲಿ ಪ್ರತಿ ಮನೆ ಮನೆಗೂ  ತಲುಪಿಸುತ್ತಿರುವ ಚಿತ್ರರಂಗವನ್ನು ನಾವು ಕಟಕಟೆಯಲ್ಲಿ ನಿಲ್ಲಿಸುವುದು ಯಾವಾಗ?

ಸಿನಿಮಾ ಎಂಬುದು ಒಂದು ಉದ್ಯಮ. ಹಾಕಿದ ದುಡ್ಡನ್ನು ಬಡ್ಡಿಸಮೇತ ವಾಪಸ್ ಪಡಕೊಳ್ಳುವ ಜರೂರತ್ತು ಈ ಕ್ಷೇತ್ರಕ್ಕಿದೆ. ಆ ಕಾರಣ ದಿಂದಲೇ ಮನರಂಜನೆ ಎಂಬ ಗುರಿಯ ಆಚೆಗೆ ವ್ಯಾಪಾರಿ ದೃಷ್ಟಿಕೋನದಿಂದ ಯೋಚಿಸಬೇಕಾದ ಅನಿವಾರ್ಯತೆ ನಿರ್ಮಾಪಕನ ಮೇಲೆ  ಇದ್ದೇ  ಇರುತ್ತದೆ. ಅಂದಹಾಗೆ, ಮನರಂಜನೆ ಮತ್ತು ವ್ಯಾಪಾರ ಇವೆರಡೂ ಸರಳ ರೇಖೆಯಲ್ಲಿ ಚಲಿಸಬಹುದೇ ಹೊರತು  ಜೊತೆಗೂಡುವುದು ಬಹಳ ಕಷ್ಟ. ಇವತ್ತಿನ ಹೆಚ್ಚಿನ ಸಿನಿಮಾಗಳು ಬಂದೂಕು, ಲಾಂಗು-ಮಚ್ಚು ಮತ್ತು ಕ್ರೌರ್ಯಗಳಿಂದ ಹೊರತಾಗಿಲ್ಲ.  ಆರಾಮ ಕೋಣೆಯಲ್ಲಿ ಕುಳಿತು ಸಿನಿಮಾಕ್ಕಾಗಿ ಅದ್ಭುತ ಕತೆ ರಚಿಸುವ ಕತೆಗಾರನ ಮುಂದೆ ಆ ಕತೆ ದೃಶ್ಯರೂಪ ಪಡೆದಾಗ ಅದು  ಸಮಾಜದಲ್ಲಿ ಎಂಥ ಪರಿಣಾಮ ಬೀರಬಹುದು ಎಂಬ ಅರಿವು ಇರುತ್ತದೋ ಗೊತ್ತಿಲ್ಲ. ಹೀರೋ, ಹೀರೋಯಿನ್ ಮತ್ತು ವಿಲನ್  ಪಾತ್ರವನ್ನು ಸೃಷ್ಟಿಸಿ, ಆ ಹೀರೋಯಿನನ್ನು ತನ್ನವಳನ್ನಾಗಿಸುವುದಕ್ಕೆ ಹೀರೋ ಹತ್ತು ಹಲವು ತಂತ್ರಗಳನ್ನು ಹೆಣೆಯುವುದು, ಆ ದಿಶೆಯಲ್ಲಿ  ಹತ್ಯೆ, ಜಗಳ, ಘರ್ಷಣೆ ಇತ್ಯಾದಿಗಳನ್ನು ನಡೆಸುವುದು ಮತ್ತು ಇವೆಲ್ಲವನ್ನೂ ನೋಡಗರ ಮನಸ್ಸಿಗೆ ಸರಿ ಎಂದು ಬಿಂಬಿಸುವುದು ಸಿ ನಿಮಾಗಳಲ್ಲಿ ಸಾಮಾನ್ಯವಾಗಿರುತ್ತದೆ. ಮನರಂಜನೆಯ ಹೆಸರಲ್ಲಿ ಸಿನಿಮಾ ಕ್ಷೇತ್ರ ಇದನ್ನು ಸಮರ್ಥಿಸಿಕೊಳ್ಳಬಹುದು. ಆದರೆ,

 ವೀಕ್ಷಕರೆಲ್ಲ  ಒಂದೇ ಮನಸ್ಥಿತಿಯವರು ಇರಬೇಕಿಲ್ಲವಲ್ಲ. ಒಂದು ಸಿನಿಮಾದಿಂದ ಒಬ್ಬೊಬ್ಬರು ಒಂದೊಂದು ರೀತಿಯ ಪಾಠವನ್ನು ಕಲಿತುಕೊಳ್ಳಬಹುದು. ಇನ್ನೊಬ್ಬರನ್ನು ಮುಗಿಸುವುದಕ್ಕೆ ಅದರಿಂದ ಪ್ರೇರಣೆ ಪಡೆಯುವವರಿರಬಹುದು. ಹತ್ಯೆ ನಡೆಸಿದ ಬಳಿಕ  ತಪ್ಪಿಸಿಕೊಳ್ಳುವ ವಿಧಾನವನ್ನೂ ಸಿನಿಮಾದಿಂದ ಕಲಿತುಕೊಳ್ಳುವವರಿರಬಹುದು. ಸಿನಿಮಾಗಳಿಂದ ಪ್ರೇರಣೆ ಪಡೆದು ನಡೆದ ಅನೇಕ ಅ ಪರಾಧ ಕೃತ್ಯಗಳು ಈಗಾಗಲೇ ಸುದ್ದಿಗೀಡಾಗಿವೆ. ಮಲಯಾಳಂನ ದೃಶ್ಯಂ ಸಿನಿಮಾದ ಪ್ರೇರಣೆ ಯಿಂದ ಅಪರಾಧ ಕೃತ್ಯವೆಸಗಿದವರು  ಕೆಲವು ಸಮಯದ ಹಿಂದೆ ಸುದ್ದಿಗೀಡಾಗಿದ್ದರು. ಇವಲ್ಲದೇ ಮನರಂಜನೆಯ ಹೆಸರಲ್ಲಿ ನಡೆಯುವ ಕೆಲವು ಹಿಂಸಾಸ್ವರೂಪಿ ಆಟಗಳೂ  ಪ್ರತಿ ಮನೆಯ ಟಿವಿ ಯಲ್ಲೂ ವಿಜೃಂಭಿಸುತ್ತಿವೆ. ಮೊಬೈಲ್‌ನ ಈ ಕಾಲದಲ್ಲಿ ಟಿವಿಯ ಹಂಗಿಲ್ಲದೇ ಪ್ರತಿಯೊಬ್ಬರಿಗೂ ಇವೆಲ್ಲ ದಕ್ಕುತ್ತಲೂ  ಇವೆ. ಮನುಷ್ಯ ಕ್ರೂರಿಯಾಗುವುದಕ್ಕೆ ಏನೇನೆಲ್ಲ ಬೇಕೋ ಅವೆಲ್ಲವನ್ನೂ ಒದಗಿಸುವುದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯೂ ನಾವಿರುವ ಇದೇ  ಸಮಾಜದಲ್ಲಿದೆ. ಸದ್ಯ ನಾವು ಇವೆಲ್ಲವನ್ನೂ ಹರಡಿಟ್ಟುಕೊಂಡೇ ಈ ತಾಯಿ ಮಕ್ಕಳ ಹತ್ಯೆಯ ಸಹಿತ ಎಲ್ಲವನ್ನೂ ವಿಶ್ಲೇಷಣೆಗೆ ಒಳಪಡಿಸ ಬೇಕಾಗಿದೆ. ಮುಖ್ಯವಾಗಿ, ಯುವ ಸಮೂಹಕ್ಕೆ ಸಹನೆಯ ಮತ್ತು ಮೌಲ್ಯದ ಪಾಠ ವನ್ನು ತಿಳಿ ಹೇಳುವ ಪ್ರಯತ್ನ ಪ್ರತಿ ಮನೆಯಲ್ಲೂ  ನಡೆಯಬೇಕಾಗಿದೆ. ಹುಚ್ಚು ಆವೇಶಕ್ಕೆ ಬಿದ್ದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಡೆಯುವುದಕ್ಕೆ ಪ್ರತಿ ಮನೆಯೂ ಎಚ್ಚರಿಕೆಯ  ಹೆಜ್ಜೆ ಇಡಬೇಕಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಅಕ್ಷಯ್‌ನ ತಂದೆ ಎದೆ ಬಿರಿದು ಕಣ್ಣೀರು ಹಾಕುವ ವೀಡಿಯೋವನ್ನು ಸೋಶಿಯಲ್  ಮೀಡಿಯಾದಲ್ಲಿ ಅಸಂಖ್ಯ ಮಂದಿ ವೀಕ್ಷಿಸಿದ್ದಾರೆ. ನೋಡಿದ ಎಲ್ಲರ ಕಣ್ಣೂ ಒದ್ದೆಯಾಗಿದೆ. ಇದೀಗ ಉಡುಪಿಯ ನೂರ್ ಮುಹಮ್ಮದ್  ಅವರ ಸರದಿ. ತನ್ನ ಕುಟುಂಬದ ಎಲ್ಲರನ್ನೂ ಕಳಕೊಂಡು ಒಂಟಿಯಾದ ಅವರ ಸಂಕಟವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರು  ವಿದೇಶಕ್ಕೆ ಹೋಗಿರುವುದೇ ಪತ್ನಿ-ಮಕ್ಕಳನ್ನು ಸುಖವಾಗಿಡುವುದಕ್ಕೆ. ರಾತ್ರಿ-ಬೆಳಗಾಗುವುದರೊಳಗೆ ತನ್ನ ಇಡೀ ಪರಿವಾರವೇ ಹೊರಟು  ಹೋದರೆ ಆ ವ್ಯಕ್ತಿಗಾಗುವ ಆಘಾತ ಹೇಗಿರಬಹುದು? ದ್ವೇಷದ ಹೆಸರಲ್ಲೋ  ಸೇಡಿನ ಹೆಸರಲ್ಲೋ  ತಲವಾರು-ಬಂದೂಕು ಎತ್ತಿಕೊಳ್ಳುವ  ಪ್ರತಿಯೊಬ್ಬರೂ ಈ ಕುರಿತಂತೆ ಅವಲೋಕಿಸಬೇಕು. ಹತ್ಯೆ ಯಾವುದಕ್ಕೂ ಪರಿಹಾರ ಅಲ್ಲ, ಅದು ಕುಟುಂಬವೊಂದರ ದೀರ್ಘ ಕಣ್ಣೀರ  ಬದುಕಿಗೆ ಆರಂಭ ಅಷ್ಟೇ.

Monday, 13 November 2023

ಬಿಜೆಪಿ ಮತ್ತು ಮಡಿಲ ಮಾಧ್ಯಮವನ್ನು ಬೆತ್ತಲೆ ಮಾಡಿದ ಡೊಮಿನಿಕ್ ಮಾರ್ಟಿನ್

 





ಕೇರಳ ಬಾಂಬ್ ಸ್ಫೋಟದ ಆರೋಪಿಯನ್ನು ಘಟನೆ ನಡೆದ 7 ಗಂಟೆಗಳ ಒಳಗೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿ  ಸಮೀಪದ ಕಳಮಶ್ಶೇರಿಯ ಕನ್ವೆನ್ಶನ್ ಸೆಂಟರ್‌ನಲ್ಲಿ ಬಾಂಬ್ ಸ್ಫೋಟ ನಡೆದಾಗ ಸಮಯ ಸುಮಾರು ಬೆಳಗ್ಗಿನ 9 ಗಂಟೆ. ಆರೋಪಿ  ಡೊಮಿನಿಕ್ ಮಾರ್ಟಿನ್ ಎಂಬವನನ್ನು ಬಂಧಿಸಿದ್ದೇವೆ ಎಂದು ಕೇರಳ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಮಾಧ್ಯಮಗಳ ಮುಂದೆ  ಘೋಷಿಸುವಾಗ ಸಮಯ ಸಂಜೆ 4 ಗಂಟೆ 15 ನಿಮಿಷ. ಆದರೆ, ಈ 9ರಿಂದ ನಾಲ್ಕೂ ಕಾಲು ಗಂಟೆಯ ಈ ಸಣ್ಣ ಅವಧಿಯ ಒಳಗೆ  ಮಾಧ್ಯಮಗಳು, ಸೋಶಿಯಲ್ ಮೀಡಿಯಾ ಬಳಕೆದಾರರು ಮತ್ತು ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವುದಕ್ಕೆ ಹರಡಿದ  ಸುಳ್ಳುಗಳು ಮಾತ್ರ ಭಯಾನಕವಾಗಿತ್ತು. ಈ ಸ್ಫೋಟದ ಹಿಂದೆ ಮುಸ್ಲಿಮರಿದ್ದಾರೆ ಎಂದು ನೇರವಾಗಿಯೋ ಪರೋಕ್ಷವಾಗಿಯೋ  ನಂಬಿಸಲು ಅವರೆಲ್ಲ ಯತ್ನಿಸಿದರು. ಕೇರಳ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸಂದೀಪ್ ಜಿ. ವಾರಿಯರ್ ಅಂತೂ ‘ಯಹೋವನ ಸಾಕ್ಷಿ’  ಎಂಬ ಪಂಥವನ್ನು ಯಹೂದಿಗಳ ಗುಂಪು ಎಂದೇ ಕರೆದರು. ‘ಯಹೂದಿಗಳ ಪವಿತ್ರ ಗ್ರಂಥವಾದ ತೋರಾವನ್ನೇ ಈ ಯಹೋವನ  ಸಾಕ್ಷಿಗಳೂ ಅನುಸರಿಸುತ್ತಾರೆ, ಇವರಿಬ್ಬರೂ ಒಂದೇ ದೈವಿಕ ಗ್ರಂಥದ ಅನುಯಾಯಿಗಳು, ಹಮಾಸನ್ನು ಸಮರ್ಥಿಸಿದ ಸಿಪಿಎಂ ಮತ್ತು  ಕಾಂಗ್ರೆಸ್‌ಗಳು ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ವಹಿಸಿಕೊಳ್ಳಬೇಕು..’ ಎಂದು ಹೇಳಿದರು. ಅಂದರೆ,

ಹಮಾಸ್ ಮೇಲೆ ಇಸ್ರೇಲ್ ಸಾರಿರುವ ಯುದ್ಧಕ್ಕೆ ಆಕ್ರೋಶಗೊಂಡ ಮುಸ್ಲಿಮರು ಯಹೂದಿಯರದ್ದೇ  ಪಂಗಡವಾದ ಯಹೋವನ  ಸಾಕ್ಷಿಗಳ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎಂದೇ ಇದರರ್ಥ. ಇದೇ ಭಾವದ ಹೇಳಿಕೆಯನ್ನು ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರ್ ಕೂಡಾ ನೀಡಿದರು-
‘ಕೇರಳವನ್ನು ಲವ್ ಜಿಹಾದ್ ನಾಡನ್ನಾಗಿಸಲು ಹಾಗೂ ದ್ವೇಷವನ್ನು ಹಬ್ಬಿಸಲು ಭಯೋತ್ಪಾದಕ ಹಮಾಸ್  ಸಂಘಟನೆಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್-ಸಿಪಿಎಂ, ಯುಪಿಎ ಮೈತ್ರಿಕೂಟದ ಲಜ್ಜೆಗೆಟ್ಟ ತುಷ್ಠೀಕರಣ ರಾಜಕೀಯಕ್ಕೆ  ನಾಚಿಕೆಯಾಗಬೇಕು..’ ಎಂದವರು ಟ್ವೀಟ್ ಮಾಡಿದರು. ಈ ಟ್ವೀಟ್‌ನ ಟಾರ್ಗೆಟ್ ಕೂಡಾ ಮುಸ್ಲಿಮರೇ. ಬಿಜೆಪಿಯ ಇನ್ನೋರ್ವ  ನಾಯಕ ಮತ್ತು ಅದಕ್ಕಿಂತಲೂ ಮುಖ್ಯವಾಗಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಂತೂ ಇವರಿಗಿಂತಲೂ ಒಂದು ಹೆಜ್ಜೆ  ಮುಂದಿಟ್ಟರು-
 `ಕಾಂಗ್ರೆಸ್ ಮತ್ತು ಸಿಪಿಎಂನಿಂದ  ದಶಕಗಳ ಕಾಲದ ಓಲೈಕೆ ಮತಬ್ಯಾಂಕ್ ರಾಜಕಾರಣವು ಮುಸ್ಲಿಮರನ್ನು  ಅವಿದ್ಯಾವಂತರನ್ನಾಗಿ, ಹಿಂದುಳಿದವರನ್ನಾಗಿ ಮತ್ತು ಅಪರಾಧಿಗಳನ್ನಾಗಿ ಮಾಡಿದೆ, ಅದರಿಂದಾಗಿ ಭಯೋತ್ಪಾದನೆಯನ್ನು ನಾವು ಮನೆಬಾಗಿಲಿಗೆ ಆಹ್ವಾನಿಸಿದ್ದೇವೆ, ಈ ಜನರು ಮುಖ್ಯವಾಹಿನಿಗೆ ಬರಲು ಯಾವಾಗ ಯೋಚಿಸುತ್ತಾರೆ..’ ಎಂದು ಟ್ವೀಟ್ ಮಾಡಿದರು. ಈ  ಟ್ವೀಟ್‌ನ ಗುರಿ ಕೂಡಾ ಮುಸ್ಲಿಮರೇ. ಮುಸ್ಲಿಮರು ಅವಿದ್ಯಾವಂತರಾಗಿದ್ದು, ಆ ಕಾರಣದಿಂದ ಅಪರಾಧಿಗಳಾಗುತ್ತಿದ್ದಾರೆ ಮತ್ತು  ಭಯೋತ್ಪಾದನೆ ಯಲ್ಲಿ ಭಾಗಿಯಾಗುತ್ತಿದ್ದಾರೆ ಎಂಬರ್ಥವನ್ನೇ ಈ ಟ್ವೀಟ್ ಧ್ವನಿಸುತ್ತದೆ. ಇವೆಲ್ಲಕ್ಕೂ ಕಲಶ ಇಟ್ಟಂತೆ ಕನ್ನಡದ ಪವರ್ ಟಿವಿ  ಸುದ್ದಿ ಪ್ರಕಟಿಸಿತು, ‘ಬಾಂಬ್ ಸ್ಫೋಟದ ಆರೋಪಿ ಪೊಲೀಸರಿಗೆ ಶರಣು’ ಎಂಬ ಶೀರ್ಷಿಕೆಯ ಸುದ್ದಿಯನ್ನು ಮುಸ್ಲಿಮನ  ಫೋಟೋದೊಂದಿಗೆ ಅದು ಪ್ರಕಟಿಸಿತು. ಇಷ್ಟೇ ಅಲ್ಲ,

ಈ ಸ್ಫೋಟ ನಡೆದ ಬೆನ್ನಿಗೇ ಸೋಷಿಯಲ್ ಮೀಡಿಯಾವಂತೂ ಸುಳ್ಳುಗಳನ್ನೇ ಹೊತ್ತುಕೊಂಡು ಮನಬಂದಂತೆ ತಿರುಗಾಡಿತು.  ‘ಯಹೋವನ ಸಾಕ್ಷಿಗಳು’ ಎಂಬ ಪಂಥವನ್ನು ಅದು ಯಹೂದಿಗಳೆಂದೇ ಬಿಂಬಿಸಿತು. ಯಹೂದಿಗಳನ್ನೇ ಗುರಿ ಮಾಡಿ ಬಾಂಬ್  ಸ್ಫೋಟಿಸಲಾಗಿದೆ ಎಂಬಂತೆ  ಆಡಿಕೊಂಡಿತು. ಈ ಸ್ಫೋಟಕ್ಕಿಂತ ಮೊದಲು ಕೇರಳದಲ್ಲಿ ನಡೆದ ಫೆಲೆಸ್ತೀನ್ ಪರ ರ‍್ಯಾಲಿಗಳನ್ನು ಎತ್ತಿ  ಹೇಳುತ್ತಾ, ಈ ಸ್ಫೋಟಕ್ಕೂ ಈ ರ‍್ಯಾಲಿಗೂ ನಡುವೆ ಸಂಬಂಧವನ್ನು ಕಲ್ಪಿಸಿತು. ನಿಜವಾಗಿ,

ಬಾಂಬ್ ಸ್ಫೋಟಗೊಂಡ ಕಳಮಶ್ಶೇರಿಯಲ್ಲಿ ಯಹೂದಿಗಳೇ ಇಲ್ಲ. ಕೇರಳದಲ್ಲಿ ಒಟ್ಟು 15ರಿಂದ 20ರಷ್ಟು ಯಹೂದಿಗಳಿದ್ದಾರೆ ಎಂದು  ಅಂಕಿ-ಅಂಶ  ಹೇಳುತ್ತದೆ. ಫ್ಯೂ ರಿಸರ್ಚ್ ಸೆಂಟರ್ 2021ರಲ್ಲಿ ಪ್ರಕಟಿಸಿದ ವರದಿ ಪ್ರಕಾರ, ಭಾರತದಲ್ಲಿ ಹೆಚ್ಚೆಂದರೆ 3ರಿಂದ 4 ಸಾವಿರ  ಯಹೂದಿ ಮತ್ತು ಬಹಾಯಿ ಸಮುದಾಯದವರಿದ್ದಾರೆ. ಕೇರಳದಲ್ಲಿ ಹಿಂದೂಗಳ ಸಂಖ್ಯೆ 54% ಇದ್ದರೆ, ಮುಸ್ಲಿಮರು 22% ಮತ್ತು  ಕ್ರೈಸ್ತರು 18% ಇದ್ದಾರೆ. ಈ ಯಹೋವನ ಸಾಕ್ಷಿಗಳು ಎಂಬುದು ಕ್ರೈಸ್ತರದ್ದೇ  ಒಂದು ಬಂಡಾಯ ಪಂಥ. ಈ ಗುಂಪು ಕ್ರೈಸ್ತರ ತ್ರಿ  ಏಕತ್ವವನ್ನು ಒಪ್ಪುವುದಿಲ್ಲ. ಇವರು ಯಹೋವನನ್ನು ನಿಜವಾದ ಸೃಷ್ಟಿಕರ್ತ ಎಂದು ವಾದಿಸುತ್ತಾರೆ ಮತ್ತು ಈ ಯಹೋವನು ಪ್ರವಾದಿ  ಇಬ್ರಾಹೀಮ್, ಮೂಸಾ ಮತ್ತು ಈಸಾರ ದೇವ ಎಂದು ಹೇಳುತ್ತಾರೆ. ಹಾಗೆಯೇ, ಇವರ ವೆಬ್‌ಸೈಟ್ ಮಾಹಿತಿಯ ಆಧಾರದಲ್ಲಿ  ಹೇಳುವುದಾದರೆ, ಇವರು ಝಿಯೋನಿಝಮ್ ಅನ್ನು ಒಂದು ಧರ್ಮ ಎಂದು ಒಪ್ಪುವುದಿಲ್ಲ ಮತ್ತು ರಾಜಕೀಯ ಝಿಯೋನಿಝಮ್  ಬಗ್ಗೆ ತಟಸ್ಥ ನಿಲುವನ್ನು ಹೊಂದಿದ್ದಾರೆ. ಆದರೆ, ಈ ಎಲ್ಲ ಸತ್ಯವನ್ನು ಅಡಗಿಸಿಟ್ಟು ಬಿಜೆಪಿ ನಾಯಕರು, ಮಾಧ್ಯಮ ಮತ್ತು ಸೋಶಿಯಲ್  ಮೀಡಿಯಾದ ಒಂದು ಗುಂಪು ಅತ್ಯಂತ ಅಮಾನವೀಯವಾದ ಪರಮ ಸುಳ್ಳನ್ನು ಹಂಚಿಕೊಂಡಿದೆ. ಆ ಮೂಲಕ ತಮ್ಮ ಮುಸ್ಲಿಮ್  ದ್ವೇಷವನ್ನು ಜಗಜ್ಜಾಹೀರುಗೊಳಿಸಿದೆ. ನಿಜವಾಗಿ,

ಈ ದೇಶದಲ್ಲಿ ಮುಸ್ಲಿಮ್ ದ್ವೇಷ ಎಂಬುದು ಒಂದೊಳ್ಳೆಯ ಸರಕು. ಪ್ರತಿನಿತ್ಯ ಈ ಸರಕನ್ನು ಮಾರುವ ಒಂದು ಗುಂಪು ಸೋಶಿಯಲ್  ಮೀಡಿಯಾದಲ್ಲಿ ಸಕ್ರಿಯವಾಗಿದೆ. ಮುಸ್ಲಿಮರನ್ನು ಖಳರಂತೆ ಬಿಂಬಿಸುವುದೇ ಈ ಗುಂಪಿನ ಪರಮ ಉದ್ದೇಶ. ಇದೇ ಗುಂಪು ಇದೇ  ಕೇರಳದ ವೀಡಿಯೋವೊಂದನ್ನು ವಾರದ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಮುಸ್ಲಿಮ್ ವಿದ್ಯಾರ್ಥಿನಿಯರು  ಓರ್ವ ಹಿಂದೂ ಮಹಿಳೆಯೊಂದಿಗೆ ವಾಗ್ವಾದ ನಡೆಸುವ ವೀಡಿಯೋ. ಬುರ್ಖಾ ಧರಿಸಿರದ ಕಾರಣಕ್ಕಾಗಿ ಹಿಂದೂ ಮಹಿಳೆಯನ್ನು  ಬಸ್ಸಿನಿಂದ ಕೆಳಗಿಳಿಸಿದ ಮುಸ್ಲಿಮ್ ವಿದ್ಯಾರ್ಥಿನಿಯರು ಎಂಬ ಒಕ್ಕಣೆಯೊಂದಿಗೆ ಈ ವೀಡಿಯೋವನ್ನು ಟ್ವೀಟರ್(ಎಕ್ಸ್)ನಲ್ಲಿ ವ್ಯಾಪಕವಾಗಿ  ಹಂಚಿಕೊಳ್ಳಲಾಗಿತ್ತು. ಉತ್ತರ ಭಾರತವೂ ಸೇರಿದಂತೆ ವಿದೇಶದಲ್ಲೂ ಈ ವೀಡಿಯೋ ಭಾರೀ ಪ್ರಚಾರವನ್ನು ಪಡೆಯಿತು. ‘ಪಶ್ಚಿಮ  ಕೇರಳದಲ್ಲಿ ಬುರ್ಖಾ ಧರಿಸದೇ ಬಸ್ಸಿನಲ್ಲಿ ಪ್ರಯಾಣಿಸಲೂ ಸಾಧ್ಯವಿಲ್ಲ..’ ಎಂದು ಈ ವೀಡಿಯೋ ಹಂಚಿಕೊಂಡ ಬಿಜೆಪಿಯ ರಾಷ್ಟ್ರೀಯ  ಕಾರ್ಯದರ್ಶಿ ಅನಿಲ್ ಆ್ಯಂಟನಿ ಟ್ವೀಟ್ ಮಾಡಿದ್ದರು. ಆದರೆ, ಈ ವೀಡಿಯೋದ ಕುರಿತಂತೆ ಅಕ್ಟೋಬರ್ 28ರಂದು ಇಂಡಿಯಾ ಟುಡೇ  ಪತ್ರಿಕೆಯು ಸತ್ಯಶೋಧನಾ ವರದಿಯನ್ನು ಪ್ರಕಟಿಸುವ ಮೂಲಕ ಸುಳ್ಳಿಗೆ ಬಲವಾದ ಏಟು ಕೊಟ್ಟಿತು. ನಿಜವಾಗಿ, ಆ ವೀಡಿಯೋಕ್ಕೂ  ಧರ್ಮಕ್ಕೂ ಸಂಬಂಧವೇ ಇರಲಿಲ್ಲ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾಕ್ಕೆ ಹೋಗುತ್ತಿದ್ದ ಬಸ್ಸಿನೊಳಗೆ ಅಕ್ಟೋಬರ್ 20ರಂದು ಆ  ಘಟನೆ ನಡೆದಿತ್ತು.

ಕುಂಬಳೆಯ ಖನ್ಸಾ ವಿಮೆನ್ಸ್ ಕಾಲೇಜಿನ ವಿದ್ಯಾರ್ಥಿನಿಯರು ಬಸ್ಸನ್ನು ತಡೆದು ಹತ್ತಿದ್ದರು. ಕಾಲೇಜಿನ ಎದುರು ಬಸ್ ನಿಲುಗಡೆ ಇಲ್ಲದೇ  ಇರುವುದನ್ನು ಪ್ರತಿಭಟಿಸಿ ಅವರು ಬಸ್ ತಡೆದಿದ್ದರು. ವೀಡಿಯೋದಲ್ಲಿರುವ ಆಶಾ ಭಾಸ್ಕರ್ ಅನ್ನುವ ಮಹಿಳೆ ಕುಂಬಳೆಯಲ್ಲಿರುವ ಶಿಕ್ಷಣ  ಸಂಸ್ಥೆಯೊಂದರ ಅಧಿಕಾರಿಯಾಗಿದ್ದು, ಬಸ್ ತಡೆದುದನ್ನು ಪ್ರಶ್ನಿಸಿದ್ದಲ್ಲದೇ, ಬಸ್ ಪರ ವಾದಿಸಿದ್ದರು. ಇದು ವಿದ್ಯಾರ್ಥಿನಿಯರನ್ನು  ಕೆರಳಿಸಿತ್ತು. ಅಲ್ಲದೇ, ಬಸ್ ಹತ್ತುವ ಗಡಿಬಿಡಿಯಲ್ಲಿ ವಿದ್ಯಾರ್ಥಿನಿಯರು ಅವರ ಪಾದಕ್ಕೂ ತುಳಿದಿದ್ದರು. ಈ ಹಿನ್ನೆಲೆಯಲ್ಲೇ  ಆ ವಾಗ್ವಾದ  ನಡೆದಿತ್ತು. ಧರ್ಮಕ್ಕೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಆಶಾ ಭಾಸ್ಕರ್ ಇಂಡಿಯಾ ಟುಡೇಯೊಂದಿಗೆ ಹೇಳಿದರು. ಇವೇ ಅಭಿಪ್ರಾಯವನ್ನು ಬಸ್‌ನ ಕಂಡೆಕ್ಟರ್ ಮನೋಜ್ ಕೂಡಾ ಹೇಳಿದರು. ಹಾಗೆಯೇ, ‘ಆ ವೀಡಿಯೋದ ಜೊತೆಗೆ ಹಂಚಿಕೊಳ್ಳುತ್ತಿರುವ  ಮಾಹಿತಿಗಳು ಸಂಪೂರ್ಣ ಸುಳ್ಳಿನಿಂದ ಕೂಡಿದೆ’ ಎಂದು ಕುಂಬಳೆ ಪೊಲೀಸ್ ಠಾಣೆಯ ಮುಖ್ಯಾಧಿಕಾರಿ ಅನೂಪ್ ಕುಮಾರ್ ಕೂಡಾ  ಹೇಳಿದರು. ಖನ್ಸಾ ಕಾಲೇಜಿನ ಮುಂಭಾಗ ಬಸ್ ನಿಲ್ಲಿಸಬೇಕೆಂದು ಕಾಲೇಜು ಆಗ್ರಹಿಸುತ್ತಿದ್ದು, ಆರ್.ಟಿ.ಓ. ಅಧಿಕಾರಿಗಳು ಇನ್ನೂ ಅದಕ್ಕೆ  ಅನುಮತಿಸಿಲ್ಲ ಎಂದವರು ಹೇಳಿದರಲ್ಲದೇ, ವೀಡಿಯೋದಲ್ಲಿರುವ ಮಹಿಳೆ ಯಾವ ದೂರನ್ನೂ ಕೊಟ್ಟಿಲ್ಲ ಎಂದೂ ಹೇಳಿದರು. ಈ ಎಲ್ಲ  ಮಾಹಿತಿಯನ್ನು ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ವರದಿಯಲ್ಲಿ ವಿಸ್ತೃತವಾಗಿ  ವಿವರಿಸಲಾಗಿದೆ. ಅಂದಹಾಗೆ,

ಸುಳ್ಳು ಧರ್ಮವಿರೋಧಿ. ಆದರೆ, ಧರ್ಮ ರಕ್ಷಣೆ ಮಾಡುತ್ತೇವೆ ಎಂದು ಘೋಷಿಸುತ್ತಾ ತಿರುಗುವ ಗುಂಪು ಮತ್ತು ರಾಜಕೀಯ  ಪಕ್ಷವೊಂದು ತಮ್ಮ ಉದ್ದೇಶ ಸಾಧನೆಗಾಗಿ ಸುಳ್ಳನ್ನೇ ಆಶ್ರಯಿಸಿದೆ. ಇದು ಅತ್ಯಂತ ಆಘಾತಕಾರಿ ಮತ್ತು ವಿಡಂಬನಾತ್ಮಕ. ನಿಜವಾಗಿ,  ಮುಸ್ಲಿಮ್ ದ್ವೇಷವನ್ನೇ ಹಿಂದೂ ಧರ್ಮ ರಕ್ಷಣೆ ಎಂದು ನಂಬಿರುವ ಈ ಗುಂಪಿನಿಂದಲೇ ಹಿಂದೂ ಧರ್ಮಕ್ಕೆ ಅಪಾಯ ಇದೆ. ಧರ್ಮ  ಎಂಬ ಸತ್ಯಕ್ಕೆ ಸುಳ್ಳು ಎಂಬ ಅಧರ್ಮ ಎಂದೂ ಉತ್ತರ ಅಲ್ಲ, ಪರ್ಯಾಯವೂ ಅಲ್ಲ.

Monday, 30 October 2023

ಧರ್ಮದ್ವೇಷದ ಕಾರ್ಖಾನೆಯಲ್ಲಿ ಉತ್ಪಾದನೆಯಾಗುತ್ತಿರುವ ಸುಳ್ಳುಗಳು

 



ಕಳೆದವಾರ ಎರಡು ಸುದ್ದಿಗಳು ಸದ್ದು ಮಾಡಿದುವು. 

1. ಕೇರಳದ ಕೋಝಿಕೋಡ್‌ನಲ್ಲಿ ಫೆಲೆಸ್ತೀನ್ ಪರ ಮಾಡಲಾದ ರ‍್ಯಾಲಿ.
 2.  ಮಂದಿರದ ಅರ್ಚಕರಿಗೆ ಬ್ಯಾಟ್‌ನಿಂದ ಥಳಿಸಲಾದ ಘಟನೆ.

ಈ ಎರಡೂ ಘಟನೆಗಳಿಗೆ ಸಂಬಂಧಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಂಚಿಕೆಯಾದುವು. ಟ್ವೀಟರ್,  ಫೇಸ್‌ಬುಕ್ ಮತ್ತು ವಾಟ್ಸಪ್‌ಗಳಲ್ಲಿ ಈ ವೀಡಿಯೋಗಳನ್ನು ಅದಕ್ಕೆ ನೀಡಲಾದ ಒಕ್ಕಣೆಯೊಂದಿಗೆ ಅಸಂಖ್ಯ ಮಂದಿ ಹಂಚಿಕೊಂಡರು.  ಮುಸ್ಲಿಮ್ ವಿರೋಧಿ ಮತ್ತು ಧರ್ಮದ್ವೇಷವನ್ನು ಕೆರಳಿಸುವುದಕ್ಕೆ ಈ ಎರಡೂ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ  ಅಸಂಖ್ಯ ಮಂದಿ ಬಳಸಿಕೊಂಡರು. ನಿಜವಾಗಿ,

 ಈ ಎರಡೂ ವೀಡಿಯೋಗಳು ಮುಸ್ಲಿಮರಿಗೆ ಸಂಬಂಧಿಸಿದ್ದೇ  ಆಗಿರಲಿಲ್ಲ. ಫೆಲೆಸ್ತೀನ್  ಪರ ಕೋಝಿಕ್ಕೋಡ್‌ನಲ್ಲಿ ರ‍್ಯಾಲಿ ನಡೆಸಿದ್ದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಎಂಬ ರಾಜಕೀಯ ಪಕ್ಷ. ಎಸ್.ಕ್ಯು.ಆರ್. ಇಲ್ಯಾಸ್  ಇದರ ರಾಷ್ಟ್ರೀಯ ಅಧ್ಯಕ್ಷರಾದರೆ, ರವಿಶಂಕರ್ ತ್ರಿಪಾಠಿ ರಾಷ್ಟ್ರೀಯ ಉಪಾಧ್ಯಕ್ಷ. ಕೇರಳ ಘಟಕದ ಅಧ್ಯಕ್ಷರಾಗಿ ರಝಾಕ್ ಮಲೇರಿ  ಎಂಬವರು ಕಾರ್ಯನಿರ್ವಹಿಸುತ್ತಿದ್ದರೆ, ಸುರೇಂದ್ರನ್ ಕರಿಪುಝ ಎಂಬವರು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಉಷಾ ಕುಮಾರಿ,  ಜ್ಯೋತಿವ್ಯಾಸ್, ಗಣೇಶ್, ಪ್ರೇಮ ಮುಂತಾದವರು ಕಾರ್ಯದರ್ಶಿಗಳಾಗಿ ಸಕ್ರಿಯವಾಗಿದ್ದಾರೆ. ಜಾನ್ ಉಪಾಧ್ಯಕ್ಷರಾಗಿದ್ದಾರೆ. ಹಾಗೆಯೇ,  ಖ್ಯಾತ ಸಾಹಿತ ಬಿ.ಟಿ. ಲಲಿತಾ ನಾಯಿಕ್ ಅವರು ಈ ಮೊದಲು ಕರ್ನಾಟಕ ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದರು. ಆದರೆ,

ಈ ಎಲ್ಲವನ್ನೂ ಅಡಗಿಸಿಟ್ಟು ಈ ರಾಷ್ಟ್ರೀಯ ಪಕ್ಷದ ವಿರುದ್ಧವೇ ಸುಳ್ಳುಗಳನ್ನು ಹರಡಲಾಯಿತು. ಈ ಸುಳ್ಳಿಗೆ ಚಾಲನೆ ನೀಡಿದ್ದು ಬಿಜೆಪಿ  ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತೇಜಿಂದರ್ ಪಾಲ್ ಬಗ್ಗಾ. ಕೇರಳದಲ್ಲಿ ಹಮಾಸ್ ಉಗ್ರರ ಪರ ರ‍್ಯಾಲಿ  ನಡೆಸಲಾಗಿದ್ದು, ಫೆಲೆಸ್ತೀನ್ ಧ್ವಜದ ಬದಲು ಇಟಲಿ ಧ್ವಜವನ್ನು ಪ್ರದರ್ಶಿಸಲಾಗಿದೆ ಎಂದು ಅವರು ಟ್ವೀಟರ್‌ನಲ್ಲಿ (ಎಕ್ಸ್)  ವೀಡಿಯೋವೊಂದನ್ನು ಹಂಚಿಕೊಂಡರು. ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಆ್ಯಂಟನಿಯಂತೂ  ಇದೇ ವೀಡಿಯೋಗೆ ಇನ್ನಷ್ಟು ಉ ಪ್ಪು-ಖಾರ ಸೇರಿಸಿ ಟ್ವೀಟ್ ಮಾಡಿದರು. ಕೇರಳದಲ್ಲಿ ಇಸ್ಲಾಮಿಕ್ ಮೂಲಭೂತವಾದ ಮತ್ತು ತೀವ್ರಗಾಮಿ ನಿಲುವು ಗಂಭೀರ ಹಂತದಲ್ಲಿದೆ ಎಂಬಂತೆ  ಬರೆದು ಬಗ್ಗಾ ಅವರದೇ ವೀಡಿಯೋವನ್ನು ಹಂಚಿಕೊಂಡಿದ್ದರು. ಇವರು ಕೇರಳದ ಕಾಂಗ್ರೆಸ್ ಮುಖಂಡ ಎ.ಕೆ.  ಆ್ಯಂಟನಿಯವರ ಮಗ. ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದರು. ಕೇರಳದವರಾದ ಇವರಿಗೆ ಕೇರಳದ ವೆಲ್‌ಫೇರ್  ಪಾರ್ಟಿಯ ಬಗ್ಗೆ ಮತ್ತು ಅದರ ಧ್ವಜದ ಬಗ್ಗೆ ತಿಳಿದಿಲ್ಲ ಎಂದು ಹೇಳುವಂತೆಯೂ ಇಲ್ಲ. ಆದರೂ ತೇಜಿಂದರ್ ಪಾಲ್ ಬಗ್ಗಾ ಹರಡಿದ  ಸುಳ್ಳನ್ನೇ ಇವರೂ ಹಿಂದು-ಮುಂದು  ನೋಡದೇ ಹಂಚಿಕೊಂಡರು. ನಿಜವಾಗಿ,

ಕೇರಳದಲ್ಲಿ ಹಮಾಸ್‌ನ ಪರ ಈ ರ‍್ಯಾಲಿ ನಡೆಸಲಾಗಿರಲಿಲ್ಲ ಮತ್ತು ಇಟಲಿಯ ಧ್ವಜವನ್ನೂ ಪ್ರದರ್ಶಿಸಲಾಗಿರಲಿಲ್ಲ. ಇಟಲಿ ಮತ್ತು ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾದ ಧ್ವಜದ ನಡುವೆ ವ್ಯತ್ಯಾಸ ಇದೆ. ನೀಲಿ, ಬಿಳಿ ಮತ್ತು ಕೆಂಪು ಬಣ್ಣವು ಎರಡೂ ಧ್ವಜಗಳಲ್ಲಿದ್ದರೂ  ವೆಲ್‌ಫೇರ್ ಪಾರ್ಟಿಯ ಧ್ವಜದ ಮಧ್ಯಭಾಗದಲ್ಲಿರುವ ಬಿಳಿ ಬಣ್ಣದಲ್ಲಿ ಎರಡು ತೆನೆಗಳ ಚಿತ್ರ ಇದೆ. ಇಟಲಿಯ ರಾಷ್ಟ್ರೀಯ ಧ್ವಜದಲ್ಲಿ ಈ  ತೆನೆಗಳಿಲ್ಲ ಮತ್ತು ಅದರ ಮೂರೂ ಬಣ್ಣಗಳೂ ಸಮಪ್ರಮಾಣದಲ್ಲಿವೆ. ಆದರೆ, ಅನಿಲ್ ಆ್ಯಂಟನಿಯಾಗಲಿ ತೇಜಿಂದರ್ ಬಗ್ಗಾ ಆಗಲಿ  ಅಥವಾ ಇವರಿಬ್ಬರ ಟ್ವೀಟ್‌ಗಳನ್ನು ಹಂಚಿಕೊಂಡ ಅಸಂಖ್ಯಾತ ಬೆಂಬಲಿಗರಾಗಲಿ ಈ ವ್ಯತ್ಯಾಸವನ್ನು ಕಂಡೇ ಇಲ್ಲದಂತೆ ವರ್ತಿಸಿದ್ದಾರೆ.  ಮಾತ್ರವಲ್ಲ, ಫೆಲೆಸ್ತೀನ್ ಪರ ಮತ್ತು ಗಾಝಾದ ಸಂತ್ರಸ್ತರ ಪರ ರ‍್ಯಾಲಿ ಎಂದು ಬ್ಯಾನರ್‌ನಲ್ಲಿ ಸ್ಪಷ್ಟವಾಗಿ ಬರೆಯಲಾಗಿದ್ದರೂ ಹಮಾಸ್  ಉಗ್ರರ ಪರ ರ‍್ಯಾಲಿ ಎಂಬ ಸುಳ್ಳನ್ನು ಹರಡಿದ್ದಾರೆ. ಅನಿಲ್ ಆ್ಯಂಟನಿಗಂತೂ  ಇದು ಇಸ್ಲಾಮಿಕ್ ಮೂಲಭೂತವಾಗಿ ಕಂಡಿದೆ.  ರಾಜಕೀಯ ಪಕ್ಷವೊಂದು ಮಾಡಿದ ರ‍್ಯಾಲಿಯನ್ನು ಮುಸ್ಲಿಮರ ರ‍್ಯಾಲಿಯಂತೆ ಮತ್ತು ಉಗ್ರರ ಪರ ರ‍್ಯಾಲಿಯಂತೆ ಅತ್ಯಂತ ಯೋಜನಾಬದ್ಧವಾಗಿ ಸುಳ್ಳನ್ನು ಉತ್ಪಾದಿಸಿ ಹಂಚಲಾಗಿದೆ. ಅಂದಹಾಗೆ,

2020 ನವೆಂಬರ್ 3ರಂದು ಹರ್ಯಾಣದ ಫತೇಹಾಬಾದ್ ಜಿಲ್ಲೆಯ ಧಾಬಿಕಲಾನ್ ಗ್ರಾಮದಲ್ಲಿ ನಾಲ್ವರು ಯುವಕರು ಸೇರಿ ಅರ್ಚಕರಿಗೆ  ಬ್ಯಾಟ್‌ನಿಂದ ಥಳಿಸಿದ್ದರು. ಉತ್ತರ ಭಾರತದ ಪ್ರಮುಖ ಪತ್ರಿಕೆಗಳಾದ ದೈನಿಕ್ ಜಾಗರಣ್ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಗಳು ಈ ಬಗ್ಗೆ  ವರದಿಯನ್ನೂ ಮಾಡಿದ್ದುವು. ಮಠದ ಒಳಗೆ ಬ್ಯಾಟನ್ನು ಇರಿಸಲು ಒಪ್ಪದ ಅರ್ಚಕನ ವರ್ತನೆಗೆ ಸಿಟ್ಟಾದ ಅಮಿತ್, ಕೃಷ್ಣಾ, ಪ್ರದೀಪ್  ಮತ್ತು ರಾಕೇಶ್ ಎಂಬ ಯುವಕರು ಅರ್ಚಕರಿಗೆ ಥಳಿಸಿದ್ದು, ಇವರನ್ನು ಬಂಧಿಸಲಾಗಿದೆ ಎಂಬ ಮಾಹಿತಿಯೂ ಆ ವರದಿಯಲ್ಲಿತ್ತು.  ಖಬ್ರೆ ಅಬೀ ತಕ್ ಎಂಬ ಯುಟ್ಯೂಬ್ ಚಾನೆಲ್ ಈ ಕುರಿತಂತೆ ಇನ್ನಷ್ಟು ವಿವರಗಳನ್ನು ನೀಡಿತ್ತು. ಯುವತಿಯೊಂದಿಗೆ ದೂರವಾಣಿಯಲ್ಲಿ  ಅಸಭ್ಯವಾಗಿ ಮಾತಾಡಿದ ಕಾರಣಕ್ಕಾಗಿ ಅವರನ್ನು ಥಳಿಸಲಾಗಿದೆ ಎಂದು ಅದು ಹೇಳಿತ್ತು. ಇವು ಏನೇ ಇದ್ದರೂ ಈ ಘಟನೆಗೂ  ಮುಸ್ಲಿಮರಿಗೂ ಯಾವ ಸಂಬಂಧವೂ ಇಲ್ಲ. ಆದರೆ, 

ಕಳೆದವಾರ ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ  ಹಂಚಿಕೆಯಾಯಿತು. ಮಂದಿರದ ಅರ್ಚಕನನ್ನು ಥಳಿಸುತ್ತಿರುವ ಮುಸ್ಲಿಮ್ ಮತಾಂಧರು ಎಂಬ ಒಕ್ಕಣೆಯೊಂದಿಗೆ ಅಸಂಖ್ಯ ಮಂದಿ  ವೀಡಿಯೋ ಹಂಚಿಕೊಂಡರು. ಭಾರತೀಯ ಯುವ ಮೋರ್ಚಾದ ಸೋಶಿಯಲ್ ಮೀಡಿಯಾದ ದೆಹಲಿ ಸಹಸಂಯೋಜಕಿ ಆಕಾಂಕ್ಷಾ  ಈ ವೀಡಿಯೋವನ್ನು ಟ್ವೀಟ್ ಮಾಡಿದರು. ಆ ಬಳಿಕ ಸಾವಿರಾರು ಮಂದಿ ಇದನ್ನು ಮರುಟ್ವೀಟ್ ಮಾಡಿದರು. ನಿಜವಾಗಿ,

ಸುಳ್ಳು ಹೇಳುವುದು ಮತ್ತು ಸುಳ್ಳು ಹರಡುವುದನ್ನು ಧರ್ಮಗಳು ಅಪರಾಧವಾಗಿ ಕಾಣುತ್ತವೆ. ಆದರೆ, ಧರ್ಮವನ್ನು ರಕ್ಷಿಸುತ್ತೇವೆ ಎಂದು  ಹೇಳುವವರು ಸುಳ್ಳನ್ನೇ ಆಶ್ರಯಿಸಿಕೊಂಡಿದ್ದಾರೆ. ಈ ದೇಶದಲ್ಲಿ ಪ್ರತಿದಿನ ಅಸಂಖ್ಯ ಸುಳ್ಳುಗಳನ್ನು ಉತ್ಪಾದಿಸಲಾಗುತ್ತದೆ. ಬಳಿಕ ಅದನ್ನು  ವಿವಿಧ ಸೋಶಿಯಲ್ ಮೀಡಿಯಾಗಳ ಮೂಲಕ ಹಂಚಲಾಗುತ್ತದೆ. ಹೀಗೆ ಉತ್ಪಾದನೆಯಾಗುವ ಸುಳ್ಳುಗಳಲ್ಲಿ 99% ಸುಳ್ಳುಗಳು ಕೂಡ  ಮುಸ್ಲಿಮ್ ದ್ವೇಷವನ್ನೇ ಕಾರುವಂಥವು. ಹಿಂದೂ-ಮುಸ್ಲಿಮ್ ವಿಭಜನೆಯನ್ನೇ ಗುರಿಯಾಗಿಸಿಕೊಂಡು ಉತ್ಪಾದನೆಯಾಗುವ ಸುಳ್ಳುಗಳನ್ನು  ಧರ್ಮರಕ್ಷಣೆಯ ಭ್ರಮೆಯಲ್ಲಿರುವವರು ಸತ್ಯವೆಂದೇ ನಂಬಿಕೊಂಡು ಹಂಚಿಕೊಳ್ಳುತ್ತಿದ್ದಾರೆ. ಮುಸ್ಲಿಮರನ್ನು ಮತಾಂಧರು, ಉಗ್ರರು,  ಹಿಂದೂ ಧರ್ಮ ದ್ವೇಷಿಗಳು ಎಂದೆಲ್ಲ ಬಿಂಬಿಸುವುದೇ ಹೆಚ್ಚಿನೆಲ್ಲ ವೀಡಿಯೋ, ಆಡಿಯೋ ಮತ್ತು ಸುದ್ದಿಗಳ ಉದ್ದೇಶ. ಅಷ್ಟಕ್ಕೂ,

ಯಾವುದೇ ಸುಳ್ಳು ಸುದ್ದಿಯನ್ನು ಉತ್ಪಾದನೆ ಮಾಡುವುದು ಸುಲಭ. ಆದರೆ ಅದನ್ನು ಪತ್ತೆ ಹಚ್ಚುವುದು ಸುಲಭ ಅಲ್ಲ. ಅದಕ್ಕೆ ಒಂದಷ್ಟು  ಶ್ರಮ ಬೇಕಾಗುತ್ತದೆ. ಎಲ್ಲರಿಗೂ ಸತ್ಯಶೋಧನೆ ಮಾಡುವುದಕ್ಕೂ ಬರುವುದಿಲ್ಲ. ಯಾರಾದರೂ ಶ್ರಮಪಟ್ಟು ಸತ್ಯಶೋಧನೆ ಮಾಡಿದರೂ  ಆ ವೇಳೆಗಾಗಲೇ ಸುಳ್ಳು ತಲುಪಬೇಕಾದಲ್ಲೆಲ್ಲ ತಲುಪಿರುತ್ತದೆ. ಆ ಬಳಿಕ ಹಂಚಿಕೆಯಾಗುವ ಈ ಸತ್ಯಸುದ್ದಿಯು ಈ ಮೊದಲಿನ ಸುಳ್ಳು  ಸುದ್ದಿ ತಲುಪಿದವರಿಗೆಲ್ಲ ತಲುಪುತ್ತದೆ ಎಂದು ಹೇಳುವುದಕ್ಕೂ ಬರುವುದಿಲ್ಲ. ದ್ವೇಷ ಮತ್ತು ನಕಾರಾತ್ಮಕ ಸುದ್ದಿಗಿರುವ ಮಾರುಕಟ್ಟೆ ಪ್ರೀತಿ  ಮತ್ತು ಸಕಾರಾತ್ಮಕ ಸುದ್ದಿಗೆ ಇರುವುದಿಲ್ಲ ವಾದ್ದರಿಂದ ಇಂಥ ಸತ್ಯಶೋಧಿತ ಸುದ್ದಿಗಳನ್ನು ಹಂಚಿಕೊಳ್ಳುವವರೂ ಕಡಿಮೆ. ಅಲ್ಲದೇ, ಸುದ್ದಿಯೊಂದರ ಮೂಲವನ್ನು ಹುಡುಕುತ್ತಾ ಸತ್ಯವೋ ಸುಳ್ಳೋ ಎಂಬುದನ್ನು ಪತ್ತೆ ಹಚ್ಚುವವರ ಸಂಖ್ಯೆಗೆ ಹೋಲಿಸಿದರೆ ಸುಳ್ಳು ಉತ್ಪಾದಿಸುವವರ ಸಂಖ್ಯೆ ಎಷ್ಟೋ ಸಾವಿರ ಪಟ್ಟು ಅಧಿಕವಿದೆ. ಆದ್ದರಿಂದ, ಒಂದು ಸುದ್ದಿಯ ಮೂಲವನ್ನು ಹುಡುಕುವಾಗ ಅಸಂಖ್ಯ ಸುಳ್ಳು  ಸುದ್ದಿಗಳು ಉತ್ಪಾದನೆಯಾಗಿ ಮಾರುಕಟ್ಟೆಗೆ ಹಂಚಿಕೆಯಾಗುತ್ತಿರುತ್ತದೆ. ಇವನ್ನೆಲ್ಲ ಪತ್ತೆ ಹಚ್ಚುವುದು ಅಸಾಧ್ಯ ಅನ್ನುವಷ್ಟು ಕಷ್ಟ. ಆದ್ದರಿಂದ,

ಸರಕಾರ ಮನಸ್ಸು ಮಾಡದ ಹೊರತು ಸುಳ್ಳು ಸುದ್ದಿಗಳ ನಿಯಂತ್ರಣ ಸಾಧ್ಯವಿಲ್ಲ. ದುರಂತ ಏನೆಂದರೆ, ಇವತ್ತು ಪ್ರಭುತ್ವವೇ ಈ  ಸುಳ್ಳುಗಳನ್ನು ಆಶ್ರಯಿಸಿಕೊಂಡಿದೆ. ಸುಳ್ಳು ಹರಡುವವರಲ್ಲಿ ಪ್ರಭುತ್ವವನ್ನು ಬೆಂಬಲಿಸುವ ಮುಖಂಡರು, ಕಾರ್ಯಕರ್ತರು ಮತ್ತು  ಹೊಣೆಗಾರರೇ ಅಧಿಕವಿದ್ದಾರೆ. ವೆಲ್‌ಫೇರ್ ಪಾರ್ಟಿಯ ರ‍್ಯಾಲಿ ಮತ್ತು ಹರ್ಯಾಣದ ಅರ್ಚಕರ ಥಳಿತದ ವೀಡಿಯೋಗಳನ್ನು ಸುಳ್ಳು  ಒಕ್ಕಣೆಗಳೊಂದಿಗೆ ಪ್ರಭುತ್ವದ ಹೊಣೆಗಾರರೇ ಹಂಚಿಕೊಂಡಿರುವುದು ಇದಕ್ಕೆ ಅತೀ ಪ್ರಬಲ ಉದಾಹರಣೆ. ಅಂದಹಾಗೆ, ಧರ್ಮವೇ  ಖಂಡಿಸುವ ಸುಳ್ಳನ್ನು ಧರ್ಮ ರಕ್ಷಣೆಗೆಂದು ಉತ್ಪಾದಿಸುವವರಿರುವ ದೇಶದಲ್ಲಿ ಸುಳ್ಳು ರಾಜಗಾಂಭೀರ್ಯದಿಂದ ಸುತ್ತುವುದರಲ್ಲಿ ಆಶ್ಚರ್ಯವೂ ಇಲ್ಲ.