Saturday, 3 February 2024

ಅಪರಾಧಿಗಳು ಮತ್ತು ಪ್ರಭುತ್ವದ ಅನೈತಿಕ ನಂಟಿನ ಅನಾವರಣ




`ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಜೈಲಿನಿಂದ ಹೊರಗಿರುವುದಕ್ಕೆ ಅನರ್ಹರು' ಎಂದು ಸುಪ್ರೀಮ್ ಕೋರ್ಟು ತೀರ್ಪು  ನೀಡುತ್ತಿದ್ದ ಹೊತ್ತಿನಲ್ಲೇ, 20 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಬಿಡುಗಡೆಯ ಭಾಗ್ಯ  ಸಿಕ್ಕಿದೆ. ಈತ ಸ್ವಘೋಷಿತ ಧಾರ್ಮಿಕ ನಾಯಕ. ದೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ. ಬಿಜೆಪಿಯೊಂದಿಗೆ ನಿಕಟ ಸಂಬಂಧ ಇರುವ  ವ್ಯಕ್ತಿಯಾಗಿಯೂ ಗುರುತಿಸಿಕೊಂಡಿದ್ದಾನೆ. ತನ್ನ ಆಶ್ರಮದಲ್ಲಿರುವ ಇಬ್ಬರ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ ಸಿಬಿಐ  ನ್ಯಾಯಾಲಯದಿಂದ ದೋಷಿ ಎಂದು ಘೋಷಿಸಲ್ಪಟ್ಟವ. ಹರ್ಯಾಣದ ರೋಹ್ಟಕ್ ಜಿಲ್ಲೆಯ ಸುನರಿಯಾ ಜೈಲಿನಲ್ಲಿ ಕಳೆದ  2017ರಿಂದಲೂ ಬಂಧಿಯಾಗಿರುವ ಈತನಿಗೆ ನ್ಯಾಯಾಲಯವು 50 ದಿನಗಳ ಪೆರೋಲನ್ನು (ಬಿಡುಗಡೆ) ಮಂಜೂರು ಮಾಡಿದೆ.  ಹಾಗಂತ,

ಇದು ಮೊದಲ ಪೆರೋಲ್ ಅಲ್ಲ. ಇದು ಕಳೆದ 24 ತಿಂಗಳುಗಳಲ್ಲಿ ಈತನಿಗೆ ಲಭಿಸಿರುವ 7ನೇ ಪೆರೋಲ್ ಮತ್ತು ಕಳೆದ ನಾಲ್ಕು  ವರ್ಷಗಳಲ್ಲಿ ಸಿಕ್ಕಿರುವ 9ನೇ ಪೆರೋಲ್ ಕೂಡಾ ಹೌದು. ಕೇವಲ ಕಳೆದ ಒಂದೇ ವರ್ಷದಲ್ಲಿ ಈತನಿಗೆ 3 ಪೆರೋಲ್‌ಗಳು ಸಿಕ್ಕಿವೆ ಮತ್ತು  ಆ ಮೂಲಕ ಆತ 91 ದಿನಗಳ ಕಾಲ ಜೈಲಿನಿಂದ ಹೊರಗೆ ಇದ್ದ. ದೇರಾ ಸಚ್ಚಾ ಸೌದಾದ ಮಾಜಿ ಮುಖ್ಯಸ್ಥ ಸತ್ನಾಮ್ ಸಿಂಗ್ ಜನ್ಮ  ವಾರ್ಷಿಕೋತ್ಸವದಲ್ಲಿ ಭಾಗವಹಿಸುವುದಕ್ಕಾಗಿ ಪೆರೋಲ್ ಮೂಲಕ ಜೈಲಿನಿಂದ ಹೊರಬಂದ ಆತ, ಭಾರೀ ಗಾತ್ರದ ಖಡ್ಗದಿಂದ ಕೇಕ್  ಕತ್ತರಿಸಿದ್ದ. ಆ ವೀಡಿಯೋ ಆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹರ್ಯಾಣದಲ್ಲಿ ಪಂಚಾಯತ್ ಚುನಾವಣೆ  ನಡೆಯುವುದಕ್ಕಿಂತ ತುಸು ಮುನ್ನ 2022ರ ಅಕ್ಟೋಬರ್‌ನಲ್ಲಿ ಈತನಿಗೆ ಪೆರೋಲ್ ಸಿಕ್ಕಿತ್ತು. ಹೀಗೆ ಬಿಡುಗಡೆಗೊಂಡ ಈತ ವರ್ಚುವಲ್  ಸತ್ಸಂಗ ನಡೆಸಿದ್ದ ಮತ್ತು ಬಿಜೆಪಿಯ ಹಲವು ಮುಖಂಡರು ಇದರಲ್ಲಿ ಭಾಗಿಯಾಗಿದ್ದರು. ತನ್ನ ತಾಯಿಯನ್ನು ನೋಡುವುದಕ್ಕಾಗಿ 2020  ಮತ್ತು 21ರಲ್ಲಿ ತಲಾ ಒಂದು ಬಾರಿ ಈತನಿಗೆ ಪೆರೋಲ್ ಸಿಕ್ಕಿತ್ತು. 2022ರಲ್ಲಂತೂ ಮೂರು ಬಾರಿ ಪೆರೋಲ್ ಸಿಕ್ಕಿತ್ತು. ಆಗೆಲ್ಲ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರಕಾರವನ್ನು ವಿಪಕ್ಷಗಳು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದುವು. ಹಾಗಂತ,

ರಾಜ್ಯ ಸರಕಾರದ ಸಹಕಾರ ಇಲ್ಲದೇ ಅಪರಾಧಿಯೋರ್ವ ಇಷ್ಟು ಸಲೀಸಾಗಿ ಪೆರೋಲ್ ಪಡಕೊಂಡು ಜೈಲಿನಿಂದ ಹೊರಡುವುದಕ್ಕೆ  ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳಿಗೂ ಇಂಥದ್ದೇ ಪೆರೋಲ್ ಲಭಿಸಿದೆ. 2023  ಆಗಸ್ಟ್ 15 ರಂದು ಸನ್ನಡತೆಯ ಆಧಾರದಲ್ಲಿ ಈ 11 ಮಂದಿ ಅಪರಾಧಿಗಳು ಬಿಡುಗಡೆಗೊಳ್ಳುವುದಕ್ಕಿಂತ ಮೊದಲು ಹಲವಾರು ಬಾರಿ  ಪೆರೋಲ್‌ಗಳನ್ನು ಪಡೆದಿದ್ದರು. ರಮೇಶ್ ಭಾಯಿ ರೂಪಾ ಭಾಯಿ ಚಂದನ ಎಂಬ ಅಪರಾಧಿ ಒಟ್ಟು 1198 ದಿನಗಳ ಕಾಲ ಜೈಲಿನಿಂದ  ಹೊರಗಿದ್ದ. ರಾಜು ಭಾಯಿ  ಬಾಬುಲಾಲ್ ಸೋನಿ ಎಂಬವ 1166 ದಿನಗಳ ಕಾಲ ಜೈಲಿನಿಂದ ಹೊರಗಿದ್ದ. ಪ್ರದೀಪ್ ರಮಣ್ ಲಾಲ್  ಮೋಧಿಯಾ ಎಂಬವನು  1011 ದಿನಗಳ ಕಾಲ ಜೈಲಿನಿಂದ ಹೊರಗಿದ್ದು ಓಡಾಡಿಕೊಂಡಿದ್ದ. ಇವರ ಹೊರತಾಗಿ ಜಸ್ವಂತ್ ಭಾಯಿ   ಚತುರ್ ಭಾಯಿ  ನೈ ಎಂಬವ 950 ದಿನಗಳ ಕಾಲ, ಗೋವಿಂದ ಭಾಯಿ  ಲಖಮ್ ಭಾಯಿ  ನೈ ಎಂಬವ 986 ದಿನಗಳ ಕಾಲ, ಶೈಲೇಶ್ ಭಾಯಿ   ಚಿಮಣ್ ಲಾಲ್ ಭಟ್ 934 ದಿನಗಳ ಕಾಲ ಮತ್ತು ಬಿಪಿನ್ ಚಂದ್ರ ಕನ್ನಯ್ಯ ಲಾಲ್ ಜೋಷಿ ಎಂಬವ 909 ದಿನಗಳ ಕಾಲ ಜೈಲಿನಿಂದ  ಹೊರಗಿದ್ದರು. ಈ ಅಪರಾಧಿಗಳ ಪೈಕಿ ಅತ್ಯಂತ ಕಡಿಮೆ ಕಾಲ ಜೈಲಿನಿಂದ ಹೊರಗಿದ್ದವನ ಹೆಸರು ಮಿತೇಶ್ ಭಾಯಿ  ಚಿಮಣ್ ಲಾಲ್  ಭಟ್ ಎಂದಾಗಿದ್ದು, ಆತ 771 ದಿನಗಳ ಕಾಲ ಜೈಲಿನಿಂದ ಬಿಡುಗಡೆ ಹೊಂದಿದ್ದ. ಈ ಎಲ್ಲ ಮಾಹಿತಿಯನ್ನು ಖುದ್ದು ಗುಜರಾತ್  ಸರ್ಕಾರವೇ ಸುಪ್ರೀಮ್ ಕೋರ್ಟ್ಗೆ ತಿಳಿಸಿದೆ.

2002ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ ಭೀಕರ ಹತ್ಯಾಕಾಂಡದ ಅಪರಾಧಿಗಳಿಗೆ ಗುಜರಾತ್ ಸರ್ಕಾರ ಕೊಟ್ಟ ಗೌರವ ಇದು.  21ರ ಹರೆಯದ ಗರ್ಭಿಣಿ ಬಿಲ್ಕೀಸ್ ಬಾನು ಮೇಲೆ ಈ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಮೂರು ವರ್ಷದ  ಮಗಳನ್ನು ನೆಲಕ್ಕೆ ಅಪ್ಪಳಿಸಿ ಕೊಂದಿದ್ದರು ಮತ್ತು ಕುಟುಂಬದ 7 ಮಂದಿಯ ಹತ್ಯೆ ನಡೆಸಿದ್ದರು. ಈ ಅಪರಾಧ ಸಾಬೀತಾದ ಕಾರಣದಿಂದಲೇ ಸಿಬಿಐ ನ್ಯಾಯಾಲಯ 2008ರಲ್ಲಿ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ 2012ರಲ್ಲಿ ಎತ್ತಿ ಹಿಡಿದಿತ್ತು. ಆ  ಬಳಿಕ ಸುಪ್ರೀಮ್ ಕೋರ್ಟಿನ ಕದ ತಟ್ಟುವ ಅವಕಾಶ ಈ ಅಪರಾಧಿಗಳಿಗೆ ಇತ್ತಾದರೂ ಅವರು ಅದಕ್ಕಾಗಿ ಪ್ರಯತ್ನಿಸಲಿಲ್ಲ. ಬಹುಶಃ, ಈ  ಜೀವಾವಧಿ ಶಿಕ್ಷೆ ಎಲ್ಲಿ ಮರಣ ದಂಡನೆಯಾಗಿ ಪರಿವರ್ತನೆಯಾದೀತೋ ಎಂಬ ಭಯ ಇವರನ್ನು ಕಾಡಿರಬೇಕು. ನಿಜವಾಗಿ,

ಇವರು ಮಾಡಿರುವ ಕೃತ್ಯಕ್ಕೆ ಮರಣ ದಂಡನೆಯೇ ಸೂಕ್ತ ಶಿಕ್ಷೆ. ಯಾವಾಗ ಇವರಿಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಬಾಂಬೆ  ಹೈಕೋರ್ಟು ಎತ್ತಿ ಹಿಡಿಯಿತೋ ಮುಂದೆ ಇವರ ಹಿತ ಕಾಯುವ ಕೆಲಸವನ್ನು ಗುಜರಾತ್ ಸರಕಾರ ವಹಿಸಿಕೊಂಡಂತೆ  ಕಾಣಿಸುತ್ತಿದೆ.  2012ರಿಂದ 2023 ಆಗಸ್ಟ್ 15ರಂದು ಬಿಡುಗಡೆಯಾಗುವ ವರೆಗಿನ ಅವಧಿಯ ನಡುವೆ ಈ 11 ಮಂದಿ ಅಪರಾಧಿಗಳು ಕನಿಷ್ಠ 2  ವರ್ಷಗಳಿಂದ ಸುಮಾರು 4 ವರ್ಷಗಳ ತನಕ ಜೈಲಿನಿಂದ ಹೊರಗಿದ್ದುದು ಇದನ್ನೇ ಸೂಚಿಸುತ್ತದೆ. ಇದೀಗ ಈ ದುರುಳರನ್ನು  ಸುಪ್ರೀಮ್ ಕೋರ್ಟು ಮತ್ತೆ ಜೈಲಿಗಟ್ಟಿದೆ. ಜೈಲಿಗೆ ಮರಳುವುದಕ್ಕೆ ಕಾಲಾವಕಾಶ ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದೆ.  ಇದು ಆಶಾದಾಯಕ ಬೆಳವಣಿಗೆಯಾದರೂ ಸಂಭ್ರಮಿಸುವಂಥದ್ದಲ್ಲ. ಯಾಕೆಂದರೆ,
ಆಡಳಿತಗಾರರು ಅಪರಾಧಿಗಳ ಪೋಷಕ ಪಾತ್ರವನ್ನು ನಿಭಾಯಿಸುತ್ತಿರುವ ವರೆಗೆ ಶಿಕ್ಷೆ ಎಂಬುದು ಸರಕಾರಿ ಕಡತಗಳಿಗಷ್ಟೇ  ಸೀಮಿತವಾಗಿರುತ್ತದೆ. ಅಪರಾಧಿಗಳ ಜೊತೆ ಆಡಳಿತಗಾರರೇ ಶಾಮೀಲಾದರೆ ಕಾನೂನಿನ ಕಣ್ಣಿಗೆ ಮಣ್ಣೆರಚುವುದು ಕಷ್ಟ ಅಲ್ಲ. ಈ 11  ಮಂದಿ ಅಪರಾಧಿಗಳು ಕಳೆದ ಒಂದು ದಶಕದಲ್ಲಿ ನೂರಕ್ಕಿಂತಲೂ ಅಧಿಕ ಬಾರಿ ಪಡೆದಿರುವ ಬಿಡುಗಡೆ ಭಾಗ್ಯವೇ ಇದಕ್ಕೆ ಸಾಕ್ಷಿ.  ನಿಜವಾಗಿ, ಅಪರಾಧಿಗಳಲ್ಲಿ ಪಶ್ಚಾತ್ತಾಪಭಾವವನ್ನು ಮೂಡಿಸಬೇಕು ಮತ್ತು ಸನ್ನಡತೆಯನ್ನು ಬೆಳೆಸಬೇಕು ಎಂಬ ಉದ್ದೇಶವೂ  ನ್ಯಾಯಾಲಯ ವಿಧಿಸುವ ಶಿಕ್ಷೆಯ ಹಿಂದಿರುತ್ತದೆ. ಆದರೆ ಆಡಳಿತಗಾರರು ಅಪರಾಧಿಗಳ ಬೆಂಬಲಕ್ಕೆ ನಿಂತಾಗ ಈ ಉದ್ದೇಶವೇ ಅರ್ಥ  ಕಳಕೊಳ್ಳುತ್ತದೆ. ಅಪರಾಧಿ ನಿಶ್ಚಿಂತರಾಗುತ್ತಾರೆ ಮತ್ತು ಈ ಹಿಂದಿಗಿಂತಲೂ ಹೆಚ್ಚು ಕ್ರೂರಿಗಳಾಗುತ್ತಾರೆ. 2020ರಲ್ಲಿ ಪೆರೋಲ್ ಮೂಲಕ  ಜೈಲಿನಿಂದ ಹೊರಬಂದ ಮಿತೇಶ್ ಚಿಮಣ್‌ಲಾಲ್ ಭಟ್ ಇದಕ್ಕೊಂದು ನಿದರ್ಶನ. ಈ ಅವಧಿಯಲ್ಲಿ ಈತನ ಮೇಲೆ ಪ್ರಕರಣ  ದಾಖಲಾಗಿತ್ತು. ಮಹಿಳೆಗೆ ಕಿರುಕುಳ ನೀಡಿದ್ದು, ಉದ್ದೇಶಪೂರ್ವಕವಾಗಿ ಅವಮಾನಿಸಿದ್ದು, ಶಾಂತಿಭಂಗಕ್ಕೆ ಪ್ರಚೋದನೆ ನೀಡಿದ್ದು ಹಾಗೂ  ಕ್ರಿಮಿನಲ್ ಕೃತ್ಯವೂ ಸೇರಿದಂತೆ ಭಾರತೀಯ ದಂಡಸಂಹಿತೆ ಯ ಸೆಕ್ಷನ್ 354, 504 ಮತ್ತು 506ರಡಿಯಲ್ಲಿ ಈತನ ವಿರುದ್ಧ ಎಫ್‌ಐಆರ್  ದಾಖಲಿಸಲಾಗಿತ್ತು. ಹೀಗಿದ್ದೂ, ಆ ಬಳಿಕವೂ ಈತನಿಗೆ ಪೆರೋಲ್ ಲಭಿಸಿತು ಮತ್ತು ಆ ಮೂಲಕ 281 ದಿನಗಳ ಕಾಲ ಈತ ಜೈಲಿನಿಂದ  ಹೊರಗಿದ್ದ. ಅಂದಹಾಗೆ,

ಗುರ್ಮೀತ್ ರಾಮ್ ರಹೀಮ್‌ನಿಗೆ ಸಿಗುತ್ತಿರುವ ಪೆರೋಲ್‌ಗಳನ್ನೂ ಈ ನೆಲೆಯಲ್ಲೇ  ವಿಶ್ಲೇಷಿಸಬೇಕಾಗಿದೆ. ಜೀವಾವಧಿ  ಶಿಕ್ಷೆಗೊಳಗಾಗಿರುವ ಸಾಮಾನ್ಯ ಅಪರಾಧಿಗಳಿಗೆ ಸಿಗದ ಪೆರೋಲ್‌ಗಳು ಇಂಥವರಿಗೆ ಯಾಕೆ ಮತ್ತು ಹೇಗೆ ಸಿಗುತ್ತದೆ ಎಂಬ ಪ್ರಶ್ನೆಯನ್ನು  ಹರಡಿ ಕುಳಿತರೆ ಆಡಳಿತಗಾರರು ಮತ್ತು ಅಪರಾಧಿಗಳ ನಡುವಿನ ಅನೈತಿಕ ನಂಟು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಹಾಗಿದ್ದರೂ,

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರಿದ್ದ ನ್ಯಾಯಪೀಠದ ನಿಷ್ಠುರ ತೀರ್ಪನ್ನು ಶ್ಲಾಘಿಸಬೇಕಾಗಿದೆ.  ನ್ಯಾಯಾಧೀಶರುಗಳು ಪ್ರಭುತ್ವದ ಪಕ್ಷಪಾತಿಳಾಗುತ್ತಿದ್ದಾರೋ ಎಂಬ ಸಂದೇಹ ಸಾರ್ವಜನಿಕವಾಗಿ ಬಲಗೊಳ್ಳುತ್ತಿರುವ ಹೊತ್ತಿನಲ್ಲೇ  ಈ  ತೀರ್ಪು ಪ್ರಕಟವಾಗಿದೆ. ಸ್ವತಂತ್ರ ನ್ಯಾಯಾಲಯವೇ ಜನರ ಪಾಲಿನ ಬಹುದೊಡ್ಡ ಆಯುಧ. ಪ್ರಭುತ್ವ ಎಂದೂ ಸಂಪೂರ್ಣ ನ್ಯಾಯ ಪಕ್ಷಪಾತಿಯಾಗುವುದಕ್ಕೆ  ಸಾಧ್ಯವೇ ಇಲ್ಲ. ಅದು ಓಟಿನ ಲೆಕ್ಕಾಚಾರದಲ್ಲೇ ನ್ಯಾಯಾನ್ಯಾಯವನ್ನು ನಿರ್ಧರಿಸುತ್ತದೆ. ಆದರೆ ನ್ಯಾಯಾಲಯ ಹಾಗಲ್ಲ. ಅದಕ್ಕೆ ಓಟಿನ  ಹಂಗಿಲ್ಲ. ಆದ್ದರಿಂದ ಅದು ನ್ಯಾಯದ ಹೊರತು ಇನ್ನಾವುದಕ್ಕೂ ನಿಷ್ಠವಾಗಿರಲೇಬಾರದು. 11 ಮಂದಿ ಅಪರಾಧಿಗಳನ್ನು ಮತ್ತೆ ಜೈಲಿಗಟ್ಟಿ  ಗುಜರಾತ್ ಸರ್ಕಾರಕ್ಕೆ ಪಾಠ ಕಲಿಸಿದ ನ್ಯಾಯಾಧೀಶರುಗಳಿಗೆ ಧನ್ಯವಾದಗಳು.

ಲಕ್ಷ್ಮೀ ಹೆಗ್ಡೆ ಉಳಿಸಿ ಹೋಗಿರುವ ಪ್ರಶ್ನೆಗಳು...

 


ಸನ್ಮಾರ್ಗ ಸಂಪಾದಕೀಯ


ಮಾಧ್ಯಮಗಳ ಮುಖಪುಟದಲ್ಲಿ ಜಾಗ ಪಡೆಯಬೇಕಿದ್ದ ಲಕ್ಷ್ಮೀ ಹೆಗ್ಡೆ ಎಂಬ ತಾಯಿ ಯಾರ ಗಮನಕ್ಕೂ ಬಾರದೇ ತನ್ನ ಊರು  ಇಳಂತಿಲದ ಅಷ್ಟಿಷ್ಟು ಹಿರಿಯರ ಕರುಣೆಯ ಮಾತುಗಳಿಗೆ ಆಹಾರವಾಗಿ ಜನವರಿ ಏಳರಂದು ಇಹಲೋಕ ತ್ಯಜಿಸಿದರು. ಹಾಗಂತ,

ದಕ್ಷಿಣ ಕನ್ನಡ ಜಿಲ್ಲೆಯ  ಉಪ್ಪಿನಂಗಡಿ ಸಮೀಪದ ಇಳಂತಿಲದ ಈ ಲಕ್ಷ್ಮೀ ಹೆಗ್ಡೆ ಪ್ರಸಿದ್ಧರಲ್ಲ. ಇನ್ಫೋಸಿಸ್‌ನ ಸುಧಾ ಮೂರ್ತಿ, ಓಟಗಾತಿ  ಪಿ.ಟಿ. ಉಷಾ, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ಅಥವಾ ಐಟಿ ಕ್ಷೇತ್ರದ ಕಿರಣ್ ಮಜುಂದಾರ್‌ರಂತೆ  ಸಾಧಕಿಯೂ ಅಲ್ಲ.  ಆದರೆ, ದ.ಕ. ಜಿಲ್ಲೆಯ ಕನ್ಯಾನದ ಭಾರತ್ ಸೇವಾಶ್ರಮದಲ್ಲಿ ನಡೆದ ಇವರ ಸಾವು ಸಮಾಜದ ಪಾಲಿಗೆ ಪಾಠದಾಯಕ. ನಿಜವಾಗಿ,

ಈ ತಾಯಿ ವೃದ್ಧಾಶ್ರಮದಲ್ಲಿ ಬದುಕಿನ ಸಂಧ್ಯಾಕಾಲವನ್ನು ಕಳೆಯಬೇಕಾದಂಥ ಅಸಹಾಯಕಿಯಲ್ಲ. ಇಳಂತಿಲದಲ್ಲಿ ಸ್ವಂತದ್ದೊಂದು  ಮನೆಯೂ ಅವರಿಗಿತ್ತು. ಏಳು ಮಕ್ಕಳನ್ನೂ ಹೆತ್ತಿದ್ದರು. ಆದರೆ, ಈ ತಾಯಿ ಮಕ್ಕಳ ನಡುವೆ ಅದೇನು ವೈಮನಸ್ಯ ಉಂಟಾಯಿತೋ  ಗೊತ್ತಿಲ್ಲ, ಈ ವೃದ್ಧ ತಾಯಿ ಮಕ್ಕಳ ನಿರ್ಲಕ್ಷ್ಯಕ್ಕೆ ಒಳಗಾದರು. ಕೊನೆಗೆ ಮಕ್ಕಳ ನಡವಳಿಕೆಗೆ ಬೇಸತ್ತು ಪೊಲೀಸ್ ಠಾಣೆಯ  ಮೆಟ್ಟಿಲೇರಿದರು. ಮಕ್ಕಳಿಗೆ ಕರೆಯೂ ಹೋಯಿತು. ಆದರೆ ತಾಯಿಯ ಆರೈಕೆ ಮಾಡಲೋ ಕಾಳಜಿ ತೋರಲೋ ಮಕ್ಕಳು  ನಿರಾಕರಿಸಿದರು. ಪೊಲೀಸ್ ಠಾಣೆಯಲ್ಲಿ ಒಂಟಿಯಾದ ತಾಯಿಯನ್ನು ಠಾಣಾಧಿಕಾರಿ ನಂದಕುಮಾರ್ ಭಾರತ್ ಸೇವಾಶ್ರಮಕ್ಕೆ  ಸೇರಿಸಿದರು. ಮಾತ್ರವಲ್ಲ, ಮಗನ ಸ್ಥಾನದಲ್ಲಿ ನಿಂತು ಆಗಾಗ ಅವರ ಯೋಗಕ್ಷೇಮ ವಿಚಾರಿಸುತ್ತಾ ಪ್ರೀತಿ ತೋರಿಸುತ್ತಿದ್ದರು. ಇಂಥ  ತಾಯಿ ಈ ಆಶ್ರಮದಲ್ಲಿ ನಿಧನರಾದಾಗಲೂ ಈ ಮಕ್ಕಳು ಕೊನೆಯ ಬಾರಿ ನೋಡುವುದಕ್ಕಾಗಲಿ ಅಂತ್ಯಸಂಸ್ಕಾರ ನೆರವೇರಿಸುವುದಕ್ಕಾಗಲಿ  ಬರಲೇ ಇಲ್ಲ. ಆಶ್ರಮದಿಂದ ಕರೆ ಮಾಡಿ ವಿನಂತಿಸಿದರೂ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿಲ್ಲ. ಕೊನೆಗೆ ಆಶ್ರಮದವರೇ ಸೇರಿ ಅಂತಿಮ  ವಿಧಿ ಪೂರೈಸಿದರು. ಒಂದುರೀತಿಯಲ್ಲಿ,ಈ ಲಕ್ಷ್ಮೀ ಹೆಗ್ಡೆ ಕೆಲವು ಪ್ರಶ್ನೆಗಳನ್ನು ಉಳಿಸಿ ಹೋಗಿದ್ದಾರೆ. ಏಳು ಮಕ್ಕಳಿಗೆ ಜನ್ಮ ನೀಡಿದ ತಾಯಿಗೆ ಏಳು ಮಕ್ಕಳಲ್ಲಿ ಒಬ್ಬರೂ ನೆರವಿಗೆ  ಬಾರದೇ ಇರುವುದಕ್ಕೆ ಕಾರಣಗಳೇನು? ಹಾಗಂತ, 

ಮಕ್ಕಳನ್ನು ಕಟಕಟೆಯಲ್ಲಿ ನಿಲ್ಲಿಸುವುದು ಸುಲಭ ಮತ್ತು ನಿಲ್ಲಿಸಲೇ ಬೇಕು.  ಹೆತ್ತಮ್ಮನನ್ನು ಬೀದಿಗಟ್ಟಿರುವುದಕ್ಕೆ ಮಕ್ಕಳು ಕೊಡುವ ಯಾವುದೇ ಸಮರ್ಥನೆಯೂ ತಿರಸ್ಕಾರಕ್ಕಷ್ಟೇ ಯೋಗ್ಯ. ಈ ಮಕ್ಕಳೇನೂ  ಪ್ರಯೋಗಾಲಯದಲ್ಲಿ ಹುಟ್ಟಿರುವುದಲ್ಲ. ಈ ಏಳು ಮಕ್ಕಳಲ್ಲಿ ಪ್ರತಿಯೊಂದನ್ನೂ ಈ ಲಕ್ಷ್ಮೀ ಹೆಗ್ಡೆ ಎಂಬ ತಾಯಿ 9 ತಿಂಗಳು ತನ್ನ  ಹೊಟ್ಟೆಯಲ್ಲಿಟ್ಟು ಬೆಳೆಸಿದ್ದರು. ಗರ್ಭದಲ್ಲಿರುವ ಮಗುವಿಗೆ ಏನೂ ಹಾನಿಯಾಗದಿರಲಿ ಎಂದು ಈ 9 ತಿಂಗಳೂ ವಿಶೇಷ ಕಾಳಜಿಯನ್ನು  ತೋರಿದ್ದರು. ಈ ಅವಧಿಯಲ್ಲಿ ಈ ಲಕ್ಷ್ಮೀ ಹೆಗ್ಡೆ ಎಷ್ಟು ಮದುವೆಗಳನ್ನು ತಪ್ಪಿಸಿಕೊಂಡಿದ್ದಾರೆ, ಎಷ್ಟು ಪ್ರಯಾಣಗಳನ್ನು ರದ್ದು ಪಡಿಸಿಕೊಂಡಿದ್ದಾರೆ, ಎಷ್ಟು ಧಾರ್ಮಿಕ, ಸಾಮಾಜಿಕ ಮತ್ತು ಕೌಟುಂಬಿಕ ಕಾರ್ಯಕ್ರಮಗಳಿಗೆ ಗೈರಾಗಿದ್ದಾರೆ ಅನ್ನುವುದು ಅವರಿಗಷ್ಟೇ  ಗೊತ್ತು. ತಿನ್ನುವಾಗ, ಕುಡಿಯುವಾಗ, ಮಲಗುವಾಗ, ನಡೆಯುವಾಗ... ಹೀಗೆ ಎಲ್ಲ ಸಂದರ್ಭಗಳಲ್ಲೂ ಹೊಟ್ಟಿಯಲ್ಲಿರುವ ಮಗುವಿನ  ಕ್ಷೇಮದ ದೃಷ್ಟಿಯಿಂದ ಈ ತಾಯಿ ವಿಶೇಷ ಕಾಳಜಿ ತೋರಿರಬಹುದು. ಈ ಏಳು ಮಕ್ಕಳ ಗರ್ಭ ಧರಿಸಿದಲ್ಲಿಂದ ತೊಡಗಿ ಪ್ರಸವದ  ವರೆಗೆ ಮತ್ತು ಆ ಬಳಿಕದಿಂದ ದೊಡ್ಡವರಾಗುವವರೆಗೆ ಈ ಲಕ್ಷ್ಮೀ ಹೆಗ್ಡೆ ತೋರಿರಬಹುದಾದ ಅಸಾಧಾರಣ ತಾಳ್ಮೆ, ಪ್ರೀತಿ ಮತ್ತು  ಕಾಳಜಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಈ ತಾಯ್ತನದ ಭಾರವನ್ನು ಓರ್ವ ಹೆಣ್ಣಿಗೆ ಮಾತ್ರ ನಿಭಾಯಿಸಲು ಸಾಧ್ಯ ಎಂದು  ಹೇಳುವಷ್ಟು ಇದು ಸವಾಲಿನದ್ದು. ಅಂದಹಾಗೆ,

ಇಷ್ಟೆಲ್ಲಾ ತ್ಯಾಗ-ಪ್ರೀತಿಯನ್ನು ತೋರಿ ಮಕ್ಕಳನ್ನು ಬೆಳೆಸುವ ತಾಯಿ ವೃದ್ಧಾಪ್ಯದಲ್ಲಿ ಈ ಮಕ್ಕಳಿಂದಲೇ ಯಾಕೆ ಪರಿತ್ಯಕ್ತರಾಗುತ್ತಾರೆ ಎಂಬ  ಪ್ರಶ್ನೆ ಸಹಜವಾಗಿಯೇ ಇಲ್ಲಿ ಮುನ್ನೆಲೆಗೆ ಬರುತ್ತದೆ. ಮಕ್ಕಳನ್ನು ಕೃತಘ್ನರು, ಹೆತ್ತವರ ಮಹತ್ವ ಗೊತ್ತಿಲ್ಲದವರು, ಧರ್ಮದ್ರೋಹಿಗಳು  ಎಂದೆಲ್ಲಾ ಷರಾ ಬರೆದು ಆ ಪ್ರಶ್ನೆಯಿಂದ ತಪ್ಪಿಸಿಕೊಳ್ಳಬಹುದು. ಆದರೂ ಮಕ್ಕಳೇಕೆ ಹೀಗಾಗುತ್ತಾರೆ ಅನ್ನುವ ಪ್ರಶ್ನೆಯ ಗಂಭೀರತೆ  ಹಾಗೆಯೇ ಉಳಿಯುತ್ತದೆ. ಇದು ಓರ್ವ ಲಕ್ಷ್ಮೀ ಹೆಗ್ಡೆಯ ಪ್ರಶ್ನೆಯಲ್ಲ. ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ಮಾತ್ರ ಕೇಂದ್ರೀಕರಿಸಿ  ಕೇಳಬೇಕಾದ ಪ್ರಶ್ನೆಯೂ ಅಲ್ಲ. ಈ ದೇಶದಲ್ಲಿ ಕೋಟ್ಯಂತರ ವೃದ್ಧರಿದ್ದಾರೆ. ಅವರೆಲ್ಲ ವೃದ್ಧಾಶ್ರಮದಲ್ಲಿ ಇಲ್ಲದೇ ಇರಬಹುದು. ಆದರೆ  ಮನೆಯೆಂಬ ವೃದ್ಧಾಶ್ರಮದಲ್ಲಿ ನಿತ್ಯ ಕಣ್ಣೀರಿನೊಂದಿಗೆ ಬದುಕುತ್ತಿದ್ದಾರೆ ಎಂದು ವರ್ಷಂಪ್ರತಿ ಬಿಡುಗಡೆಗೊಳ್ಳುವ ಸಮೀಕ್ಷಾ ವರದಿಗಳು  ಹೇಳುತ್ತವೆ. ಮಗ ಮತ್ತು ಸೊಸೆ ಅಥವಾ ಮಗಳು ಮತ್ತು ಗಂಡ ಅಥವಾ ಇನ್ನಿತರ ಆಶ್ರಯದಾತರಿಂದ ನಿತ್ಯ ಮಾನಸಿಕ ಮತ್ತು ದೈಹಿಕ  ಶೋಷಣೆಗೆ ಅವರು ಗುರಿಯಾಗುತ್ತಾ ಜೀವನ ಪ್ರೀತಿಯನ್ನೇ ಮರೆತು ಬದುಕುತ್ತಿದ್ದಾರೆ ಎಂದು ಈ ಸಮೀಕ್ಷೆಗಳು ಹೇಳುತ್ತಲೇ ಇವೆ.  ವರ್ಷಂಪ್ರತಿ ಇಂಥವರ ಸಂಖ್ಯೆ ಅಧಿಕವಾಗುತ್ತಲೂ ಇದೆ. ಇದಕ್ಕೆ ಏನು ಕಾರಣ? ಹೆತ್ತು ಹೊತ್ತು ಸಾಕಿ ಬೆಳೆಸಿದವರೇ ಮಕ್ಕಳ ಪಾಲಿಗೆ  ಭಾರ ಅನ್ನಿಸಿಕೊಳ್ಳಲು ಕಾರಣ ಏನು? ಹೆತ್ತವರ ಪಾಲೂ ಇದರಲ್ಲಿ ಇದೆಯೇ? ಅವರು ಮಕ್ಕಳ ನಡುವೆ ಪಕ್ಷಪಾತಿ ವರ್ತನೆ  ತೋರುತ್ತಾರೆಯೇ? ಒಂದಿಬ್ಬರ ಪರ ವಹಿಸಿ ಉಳಿದ ಮಕ್ಕಳನ್ನು ನಿರ್ಲಕ್ಷಿಸುವಂಥ ವರ್ತನೆ ಅವರಲ್ಲಿದೆಯೇ? ಆಸ್ತಿಯಲ್ಲಿ ಅನ್ಯಾಯವಾಗಿ  ವಿಲೇವಾರಿ ಮಾಡುತ್ತಾರೆಯೇ? ಮಕ್ಕಳಿಗೆ ಕೊಡುವ ಪ್ರೀತಿಯಲ್ಲೂ ತಾರತಮ್ಯ ಎಸಗುತ್ತಾರೆಯೇ? ಅನುಕೂಲಸ್ಥ ಮಗನ ಅಥವಾ  ಮಗಳ ಪರ ವಹಿಸುವ ಮತ್ತು ಅದರಿಂದಾಗಿ ಕೌಟುಂಬಿಕ ಏರುಪೇರುಗಳಾಗುವ ಘಟನೆಗಳು ಹೆಚ್ಚತೊಡಗಿವೆಯೇ? ಅಥವಾ ಬಡತನ  ಮತ್ತು ಔಷಧಿಗಾಗಿ ಖರ್ಚು ಮಾಡಲಾಗದ ಅಸಹಾಯಕತೆಯು ಹೆತ್ತವರ ಮೇಲೆ ಮಕ್ಕಳು ಏರಿ ಹೋಗುವುದಕ್ಕೆ ಮತ್ತು ಚುಚ್ಚು  ಮಾತುಗಳಿಗೆ ಕಾರಣವಾಗುತ್ತಿದೆಯೇ? ಅಷ್ಟಕ್ಕೂ,

ಬಾಲ್ಯದಿಂದ ತೊಡಗಿ ಯೌವನ ಪ್ರಾಯದವರೆಗೆ ಪ್ರತಿಯೊಬ್ಬರಿಗೂ ಹೆತ್ತವರಿಂದಲೋ ಶಿಕ್ಷಕರಿಂದಲೋ ಸಮಾಜದಿಂದಲೋ ಜೀವನ  ಪಾಠ ಲಭಿಸುತ್ತಲೇ ಇರುತ್ತದೆ. ಹಾಗೆ ಮಾಡಬೇಕು, ಹೀಗೆ ಮಾಡಬಾರದು, ಹೇಗೆ ವರ್ತಿಸಬೇಕು ಮತ್ತು ಹೇಗೆ ಬಾರದು ಇತ್ಯಾದಿಗಳನ್ನು  ಈ ಪ್ರಾಯದಲ್ಲಿ ಹೇಳಿ ಕೊಡಲಾಗುತ್ತದೆ. ಹಾಗಂತ, ಇಂಥದ್ದೇ  ತರಬೇತಿಯು ವೃದ್ಧಾಪ್ಯಕ್ಕೆ ತಲುಪುವ ಹೆತ್ತವರಿಗೂ ನೀಡಬೇಕಾದ ಅಗತ್ಯ  ಇದೆಯೇ? ವೃದ್ಧಾಪ್ಯಕ್ಕೆ ತಲುಪುವ ಪ್ರಾಯದಲ್ಲಿ ಹೇಗೆ ಜೀವಿಸಬೇಕು, ಮಕ್ಕಳು ಮತ್ತು ಮರಿಮಕ್ಕಳೊಂದಿಗೆ ಹೇಗಿರಬೇಕು, ಮನೆಯ  ವಾತಾವರಣವನ್ನು ಹೇಗೆ ತನಗೆ ಪೂರಕವಾಗಿ ಬಳಸಿಕೊಳ್ಳಬೇಕು, ತನ್ನ ಆಸೆ-ಇಂಗಿತವನ್ನು ಪೂರೈಸಿಕೊಳ್ಳುವುದಕ್ಕೆ ಯಾವ ರೀತಿಯ  ವರ್ತನೆ ಅಗತ್ಯ.. ಎಂಬಿತ್ಯಾದಿ ತರಬೇತಿಯನ್ನು ಹಿರಿಯರಿಗೆ ನೀಡುವ ಕಾರ್ಯಾಗಾರಗಳ ಅಗತ್ಯ ಇದೆಯೇ? ಬಾಲ್ಯದಲ್ಲಿ ಮಕ್ಕಳು  ಹಠಮಾರಿಗಳಾಗುವಂತೆಯೇ ಹಿರಿಪ್ರಾಯಕ್ಕೆ ತಲುಪಿದವರೂ ಹಠಮಾರಿಗಳಾಗುತ್ತಾರೆ. ಇಂಥ ಹಿರಿಯರಿರುವ ಮನೆಗಳ ಸಮೀಕ್ಷೆ ಮತ್ತು  ಮಕ್ಕಳಿಗೆ ಆ ಹಿರಿಯರ ಮನಸ್ಥಿತಿಯನ್ನು ಅರ್ಥ ಮಾಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯಬೇಕಾಗಿದೆಯೇ? ನಿಜವಾಗಿ,

ಮಕ್ಕಳ ಪಾಲಿನ ಸ್ವರ್ಗ ಮತ್ತು ನರಕ ಅವರ ಹೆತ್ತವರಾಗಿದ್ದಾರೆ ಎಂಬ ಅತೀ ಪ್ರಬಲ ಮತ್ತು ಪರಿಣಾಮಕಾರಿ ಪರಿಕಲ್ಪನೆ ಇಸ್ಲಾಮಿನದ್ದು.  ಹೆತ್ತವರ ಮನ ನೋಯಿಸುವ ಮಕ್ಕಳು ದೇವಕೋಪಕ್ಕೆ ತುತ್ತಾಗುತ್ತಾರೆ ಎಂಬ ಅತಿ ಮಹತ್ವದ ಸಂದೇಶವನ್ನು ಇಸ್ಲಾಮ್ ಸಾರುತ್ತದೆ.  ವೃದ್ಧ ಹೆತ್ತವರ ಬಗ್ಗೆ ‘ಛೆ’ ಎಂಬ ಪದವನ್ನೂ ಬಳಸಬಾರದು ಎಂದು ಪವಿತ್ರ ಕುರ್‌ಆನ್ ತಾಕೀತು ಮಾಡಿದೆ. ಹಿಂದೂ ಧರ್ಮದಲ್ಲೂ  ಹೆತ್ತವರ ಬಗ್ಗೆ ಮೌಲ್ಯಯುತ ಆದೇಶಗಳಿವೆ. ಶ್ರವಣ ಕುಮಾರನ ಕತೆಯನ್ನು ಓದಿಯೇ ಎಲ್ಲ ಮಕ್ಕಳೂ ಬೆಳೆಯುತ್ತಿದ್ದಾರೆ. ಸಮಸ್ಯೆ ಏ ನೆಂದರೆ, ಬಾಲ್ಯದಲ್ಲಿ ಕಲಿತ ಪಾಠ ಅವರು ಬೆಳೆದು ದೊಡ್ಡವರಾದಾಗ ಪಾಲನೆಗೆ ಬರುತ್ತಿಲ್ಲ ಎಂಬುದು. ಆದ್ದರಿಂದಲೇ, ಲಕ್ಷ್ಮೀ ಹೆಗ್ಡೆ  ಮುಖ್ಯವಾಗುತ್ತಾರೆ. ಇಂಥವರ ಸಂಖ್ಯೆ ಅಸಂಖ್ಯ ಇದ್ದಿರಬಹುದಾದರೂ ಹೀಗೆ ಬಹಿರಂಗಕ್ಕೆ ಬರುವುದು ಬಹಳ ಕಡಿಮೆ. ಅಷ್ಟಕ್ಕೂ, 

 ಆಗೊಮ್ಮೆ ಈಗೊಮ್ಮೆ ಬೆಳಕಿಗೆ ಬರುವ ಇಂಥ ಸುದ್ದಿಗಳನ್ನು ಪತ್ರಿಕೆಗಳು ಮುಖಪುಟದಲ್ಲಿ ಪ್ರಕಟಿಸಿದರೆ, ಅದು ಸಾರ್ವಜನಿಕ ಚರ್ಚೆಗೂ  ಒಳಗಾಗಬಹುದು ಮತ್ತು ಒಂದಷ್ಟು ಜಾಗೃತಿಗೂ ಕಾರಣವಾಗಬಹುದು.

Thursday, 11 January 2024

ಮುಸ್ಲಿಮರೇ, ಶ್ರೀರಾಮನ ವಿರೋಧಿಯಾಗಿಸುವ ಸಂಚಿಗೆ ಬಲಿಯಾಗಬೇಡಿ

 


ಅಯೋಧ್ಯೆಯ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿ 2019 ನವೆಂಬರ್ 9ರಂದು ಸುಪ್ರೀಮ್ ಕೋರ್ಟು ನೀಡಿದ ಆದೇಶದಲ್ಲಿ  ಮೂರು ಪ್ರಮುಖ ಅಂಶಗಳಿದ್ದುವು. 
1. ಧ್ವಂಸಗೊಂಡ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ. 
2. ಬದಲಿ ಜಾಗದಲ್ಲಿ  ಮಸೀದಿ ನಿರ್ಮಾಣ. 
3. ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿರುವುದು ಕ್ರಿಮಿನಲ್ ಕೃತ್ಯ. 

ಆದರೆ,

ಸುಪ್ರೀಮ್ ಕೋರ್ಟ್ ನ  ಐವರು ನ್ಯಾಯಾಧೀಶರ ಈ ಒಮ್ಮತದ ತೀರ್ಪನ್ನು ಉನ್ನತ ನ್ಯಾಯಾಂಗ ತಜ್ಞರೇ ಪ್ರಶ್ನಿಸಿದ್ದರು. ಬ್ಲಂಡರ್ ಅಂದಿದ್ದರು. ಮುಸ್ಲಿಮ್ ಸಮುದಾಯವಂತೂ ಈ ತೀರ್ಪಿನ ಬಗ್ಗೆ ತಮ್ಮ ತೀವ್ರ ಅಸಮಾಧಾನ ಸೂಚಿಸಿತ್ತು. ಆದರೆ, ಸುಪ್ರೀಮ್  ಕೋರ್ಟಿಗಿಂತ ಉನ್ನತ ನ್ಯಾಯಾಂಗ ಪೀಠ ಇಲ್ಲದೇ ಇರುವುದರಿಂದ ಈ ತೀರ್ಪಿಗೆ ತಲೆಬಾಗಬೇಕಾದುದು ಎಲ್ಲರ ಪಾಲಿಗೂ  ಸಾಂವಿಧಾನಿಕ ಬೇಡಿಕೆಯಾಗಿತ್ತು. ತೀವ್ರ ಅಸಮಾಧಾನವಿದ್ದರೂ ಭಾರತೀಯ ಮುಸ್ಲಿಮರು ಈ ತೀರ್ಪಿಗೆ ಬದ್ಧವಾಗಿ ನಡಕೊಂಡರು. ಇದೀಗ ರಾಮಮಂದಿರವು ಉದ್ಘಾಟನೆಗೆ ಸಿದ್ಧವಾಗಿದೆ. ಈಗಾಗಲೇ ಪ್ರಮುಖ ಹಿಂದಿ ಮತ್ತು ಇಂಗ್ಲಿಷ್ ಚಾನೆಲ್‌ಗಳು ರಾಮಮಂದಿರವನ್ನು  ಕೇಂದ್ರೀಕರಿಸಿ ಚರ್ಚೆ ಪ್ರಾರಂಭಿಸಿವೆ. ಕನ್ನಡ ಚಾನೆಲ್‌ಗಳೂ ಹಿಂದೆ ಬಿದ್ದಿಲ್ಲ. ಹಾಗಂತ, 

ಈ ಚರ್ಚೆ ಹೆಚ್ಚು ಆಕರ್ಷಕವಾಗಬೇಕಾದರೆ ಮತ್ತು ಜನರನ್ನು ತಲುಪಬೇಕಾದರೆ ಮುಸ್ಲಿಮರನ್ನು ಒಂದಲ್ಲ ಒಂದು ರೀತಿಯಲ್ಲಿ  ಪಾಲುಗೊಳಿಸಲೇಬೇಕಾದ ಅನಿವಾರ್ಯತೆ ಇವುಗಳಿಗೆಲ್ಲ ಇದ್ದೇ  ಇದೆ. ಆದ್ದರಿಂದ, ಈ ಚಾನೆಲ್‌ಗಳು ಬಡ ಮುಸ್ಲಿಮರ ಬಾಯಿಗೆ ಮೈಕ್  ಇಟ್ಟು ಅಭಿಪ್ರಾಯ ಸಂಗ್ರಹಿಸುವ ಪ್ರಯತ್ನ ಮಾಡಬಹುದು. ಚರ್ಚೆಯ ಹೆಸರಲ್ಲಿ ಮುಸ್ಲಿಮರನ್ನು ಕೂರಿಸಿ, ಪ್ರಚೋದನೆಗೆ ಒಳಪಡಿಸಿ  ರಾಮನನ್ನೇ ಕಟಕಟೆಯಲ್ಲಿ ನಿಲ್ಲಿಸುವ ಮಾತುಗಳನ್ನು ಹೊರಡಿಸುವುದಕ್ಕೆ ಪ್ರಯತ್ನಿಸಲೂ ಬಹುದು. ಸುಪ್ರೀಮ್ ಕೋರ್ಟು ತೀರ್ಪಿಗೆ  ವ್ಯಕ್ತಪಡಿಸುವ ಅಸಾಮಾಧಾನವನ್ನೇ ಕೋರ್ಟು ನಿಂದನೆಯಾಗಿ ಮತ್ತು ಸಂವಿಧಾನ ವಿರೋಧಿಯಾಗಿ ಬಿಂಬಿಸಲೂ ಬಹುದು. ಗಡ್ಡ,  ಟೋಪಿ, ಪೈಜಾಮ ಧರಿಸಿದ ಮುಸ್ಲಿಮನಿಂದ ರಾಮಮಂದಿರಕ್ಕೋ ಅಥವಾ ರಾಮನಿಗೋ ಅಪಚಾರವಾಗುವ ರೀತಿಯ ಹೇಳಿಕೆಗಳನ್ನು  ಪ್ರಚೋದಿಸಿಯೋ ಪುಸಲಾಯಿಸಿಯೋ ಪಡೆದು ಮುಸ್ಲಿಮ್ ಸಮುದಾಯವನ್ನೇ ಕಟಕಟೆಯಲ್ಲಿ ನಿಲ್ಲಿಸುವುದಕ್ಕೆ ಪ್ರಯತ್ನಿಸಬಹುದು. ಈ  ಹಿನ್ನೆಲೆಯಲ್ಲಿ, ಮುಸ್ಲಿಮ್ ಸಮುದಾಯ ಈಗಿಂದೀಗಲೇ ಜಾಗರೂಕ ವಾಗಬೇಕು. ಮುಸ್ಲಿಮರನ್ನು ಖೆಡ್ಡಾಕ್ಕೆ ಬೀಳಿಸಿ ಮಜಾ ನೋಡುವ  ಮಾಧ್ಯಮ ತಂತ್ರಗಳಿಗೆ ಬಲಿ ಬೀಳದಂತೆ ಎಚ್ಚರ ವಹಿಸಿಕೊಳ್ಳಬೇಕು. ನಿಜವಾಗಿ,

ಮುಸ್ಲಿಮರು ಶ್ರೀರಾಮನ ವಿರೋಧಿಗಳಲ್ಲ. ಶ್ರೀರಾಮನನ್ನು ವಿರೋಧಿಸುವುದಕ್ಕೆ ಕಾರಣಗಳೇ ಇಲ್ಲ. ಶ್ರೀರಾಮ ಈ ಮಣ್ಣಿನ ಬಹುದೊಡ್ಡ  ಸಮುದಾಯದ ಪಾಲಿಗೆ ಆದರ್ಶ ಪುರುಷ. ಆತನಿಗಾಗಿ ಒಂದಲ್ಲ, ಸಾವಿರ ಮಂದಿರ ಕಟ್ಟುವುದಿದ್ದರೂ ಅದಕ್ಕೆ ಮುಸ್ಲಿಮರಿಂದ ಅಡ್ಡಿಯೂ  ಇಲ್ಲ. ಆದರೆ, ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮನನ್ನು ಮುಸ್ಲಿಮ್ ದ್ವೇಷಕ್ಕಾಗಿ ರಾಜಕೀಯ ಶಕ್ತಿಗಳು  ಬಳಸುತ್ತಿರುವುದಕ್ಕೆ ಮುಸ್ಲಿಮ್ ಸಮುದಾಯಕ್ಕೆ ನೋವಿದೆ. ಅಂದಹಾಗೆ,

ಬಾಬರಿ ಮಸೀದಿ ಇದ್ದ ಜಾಗ ಯಾರಿಗೆ ಸಂಬಂಧಿಸಿದ್ದು ಎಂಬ ಬಗ್ಗೆ ನ್ಯಾಯಾಲಯದಲ್ಲಿ ತಕರಾರಿತ್ತೇ ಹೊರತು ಶ್ರೀರಾಮನಿಗೆ  ಸಂಬಂಧಿಸಿ ಯಾವ ತಕರಾರೂ ಇರಲಿಲ್ಲ. ಆ ಜಾಗ ತಮಗೆ ಸಂಬಂಧಿಸಿದ್ದು ಎಂಬುದು ಮುಸ್ಲಿಮರ ವಾದವಾಗಿತ್ತು. ಆದರೆ,  ರಾಜಕೀಯ ಶಕ್ತಿಗಳು ಈ ಜಾಗದ ತಕರಾರರನ್ನು ದುರ್ವ್ಯಾಖ್ಯಾನಿಸಿದುವು ಮತ್ತು ಮಂದಿರ-ಮಸೀದಿ ವಿವಾದವಾಗಿ ಬಿಂಬಿಸಿದುವು.  ಮಾತ್ರವಲ್ಲ, ಮುಸ್ಲಿಮರು ಶ್ರೀರಾಮನ ವಿರೋಧಿಗಳು ಎಂಬಂತೆ  ಪ್ರಚಾರ ಪಡಿಸಿದುವು. ಮಾಧ್ಯಮಗಳು ಈ ಪ್ರಚಾರಕ್ಕೆ ಬೆಂಕಿ ಕೊಟ್ಟು  ಎಲ್ಲೆಡೆ ಹಬ್ಬಿಸಿದುವು. ಇದೀಗ ಈ ಪ್ರಕರಣ ಇತ್ಯರ್ಥಗೊಂಡಿದ್ದರೂ ಮಾಧ್ಯಮಗಳ ಹಸಿವು ತಣಿದಂತೆ ಕಾಣಿಸುತ್ತಿಲ್ಲ. ಅವು ಮತ್ತೆ ಮೈಕ್  ಎಂಬ ಪಂಜಿನೊಂದಿಗೆ ಹೊರಡುವ ಸಿದ್ಧತೆಯಲ್ಲಿರುವಂತೆ ಕಾಣಿಸುತ್ತಿದೆ. ಮತ್ತೊಮ್ಮೆ ಈ ದೇಶದಲ್ಲಿ ಧರ್ಮೋನ್ಮಾದ ಹುಟ್ಟು ಹಾಕಲು  ಪ್ರಯತ್ನ ಪಡುತ್ತಿರುವಂತಿದೆ. ಅಷ್ಟಕ್ಕೂ,

 ಟಿ.ವಿ. ಮಾಧ್ಯಮಗಳು ಪ್ರಾಮಾಣಿಕವೇ ಆಗಿರುವುದಾದರೆ, ಅಯೋಧ್ಯೆಯ ಶ್ರೀರಾಮ ಮಂದಿರಕ್ಕಿಂತ 22 ಕಿ.ಮೀಟರ್ ದೂರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸೀದಿಯ ಕತೆ ಏನಾಯಿತು ಎಂಬ ಚರ್ಚೆ, ಅಭಿಪ್ರಾಯ  ಸಂಗ್ರಹ, ಪ್ರತ್ಯಕ್ಷ ವರದಿ, ತನಿಖಾ ವರದಿಗಳನ್ನು ಮಾಡಬಹುದು. ಮಸೀದಿ ನಿರ್ಮಾಣಕ್ಕೆ ಜಾಗ ಮಾಡಿಕೊಡಿ ಎಂಬ ಸುಪ್ರೀಮ್ ಆದೇಶ ವನ್ನು ಸರಕಾರ ಎಷ್ಟಂಶ ಪಾಲಿಸಿದೆ ಎಂಬ ಬಗ್ಗೆಯೂ ಪರಾಮರ್ಶೆ ನಡೆಸಬಹುದು. ಹಾಗೆಯೇ, ಕ್ರಿಮಿನಲ್ ಕೃತ್ಯ ಎಂದು ಸುಪ್ರೀಮ್  ಕೋರ್ಟು ಸಾರಿದ ಮಸೀದಿ ಧ್ವಂಸದ ವಿಚಾರಣೆ ಎಲ್ಲಿಗೆ ಬಂದು ಮುಟ್ಟಿದೆ ಎಂದೂ ವಿಶ್ಲೇಷಿಸಬಹುದು. ಆದರೆ ಇವಾವುವೂ ಆಗುತ್ತಿಲ್ಲ.  ಒಂದು ಕಡೆ,

ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿರುವಾಗ ಇನ್ನೊಂದು ಕಡೆ ಮಸೀದಿ ನಿರ್ಮಾಣ ಕಾಮಗಾರಿಯೇ ಆರಂಭವಾಗಿಲ್ಲ.  ಅಯೋಧ್ಯೆಗಿಂತ 22 ಕಿ.ಮೀಟರ್ ದೂರದ ದನ್ನಿಪುರದಲ್ಲಿ ಮಸೀದಿ ನಿರ್ಮಾಣಕ್ಕೆಂದು ಸರಕಾರ 5 ಎಕರೆ ಭೂಮಿಯನ್ನೇನೋ ನೀಡಿದೆ.  ಆದರೆ, ಇದು ಕೃಷಿ ಭೂಮಿ ಎಂದು ಹೇಳಲಾಗುತ್ತಿದೆ. ಕೃಷಿ ಭೂಮಿಯಲ್ಲಿ ಮಸೀದಿ ನಿರ್ಮಿಸುವುದಕ್ಕೆ ಅದರದ್ದೇ  ಆದ ಕಾನೂನು  ತೊಡಕುಗಳಿವೆ. 2021ರಲ್ಲಿ ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದನ್ನು ಬಿಟ್ಟರೆ ಉಳಿದಂತೆ ಈವರೆಗೆ ಯಾವ ಚಟುವಟಿಕೆಯೂ ನಡೆದಿಲ್ಲ. ಆಯೋಧ್ಯಾ ಅಭಿವೃದ್ಧಿ ಪ್ರಾಧಿಕಾರವು (AAD) ವಿವಿಧ ಕಾರಣಗಳನ್ನೊಡ್ಡಿ ನಿರ್ಮಾಣ ಕಾರ್ಯಕ್ಕೆ ತಡೆ ಒಡ್ಡುತ್ತಲೇ ಇದೆ.  2022ರಲ್ಲಿ ಅಗ್ನಿಶಾಮಕ ಇಲಾಖೆಯು ರಸ್ತೆಗೆ ಸಂಬಂಧಿಸಿ ತಕರಾರನ್ನು ಎತ್ತಿ ನಿರಪೇಕ್ಷಣಾ ಸರ್ಟಿಫಿಕೇಟ್ ಕೊಡಲು ನಿರಾಕರಿಸಿತ್ತು. ಆ  ಬಳಿಕ ಮಸೀದಿ ನಿರ್ಮಾಣದ ನಕಾಶೆಗೆ ಆಕ್ಷೇಪ ವ್ಯಕ್ತಪಡಿಸಿತು. 4500 ಚದರ ಮೀಟರ್ ವ್ಯಾಪ್ತಿಯಲ್ಲಿ ಮಸೀದಿ, ಪ್ರತಿದಿನ 200 ಮಂದಿಗೆ ಊಟ ಹಾಕಿಸುವಷ್ಟು ದೊಡ್ಡದಾದ ಕಮ್ಯುನಿಟಿ ಕಿಚನ್, 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ, ಮ್ಯೂಸಿಯಂ, ಸಮುದಾಯ ಸಂಶೋಧನಾ ಕೇಂದ್ರ...  ಇತ್ಯಾದಿಗಳನ್ನು ನಿರ್ಮಿಸುವ ನಕಾಶೆಯನ್ನು ಆಯೋಧ್ಯಾ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗಿತ್ತು. ಆದರೆ, 

ಇದರ  ಅಂಗೀಕಾರಕ್ಕಾಗಿ 112 ಕೋಟಿ ರೂಪಾಯಿ  ಡಿಪಾಸಿಟ್ ಇಡುವಂತೆ ಅದು ಸೂಚಿಸಿತು. ಆದರೆ ಉ. ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ನ  ಅಧೀನದಲ್ಲಿ  ಮಸೀದಿ ನಿರ್ಮಾಣಕ್ಕೆಂದೇ ರಚಿಸಲಾಗಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫಾರ್ಮ್(IICF)ನ ಬಳಿ ಇಷ್ಟು ಮೊತ್ತ ಇರಲಿಲ್ಲ. 50  ಲಕ್ಷ ರೂಪಾಂಯಿ ಡಿಪಾಸಿಟ್ ಇಡಲಷ್ಟೇ ನಾವು ಶಕ್ತರು ಎಂದು ಅದು ಹೇಳಿತು. ಆದರೆ, ಪ್ರಾಧಿಕಾರ ಈ ಕೋರಿಕೆಯನ್ನು ತಿರಸ್ಕರಿಸಿತು.  ಇದರಿಂದಾಗಿ ಉಭಯ ಸಂಕಟಕ್ಕೆ ಸಿಲುಕಿದ IICF, ಪ್ರಸ್ತಾವಿತ ನಕಾಶೆಯಿಂದ ಮಸೀದಿಯೊಂದನ್ನು ಬಿಟ್ಟು ಉಳಿದವುಗಳನ್ನೆಲ್ಲಾ  ಕೈಬಿಡುವ ನಿರ್ಧಾರಕ್ಕೆ ಬಂತು. ಮಸೀದಿ ನಿರ್ಮಾಣಕ್ಕೆ ಬೇಕಾದಷ್ಟು ಡಿಪಾಸಿಟ್ ಇಡುವುದು ಮತ್ತು ಮಸೀದಿ ನಿರ್ಮಾಣದ ಬಳಿಕ ಹಣ  ಸಂಗ್ರಹಿಸಿ ಉಳಿದವುಗಳ ನಿರ್ಮಾಣಕ್ಕೆ ಕೈ ಹಾಕುವ ಗುರಿಯನ್ನು ಇಟ್ಟುಕೊಂಡಿತು. ಆರಂಭದಲ್ಲಿ ಭಾರತೀಯ ಶೈಲಿಯಲ್ಲಿ ಮಸೀದಿ  ನಿರ್ಮಿಸುವ ಉದ್ದೇಶದೊಂದಿಗೆ ನಕಾಶೆ ತಯಾರಿಸಲಾಯಿತಾದರೂ ಅದು ಸಮಿತಿಯಲ್ಲಿ ತಿರಸ್ಕೃತಗೊಂಡಿತು. ಇದೀಗ ಹೊಸ ಶೈಲಿಯ ನಕಾಶೆ  ತಯಾರಾಗುತ್ತಿದ್ದು, 2024ರ ಮೇ ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಹೇಳಲಾಗಿದೆ. ಬಳಿಕ ಅದಕ್ಕೆ ಆಡಳಿತಾತ್ಮಕ ಅಂಗೀಕಾರ  ದೊರೆಯಬೇಕಾಗಿದೆ. ದೆಹಲಿಯ ಜಾಮಿಯಾ ಮಿಲ್ಲಿಯ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆರ್ಕಿಟೆಕ್ಚರ್ ಅಖ್ತರ್ ಅವರ ನೇತೃತ್ವದಲ್ಲಿ  ರಚನೆಯಾಗುತ್ತಿರುವ ಮಸೀದಿ ನಕಾಶೆಯು ಎಷ್ಟೇ ಅದ್ಭುತವಾಗಿದ್ದರೂ ಹಣ ಮತ್ತು ಆಡಳಿತಾತ್ಮಕ ತೊಡಕುಗಳು ಈ ಮಸೀದಿ ನಿರ್ಮಾಣಕ್ಕೆ  ಎದುರಾಗಲಿದೆ ಎಂಬುದು ಸ್ಪಷ್ಟ. ಒಂದುವೇಳೆ,

ಮಂದಿರ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೋರಿರುವ ಮುತುವರ್ಜಿಯ ಒಂದು ಶೇಕಡಾ ಅಂಶವನ್ನಾದರೂ ಈ  ಮಸೀದಿ ನಿರ್ಮಾಣದತ್ತ ನೀಡುತ್ತಿದ್ದರೆ ಒಂದೇ ಸಮಯದಲ್ಲಿ ಮಸೀದಿ ಮತ್ತು ಮಂದಿರಗಳ ಉದ್ಘಾಟನೆ ನಡೆಸಬಹುದಿತ್ತು. ಒಂದುಕಡೆ,  ಸರಕಾರಿ  ಸಂಸ್ಥೆಗಳು ಮಸೀದಿ ನಿರ್ಮಾಣಕ್ಕೆ ವಿವಿಧ ಅಡೆ-ತಡೆಗಳನ್ನು ನೀಡುತ್ತಿರುವಾಗ ಇನ್ನೊಂದು ಕಡೆ ಸರಕಾರವೇ  ಮುಂದೆ ನಿಂತು ಮಂದಿರ ನಿರ್ಮಿಸುತ್ತಿದೆ. ಅಲ್ಲದೇ, ಸರಕಾರದ ಅಧೀನದಲ್ಲಿರುವ ಸುನ್ನಿ ವಕ್ಫ್ ಬೋರ್ಡ್ ಉದ್ದೇಶಪೂರ್ವಕವಾಗಿಯೇ  ಮಸೀದಿ ನಿರ್ಮಾಣಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿದೆಯೇ ಎಂಬ ಅನುಮಾನವೂ ಇದೆ. 

ಇವೇನೇ ಇದ್ದರೂ, ಮುಂದಿನ ಕೆಲವು  ದಿನಗಳ ಕಾಲ ಮುಸ್ಲಿಮರು ಜಾಗರೂಕರಾಗಿರಬೇಕು. ರಾಮಮಂದಿರಕ್ಕೆ ಸಂಬಂಧಿಸಿ ಮಾಧ್ಯಮದವರು ಕೇಳುವ ಪ್ರಶ್ನೆಗಳನ್ನು ಅಳೆದೂ  ತೂಗಿ ಉತ್ತರಿಸಬೇಕು. ಮುಸ್ಲಿಮರನ್ನು ಶ್ರೀ ರಾಮನ ವಿರೋಧಿಗಳು ಎಂದು ಬಿಂಬಿಸುವುದಕ್ಕೆ ಪೂರಕವಾಗಿ ಏನನ್ನೂ ಆಡಬಾರದು.

Tuesday, 2 January 2024

ಹಿಂದೂ ಧರ್ಮಕ್ಕೆ ಸವಾಲಾಗಿರುವ ಕಲ್ಲಡ್ಕ ಪ್ರಭಾಕರ ಭಟ್




ಈ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚೆಂದರೆ 20 ಕೋಟಿಯಷ್ಟಿದೆ. ಆದರೆ ಹಿಂದೂಗಳ ಜನಸಂಖ್ಯೆ 100 ಕೋಟಿಗಿಂತಲೂ ಅಧಿಕವಿದೆ. ಕೇವಲ ಜನಸಂಖ್ಯೆಯೊಂದೇ  ಅಲ್ಲ, ಈ ದೇಶದ ಸಂಪನ್ಮೂಲವನ್ನು ಅತ್ಯಂತ ಕಡಿಮೆ ಪಡೆಯುತ್ತಿರುವ ಸಮುದಾಯವೂ  ಮುಸ್ಲಿಮರದ್ದೇ. ಸರಕಾರಿ ಉದ್ಯೋಗಗಳಲ್ಲಿ ಮುಸ್ಲಿಮರ ಪಾಲು ಅತ್ಯಂತ ಕಡಿಮೆ. ಬ್ಯಾಂಕ್‌ಗಳಿಂದ  ಭಾರೀ ಪ್ರಮಾಣದ ಸಾಲ ಪಡೆದು  ವಿದೇಶಕ್ಕೆ ಹಾರಿ ಹೋಗುವ ಉದ್ಯಮಿಗಳ ಪೈಕಿ ಮುಸ್ಲಿಮರಾರೂ ಇಲ್ಲ. ದೇಶದ ವಿವಿಧ ರಾಜ್ಯಗಳ ಶಾಸನಸಭೆಗಳಲ್ಲಿ ಮುಸ್ಲಿಮ್ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ಸಂಸತ್‌ನಲ್ಲೂ ಇದೇ ಪರಿಸ್ಥಿತಿ. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಒಬ್ಬನೇ ಒಬ್ಬ ಮುಸ್ಲಿಮ್ ಜನಪ್ರತಿನಿಧಿ ಇಲ್ಲ. ಮುಸ್ಲಿಮ್ ಸಮುದಾಯದ ಹಿಂದುಳಿವಿಕೆಯನ್ನು ಪರಿಗಣಿಸಿ ನೀಡಲಾಗುತ್ತಿದ್ದ  ಒಂದೊಂದೇ  ಸೌಲಭ್ಯವನ್ನೂ ಸರಕಾರಗಳು ಕಿತ್ತುಕೊಳ್ಳುತ್ತಾ ಬರುತ್ತಿವೆ. ಕರ್ನಾಟಕದಲ್ಲಿ 2ಬಿ ಮೀಸಲಾತಿ ಕೆಟಗರಿಯಿಂದ ಮುಸ್ಲಿಮ್  ಸಮುದಾಯವನ್ನು ಹೊರಹಾಕಲಾಯಿತು. ಇದೇವೇಳೆ,

 ಉನ್ನತ ವ್ಯಾಸಂಗ ಮಾಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿಗಳೂ ಸೇರಿದಂತೆ  ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೌಲಾನಾ ಆಝಾದ್ ಫೆಲೋಶಿಪನ್ನು ಕೇಂದ್ರ ಸರಕಾರ ಸ್ಥಗಿತಗೊಳಿಸಿದೆ. ಬಾಬರಿ  ಮಸೀದಿ ಪ್ರಕರಣದಲ್ಲಿ ಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟು ಏಕಧ್ವನಿಯಲ್ಲಿ ಆದೇಶಿಸಿತ್ತು. ಆದರೆ,  ಮಂದಿರ ನಿರ್ಮಾಣ ಬಹುತೇಕ ಪೂರ್ತಿಯಾಗಿದೆ. ಆದರೆ ಮಸೀದಿ ನಿರ್ಮಾಣಕ್ಕೆ ಇನ್ನೂ ಶಂಕುಸ್ಥಾಪನೆಯೇ ಆಗಿಲ್ಲ. ಇದರ  ನಡುವೆಯೇ ಕಾಶಿಯ ಗ್ಯಾನ್‌ವಾಪಿ ಮಸೀದಿ ಮತ್ತು ಮಥುರಾದ ಈದ್‌ಗಾಹ್ ಮಸೀದಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ದೂರು ಸ ಲ್ಲಿಕೆಯಾಗಿದೆ ಮತ್ತು ಮಸೀದಿಗಳ ಸರ್ವೇಗೆ ನ್ಯಾಯಾಲಯ ಅನುಮತಿಯನ್ನೂ ನೀಡಿದೆ. ಇದೇವೇಳೆ, ದೇಶದೆಲ್ಲೆಡೆ ಅನೈತಿಕ ಪೊಲೀಸ್‌ಗಿರಿಯ ಹೆಸರಲ್ಲಿ, ದನಸಾಗಾಟದ ಹೆಸರಲ್ಲಿ ಮುಸ್ಲಿಮ್ ಸಮುದಾಯ ವಿವಿಧ ರೀತಿಯ ದಾಳಿಗಳಿಗೆ ತುತ್ತಾಗುತ್ತಿದೆ. ವ್ಯಾಪಾರ  ಬಹಿಷ್ಕಾರವನ್ನೂ ಎದುರಿಸುತ್ತಿದೆ. ಇದರ ಜೊತೆಗೆ ಕಾನೂನು ನಿರ್ಮಾಣದಲ್ಲೂ ಮುಸ್ಲಿಮ್ ಸಮುದಾಯವನ್ನೇ ಗುರಿ ಮಾಡಲಾಗುತ್ತಿದೆ.  ತ್ರಿವಳಿ ತಲಾಕನ್ನು ಸುಪ್ರೀಮ್ ಕೋರ್ಟು ಅಮಾನ್ಯ ಮಾಡಿದ್ದನ್ನೇ ನೆಪವಾಗಿಸಿಕೊಂಡ ಕೇಂದ್ರ ಸರಕಾರ ಕಾನೂನೊಂದನ್ನು ರೂಪಿಸಿತು.  ಅದರ ಪ್ರಕಾರ, ತ್ರಿವಳಿ ತಲಾಕ್ ಹೇಳುವುದನ್ನು ಕ್ರಿಮಿನಲ್ ಅಪರಾಧವೆಂದು ಸಾರಲಾಯಿತು ಮತ್ತು ಅಂಥ ವ್ಯಕ್ತಿಗೆ 3 ವರ್ಷಗಳ ಕಾಲ  ಜೈಲು ಶಿಕ್ಷೆಯನ್ನು ಘೋಷಿಸಲಾಯಿತು. ಒಂದುಕಡೆ, 

ಸುಪ್ರೀಮ್ ಕೋರ್ಟು ತ್ರಿವಳಿ ತಲಾಕನ್ನು ಅಮಾನ್ಯ ಮತ್ತು ಅಸಿಂಧು ಎಂದು  ಹೇಳಿರುವಾಗ ವ್ಯಕ್ತಿಯನ್ನು ಜೈಲಿಗೆ ಹಾಕುವುದರಿಂದ ಉಂಟಾಗುವ ಕೌಟುಂಬಿಕ ಸಮಸ್ಯೆಗಳು ಏನೇನು ಅನ್ನುವ ಪ್ರಶ್ನೆಗೆ ಈ ಕಾನೂನಿನಲ್ಲಿ ಉತ್ತರವೇ ಇಲ್ಲ. ತ್ರಿವಳಿ ತಲಾಕ್ ಹೇಳಿದ ವ್ಯಕ್ತಿಯನ್ನು ಜೈಲಿಗೆ ಹಾಕುವುದೆಂದರೆ, ಆ ತಲಾಕ್ ಸಿಂಧು ಎಂದು ಪರೋಕ್ಷವಾಗಿ  ಸಾರಿದಂತೆ. ತಲಾಕೇ ಅಲ್ಲದ ತಲಾಕ್ ಗಾಗಿ ವ್ಯಕ್ತಿಯನ್ನು ಜೈಲಿಗೆ ಹಾಕಿದರೆ, ಆ ಬಳಿಕವೂ ಆ ವಿವಾಹ ಊರ್ಜಿತದಲ್ಲಿರುವುದೇ, ಜೈಲಿನಿಂದ ಹೊರಬಂದ ವ್ಯಕ್ತಿ ಆ ದಾಂಪತ್ಯ ಸಂಬಂಧವನ್ನು ಉಳಿಸಿಕೊಳ್ಳಬಹುದೇ, ಆತ ಜೈಲಲ್ಲಿರುವ ವರೆಗೆ ಆತನ ಪತ್ನಿ ಮತ್ತು ಮಕ್ಕಳನ್ನು  ನೋಡಿಕೊಳ್ಳುವವರು ಯಾರು, ವರಮಾನ ಏನು... ಇತ್ಯಾದಿ ಪ್ರಶ್ನೆಗಳಿಗೂ ಕಾನೂನು ರೂಪಿಸಿದವರು ಉತ್ತರವನ್ನು ಹೇಳಲಿಲ್ಲ. ಆತ  ಜೈಲಲ್ಲಿರುವಾಗ ಆಕೆ ಇನ್ನೊಂದು ಮದುವೆ ಆಗುವಂತೆಯೂ ಇಲ್ಲ. ಯಾಕೆಂದರೆ, ಸುಪ್ರೀಮ್ ಕೋರ್ಟು ಪ್ರಕಾರ ತ್ರಿವಳಿ ತಲಾಕ್,  ವಿಚ್ಛೇದನ ಆಗುವುದಿಲ್ಲ. ಗಂಡನಿಂದ  ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಯಾಗುವುದಕ್ಕೆ ಅವಕಾಶವೂ ಇಲ್ಲ. ಅತ್ತ ವಿಚ್ಛೇದನಕ್ಕೂ  ಒಳಗಾಗದ ಮತ್ತು ಇತ್ತ ಗಂಡನೂ ಇಲ್ಲದ ಅತಂತ್ರ ಸ್ಥಿತಿಯೊಂದರಲ್ಲಿ ಮುಸ್ಲಿಮ್ ಮಹಿಳೆಯರನ್ನು ನಿಲ್ಲಿಸುವ ಕಾನೂನೊಂದನ್ನು ಕೇಂದ್ರ  ಸರಕಾರ ರೂಪಿಸಿ ಕೈತೊಳೆದುಕೊಂಡಿದೆ. ಮಾತ್ರವಲ್ಲ, ಇದನ್ನೇ ಮುಸ್ಲಿಮ್ ಸಮುದಾಯದ ಮಹಿಳೆಯರಿಗೆ ಮಾಡಲಾದ ಮಹದುಪಕಾರ  ಎಂದೇ ಬಿಂಬಿಸಿಕೊಳ್ಳುತ್ತಿದೆ. ಅದೇವೇಳೆ,

ಹಿಂದೂ ವ್ಯಕ್ತಿಯೋರ್ವ ಹೀಗೆಯೇ ತನ್ನ ಪತ್ನಿಯನ್ನು ತ್ಯಜಿಸಿ ಹೋಗುವುದನ್ನು ಕೇಂದ್ರ ಸರಕಾರ ಸಿವಿಲ್ ಪ್ರಕರಣವಾಗಿ ಸದ್ದಿಲ್ಲದೇ ಉಳಿಸಿಕೊಂಡಿದೆ.  ಎಲ್ಲರಿಗೂ ಸಮಾನ ಕಾನೂನು ಇರಬೇಕು ಎಂದು ಒತ್ತಿ ಹೇಳುತ್ತಾ ಸಮಾನ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುವ ಇದೇ  ಸರಕಾರ ಒಂದೇ ಬಗೆಯ ಅಪರಾಧವನ್ನು ಎರಡು ರೀತಿಯಾಗಿ ವಿಂಗಡಿದ್ದೇಕೆ ಎಂಬ ಪ್ರಶ್ನೆಗೂ ಉತ್ತರವಿಲ್ಲ. ಪತ್ನಿಯನ್ನು ತ್ಯಜಿಸಿದ  ಮುಸ್ಲಿಮ್ ವ್ಯಕ್ತಿ ಕ್ರಿಮಿನಲ್ ಆಗಿ ಜೈಲಲ್ಲಿರುವಾಗ ಅದೇ ತಪ್ಪೆಸಗಿದ ಹಿಂದೂ ವ್ಯಕ್ತಿ ಈ ಯಾವ ಭಯವೂ ಇಲ್ಲದೇ ಮತ್ತು ಕ್ರಿಮಿನಲ್ಲೂ  ಆಗದೇ ಆರಾಮವಾಗಿರುತ್ತಾನೆ. ಈ ನಡುವೆ ಬಹುಪತ್ನಿತ್ವವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸಲು ಅಸ್ಸಾಂ ಸರಕಾರ  ಹೊರಟಿರುವಾಗ ಉತ್ತರ ಪ್ರದೇಶದಲ್ಲಿ ಮದ್ರಸಾಗಳು ಸರಕಾರದ ಕೆಂಗಣ್ಣಿಗೆ ಗುರಿಯಾಗಿವೆ. ಲವ್ ಜಿಹಾದ್‌ನ ಹೆಸರಲ್ಲಿ ಕಾನೂನುಗಳನ್ನು  ಜಾರಿ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ  ಕಲ್ಲಡ್ಕ ಪ್ರಭಾಕರ ಭಟ್  ಮುಸ್ಲಿಮ್ ಸಮುದಾಯದ ಮಹಿಳೆಯರ ಬಗ್ಗೆ ಅತ್ಯಂತ  ತುಚ್ಛವಾದ ಮತ್ತು ಅವಮಾನಕರವಾದ ಹೇಳಿಕೆಯನ್ನು ಸಾರ್ವಜನಿಕರ ಮುಂದೆ ನೀಡಿದ್ದಾರೆ. ಅವರೋರ್ವ ವ್ಯಕ್ತಿ ಮಾತ್ರವಾಗಿದ್ದರೆ ಈ  ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿರಲಿಲ್ಲ. ಆದರೆ, 

ಅವರು ರಾಜಕೀಯವಾಗಿ, ಧಾರ್ಮಿಕವಾಗಿ ಮತ್ತು ಸಾರ್ವಜನಿಕವಾಗಿ  ಪ್ರಭಾವಶಾಲಿ. ಗಣೇಶೋತ್ಸವ, ಶಾರದೋತ್ಸವ, ಹಿಂದೂ ಸಮಾಜೋತ್ಸವ, ಜೀರ್ಣೋದ್ಧಾರ, ಅಷ್ಟಮಂಗಲ... ಇತ್ಯಾದಿ ಎಲ್ಲ  ಕಾರ್ಯಕ್ರಮಗಳಲ್ಲೂ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸುತ್ತಾರೆ. ಇಂಥ ವ್ಯಕ್ತಿ ಸಾರ್ವಜನಿಕರ ಮುಂದೆ ಮುಸ್ಲಿಮ್ ಮಹಿಳೆಯರ  ವಿರುದ್ಧ ಅವಮಾನ ಕಾರಿಯಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಪ್ರಬಲ  ಆಗ್ರಹವಾದರೆ, ಇನ್ನೊಂದು- ಜನಸಂಖ್ಯೆ, ಶ್ರೀಮಂತಿಕೆ, ಸರಕಾರದಲ್ಲಿ ಪಾಲುದಾರಿಕೆಯೂ ಸೇರಿದಂತೆ ಯಾವ ವಿಷಯದಲ್ಲೂ ಹಿಂದೂ  ಸಮುದಾಯಕ್ಕೆ ಬದಲಿಯಾಗದ, ಪ್ರತಿಯಾಗದ ಮತ್ತು ಸಾಟಿಯಾಗದ ಮುಸ್ಲಿಮ್ ಸಮುದಾಯವನ್ನು ಇವರೆಲ್ಲ ಪದೇ ಪದೇ  ಕಟಕಟೆಯಲ್ಲಿ ಯಾಕೆ ನಿಲ್ಲಿಸುತ್ತಿದ್ದಾರೆ ಅನ್ನುವ ಪ್ರಶ್ನೆಯೂ ಇದೆ.  ಹೀಗೆ ಬೈಯೋದರ ಹಿಂದೆ ಓಟಿನ ಉದ್ದೇಶ ಇದೆಯೇ? ಮುಸ್ಲಿಮರನ್ನು  ತೆಗಳುವುದರಿಂದ ಹಿಂದೂಗಳೇಕೆ ತೆಗಳಿದವರಿಗೆ ಓಟು ಕೊಡುತ್ತಾರೆ? ಮುಸ್ಲಿಮರನ್ನು ತೆಗಳುವುದರಿಂದ ಮತ್ತು ಸತಾಯಿಸುವುದರಿಂದ  ಹಿಂದೂ ಧರ್ಮಕ್ಕೆ ಆಗುವ ಲಾಭವೇನು? ಹಿಂದೂ ಧರ್ಮದ ಅಭಿವೃದ್ಧಿಯು ಮುಸ್ಲಿಮರನ್ನು ಆಧರಿಸಿಕೊಂಡಿದೆಯೇ? 20  ಕೋಟಿಯಷ್ಟಿರುವ ಮುಸ್ಲಿಮರು 100 ಕೋಟಿಗಿಂತಲೂ ಅಧಿಕ ಇರುವ ಹಿಂದೂಗಳಿಗೆ ತೊಡಕೇ? ಅಪಾಯಕಾರಿಯೇ?  ರಾಜಕೀಯವಾಗಿ, ಆರ್ಥಿಕವಾಗಿ, ಕಾನೂನಾತ್ಮಕವಾಗಿ ಮತ್ತು ಸಾಮಾಜಿಕವಾಗಿ- ಹೀಗೆ ಯಾವ ಕ್ಷೇತ್ರದಲ್ಲೂ ಬಲಿಷ್ಠವಾಗಿಲ್ಲದ  ಸಮುದಾಯವೊಂದನ್ನು ಈ ಎಲ್ಲ ಕ್ಷೇತ್ರಗಳಲ್ಲೂ ಬಲಶಾಲಿಯಷ್ಟೇ ಅಲ್ಲ, ಸಂಪೂರ್ಣ ಪ್ರಾಬಲ್ಯವನ್ನು ಸ್ಥಾಪಿಸುವ ಸಮುದಾಯಕ್ಕೆ ಪ್ರತಿಸ್ಪರ್ಧಿ ಎಂದು ಬಿಂಬಿಸುವುದನ್ನು ಹಿಂದೂಗಳು ಯಾಕೆ ನಂಬುತ್ತಿದ್ದಾರೆ? 

ಈ ದೇಶದಲ್ಲಿ 99.99% ರಾಜಕೀಯ ಪಕ್ಷಗಳು ಕೂಡಾ  ಹಿಂದೂಗಳದ್ದೇ  ಮತ್ತು ಮುಂಚೂಣಿ ನಾಯಕರೂ ಹಿಂದೂಗಳೇ. ಈ ದೇಶದ ಪ್ರಮುಖ ಉದ್ಯಮಿಗಳೂ ಹಿಂದೂಗಳೇ.  ವಿಶ್ವವಿದ್ಯಾಲಯಗಳ ಕುಲಪತಿಗಳು, ಪ್ರೊಫೆಸರ್‌ಗಳು, ಉಪನ್ಯಾಸಕರ ಪಟ್ಟಿಯನ್ನು ಪರಿಶೀಲಿಸಿದರೂ ಅಲ್ಲೆಲ್ಲಾ  ಮುಸ್ಲಿಮ್ ಹೆಸರು ಅಪರೂಪದಲ್ಲಿ ಅಪರೂಪ. ರಾಷ್ಟ್ರಪತಿಗಳು, ರಾಜ್ಯಪಾಲರುಗಳು, ಪ್ರಧಾನಿ, ನ್ಯಾಯಾಧೀಶರುಗಳು, ವೈದ್ಯರುಗಳು, ಸಾಹಿತಿಗಳು... ಹೀಗೆ  ಎಲ್ಲೆಲ್ಲೂ ಮುಸ್ಲಿಮ್ ಪ್ರಾತಿನಿಧ್ಯ ಅತ್ಯಂತ ಕಡಿಮೆ. ಇಷ್ಟೆಲ್ಲಾ ಇದ್ದೂ ಮತ್ತೂ ಮುಸ್ಲಿಮರನ್ನೇ ಕಟಕಟೆಯಲ್ಲಿ ನಿಲ್ಲಿಸುವುದು ಮತ್ತು ಅದನ್ನೇ  ಹಿಂದೂಗಳು ನಂಬುವುದೆಲ್ಲ ಏಕೆ? ಮುಸ್ಲಿಮರನ್ನು ಅಪಾಯಕಾರಿಗಳಂತೆ ಬಿಂಬಿಸುವವರ ಸುಳ್ಳನ್ನು ಪ್ರಶ್ನಿಸದೇ ಸುಳ್ಳಿಗೇ ಶರಣಾಗುವ  ಪರಿಸ್ಥಿತಿ ಈ ದೇಶದಲ್ಲಿ ಯಾಕಿದೆ?

ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದಲ್ಲಿರುವ ಎಲ್ಲರ ಕೊಡುಗೆಯೂ ಅತೀ ಅಗತ್ಯ. ಮುಸ್ಲಿಮ್ ಸಮುದಾಯವನ್ನು  ಸದಾ ಬೇಲಿಯ ಮೇಲಿಡುತ್ತಾ ಮತ್ತು ಅವರ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಾ ದೇಶದ ಅಭಿವೃದ್ಧಿಯ ಕನಸು ಕಾಣುವುದು ಅತಾರ್ಕಿಕ  ಮತ್ತು ಅಸಂಬದ್ಧ. ಮುಸ್ಲಿಮರನ್ನು ಭೂತದಂತೆ ಚಿತ್ರಿಸುವವರನ್ನು ಹಿಂದೂಗಳು ತಿದ್ದದ ಹೊರತು ಅವರು ವರ್ತನೆ ಬದಲಿಸಲಾರರು.  ಪ್ರಭಾಕರ ಭಟ್ ಆಗಲಿ, ಇನ್ನಾರದ್ದೇ  ಆಗಲಿ ಮುಸ್ಲಿಮ್ ದ್ವೇಷ ಕೊನೆಗೊಳ್ಳಬೇಕಾದರೆ ಹಿಂದೂ ಸಮುದಾಯ ಚುರುಕಾಗಬೇಕು.  ಹಿಂದೂ ಧರ್ಮದ ಅಳಿವು-ಉಳಿವು ಮುಸ್ಲಿಮರನ್ನು ಅವಲಂಬಿಸಿಕೊಂಡಿಲ್ಲ ಎಂಬುದನ್ನು ಗಟ್ಟಿ ಧ್ವನಿಯಲ್ಲಿ ಸಾರಬೇಕು. ಇಂಥವರಿಗೆ  ಧಾರ್ಮಿಕ ಕಾರ್ಯಕ್ರಮಗಳಿಂದ ಬಹಿಷ್ಕಾರ ಹೇರುವ ಮೂಲಕ ಪಾಠ ಕಲಿಸಬೇಕು.

Monday, 25 December 2023

ಹೆಣ್ಣು ಭ್ರೂಣ ಹತ್ಯೆ: ಈ ಮನಸ್ಥಿತಿಯನ್ನು ಬರೇ ಕಾನೂನಿನಿಂದ ಬದಲಿಸಬಹುದೇ?



ಇತ್ತೀಚೆಗೆ ರಾಜ್ಯದ ಮಂಡ್ಯದಲ್ಲಿ ಭಿನ್ನ ಪಾದಯಾತ್ರೆ ನಡೆಯಿತು. ಮದುವೆಗೆ ಹೆಣ್ಣು ಕರುಣಿಸು ಎಂದು ಕೋರಿ ಮಾಯಕಾರ ಮಾದೇವನಿಗೆ ಹರಕೆ ಒಪ್ಪಿಸಲು ನಡೆಸಿದ ಪಾದಯಾತ್ರೆ ಇದು. ಇವರು ಹೀಗೆ ಪಾದಯಾತ್ರೆ ನಡೆಸುತ್ತಿರುವಾಗ ಇದೇ ಮಂಡ್ಯದ ಲ್ಯಾಬ್‌ಗಳ ಮೇಲೆ  ಪೊಲೀಸರು ಕಣ್ಣಿಟ್ಟಿದ್ದರು. ಭಾರೀ ಸಂಖ್ಯೆಯಲ್ಲಿ ಇಲ್ಲಿ ಹೆಣ್ಣುಭ್ರೂಣ ಹತ್ಯೆಯಾಗುತ್ತಿದೆ ಎಂಬ ಸುಳಿವು ಅವರಿಗೆ ಲಭಿಸಿತ್ತು. ಆ ಬಳಿಕ  ಹಲವರನ್ನು ಬಂಧಿಸಿದರು. ಕೇವಲ ಮೂರೇ ಮೂರು ವರ್ಷಗಳಲ್ಲಿ ಈ ಮಂಡ್ಯ-ಮೈಸೂರು ಭಾಗದಲ್ಲಿ 900ರಷ್ಟು ಹೆಣ್ಣು ಭ್ರೂಣ  ಹತ್ಯೆಯಲ್ಲಿ ಈ ಬಂಧಿತರು ಭಾಗಿಯಾಗಿದ್ದಾರೆ ಅನ್ನುವುದು ಬೆಳಕಿಗೆ ಬಂತು. ಒಂದುಕಡೆ,

ಮದುವೆಗೆ ಹೆಣ್ಣಿಲ್ಲ ಎಂಬ ಸ್ಥಿತಿಯಾದರೆ ಇನ್ನೊಂದು ಕಡೆ ಇರುವ ಹೆಣ್ಣನ್ನೇ ಸಾಯಿಸುವ ಸ್ಥಿತಿ- ಇವೆರಡೂ ಒಂದೇ ಕಡೆ ನಡೆ ದಿರುವುದು ನಿಜಕ್ಕೂ ಅಚ್ಚರಿ. ಉತ್ತರ ಕನ್ನಡ, ಮಂಡ್ಯ-ಮೈಸೂರು, ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಹರೆಯದ ಹೆಣ್ಣು  ಮಕ್ಕಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಎಂಬ ವರದಿ ಇದೆ. ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿ ಬೆಳಗಾವಿ ಮೊದಲ ಸ್ಥಾನದಲ್ಲಿದ್ದರೆ, ಮಂಡ್ಯ ಎರಡು ಮತ್ತು ಬಾಗಲಕೋಟೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಮಂಡ್ಯ, ಚಿಕ್ಕಬಳ್ಳಾಪುರ, ಬಾಗಲಕೋಟೆ,  ಕಲಬುರಗಿ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಸಾವಿರ ಗಂಡು ಮಕ್ಕಳಿಗೆ 900ಕ್ಕಿಂತಲೂ ಕಡಿಮೆ ಹೆಣ್ಣು ಮಕ್ಕಳಿದ್ದು, ಸರ್ಕಾರದ ಕೆಂಪು  ಪಟ್ಟಿಯಲ್ಲಿದೆ. ಇದು ಸರಕಾರದ ನಾಗರಿಕ ನೋಂದಣಿ ವ್ಯವಸ್ಥೆಯನ್ನು ಆಧರಿಸಿದ ದತ್ತಾಂಶಗಳಂತೆ  ತಯಾರಿಸಲಾದ ಮಾಹಿತಿ.  ತಿಂಗಳುಗಳ ಹಿಂದೆ ಆದಿಚುಂಚನಗಿರಿ ಮಠದಲ್ಲಿ ವಧು-ವರ ಸಂಬಂಧ ಏರ್ಪಡಿಸುವುದಕ್ಕಾಗಿ ಸಮ್ಮೇಳನ ಏರ್ಪಡಿಸಲಾಗಿತ್ತು. ಇದರಲ್ಲಿ  10 ಸಾವಿರದಷ್ಟು ಯುವಕರಿಗೆ ಪ್ರತಿಯಾಗಿ ಕೇವಲ 300ರಷ್ಟು ಯುವತಿಯರು ಮಾತ್ರ ಪಾಲ್ಗೊಂಡಿದ್ದರು.

ಯಾಕೆ ಹೀಗಾಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಕೊಟ್ಟ ಹೆಣ್ಣು ಕುಲದಿಂದ ಹೊರಗೆ ಅನ್ನುವ ಮಾತು ಈ ದೇಶದಲ್ಲಿ ಚಾಲ್ತಿಯಲ್ಲಿದೆ. ಹೆಣ್ಣಿನ ಪಾಲಿಗೆ ನಮ್ಮೆಲ್ಲ ಸಾಂಪ್ರದಾಯಿಕ ಆಚರಣೆಗಳು ಮತ್ತು ದೃಷ್ಟಿಕೋನಗಳು ಅಭದ್ರತೆಯನ್ನು ಸೂಚಿಸುತ್ತವೆಯೇ ಹೊರತು  ಆಕೆಯ ಬಗ್ಗೆ ಹೆಮ್ಮೆ, ಅಭಿಮಾನ ಮತ್ತು ಸಂತಸ ಪಡುವ ರೀತಿಯಲ್ಲಿ ಇಲ್ಲವೇ ಇಲ್ಲ. ವಂಶವನ್ನು ಮುಂದುವರಿಸಲು ಗಂಡು ಬೇಕು  ಎಂಬಲ್ಲಿಂದ ಹಿಡಿದು ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಕೊಡಬೇಕಾಗುತ್ತದೆ ಎಂಬಲ್ಲಿವರೆಗೆ ಹೆಣ್ಣು ವಂಶಕ್ಕೆ ಅನನುಕೂಲಕರವಾದ  ಪಟ್ಟಿಯನ್ನೇ ಸಮಾಜ ತಯಾರಿಸಿಟ್ಟುಕೊಂಡಿದೆ. ಹೆಣ್ಣನ್ನು ಎಷ್ಟೇ ಓದಿಸಿದರೂ ಅಂತಿಮವಾಗಿ ಆಕೆ ಪರರ ಪಾಲಾಗುತ್ತಾಳೆ ಎಂಬ ನಂಬಿಕೆ,  ಕೃಷಿ ಚಟುವಟಿಕೆಯಲ್ಲಿ ಹೆಣ್ಣಿಗಿಲ್ಲದ ಪ್ರಾಧಾನ್ಯತೆ, ಹೆಣ್ಣನ್ನು ಸದಾ ಕಾಡುವ ಸುರಕ್ಷಿತತೆಯ ಭೀತಿ ಮತ್ತು ಕೆಲವೊಮ್ಮೆ ಆಸ್ತಿಯಲ್ಲಿ ಹೆಣ್ಣು  ಮಕ್ಕಳಿಗೆ ಪಾಲು ಕೊಡಬೇಕಾಗುತ್ತದೆಂಬ ಭಯ.. ಇತ್ಯಾದಿಗಳೂ ಪಾಲಕರ ಹೆಣ್ಣು ದ್ವೇಷಕ್ಕೆ ಕಾರಣವಾಗುತ್ತದೆ. ಅಂದಹಾಗೆ,

ಕಾನೂನಿನ ಮೂಲಕ ಈ ಮಾನಸಿಕತೆಯನ್ನು ಪೂರ್ಣ ಮಟ್ಟದಲ್ಲಿ ಬದಲಿಸಬಹುದು ಎಂದು ಹೇಳುವ ಹಾಗಿಲ್ಲ. ಯಾಕೆಂದರೆ, ಹೆಣ್ಣು  ಭ್ರೂಣ ಪತ್ತೆ ಮತ್ತು ಹತ್ಯೆಯನ್ನು ಸುಸಜ್ಜಿತ ಆಸ್ಪತ್ರೆಗಳಲ್ಲೇ  ನಡೆಸಬೇಕೆಂದಿಲ್ಲ. ಇದನ್ನು ತೀರಾ ಅಸುರಕ್ಷಿತವಾಗಿ ಮತ್ತು ನಗರದಿಂದ  ದೂರದ ಪ್ರದೇಶಗಳಲ್ಲೂ ಮಾಡಲಾಗುತ್ತದೆ. ಸ್ಥಾಪಿತ ಸ್ಕ್ಯಾನಿಂಗ್ ಕೇಂದ್ರಗಳ ಬದಲು ಮೊಬೈಲ್ ಪ್ರಯೋಗಾಲಯದಲ್ಲೂ ಇಂಥ ಪತ್ತೆ  ಮತ್ತು ಹತ್ಯೆ ನಡೆಯುತ್ತಿರುವುದರಿಂದ ಅಧಿಕಾರಿಗಳಿಗೆ ಇದರ ಸುಳಿವು ಸಿಗುವುದು ಸುಲಭವಲ್ಲ. ಇತ್ತೀಚೆಗೆ ಮಂಡ್ಯದಲ್ಲಿ ಪತ್ತೆ ಹಚ್ಚಲಾದ  ‘ಭ್ರೂಣಹತ್ಯೆ’ ಜಾಲವು ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿತ್ತು. ಮಂಡ್ಯದ ಅಲೆಮನೆ ಸಮೀಪದ ಕೊಠಡಿಯಲ್ಲಿ ಯಾರಿಗೂ ಅನುಮಾನ ಬಾರದಂತೆಯೇ ಈ ಕೃತ್ಯ ನಡೆಯುತ್ತಿತ್ತು. ಸ್ಥಳೀಯರಿಗೆ ಈ ಬಗ್ಗೆ ಗೊತ್ತಾಗುವುದು ಸುಲಭವೂ ಅಲ್ಲ. ಇಲ್ಲಿ ಇನ್ನೊಂದು  ಸಂಗತಿಯೂ ಇದೆ, ಈ ಭ್ರೂಣ ಹತ್ಯೆಯ ವೈದ್ಯರ ಒತ್ತಾಸೆಯಿಂದ ನಡೆಯುತ್ತಿದೆ ಎನ್ನುವಂತೆಯೂ ಇಲ್ಲ. ದಂಪತಿಗಳ ಸಮ್ಮತಿಯಿಂದ  ಮತ್ತು ಒತ್ತಾಯದಿಂದಲೇ ಇಂಥವು ನಡೆಯುತ್ತಿರುವುದರಿಂದ ಇವು ಬಹಿರಂಗಕ್ಕೆ ಬರುವುದಕ್ಕೂ ಕಷ್ಟವಿದೆ. ಭ್ರೂಣಹತ್ಯೆಗಾಗಿ ನಿಗದಿ ಪಡಿಸಲಾದ ಶುಲ್ಕದಲ್ಲಿ ಏನಾದರೂ ಏರುಪೇರಾಗಿ ಜಗಳವಾದರೆ ಮಾತ್ರ ಇಂಥವು ಸಾರ್ವಜನಿಕ ಗಮನಕ್ಕೆ ಬರುತ್ತದೆ. ಆದ್ದರಿಂದಲೇ, ಈ  ಹೆಣ್ಣು ಭ್ರೂಣಹತ್ಯೆಯನ್ನು ಕಾನೂನು ತಕ್ಕಡಿಯಲ್ಲಷ್ಟೇ ಇಟ್ಟು ನೋಡದೇ ಸಾಮಾಜಿಕ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಪರಿಶೀ ಲಿಸಬೇಕಾಗಿದೆ.

ಈ ಇಡೀ ಪ್ರಕ್ರಿಯೆಯಲ್ಲಿ ದಂಪತಿಗಳ ಪಾತ್ರ ಬಹು ಅಮೂಲ್ಯವಾದುದು. ಅವರ ಒಪ್ಪಿಗೆಯಿಲ್ಲದೇ ಭ್ರೂಣಹತ್ಯೆ ಸಾಧ್ಯವೇ ಇಲ್ಲ. ಸಾಮಾನ್ಯವಾಗಿ ಬಡ ಮತ್ತು ಅರೆ ಮಧ್ಯಮ ಕುಟುಂಬಗಳಲ್ಲಿ ಇಂಥ ಭ್ರೂಣಹತ್ಯೆ ಹೆಚ್ಚು. ಮೊದಲ ಮಗು ಹೆಣ್ಣಾದರೆ, ಎರಡನೇ ಮಗು  ಗಂಡಾಗಬೇಕೆಂದು  ಬಯಸುವುದು ಮತ್ತು ಅದು ಕೈಗೂಡುವುದಿಲ್ಲ ಎಂದು ಭ್ರೂಣ ಪತ್ತೆಯಲ್ಲಿ ಸ್ಪಷ್ಟವಾದರೆ ಹತ್ಯೆಗೆ ಮುಂದಾಗುವುದು  ನಡೆಯುತ್ತಿದೆ. ಇದು ಮನಸ್ಥಿತಿಯೊಂದರ ಫಲಿತಾಂಶ. ಹೆಣ್ಣು ಅಶಕ್ತೆ ಮತ್ತು ಕುಟುಂಬಕ್ಕೆ ಭಾರ ಅನ್ನುವ ಭಾವನೆಯೇ ಈ ಹತ್ಯೆಗೆ  ಕಾರಣ. ಬರೇ ಕಾನೂನು ಈ ಮನಸ್ಥಿತಿಯನ್ನು ಬದಲಿಸದು. ಪರಂಪರಾಗತವಾಗಿ ಮನಸ್ಸಲ್ಲಿ ಉಳಿದು ಬಿಟ್ಟಿರುವ ಈ ಮನಸ್ಥಿತಿಯನ್ನು ಬದಲಿಸುವುದಕ್ಕೂ ಸರಕಾರ ಅಭಿಯಾನ ರೂಪದ ಗಂಭೀರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮನೆ ಮನೆ ಭೇಟಿಯಷ್ಟೇ  ಅಲ್ಲ, ಕೂಲಿಕಾರರಾಗಿ ಒಂದೂರಿನಿಂದ  ಮತ್ತೊಂದೂರಿಗೆ ವಲಸೆ ಹೋಗಿರುವ ದಂಪತಿಗಳನ್ನು ಭೇಟಿ ಮಾಡಿ ಅವರಲ್ಲಿ ಅರಿವು  ಮೂಡಿಸುವ ಪ್ರಯತ್ನಗಳಾಗಬೇಕು. ಉಚಿತ ಶಿಕ್ಷಣವೂ ಸೇರಿದಂತೆ ಹೆಣ್ಣು ಮಕ್ಕಳಿಗಾಗಿ ಸರಕಾರ ಜಾರಿ ಮಾಡಿರುವ ವಿವಿಧ ಯೋಜನೆಗಳ ಕುರಿತಂತೆ ಮಾಹಿತಿ ನೀಡಬೇಕು. ಇದರ ಜೊತೆಗೇ ಮಾನವ ಜೀವ ಎಷ್ಟು ಅಮೂಲ್ಯ ಎಂಬುದನ್ನು ಅವರು ಗಂಭೀರವಾಗಿ  ಅವಲೋಕಿಸುವಂತೆ ಮಾಡಬೇಕು. ಇದಕ್ಕಾಗಿ ವಿವಿಧ ಸರಕಾರೇತರ ಸಂಸ್ಥೆಗಳ ನೆರವನ್ನು ಪಡೆದುಕೊಳ್ಳಬೇಕು. ಒಂದುರೀತಿಯಲ್ಲಿ
,
ಭ್ರೂಣಹತ್ಯೆ ಎಂಬುದು 21ನೇ ಶತಮಾನದ ಪಿಡುಗಲ್ಲ. ಇದಕ್ಕೆ ಪುರಾತನ ಇತಿಹಾಸವಿದೆ. ಪ್ರವಾದಿ ಮುಹಮ್ಮದ್(ಸ)ರ ಕಾಲದಲ್ಲೂ ಈ  ಪಿಡುಗು ವ್ಯಾಪಕವಾಗಿತ್ತು. ಕೆಲವೊಂದು ಬುಡಕಟ್ಟುಗಳು ಹೆಣ್ಣು ಮಗುವನ್ನು ಅಪಾರವಾಗಿ ದ್ವೇಷಿಸುತ್ತಿದ್ದುವು. ಇವತ್ತಿನಂತೆ ಭ್ರೂಣಪತ್ತೆ  ಪರೀಕ್ಷೆ ಇಲ್ಲದ ಆ ಕಾಲದಲ್ಲಿ ಹುಟ್ಟಿದ ಕೂಡಲೇ ಹೆಣ್ಣು ಮಗುವನ್ನು ಹೂಳುವ ಪದ್ಧತಿ ಇತ್ತು. ಪ್ರವಾದಿ ಮುಹಮ್ಮದ್(ಸ)ರು ಈ  ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ಜನರ ಮನಸ್ಸಲ್ಲಿ ಅಪರಾಧಿ ಭಾವವನ್ನು ಹುಟ್ಟು ಹಾಕಿದರು. ಪ್ರತಿಯೊಬ್ಬರನ್ನೂ ಮರಣಾನಂತರ ದೇವನು ಎಬ್ಬಿಸುತ್ತಾನೆ ಮತ್ತು ಹತ್ಯೆಗೀಡಾದ ಹೆಣ್ಣು ಮಗುವಿನ ಮುಂದೆ ಆಕೆಯ ಹೆತ್ತವರನ್ನು ನಿಲ್ಲಿಸಿ ವಿಚಾರಣೆಗೊಳಪಡಿಸಿ  ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಎಚ್ಚರಿಸಿದರು. ಯಾವ ಹೆತ್ತವರು ಹೆಣ್ಣು ಮಗುವನ್ನು ಚೆನ್ನಾಗಿ ಲಾಲಿಸಿ ಪಾಲಿಸಿ ಬೆಳೆಸುತ್ತಾರೋ  ಅವರಿಗೆ ಸ್ವರ್ಗವಿದೆ ಎಂದು ಘೋಷಿಸಿದರು. ಮದುವೆಯ ವೇಳೆ ಹೆಣ್ಣಿಗೆ ವಧು ಧನ ಪಾವತಿಸಿ ಮದುವೆಯಾಗಬೇಕೆಂದು ಯುವಕರಿಗೆ  ಆದೇಶಿಸಿದರು. ಆ ಮೂಲಕ ವರದಕ್ಷಿಣೆ ಎಂಬ ಪರಿಕಲ್ಪನೆಗೇ ಕೊಡಲಿಯೇಟು ನೀಡಿದರು. ಶಿಕ್ಷಣ ಪ್ರತಿ ಹೆಣ್ಣು-ಗಂಡಿನ ಮೇಲೂ  ಕಡ್ಡಾಯ ಎಂದು ಸಾರಿದರು. ಗಂಡಿನಂತೆಯೇ ಹೆಣ್ಣಿಗೂ ಹೆತ್ತವರ ಆಸ್ತಿಯಲ್ಲಿ ಪಾಲಿದೆ ಎಂದರು. ಯುದ್ಧದಲ್ಲಿ ಮಹಿಳೆಯನ್ನು  ಪಾಲುಗೊಳಿಸಿದರು. ಮದೀನಾದ ಸಂತೆಯಲ್ಲಿ ಮಹಿಳೆಯರೂ ವ್ಯಾಪಾರಿಯಾದರು. ಮಹಿಳೆ ಮಸೀದಿಗೂ ಹೋಗಬಹುದು,  ಸಂತೆಯಲ್ಲಿ ವ್ಯಾಪಾರವನ್ನೂ ಮಾಡಬಹುದು, ಯುದ್ಧದಲ್ಲೂ ಭಾಗವಹಿಸಬಹುದು, ಮದುವೆಯ ವೇಳೆ ವರನೇ ಆಕೆಗೆ ವಧು ಧನ  ಪಾವತಿಸಿ ವಿವಾಹವಾಗಬೇಕು, ಬೇಡದ ವಿವಾಹದಿಂದ ಆಕೆ ವಿಚ್ಛೇದನ ಪಡಕೊಳ್ಳಬಹುದು, ಆಸ್ತಿಯಲ್ಲಿ ಆಕೆಗೂ ಪಾಲು ಇದೆ, ಯಾವ  ಮಕ್ಕಳು ತಾಯಿಯ ಕೋಪಕ್ಕೆ ಪಾತ್ರರಾಗುತ್ತಾರೋ ಅವರು ನರಕಕ್ಕೆ.. ಇತ್ಯಾದಿ ಇತ್ಯಾದಿ ಅಮೂಲ್ಯ ಮತ್ತು ಚೇತೋಹಾರಿ ನೀತಿಗಳನ್ನು  ಧರ್ಮದ ಭಾಗವಾಗಿ ಪ್ರಸ್ತುತಪಡಿಸಿದರು. ಅಲ್ಲದೇ, ಪವಿತ್ರ ಕುರ್‌ಆನಿನ 114 ಅಧ್ಯಾಯಗಳ ಪೈಕಿ 4ನೇ ಅಧ್ಯಾಯದ ಹೆಸರನ್ನೇ ‘ಮಹಿಳೆ’  ಎಂದಿಟ್ಟರು. ಮಹಿಳಾ ಪರ ಅವರ ಈ ಸರಣಿ ಕ್ರಮಗಳು ನಿಧಾನಕ್ಕೆ ಅಂದಿನ ಜನರ ಮೇಲೆ ಗಾಢ ಪರಿಣಾಮ ಬೀರತೊಡಗಿದವು.  ಅಂತಿಮವಾಗಿ, ಹೆಣ್ಣು ಮಗುವಿಗಾಗಿ ಆಸೆಪಡುವ ಮತ್ತು ಹೆಮ್ಮೆಪಡುವ ಸಮಾಜವೊಂದನ್ನು ಅವರು ಕಟ್ಟಿ ಬೆಳೆಸಿದರು.

ಸದ್ಯ ಕಾನೂನಾತ್ಮಕವಾಗಿ ಮತ್ತು ಭಾವನಾತ್ಮಕವಾಗಿ ಜನರನ್ನು ಸಂಸ್ಕರಿಸುವ ಪ್ರಯತ್ನ ನಡೆಯಬೇಕಾಗಿದೆ.

Friday, 22 December 2023

ಮುಸ್ಲಿಮ್ ಸಮುದಾಯದ ಚರ್ಚೆಗೆ ಹೊಸ ಸಾಧ್ಯತೆ ತೆರೆದುಕೊಟ್ಟ ಆಶಿಕ್




ದ.ಕ. ಜಿಲ್ಲೆಯ 24ರ ಯುವಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಗೀಡಾಗಿದ್ದಾರೆ. ಸೋನಿ ಟಿ.ವಿ. ನಡೆಸಿಕೊಡುವ ಮಾಸ್ಟರ್ ಶೆಫ್ ಇಂಡಿಯಾ ಎಂಬ  ಬಹುಪ್ರಸಿದ್ಧ ಅಡುಗೆ ಸ್ಪರ್ಧೆಯಲ್ಲಿ ಮಂಗಳೂರಿನ ಈ ಮುಹಮ್ಮದ್ ಆಶಿಕ್ ದೇಶದಾದ್ಯಂತದ 30 ಸಾವಿರ ಸ್ಪರ್ಧಾಳುಗಳನ್ನು ಹಿಂದಿಕ್ಕಿ  ಪ್ರಥಮ ಸ್ಥಾನ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ವರ್ಷವೂ ಸೋನಿ ಟಿ.ವಿ.ಯ ಸ್ಪರ್ಧೆಯಲ್ಲಿ ಈ ಆಶಿಕ್ ಸ್ಪರ್ಧಿಸಿದ್ದರು.  ಆದರೆ ವಿಫಲರಾಗಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸಿದರು. ಹೊಟೇಲ್ ಮ್ಯಾನೇಜ್‌ಮೆಂಟ್ ಕಲಿಯಬೇಕೆಂಬ ಬಯಕೆ ಇಟ್ಟುಕೊಂಡರೂ  ಆರ್ಥಿಕ ಪರಿಸ್ಥಿತಿಯಿಂದಾಗಿ ಅದನ್ನು ಕೈಬಿಟ್ಟ ಯುವಕನೋರ್ವ ಸ್ವಪ್ರಯತ್ನದಿಂದ ಅದ್ಭುತ ಸಾಧಕನಾಗಿ ಮೂಡಿ ಬಂದಿರುವುದನ್ನು ಒಟ್ಟು  ಸಮಾಜ ಅದರಲ್ಲೂ ಮುಸ್ಲಿಮ್ ಸಮುದಾಯ ಅವಲೋಕನಕ್ಕೆ ಒಳಪಡಿಸುವುದು ಸಕಾಲಿಕವಾದುದು.

ದಕ್ಷಿಣ  ಕನ್ನಡವನ್ನು ಕೋಮುಸೂಕ್ಷ್ಮ  ಜಿಲ್ಲೆ ಎಂದು ಕರೆಯುವುದಿದೆ. ಈ ಹೆಸರು ವಿನಾಕಾರಣ ಬಂದಿಲ್ಲ. ಅನೈತಿಕ ಪೊಲೀಸ್‌ಗಿರಿ, ಗುಂಪು  ಥಳಿತ, ದ್ವೇಷಭಾಷಣ, ಕೋಮುಗಲಭೆಗಳನ್ನು ಒಡಲಲ್ಲಿ ಇಟ್ಟುಕೊಂಡು ಆಗಾಗ ಅಷ್ಟಿಷ್ಟು ಹೊರಚೆಲ್ಲಿ ದಾವಾಗ್ನಿ ಸೃಷ್ಟಿಸುವ ಜಿಲ್ಲೆ ಇದು.  ಇದರ ಪರಿಣಾಮ ಇಲ್ಲಿನ ಜನಜೀವನದ ಮೇಲೂ ಆಗಿದೆ. ಮುಖ್ಯವಾಗಿ, ಮುಸ್ಲಿಮ್ ಸಮುದಾಯದ ಮೇಲೆ ಈ ವಾತಾವರಣ ಸಾಕಷ್ಟು  ಅಡ್ಡ ಪರಿಣಾಮವನ್ನೂ ಬೀರಿದೆ. ಸಮುದಾಯದ ಮಂದಿ ಒಂದುಕಡೆ ಒಟ್ಟು ಸೇರಿದರೆ ರಾಜಕೀಯ ಮಾತನಾಡದೇ ಮತ್ತು  ರಾಜಕಾರಣಿಗಳ ಕೋಮುದ್ವೇಷದ ಮಾತುಗಳನ್ನು ಉಲ್ಲೇಖಿಸಿ ಚರ್ಚಿಸದೇ ವಿರಮಿಸುವುದು ಕಡಿಮೆ. ವಾಟ್ಸಪ್ ಗ್ರೂಪ್‌ಗಳಲ್ಲೂ  ಇಂಥವುಗಳದ್ದೇ  ಕಾರುಬಾರು. ದ್ವೇಷಭಾಷಣಗಳನ್ನು ಖಂಡಿಸುವುದು, ರಾಜಕಾರಣಿಯ ಮುಸ್ಲಿಮ್ ದ್ವೇಷಿ ಹೇಳಿಕೆಯನ್ನು ಪ್ರಶ್ನಿಸುವುದು,  ಮುಸ್ಲಿಮ್ ಸಮುದಾಯ ರಾಜಕೀಯವಾಗಿ ಏನು ಮಾಡಬೇಕೆಂದು ಚರ್ಚಿಸುವುದು, ಯಾವ ರಾಜಕಾರಣಿ ಮತ್ತು ರಾಜಕೀಯ ಪಕ್ಷ  ಮುಸ್ಲಿಮರಿಗೆ ಅನಾನುಕೂಲ ಎಂದೆಲ್ಲಾ ವಿಶ್ಲೇಷಿಸುವುದನ್ನೇ ಮುಸ್ಲಿಮ್ ಸಮುದಾಯದ ಹೆಚ್ಚಿನ ವಾಟ್ಸಪ್ ಗ್ರೂಪ್‌ಗಳಲ್ಲಿ  ಮಾಡಲಾಗುತ್ತಿದೆ. ಇವುಗಳು ತಪ್ಪು ಎಂದಲ್ಲ. ಆದರೆ ಮುಸ್ಲಿಮ್ ಸಮುದಾಯದ ಆದ್ಯತೆಯೇ ಇದಾಗಿಬಿಟ್ಟರೆ, ಅದರ ನಕಾರಾತ್ಮಕ  ಪರಿಣಾಮವನ್ನು ಹೊಸ ತಲೆಮಾರು ಅನುಭವಿಸಬೇಕಾಗುತ್ತದೆ. ಇಂಥ ವಾಟ್ಸಾಪ್ ಚರ್ಚೆಗಳು ಅಲ್ಲೇ  ಉಳಿಯದೇ ಆ ಬಳಿಕ ಮನೆಯಲ್ಲೂ ಪ್ರಸ್ತಾಪವಾಗುತ್ತದೆ. ಪದೇಪದೇ ಇಂಥದ್ದೇ  ಚರ್ಚೆ-ವಿಶ್ಲೇಷಣೆಯನ್ನು ಓದುತ್ತಾ ಓದುತ್ತಾ ವ್ಯಕ್ತಿ ಅನಗತ್ಯ ಆತಂಕ ಮತ್ತು  ಗುಂಗಿಗೆ ಬೀಳಬಹುದು. ನಿಜವಾಗಿ,

ಅಭದ್ರತೆಯೇ ಬದುಕಾಗುವುದು ಅಪಾಯಕಾರಿ. ಎಲ್ಲೋ  ನಡೆಯುವ ದ್ವೇಷ ಭಾಷಣ, ಅಮಾನವೀಯ ಕೃತ್ಯಗಳನ್ನು ಇನ್ನೆಲ್ಲೋ  ಕುಳಿತು  ದಿನಾ ಚರ್ಚಿಸುವುದರಿಂದ ನಿರ್ಮಾಣಾತ್ಮಕ ಆಲೋಚನೆಗೆ ತಡೆ ಬೀಳಬಹುದು. ಅದು ಮನೆಯ ಮಕ್ಕಳ ಮೇಲೂ ಪರಿಣಾಮ  ಬೀರಬಹುದು. ಸ್ವತಂತ್ರ ಆಲೋಚನೆಗಳೊಂದಿಗೆ, ಸಮೃದ್ಧವಾಗಿ ಬೆಳೆಯಬೇಕಾದ ಮಕ್ಕಳು ಆತಂಕ, ಅನುಮಾನ ಮತ್ತು ನಕಾರಾತ್ಮಕ  ಧೋರಣೆಯೊಂದಿಗೆ ಬೆಳೆಯಬಹುದು. ಮುಹಮ್ಮದ್ ಆಶಿಕ್‌ನ ಸಾಧನೆ ಈ ಎಲ್ಲ ಹಿನ್ನೆಲೆಯಲ್ಲಿ ಮುಖ್ಯವಾಗುತ್ತದೆ. ಈ ಯುವಕ ಈ  ಮಟ್ಟಕ್ಕೆ ಬೆಳೆದುದು ಪವಾಡದಿಂದಲ್ಲ. ಸ್ಪಷ್ಟ ಗುರಿ, ಅಪಾರ ಬದ್ಧತೆ ಮತ್ತು ಛಲವೇ ಈ ಆಶಿಕ್‌ನನ್ನು ದೇಶ-ವಿದೇಶದ ತೀರ್ಪುಗಾರರು  ಮಾಸ್ಟರ್ ಶೆಫ್ ಆಫ್ ಇಂಡಿಯಾವಾಗಿ ಗುರುತಿಸಿದ್ದಾರೆ. ಮನೆಯಲ್ಲೇ  ಶುಚಿ-ರುಚಿಯಾದ ಆಹಾರ ತಯಾರಿಸಿ ಕೊಡುವಲ್ಲಿಂದ  ಆರಂಭವಾದ ಈ ಯುವಕನ ಪ್ರಯಾಣವು, ಕಾಲೇಜುಗಳ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಸ್ವತಃ ಸ್ಟಾಲ್ ಹಾಕಿ ವ್ಯಾಪಾರ ಮಾಡುವಲ್ಲಿ  ವರೆಗೆ ಮತ್ತು ಅಲ್ಲಿಂದ ಕುಲ್ಕಿ ಶರ್ಬತ್ ಎಂಬ ಪಾನೀಯ ಮಾರಾಟದವರೆಗೂ ಬೆಳೆಯಿತು. ದ್ವಿತೀಯ ಪಿಯುಸಿಯ ಬಳಿಕ ಆರ್ಥಿಕ  ಅಡಚಣೆಯಿಂದ ಕಲಿಕೆ ಮುಂದುವರಿಸಲಾಗದೇ ಸೇಲ್ಸ್ಮ್ಯಾನ್ ಕೆಲಸಕ್ಕೆ ಸೇರಿಕೊಂಡ ಆಶಿಕ್, 20ರ ಹರೆಯಲ್ಲೇ  `ಕುಲ್ಕಿ ಹಬ್' ಎಂಬ  ವಿವಿಧ ಪಾನೀಯಗಳ ಅಂಗಡಿ ತೆರೆದರು. ತಾನು ಶೆಫ್ ಆಗಬೇಕು ಎಂಬ ಕನಸನ್ನು ಎಂದೂ ಬಿಟ್ಟು ಕೊಡದ ಛಲದ ಸುಖವನ್ನು  ಇಂದು ಈ ಆಶಿಕ್ ಅನುಭವಿಸುತ್ತಿದ್ದಾರೆ. ಅಂದಹಾಗೆ,

ಕೋಮು ಸಂಬಂಧಿ  ವಿಷಯಗಳಿಗಾಗಿಯೇ ರಾಷ್ಟ್ರ ಮಟ್ಟದಲ್ಲಿ ಆಗಾಗ ಸುದ್ದಿಗೀಡಾಗುವ ಜಿಲ್ಲೆಯ ತರುಣನೋರ್ವ ಅತ್ಯಂತ  ಚೇತೋಹಾರಿ ಮತ್ತು ಪ್ರೇರಣದಾಯಿ ಸಂಗತಿಗಾಗಿ ರಾಷ್ಟçಮಟ್ಟದಲ್ಲಿ ಸುದ್ದಿಗೀಡಾಗುವುದು ಮುಸ್ಲಿಮ್ ಸಮುದಾಯದ ಚರ್ಚೆಯ ದಿಕ್ಕನ್ನು  ಬದಲಿಸುವುದಕ್ಕೆ ಪ್ರೇರಣೆಯಾಗಬೇಕು. ಈ ಮುಹಮ್ಮದ್ ಆಶಿಕ್ ಒಂದಷ್ಟು ಸಮಯದವರೆಗೆ ಸಮುದಾಯದ ವಾಟ್ಸಪ್ ಚರ್ಚೆಗಳಲ್ಲಿ  ಸ್ಥಾನ ಪಡೆಯಬೇಕು. ಪ್ರತಿ ಮನೆ ಮನೆಗಳಲ್ಲೂ ಈ ಆಶಿಕ್ ಚರ್ಚಾವಸ್ತುವಾಗಬೇಕು. ಹೊಸ ತಲೆಮಾರು ಇಂಥ ಸಾಧಕರ ಕತೆಗಳನ್ನು  ಕೇಳಿಕೊಂಡು ಬೆಳೆಯಬೇಕು. ದಿನವಿಡೀ ಕಾಂಗ್ರೆಸ್ಸು, ಬಿಜೆಪಿ, ಅದು, ಇದು ಎಂದು ಚರ್ಚಿಸುವುದಕ್ಕಿಂತ ಬೆಳೆಯುತ್ತಿರುವ ಪೀಳಿಗೆಯನ್ನು  ಅತ್ಯಂತ ನಿರ್ಮಾಣಾತ್ಮಕವಾಗಿ ಬೆಳೆಸುವುದು ಹೇಗೆ, ಅವರನ್ನು ಸಾಧಕರಾಗಿ ಪರಿವರ್ತಿಸುವುದು ಹೇಗೆ ಎಂಬ ಬಗ್ಗೆ ಗಂಭೀರ  ಅವಲೋಕನಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯಬೇಕು. ಅಷ್ಟೇ ತೀವ್ರವಾಗಿ ಇಂಥ ಚರ್ಚೆ ಗಳು ಪ್ರತಿ ಮನೆಮನೆಯಲ್ಲೂ  ನಡೆಯಬೇಕು. ಮಕ್ಕಳು ಈ ಚರ್ಚೆಯನ್ನು ಕೇಳಿ ಬೆಳೆಯುವುದರಿಂದ ಅವರಲ್ಲೂ ನಕಾರಾತ್ಮಕ ಭಾವಗಳು ಹೊರಟು ಹೋಗಿ ಆಶಾವಾದ  ತುಂಬಿಕೊಳ್ಳುತ್ತದೆ. ತಾವೂ ಆಶಿಕ್ ಆಗಬೇಕು ಅಥವಾ ಸಾಧಕರಾಗಿ ಗುರುತಿಸಿಕೊಳ್ಳಬೇಕು ಎಂಬ ಛಲ ತುಂಬುತ್ತದೆ. 

ಈ ಬಾರಿಯ  ನೀಟ್ ಪರೀಕ್ಷೆಯಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿ ಮೊದಲ 100 ರ‍್ಯಾಂಕಲ್ಲೂ ಕಾಣಿಸಿಕೊಂಡಿಲ್ಲ. ಅಬ್ದುಲ್ ಬಾಸಿತ್ ಅನ್ನುವ  ಪ್ರತಿಭಾವಂತ ಪಡೆದಿರುವ 113ನೇ ರ‍್ಯಾಂಕೇ ಸಮುದಾಯದ ಪಾಲಿನ ಕಿರೀಟ. ತಮಿಳುನಾಡಿನ ಪ್ರಬಂಜನ್ ಮತ್ತು ಆಂಧ್ರದ ವರುಣ್  ಚಕ್ರವರ್ತಿ ಒಟ್ಟು 720 ಅಂಕಗಳಲ್ಲಿ 720 ಅಂಕಗಳನ್ನೂ ಪಡೆದು ಮೊದಲ ಸ್ಥಾನ ಪಡೆದಿದ್ದರು. ಈ ಬಗೆಯ ಪೈಪೋಟಿಯತ್ತ ಮುಸ್ಲಿಮ್  ಸಮುದಾಯದ ಮಕ್ಕಳನ್ನು ತರಬೇತುಗೊಳಿಸಬೇಕು. ಐಐಟಿ, ಐಐಐಟಿ, ಐಐಎಸ್‌ಇ, ಎನ್‌ಐಟಿ ಮತ್ತು ಐಐಎಂಗಳಲ್ಲಿ ಮುಸ್ಲಿಮ್  ಸಮುದಾಯದ ಅನುಪಾತ 1.92% ಎಂಬುದು ಈಗಿನ ಲೆಕ್ಕಾಚಾರ. ಈ ಅಂಕಿಅಂಶಗಳನ್ನು ಎತ್ತಿ ಉತ್ತಮಗೊಳಿಸುವುದಕ್ಕೆ ಪೂರಕ  ಯೋಚನೆ ಮತ್ತು ಯೋಜನೆಗಳಿಗೆ ಸಮುದಾಯ ಚಾಲನೆ ನೀಡಬೇಕು. ಅದಕ್ಕೆ ಪ್ರಥಮ ಹೆಜ್ಜೆಯಾಗಿ ಸಕಾರಾತ್ಮಕ ಆಲೋಚನೆಗಳಿಗೆ  ಆದ್ಯತೆ ನೀಡಬೇಕು. ಮುಸ್ಲಿಮ್ ಸಮುದಾಯ ಬರಹ, ಭಾಷಣ, ಸೋಶಿಯಲ್ ಮೀಡಿಯಾ ಚರ್ಚೆ ಗಳು ಮತ್ತು ಮನೆಯ  ಮಾತುಕತೆಗಳೆಲ್ಲವೂ ಹೊಸ ಪೀಳಿಗೆಯ ಪಾಲಿಗೆ ಆಸಕ್ತಿಕರವಾಗುವಂತೆ ಮತ್ತು ಸಾಧನೆಗೆ ಪ್ರೇರಣೆಯಾಗುವಂತೆ ಇರಬೇಕು. ಭಾರತದ  ಚಂದ್ರಯಾನದ ಯಶಸ್ಸಿನಲ್ಲಿ ಪಾತ್ರಧಾರಿಗಳಾಗಿರುವ ಸನಾ ಫೈರೋಝï, ಯಾಸಿರ್ ಅಮ್ಮಾರ್, ಮುಹಮ್ಮದ್ ಶಬೀರ್ ಆಲಂ, ಅರೀಬ್  ಅಹ್ಮದ್, ಅಖ್ತದಾರ್ ಅಬ್ಬಾಸ್, ಇಶ್ರತ್ ಜಮಾಲ್, ಖುಶ್ಬೂ ಮಿರ್ಝಾ ಮುಂತಾದ ವಿಜ್ಞಾನಿಗಳನ್ನು ಸಂದರ್ಭಾ ನುಸಾರ ಮಕ್ಕಳ  ಮುಂದೆ ಪ್ರಸ್ತಾಪಿಸಿ ಕನಸು ಕಟ್ಟಬೇಕು. ಇದೇನೂ ಅಸಾಧ್ಯವಲ್ಲ. ಪ್ರತಿ ಮಗುವೂ ವಿಶಿಷ್ಟ. ಸಾಹಸ ಮತ್ತು ಸಾಧನೆ ಮಕ್ಕಳನ್ನು  ಆಕರ್ಷಿಸುವಷ್ಟು ಇನ್ನಾವುದೂ ಆಕರ್ಷಿಸುವುದಿಲ್ಲ. ಒಂದುವೇಳೆ, ಮನೆಯನ್ನು ಸಾಧಕರ ಕುರಿತಾದ ಮಾತಿನ ಮಂಟಪವಾಗಿಸಿಬಿಟ್ಟರೆ  ಮತ್ತು ಕಠಿಣ ಸವಾಲುಗಳನ್ನೂ ಎದುರಿಸಿ ವಿಜಯಿಯಾದವರ ಸಾಹಸಗಾಥೆಗೆ ಮೀಸಲಾಗಿಸಿದರೆ ಅದನ್ನು ಆಲಿಸುತ್ತಾ ಬೆಳೆಯುವ ಮಗು  ಅದನ್ನೇ ಕನಸುತ್ತದೆ. ಅಂಥದ್ದೇ  ಬದುಕು ರೂಪಿಸಿಕೊಳ್ಳಲು ಹವಣಿಸುತ್ತದೆ. ಸದ್ಯ,

ಮುಹಮ್ಮದ್ ಆಶಿಕ್ ಪ್ರತಿ ಮನೆಯ ಬೆರಗಾಗಿ ಚರ್ಚೆಗೆ ಒಳಗಾಗುವುದರಿಂದ ಬೆಳೆಯುವ ಪೀಳಿಗೆಯಲ್ಲಿ ಹೊಸ ಕನಸು ಹುಟ್ಟಲು  ಅವಕಾಶ ಒದಗಿಸುತ್ತದೆ. ಬರೇ ಧರ್ಮ ದ್ವೇಷ ಹೇಳಿಕೆಗಳು ಮತ್ತು ಪ್ರತಿ ಹೇಳಿಕೆಗಳನ್ನೇ ಇಡೀ ದಿನ ಚರ್ಚಿಸುತ್ತಾ ಅದನ್ನೇ ಮುಸ್ಲಿಮ್  ಸಮುದಾಯದ ಆದ್ಯತಾ ವಿಷಯವಾಗಿ ಮಾರ್ಪಡಿಸುವುದರಿಂದ ಮುಸ್ಲಿಮ್ ಸಮುದಾಯ ದೂರ ನಿಲ್ಲಬೇಕಾಗಿದೆ. ಮುಸ್ಲಿಮ್  ಸಮುದಾಯದ ಆದ್ಯತೆಗಳನ್ನು ಮುಸ್ಲಿಮ್ ಸಮುದಾಯವೇ ನಿರ್ಧರಿಸಬೇಕು. ಇನ್ನಾರೋ ಹಾಕಿ ಕೊಡುವ ರಂಗಸ್ಥಳದಲ್ಲಿ ನಿಂತು ಅವರ  ಆದೇಶದಂತೆ ಕುಣಿಯುವುದರಿಂದ ಸಮುದಾಯಕ್ಕೆ ಯಾವ ಲಾಭವೂ ಇಲ್ಲ. ಈ ಕುಣಿತವನ್ನೇ ಬೆಳೆಯುವ ಪೀಳಿಗೆಗಳೂ ಕಲಿಯುತ್ತವೆ  ಮತ್ತು ಅವೂ ಅದನ್ನೇ ಮುಂದುವರಿಸುತ್ತವೆ. ಭಯಪಡುವವರು ಇರುವವರೆಗೆ ಭಯಪಡಿಸುವವರು ಇದ್ದೇ  ಇರುತ್ತಾರೆ. ಇದೊಂದು  ಮುಗಿಯದ ನಾಟಕ. ಮುಸ್ಲಿಮ್ ಸಮುದಾಯ ಇಂಥ ನಕಾರಾತ್ಮಕ ಚರ್ಚೆಗಳಿಂದ ಹೊರಬಂದು ಸಕಾರಾತ್ಮಕ ಚರ್ಚೆಗಳಿಗೆ  ಹೊರಳಬೇಕು. ಪ್ರತಿ ಮನೆಯಲ್ಲೂ ಮುಹಮ್ಮದ್ ಆಶಿಕ್‌ನಂಥ ಸಾಧಕರು ಚರ್ಚಾ ವಿಷಯವಾಗಬೇಕು. ಹೊಸ ಪೀಳಿಗೆ ಇಂಥ  ಚರ್ಚೆಗಳನ್ನೇ ಆಲಿಸಿ ಬೆಳೆಯಬೇಕು. ಇದು ಖಂಡಿತ ಸಾಧ್ಯ. ತನ್ನ ಅಪೂರ್ವ ಛಲ ಮತ್ತು ಆತ್ಮವಿಶ್ವಾಸದಿಂದ ಅಮೋಘ ಸಾಧನೆ  ಮಾಡಿದ ಆಶಿಕ್‌ಗೆ ಅಭಿನಂದನೆಗಳು.

Tuesday, 12 December 2023

ಪಶ್ಚಾತ್ತಾಪಪಡುವ ಅಪ್ಪ, ಅಪರಾಧಿ ಮಗ ಮತ್ತು ಭ್ರೂಣಕ್ಕೇ ಕತ್ತಿಯಿಕ್ಕುವ ವೈದ್ಯರ ಮಧ್ಯೆ...



1. ಕೇರಳ: ಹಾಸಿಗೆಯಲ್ಲಿ ಮಲ ವಿಸರ್ಜಿಸಿದರೆಂದು ಅನಾರೋಗ್ಯ ಪೀಡಿತ ತಂದೆಯನ್ನೇ ಕೊಂದ ಮಗ

2. 900 ಭ್ರೂಣಹತ್ಯೆ  ಮಾಡಿದ ವೈದ್ಯನ ಬಂಧನ ಮತ್ತು 

3. ಎಲ್ಲಾ ಆಸ್ತಿಯನ್ನೂ ಮಗನಿಗೆ ಕೊಟ್ಟು ತಪ್ಪು ಮಾಡಿದೆ ಎಂದ ರೇಮಂಡ್ ಸಂಸ್ಥಾಪಕ ಜಯಪತ್  ಸಿಂಘಾನಿಯಾ...

ಕಳೆದ ವಾರದ ಈ ಮೂರೂ ಸುದ್ದಿಗಳ ಕೇಂದ್ರ ಬಿಂದು ಮನುಷ್ಯ. ಮಾತ್ರವಲ್ಲ, ಬುದ್ಧಿ, ವಿವೇಕ, ಅಂತಃಕರಣ ಇರುವ ಮತ್ತು  ರಕ್ತಸಂಬಂಧ  ಹಾಗೂ ಮಾನವೀಯ ಸಂಬಂಧಗಳ ಪೋಷಕನಂತೆ ಬಿಂಬಿಸಿಕೊಳ್ಳುತ್ತಿರುವ ಮನುಷ್ಯ ಹೇಗೆ ಅವೆಲ್ಲವನ್ನೂ ಅವಗಣಿಸಬಲ್ಲ  ಮತ್ತು ರಾಕ್ಷಸನಂತೆ ವರ್ತಿಸಬಲ್ಲ ಎಂಬುದಕ್ಕೂ ಈ ಮೂರೂ ಸುದ್ದಿಗಳು ಒಳ್ಳೆಯ ಉದಾಹರಣೆ.

ಎಂಟು  ತಿಂಗಳ ಹಿಂದೆ 65 ವರ್ಷದ ಸೆಬಾಸ್ಟಿಯನ್ ಎಂಬ ತಂದೆ ಕಾರು ಅಪಘಾತದಲ್ಲಿ ಗಾಯಗೊಂಡ ಬಳಿಕ ಹಾಸಿಗೆಗೆ  ಸೀಮಿತರಾದರು. ಅವರ ಪತ್ನಿ ಈ ಅಪಘಾತದ ಆಸು-ಪಾಸಿನಲ್ಲೇ  ಕ್ಯಾನ್ಸರ್‌ನಿಂದ ತೀರಿಕೊಂಡಿದ್ದರು. ಮಗ ಸೆಬಿನ್ ಕ್ರಿಶ್ಚಿಯನ್  ತಂದೆಯನ್ನು ನೋಡಿಕೊಳ್ಳುತ್ತಿದ್ದ. 64 ವರ್ಷಗಳ ವರೆಗೆ ಆರೋಗ್ಯವಂತರಾಗಿದ್ದ ಮತ್ತು ನಡೆಯುತ್ತಿದ್ದ ಈ ಅಪ್ಪನಿಗೆ ಈ ಮಗ  ಭಾರವಾಗಿರಲಿಲ್ಲ. ಆದರೆ, ಈ ಅಪ್ಪ ಎಂಟೇ ಎಂಟು ತಿಂಗಳಲ್ಲಿ ಮಗನಿಗೆ ಭಾರವಾದರು. ಇದೇ ಅಪ್ಪ ಈ 26 ವರ್ಷದ ಮಗನನ್ನು ಶಿಶುವಾದಾಗಿನಿಂದ ನಡೆಯುವ ಪ್ರಾಯದ ವರೆಗೆ ಮುದ್ದಾಡಿಸಿರಬಹುದು. ಕೈ ಹಿಡಿದು ನಡೆಸಿರಬಹುದು. ಮಾರುಕಟ್ಟೆಗೆ, ಶಾಲೆಗೆ,  ಪಾರ್ಕ್ ಗೆ  ಕರಕೊಂಡು ಹೋಗಿರಬಹುದು. ಆಗೆಲ್ಲ ಈ ಮಗನನ್ನು ಈ ಅಪ್ಪ ಭಾರ ಅಂದುಕೊಂಡಿರುತ್ತಿದ್ದರೆ ಈ ಕ್ರಿಶ್ಚಿಯನ್ ಜೀವಂತ  ಇರುತ್ತಲೇ ಇರಲಿಲ್ಲ. ಇದರ ಜೊತೆಗೆ ಓದಬಹುದಾದ ಇನ್ನೊಂದು ಸುದ್ದಿಯೆಂದರೆ, 1500 ಕೋಟಿ ರೂಪಾಯಿ ಬೆಲೆಬಾಳುವ  ರೇಮಂಡ್ ಬ್ರಾಂಡ್‌ನ ಸಂಸ್ಥಾಪಕ ವಿಜಯಪಥ್ ಸಿಂಘಾನಿಯಾ ಅವರದು. 85 ವರ್ಷದ ಇವರು ಇವತ್ತು ಬಾಡಿಗೆ ಮನೆಯಲ್ಲಿ  ವಾಸಿಸುತ್ತಿದ್ದಾರೆ. 2015ರಲ್ಲಿ ಇವರು ತಮ್ಮ ಎಲ್ಲಾ ಶೇರುಗಳು ಮತ್ತು ಕಂಪೆನಿಯನ್ನು ತನ್ನ ಏಕೈಕ ಮಗ ಗೌತಮ್ ಸಿಂಘಾನಿಯಾಗೆ  ನೀಡಿದರು. ಶೂನ್ಯದಿಂದ ರೇಮಂಡ್ ಎಂಬ ಬೃಹತ್ ಬಟ್ಟೆ ಉದ್ಯಮವನ್ನು ಕಟ್ಟಿ ಬೆಳೆಸಿದ ಈ ವಿಜಯಪಥ್ ಸಿಂಘಾನಿಯಾ, ಜಗತ್ತೇ  ಗುರುತಿಸುವಷ್ಟು ಪ್ರಸಿದ್ಧ ಉದ್ಯಮಿಯಾದರು. ಆದರೆ, ಯಾವಾಗ ತನ್ನ ಮಗನಿಗೆ ತನ್ನ ಸಂಪೂರ್ಣ ಆಸ್ತಿಯನ್ನು ಬರೆದು ಕೊಟ್ಟರೋ ಆ  ಬಳಿಕದಿಂದ ಅವರ ಕಷ್ಟದ ದಿನಗಳು ಆರಂಭವಾದುವು. ‘ಮಗನಿಗೆ ಆಸ್ತಿಯನ್ನು ಬರೆದು ಕೊಡುವಾಗ ಒಂದಿಷ್ಟು ಹಣವನ್ನು  ಉಳಿಸಿಕೊಳ್ಳದೇ ಇರುತ್ತಿದ್ದರೆ ಇವತ್ತು ಬೀದಿಯೇ ಗತಿಯಾಗುತ್ತಿತ್ತು..’ ಎಂದು ಈ ಅಪ್ಪ ಇವತ್ತು ನೊಂದು ನುಡಿಯುತ್ತಾರೆ. ಇವತ್ತು ಅಪ್ಪ-ಮಗನ ಸಂಬಂಧ ಹಳಸಿದೆ. ಅಪ್ಪನತ್ತ ತಿರುಗಿಯೂ ಈ ಮಗ ನೋಡುತ್ತಿಲ್ಲ. ಅಂದಹಾಗೆ,

ಈ ಎರಡು ಸುದ್ದಿಗಳಿಗಿಂತ ತುಸು ಭಿನ್ನವಾದ ಆದರೆ, ಈ ಎರಡೂ ಸುದ್ದಿಗಳಿಗಿಂತಲೂ ಅತಿ ಭೀಕರವಾದ ಸುದ್ದಿಯೇ ಭ್ರೂಣಹತ್ಯೆಗೆ  ಸಂಬಂಧಿಸಿದ್ದು. ಪತ್ರಿಕೆಗಳ ಪಾಲಿಗೆ ಮುಖಪುಟದ ಲೀಡಿಂಗ್ ಸುದ್ದಿಯಾಗಬೇಕಿದ್ದ ಈ ಭ್ರೂಣಹತ್ಯೆಯು ಹೆಚ್ಚಿನೆಲ್ಲಾ ಪತ್ರಿಕೆಗಳ ಒಳ ಪುಟವನ್ನು ಸೇರಿಕೊಂಡಿದೆ ಎಂಬುದೇ ಸಮಾಜದಲ್ಲಿ ಇದೆಷ್ಟು ಮಾಮೂಲು ಎಂಬುದನ್ನು ಹೇಳುತ್ತದೆ. ಬೆಂಗಳೂರು-ಮೈಸೂರು  ಸುತ್ತಮುತ್ತ ಹತ್ತರಷ್ಟು ಮಂದಿಯನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ವೈದ್ಯರು, ಲ್ಯಾಬ್ ಟೆಕ್ನೀಶಿಯನ್,  ಆಸ್ಪತ್ರೆ ಮುಖ್ಯಸ್ಥರೆಲ್ಲಾ ಇದ್ದಾರೆ. ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚಿ ಹತ್ಯೆ ಮಾಡುವುದೇ ಇವರ ಕಾಯಕ. ಒಂದು ಭ್ರೂಣಹತ್ಯೆಗೆ 25  ಸಾವಿರದಷ್ಟು ಹಣವನ್ನು ಪಡೆಯುತ್ತಾರೆ. ಇದೊಂದು ಜಾಲ. ಹಾಗಂತ, ಪೊಲೀಸರ ಕೈಗೆ ಸಿಗದೇ ಇರುವ ಇಂಥ ಕುಖ್ಯಾತ ಜಾಲಗಳು  ರಾಜ್ಯದಲ್ಲಿ ಇನ್ನೂ ಅನೇಕ ಇರಬಹುದು. ಇದನ್ನೇ ದೇಶಕ್ಕೆ ಅನ್ವಯಿಸಿ ನೋಡುವಾಗ ಭಯವಾಗುತ್ತದೆ. ದೇಶದಲ್ಲಿ ಒಂದು ದಿನದಲ್ಲಿ  ಎಷ್ಟು ಭ್ರೂಣಗಳು ಹತ್ಯೆಯಾಗುತ್ತಿರಬಹುದು ಮತ್ತು ಇದಕ್ಕೆ ನೆರವಾಗುವ ವೈದ್ಯರು ಮತ್ತು ಆಸ್ಪತ್ರೆಗಳು ಎಷ್ಟಿರಬಹುದು? ಅಂದಹಾಗೆ,

ಹೆತ್ತವರ ಬಗ್ಗೆ ಕಾಳಜಿಯ ಬೋಧನೆಯನ್ನು ನೀಡದ ಒಂದೇ ಒಂದು ಧರ್ಮ ಇಲ್ಲ. ಭಾರತವಂತೂ ಧರ್ಮಗಳೇ ತುಂಬಿಕೊಂಡಿರುವ  ಮಣ್ಣು. ಶ್ರವಣಕುಮಾರನ ಭಾವುಕ ಕತೆಯನ್ನು ಬಾಲ್ಯದಲ್ಲಿ ಓದಿ ಬೆಳೆಯುವ ಮಕ್ಕಳೇ ಇಲ್ಲಿ ಅಧಿಕವಿದ್ದಾರೆ. ಹೆಣ್ಣನ್ನು ಪೂಜಿಸುವ ಮತ್ತು  ದೇವತೆಯೆಂದು ಬಾಗುವ ಸಂಸ್ಕೃತಿಯೂ ಇಲ್ಲಿನದು. ಹಿಂದೂ, ಇಸ್ಲಾಮ್, ಕ್ರೈಸ್ತ- ಈ ಮೂರೂ ಧರ್ಮಗಳು ಹೆತ್ತವರ ಮತ್ತು ಹೆಣ್ಣಿನ  ಬಗ್ಗೆ ಗೌರವಾರ್ಹವಾದ ಚಿಂತನೆಯನ್ನೇ ಹೊಂದಿವೆ. ಹೆತ್ತವರ ವಿಷಯದಲ್ಲಿ ಇಸ್ಲಾಮ್ ಎಂಥ ಕಟು ಧೋರಣೆಯನ್ನು ಹೊಂದಿದೆ  ಎಂದರೆ, ವೃದ್ಧರಾಗಿರುವ ಹೆತ್ತವರ ಬಗ್ಗೆ ಛೆ ಎಂಬ ಉದ್ಗಾರವನ್ನೂ ಮಕ್ಕಳು ಹೊರಡಿಸಬಾರದು ಎನ್ನುತ್ತದೆ. ಹೆತ್ತವರ ಕೋಪಕ್ಕೆ  ತುತ್ತಾದ ಯಾವ ಮಕ್ಕಳೂ ಅವರೆಷ್ಟೇ ಧರ್ಮಿಷ್ಟರಾದರೂ ಸ್ವರ್ಗ ಪ್ರವೇಶಿಸಲಾರರು ಎಂದೇ ಹೇಳಿದೆ. ‘ಹೆತ್ತವರೇ ಮಕ್ಕಳ ಪಾಲಿನ ಸ್ವರ್ಗ  ಮತ್ತು ನರಕ’ ಎಂದೂ ಹೇಳಿದೆ. ಮಗ ಮುಸ್ಲಿಮ್ ಆಗಿದ್ದು, ಹೆತ್ತಬ್ಬೆ ಮುಸ್ಲಿಮೇತರರಾಗಿದ್ದರೂ ಹೆತ್ತವರ ಮೇಲಿನ ಕರ್ತವ್ಯಗಳಲ್ಲಿ ಮಗನಿಗೆ ಯಾವ ರಿಯಾಯಿತಿಯೂ ಇರುವುದಿಲ್ಲ ಎಂದೂ ತಾಕೀತು ಮಾಡಿದೆ. ನಿತ್ರಾಣದ ಮೇಲೆ ನಿತ್ರಾಣವನ್ನು ಅನುಭವಿಸಿ ಮಗುವನ್ನು  ಹೆರುವ ತಾಯಿಗಾಗಿ ಮಕ್ಕಳು ಸದಾ ಪ್ರಾರ್ಥಿಸುತ್ತಿರಬೇಕೆಂದು ಕುರ್‌ಆನ್ ಹೇಳಿದೆಯಲ್ಲದೇ, ಆ ಪ್ರಾರ್ಥನಾ ವಿಧಾನವನ್ನೂ ಕಲಿಸಿಕೊಟ್ಟಿದೆ. ಇದಿಷ್ಟೇ ಅಲ್ಲ, ಹೆಣ್ಣು ಮಗುವನ್ನು ಪ್ರೀತಿಸುವ ಮತ್ತು ಕಾಳಜಿ ತೋರುವ ವಿಷಯದಲ್ಲಂತೂ ಇಸ್ಲಾಮ್ ಅತೀ  ಮುಂಚೂಣಿಯಲ್ಲಿದೆ. ಒಬ್ಬರು ತನ್ನ ಹೆಣ್ಣು ಮಗುವಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸಿ ಅವರ ಬದುಕು  ಚೆಲುವಾಗಿಸಿದರೆ ಆ ಹೆತ್ತವರಿಗೆ ಸ್ವರ್ಗ ಇದೆ ಎಂದು ಪ್ರವಾದಿ(ಸ) ಕಲಿಸಿದ್ದಾರೆ. ಹೆಣ್ಣು ಮಗುವಿನ ಕಾರಣಕ್ಕಾಗಿ ಹೆತ್ತವರಿಗೆ ಸ್ವರ್ಗದ  ವಾಗ್ದಾನವನ್ನು ನೀಡಿದ ಏಕೈಕ ಧರ್ಮವಾಗಿ ಇಸ್ಲಾಮ್ ಗುರುತಿಸಿಕೊಂಡಿದೆ. ಇದೇವೇಳೆ,

ಗಂಡು ಮಗುವಿನ ಹೆತ್ತವರಿಗೆ ಇಸ್ಲಾಮ್ ಈ ವಾಗ್ದಾನವನ್ನು ನೀಡಿಯೇ ಇಲ್ಲ. ಒಂದುವೇಳೆ, ಹೆಣ್ಣು ಮಗು ಎಂಬ ಕಾರಣಕ್ಕೆ ಹತ್ಯೆ  ನಡೆಸಿದರೆ, ಮರಣಾನಂತರ ವಿಚಾರಣೆಯ ವೇಳೆ ಅಂಥ ಹೆತ್ತವರನ್ನು ಆ ಮಗುವಿನ ಮುಂದೆಯೇ ಕಟಕಟೆಯಲ್ಲಿ ನಿಲ್ಲಿಸಲಾಗುವುದು  ಮತ್ತು ಯಾವ ಕಾರಣಕ್ಕಾಗಿ ನಿನ್ನನ್ನು ಹತ್ಯೆ ನಡೆಸಲಾಯಿತು ಮಗೂ ಎಂದೂ ಪ್ರಶ್ನಿಸಲಾಗುವುದು, ಅದು ಕೊಡುವ ಉತ್ತರದ  ಆಧಾರದಲ್ಲಿ ಹೆತ್ತವರಿಗೆ ಶಿಕ್ಷೆಯನ್ನು ನೀಡಲಾಗುವುದು ಎಂಬ ಗಂಭೀರ ಎಚ್ಚರಿಕೆಯನ್ನೂ ಕುರ್‌ಆನ್‌ನಲ್ಲಿ ನೀಡಲಾಗಿದೆ. ನಿಜವಾಗಿ,

ಇವತ್ತು ಹೊಸ ಮಂದಿರ-ಮಸೀದಿಗಳ ನಿರ್ಮಾಣ ಭರದಿಂದ ಸಾಗುತ್ತಲೇ ಇದೆ. ವರ್ಷದಿಂದ ವರ್ಷಕ್ಕೆ ಮಂದಿರ-ಮಸೀದಿಗೆ ತೆರಳುವ  ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವೂ ಆಗುತ್ತಿದೆ. ಧರ್ಮದ ಹೆಸರಲ್ಲಿ ನಡೆಯುವ ಸಭೆ, ಸಮಾರಂಭ, ಪ್ರವಚನ, ಗೋಷ್ಠಿಗಳಿಗೆ ಜನರೂ ಭಾರೀ  ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಚಪ್ಪಾಳೆ, ಶಿಳ್ಳೆಗಳೂ ಬೀಳುತ್ತಿವೆ. ಆದರೆ, ಧರ್ಮಬೋಧನೆಗಳ ಪಾಲನೆಯಲ್ಲಿ ಮಾತ್ರ ಈ ಉತ್ಸಾಹ  ಕಾಣಿಸುವುದಿಲ್ಲ. ಧರ್ಮಿಷ್ಠರೆಂದು ಹೇಳಿಕೊಳ್ಳುವವರೇ ಮತ್ತು ಧರ್ಮದ ಪೋಷಾಕು ತೊಟ್ಟವರೇ ಅತ್ಯಾಚಾರಿಗಳು, ಭ್ರಷ್ಟರು, ವಂಚಕರಾಗಿ  ಗುರುತಿಸಿಕೊಳ್ಳುತ್ತಿದ್ದಾರೆ. ಧರ್ಮದ್ವೇಷದ ಭಾಷಣಗಳನ್ನೂ ಮಾಡುತ್ತಿದ್ದಾರೆ. ಧರ್ಮವು ಎಂಬುದು ವ್ಯಕ್ತಿಯ ಪೋಷಾಕಿಗೆ  ಸೀಮಿತಗೊಂಡು ಆಚರಣೆಯಲ್ಲಿ ನಾಸ್ತಿಯಾದ ಸ್ಥಿತಿಗೆ ಬಂದಿದೆ. ಇದು ಬದಲಾಗಬೇಕು.

 ಧರ್ಮ ಎಂಬುದು ನಾಗರಿಕ ಸಮಾಜದಲ್ಲಿ  ಮೌಲ್ಯಗಳನ್ನು ಬಿತ್ತುವ ಬೋಧನೆಗಳ ಹೆಸರು. ಆ ಬೋಧನೆಗಳನ್ನು ಚಾಚೂ ತಪ್ಪದೇ ಅಳವಡಿಸಿಕೊಂಡ ವ್ಯಕ್ತಿ ಸಮಾಜ ಕಂಟಕ  ಆಗಲಾರ. ಮಂದಿರ-ಮಸೀದಿಯನ್ನು ಕೆಡುಕಿಗೆ ಬಳಸಲಾರ. ಧರ್ಮದ ಪೋಷಾಕು ತೊಟ್ಟು ಧರ್ಮದ್ರೋಹಿ ಕೆಲಸಗಳಲ್ಲಿ  ಭಾಗಿಯಾಗಲಾರ. ಸದ್ಯ ಇದಕ್ಕೆ ವಿರುದ್ಧವಾದುದು ನಡೆಯುತ್ತಿದೆ ಎಂದಾದರೆ, ಅದು ಅಪಾಯಕಾರಿ. ಅಂದಹಾಗೆ,

ಈ ದೇಶದಲ್ಲಿ ಅಪರಾಧಗಳು  ನಡೆಯದೇ ಇರುವುದಕ್ಕೆ ಕಾನೂನುಗಳ ಭಯವೊಂದೇ ಕಾರಣ ಅಲ್ಲ, ಧರ್ಮ ಮತ್ತು ಅದು ಬಿತ್ತಿದ ದೇವಭಯವೂ ಕಾರಣ. ಇಲ್ಲಿ ಅ ಪರಾಧ ಕೃತ್ಯಗಳಲ್ಲಿ ಭಾಗಿಯಾದರೆ, ಮರಣಾನಂತರ ದೇವನು ಪ್ರಶ್ನಿಸುತ್ತಾನೆ ಮತ್ತು ಶಿಕ್ಷೆ ನೀಡುತ್ತಾನೆ ಎಂಬ ಬೋಧನೆಯೂ ಜನರ  ಬದುಕಿನ ಮೇಲೆ ಪ್ರಭಾವ ಬೀರಿವೆ. ಆದ್ದರಿಂದ, ಧರ್ಮದ ಮೌಲ್ಯಗಳಿಗೆ ಮತ್ತೆ ಮತ್ತೆ ಪ್ರಸ್ತುತತೆಯನ್ನು ಕಲ್ಪಿಸುತ್ತಲೇ ಇರಬೇಕಾದ  ಹೊಣೆಗಾರಿಕೆ ಎಲ್ಲ ಧರ್ಮಿಷ್ಠರ ಮೇಲಿದೆ. ಪಶ್ಚಾತ್ತಾಪಪಡುವ ಸಿಂಘಾನಿಯಾರಂಥ  ತಂದೆ, ಕ್ರಿಶ್ಚಿಯನ್‌ನಂಥ ಮಗ ಮತ್ತು ಹೆಣ್ಣು  ಭ್ರೂಣವನ್ನು ಹತ್ಯೆ ಮಾಡುವ ವೈದ್ಯರು ಶೂನ್ಯವಾಗಬೇಕಾದುದು ಎಲ್ಲರ ಅಗತ್ಯ.