Friday, 14 September 2018

ಮೌನದ ಎದುರು ಸೋಲೊಪ್ಪಿಕೊಂಡ ವಾಚಾಳಿತನ


   
 ಬಟಾಟೆ, ಬೆಂಡೆಕಾಯಿ, ಹಸಿ ಮೆಣಸು, ಟೊಮೆಟೊ, ನೀರುಳ್ಳಿ ಇತ್ಯಾದಿಗಳನ್ನು ದಾರದಿಂದ ಪರಸ್ಪರ ಪೋಣಿಸಿ, ಮಾಲೆಯಂತೆ ಕೊರಳಿಗೆ ಧರಿಸಿದ ಸುಶ್ಮಾ ಸ್ವರಾಜ್‍ರ ಫೋಟೋವನ್ನು 2009 ಆಗಸ್ಟ್ 3ರಂದು ಇಂಡಿಯಾ ಟುಡೇ ಪತ್ರಿಕೆಯು ಪ್ರಕಟಿಸಿತ್ತು. ಫೋಟೋ ಕ್ಲಿಕ್ಕಿಸಿದ್ದು ಸುಬೀರ್ ಹೈದರ್ ಎಂದೂ ಅದು ನಮೂದಿಸಿತ್ತು. ದೆಹಲಿಯ ಜಂತರ್ ಮಂತರ್ ನಲ್ಲಿ ಸುಶ್ಮಾ ಸ್ವರಾಜ್‍ರು ಈ ರೀತಿ ಕಾಣಿಸಿಕೊಂಡಿದ್ದರು. ‘ಮನ್‍ಮೋಹನ್ ಸಿಂಗ್ ಸರಕಾರವು ಬೆಲೆ ಏರಿಕೆಯನ್ನು ತಡೆಯಲು ವಿಫಲವಾಗಿದೆ’ ಎಂದು ಆರೋಪಿಸಿ ಬಿಜೆಪಿಯು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಹೀಗೆ ಕಾಣಿಸಿಕೊಂಡಿದ್ದರು. ಇದೇ ಸುಶ್ಮಾ ಸ್ವರಾಜ್ ಮತ್ತು ನಿತಿನ್ ಗಡ್ಕರಿಯವರೂ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಪರಸ್ಪರ ಕೈ ಪೋಣಿಸಿ ಎತ್ತಿ ಹಿಡಿದ ದೃಶ್ಯವನ್ನು 2010 ಫೆಬ್ರವರಿ 10ರಂದು ಓಆಖಿಗಿ ಪ್ರಸಾರ ಮಾಡಿತ್ತು. ಈ ಪ್ರತಿಭಟನೆ ನಡೆದದ್ದೂ ಪ್ರಧಾನಿ ಮನ್‍ಮೋಹನ್ ಸಿಂಗ್ ಸರಕಾರದ ವಿರುದ್ಧ. ಸ್ಥಳ: ಅದೇ ಜಂತರ್ ಮಂತರ್. ಆ ಪ್ರತಿಭಟನಾ ಸಭೆಯಲ್ಲಿ ಗಡ್ಕರಿಯವರು ಕ್ರಿಕೆಟ್ ಭಾಷೆಯಲ್ಲಿ ಕೇಂದ್ರ ಸರಕಾರವನ್ನು ಟೀಕಿಸಿದ್ದರು. ‘ಸಕ್ಕರೆಯ ಬೆಲೆಯು ಅರ್ಧಶತಕವನ್ನು ದಾಟಿದೆ ಮತ್ತು ಬೇಳೆಯು ಶತಕ ಸಿಡಿಸಿದೆ. ಈ ತಂಡದ ಕೋಚ್ ಆಗಿ ಶರದ್ ಪವಾರ್ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ತಮಾಷೆ ಮಾಡಿದ್ದರು. ಅಲ್ಲಿ ಸೇರಿದ್ದ ಪ್ರತಿಭಟನಾಕಾರರಂತೂ ವಿವಿಧ ಹಣ್ಣು-ಹಂಪಲು ಮತ್ತು ತರಕಾರಿಗಳನ್ನು ದಾರದಲ್ಲಿ ಪೋಣಿಸಿ ಕೊರಳಿಗೆ ಹಾಕಿಕೊಂಡಿದ್ದರು. ಬೆಲೆ ಏರಿಕೆಯನ್ನು ಖಂಡಿಸಿ ಮನ್‍ಮೋಹನ್ ಸಿಂಗ್ ಸರಕಾರದ ವಿರುದ್ಧ 2010 ಡಿಸೆಂಬರ್ 15ರಂದು ಜಂತರ್ ಮಂತರ್‍ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿರುವ ಚಿತ್ರ ಮತ್ತು ಸುದ್ದಿಯು ಬಿಜೆಪಿ ವೆಬ್‍ಸೈಟ್‍ನಲ್ಲಿ ಈಗಲೂ ಇದೆ. ಇದೇ ಬೆಲೆ ಏರಿಕೆಯ ಕಾರಣವನ್ನು ಮುಂದಿಟ್ಟು 2011, ಸೆಪ್ಟೆಂಬರ್ 17 ಮತ್ತು 2012 ಅಕ್ಟೋಬರ್ 12ರಂದು ಬಿಜೆಪಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿರುವುದನ್ನು ದಿ ಹಿಂದೂ ಮತ್ತು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳು ಪ್ರಕಟಿಸಿವೆ. ಇದರ ಜೊತೆಗೇ, ಪ್ರಧಾನಿಯಾಗುವುದಕ್ಕಿಂತ ಮೊದಲು ನರೇಂದ್ರ ಮೋದಿಯವರು ಮಾಡಿರುವ ಭಾಷಣಗಳನ್ನೂ ಇಟ್ಟು ನೋಡಬೇಕು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ನರೇಂದ್ರ ಮೋದಿಯವರ ಭಾಷಣವು ಪೆಟ್ರೋಲ್ ಮತ್ತು ಡೀಸೆಲ್‍ಗಳಿಲ್ಲದೇ ಕೊನೆಗೊಳ್ಳುತ್ತಲೇ ಇರಲಿಲ್ಲ. ತೈಲ ಬೆಲೆ ಏರಿಕೆಯನ್ನು ಅವರು ಮನ್‍ಮೋಹನ್ ಆಡಳಿತದ ವೈಫಲ್ಯಕ್ಕೆ ಸಾಕ್ಷ್ಯವಾಗಿ ದೇಶದ ಮುಂದಿಟ್ಟಿದ್ದರು. 2012 ಆಗಸ್ಟ್ 10ರಂದು ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಕಾಣಿಸಿಕೊಂಡ ಬಾಬಾ ರಾಮ್‍ದೇವ್‍ರಂತೂ ಲೋಕಪಾಲ ಕಾಯ್ದೆಯನ್ನು ಜಾರಿ ಮಾಡಿ ಕಪ್ಪು ಹಣವನ್ನು ಮರಳಿ ತಂದರೆ 35 ರೂಪಾಯಿಗೆ ಪೆಟ್ರೋಲ್ ಸಿಗಲಿದೆ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ರಾಮ್‍ದೇವ್‍ರ ಜೊತೆಗಿದ್ದುದು ಇದೇ ಬಿಜೆಪಿ. ಅವರ ಮಾತನ್ನು ತನ್ನದೇ ಮಾತು ಎಂಬಂತೆ ಅದು ಆಡಿಕೊಂಡಿತ್ತು. ಇದೀಗ ಮನ್‍ಮೋಹನ್ ಸಿಂಗ್ ಹೊರಟು ಹೋಗಿದ್ದಾರೆ. ಲೋಕ್‍ಪಾಲ್ ಮಸೂದೆಯನ್ನು ಜಾರಿಗೊಳಿಸುತ್ತೇನೆಂದು ಹೇಳಿದ, 100 ದಿನದೊಳಗೆ ಕಪ್ಪು ಹಣವನ್ನು ಭಾರತಕ್ಕೆ ಮರಳಿ ತಂದು ಪ್ರತಿಯೋರ್ವ ಪ್ರಜೆಯ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡುವೆನೆಂದು ಭರವಸೆ ಕೊಟ್ಟ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಇಳಿಸಿ, ಬೆಲೆ ಏರಿಕೆಯನ್ನು ತಡೆದು,  ಡಾಲರ್ ನ ಎದುರು ರೂಪಾಯಿ ಮೌಲ್ಯವನ್ನು ಏರಿಸುವೆನೆಂದು ಮಾತು ಕೊಟ್ಟ ಬಿಜೆಪಿ ಪಕ್ಷವು ಅಧಿಕಾರದಲ್ಲಿದೆ. 2014ರ ಲೋಕಸಭಾ ಚುನಾವಣೆಗಿಂತ ಮೊದಲು ನರೇಂದ್ರ ಮೋದಿಯವರು ಮಾಡಿದ ಭಾಷಣಗಳನ್ನು ಗಣನೆಗೆ ತೆಗೆದುಕೊಂಡರೆ ಈ ಭರವಸೆಯ ಪಟ್ಟಿ ಇನ್ನಷ್ಟು ಬದ್ಧವಾಗಬಹುದು.

ಕಾಶ್ಮೀರದ 371ನೇ ವಿಧಿಯ ಬಗ್ಗೆ, ಸಮಾನ ನಾಗರಿಕ ಸಂಹಿತೆಯ ಬಗ್ಗೆ, ಪಾಕಿಸ್ತಾನಕ್ಕೆ ಪಾಠ ಕಲಿಸುವ ಬಗ್ಗೆ, ಕಾಶ್ಮೀರದ ಪ್ರತ್ಯೇಕತಾವಾದವನ್ನು ಹುಟ್ಟಡಗಿಸುವ ಬಗ್ಗೆ ಅವರು ಪುಂಖಾನುಪುಂಖ ಮಾತುಗಳನ್ನು ಆಡಿದ್ದರು. ಈಗ ಅವೇ ಪ್ರಶ್ನೆಗಳು ಬಿಜೆಪಿಯ ಎದುರು ನಿಂತಿವೆ. ಪ್ರತಿದಿನ ಡಾಲರ್ ನ ಎದುರು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿರುವ ರೂಪಾಯಿಯನ್ನು ಮೇಲೆತ್ತಲು ಬಿಜೆಪಿ ಸರಕಾರ ಯಾಕೆ ವಿಫಲವಾಗುತ್ತಿದೆ? ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿರುವುದರ ಹೊರತಾಗಿಯೂ ಭಾರತದಲ್ಲೇಕೆ ತೈಲ ಬೆಲೆಯಲ್ಲಿ ಪ್ರತಿದಿನ ಏರಿಕೆಯಾಗುತ್ತಲೇ ಇದೆ? 100 ದಿನಗಳೊಳಗೆ ಕಪ್ಪು ಹಣವನ್ನು ಭಾರತಕ್ಕೆ ಮರಳಿ ತರುತ್ತೇನೆಂದು ಭರವಸೆ ನೀಡಿದ ನರೇಂದ್ರ ಮೋದಿಯವರು ಯಾಕೆ ಆ ಬಗ್ಗೆ ಮಾತನ್ನೇ ಆಡುತ್ತಿಲ್ಲ? ಮನ್‍ಮೋಹನ್ ಸಿಂಗ್ ಸರಕಾರಕ್ಕೆ ಹೋಲಿಸಿದರೆ, ಇವತ್ತು ಗ್ಯಾಸ್‍ನ ಬೆಲೆ ದುಪ್ಪಟ್ಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯಲ್ಲಂತೂ ತೀವ್ರ ಏರಿಕೆಯಾಗಿದೆ. ಸಮಾನ ನಾಗರಿಕ ಸಂಹಿತೆಯ ಪ್ರಸ್ತಾಪವನ್ನಂತೂ ಕೇಂದ್ರದ ಕಾನೂನು ಆಯೋಗವೇ ಅಪ್ರಾಯೋಗಿಕ ಎಂದು ತಿರಸ್ಕರಿಸಿದೆ. ಕಾಶ್ಮೀರದ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವುದಾಗಲಿ, 371ನೇ ವಿಧಿಯನ್ನು ರದ್ದುಪಡಿಸುವ ವಿಷಯದಲ್ಲಾಗಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ.

ಮನ್‍ಮೋಹನ್ ಸಿಂಗ್ ಸರಕಾರವನ್ನು ಖಂಡಿಸುವುದಕ್ಕೆ ಹಣ್ಣು-ಹಂಪಲು ಮತ್ತು ತರಕಾರಿಗಳ ಮಾಲೆಯನ್ನು ಕೊರಳಿಗೆ ಹಾಕಿ ಪ್ರತಿಭಟಿಸಿದ ಸುಶ್ಮಾ, ಗಡ್ಕರಿ ಸಹಿತ ಬಿಜೆಪಿಯ ಯಾವ ನಾಯಕರೂ ಈಗ ಮಾತಾಡುತ್ತಿಲ್ಲ? ಐದಾರು ವರ್ಷಗಳ ಹಿಂದೆ ಅವರು ಕೊರಳಿಗೆ ಹಾಕಿಕೊಂಡಿದ್ದ ಮಾಲೆಗಳ ಉದ್ದೇಶ ಪ್ರಾಮಾಣಿಕವೇ ಆಗಿದ್ದಿದ್ದರೆ, ಈಗಲೂ ಅವೇ ಜನರಿದ್ದಾರಲ್ಲ ಮತ್ತು ಅಂದಿಗಿಂತಲೂ ದುರ್ದಿನಗಳಿವೆಯಲ್ಲ, ಯಾಕೆ ಅವರು ಬೀದಿಗಿಳಿಯುತ್ತಿಲ್ಲ? ಶತಕ ದಾಖಲಿಸುವ ಹಂತದಲ್ಲಿ ತೈಲಬೆಲೆ ಇದ್ದಾಗ್ಯೂ ನರೇಂದ್ರ ಮೋದಿಯವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸುವುದನ್ನೇ ಆದ್ಯತೆಯಾಗಿಟ್ಟುಕೊಂಡಿದ್ದಾರೆ. 2+2 ಮಾತುಕತೆಗಿಂತ 100 ಕೋಟಿ ಭಾರತೀಯರ ಬವಣೆಗಳು ಸುಶ್ಮಾರಿಗೆ ಮುಖ್ಯವಾಗಲಿಲ್ಲವೆಂದರೆ ಏನರ್ಥ?

2014ರ ಲೋಕಸಭಾ ಚುನಾವಣೆಗಿಂತ ಮೊದಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಯಾವ ಭರವಸೆಯನ್ನು ಹುಟ್ಟು ಹಾಕಿತ್ತೋ ಆ ಭರವಸೆಗಳೆಲ್ಲ ಇವತ್ತು ಹತಾಶೆಯಾಗಿ ಮಾರ್ಪಟ್ಟು ಬಿಟ್ಟಿದೆ. ವಿಶೇಷವಾಗಿ, ನರೇಂದ್ರ ಮೋದಿಯವರನ್ನು ಪರಿವರ್ತನೆಯ ಹರಿಕಾರ ಎಂದೇ ಮಾಧ್ಯಮಗಳು ಬಿಂಬಿಸಿದ್ದುವು. ಅಳೆದೂ ತೂಗಿ ಮಾತಾಡುವ ಮನ್‍ಮೋಹನ್ ಸಿಂಗ್‍ರಿಗಿಂತ ವಾಚಾಳಿ ನರೇಂದ್ರ ಮೋದಿಯವರಲ್ಲಿ ಈ ದೇಶದ ಜನರು ಏನೋ ಹೊಸತನ್ನು ನಿರೀಕ್ಷಿಸಿದರು. ಮಾತುಗಳಲ್ಲಿ ಅವರು ಕಟ್ಟಿಕೊಟ್ಟ ಅರಮನೆಯನ್ನು ನಿಜವೆಂದೇ ನಂಬಿದ್ದರು. ಆದರೆ ಆ ಮಾತುಗಳ ಆಚೆಗೆ ನರೇಂದ್ರ ಮೋದಿಯವರು ಅತ್ಯಂತ ದುರ್ಬಲ ಮತ್ತು ವಿಫಲ ನಾಯಕ ಎಂಬುದನ್ನು ಕಳೆದ ನಾಲ್ಕು ವರ್ಷಗಳು ಸ್ಪಷ್ಟಪಡಿಸಿದೆ. ಈಗಲೂ ಮೋದಿಯವರು ಬರೇ ಮಾತುಗಳನ್ನಷ್ಟೇ ಆಡುತ್ತಿದ್ದಾರೆ. ಆಡಿದ ಮಾತಿನ ಮೇಲೆ ಯಾವ ಹೊಣೆಗಾರಿಕೆಯನ್ನೂ ಹೊರದೇ ಅಡಗಿಕೊಳ್ಳುತ್ತಾರೆ. ಈಗ ಹಿಂತಿರುಗಿ ನೋಡಿದರೆ ಮನ್‍ಮೋಹನ್ ಸಿಂಗ್ ಎಷ್ಟೋ ಮಿಗಿಲು ಅನ್ನಿಸುತ್ತದೆ. ಅವರು ಆಡುವ ಮಾತುಗಳಲ್ಲಿ ತೂಕವಿತ್ತು. ಕೊಡುವ ಭರವಸೆಗಳಿಗೆ ಬದ್ಧತೆಯೂ ಇತ್ತು.

ಮಾತುಗಾರಿಕೆ ಮತ್ತು ಹೊಣೆಗಾರಿಕೆ ಎರಡೂ ಒಂದೇ ನಾಣ್ಯದ ಎರಡು ಮುಖಗಳು. ಮಾತು ಹೊಣೆಗಾರಿಕೆಯನ್ನು ಬಯಸುತ್ತದೆ. ಹೊಣೆ ಹೊರದ ಮಾತು ಹೊಣೆಗೇಡಿಯಾದುದು, ನಿಷ್ಫಲವಾದುದು. ಈ ದೇಶದ ಮಂದಿ ಪ್ರಧಾನಿಯನ್ನು ಹೊಣೆಗಾರನ ಸ್ಥಾನದಲ್ಲಿರಿಸಿ ನೋಡುತ್ತಾರೆ. ಮಾತು ತಪ್ಪುವುದು ಮತ್ತು ವಚನಭಂಗ ಮಾಡುವುದನ್ನು ಈ ದೇಶದ ಸಂಸ್ಕೃತಿಯು ಗಂಭೀರ ಅಪರಾಧವಾಗಿ ಪರಿಗಣಿಸುತ್ತದೆ. ಪ್ರಧಾನಿ ಮೋದಿಯವರು ಸದ್ಯ ಅಂಥದ್ದೊಂದು ಸ್ಥಿತಿಯಲ್ಲಿದ್ದಾರೆ ಎಂದೇ ಹೇಳಬೇಕಾಗುತ್ತದೆ.

ನಾಲ್ಕು ವರ್ಷಗಳ ಹಿಂದೆ ಅವರು ಕಟ್ಟಿಕೊಟ್ಟ ಕನಸಿನ ಮನೆ ಇಷ್ಟು ಬೇಗ ಸೋರಬಹುದೆಂದು ಯಾರೂ ನಿರೀಕ್ಷಿಸಿರಲಾರರು.

Friday, 7 September 2018

ಅನ್ಯರನ್ನು ಹತ್ಯೆಗೈದು ರಕ್ಷಿಸಿಕೊಳ್ಳಬೇಕಾದ ವಿಚಾರಧಾರೆಯಾದರೂ ಯಾವುದು?


        ಯಾಸೀನ್ ಭಟ್ಕಳ್ ಯಾರು ಮತ್ತು ಇಂಡಿಯನ್ ಮುಜಾಹಿದೀನ್ ಏನು ಅನ್ನುವ ಪ್ರಶ್ನೆಯನ್ನು ಏಳೆಂಟು ವರ್ಷಗಳ ಹಿಂದೆ ಈ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಎತ್ತಲಾಗಿತ್ತು. ಇಂಡಿಯನ್ ಎಂಬ ಆಂಗ್ಲ ಪದ ಹಾಗೂ ಮುಜಾಹಿದೀನ್ ಎಂಬ ಅರೇಬಿಕ್ ಪದಗಳು ಜೊತೆ ಸೇರಿಕೊಂಡು ಉಂಟಾದ ಇಂಡಿಯನ್ ಮುಜಾಹಿದೀನ್ ಎಂಬ ಸಂಘಟನೆಯ ಫಲಾನುಭವಿಗಳು ಯಾರು, ಮೂಲ ಕೇಂದ್ರ ಎಲ್ಲಿ, ಅದರ ಕಾರ್ಯಚಟುವಟಿಕೆ ಹೇಗೆ, ಯಾವ ಉದ್ದೇಶದಿಂದ ಅದನ್ನು ಹುಟ್ಟು ಹಾಕಲಾಗಿದೆ.. ಎಂಬೆಲ್ಲ ಪ್ರಶ್ನೆಗಳು ಆಗ ಮುಂಚೂಣಿಯಲ್ಲಿತ್ತು. ಬಳಿಕ ಸ್ಪಷ್ಟಗೊಂಡ ಸಂಗತಿ ಏನೆಂದರೆ, ಅದು ದೇಶದಲ್ಲಿ ಯಾವ ಸಮಾಜಸೇವಾ ಕಾರ್ಯವನ್ನೂ ಮಾಡುತ್ತಿಲ್ಲ, ಯಾರ ಪರವಾಗಿಯೂ ಅದು ಹೋರಾಡು(ಮುಜಾಹಿದ್)ತ್ತಿಲ್ಲ ಮತ್ತು ಅದಕ್ಕೊಂದು ನಿಶ್ಚಿತವಾದ ಮೂಲ ನೆಲೆಯೂ ಇಲ್ಲ. ಭಾರತದಲ್ಲಿ ಅಸ್ಥಿರತೆಯನ್ನು ಹುಟ್ಟು ಹಾಕುವುದೇ ಅದರ ಮೂಲ ಗುರಿ ಎಂಬ ಮಾಹಿತಿಯನ್ನು ಈ ದೇಶದ ತನಿಖಾ ಸಂಸ್ಥೆಗಳು ಹೇಳಿಕೊಂಡವು.

ಸದ್ಯ ಈ ಮೇಲಿನ ಪ್ರಶ್ನೆಗಳಿಗೆ ಮತ್ತೊಮ್ಮೆ ಮಹತ್ವ ಲಭ್ಯವಾಗಿದೆ. ಈ ಬಾರಿ ಪ್ರಶ್ನೆಯ ಮೊನೆಗೆ ಸಿಲುಕಿಕೊಂಡಿರುವುದು- ಅಭಿನವ ಭಾರತ, ಸನಾತನ ಸಂಸ್ಥಾ, ಹಿಂದೂ ಜನಜಾಗೃತಿ ಸಮಿತಿ, ಹಿಂದೂ ಮಹಾಸಭಾ ಇತ್ಯಾದಿ ಸಂಘಟನೆಗಳು. ನಿಜಕ್ಕೂ, ಈ ಸಂಘಟನೆಗಳ ಕಾರ್ಯವೈಖರಿ ಏನು, ಸದಸ್ಯತನದ ಬಗೆ ಹೇಗೆ, ಈ ಸಂಘಟನೆಗಳ ಉದ್ದೇಶ, ಗುರಿ, ಬೋಧನೆಗಳು ಏನೇನು ಇತ್ಯಾದಿಗಳು ಈಗ ಪ್ರಶ್ನೆಗೆ ಒಳಗಾಗಿವೆ. ಮೊಟ್ಟಮೊದಲು ಈ ಸಂಘಟನೆಗಳ ಕುರಿತಂತೆ ಇಂಥದ್ದೊಂದು ಪ್ರಶ್ನೆಯನ್ನೆತ್ತಿದ್ದು ಮುಂಬೈಯ ಪೊಲೀಸ್ ಮುಖ್ಯಸ್ಥ ಹೇಮಂತ್ ಕರ್ಕರೆ. ಇಂಡಿಯನ್ ಮುಜಾಹಿದೀನ್‍ನ ಉದ್ದೇಶ ಏನೇನೋ ಅದಕ್ಕೆ ಸಮಾನವಾದ ಉದ್ದೇಶವನ್ನೇ ಈ ಸಂಘಟನೆಗಳು ಹೊಂದಿವೆ ಎಂಬುದನ್ನು ಅವರು ಪತ್ತೆ ಹಚ್ಚಿದ್ದರು. ಸಂಜೋತಾ ಎಕ್ಸ್‍ಪ್ರೆಸ್, ಮಾಲೆಗಾಂವ್ ಸ್ಫೋಟ ಮತ್ತು ಮಕ್ಕಾ ಮಸೀದಿ ಸ್ಫೋಟಗಳ ಆರೋಪದಲ್ಲಿ ಅಭಿನವ್ ಭಾರತ್‍ನೊಂದಿಗೆ ಸಂಬಂಧ ಹೊಂದಿದ್ದ ಸಾಧ್ವಿ ಪ್ರಜ್ಞಾಸಿಂಗ್, ಪುರೋಹಿತ್, ಅಸೀಮಾನಂದ ಸಹಿತ ಹಲವರನ್ನು ಅವರು ಬಂಧಿಸಿದ್ದರು. ಇಂಡಿಯನ್ ಮುಜಾಹಿದೀನ್‍ನ ಇನ್ನೊಂದು ಮುಖವಾಗಿ ಅಭಿನವ್ ಭಾರತ್ ಅನ್ನು ಅವರು ಈ ದೇಶದ ಮುಂದೆ ಅನಾವರಣಗೊಳಿಸಿದ್ದರು. ಈ ನಡುವೆ ಮುಂಬೈ ದಾಳಿಯ ವೇಳೆ ಅವರ ಹತ್ಯೆ ನಡೆಯಿತು. ಆ ಬಳಿಕ ಅವರ ತನಿಖೆಯಲ್ಲೇ ತಪ್ಪುಗಳನ್ನು ಹುಡುಕುವ ಪ್ರಯತ್ನಗಳು ಅತ್ಯಂತ ಯೋಜಿತವಾಗಿ ನಡೆದುವು. ಅವರನ್ನೇ ತಪ್ಪಿತಸ್ಥ ಎಂದು ಘೋಷಿಸುವ ಮಟ್ಟಕ್ಕೆ ವಾದಗಳು ಬೆಳೆದುವು.

ಇದೀಗ ಕರ್ಕರೆಯವರ ಅದೇ ಮಹಾರಾಷ್ಟ್ರದಲ್ಲಿ ಬಂಧನ ಸತ್ರ ನಡೆಯುತ್ತಿದೆ. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಸಿಬಿಐ ಮತ್ತು ಕರ್ನಾಟಕದ ಸಿಟ್ ಈ ಮೂರೂ ಸಂಸ್ಥೆಗಳು ಉಭಯ ರಾಜ್ಯಗಳಲ್ಲಿ ಹಲವರನ್ನು ಬಂಧಿಸಿವೆ. ವಿಶೇಷ ಏನೆಂದರೆ, ಬಂಧಿತರೆಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಸನಾತನ ಸಂಸ್ಥಾ, ಅಭಿನವ್ ಭಾರತ್, ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿಗಳೊಂದಿಗೆ ಗಾಢ ಸಂಬಂಧವನ್ನು ಹೊಂದಿದವರಾಗಿದ್ದಾರೆ. ಇಂಡಿಯನ್ ಮುಜಾಹಿದೀನ್‍ನ ಸ್ಥಾಪಕ ಎಂದು ಹೇಳಲಾದ ಯಾಸೀನ್ ಭಟ್ಕಳ್‍ನ ಹೆಸರು ಅರಬಿ ಮೂಲವಾಗಿದ್ದರೆ ವೈಭವ್ ರಾವತ್, ವಾಘ್ಮೋರೆ ಗಣೇಶ್ ಮಿಸ್ಕಿನ್, ಅಮಿತ್ ಬದ್ದಿ, ಅಮೋಳ್ ಕಾಳೆ, ಭರತ್ ಕುರ್ನೆ, ಶರದ್ ಕಳಾಸ್ಕರ್, ಸಚಿನ್ ಅಂಧುರೆ ಮತ್ತು ಇನ್ನಿತರ ಆರೋಪಿಗಳ ಹೆಸರುಗಳು ಅಚ್ಚ ಭಾರತೀಯ ಮೂಲದವು. ಹೆಸರುಗಳ ಮೂಲದಲ್ಲಿ ಯಾಸೀನ್ ಮತ್ತು ಇವರ ನಡುವೆ ವ್ಯತ್ಯಾಸ ಇದೆಯೇ ಹೊರತು ಮನೋಭಾವದಲ್ಲಿ ಇವರೆಲ್ಲ ಸಮಾನರೇ ಅನ್ನುವುದನ್ನು ತನಿಖಾ ವರದಿಗಳು ಪ್ರತಿದಿನ ಬಹಿರಂಗಪಡಿಸುತ್ತಿವೆ. ದೇಶದ ಹಲವು ಕಡೆ ಬಾಂಬ್ ಸ್ಫೋಟಿಸಿದ ಆರೋಪ ಯಾಸೀನ್ ಭಟ್ಕಳ್‍ನ ಮೇಲಿದ್ದರೆ, ಸನಾತನ ಸಂಸ್ಥಾದೊಂದಿಗೆ ಗುರುತಿಸಿಕೊಂಡಿರುವ ವೈಭವ್ ರಾವತ್‍ನಿಂದ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಬಿಐ ಮತ್ತು ಕರ್ನಾಟಕದ ಸಿಟ್‍ನಿಂದ ಬಂಧನಕ್ಕೊಳಗಾದವರ ಮೇಲಿರುವ ಆರೋಪವಂತೂ ಇದಕ್ಕಿಂತಲೂ ಗಂಭೀರ. ದಾಬೋಲ್ಕರ್, ಪನ್ಸಾರ್, ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆಯಲ್ಲಿ ಇವರೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ನಿಜವಾಗಿ, ಸಮಸ್ಯೆ ಇರುವುದು ಹೆಸರುಗಳಲ್ಲಲ್ಲ, ಮನಃಸ್ಥಿತಿಯಲ್ಲಿ. ಯಾಸೀನ್ ಕೆಟ್ಟ ಹೆಸರಲ್ಲ. ಪರಶುರಾಮ ವಾಘ್ಮೋರೆ ಕೂಡಾ ಹಾಗೆಯೇ. ಆದರೆ ಈ ಇಬ್ಬರ ಮನಃಸ್ಥಿತಿಯಿಂದಾಗಿ ಈ ಎರಡೂ ಹೆಸರುಗಳಿಗೆ ಕಳಂಕ ಅಂಟಿಕೊಂಡವು. ಸನಾತನ ಸಂಸ್ಥಾ ಅಥವಾ ಅಭಿನವ್ ಭಾರತ್ ಎಂಬ ಹೆಸರುಗಳು ಕೆಟ್ಟದ್ದೇನಲ್ಲ. ಆದರೆ ಈ ಹೆಸರಿನ ಅಡಿಯಲ್ಲಿ ಒಂದಾಗುವ ವ್ಯಕ್ತಿಗಳು ಯಾವ ಮನಃಸ್ಥಿತಿಯನ್ನು ಹೊಂದಿರುತ್ತಾರೋ ಆ ಮನಃಸ್ಥಿತಿ ಅವಕ್ಕೆ ಕೆಟ್ಟದಾದ ಅಥವಾ ಒಳ್ಳೆಯದಾದ ಹೆಸರುಗಳನ್ನು ಕೊಡಿಸುತ್ತವೆ. ಹಿಂದೂ ಜನಜಾಗೃತಿ ಸಮಿತಿ ಎಂಬ ಹೆಸರು ಬಾಹ್ಯನೋಟಕ್ಕೆ ಅತ್ಯಂತ ಅಂದವಾದುದು ಮತ್ತು ಹಿಂದೂಗಳೇ ಬಹುಸಂಖ್ಯಾತವಾಗಿರುವ ಭಾರತದ ಮಟ್ಟಿಗೆ ಅತ್ಯಂತ ಸೂಕ್ತವಾದುದು. ಆದರೆ ಸಮಸ್ಯೆ ಇರುವುದು ಈ ಸಂಘಟನೆಯ ಉದ್ದೇಶ ಮತ್ತು ಗುರಿಗಳಲ್ಲಿ.
  
 ಕ್ರೌರ್ಯ ಯಾವುದಾದರೊಂದು ನಿರ್ದಿಷ್ಟ ಧರ್ಮದ ಸೊತ್ತಲ್ಲ. ಅದು ಧರ್ಮಾತೀತ ಮತ್ತು ರಾಷ್ಟ್ರಾತೀತ ಮನಃಸ್ಥಿತಿ. ಅದು ಯಾಸೀನ್ ಎಂಬ ಹೆಸರಿನವನಲ್ಲೂ ಇರಬಹುದು ಅಥವಾ ವಾಘ್ಮೋರೆ ಎಂಬ ಹೆಸರಿನವನಲ್ಲೂ ಇರಬಹುದು. ವೈಭವ್ ರಾವತ್ ಎಂಬ ಹೆಸರು, ಆತನ ಹಣೆಯಲ್ಲಿರುವ ನಾಮ, ಹಿಂದೂ ಧರ್ಮದ ಬಗ್ಗೆ ಆತನಿಗಿರುವ ಜ್ಞಾನ ಮತ್ತು ನಿಷ್ಠೆ ಹಾಗೂ ಆತನಲ್ಲಿರುವ ಇನ್ನಿತರ ಧಾರ್ಮಿಕ ಸಂಕೇತಗಳು ಆತನನ್ನು ನಿಷ್ಠಾವಂತ ಹಿಂದೂ ಎನ್ನುವುದಕ್ಕೋ ಅಥವಾ ಹಿಂದೂ ಧರ್ಮದ ನೈಜ ಪ್ರತಿನಿಧಿ ಎಂದು ಸಾರುವುದಕ್ಕೋ ಪುರಾವೆ ಆಗಲಾರದು ಮತ್ತು ಆಗಬಾರದು ಕೂಡಾ. ದಾವೂದ್ ಇಬ್ರಾಹೀಮ್‍ನ ಬಗ್ಗೆ ಅಥವಾ ಕಸಬ್‍ನ ಬಗ್ಗೆಯೂ ಇವೇ ಮಾತುಗಳನ್ನು ಹೇಳಬೇಕು. ವ್ಯಕ್ತಿಯೋರ್ವನ ಬಾಹ್ಯ ಗುರುತುಗಳನ್ನು ನೋಡಿಕೊಂಡು ಆತನ ಧರ್ಮವನ್ನು ವ್ಯಾಖ್ಯಾನಿಸುವುದು ತಪ್ಪು. ಅವರ ತಪ್ಪುಗಳನ್ನು ಅವರ ಖಾತೆಗೆ ಸೇರಿಸುವುದೇ ನಿಜವಾದ ಧರ್ಮ. ಕ್ರೌರ್ಯ ಮನಃಸ್ಥಿತಿ ಯಾವ ಧರ್ಮದವನಲ್ಲೂ ಇರಬಹುದು. ಅಷ್ಟಕ್ಕೂ,

ಕ್ರೌರ್ಯ ಎಂಬುದು ಹತ್ಯೆಯಲ್ಲಿ ಭಾಗಿಯಾಗುವುದೋ ಬಾಂಬ್ ಸ್ಫೋಟಿಸುವುದೋ ಮಾತ್ರವಲ್ಲ, ಅದೊಂದು ಮನಃಸ್ಥಿತಿ. ದ್ವೇಷಿಸುವುದೇ ಅದರ ಪರಮ ನೀತಿ. ಭಾಷಣಗಳಲ್ಲಿ, ಬರಹಗಳಲ್ಲಿ ಕೂಡಾ ಇದು ವ್ಯಕ್ತವಾಗುತ್ತಿರುತ್ತದೆ. ಕೆಲವರು ಶಸ್ತ್ರಾಸ್ತ್ರಗಳ ಮೂಲಕ ಇದನ್ನು ವ್ಯಕ್ತಪಡಿಸುತ್ತಾರೆ. ಸದ್ಯದ ತುರ್ತು ಏನೆಂದರೆ, ಇಂತಹ ಮನಃಸ್ಥಿತಿಯನ್ನು ಪೋಷಿಸುವ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಂಘಟನೆಗಳ ಮೇಲೆ ನಿಗಾ ವಹಿಸುವುದು. ಅಂಥ ವಿಚಾರಧಾರೆಯೆಡೆಗೆ ಯುವಕರು ಆಕರ್ಷಿತರಾಗದಂತೆ ಕಾರ್ಯಕ್ರಮಗಳನ್ನು ಸ್ಥಳೀಯ ಮಟ್ಟದಲ್ಲಿ ಸರಕಾರದ ನೇತೃತ್ವದಲ್ಲೇ  ಹಮ್ಮಿಕೊಳ್ಳುವುದು. ಸಾಧ್ಯವಾದರೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲೂ ಈ ಬಗ್ಗೆ ಜಾಗೃತಿ ಮೂಡಿಸುವ ಮತ್ತು ನಿಜ ಧರ್ಮವನ್ನು ವಿವರಿಸುವ ಸಂದರ್ಭಗಳನ್ನು ಹುಟ್ಟು ಹಾಕುವುದು. ಧರ್ಮ ಮತ್ತು ಅಧರ್ಮದ ವ್ಯತ್ಯಾಸಗಳನ್ನು ಜನರಿಗೆ ಮನದಟ್ಟು ಮಾಡಿಸುವುದು.

ಯಾರನ್ನಾದರೂ ಹತ್ಯೆಗೈಯುವುದರಿಂದ ಮತ್ತು ಬಾಂಬ್ ಸ್ಫೋಟಿಸಿ ಸಾಯಿಸುವುದರಿಂದ ಧರ್ಮರಕ್ಷಣೆಯಾಗುತ್ತದೆ ಎಂದು ನಂಬುವುದೇ ಅಧರ್ಮ. ಇತರರನ್ನು ಸಾಯಿಸುವ ಮೂಲಕ ಬದುಕಿಕೊಳ್ಳಬೇಕಾದಷ್ಟು ಯಾವ ಧರ್ಮವೂ ದುರ್ಬಲ ಅಲ್ಲ. ಅದು ಸಾಯಿಸುವವರ ದೌರ್ಬಲ್ಯ. ಅವರ ದೌರ್ಬಲ್ಯವನ್ನು ಧರ್ಮದ ಮೇಲೆ ಹೊರಿಸುವುದು ಅತಿದೊಡ್ಡ ಅನ್ಯಾಯ. ಇದರ ವಿರುದ್ಧ ಧರ್ಮಾತೀತ ಜಾಗೃತಿ ಅತ್ಯಗತ್ಯ. ಹಿಂಸೆಯಲ್ಲಿ ನಂಬಿಕೆಯಿಟ್ಟಿರುವವರು ಇಂಡಿಯನ್ ಮುಜಾಹಿದೀನ್‍ನಲ್ಲಿರಲಿ ಅಥವಾ ಅಭಿನವ್ ಭಾರತ್, ಸನಾತನ್ ಸಂಸ್ಥಾದಲ್ಲಿರಲಿ, ಅವರು ಅಧರ್ಮಿಗಳು. ಅವರನ್ನು ಸಮರ್ಥಿಸದಿರುವುದೇ ನಾವು ಧರ್ಮಕ್ಕೆ ನೀಡಬಹುದಾದ ನಿಜವಾದ ಗೌರವ.

ಪ್ರಧಾನಿಯ ಕೊರಳಿನ ಉರುಳನ್ನು ಬಿಗಿಗೊಳಿಸುತ್ತಿರುವ ನೋಟು ಮತ್ತು ರಫೇಲ್




ಭ್ರಷ್ಟಾಚಾರವನ್ನು ಪ್ರಶ್ನಿಸಿ, ಖಂಡಿಸಿ ಮತ್ತು ಈ ಕಾರಣಕ್ಕಾಗಿ ಪ್ರಧಾನಿ ಮನ್‍ಮೋಹನ್ ಸಿಂಗ್‍ರನ್ನು ತಮಾಷೆ ಮಾಡಿ 2014ರ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದ ಬಿಜೆಪಿಯು ಸದ್ಯ ಮನ್‍ಮೋಹನ್ ಸಿಂಗ್‍ರ ಸ್ಥಿತಿಯನ್ನೇ ಎದುರಿಸುತ್ತಿದೆ. ಅಧಿಕಾರದ ಕೇವಲ ನಾಲ್ಕು ವರ್ಷಗಳೊಳಗೆ ಎರಡು ಬೃಹತ್ ಹಗರಣಗಳು ಬಿಜೆಪಿಯ ಕೊರಳನ್ನು ಸುತ್ತಿಕೊಂಡಿದೆ. ಮಾತ್ರವಲ್ಲ, ದಿನೇ ದಿನೇ ಈ ಉರುಳು ಬಿಗಿಯಾಗುತ್ತಲೂ ಇದೆ. ಇದರಲ್ಲಿ ಒಂದು: ರಫೇಲ್ ಯುದ್ಧ ವಿಮಾನಗಳ ಖರೀದಿಯದ್ದಾದರೆ, ಇನ್ನೊಂದು: ನೋಟು ನಿಷೇಧ. ‘Refale talks were on when, Reliance Entertainment helped produce film for Francois Hollande’s partner’ ಎಂಬ ಶೀರ್ಷಿಕೆಯಲ್ಲಿ ‘ದ ಇಂಡಿಯನ್ ಎಕ್ಸ್ ಪ್ರೆಸ್’ ಪತ್ರಿಕೆಯು ಆಗಸ್ಟ್ 31ರಂದು ದೀರ್ಘ ಲೇಖನವನ್ನೇ ಪ್ರಕಟಿಸಿತ್ತು.

 ರಫೇಲ್ ಒಡಂಬಡಿಕೆಯ ಸಮಯದಲ್ಲಿ ಫ್ರಾನ್ಸ್ ನ ಅಧ್ಯಕ್ಷರಾಗಿದ್ದವರು ಫ್ರಾಂಕೋಯಿಸ್ ಹೊಲ್ಲಾಂಡೆ. ಇವರ ಗೆಳತಿ  ಮತ್ತು ನಟಿಯಾಗಿರುವ ಜೂಲಿ ಗಯೆಟೆ ಅವರ ‘ರಗ್ ಇಂಟರ್ ನಾಶನಲ್ ಸಂಸ್ಥೆ’ಯೊಂದಿಗೆ ಸೇರಿಕೊಂಡು ಫ್ರೆಂಚ್ ಸಿನಿಮಾ ತಯಾರಿಸುವುದಾಗಿ 2016 ಜನವರಿ 24ರಂದು ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸಂಸ್ಥೆಯು ಘೋಷಿಸುತ್ತದೆ. ಇದಾಗಿ ಎರಡು ದಿನಗಳ ಬಳಿಕ- ಜನವರಿ 26ರಂದು -ಗಣರಾಜ್ಯೋತ್ಸವ ಅತಿಥಿಯಾಗಿ ಭಾರತಕ್ಕೆ ಬಂದ ಫ್ರಾನ್ಸ್ ಅಧ್ಯಕ್ಷ ಹೊಲ್ಲಾಂಡೆಯವರು ರಫೇಲ್ ಖರೀದಿಯ ತಿಳುವಳಿಕಾ ಪತ್ರಕ್ಕೆ ಸಹಿ ಹಾಕುತ್ತಾರೆ. ವಿಶೇಷ ಏನೆಂದರೆ, ರಫೇಲ್ ವಿಮಾನಗಳ ಉತ್ಪಾದನೆಯನ್ನು ಫ್ರಾನ್ಸ್ ನ ಡಸಲ್ಟ್ ಏವಿಯೇಶನ್ ಮತ್ತು ಅನಿಲ್ ಅಂಬಾನಿಯವರ ಒಡೆತನ ರಕ್ಷಣಾ ಸಂಸ್ಥೆಯು ಜೊತೆಯಾಗಿ ಮಾಡಲಿದ್ದು, ಗಯೆಟೆಯ ಸಿನಿಮಾದ ಸಹ ನಿರ್ಮಾಪಕನಾಗಿ ಇದೇ ಡಸಲ್ಟ್ ಸಂಸ್ಥೆಯು ಭಾಗಿಯಾಗಿದೆ. ಅಂದರೆ, ಫ್ರಾನ್ಸ್ ಅಧ್ಯಕ್ಷ ಹೊಲ್ಲಾಂಡೆಯವರ ಗೆಳತಿಯ ಸಿನಿಮಾದಲ್ಲಿ ರಿಲಯನ್ಸ್ ಮತ್ತು ಡಸಲ್ಡ್ ಎರಡೂ ಸಂಸ್ಥೆಗಳು ಭಾಗಿಯಾಗಿವೆ ಮತ್ತು ಇವೆರಡೂ ಜೊತೆ ಸೇರಿಕೊಂಡೇ ರಫೇಲ್ ಯುದ್ಧ ವಿಮಾನಗಳನ್ನು ಉತ್ಪಾದಿಸಲಿವೆ. ಗಯೆಟೆ ಅವರ ಸಿನಿಮಾವನ್ನು ತಯಾರಿಸಲು ತೀರ್ಮಾನಿಸಿರುವುದಾಗಿ ಘೋಷಿಸಿದ ಎರಡು ದಿನಗಳ ಬಳಿಕ ರಫೇಲ್ ಖರೀದಿಯ ಬಗೆಗಿನ ತಿಳುವಳಿಕಾ ಪತ್ರಕ್ಕೆ ಫ್ರಾನ್ಸ್ ಅಧ್ಯಕ್ಷರು ಸಹಿ ಹಾಕುತ್ತಾರೆ. ಬಾಹ್ಯನೋಟಕ್ಕೆ ಕಾಕತಾಳೀಯವೆಂಬಂತೆ ಕಾಣುವ ಈ ಬೆಳವಣಿಗೆಯು ಕಾಕತಾಳೀಯಕ್ಕಿಂತಲೂ ಹೊರತಾದ ಇನ್ನಾವುದನ್ನೋ ಅಡಗಿಸಿಕೊಂಡಿದೆ ಅನ್ನುವ ಅನುಮಾನಕ್ಕೆ ಇದುವೇ ಕಾರಣ. ಬೋಫೋರ್ಸ್‍ಗಿಂತಲೂ ದೊಡ್ಡ ಹಗರಣ ಇದು ಎಂದು ಖ್ಯಾತ ನ್ಯಾಯವಾದಿ ಪ್ರಶಾಂತ್ ಭೂಷಣ್ ಮತ್ತು ಬಿಜೆಪಿ ಮುಖಂಡ ಯಶವಂತ್ ಸಿನ್ಹ ಅವರು ಆರೋಪಿಸಿದ್ದಾರೆ.

ದಶಕದ ಹಿಂದೆ ಮನ್‍ಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಸುಮಾರು 126 ರಫೇಲ್ ವಿಮಾನಗಳ ಖರೀದಿಗೆ ಫ್ರಾನ್ಸ್‍ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆಗ ಒಂದು ವಿಮಾನಕ್ಕೆ ಸುಮಾರು 560 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿತ್ತು. ಅಲ್ಲದೇ ಈ ವಿಮಾನಗಳ ಉತ್ಪಾದನೆಯು ಕರ್ನಾಟಕದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಮಾಡಲಾಗುವುದೆಂದು ಘೋಷಿಸಲಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಈ ಒಪ್ಪಂದಕ್ಕೆ ಮರುರೂಪವನ್ನು ಕೊಟ್ಟರಲ್ಲದೇ ಸರಕಾರಿ ಸಂಸ್ಥೆಯಾದ HAL  ಅನ್ನು ಕೈಬಿಟ್ಟು ರಿಲಯನ್ಸ್ ಸಂಸ್ಥೆಯನ್ನು ಸೇರಿಸಿಕೊಂಡರು. ಮಾತ್ರವಲ್ಲ, ಪ್ರತಿ ಯುದ್ಧ ವಿಮಾನಕ್ಕೆ ಮನ್‍ಮೋಹನ್ ಸಿಂಗ್ ಸರಕಾರ ತೀರ್ಮಾನಿಸಿದ್ದ 560 ಕೋಟಿ ರೂಪಾಯಿಯ ಬದಲು 1,660 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಯಿತು. ಈ ನಿಗದಿಯಲ್ಲೂ ಒಂದು ಗೊಂದಲ ಇದೆ. ಪ್ರಶಾಂತ್ ಭೂಷಣ್ ಅವರ ಪ್ರಕಾರ, ಪ್ರತಿ ವಿಮಾನಕ್ಕೆ 670 ಕೋಟಿ ರೂಪಾಯಿ ತಗಲುತ್ತದೆ ಎಂದು ಇದೇ ಸರಕಾರ ನವೆಂಬರ್ 2016ರಲ್ಲಿ ಹೇಳಿತ್ತು. ಆದರೆ ಆ ಬಳಿಕ ಪ್ರತಿ ವಿಮಾನಕ್ಕೆ 1,660 ಕೋಟಿ ರೂಪಾಯಿ ಖರ್ಚಾಗುತ್ತದೆಂದು ರಿಲಯನ್ಸ್ ಮತ್ತು ಡಸಲ್ಡ್ ಸಂಸ್ಥೆಯು ಘೋಷಿಸಿತು.


ಒಂದು ರೀತಿಯಲ್ಲಿ, ಈ ಇಡೀ ಒಪ್ಪಂದವು ತರಾತುರಿಯಿಂದ ನಡೆದಿದೆ. ಬೃಹತ್ ಹಗರಣವೊಂದರ ಸರ್ವಸಾಧ್ಯತೆಯನ್ನು ತೆರೆದಿಟ್ಟ ಈ ಒಪ್ಪಂದದ ಬಗ್ಗೆ ಹೆಚ್ಚಿನ ವಿವರವನ್ನು ಹಂಚಿಕೊಳ್ಳಲು ಕೇಂದ್ರ ಸರಕಾರ ನಿರಾಕರಿಸುತ್ತಿದೆ. ಸರಕಾರದ ಕೈ ಸ್ವಚ್ಛವಾಗಿದ್ದರೆ ಅಳುಕು ಏಕೆ? ಪ್ರಶ್ನೆಗಳಿಗೆ ಉತ್ತರಿಸದೇ ಸರಕಾರ ಮರೆಯಲ್ಲಿ ಅಡಗುವುದೇಕೆ? ಸರಕಾರಿ ಸಂಸ್ಥೆಯಾದ ಊಂಐ ಅನ್ನು ಕೈಬಿಟ್ಟು ಅನನುಭವಿ ರಿಲಯನ್ಸ್ ಅನ್ನು ಈ ಉತ್ಪಾದನಾ ರಂಗದಲ್ಲಿ ಸಹಭಾಗಿಗೊಳಿಸಿದ್ದು ಯಾವ ಉದ್ದೇಶದಿಂದ? ಈ ರಫೇಲ್ ಇನ್ನೊಂದು ಬೋಫೋರ್ಸ್ ಹಗರಣವೇ ಎಂಬ ಪ್ರಶ್ನೆ ವಿವಿಧೆಡೆಗಳಿಂದ ಕೇಳಿಬರತೊಡಗಿದೆ. ಇದರ ಜೊತೆಗೇ ನಾವು ನೋಟು ನಿಷೇಧವನ್ನೂ ಇಟ್ಟು ನೋಡಬೇಕು.

2016 ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಿಢೀರ್ ಆಗಿ 500 ಮತ್ತು 1 ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಅಮಾನ್ಯಗೊಳಿಸಿದರು. ಕಪ್ಪುಹಣವನ್ನು ನಿರ್ಮೂಲನಗೊಳಿಸುವುದು ಇದರ ಮುಖ್ಯ ಗುರಿ ಎಂದವರು ಆಗ ಸಾರಿದ್ದರು. ಕಾಶ್ಮೀರದ ಘರ್ಷಣೆಗೆ ಮತ್ತು ನಕ್ಸಲ್ ಹಿಂಸಾಚಾರಕ್ಕೆ ಕಪ್ಪು ಹಣದ ಪ್ರಭಾವವೇ ಕಾರಣ ಎಂದೂ ಅವರು ಹೇಳಿದ್ದರು. ಇದೀಗ ಆರ್‍ ಬಿ ಐ ಕಳೆದವಾರ ನೋಟು ಅಮಾನ್ಯದ ಫಲಿತಾಂಶವನ್ನು ಪ್ರಕಟಿಸಿದೆ. ನಿಷೇಧಿತ ನೋಟುಗಳ ಪೈಕಿ 99.3% ನೋಟುಗಳೂ ಮರಳಿ ಬಂದಿವೆ ಎಂದೂ ಅದು ಹೇಳಿದೆ. ಇದರರ್ಥ, ನೋಟಿನ ರೂಪದಲ್ಲಿ ಕಪ್ಪುಹಣದ ಚಲಾವಣೆ ಶೂನ್ಯ ಅನ್ನುವಷ್ಟು ಕಡಿಮೆ ಇತ್ತು ಎಂದೇ.

ನಿಜವಾಗಿ, ನೋಟು ಅಮಾನ್ಯ ಅನ್ನುವುದು ಬಹುದೊಡ್ಡ ವೈಫಲ್ಯ. ಸಾಮಾನ್ಯ ಮಂದಿ ತಮ್ಮ ಬಳಿ ಇರುವ ನೋಟುಗಳನ್ನು ಬದಲಿಸಿಕೊಳ್ಳಲು ಬ್ಯಾಂಕುಗಳೆದುರು ಕ್ಯೂ ನಿಂತು ಬಸವಳಿದು ಹೋದರು. ಶ್ರೀಮಂತರು ಪ್ರಭಾವವನ್ನು ಬಳಸಿ ತಮ್ಮ ಬಳಿಯಿರುವ ನೋಟುಗಳನ್ನು ಬಿಳಿಯಾಗಿಸಿಕೊಂಡರು. ಈ ನೋಟು ಅಮಾನ್ಯದಿಂದ ಕಾಶ್ಮೀರದ ಹಿಂಸಾಚಾರವೂ ತಗ್ಗಲಿಲ್ಲ. ನಕ್ಸಲರೂ ಸುಮ್ಮನಾಗಲಿಲ್ಲ. ಆದರೆ ಕೋಟ್ಯಂತರ ಉದ್ಯೋಗಗಳು ನಾಶಗೊಂಡವು. ಸಣ್ಣ-ಪುಟ್ಟ ಉದ್ದಿಮೆಗಳು ನೆಲ ಕಚ್ಚಿದುವು. ಉದ್ಯೋಗ ಮತ್ತು ಕೃಷಿ ಕ್ಷೇತ್ರದ ಮೇಲೆ ಬಲವಾದ ಹೊಡೆತಗಳು ಬಿದ್ದುವು. ಜನಸಾಮಾನ್ಯರ ಕೈಯಲ್ಲಿದ್ದ ಹಣವನ್ನೆಲ್ಲ ಬ್ಯಾಂಕುಗಳು ವಶಪಡಿಸಿಕೊಂಡವಲ್ಲದೇ ಬೃಹತ್ ಉದ್ಯಮಿಗಳ ಕೋಟ್ಯಂತರ ರೂಪಾಯಿ ಸಾಲವನ್ನು ಮನ್ನಾ ಮಾಡಲಾಯಿತು. ಕೆಲವು ಶ್ರೀಮಂತ ಉದ್ಯಮಿಗಳು ಬ್ಯಾಂಕುಗಳನ್ನು ದೋಚಿ ಪಲಾಯನ ಮಾಡಿದರು. ಉದ್ಯಮಿಗಳಿಗೆ ಕೊಟ್ಟ ಕೋಟ್ಯಂತರ ರೂಪಾಯಿ ಸಾಲವನ್ನು ವಸೂಲು ಮಾಡಲಾಗದೆ ಖಜಾನೆ ಖಾಲಿ ಮಾಡಿಕೊಂಡಿದ್ದ ಬ್ಯಾಂಕುಗಳು ಆ ನಷ್ಟವನ್ನು ತುಂಬಿಸಿಕೊಳ್ಳುವುದಕ್ಕಾಗಿ ನೋಟು ನಿಷೇಧದ ದಂಧೆಗಿಳಿದವೋ ಅನ್ನುವ ಅನುಮಾನವೂ ಇದೆ. ಸಾಲ ಎತ್ತಿರುವ ಉದ್ಯಮಿಗಳೇ ಇಂಥದ್ದೊಂದು ತಂತ್ರವನ್ನು ಸರಕಾರಕ್ಕೆ ನೀಡಿದರೋ ಎಂದೂ ಪ್ರಶ್ನಿಸಬೇಕಾಗಿದೆ.

ನೋಟು ನಿಷೇಧ ಮತ್ತು ರಫೇಲ್ - ಇವೆರಡೂ ಇವತ್ತು ಸಾಕಷ್ಟು ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಇವೆರಡರಿಂದಲೂ ಈ ದೇಶಕ್ಕಾದ ಲಾಭ ಏನು ಅನ್ನುವ ಪ್ರಶ್ನೆಗೆ ಸಮರ್ಪಕ ಉತ್ತರವನ್ನು ನೀಡಲು ಈ ಸರಕಾರ ಹಿಂದೇಟು ಹಾಕುತ್ತಿದೆ. ಅದೇವೇಳೆ, ‘ಕೋಟ್ಯಂತರ ರೂಪಾಯಿಗಳ ಎರಡು ಬೃಹತ್ ಹಗರಣಗಳ ಹೆಸರುಗಳಿವು’ ಎಂಬ ವಾದಕ್ಕೆ ದಿನೇ ದಿನೇ ಆಧಾರಗಳು ಲಭ್ಯವಾಗುತ್ತಿವೆ.

ಅಂದಹಾಗೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟು ಮತ್ತು ರಫೇಲ್ ಎರಡೂ ಸೇರಿಕೊಂಡು ಮೋದಿಯವರನ್ನು ಕೆಳಗಿಳಿಸಿದರೂ ಅಚ್ಚರಿಯಿಲ್ಲ.

Tuesday, 21 August 2018

ಈ ಮುಖಾಮುಖಿಯಲ್ಲಿ ಮಾನವ ಗೆಲ್ಲಲಾರ



ಮಳೆಗೂ ಅನಾಹುತಕ್ಕೂ ನಡುವೆ ಏನು ಸಂಬಂಧ ಇದೆ? 2 ದಶಕಗಳ ಹಿಂದೆ ಕೇರಳ ಮತ್ತು ಕೊಡಗಿನ ಮೇಲೆ ಇಂದಿನಂತೆ ಮಳೆ ಸುರಿದಿರುತ್ತಿದ್ದರೆ, ಈ ಪರಿ ಗುಡ್ಡಗಳು ಕುಸಿಯುತ್ತಿತ್ತೇ? ಊರೇ ಮಾಯವಾಗುತ್ತಿತ್ತೇ? ಗ್ರಾಮಕ್ಕೆ ಗ್ರಾಮವೇ ಮುಳುಗಿ ಬಿಡುತ್ತಿತ್ತೇ?
ಇಲ್ಲ ಎಂಬುದೇ ಉತ್ತರ. ಯಾಕೆಂದರೆ, ಈ ಬಾರಿ ಮಳೆಯ ಪ್ರಮಾಣದಲ್ಲಿ ಏರಿಕೆ ಆಗಿದ್ದರೂ ಅನಾಹುತ ತಂದೊಡ್ಡಬಲ್ಲಷ್ಟು ಮಳೆ ಸುರಿದಿಲ್ಲ ಎಂದೇ ತಜ್ಞರು ಅಭಿಪ್ರಾಯ ಪಡುತ್ತಾರೆ. ಭೂಮಿಯ ಮೇಲೆ ಮಾನವನ ಮಿತಿ ಮೀರಿದ ಚಟುವಟಿಕೆಯೇ ಅನಾಹುತಗಳ ಮೂಲ ಅನ್ನುತ್ತವೆ ಬೇರೆ ಬೇರೆ ವರದಿಗಳು.

ಪಶ್ಚಿಮ ಘಟ್ಟಗಳನ್ನು ಬಿಟ್ಟು ಕೊಡಗು ಜಿಲ್ಲೆಯನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಇಲ್ಲಿನ ಭೂಪದರದಲ್ಲಿ ವಿಶೇಷ ಗುಣವಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಕಲ್ಲು ಮಣ್ಣಾಗುವ ಪ್ರಕ್ರಿಯೆ ಪಶ್ಚಿಮಘಟ್ಟಗಳಲ್ಲಿ ಹೆಚ್ಚು. ಆದ್ದರಿಂದ ಇಲ್ಲಿ ಮಣ್ಣಿನ ಪದರ ಹೆಚ್ಚು ದಟ್ಟವಾಗಿರುತ್ತದೆ. ಉಳಿದ ಕಡೆಗಳಿಗೆ ಹೋಲಿಸಿದರೆ, ಹೆಚ್ಚು ಆಳವಾಗಿ ಮಣ್ಣು ನೆಲೆಗೊಂಡಿರುತ್ತದೆ. ಸಾಮಾನ್ಯ ಮಳೆಯನ್ನು ತಾಳಿಕೊಳ್ಳಬಲ್ಲಷ್ಟು ಸಾಮಥ್ರ್ಯವಿರುವ ಈ ಮಣ್ಣಿಗೆ, ಭಾರೀ ಮಳೆಯು ಒತ್ತಡವನ್ನು ಹೇರುತ್ತದೆ. ಈ ಬಾರಿ ಕೊಡಗಿನ ಮೇಲೆ ಮಾಮೂಲಿಗಿಂತ ಮೂರು ಪಟ್ಟು ಅಧಿಕ ಮಳೆ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಒಂದು ಕಡೆ ತುಂಬಾ ಆಳದವರೆಗೆ ಬರೇ ಮಣ್ಣಿನ ಪದರವೇ ಇರುವುದು ಮತ್ತು ಇನ್ನೊಂದು ಕಡೆ ವಾಡಿಕೆಗಿಂತ ಹೆಚ್ಚಾಗಿ ಮಳೆ ಸುರಿದಿರುವುದು-ಇವೆರಡೂ ಜೊತೆಗೂಡಿದಾಗ ಉಂಟಾದ ಫಲಿತಾಂಶವೇ ಈಗಿನ ಅನಾಹುತ ಎಂಬುದೇ ಸರಿ.

ಭೂಮಿಯ ಮೇಲೆ ವಿವಿಧ ನಿರ್ಮಾಣ ಕಾಮಗಾರಿಗಳು ನಡೆಯುವುದೆಂದರೆ ಅದರರ್ಥ ಅಭಿವೃದ್ಧಿ ಎಂದಷ್ಟೇ ಅಲ್ಲ, ಭೂಮಿಯ ಹೊರ ಕವಚವನ್ನು ನಾಶಪಡಿಸಲಾಗುತ್ತಿದೆ ಎಂದೂ ಅರ್ಥವಿದೆ. ಅಭಿವೃದ್ಧಿಯ ಅತಿ ದೊಡ್ಡ ವಿರೋಧಿಗಳು ಯಾರೆಂದರೆ, ಅರಣ್ಯ-ಪೆÇದೆ, ಮರ, ಹುಲ್ಲು ಹಾಸುಗಳು, ಕಲ್ಲು-ಬಂಡೆಗಳು ಇತ್ಯಾದಿ. ವಿಶೇಷ ಏನೆಂದರೆ, ಇವ್ಯಾವುದಕ್ಕೂ ಪ್ರತಿಭಟಿಸುವ ಸಾಮಥ್ರ್ಯವಾಗಲಿ, ಮಾತಾಡುವ ಶಕ್ತಿಯಾಗಲಿ ಇಲ್ಲ. ಈ ದೌರ್ಬಲ್ಯವನ್ನು ಮಾನವ ಪದೇ ಪದೇ ದುರುಪಯೋಗಿಸುತ್ತಲೇ ಇದ್ದಾನೆ. ರಸ್ತೆ ನಿರ್ಮಾಣ, ಕಟ್ಟಡ, ತೋಟಗಳ ನಿರ್ಮಾಣಕ್ಕೆಂದು ಭೂಮಿಯ ಹೊರ ಕವಚದಲ್ಲಿರುವ ಇವುಗಳನ್ನು ಕತ್ತರಿಸುತ್ತಾನೆ. ಗುಡ್ಡಗಳನ್ನು ಸಮತಟ್ಟುಗೊಳಿಸುತ್ತಾನೆ. ಕಲ್ಲು ಕ್ವಾರಿಗಳಿಗಾಗಿ ಭೂಗರ್ಭವನ್ನೇ ಕೊರೆಯುತ್ತಾನೆ. ಕಾಡು ಕಡಿಯುತ್ತಾನೆ.

ಮಳೆಯಿಂದ ಅತ್ಯಂತ ಹೆಚ್ಚು ಹಾನಿ ಸಂಭವಿಸಿರುವ ಮಡಿಕೇರಿ ಮತ್ತು ಕೊಡಗು ಜಿಲ್ಲೆಯ ಇನ್ನಿತರ ಪ್ರದೇಶಗಳಲ್ಲಿ ಅಧಿಕೃತ ಹೋಮ್‍ಸ್ಟೇಗಳ ಸಂಖ್ಯೆಯೇ ಮೂರು ಸಾವಿರದಷ್ಟಿದೆ. ಈ ಹೋಮ್‍ಸ್ಟೇಗಳು ತಲೆ ಎತ್ತಿರುವುದೇ ಪ್ರವಾಸಿಗಳನ್ನು ಗುರಿಯಾಗಿಸಿಕೊಂಡು ಆರಂಭದಲ್ಲಿ ಗುಡ್ಡಗಳ ಅಡಿಯಲ್ಲಿ ವಿರಳವಾಗಿ ಅಲ್ಲೊಂದು ಇಲ್ಲೊಂದು ಇದ್ದಿದ್ದ ರೆಸಾರ್ಟ್‍ಗಳು ಮತ್ತು ಹೋಮ್‍ಸ್ಟೇಗಳು ಬಳಿಕ ವಿಪರೀತವಾಗಿ ಹೆಚ್ಚಾದುವು. ಗುಡ್ಡಗಳನ್ನು ಕೊರೆದು ಅದರ ಮಧ್ಯ ಭಾಗದಲ್ಲೂ ರೆಸಾರ್ಟುಗಳು ತಲೆ ಎತ್ತಿದುವು. ನಿಜವಾಗಿ, ಮಳೆಯ ನೀರು ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚು ಭೂಮಿಯ ಒಳಗೆ ಸೇರದಂತೆ ತಡೆಯುವುದೇ ಭೂಮಿಯ ಮೇಲಿನ ಮರ-ಗಿಡಗಳು, ಹಲ್ಲು ಪೊದೆಗಳು. ಅಭಿವೃದ್ಧಿಯ ಹೆಸರಲ್ಲಿ ಇವುಗಳನ್ನು ನಾಶ ಮಾಡುವಾಗ ಭೂಮಿಯ ಒಳಗೆ ಸೇರಿಕೊಂಡಿರುವ ಬೇರುಗಳೂ ಅದುರುತ್ತವೆ ಮತ್ತು ಮಣ್ಣು ಸಡಿಲಗೊಳ್ಳುತ್ತದೆ. ಇದರಿಂದಾಗಿ ಭೂಮಿಯ ಒಳಗಡೆಗೆ ನೀರು ಸೇರಿಕೊಳ್ಳುವುದಕ್ಕೆ ಸುಲಭ ದಾರಿಯನ್ನು ಮಾಡಿಕೊಟ್ಟಂತಾಗುತ್ತದೆ. ಹೀಗೆ ಒಳ ಸೇರುವ ನೀರು ಭೂಮಿಯ ಒಳಗಡೆಗೆ ಒತ್ತಡವೊಂದನ್ನು ಸೃಷ್ಟಿಸುತ್ತದೆ. ಈ ಒತ್ತಡವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಹೋದಾಗ ಕುಸಿತ ಉಂಟಾಗುತ್ತದೆ.

      ಮಳೆಗೂ ಮನುಷ್ಯನಿಗೂ ನಡುವೆ ಎಷ್ಟೊಂದು ಆಪ್ತವಾದ ಸಂಬಂಧವೆಂದರೆ ಮಳೆಯಿಲ್ಲದೆ ಮನುಷ್ಯನೇ ಇಲ್ಲ ಅನ್ನುವಷ್ಟು. ವರ್ಷದ 12 ತಿಂಗಳಲ್ಲಿ ಮೂರ್ನಾಲ್ಕು ತಿಂಗಳನ್ನು ಮನುಷ್ಯ ಮಳೆಗೆಂದೇ ಮೀಸಲಿಟ್ಟಿದ್ದಾನೆ. ಮಳೆ ಬರುವುದಕ್ಕಿಂತ ಮೊದಲೇ ಅದರ ಸ್ವಾಗತಕ್ಕಾಗಿ ತಯಾರಿಯನ್ನೂ ನಡೆಸುತ್ತಾನೆ. ನಿರೀಕ್ಷೆಗಿಂತ ಕಡಿಮೆ ಮಳೆ ಬಿದ್ದರೆ ಆತಂಕ ಪಡುತ್ತಾನೆ. ಹೆಚ್ಚಾದರೂ ಆತಂಕ ಪಡುತ್ತಾನೆ. ಹಾಗಂತ, ಪ್ರತಿ ವರ್ಷವೂ ಏಕ ಪ್ರಕಾರವಾಗಿಯೇ ಮಳೆ ಬರುತ್ತದೆ ಎಂದಲ್ಲ. ಹೆಚ್ಚು- ಕಡಿಮೆ ಆಗುತ್ತಲೇ ಇರುತ್ತದೆ. ಈಗ ಸುರಿದಿರುವ ಮಳೆಯು ಎರಡು ದಶಕಗಳ ಹಿಂದೆ ಹೆಚ್ಚು ಎಂದು ಹೇಳುವ ಸಾಧ್ಯತೆಯೇ ಇಲ್ಲ. ಅಂದು ಮಳೆ ಅಧಿಕ ಸುರಿದರೂ ಅದು ಭೂಮಿಯೊಳಗಡೆ ಸೇರದಂತೆ ಮರ-ಗಿಡ, ಪೊದೆಗಳು ತಡೆದಿಟ್ಟುಕೊಳ್ಳುತ್ತಿದ್ದುದರಿಂದ ಭೂಕುಸಿತ, ಗ್ರಾಮಗಳ ಕಣ್ಮರೆಗೆ ಅಂದು ಅವಕಾಶ ಇದ್ದಿರಲಿಲ್ಲ. ಇವತ್ತು ಹಾಗಲ್ಲ. ಅಭಿವೃದ್ಧಿ ಎಲ್ಲವನ್ನೂ ನಾಶ ಮಾಡುತ್ತಿದೆ. ಅಭಿವೃದ್ಧಿ ಎಂಬ ನಾಲ್ಕಕ್ಷರ ಚಿಗುರುವುದೇ ಭೂಮಿಯ ಮೇಲೆ ಭೂಮಿಯಿಲ್ಲದೇ ಅಭಿವೃದ್ಧಿ ಸಾಧ್ಯವೂ ಇಲ್ಲ ಅನ್ನುವ ಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿ ಎಂದರೆ ಭೂಮಿಯ ಮೇಲ್ಪದರವನ್ನು ನಾಶ ಮಾಡುವುದು ಎಂದೇ ಅರ್ಥ. ಕಲ್ಲು ಕ್ವಾರೆಗಳ ಹೆಸರಲ್ಲಿ ಗಣಿಯ ಹೆಸರಲ್ಲಿ ಭೂಮಿಯ ಒಡಲನ್ನು ಪ್ರತಿನಿತ್ಯ ಅಗೆಯುತ್ತಲೇ ಇದ್ದೇವೆ. ಭಾರೀ ಸ್ಫೋಟಕಗಳನ್ನು ಸಿಡಿಸಿ ಭೂಮಿಯ ಒಳಪದರವನ್ನು ಸಡಿಲಗೊಳಿಸುತ್ತಿದ್ದೇವೆ. ಬಹುಶಃ, ಭೂಮಿಯು ಇದರ ಪ್ರತೀಕಾರಕ್ಕಾಗಿ ಕಾಯುತ್ತಿರುವಂತೆ ಕಾಣಿಸುತ್ತಿದೆ.

ಮಳೆ ಮತ್ತು ಇಳೆ ಎರಡರ ನಡುವೆಯೂ ಆಪ್ತವಾದ ಸಂಬಂಧ ಇದೆ. ಮಳೆ ಮುನಿದರೆ ಇಳೆ ಬಾಡುತ್ತದೆ. ಇಳೆಯ ಹಚ್ಚಹಸುರಿನಲ್ಲಿ ಮಳೆಯ ಪಾತ್ರವೇ ದೊಡ್ಡದು. ಆದರೆ ಒಂದು ಹನಿ ಮಳೆ ಸೃಷ್ಟಿಸಲಾಗದ ಮನುಷ್ಯ ಇಳೆಯ ಮೇಲಂತೂ ದೌರ್ಜನ್ಯ ನಡೆಸುತ್ತಲೇ ಬಂದಿz್ದÁನೆ. ಇವತ್ತು ಭೂಮಿಯ ತಾಪಮಾನದಲ್ಲಿ ಭಾರೀ ಏರಿಕೆ ಉಂಟಾಗಿದೆ. ಭೂಮಿಯ ತಾಪಮಾನದಲ್ಲಿ ಹೆಚ್ಚಳವಾಗುವುದೆಂದರೆ, ಮಳೆಯ ಸುರಿಯುವಿಕೆಯಲ್ಲಿ ಅನಿಶ್ಚಿತತೆ ನಿರ್ಮಾಣವಾಗುವುದು ಎಂದರ್ಥ. ಯಾವ ಭೂಭಾಗದಲ್ಲಿ ಮಳೆ ಬೀಳಬೇಕೋ ಆ ಭಾಗದಲ್ಲಿ ಮಳೆ ಬೀಳದೇ ಇರುವುದು ಮತ್ತು ಎಲ್ಲಿ ಬೀಳಬಾರದೋ ಅಲ್ಲಿ ಮಳೆ ಬೀಳುವುದು- ಭೂತಾಪಮಾನದಿಂದ ಹೀಗಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸಮುದ್ರ ಬಿಸಿಯಾಗುವುದು ಭೂತಾಪಮಾನದ ಲಕ್ಷಣ. ಸಮುದ್ರದ ಒಳಗಡೆ ನಡೆಯುವ ಕ್ರಿಯೆಗಳಲ್ಲಿ ಏರುಪೇರಾದಾಗ ಮಳೆಯ ಮಾರುತಗಳಲ್ಲಿ ಏರುಪೇರಾಗುತ್ತದೆ ಎಂದು ಹೇಳಲಾಗುತ್ತದೆ. ಈ ಕಾರಣದಿಂದಾಗಿಯೇ ಬೀಳಬೇಕಾದ ಕಡೆ ಮಳೆ ಬೀಳುವುದಿಲ್ಲ ಎಂಬ ಅಭಿಪ್ರಾಯವೂ ಇದೆ. ಏನೇ ಇದ್ದರೂ, ಅಂತಿಮವಾಗಿ ಇವೆಲ್ಲದರ ಪರಿಣಾಮವನ್ನು ಎದುರಿಸಬೇಕಾಗಿರುವುದು ಮನುಷ್ಯ. ಭೂಮಿ ಬಾಯಿ ಬಿಟ್ಟರೂ ಗುಡ್ಡ ಕುಸಿದರೂ ನದಿ ಉಕ್ಕಿ ಹರಿದರೂ ಆತ ಒಗ್ಗಿಕೊಳ್ಳಲೇ ಬೇಕು. ಇದೀಗ ಅಂಥದ್ದೊಂದು ಸಂದರ್ಭ ಎದುರಾಗಿದೆ. ಮಾನವನಿಗೆ ಮಳೆ ಮುಖಾಮುಖಿ ನಿಂತಿದೆ. ಭೂಮಿಯು ಮಳೆಯ ಜೊತೆ ಸೇರಿಕೊಂಡಿದೆ. ಮಳೆ ಮತ್ತು ಭೂಮಿ ಎರಡೂ ಜೊತೆ ಸೇರಿಕೊಂಡರೆ ಮಾನವ ಎಲ್ಲಿ ಅನ್ನುವ ಪ್ರಶ್ನೆಯನ್ನು ಈಗನ ನೆರೆ ಹುಟ್ಟಿಹಾಕಿದೆ. ಪ್ರಕೃತಿಯೇ ಹುಟ್ಟುಹಾಕಿರುವ ಪ್ರಶ್ನೆಯಿದು. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ವಿವೇಕವನ್ನು ಮನುಷ್ಯ ಪ್ರದರ್ಶಿಸಬೇಕು. ತಾನು ಏನು ಮತ್ತು ಪ್ರಕೃತಿಯ ಮೇಲೆ ತನಗೆ ಎಷ್ಟು ಹಕ್ಕು, ಕರ್ತವ್ಯವಿದೆ ಎಂಬ ಬಗ್ಗೆ ಅವಲೋಕನ ನಡೆಸಲು ಪ್ರತಿಯೊಬ್ಬರಿಗೂ ಈ ಮಳೆ ನೆಪವಾಗಿ ಬಳಕೆಯಾಗಬೇಕು.

ಪ್ರಕೃತಿಗೆ ಮುಖಾಮುಖಿ ನಿಂತು ಮಾನವ ಗೆಲ್ಲಲಾರ. ಕೇವಲ ಒಂದು ವಾರಗಳ ಕಾಲ ಸುರಿದ ಮಳೆಗೆ ಮಾನವ ತಬ್ಬಿಬ್ಬಾಗಿರುವುದೇ ಇದಕ್ಕೆ ಸಾಕ್ಷಿ. ಪ್ರಕೃತಿ ಮತ್ತು ಮನುಷ್ಯರ ನಡುವೆ ಗೆಳೆತನ ಬೆಳೆಯುವುದೇ ಇದಕ್ಕಿರುವ ಪರಿಹಾರ. ಮಾನವನು ಭೋಗ ಭಾವನೆಯನ್ನು ಕಳಚಿಟ್ಟು ಪ್ರಕೃತಿಯನ್ನು ನೋಡುವ ದಿನ ಬಂದಾಗ ಮಳೆಯೂ ಅನುಗ್ರಹವಾಗಬಹುದು. ಭೂಮಿಯೂ ಸುರಕ್ಷಿತವಾಗಬಹುದು.

Tuesday, 14 August 2018

ಹಾಜಿರಾರ ಜಾಗದಲ್ಲಿ ನಾವಿರುತ್ತಿದ್ದರೆ..

     ಒಂದು ತುದಿಯಲ್ಲಿ ಹಾಜಿರಾ. ಇನ್ನೊಂದು ತುದಿಯಲ್ಲಿ ಉಳಿದ ಜಗತ್ತು. ಇದು ಹಜ್ಜ್. ಒಂದು ವೇಳೆ, ಮಕ್ಕಾದ ಮರುಭೂಮಿಯಲ್ಲಿ  ತಂಗಲು ಹಾಜಿರಾ ಒಪ್ಪಿಕೊಳ್ಳದೇ ಇರುತ್ತಿದ್ದರೆ ಏನಾಗುತ್ತಿತ್ತು? ಮುಸ್ಲಿಮ್ ಜಗತ್ತು ಮತ್ತೆ ಮತ್ತೆ ಕೇಳಿಕೊಳ್ಳಬೇಕಾದ ಪ್ರಶ್ನೆ ಇದು. ಮಕ್ಕಾಕ್ಕೆ  ಹಾಜಿರಾ ಬರುವಾಗ ಅವರ ಜೊತೆಗಿದ್ದುದು ಪತಿ ಇಬ್ರಾಹೀಮ್(ಅ) ಮತ್ತು ಹಾಲುಗಲ್ಲದ ಶಿಶು ಇಸ್ಮಾಈಲ್(ಅ). ಮಕ್ಕಾ ಎಂಬುದು ನಿರ್ಜನ ಮರುಭೂಮಿ. ಜಲವೂ ಇಲ್ಲ. ಆಹಾರ ವಸ್ತುಗಳ ಲಭ್ಯತೆಯ ಕುರುಹೂ ಇಲ್ಲ. ಇಂಥದ್ದೊಂದು ಸ್ಥಿತಿಯಲ್ಲಿ ಓರ್ವ ಹೆಣ್ಣುಮಗಳು  ಗಂಡಿನ ಉಪಸ್ಥಿತಿಯನ್ನು ಬಯಸುವುದು ಸಹಜ. ಆದರೆ ಇಬ್ರಾಹೀಮ್(ಅ) ಹೊರಟು ನಿಲ್ಲುತ್ತಾರೆ. ಅದೊಂದು ಸವಾಲಿನ ಸನ್ನಿವೇಶ.  ಧೈರ್ಯಶಾಲಿ ಪುರುಷನೇ ಎದೆಗುಂದುವಂಥ ವಾತಾವರಣ. ಹೀಗಿರುವಾಗ ಹಾಜಿರಾ ತನ್ನ ಪತಿ ಇಬ್ರಾಹೀಮ್‍ರ ಜೊತೆ ಹೊರಟು ನಿ ಲ್ಲುತ್ತಿದ್ದರೆ ಅದು ಅಪರಾಧವೋ ವಿಶ್ವಾಸದ ಕೊರತೆಯೋ ಆಗುತ್ತಿರಲಿಲ್ಲ. ಮಾನವ ಸಹಜ ಪ್ರತಿಕ್ರಿಯೆ ಅದು. ಆದರೆ ಹಾಜಿರಾ ವ್ಯತಿರಿಕ್ತ  ತೀರ್ಮಾನ ಕೈಗೊಳ್ಳುತ್ತಾರೆ. ಆದ್ದರಿಂದಲೇ, ಆ ವರೆಗೆ ಪ್ರವಾದಿ ಇಬ್ರಾಹೀಮ್‍ರ ಪತ್ನಿ ಮತ್ತು ಶಿಶು ಇಸ್ಮಾಈಲ್‍ರ ತಾಯಿಯಷ್ಟೇ ಆಗಿದ್ದ  ಹಾಜಿರಾ, ತನ್ನ ಆ ಧೈರ್ಯದ ನಿರ್ಧಾರದಿಂದಾಗಿ ಜಗತ್ತಿನ ಸರ್ವ ಸ್ತ್ರೀ-ಪುರುಷರ ಸ್ಮರಣಾರ್ಹ ವ್ಯಕ್ತಿತ್ವವಾಗುತ್ತಾರೆ.
ಈ ಜಗತ್ತಿಗೆ ಒಂದು ಲಕ್ಷಕ್ಕಿಂತ ಅಧಿಕ ಪ್ರವಾದಿಗಳು ಆಗಮಿಸಿರುವುದಾಗಿ ಇತಿಹಾಸ ಹೇಳುತ್ತದೆ. ಬಹುತೇಕ ಅವರೆಲ್ಲರೂ ಸಂಸಾರಸ್ಥರೇ.  ಆದರೆ ಯಾವ ಪ್ರವಾದಿಯ ಪತ್ನಿಯೂ ಹಾಜಿರಾ ಆಗಲಿಲ್ಲ. ಪ್ರವಾದಿ ಮುಹಮ್ಮದ್‍ರ(ಸ) ಸಂಗಾತಿಗಳಾದ ಖದೀಜಾ ಮತ್ತು ಆಯಿಶಾರಿಗೆ  ಸಂಬಂಧಿಸಿಯೂ ಇದೇ ಮಾತನ್ನು ಹೇಳಬಹುದು. ಹಾಜಿರಾ ಇವರೆಲ್ಲರಿಗಿಂತ ಭಿನ್ನ.

   ಸುಲಭ ಮತ್ತು ಕಷ್ಟ- ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಸಂದರ್ಭ ಎದುರಾದಾಗ ಸಾಮಾನ್ಯವಾಗಿ ಸುಲಭವನ್ನೇ ಆಯ್ಕೆ  ಮಾಡಿಕೊಳ್ಳುತ್ತೇವೆ. ಇದು ಮಾನವ ಸಹಜ ಪ್ರಕೃತಿ. ನೀವು ಹಾಜಿರಾ ಆಗಬೇಕಾದರೆ ಈ ಸಹಜ ಪ್ರಕೃತಿಯಿಂದ ಹೊರಬರಬೇಕು.  ಯಾವುದು ಸವಾಲಿನದ್ದೋ ಅದನ್ನೇ ಆಯ್ಕೆ ಮಾಡಿಕೊಳ್ಳಬೇಕು. ಜಗತ್ತಿನ ಯಾವುದೇ ಧರ್ಮದ ಇತಿಹಾಸದಲ್ಲಿ ಮಹಿಳೆಯೋರ್ವರು  ತುತ್ತತುದಿಯಲ್ಲಿ ನಿಲ್ಲುವುದು ಮತ್ತು ಆಕೆಯ ಚಟುವಟಿಕೆಯನ್ನು ಆರಾಧನೆಯಾಗಿ ಸ್ತ್ರೀಯರು ಮತ್ತು ಪುರುಷರು ಅನುಸರಿಸುವುದನ್ನು ಬ ಹುಶಃ ಇಸ್ಲಾಮಿನಲ್ಲಿ ಮಾತ್ರ ವೀಕ್ಷಿಸಲು ಸಾಧ್ಯ. ಮಹಿಳೆ ಸವಾಲನ್ನು ಮೆಟ್ಟಿ ನಿಲ್ಲಬಲ್ಲ ಗಟ್ಟಿಗಿತ್ತಿ. ಆಕೆ ಛಲವಂತೆ. ಧೈರ್ಯವಂತೆ. ದೇವನ  ಮೇಲೆ ಆಕೆ ಎಂತಹ ವಿಶ್ವಾಸ ತಾಳಬಲ್ಲಳೆಂದರೆ, ನಿರ್ಜನ, ನಿರ್ಜಲ, ನಿರ್ವಾತ, ನಿರಾಹಾರದಂಥ ವಾತಾವರಣವಿದ್ದಾಗ್ಯೂ ಆಕೆ  ಎದೆಗುಂದಲಾರಳು... ಹಾಜಿರಾ ಎತ್ತಿ ಹಿಡಿದ ಸಂದೇಶ ಇದು. ಇಸ್ಲಾಮಿನಲ್ಲಿ ಮಹಿಳೆ ಏನು ಎಂದು ಯಾರಾದರೂ ಪ್ರಶ್ನಿಸಿದರೆ,  ಉತ್ತರವಾಗಿ ಹಾಜಿರಾ ಒಬ್ಬರೇ ಸಾಕು. ಕೇವಲ ಒಬ್ಬರೇ.
   ಕನ್ನಡಿಯಿಲ್ಲದ ಕಾಲದಿಂದ ಹಿಡಿದು ಸೆಲ್ಫಿಯ ಈ ಕಾಲದವರೆಗೆ ಹಾಜಿರಾ ಅಂದು ತಂಗಿದ ಮಕ್ಕಾಕ್ಕೆ ಅಸಂಖ್ಯಾತ ಮಂದಿ ಹೋಗಿದ್ದಾರೆ.  ಹೋಗುತ್ತಿದ್ದಾರೆ. ಮುಂದೆಯೂ ಹೋಗಲಿದ್ದಾರೆ. ಇದೊಂದು ನಿರಂತರ ಕ್ರಿಯೆ. ಸದ್ಯದ ಅಗತ್ಯ ಏನೆಂದರೆ, ಈ ಕ್ರಿಯೆಯನ್ನು ¸ ಸಂಪ್ರದಾಯದ ಚೌಕಟ್ಟಿನಿಂದ ಹೊರತಂದು ಪರಿಶೀಲಿಸುವುದು. ಹಾಜಿರಾ ಎದುರಿಸಿದಂತಹ ಪರಿಸ್ಥಿತಿ ತನ್ನೆದುರು ಬರುತ್ತಿದ್ದರೆ ತಾನೇನು  ಮಾಡುತ್ತಿದ್ದೆ ಎಂದು ಪ್ರತಿಯೊಬ್ಬರೂ ಸ್ವತಃ ಪ್ರಶ್ನಿಸಿಕೊಳ್ಳುವುದು. ಉತ್ತರ ಅಷ್ಟು ಸರಳ ಅಲ್ಲ ಅನ್ನುವುದು ಎಲ್ಲರಿಗೂ ಗೊತ್ತು. ಆದ್ದರಿಂದಲೇ,  ಮಕ್ಕಾದಲ್ಲಿ ತಂಗಲು ಹಾಜಿರಾ ಒಪ್ಪಿಕೊಳ್ಳದಿರುತ್ತಿದ್ದರೆ ಏನಾಗುತ್ತಿತ್ತು ಅನ್ನುವ ಪ್ರಶ್ನೆ ಮುಖ್ಯವಾಗುವುದು.
ಈ ಪ್ರಶ್ನೆಯನ್ನು ಹಾಜಿಗಳು ಮತ್ತು ಹಾಜಿಗಳಲ್ಲದ ಎಲ್ಲರೂ ತಮ್ಮ ತಮ್ಮೊಳಗೆ ಕೇಳಿಕೊಳ್ಳಬೇಕು. ಅದಕ್ಕೆ ಸಿಗುವ ಉತ್ತರವೇ ನಾವು. ಇವತ್ತಿನ  ಸೆಲ್ಫಿ ಜಗತ್ತಿಗೆ ಹೋಲಿಸಿದರೆ ಸಂಪರ್ಕ ಕ್ಷೇತ್ರ ಶೂನ್ಯವಾಗಿದ್ದ ಕಾಲದ ಹಾಜಿರಾ, ನಮ್ಮೊಳಗೆ ಬರೇ ಒಂದು ಬೆರಗು ಆಗಿ ಮಾತ್ರ ಉಳಿಯಬೇಕಾದವರಲ್ಲ. ಅವರೊಂದು ವಾಸ್ತವ. ಆ ವಾಸ್ತವಕ್ಕೆ ಮುಖಾಮುಖಿಯಾಗುವ ಸಂದರ್ಭವೇ ಹಜ್ಜ್. ವಿಷಾದ ಏನೆಂದರೆ,
    ಅವರು ನಮ್ಮ ನಡುವೆ ಬರೇ ಬೆರಗಾಗಿಯಷ್ಟೇ ಉಳಿದುಕೊಂಡಿದ್ದಾರೆ. ಈ ಸ್ಥಿತಿ ಬದಲಾಗಬೇಕು.

Thursday, 9 August 2018

ಗೋವು, ಹೆಣ್ಣು ಮತ್ತು ನಾವು...


ಅತ್ಯಾಚಾರವನ್ನು ತಡೆಗಟ್ಟುವುದು ಹೇಗೆ ಎಂಬ ಪ್ರಶ್ನೆ ಅತ್ಯಂತ ಗಂಭೀರ ಸ್ವರೂಪವನ್ನು ಪಡೆದುಕೊಂಡದ್ದು ನಿರ್ಭಯ ಪ್ರಕರಣದ ಬಳಿಕ. ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂಬ ಕೂಗು ಬಲ ಪಡೆದದ್ದೂ ಆ ಬಳಿಕವೇ. ಮನ್‍ಮೋಹನ್ ಸಿಂಗ್ ಸರಕಾರವು ಈ ಕುರಿತಂತೆ ಕೆಲವು ಕ್ರಮಗಳನ್ನು ಕೈಗೊಂಡಿತು. ಕಾನೂನಿಗೆ ಬಲ ತುಂಬುವ ಕೆಲಸವನ್ನು ಮಾಡಿತು. ನಿರ್ಭಯ ನಿಧಿಯ ಸ್ಥಾಪನೆಯೂ ಆಯಿತು. ಇದು 5 ವರ್ಷಗಳ ಹಿಂದಿನ ಬೆಳವಣಿಗೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಸರಕಾರವು ವಿಧೇಯಕವೊಂದನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ. ಈ ವಿಧೇಯಕವೂ ಅತ್ಯಾಚಾರಕ್ಕೆ ಸಂಬಂಧಿಸಿದ್ದೇ. ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಲು ಈ ವಿಧೇಯಕ ಅವಕಾಶ ಮಾಡಿಕೊಡುತ್ತದೆ. ಈ ವಿಧೇಯಕಕ್ಕಿಂತ ಮೊದಲು ಇನ್ನೊಂದು ವಿಧೇಯಕಕ್ಕೂ ನಮ್ಮ ದೇಶದ ಸಂಸತ್ತು ಅನುಮೋದನೆ ನೀಡಿತ್ತು. ಅದೂ ಅತ್ಯಾಚಾರಕ್ಕೆ ಸಂಬಂಧಿಸಿದ ವಿಧೇಯಕವೇ. ಅತ್ಯಾಚಾರದಲ್ಲಿ ಭಾಗಿಯಾದ ಅಪ್ರಾಪ್ತ ವಯಸ್ಕನನ್ನು ಪ್ರಾಪ್ತನಂತೆ ಪರಿಗಣಿಸಿ ವಿಚಾರಣೆಗೆ ಒಳಪಡಿಸಲು ಅನುವು ಮಾಡಿಕೊಡುವ ವಿಧೇಯಕ ಅದಾಗಿತ್ತು. ವಿಷಾದ ಏನೆಂದರೆ,
     
     ಸಂಸತ್ತಿನಲ್ಲಿ ವಿಧೇಯಕಗಳು ಒಂದರ ಮೇಲೊಂದರಂತೆ ಮಂಡನೆಯಾಗುತ್ತಲೇ ಇದೆ. ಅಲ್ಲದೇ, ಅಂಗೀಕಾರವನ್ನೂ ಪಡೆದುಕೊಳ್ಳುತ್ತಿದೆ. ಆದರೆ, ಅತ್ಯಾಚಾರದ ಪ್ರಕರಣಗಳಲ್ಲಿ ಇಳಿಕೆ ಆಗುತ್ತಲೇ ಇಲ್ಲ. ಮಾತ್ರವಲ್ಲ, ಅತ್ಯಾಚಾರ ಪ್ರಕರಣಗಳ ಭೀಭತ್ಸಕತೆಯಲ್ಲಿ ಮೊನ್ನೆಯಿಂದ, ನಿನ್ನೆಗೆ, ನಿನ್ನೆಯಿಂದ ಇವತ್ತಿಗೆ ಏರಿಕೆ ಆಗುತ್ತಲೇ ಇದೆ. ಇದು ಹೇಗೆ ಸಾಧ್ಯ? ಒಂದು ಕಡೆ, ಬಲ ಪಡೆಯುತ್ತಿರುವ ಕಾನೂನು ಮತ್ತು ಇನ್ನೊಂದು ಕಡೆ, ಅತ್ಯಾಚಾರ ಮತ್ತು ಅದರ ಭೀಕರತೆಯಲ್ಲಿ ಹೆಚ್ಚಳವಾಗುತ್ತಿರುವುದು- ಇವೆಲ್ಲ ಏನು ಮತ್ತು ಏಕೆ? 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ವಿಧಿಸುವ ವಿಧೇಯಕ ಸಂಸತ್ತಿನಲ್ಲಿ ಮಂಡನೆಯಾಗುತ್ತಿರುವ ಹೊತ್ತಿಲ್ಲೇ  ತೆಲಂಗಾಣದಿಂದ ಭೀಕರ ಸುದ್ದಿಯೊಂದು ಹೊರಬಿತ್ತು. 10 ವರ್ಷಕ್ಕಿಂತ ಕಿರಿಯ ವಯಸ್ಸಿನ ಬಾಲಕಿಯರಿಗೆ ಹಾರ್ಮೋನ್ ಇಂಜಕ್ಷನ್ ಚುಚ್ಚಿ ಸೆಕ್ಸ್ ದಂಧೆಗೆ ಬಳಸಿಕೊಳ್ಳುವ ಜಾಲ ಅಲ್ಲಿ ಪತ್ತೆಯಾಯಿತು. 12ರಷ್ಟು ಬಾಲಕಿಯರನ್ನು ಆ ಕ್ರೌರ್ಯದಿಂದ ರಕ್ಷಿಸಲಾಯಿತು. ಇದಕ್ಕಿಂತ ಎರಡು ವಾರಗಳ ಮೊದಲು ಬಿಹಾರದ ಮುಝಫ್ಫರ್‍ಪುರ ನಗರದಲ್ಲಿ ಸರಕಾರದ ಅನುದಾನದಿಂದ ‘ಸೇವಾ ಸಂಕಲ್ಪ ಏವಂ ವಿಕಾಸ್ ಸಮಿತಿ’ಯು ನಡೆಸುತ್ತಿದ್ದ ಬಾಲಿಕಾಗೃಹದಲ್ಲಿ 24ರಷ್ಟು ಹೆಣ್ಮಕ್ಕಳು ಮೇಲೆ ನಿರಂತರ ಅತ್ಯಾಚಾರಕ್ಕೊಳಗಾದ ಘಟನೆ ಬಹಿರಂಗಕ್ಕೆ ಬಂತು. ಇದನ್ನು ನಡೆಸುತ್ತಿದ್ದವ ಬೃಜೇಶ್ ಠಾಕೂರ್ ಎಂಬ ಅರೆಕಾಲಿಕ ಪತ್ರಕರ್ತ. ಕಳೆದವಾರ ನಮ್ಮದೇ ರಾಜ್ಯದ ಮಾಲೂರಿನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಯಿತು. ಹಾಗಂತ, ಇಲ್ಲಿ ಉಲ್ಲೇಖಗೊಂಡ ಕೃತ್ಯಗಳನ್ನು ಬಿಡಿಬಿಡಿಯಾಗಿ ಓದಬೇಕಿಲ್ಲ. ಈ ದೇಶದಲ್ಲಿ ನಿರಂತರ ನಡೆಯುತ್ತಿರುವ ಪ್ರಕರಣಗಳಿಂದ ಹೆಕ್ಕಿಕೊಂಡ ಘಟನೆಗಳಷ್ಟೇ ಇವು.
   
       ಹೆಣ್ಣು ಪದೇ ಪದೇ ಈ ದೇಶದಲ್ಲಿ ಅಸುರಕ್ಷಿತೆಯಾಗಿ ಗುರುತಿಸಿಕೊಳ್ಳುವುದಕ್ಕೆ ಕಾರಣಗಳು ಏನು? ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಾಚ್‍ನ ವರದಿಯ ಪ್ರಕಾರ, ಭಾರತದ ಸುಮಾರು ಒಂದು ಲP್ಷÀದ 50 ಸಾವಿರಕ್ಕಿಂತಲೂ ಅಧಿಕ ಹೆಣ್ಣು ಮಕ್ಕಳು ದೇಶ-ವಿದೇಶಗಳಲ್ಲಿ ವೇಶ್ಯಾವಾಟಿಕೆಯ ದಂಧೆಗೆ ಸಿಲುಕಿ ಬಿಟ್ಟಿದ್ದಾರೆ. ಭಯಾನಕ ಏನೆಂದರೆ, ಇವರಲ್ಲಿ ಶೇ. 40ರಷ್ಟು ಹೆಣ್ಣು ಮಕ್ಕಳೂ ಅಪ್ರಾಪ್ತರು. ಅವರ ಬಾಲ್ಯವೇ ನಾಶವಾಗಿ ಹೋಗಿದೆ. ಈ ದೇಶದಲ್ಲಿ ಪ್ರತಿವರ್ಷ 6 ಲಕ್ಷ ಹೆಣ್ಣು ಭ್ರೂಣದ ಹತ್ಯೆಯಾಗುತ್ತಿದೆ. ವರ್ಷಕ್ಕೆ 5 ಲಕ್ಷ ಮಕ್ಕಳನ್ನು ಲೈಂಗಿಕ ವ್ಯಾಪಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈ ದೇಶದ ಒಟ್ಟು ಮಕ್ಕಳ ಜನಸಂಖ್ಯೆಯಲ್ಲಿ ಶೇ. 53ರಷ್ಟು ಮಕ್ಕಳು ಯಾವುದಾದರೊಂದು ರೀತಿಯಲ್ಲಿ ಲೈಂಗಿಕ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಯುನಿಸೆಫ್‍ನ ವರದಿಯೂ ಹೇಳುತ್ತಿದೆ. ಅಲ್ಲದೇ, ಪ್ರತಿ 155 ನಿಮಿಷಕ್ಕೊಮ್ಮೆ ದೇಶದಲ್ಲಿ 16 ವರ್ಷದೊಳಗಿನ ಒಂದು ಹೆಣ್ಣು ಮಗು ಅತ್ಯಾಚಾರಕ್ಕೆ ಒಳಗಾಗುತ್ತಿದೆ. ಪ್ರತಿ 13 ಗಂಟೆಗೊಮ್ಮೆ 10 ವರ್ಷಕ್ಕಿಂತ ಕೆಳಗಿನ ಒಂದು ಹೆಣ್ಣು ಮಗು ಲೈಂಗಿಕ ಕಿರುಕುಳವನ್ನು ಎದುರಿಸುತ್ತಿದೆ.


     ಹೀಗೆ ಪಟ್ಟಿ ಮಾಡುತ್ತಾ ಹೋದರೆ ಪುಟ ತುಂಬುವಷ್ಟು ಅಂಕಿ-ಅಂಶಗಳಿವೆ. ಈ ಅಂಕಿ-ಅಂಶಗಳ ಆಚೆಗೆ ಈ ದೇಶವನ್ನು ಹೆಣ್ಣಿನ ಪಾಲಿಗೆ ಸುರಕ್ಷಿತಗೊಳಿಸುವುದು ಹೇಗೆ? ತಮಾಷೆ ಏನೆಂದರೆ, ಗೋವುಗಳ ಸುರಕ್ಷಿತತೆಯ ಬಗ್ಗೆ ಆತಂಕ ತೋಡಿಕೊಳ್ಳುವ ರಾಜಕಾರಣಿಗಳು ಈ ದೇಶದಲ್ಲಿದ್ದಾರೆ. ಗೋವುಗಳಿಗೆ ಸಂಬಂಧಿಸಿ ಪ್ರತಿ ದಿನ ಒಂದು ಹೇಳಿಕೆಯಾದರೂ ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳುವ ಜಾಣತನವೂ ಅವರಿಗೆ ಗೊತ್ತಿದೆ. ಗೋಸಾಗಾಟದ ಹೆಸರಲ್ಲಿ ಹಲ್ಲೆ-ಹತ್ಯೆಗಳು ನಡೆದಾಗಲೆಲ್ಲ ಈ ಮಂದಿ ತಾರಕ ದನಿಯಲ್ಲಿ ಮಾತಾಡುತ್ತಾರೆ. ಗೋಸಂತತಿಯನ್ನು ಉಳಿಸುವ ಬಗ್ಗೆ, ಅಳಿವಿನಂಚಿನಲ್ಲಿರುವ ಗೋ ಸಂತತಿಗಳ ಬಗ್ಗೆ, ಗೋಮಾಂಸ ಸೇವಕರ ಬಗ್ಗೆ, ಗೋಹತ್ಯಾ ಮುಕ್ತ ದೇಶ ಕಟ್ಟುವ ಬಗ್ಗೆ, ಗೋಗ್ರಾಮ-ಗೋ ಅರಣ್ಯ ಸ್ಥಾಪಿಸುವ ಬಗ್ಗೆ.. ಹೀಗೆ ಹೇಳಿಕೆಗಳು ಬರುತ್ತಲೇ ಇರುತ್ತವೆ. ಅದೇವೇಳೆ, ಪ್ರತಿವರ್ಷ ಸುಮಾರು 40 ಸಾವಿರದಷ್ಟು (2014ರಲ್ಲಿ 37,681) ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಈ ಬಗ್ಗೆ ಗಂಭೀರ ಹೇಳಿಕೆಗಳು ಮತ್ತು ಆವೇಶದ ಮಾತುಗಳು ಕೇಳಿ ಬರುತ್ತಲೇ ಇಲ್ಲ. ಗೋಸಂತತಿಯನ್ನು ಉಳಿಸಬೇಕೆನ್ನುವ ಅದೇ ಕಾಳಜಿಯಲ್ಲಿ ಹೆಣ್ಣು ಸಂತತಿಯನ್ನು ಉಳಿಸಿಕೊಳ್ಳಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿಲ್ಲ. ಹೆಣ್ಣಿನ ಮೇಲಿನ ಅತ್ಯಾಚಾರವು ಗೋಹತ್ಯೆಯ ಮುಂದೆ ಜುಜುಬಿ ಅನ್ನಿಸಿಕೊಂಡದ್ದು ಯಾಕಾಗಿ?
    
     ಅತ್ಯಾಚಾರವೆಂದರೆ, ಒಂದು ಮನಸ್ಸಿನ ಸಾವು. 'ಅತ್ಯಾಚಾರ'ವೆಂಬುದು ಬಾಹ್ಯನೋಟಕ್ಕೆ ನಾಲ್ಕು ಶಬ್ದಗಳಾದರೂ ಅದರ ಅರ್ಥ ಅತ್ಯಂತ ಆಳವಾದದ್ದು. ಹೆಣ್ಣಿನ ಮೇಲೆ ಗಂಡು ತನ್ನ ಬಲವನ್ನು ತೋರ್ಪಡಿಸುವ ಕ್ರಿಯೆಯಷ್ಟೇ ಅಲ್ಲ ಅದು. ಆಕೆಯ ಸಂವೇದನೆಯನ್ನು ಕೊಲೆಗೈದ ಕ್ರಿಯೆ ಕೂಡ. ಆದರೂ ಗೋವಿಗಾಗಿ ಮಾತಾಡುವ ಯಾವ ರಾಜಕೀಯದ ಬಾಯಿಗಳೂ ಅದೇ ಉಗ್ರತಮ ಭಾಷೆಯಲ್ಲಿ ಹೆಣ್ಣಿಗಾಗಿ ಮಾತಾಡುವುದಿಲ್ಲ. ಅತ್ಯಾಚಾರವನ್ನು ಸಹಜವೂ ಗೋಮಾಂಸವನ್ನು ಅಸಹಜವೂ ಆಗಿ ನಮ್ಮ ರಾಜಕಾರಣಿಗಳು ಪರಿಗಣಿಸಿದ್ದಾರೆಯೇ? ಅಥವಾ ರಾಜಕೀಯ ದೃಷ್ಟಿಯಲ್ಲಿ ಹೆಣ್ಣಿಗಿಂತ ಗೋವು ಹೆಚ್ಚು ಮತ ತಂದುಕೊಡುತ್ತದೆ ಎಂಬ ನಂಬಿಕೆಯೇ? ಅತ್ಯಾಚಾರದ ವಿರುದ್ಧ ಆಡುವ ಮಾತಿಗಿಂತ ಗೋವಿಗಾಗಿ ಆಡುವ ಮಾತು ಯಾಕೆ ತೂಕವುಳ್ಳದ್ದಾಗಿ ಈ ದೇಶದಲ್ಲಿ ಗುರುತಿಸಿಕೊಂಡಿದೆ? ಹೆಣ್ಣನ್ನು ಮಾತೆ, ದೇವಿ ಎಂದೆಲ್ಲಾ ಕರೆದು ಗೌರವಿಸುವ ದೇಶದಲ್ಲಿ ಹೆಣ್ಣಿನ ಮಾನ ಮತ್ತು ಪ್ರಾಣಕ್ಕಿಂತ ಗೋವಿನ ಪ್ರಾಣ ಹೆಚ್ಚು ತೂಗುವಂತಾದುದು ಯಾವುದರ ಸೂಚನೆ?

      ಬರೇ ಕಾನೂನು-ಕಾಯ್ದೆಗಳಷ್ಟೇ ಹೆಣ್ಣಿಗೆ ಈ ಭೂಮಿಯನ್ನು ಸುರಕ್ಷಿತಗೊಳಿಸಲಾರದು. ಹೆಣ್ಣನ್ನು ಗೌರವಾರ್ಹವಾಗಿ ಕಾಣುವ ಮನಸ್ಥಿತಿಯೊಂದರ ನಿರ್ಮಾಣವೇ ಇದರ ಪ್ರಥಮ ಬೇಡಿಕೆ. ಇದು ಒಂದು ರಾತ್ರಿಯಿಂದ ಬೆಳಗಾಗುವುದರ ನಡುವೆ ಸಾಧ್ಯವಾಗುವಂಥದ್ದಲ್ಲ. ಇದೊಂದು ನಿರಂತರ ಪ್ರಕ್ರಿಯೆ. ಪುರುಷರನ್ನು ನಿರಂತರವಾಗಿ ತರಬೇತುಗೊಳಿಸುವ ಕ್ರಿಯೆ. ಮಕ್ಕಳಿಂದಲೇ ಈ ತರಬೇತಿ ಪ್ರಾರಂಭವಾಗಬೇಕು. ಹೆಣ್ಣಿನ ಬಗ್ಗೆ ಗೌರವ ಮೂಡುವಂಥ ಮಾತು-ಕೃತಿಗಳನ್ನು ಹೆತ್ತವರು ಮಕ್ಕಳಿಗೆ ನೀಡುತ್ತಲಿರಬೇಕು. ಹೆಣ್ಣನ್ನು ನಕಾರಾತ್ಮಕವಾಗಿ ನೋಡುವ ಎಲ್ಲದರಿಂದಲೂ ದೂರ ನಿಲ್ಲಬೇಕು.

        ಈ ಜಗತ್ತು ನಡೆಯುವುದೇ ಹೆಣ್ಣು ಮತ್ತು ಗಂಡು ಎಂಬ ಜೀವಿಯಿಂದ. ಇವೆರಡೂ ಜಗತ್ತನ್ನು ಮುಂದಕ್ಕೊಯ್ಯುವ ಗಾಲಿಗಳು. ಈ ಗಾಲಿಗಳಲ್ಲಿ ಒಂದರ ಮೇಲೆ ನಿರಂತರ ದಾಳಿ ನಡೆಯುತ್ತಿರುವುದು ಅಪಾಯಕಾರಿ.

ಮನುಷ್ಯರಿಗೇ ಗಾಳ 'ಹಾಕಿದ' ಮೀನು

    ನೀರಿನಿಂದ ಹೊರತೆಗೆದ ತಕ್ಷಣ ಮೀನುಗಳು ವಿಲವಿಲನೆ ಒದ್ದಾಡುತ್ತವೆ. ಮಾತ್ರವಲ್ಲ, ಹೊರಗಿನ ವಾತಾವರಣಕ್ಕೆ ಹೊಂದಿಕೊಳ್ಳಲಾಗದೇ ಅವು ಸಾವನ್ನೂ ಅಪ್ಪುತ್ತವೆ. ಸದ್ಯ ಮೀನುಪ್ರಿಯರಲ್ಲಿ ಇಂಥದ್ದೊಂದು ಒದ್ದಾಟ ಪ್ರಾರಂಭವಾಗಿದೆ. ನೀರಿನಿಂದ ಮೀನುಗಳನ್ನು ಹೊರತೆಗೆದು ಒದ್ದಾಡಿಸುವ ಮನುಷ್ಯರನ್ನು ಮೀನುಗಳು ಒದ್ದಾಡಿಸಲಿದೆಯೇ ಎಂಬ ಆತಂಕ ಕಾಡತೊಡಗಿದೆ. ಆದರೆ ಈ ಆತಂಕಕ್ಕೆ ಯಾವ ನೆಲೆಯಲ್ಲೂ ಮೀನುಗಳು ಕಾರಣವಲ್ಲ. ಮೀನುಗಳು ಈಗಲೂ ಕೂಡ ಪರಮ ಶುದ್ಧ ಮತ್ತು ಅತ್ಯಂತ ವಿಶ್ವಾಸಾರ್ಹ. ಪುರಾತನ ಕಾಲದಿಂದಲೂ ಮತ್ಸ್ಯವರ್ಗದ ಮೇಲೆ ಮನುಷ್ಯ ದಾಳಿ ಮಾಡುತ್ತಿದ್ದರೂ ಮತ್ತು ವಿವಿಧ ಸಂಚುಗಳ ಮೂಲಕ ಅವನ್ನು ನೀರಿನಿಂದೆತ್ತಿ ಜೇಬು ತುಂಬಿಸುತ್ತಿದ್ದರೂ ಅವು ಎಂದೂ ಮನುಷ್ಯರಿಗೆ ದ್ರೋಹ ಬಗೆದಿಲ್ಲ. ತನ್ನನ್ನು ಸಾಯಿಸುವ ಮನುಷ್ಯರನ್ನು ಸಾಯಿಸಬೇಕೆಂಬ ಉದ್ದೇಶದಿಂದ ಅವೆಂದೂ ಷಡ್ಯಂತ್ರ ರಚಿಸಿಲ್ಲ. ಆದರೆ, ಈ ನಿಷ್ಪಾಪಿ ಮೀನುಗಳ ವಿಷಯದಲ್ಲೂ ಮನುಷ್ಯ ಪರಮ ಭ್ರಷ್ಟನಾಗುತ್ತಿದ್ದಾನೆ. ಮೀನುಗಳನ್ನು ನೀರಿನಿಂದೆತ್ತಿ ಒದ್ದಾಡಿಸುವ ಆತ ಇದೀಗ ಅವುಗಳಿಗೆ ರಾಸಾಯನಿಕಗಳನ್ನು ಸೇರಿಸಿ ಮನುಷ್ಯರನ್ನೂ ಒದ್ದಾಡಿಸುವ ಮತ್ತು ಸಾವಿನೆಡೆಗೆ ದೂಡುವ ಪರಮ ಕ್ರೌರ್ಯಕ್ಕೆ ಇಳಿದಿದ್ದಾನೆ. ಮೀನುಗಳನ್ನು ಬಹುಕಾಲ ಕೆಡದಂತೆ ರಕ್ಷಿಸುವುದಕ್ಕಾಗಿ ಸೋಡಿಯಂ ಬೆಂಝೋಟ್, ಅಮೋನಿಯಾ ಮತ್ತು ಫಾರ್ಮಾಲಿನ್‍ನಂಥ ಮಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಅನ್ನುವ ಅಧಿಕೃತ ವರದಿಗಳು ಹೊರಬಿದ್ದಿವೆ. ಹೈದರಾಬಾದ್‍ನಿಂದ ಕಂಟೈನರ್ ನಲ್ಲಿ ಸಾಗಿಸುತ್ತಿದ್ದ ಮೀನುಗಳನ್ನು ಕಳೆದವಾರ ತಿರುವನಂತಪುರದ ಪಾಲಕ್ಕಾಡ್ ಜಿಲ್ಲೆಯ ಚೆಕ್ ಪೋಸ್ಟ್ ನಲ್ಲಿ ತಡೆದು ತಪಾಸಿಸಲಾದ ಬಳಿಕ ಈ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ಕೇರಳದ ಆಹಾರ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ನಡೆದ ಈ ದಾಳಿಗಿಂತ ವಾರ ಮೊದಲು ಇಂಥದ್ದೇ ಇನ್ನೊಂದು ದಾಳಿಯಾಗಿತ್ತು. ಆ ದಾಳಿಯಲ್ಲಿ 12 ಕ್ವಿಂಟಾಲ್ ಮೀನುಗಳಲ್ಲಿ ವಿಷಕಾರಿ ಅಂಶಗಳನ್ನು ಪತ್ತೆ ಹಚ್ಚಲಾಗಿತ್ತು. ದಿನದ ಹಿಂದೆ  ಕೊಲ್ಲಮ್ ಜಿಲ್ಲೆಯ ಆರ್ಯನ್ ಕಾವು ಚೆಕ್ ಪೋಸ್ಟ್ ನಲ್ಲಿ ಫಾರ್ಮಾಲಿನ್ ವಿಷ ಲೇಪಿತ ಹತ್ತು ಟನ್ ಮೀನುಗಳನ್ನು ವಶಪಡಿಸಲಾಗಿದೆ. ಫಾರ್ಮಾಲಿನ್ ಅನ್ನುವುದು ಹೆಣಗಳನ್ನು ಕೆಡದಂತೆ ಕಾಪಾಡಲು ಬಳಸುವ ರಾಸಾಯನಿಕ. ಸಾಮಾನ್ಯವಾಗಿ ಆಸ್ಪತ್ರೆಯ ಶವಾಗಾರಗಳಲ್ಲಿ ಈ ರಾಸಾಯನಿಕವನ್ನು ಬಳಸಿ ಹೆಣಗಳು ದೀರ್ಘಕಾಲ ಕೆಡದಂತೆ ಉಳಿಸಿಕೊಳ್ಳುವ ಕ್ರಮ ಇದೆ. ಈ ರಾಸಾಯನಿಕವು ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತದೆ ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ. ಅಮೋನಿಯ ಮತ್ತು ಸೋಡಿಯಂ ಬೆಂಝೋಟ್‍ಗಳ ಮಿಶ್ರಣವೂ ಮನುಷ್ಯರ ದೇಹಕ್ಕೆ ಅತ್ಯಂತ ಅಪಾಯಕಾರಿ. ಮೀನುಗಳಿಗೆ ಈ ರಾಸಾಯನಿಕಗಳನ್ನು ಸಿಂಪಡಿಸಿದರೆ ಮೀನುಗಳು ತಾಜಾವಾಗಿ ಉಳಿಯುತ್ತವೆಯಷ್ಟೇ ಅಲ್ಲ, ಅವುಗಳು ತಮ್ಮ ಪ್ರಕೃತಿದತ್ತವಾದ ವಾಸನೆ, ಮೃದುತ್ವ ಮತ್ತು ಮಾಂಸದಲ್ಲಿನ ಹದವನ್ನು ಕಳಕೊಳ್ಳುತ್ತದೆ ಎಂದು ಹೇಳಲಾಗುತ್ತದೆ.
      ಒಂದು ರೀತಿಯಲ್ಲಿ, ನಾವು ಸೇವಿಸುವ ಆಹಾರ ವಸ್ತುಗಳಲ್ಲಿ ಹೆಚ್ಚಿನವು ರಾಸಾಯನಿಕ ಲೇಪಿತವೇ. ಮನುಷ್ಯರ ಬಟ್ಟಲಿನಲ್ಲಿ ಕಡ್ಡಾಯ ಸ್ಥಾನ ಪಡೆದಿರುವ ಅಕ್ಕಿಯೂ ಈ ರಾಸಾಯನಿಕದಿಂದ ಹೊರತಾಗಿಲ್ಲ. ಅಕ್ಕಿಗೆ ಹೊಳಪು ಕೊಡುವುದಕ್ಕಾಗಿ ರಾಸಾಯನಿಕವನ್ನು ಸಿಂಪಡಿಸಲಾಗುವುದು ಇವತ್ತು ರಹಸ್ಯವಾಗಿ ಉಳಿದಿಲ್ಲ. ತರಕಾರಿಗಳನ್ನು ತಾಜಾವಾಗಿಸುವುದಕ್ಕೆ ಮತ್ತು ಹಣ್ಣುಹಂಪಲುಗಳನ್ನು ಕೆಡದಂತೆ ರಕ್ಷಿಸುವುದಕ್ಕೆ ಒಂದಲ್ಲ ಒಂದು ಬಗೆಯ ರಾಸಾಯನಿಕಗಳನ್ನು ಬಳಸಲಾಗುತ್ತಿರುವುದೂ ನಿಜ. ಹಣ್ಣು-ಹಂಪಲುಗಳು ಬೇಗನೇ ಮಾಗುವಂತೆ ಮಾಡುವುದಕ್ಕೂ ರಾಸಾಯನಿಕದ ಮೊರೆ ಹೋಗಲಾಗುತ್ತಿದೆ. ಅಂದಹಾಗೆ, ಇಂಥ ಸಂಗತಿಗಳು ಬೆಳಕಿಗೆ ಬಂದ ಆರಂಭದಲ್ಲಿ ಸಾರ್ವಜನಿಕವಾಗಿ ವಿರೋಧಗಳು ವ್ಯಕ್ತವಾದರೂ ನಿಧಾನಕ್ಕೆ ಅವು ತಣ್ಣಗಾಗುತ್ತಾ ಹೋಗುತ್ತವೆ. ಇವತ್ತು ಅಕ್ಕಿ, ಹಣ್ಣು-ಹಂಪಲು, ತರಕಾರಿಗಳಿಗೆ ಸಿಂಪಡಿಸುವ ರಾಸಾಯನಿಕಗಳ ಬಗ್ಗೆ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳಲ್ಲಿ ಗಂಭೀರ ಚರ್ಚೆಗಳಾಗುತ್ತಿಲ್ಲ ಎಂಬುದಕ್ಕೆ ಅವೆಲ್ಲ ಈಗ ರಾಸಾಯನಿಕ ಮುಕ್ತವಾಗಿ ಮಾರುಕಟ್ಟೆಗೆ ಬರುತ್ತಿವೆ ಎಂಬುದು ಕಾರಣವಲ್ಲ. ಆ ಕುರಿತಾದ ಚರ್ಚೆ ಈಗ ಪ್ರಸ್ತುತತೆಯನ್ನು ಕಳಕೊಳ್ಳತೊಡಗಿದೆ. ರಾಸಾಯನಿಕವಿಲ್ಲದ ಯಾವುದೂ ಮಾರುಕಟ್ಟೆಯಲ್ಲಿಲ್ಲ ಅನ್ನುವ ನಿರಾಶವಾದವೊಂದು ಸಾರ್ವಜನಿಕರಲ್ಲಿ ಮನೆ ಮಾಡಿಬಿಟ್ಟಿದೆ. ಆದ್ದರಿಂದ, ಒಂದು ವೇಳೆ ಮೀನಿನ ಬಗೆಗೂ ಸಾರ್ವಜನಿಕವಾಗಿ ಇಂಥದ್ದೇ  ಉದಾಸೀನಭಾವ ಕಾಣಿಸಿಕೊಂಡು ಬಿಟ್ಟರೆ ಮುಂದಿನ ದಿನಗಳಲ್ಲಿ ಮನುಷ್ಯರೂ ಮೀನಿನಂತೆ ವಿಲವಿಲನೆ ಒದ್ದಾಡಬೇಕಾದೀತು.
      ಬಸಳೆ, ತೊಂಡೆಕಾಯಿ, ಸೌತೆಕಾಯಿ, ಬೀಟ್ರೋಟ್, ಬಟಾಟೆ ಇತ್ಯಾದಿ ತರಕಾರಿಗಳಿಗೆ ಹೋಲಿಸಿದರೆ ಮೀನು ತೀರಾ ಭಿನ್ನ. ಬಸಳೆ, ತೊಂಡೆಕಾಯಿ ಇತ್ಯಾದಿಗಳು  ಸಸ್ಯಾಹಾರ ಮತ್ತು ಮೀನು ಮಾಂಸಾಹಾರ ಅನ್ನುವುದು ಈ ಭಿನ್ನತೆಗೆ ಕಾರಣವಲ್ಲ. ಬಸಳೆ, ಬೆಂಡೆಕಾಯಿ, ಸೌತೆ.. ಇತ್ಯಾದಿ ಯಾವುದೇ ಗಿಡ ಅಥವಾ ಬಳ್ಳಿಗಳು ಫಲವನ್ನು ಕೊಡುವ ಹಂತಕ್ಕೆ ಬೆಳೆಯಬೇಕಾದರೆ ಅದಕ್ಕೆ ಪೋಷಣೆ ಬೇಕೇ ಬೇಕು. ಮನುಷ್ಯನಿಂದ ಗೊಬ್ಬರ, ನೀರು, ಆರೈಕೆಗಳನ್ನು ಪಡೆದುಕೊಂಡ ಬಳಿಕವೇ ಇವು ಪ್ರತಿಯಾಗಿ ಫಲಗಳನ್ನು ನೀಡುತ್ತವೆ. ಆರೈಕೆಯಲ್ಲಿ ವ್ಯತ್ಯಾಸವಾದರೆ ಫಲಗಳಲ್ಲೂ ವ್ಯತ್ಯಾಸವಾಗುತ್ತದೆ. ಆದರೆ ಮೀನು ಹಾಗಲ್ಲ. ಮನುಷ್ಯನ ಆರೈಕೆಯಿಲ್ಲದೆ ಫಲ ಕೊಡುವ ಜೀವಿಯದು. ಮೀನಿನ ಹೊಟ್ಟೆ ತುಂಬಿಸುವುದಕ್ಕಾಗಿ ಮನುಷ್ಯ ಸಮುದ್ರಕ್ಕೆ ಅಕ್ಕಿ ಸುರಿಯುವುದಿಲ್ಲ. ಔಷಧ ಸಿಂಪಡಿಸುವುದಿಲ್ಲ. ಇಷ್ಟಿದ್ದೂ, ಮನುಷ್ಯ ತೃಪ್ತನಾಗಿಲ್ಲವೆಂದರೆ ಏನನ್ನಬೇಕು? ಪುಕ್ಕಟೆ ಸಿಗುವ ಮೀನಿಗೆ ಅಪಾಯಕಾರಿ ರಾಸಾಯನಿಕವನ್ನು ಸೇರಿಸಿ ಮಾರಾಟ ಮಾಡುವ ಆತನ ದಂಧಾಮನಸ್ಸನ್ನು ಯಾವ ಹೆಸರಿಟ್ಟು ಕರೆಯಬೇಕು? ಹಾಗಂತ, ಈ ದಂಧೆಯನ್ನು ದೂರದ ತಮಿಳುನಾಡು, ಹೈದರಾಬಾದ್‍ಗೆ ಅಥವಾ ಕೇರಳಕ್ಕೆ ಸೀಮಿತಗೊಳಿಸಿ ನೋಡಬೇಕಿಲ್ಲ. ಕರಾವಳಿ ಭಾಗದಲ್ಲಿ ಈಗಾಗಲೇ ಈ ಕ್ರಿಯೆ ಚಾಲ್ತಿಯಲ್ಲಿದೆ ಎಂದು ನಂಬಲರ್ಹ ಮೂಲಗಳು ಖಚಿತಪಡಿಸಿವೆ. ಇಲ್ಲಿ ಸುಮಾರು 25% ದಿಂದ 30% ದಷ್ಟು ಮೀನುಗಳು ಈ ರಾಸಾಯನಿಕ ಲೇಪನಕ್ಕೆ ಒಳಗಾಗುತ್ತಿವೆ ಎಂಬುದನ್ನೂ ಆ ಮೂಲಗಳು ಸ್ಪಷ್ಟಪಡಿಸಿವೆ. ಆದ್ದರಿಂದ,  ಮೀನು ಪ್ರಿಯರೆಲ್ಲ ಈಗಾಗಲೇ ಒಂದಷ್ಟು ವಿಷವನ್ನು ತಮ್ಮೊಳಗೆ ಇಳಿಸಿಕೊಂಡಿದ್ದಾರೆ. ಇನ್ನಿರುವ ಮಾರ್ಗ ಏನೆಂದರೆ, ಇನ್ನಷ್ಟು ವಿಷಗಳು ನಮ್ಮ ದೇಹ ಸೇರದಂತೆ ನೋಡಿಕೊಳ್ಳುವುದು. ಅದಕ್ಕಾಗಿ ವ್ಯವಸ್ಥೆಯ ಮೇಲೆ ಒತ್ತಡ ತರುವ ಪ್ರಯತ್ನಗಳು ಸಾರ್ವಜನಿಕರಿಂದ ನಡೆಯಬೇಕು. ಮೀನುಗಳು ಮಾರುಕಟ್ಟೆಗೆ ಬರುವುದಕ್ಕಿಂತ ಮೊದಲು ತಪಾಸಣೆಗೆ ಒಳಗಾಗುವ ಏರ್ಪಾಟುಗಳು ಆಗಬೇಕು. ಮೀನು ಕೇಂದ್ರಗಳಿಗೆ ದಿಢೀರ್ ದಾಳಿ ನಡೆಸಿ ತಪಾಸಿಸುವ ಪ್ರಾಮಾಣಿಕ ಅಧಿಕಾರಿಗಳನ್ನು ಆಹಾರ ಇಲಾಖೆಗೆ ಸೇರಿಸಬೇಕು. ಮುಖ್ಯವಾಗಿ ಕೇರಳದಿಂದ ಕರ್ನಾಟಕಕ್ಕೆ ತರಿಸಿಕೊಳ್ಳಲಾಗುವ ಮೀನುಗಳು ಮತ್ತು ರಾಜ್ಯದ ಕರಾವಳಿ ಭಾಗದಲ್ಲಿ ಹಿಡಿಯಲಾಗುವ ಮೀನುಗಳ ಮೇಲೆ ನಿಗಾ ಇಡುವ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಈ ರಾಜ್ಯದ ನಾನಾ ಭಾಗಗಳಿಗೆ ಮತ್ತು ಹೊರ ರಾಜ್ಯಗಳಿಗೆ ಮೀನುಗಳನ್ನು ಸಾಗಿಸುವ ದೊಡ್ಡ ಮೀನುಗಾರಿಕ ಪ್ರದೇಶಗಳಲ್ಲಿ ಮಂಗಳೂರೂ ಒಂದಾಗಿದ್ದು, ಇಲ್ಲಿ ಸುಸಜ್ಜಿತ ತಪಾಸಣಾ ಕೇಂದ್ರ ಮತ್ತು ಲ್ಯಾಬ್‍ಗಳ ನಿರ್ಮಾಣವಾಗಬೇಕು.
     ಭ್ರಷ್ಟ ಮನಸ್ಸು ಹೇಗೆ ಇಡೀ ಮಾನವ ಕುಲಕ್ಕೇ ಅಪಾಯಕಾರಿ ಅನ್ನುವುದಕ್ಕೆ ಮೀನು ಒಂದು ತಾಜಾ ಉದಾಹರಣೆ. ‘ಅತಿ ಬಯಕೆ’ ಯಾವಾಗಲೂ ಅಪಾಯಕಾರಿ. ಅವು ಅಕ್ಕಿಯನ್ನೂ ಕೆಡಿಸುತ್ತದೆ. ತರಕಾರಿಯನ್ನೂ ಕೆಡಿಸುತ್ತದೆ. ಮೀನನ್ನೂ ಕೆಡಿಸುತ್ತದೆ. ಕೊನೆಗೆ ಸ್ವತಃ ತನ್ನನ್ನೇ ಬಲಿ ಪಡೆಯುತ್ತದೆ. ಮೀನಿನ ಮೂಲಕ ಈ ಸತ್ಯ ಮತ್ತೊಮ್ಮೆ ಸಾಬೀತಾಗಿದೆ. ಈ ಭ್ರಷ್ಟರನ್ನು ತಡೆಯುವ ಶ್ರಮ ನಡೆಯದಿದ್ದರೆ ಸಮುದ್ರ ದಂಡೆಯಲ್ಲಾಗುವ ಒದ್ದಾಟವು ಸಮುದ್ರದ ಹೊರಗಿನ ಭೂಮಿಯಲ್ಲೂ ಆಗಬಹುದು. ಅಲ್ಲಿ ಮೀನಿದ್ದರೆ ಇಲ್ಲಿ ಮನುಷ್ಯ. ಅಷ್ಟೇ ವ್ಯತ್ಯಾಸ.